ಅಂತರಂಗ
ಆತ್ಮಕತೆ | ಮದುವೆಯ ಬಂಧ-ಸ್ನೇಹಿತರ ಮನೆಯಲ್ಲಿ ಔತಣ
- ರುದ್ರಪ್ಪ ಹನಗವಾಡಿ
ನನ್ನ ಹೆಂಡತಿ ಗಾಯತ್ರಿ 1979ನೇ ಬ್ಯಾಚಿನ ನನ್ನ ವಿಭಾಗದಲ್ಲಿಯೇ ವಿದ್ಯಾರ್ಥಿಯಾಗಿದ್ದವಳು. ವಿದ್ಯಾರ್ಥಿನಿಯಾಗಿ ಅವಳ ಶೈಕ್ಷಣಿಕ ಓದಿನ ಜೊತೆ ನಾಟಕ, ಸಂಗೀತ ಮತ್ತು ಸಾಹಿತ್ಯದಲ್ಲಿ ಆಸಕ್ತಿಯುಳ್ಳವಳಾಗಿದ್ದಳು. ಅವಳಿಗಿದ್ದ ತಮ್ಮ ಹಿರಿಯ/ಕಿರಿಯ ವಿದ್ಯಾರ್ಥಿನಿಗಳ ಜೊತೆಗಿನ ಸ್ನೇಹ ಸಂಬಂಧದ ಜೊತೆ, ಕೇಂದ್ರದಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಳು.
ನಮ್ಮ ಕೇಂದ್ರದಿಂದ 1978ರಲ್ಲಿ ಎಂ.ಎ. ಮುಗಿಸಿದ್ದ ಯಶೋಧ ಮತ್ತು ಶಾರದ ಎಂಬ ಇಬ್ಬರು ವಿದ್ಯಾರ್ಥಿನಿಯರು ಎಂ.ಎ., ಮುಗಿಸಿದ ನಂತರ, ಬೆಂಗಳೂರಿನಲ್ಲಿ ಯಶೋಧ ವಿ.ಕೆ.ಆರ್.ವಿ. ರಾವ್ ಇನ್ಸಿಟಿಟ್ಯೂಟ್ನಲ್ಲಿ ಸಂಶೋಧಕಿಯಾಗಿ ಕೆಲಸ ಮಾಡುತ್ತಿದ್ದಳು. ಶಾರದ ತನ್ನ ಸೋದರ ಸಂಬಂಧಿ ಡಾಕ್ಟರ್ರೊಬ್ಬರನ್ನು ಮದುವೆಯಾಗಿ ಗೃಹಿಣಿ ಯಾಗಿದ್ದಳು. ಇವರಿಬ್ಬರೂ ಮೊದಲು ಶಿವಮೊಗ್ಗದಿಂದ ದಿನವೂ ಬೆಳಿಗ್ಗೆ ಬರುತ್ತಿದ್ದ ಗಜಾನನ ಬಸ್ಸಿಗೆ ಗಾಯತ್ರಿ ಮತ್ತು ಇತರರೊಡನೆ ಕ್ಲಾಸಿಗೆ ಬರುತ್ತಿದ್ದರು. ಹಾಗಾಗಿ ಅವರಿಬ್ಬರ ಎಂ.ಎ., ಮುಗಿದ ನಂತರವೂ ಕೇಂದ್ರಕ್ಕೆ ಬಂದಾಗ ಗಾಯತ್ರಿಯನ್ನು ಜೊತೆಗೆ ಇದ್ದ ಸ್ನೇಹಿತರನ್ನು ಭೇಟಿ ಮಾಡಿ ಹೋಗುತ್ತಿದ್ದರು. ಹೀಗೆ ಹೋಗುವಾಗ ನಮ್ಮ ಜ್ಞಾನೇಂದ್ರ ಪ್ರಭು ಜೊತೆ ನಾನು ಶಿವಮೊಗ್ಗಕ್ಕೂ ಜೊತೆಗೆ ಹೋಗಿ ಅಲ್ಲಿನ ಮನೋಹರ ಕೆಫೆಯಲ್ಲಿ ಕಾಫಿ ಕುಡಿದು, ಹರಟೆ ಹೊಡೆದು ಹಿಂತಿರುಗುತ್ತಿದ್ದೆವು. ಆ ದಿನಗಳಲ್ಲಿಯೇ ನನಗೆ ಗಾಯತ್ರಿಯ ಪರಿಚಯವಾಗಿ ಒಬ್ಬರಿಗೊಬ್ಬರು ಆಸಕ್ತರಾಗಿದ್ದೆವು. ಅದೆಲ್ಲ ಪ್ರಭು, ದೇವರಾಜು ಮತ್ತು ಕೇಶವಮೂರ್ತಿಗಳ ನಮ್ಮ ಸ್ನೇಹ ವಲಯಕ್ಕೂ ತಿಳಿದಿತ್ತು.
ಗ್ರಾಮೀಣ ಪ್ರದೇಶಗಳಿಂದ ಬಹಳ ಹುಡುಗರು ಏನೆಲ್ಲ ಓದಿದ್ದರೂ ಹುಡುಗಿಯರೊಡನೆ ಸರಳವಾಗಿ ಮಾತಾಡಿಕೊಂಡು ಇರುವುದು ವಿರಳವಾಗಿದ್ದ ದಿನಗಳು. ನಾನಾದರೂ ಎಂ.ಎ. ಮುಗಿಸಿ 4-5 ವರ್ಷಗಳ ಪಾಠ ಮಾಡಿದ ಅನುಭವವಿದ್ದರೂ ಗ್ರಾಮೀಣ ಹಿನ್ನೆಲೆಯ ಸಾಮಾನ್ಯ ಹಿಂಜರಿಕೆ ಮತ್ತು ಸಂಕೋಚದ ಕಾರಣ ಹುಡುಗಿಯರಿಂದ ದೂರವೇ ಉಳಿಯುತ್ತಿದ್ದೆ.
ಓದಿನ ಜೊತೆಗೆ ಎಸ್ವೈಎಸ್, ಡಿ.ಎಸ್.ಎಸ್.ಗಳ ಹೋರಾಟಗಳಲ್ಲಿ ಭಾಗವಹಿಸಿ, ಬೀದಿ ಬೀದಿಗಳಲ್ಲಿ ಭಾಷಣ, ಮೆರವಣಿಗೆ ಅನೇಕ ಸಂದರ್ಭಗಳಲ್ಲಿ ಪೋಲೀಸ್ ಸ್ಟೇಷನ್ನಲ್ಲಿ ಬಂಧಿಯಾಗಿ ಹೊರಬಂದಿದ್ದರೂ ಪ್ರೀತಿಯ ಪ್ರೇಮಗಳ ವಿಷಯದಲ್ಲಿ ಹಿಂಜರಿಕೆ ಮತ್ತು ಸಂಕೋಚಗಳು ನನ್ನಲ್ಲಿ ಮನೆ ಮಾಡಿದ್ದವು. ನಾನು ಈ ಹಿಂದೆ ಸೋಷಿಯಾಲಜಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವಾಗ ಅಲ್ಲಿದ್ದ ಮೂರು ಜನ ಹುಡುಗಿಯರಲ್ಲಿ ಒಬ್ಬಳು ತೋರಿದ ವಿಶೇಷ ಆಸಕ್ತಿ ಮತ್ತು ಮಾತುಕತೆಗೆ ಮಾರುಹೋಗಿ, ಅವಳು ವಿಶೇಷವಾಗಿ ತಂದು ಕೊಡುತ್ತಿದ್ದ ತಿಂಡಿ ಮತ್ತು ಪ್ರಸೆಂಟೇಷನ್ಗಳನ್ನು ನನ್ನ ಮೇಲಿನ ವಿಶೇಷ ಪ್ರೀತಿಯಿಂದಲೇ ಕೊಟ್ಟಿರಬೇಕೆಂದು ಭಾವಿಸಿಕೊಂಡಿದ್ದೆ. ಅದನ್ನೆಲ್ಲ ಆಗ ನನ್ನ ಜೊತೆಗಿದ್ದ ಬಸವಣ್ಯಪ್ಪನಿಗೆ ಹೇಳಿದಾಗ ಅವನು, `ಅವಳು ನಿನ್ನನ್ನು ಪ್ರೀತಿಸುತ್ತಿದ್ದಾಳೆ, ನಿನಗೆ ಇಷ್ಟವಾದರೆ-ನೀನೆ ಅವಳಿಗೆ ಮದುವೆಯಾಗುವಂತೆ ಕೇಳು’ ಎಂದು ಹುರಿದುಂಬಿಸುತ್ತಿದ್ದ. ಏರು ಯೌವನದ ಸೆಳೆವಿನಲ್ಲಿದ್ದ ನಾನು ಒಂದು ದಿನ ಕುಕ್ಕರಹಳ್ಳಿ ಕೆರೆ ಏರಿ ಮೇಲೆ ಸಂಜೆಯ ವಿಹಾರದಲ್ಲಿದ್ದಾಗ ನನ್ನನ್ನು ಮದುವೆಯಾಗುತ್ತೀಯ ಎಂದು ಕೇಳಿಯೇ ಬಿಟ್ಟೆ. ನನಗಿಂತಲೂ ವಯಸ್ಸಿನಲ್ಲಿ ಮತ್ತು ಬುದ್ದಿಯಲ್ಲಿ ಮುಂದಿದ್ದ ಅವಳು ನನ್ನ ಪ್ರೇಮ ಭಿಕ್ಷೆಯನ್ನು ನಯವಾಗಿ ತಿರಸ್ಕರಿಸಿದ್ದಳು. ನಂತರ ನಾನು ನನ್ನ ವೃತ್ತಿಯನ್ನೇ ಬದಲಾಯಿಸಿದ ಕಾರಣ ಆ ಪ್ರೇಮ ಪ್ರಕರಣ ಅಲ್ಲಿಗೆ ಮುಕ್ತಾಯವಾಗಿ ಬಿಆರ್ಪಿಗೆ ವರ್ಗವಾಗಿ ಬಂದಿದ್ದೆ.
ಈ ಹಿನ್ನೆಲೆಯಲ್ಲಿದ್ದ ನನಗೆ ತಕ್ಷಣದಲ್ಲಿ ಪ್ರೀತಿಯ ಪ್ರಸ್ತಾಪವನ್ನು ಮಾಡುವಾಗ ಅನೇಕ ರೀತಿಯ ಹಿಂಜರಿಕೆಯಲ್ಲಿ ಮುಳುಗಿ ಬಿಡುತ್ತಿದ್ದೆ. ಆದರೆ ಪ್ರಭು ಮತ್ತು ಕೇಶವಮೂರ್ತಿಯವರೊಡನೆ ನಂತರ ನನ್ನ ಹಳೆ ವಿದ್ಯಾರ್ಥಿನಿಯರಾದ ಯಶೋಧ ಮತ್ತು ಶಾರದಾ ಅವರ ಮುಖಾಂತರ ಗಾಯತ್ರಿಯ ಬಗ್ಗೆ ನನಗಿರುವ ಆಸಕ್ತಿ ತಿಳಿಸಿದೆ. ಅವಳು ಎಂ.ಎ. ಪರೀಕ್ಷೆ ಮುಗಿದಿದ್ದರಿಂದ ಊರಿಗೆ ಹೋಗಿದ್ದಳು. ಅವಳು ಮದುವೆಗೆ ಒಪ್ಪಿಗೆ ಸೂಚಿಸಿದ್ದರೂ ಅವಳಿಗೆ ಒಂದು ಕೆಲಸ ಪಡೆದ ನಂತರ ದಿನಗಳಲ್ಲಿ ಮದುವೆ ಮಾಡಿಕೊಳ್ಳುವ ಯೋಚನೆಯಲ್ಲಿ ನಾನಿದ್ದೆ. ಗಾಯತ್ರಿಯೂ ರಜೆಯಿದ್ದ ಕಾರಣ ತನ್ನ ಊರಾದ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರಕ್ಕೆ ಹೋಗಿದ್ದಳು. ನನ್ನ ಜೊತೆ ಮನೆತನ, ಜಾತಕಗಳ ವಿವರಗಳ ಗೊಡವೆ ಇಲ್ಲದೆ, ನನ್ನನ್ನು ಮದುವೆಯಾಗಲು ಒಪ್ಪಿಸುವಲ್ಲಿ ಗಾಯತ್ರಿಯ ಗೆಳತಿಯರು, ನನ್ನ ಮಿತ್ರ ಪ್ರಭು ಎಲ್ಲ ಕಾರಣರಾಗಿದ್ದರು. ನಾನಾವ ಜಾತಿ ಮತ್ತು ಆರ್ಥಿಕ ಸಾಂಸ್ಕೃತಿಕ ಹಿನ್ನೆಲೆಗಳ ಬಗ್ಗೆ ಏನೂ ಕೆದಕದೆ ನನ್ನನ್ನು ಮಾತ್ರ ನೋಡಿ ಒಪ್ಪಿದ ಗಾಯತ್ರಿಯ ಬಗ್ಗೆ ಅಭಿಮಾನದ ಪ್ರೀತಿಯಲ್ಲಿ ಕಾಲ ಕಳೆಯುತ್ತಿದ್ದೆ. ಹೀಗಿರುವಾಗ ಮೇ ತಿಂಗಳ ಕೊನೆ ವಾರದಲ್ಲಿ ತನ್ನ ಗೆಳತಿಯ ಜೊತೆ ಬಿ.ಆರ್.ಪಿ.ಗೆ ಬಂದ ಗಾಯತ್ರಿ ಹೊಸ ಸುದ್ದಿಯನ್ನು ತಂದಿದ್ದಳು. ರಜೆಯಲ್ಲಿ ಅವರ ಮನೆಗೆ ಬಂದಿದ್ದ ಹುಡುಗನೊಬ್ಬ ಗಾಯತ್ರಿಯನ್ನು ನೋಡಿ ಮದುವೆಯಾಗಲು ಒಪ್ಪಿರುವುದಾಗಿಯೂ, ಇಷ್ಟರಲ್ಲೇ ಮದುವೆ ಮಾತು ಆಗಬಹುದೆಂಬ ಆತಂಕದ ಸುದ್ದಿಯನ್ನು ತಿಳಿಸಿದಳು.
ಗಾಯತ್ರಿಯ ಎಂ.ಎ. ಮುಗಿದು ನೌಕರಿ ಹಿಡಿದ ನಂತರ ಎಲ್ಲರ ಒಪ್ಪಿಗೆ ಪಡೆದು ಮದುವೆ ಮಾಡಿಕೊಳ್ಳುವ ಯೋಚನೆಯಲ್ಲಿದ್ದ ನಮಗೆ ನಂತರದ ಬೆಳವಣಿಗೆಗಳು ನಮ್ಮಿಬ್ಬರ ಕೈತಪ್ಪಿ ಹೋಗುವ ಆತಂಕವಾಯಿತು. ಈ ನನ್ನ ಎಲ್ಲ ಅಂತರಂಗದ ವಿಷಯಗಳನ್ನು ಚರ್ಚಿಸಲು ಪ್ರಭು ಜೊತೆ ಭದ್ರಾವತಿಗೆ ಕೃಷ್ಣಪ್ಪನವರನ್ನು ಕಂಡು ಚರ್ಚಿಸಿಕೊಂಡು ಬರಲು ಹೋದೆವು. ಕೃಷ್ಣಪ್ಪ ಮತ್ತು ಇಂದಿರಾ ಅವರ ಜೊತೆ ಎಲ್ಲ ವಿಷಯಗಳನ್ನು ಚರ್ಚಿಸಿ ದಿನಾಂಕ 4-6-1979ರಂದು ರಿಜಿಸ್ಟರ್ ಮದುವೆಯ ಕಾರ್ಯ ಮುಗಿಸಲು ತೀರ್ಮಾನಿಸಿದೆವು. ಅದಕ್ಕೂ ಮುಂಚೆ ಗಾಯತ್ರಿಯನ್ನು ಕರೆದುಕೊಂಡು ಬರಲು ತಿಳಿಸಿದರು. ಅದರಂತೆ ಹೋದಾಗ ಇಂದಿರಾ ಕೂಡ ಇದ್ದು ಗಾಯತ್ರಿಗೆ ಸಮಾಧಾನ, ಧೈರ್ಯ ಹೇಳಿ ಮದುವೆಯ ಆತಂಕವನ್ನು ಹಗುರ ಮಾಡಿದ್ದರು. ತುರ್ತಾಗಿ ಇದ್ದ ಪರಿಸ್ಥಿತಿಯಲ್ಲೇ ಮದುವೆಮಾಡಿಕೊಳ್ಳುವುದನ್ನು ಬಿಟ್ಟರೆ ಬೇರೆ ಮಾರ್ಗ ಕಾಣಲಿಲ್ಲ. ನಮ್ಮ ಊರ ಮನೆಯಲ್ಲಿ ಈ ವಿಷಯಗಳನ್ನು ತಿಳಿಸಿ ಚರ್ಚಿಸಿ ಒಪ್ಪಿಸುವುದು ಸಾಧ್ಯವಿರಲಿಲ್ಲ. ಏಕೆಂದರೆ ಅವ್ವ ನನ್ನ ಅಕ್ಕನ ಮಗಳನ್ನು ಮದುವೆ ಮಾಡಿಕೊಳ್ಳುವ ಬಗ್ಗೆ ತೀರ್ಮಾನಿಸಿದ್ದಳು. ಆ ರೀತಿ ಅಕ್ಕನ ಮಗಳನ್ನು ಮದುವೆಯಾಗುವುದು, ಅವರು ನನ್ನನ್ನು ಅವರ ಸಾಗರದ ಮನೆಯಲ್ಲಿಟ್ಟುಕೊಂಡು ಓದಿಸಿದ ಬಗ್ಗೆ ಋಣ ತೀರಿಸುವ ಜವಾಬ್ದಾರಿ ಎಂದು ಎಲ್ಲರ ನಂಬಿಕೆಯಾಗಿತ್ತು. ಇದನ್ನೆಲ್ಲ ತಿಳಿಗೊಳಿಸಿ ಪ್ರಸ್ತುತ ಮದುವೆ ವಿಷಯಕ್ಕೆ ಒಪ್ಪಿಸಿ ಕರೆತರುವುದು ಆ ಕ್ಷಣದಲ್ಲಿ ಸಾಧ್ಯವಿಲ್ಲದ ಮಾತಾಗಿತ್ತು.
ಇನ್ನು ಗಾಯತ್ರಿ ಮನೆಯವರು ಶೃಂಗೇರಿ ಮಠದ ಅನುಯಾಯಿಗಳು. ಪ್ರಥಮದಲ್ಲಿ ನಾನು ಅಬ್ರಾಹ್ಮಣನಾದ ಕಾರಣ ಈ ಮುದುವೆಯ ಪ್ರಸ್ತಾಪವೇ ಸಾಧ್ಯವಿಲ್ಲದ ಮಾತಾಗಿತ್ತು. ಅದರಲ್ಲೂ ನನ್ನ ಜಾತಿ ದಲಿತ ಗುಂಪಿಗೆ ಸೇರಿದ್ದೆಂಬುದು ತಿಳಿಸಿದರೆ ಇನ್ನು ಅನೇಕ ಸಮಸ್ಯೆಗಳನ್ನು ಹುಟ್ಟುಹಾಕುವುದರಲ್ಲಿತ್ತು. ಹಾಗಾಗಿ ಅವರಿಗೂ ಈ ಮದುವೆ ವಿಷಯ ತಿಳಿಸಿ ಒಪ್ಪಿಗೆ ಪಡೆದು ಮದುವೆಯಾಗುವುದು ಸಾಧ್ಯವಿರಲಿಲ್ಲ. ಈ ವಿಷಯಗಳೇನಾದರೂ ಮೊದಲೇ ಗೊತ್ತಾದರೆ, ಮದುವೆಯಾಗಲು ಖಂಡಿತ ಬಿಡುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಂಡಿದ್ದ ಕಾರಣದಿಂದಾಗಿ ಎಲ್ಲದನ್ನು ಗೌಪ್ಯವಾಗಿಟ್ಟು ಮದುವೆಯ ತಯಾರಿ ಮಾಡಿಕೊಳ್ಳಬೇಕಾಗಿತ್ತು. ಕೃಷ್ಣಪ್ಪ – ಇಂದಿರಾ ಅವರ ಮದುವೆ 1975ರಲ್ಲಿಯೇ ನಡೆದು ಆ ನಂತರ ಅನೇಕ ಅಂತರ್ಜಾತೀಯ, ಧರ್ಮೀಯ ಮತ್ತು ಸರಳ ಮದುವೆಗಳನ್ನು ಮಾಡಿಸಿ ಹೆಸರಾಗಿದ್ದರು. ಸಮಾಜವಾದಿ ಚಳುವಳಿ, ದಲಿತ ಚಳುವಳಿಯ ಅನೇಕ ಯುವಕ, ಯುವತಿಯರು ಇಂದಿರಾ ಕೃಷ್ಣಪ್ಪನವರ ನೇತೃತ್ವದಲ್ಲಿ ಅಂತರ್ಜಾತಿ ಮದುವೆಯಾಗಿದ್ದರು. ಕೃಷ್ಣಪ್ಪನವರ ಅಭಿಮಾನಿ ಬಳಗ – ಭದ್ರಾವತಿ, ಶಿವಮೊಗ್ಗದಲ್ಲಿ ಸದಾ ಇಂತಹ ಸಂದರ್ಭದಲ್ಲಿ ಬೇಕಾದ ನೆರವು ನೀಡಲು ಮುಂದಾಗಿರುತ್ತಿತ್ತು.
ಈ ತಯಾರಿಯ ಸಮಯದಲ್ಲಿಯೇ ನನ್ನ ಹಳೆಯ ವಿದ್ಯಾರ್ಥಿನಿಯರಾಗಿದ್ದ ಯಶೋಧ ಮತ್ತು ಶಾರದ ಅವರು ನೀವು ಹೇಗೂ ಲಿಂಗಾಯತರಂತೆ ಕಾಣುತ್ತೀರಿ, ಸದ್ಯದ ಸಮಯದಲ್ಲಿ ನೀವು ನಿಮ್ಮ ಜಾತಿಯನ್ನು ಲಿಂಗಾಯತರೆಂದು ಹೇಳಿ ಮದುವೆಗೆ ಗಾಯತ್ರಿ ಮನೆಯವರನ್ನು ಒಪ್ಪಿಸುವ ಸಲಹೆ ನೀಡಿದರು. ಆದರೆ ಅದೆಲ್ಲ ಆಗದ ಮಾತು ಎಂದು ನಾನು ಅವರಿಗೆ ಆಗಲೇ ತಿಳಿ ಹೇಳಿದೆ. ಮದುವೆಯ ದಿನಕ್ಕೆ ಬೇಕಾದ ಸೀರೆ, ಒಂದು ತಾಳಿ ಚೈನು ವ್ಯವಸ್ಥೆ ಮಾಡಿಕೊಳ್ಳುವುದು ಮತ್ತು ನನಗೆ ಒಂದು ಜೊತೆ ಷರ್ಟ್ ಪ್ಯಾಂಟ್ ಹೊಲಿಯಲು ಹಾಕಿದ್ದೆ. ಆದರೆ ನನಗೆ ಆ ಟೈಲರ್ ಮದುವೆ ದಿನಕ್ಕೆ ಕೊಡಲೇ ಇಲ್ಲ. ಗಾಯತ್ರಿಯನ್ನು ಭದ್ರಾವತಿಯ ಕೃಷ್ಣಪ್ಪನವರ ಮನೆಗೆ ಬರಲು ಹೇಳಿ ನಂತರ ಎಲ್ಲರೂ ಸೇರಿ ಸಬ್ ರಿಜಿಸ್ಟಾçರ್ ಆಫೀಸಿಗೆ ಹೋದೆವು. ಆಗ ಚಿತ್ರದುರ್ಗದಲ್ಲಿದ್ದ ಬಸವಣ್ಯಪ್ಪ ಕಟ್ಟಲು ತಾಳಿಯೊಂದನ್ನು ಕೊಂಡು ತಂದಿದ್ದ. ಸಬ್ರಿಜಿಸ್ಟರ್ ಆಫೀಸಿನಲ್ಲಿ ಫೀಸಾಗಿ 14ರೂ.ಗಳ ಖರ್ಚಿನಲ್ಲಿ ಭದ್ರಾವತಿಯಲ್ಲಿ ಸಮಾಜವಾದಿ ಮತ್ತು ದಲಿತ ಗೆಳೆಯರ ಸಮಕ್ಷಮದಲ್ಲಿ ಕೃಷ್ಣಪ್ಪ-ಇಂದಿರಾ ದಂಪತಿಗಳ ನೇತೃತ್ವದಲ್ಲಿ ಮದುವೆಯಾಗಿತ್ತು. ಉಟ್ಟ ಸೀರೆಯಲ್ಲಿ ನರಸಿಂಹರಾಜಪುರದಿಂದ ಬಂದಿದ್ದ ಗಾಯತ್ರಿ ಅವರ ಮನೆಯವರಿಗೆ ಪ್ರಭು ಮತ್ತು ಕೇಶವಮೂರ್ತಿಗಳು ಮಾರನೆದಿನ ಹೋಗಿ ನಮ್ಮ ವಿವಾಹ ಆಗಿರುವ ಬಗ್ಗೆ ತಿಳಿಸಿ ಬರಬೇಕೆಂಬ ಮಾತಿಗೆ ಇಬ್ಬರೂ ಮಾರನೇ ದಿನ ಗಾಯತ್ರಿಯ ಮನೆಗೆ ಹೋಗಿ ಮದುವೆಯಾದ ಸುದ್ದಿ ತಿಳಿಸಿದ್ದರು. `ಗಾಯತ್ರಿಯು ಅವಳಿಗೆ ಅಧ್ಯಾಪಕರಾಗಿದ್ದ ರುದ್ರಪ್ಪ ಎನ್ನುವವರನ್ನು ಮದುವೆಯಾಗಿದ್ದಾಳೆ, ಅವರಿಬ್ಬರೂ ಚೆನ್ನಾಗಿರುತ್ತಾರೆ, ನೀವೇನು ಚಿಂತಿಸುವ ಅಗತ್ಯವಿಲ್ಲ’ ಎಂಬುದನ್ನು ಬಾಯಿಪಾಠ ಮಾಡಿದಂತೆ ಒಪ್ಪಿಸಿ ತಕ್ಷಣ ಅಲ್ಲಿಂದ ಜಾಗ ಖಾಲಿ ಮಾಡಿ ಬಂದಿದ್ದರು. ಅದರಿಂದಾಗಿ ಅವರ ಮನೆಯವರಿಗೆ ಗಾಯತ್ರಿ ಎಲ್ಲಿ ಹೋಗಿದ್ದಾಳೆ ಮತ್ತು ಏನಾಗಿದೆ ಎಂಬುದರ ಬಗ್ಗೆ ತಕ್ಷಣ ತಿಳಿದಂತಾಗಿತ್ತು.
ನನ್ನ ಮದುವೆ ದಿನ ಕೃಷ್ಣಪ್ಪನವರ ಮನೆಯಲ್ಲಿದ್ದ ನಾವು ಅಲ್ಲಿದ್ದರೆ ಗಾಯತ್ರಿ ಮನೆ ಕಡೆಯವರು ಬಂದು ಗಲಾಟೆ ಮಾಡಬಹುದೆಂದು ಭಾವಿಸಿ ಇಂದಿರಾ ಕೃಷ್ಣಪ್ಪನವರ ಹಿತೈಷಿ ಆಧ್ಯಾಪಕ ಶಿವಮೊಗ್ಗ ಮುನೀರ್ ಮತ್ತು ಅವರ ತಾಯಿ (ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ) ಬಚ್ಚಿಮ್ಮಾ ಮನೆಗೆ ಹೋಗಿ ಉಳಿಯಬೇಕೆಂದು ತೀರ್ಮಾನಿಸಿದ್ದರು. ಅದರಂತೆ ಮೊದಲ ರಾತ್ರಿ ಬಚ್ಚಿಮ್ಮಾ ಸಿಹಿ ಅಡುಗೆ ಮಾಡಿ ಔತಣ ಏರ್ಪಡಿಸಿದ್ದರು. ಊಟದ ಶಾಸ್ತç ಮಾಡಿ ಮಲಗಿದರೆ ನಿದ್ದೆ ಬಾರದೇ ಇಡೀ ರಾತ್ರಿ ಆತಂಕ ಮತ್ತು ಚಿಂತೆಗಳಲ್ಲಿ ಕಳೆದೆವು. ಮದುವೆಯಾಗಿ ಒಂದು ವಾರದಲ್ಲಿ ಅಂದರೆ 10-6-1979ರಂದು ಶಿವಮೊಗ್ಗ ಡಿ.ಸಿ.ಸಿ. ಬ್ಯಾಂಕ್ ಸಭಾಂಗಣದಲ್ಲಿ ಒಂದು ಸಂತೋಷಕೂಟ ವ್ಯವಸ್ಥೆ ಮಾಡಿದ್ದೆವು. ಅದಕ್ಕೆಲ್ಲಾ ಶಿವಮೊಗ್ಗದವನೇ ಆಗಿದ್ದ ಪ್ರಭು ಮತ್ತು ಅವನ ಅಲ್ಲಿನ ಗೆಳೆಯರಾದ ರೈತಸಂಘದ ಚಟ್ನಳ್ಳಿ ಮಂಜಪ್ಪ, ಅರ್ಚನ ಟ್ರೇರ್ಸ್ ಕಾಂತರಾಜ್ ಓಡಾಡಿ ನಿಗದಿಗೊಳಿಸಿದ್ದರು. ಸುಮಾರು 300-400 ಜನರಿಗೆ ಲಘು ಉಪಹಾರದೊಡನೆ ಈ ಸಮಾರಂಭವನ್ನು ಹಮ್ಮಿಕೊಂಡಿದ್ದೆವು. ಅದಕ್ಕಾಗಿ ಒಂದು ಸಾಮಾನ್ಯ ಕರೆಯೋಲೆಯನ್ನು ಸಹ ಮುದ್ರಿಸಿ ಬೇಕಾದ ಸ್ನೇಹಿತರಿಗೆ ಮತ್ತು ನನ್ನ ಊರಿನ ಸಂಬಂಧಿಕರಿಗೆ ಹಂಚಲು ನಮ್ಮ ಊರಿನ ಮಾಂತೇಶಿಗೆ ಜವಾಬ್ದಾರಿ ನೀಡಿದ್ದೆನು. ಅವನ ಮುಖಾಂತರ ಊರಿಗೆ ಕಳಿಸಿಕೊಟ್ಟಿದ್ದೆ. ಅವ್ವ ಮತ್ತು ಎಲ್ಲ ಸಂಬಂಧಿತ ಬಳಗ ಮತ್ತು ಊರಿನವರು ಹೇಳಿ ಕೇಳಿ ಮದುವೆಯಾಗದೆ ದಿಢೀರ್ ಆಗಿ ಈ ರೀತಿ ಆದ ಬಗ್ಗೆ ಆಕ್ಷೇಪಗಳನ್ನು ಮಾಡಿ ಅರ್ಯಾರೂ ಬಾರದೆ 7-8 ಜನ ಸ್ನೇಹಿತರು ಮಾತ್ರ ಊರಿನಿಂದ ಬಂದಿದ್ದರು. ನಂತರ ನಡೆಯಬೇಕಾಗಿದ್ದ ಸಂತೋಷಕೂಟವೂ ಕೂಡ ಶಿವಮೊಗ್ಗದಲ್ಲಿ ನಡೆಸಲು ಗಾಯತ್ರಿಯವರ ಮನೆಕಡೆಯಿಂದ ಶಿವಮೊಗ್ಗದಲ್ಲಿ ಮಾತ್ರ ಈ ಸಮಾರಂಭ ಮಾಡುವುದು ಬೇಡ ಎಂಬ ಅಭಿಪ್ರಾಯಪಟ್ಟಿದ್ದರಿಂದ ಕೊನೆ ಹಂತದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮುಂದೆ ಒಂದು ತಿಳುವಳಿಕೆಯ ಸೂಚನೆಯನ್ನು ಬರೆದು ಹಾಕಿ ಇಲ್ಲಿ ನಡೆಯಬೇಕಾಗಿದ್ದ ಸಂತೋಷ ಕೂಟ ಸಮಾರಂಭವನ್ನು ಬಿಆರ್ಪಿಯಲ್ಲಿನ ಸ್ನಾತಕೋತ್ತರ ಕೇಂದ್ರಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿಸಲಾಗಿತ್ತು. ಆದರೆ ನನ್ನ ಅನೇಕ ಸ್ನೇಹಿತರು ಸಂಜೆ ಬಂದವರು ನಂತರದ ಸ್ಥಳ ಬದಲಾವಣೆಯನ್ನು ತಿಳಿದು ಕಡೆಗವರು ಬಿಆರ್ಪಿಯಲ್ಲಿ ನಡೆದ ಸಂತೋಷಕೂಟದಲ್ಲಿ ಪಾಲ್ಗೊಳ್ಳಲಾಗಲಿಲ್ಲ. ಮತ್ತೆ ಕೆಲವರು ಅಲ್ಲಿ ಇಲ್ಲಿ ವಿಚಾರಿಸಿ ಬಿಆರ್ಪಿಗೆ ಬರುವ ವೇಳೆಗೆ ಸಂತೋಷಕೂಟವೇ ಅವಸರದ ಗಲಾಟೆಯಲ್ಲಿ ಮುಕ್ತಾಯವಾಗಿತ್ತು.
ಮದುವೆಯಾದ ಮಾರನೇ ದಿನ ಭದ್ರಾವತಿಯಲ್ಲಿರುವುದಾಗಲೀ ಹತ್ತಿರದಲ್ಲಿ ಇಲ್ಲೆಲ್ಲಿ ಇರುವುದು ಸೂಕ್ತವಲ್ಲವೆಂದು ಅವಸರದಲ್ಲಿ ಇಂದಿರಾ ಜೋಡಿಸಿಕೊಟ್ಟಿದ್ದ ಅವರದೇ ಸೂಟ್ಕೇಸ್ನಲ್ಲಿ ಒಂದೆರಡು ಸೀರೆ ಬಟ್ಟೆಗಳನ್ನು ಜೋಡಿಸಿಕೊಂಡು ಭದ್ರಾವತಿಯ ಬಸ್ ಸ್ಟಾö್ಯಂಡ್ಗೆ ಬಂದೆವು. ನಾನು ದಾವಣಗೆರೆಗೆ ಹೋಗೋಣವೆಂದು ಯೋಚಿಸುತ್ತಿರುವಾಗಲೇ ಅಲ್ಲಿಗೆ ಬಂದ ಶಂಕರ್ ಮೋಟಾರ್ ಟ್ರಾನ್ಸ್ಪೋರ್ಟ್ ನೋಡಿ, ಇವಳು ಅದು ನಮ್ಮ ಊರಿಗೆ ಹೋಗುವ ಬಸ್, ಅದರಲ್ಲಿ ತಮ್ಮ ಊರಿನವರು ಯಾರಾದರು ಇರುತ್ತಾರೆ ಎಂದು ಗಡಿಬಿಡಿ ಮಾಡಿದಾಗ ಅಲ್ಲೇ ಮೈಸೂರು ಕಡೆ ಹೊರಟು ನಿಂತಿದ್ದ ಬಸ್ ಹತ್ತಿ ಅರಸೀಕೆರೆಗೆ ಎರಡು ಟಿಕೆಟ್ ತೆಗೆದುಕೊಂಡು ಬಸ್ ಹತ್ತಿ ಕೂತೆವು. ಸದ್ಯ ಭದ್ರಾವತಿ ಬಿಟ್ಟೆವಲ್ಲ ಎಂಬ ಸಮಾಧಾನದಲ್ಲಿ ಸ್ವಲ್ಪ ಯೋಚಿಸುತ್ತಾ ಮೈಸೂರಿಗೆ ಹೋಗುವುದೋ ಇಲ್ಲ, ಅರಸೀಕೆರೆಯಲ್ಲಿ ಉಳಿಯುವುದೋ ಎಂಬ ಯೋಚನೆಯಲ್ಲಿದ್ದಾಗಲೇ, ಅರಸೀಕೆರೆಯಲ್ಲಿ ನಾನು ಬಿ.ಎ., ಮತ್ತು ಎಂ.ಎ. ನಲ್ಲಿ ನನ್ನ ರೂಂಮೇಟ್ ಮತ್ತು ಬ್ಯಾಚ್ಮೇಟ್ ಆಗಿದ್ದ ಎಲ್. ರವೀಂದ್ರ ಆಗ ಅರಸೀಕೆರೆ ತಹಸೀಲ್ದಾರನಾಗಿದ್ದ. ನಾವು ಅರಸೀಕೆರೆಯಲ್ಲಿ ಇಳಿದು ಬಸ್ ಸ್ಟಾö್ಯಂಡ್ ಹತ್ತಿರದಲ್ಲಿದ್ದ ವಸತಿಗೃಹದಲ್ಲಿ ರೂಂ ಮಾಡಿದೆವು. ನಂತರ ಸೂಟ್ಕೇಸ್ನಲ್ಲಿದ್ದ ಬಟ್ಟೆಯನ್ನೆಲ್ಲಾ ನೋಡಿ ಅವಳಿಗೊಂದು ಹೊಸ ಸೀರೆ ತೆಗೆದುಕೊಳ್ಳಲು ನಿರ್ಧರಿಸಿ, ವಸತಿಗೃಹದ ಎದುರಲ್ಲಿದ್ದ ಈಗಲೂ ಇರುವ `ಕನ್ನಿಕಾ ಪರಮೇಶ್ವರಿ ಕ್ಲಾತ್ ಸೆಂಟರ್’ನಲ್ಲಿ ಗಾಯತ್ರಿಗೆ `ನಾಳೆಯೊಳಗೆ ಬ್ಲೌಸ್ ಹೊಲೆದುಕೊಡುವ ಒಪ್ಪಿಗೆಯ ಮೇಲೆ ಒಂದು ಸೀರೆ ಮತ್ತಿತರ ಸಣ್ಣಪುಟ್ಟ ಸಾಮಾನುಗಳನ್ನು ಕೊಂಡುಕೊಂಡೆವು. ನಂತರ ತಹಸೀಲ್ದಾರನಾಗಿದ್ದ ರವೀಂದ್ರನಿಗೆ ಪೋನ್ ಮಾಡಿದೆ. ಹೀಗೆ ನಾನು ಮದುವೆಯಾಗಿ ಹೆಂಡತಿಯೊಡನೆ ಅರಸೀಕೆರೆ ಲಾಡ್ಜ್ನಲ್ಲಿ ಉಳಿದಿರುವ ಬಗ್ಗೆ ತಿಳಿಸಿದೆ. ಅವನು ನೇರ ಸಂಜೆ ಮನೆಗೆ ಊಟಕ್ಕೆ ಬರುವಂತೆ ಆಹ್ವಾನಿಸಿದ. ಆತಂಕದ ಆವೇಗದಲ್ಲಿದ್ದ ನಮಗೆ ಅವನಿದ್ದುದು ಮತ್ತು ಮನೆಗೆ ತಕ್ಷಣ ಆಹ್ವಾನಿಸಿದ್ದುದು ಒಂದು ರೀತಿಯ ಸಮಾಧಾನ ನೀಡಿತ್ತು. ಸಂಜೆ ಅವರ ಮನೆಗೆ ಊಟಕ್ಕೆ ಹೊರಡುವ ಮುನ್ನ ಗಾಯತ್ರಿಯ ಎಲ್ಲಾ ಅಕ್ಕಂದಿರಿಗೆ ಪ್ರತ್ಯೇಕ ಪತ್ರಗಳನ್ನು ಬರೆದು, ತುರ್ತಾಗಿ ಮದುವೆಯಾದ ಬಗ್ಗೆ ವಿವರಿಸಿ ತಾವೆಲ್ಲರೂ ಆಶೀರ್ವದಿಸಬೇಕೆಂದೂ, ಯಾವುದೇ ಆತಂಕಕ್ಕೆ ಒಳಗಾಗಬಾರದೆಂದು ನಮ್ರವಾಗಿ ವಿನಂತಿಸಿಕೊಂಡಿದ್ದೆವು.
ಸಂಜೆ ರವೀಂದ್ರನ ಮನೆಗೆ ಮದುವೆಯ ಜೋಡಿಯಾಗಿ ಔತಣವೊಂದಕ್ಕೆ ಜೊತೆಯಾಗಿ ಹೋಗುತ್ತಿರುವುದು ಮೊಟ್ಟಮೊದಲನೆಯದಾಗಿತ್ತು.
ನಾನು ಮಾಂಸಾಹಾರಿ ಮತ್ತು ಬೀರ್ ಕುಡಿಯುತ್ತಿದ್ದುದು ಗಾಯತ್ರಿಗೆ ಗೊತ್ತಿದ್ದರೂ ನಾನು ಅವಳಿಗಾಗಿ ಆ ಕ್ಷಣದಲ್ಲಿ ಕುಡಿಯುವುದು ಬೇಡ ಎಂದು ನಿರ್ಧರಿಸಿದ್ದೆ. ರವೀಂದ್ರನ ಮನೆಯಲ್ಲಿ ಅವರ ತಂದೆ ಆರ್.ಎಫ್.ಒ. ಆಗಿ ನಿವೃತ್ತರಾದವರು. ಮನೆಯಲ್ಲಿ ಮೊದಲೇ ಊಟಕ್ಕೆ ಕೂತಿದ್ದರು. ಜೊತೆಗೆ ಮ್ಯಾಕ್ಡೆವಲ್ ವಿಸ್ಕಿ ಬಾಟಲ್ ಹಾಗೂ ಮಾಂಸದೂಟದ ಎಲುಬಿನ ತುಣುಕುಗಳೆಲ್ಲ ಸುತ್ತಲೂ ಇದ್ದವು. ಗಾಯತ್ರಿ ನೋಡಿದ ಮೊದಲ ಮಾಂಸಹಾರಿ ಊಟದ ನೋಟದಲ್ಲಿಯೇ ಹೌಹಾರಿ ನಿಂತಿದ್ದಳು. ನಾನು ಮದುವೆ ಮಾಡಿಕೊಂಡು ಬಂದಿರುವ ಕಾರಣ ರವೀಂದ್ರ ನಿಜವಾಗಿಯೂ ಅದ್ದೂರಿ ಊಟ ಮತ್ತು ವಿಸ್ಕಿಗೆ ವ್ಯವಸ್ಥೆ ಮಾಡಿದ್ದ. ನಾನು ನನ್ನ ಮದುವೆಯ ಯಾವ ವಿವಾದಗಳನ್ನೂ ಅವನಿಗೆ ತಿಳಿಸದ ಕಾರಣ ಅವನು ತೋಚಿದಂತೆ ಮಾಡಿದ್ದ. ನಾನು ಅವನಿಗೂ ಮತ್ತು ಅವನ ಶ್ರೀಮತಿಯವರಿಗೆ, ಇವಳು ಮಾಂಸ ತಿನ್ನುವುದಿಲ್ಲ ಬೇರೇನಾದರೂ ಇದ್ದರೆ ಆದೀತೆಂದು ಹೇಳಿದೆ. ಅದಕ್ಕೇನೆಂದು 10 ನಿಮಿಷದಲ್ಲಿ ತಿಳಿಸಾರೊಂದು ತಯಾರಿಸಿದರು. ನಾನು ಗಾಯತ್ರಿ ಮತ್ತು ರವೀಂದ್ರ ಊಟ ಮಾಡಿದೆವು. ಮೊದಲ ಮದುವೆಯ ಔತಣಕೂಟ ತಿಳಿಸಾರು ಉಪ್ಪಿನಕಾಯಿ ಮೊಸರಲ್ಲಿ ಅವಳ ಊಟ ಮುಗಿದಿತ್ತು. ನನಗೆ ಒಳ್ಳೆಯ ಮಾಂಸಾಹಾರದ ಊಟವಾಗಿತ್ತು. ಅಲ್ಲಿಂದ ಮಾರನೇ ದಿನ ಮೈಸೂರಿಗೆ ಬಂದು ಜಗನ್ಮೋಹನ ಪ್ಯಾಲೇಸ್ ಹತ್ತಿರದಲ್ಲಿದ್ದ ಮಹಾರಾಜಾ ಲಾಡ್ಜ್ನಲ್ಲಿ ಉಳಿದುಕೊಂಡೆವು. ಅಲ್ಲಿಂದ ಮೈಸೂರಿನ ಗೆಳೆಯರಿಗೆ ನನ್ನ ಹಿರಿಕಿರಿ ಸ್ನೇಹಿತರಿಗೆ ಫೋನಿನಲ್ಲೆ ನಾವು ಮದುವೆಯಾಗಿ ಬಂದಿರುವ ವಿಷಯ ತಿಳಿಸಿದೆ.
ಹಿರಿಯರಾದ ಪಿ. ಮಲ್ಲೇಶ್ ಅವರು ಮನೆಗೆ ಕರೆದು ಅದ್ದೂರಿಯಾದ ಔತಣ ಮಾಡಿಸಿ ನನಗೆ ಗೊತ್ತಿರುವ ಮತ್ತು ಇನ್ನಿತರ ಸ್ನೇಹಿತರನ್ನು ಕರೆದು ನಾವಿಬ್ಬರೂ ಹೊಸದಾಗಿ ಮದುವೆಯಾಗಿ ಬಂದಿರುವ ಬಗ್ಗೆ ಅಭಿಮಾನದಿಂದ ಪರಿಚಯ ಮಾಡಿಸಿ ಹರಸಿ ಜೊತೆಗೆ ನನ್ನ ಹೆಂಡತಿಗೆ ಒಳ್ಳೆಯ ಸೀರೆಯನ್ನು ತಂದು ಉಡುಗೊರೆ ನೀಡಿದ್ದನ್ನ ಈಗಲೂ ಗಾಯತ್ರಿ ನೆನಪಿಸಿಕೊಳ್ಳುತ್ತಾಳೆ. ಮಲ್ಲೇಶ್ ಮತ್ತು ಅವರ ಶ್ರೀಮತಿ ಅವರು ಗಾಯತ್ರಿಯನ್ನು ಚೆನ್ನಾಗಿ ಮಾತಾಡಿಸಿ, ಒಳ್ಳೆಯ ಹುಡುಗನನ್ನು ಮದುವೆಯಾಗಿದ್ದೀಯ ಏನೂ ಯೋಚನೆ ಮಾಡಬೇಡ ಎಂದೆಲ್ಲ ಅವಳಿಗೆ ಸಮಾಧಾನದ ಮಾತು ಹೇಳಿ ಕಳುಹಿಸಿದ್ದರು.
ಹಾಗೆಯೇ ಮಾದೇವ ಮತ್ತು ಸುಮಿತ್ರಾಬಾಯಿಯವರು ಮನೆಗೆ, ಪಿ.ಕೆ. ಮಿಶ್ರಾಜಿ ಮತ್ತು ಮಹೇಶನ ಮನೆಗೂ ಹೋಗಿದ್ದೆವು. ಸುಮಿತ್ರಾಬಾಯಿ ಅವರು ನನ್ನ ಹೆಂಡತಿಯ ಹಿನ್ನೆಲೆ ಮೊದಲೇ ತಿಳಿದುಕೊಂಡಿದ್ದ ಕಾರಣ ಸೊಗಸಾದ ಸಸ್ಯಾಹಾರಿ ಔತಣ ಮಾಡಿದ್ದರು. ನನಗೆ ಬ್ರಾಹ್ಮಣ ಜಾತಿಯ ಅನೇಕ ಸ್ನೇಹಿತರಿರುವುದಾಗಿಯೂ ಆದುದರಿಂದ ಸಸ್ಯಾಹಾರಿ ಊಟ ಉಪಚಾರಗಳು ನನಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿ ಸುಮಿತ್ರಾಬಾಯಿ ಅವರು ಆದರಿಸಿದ್ದರು.
ಎಲ್ಲ ಸ್ನೇಹಿತರನ್ನು ಮಾತಾಡಿಸಿದ ನಂತರ ಸಂಜೆ ಎಂ.ಸಿ. ಸುಂದರೇಶ ನಮ್ಮ ಕಿರಿಯ ಗೆಳೆಯ ಮತ್ತು ತನ್ನ ಎಂಬಿಎ ಶಿಕ್ಷಣದ ನಂತರ ಸ್ವಂತ ಗ್ಯಾಸ್ ಏಜೆನ್ಸಿ ನಡೆಸುತ್ತಾ ಬೆಳೆಯುವ ಉದ್ಯಮಿಯಾಗಿದ್ದ. ಅವನು ದೊಡ್ಡ ಹೋಟೆಲೊಂದರಲ್ಲಿ ಪಾರ್ಟಿ ಏರ್ಪಡಿಸಿದ್ದ. ಮಹೇಶ ಮತ್ತಿತರ ಗೆಳೆಯರ ಜೊತೆ ಪಾರ್ಟಿಗೆ ಹೋಗಿದ್ದೆವು. ಆಗ ಅಲ್ಲಿಗೆ `ಆಂದೋಲನ’ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಶಿವಣ್ಣ ತನ್ನ ಪ್ರೇಮ ಪ್ರಕರಣದ ವೈಫಲ್ಯ ಕುರಿತು ಹೇಳುತ್ತಾ… ಅಳುತ್ತಾ ಮತ್ತಾರೂ ಮಾತಾಡಲಾಗದಂತೆ ಅವನದೇ ದೊಡ್ಡ ಗೋಳಾಯಿತು. ಮಹೇಶ ಎಲ್ಲರನ್ನು ಸಮಾಧಾನ ಮಾಡುತ್ತಾ ಪಾರ್ಟಿ ಮುಗಿಸಿದ್ದೆವು. ಸುಂದರೇಶ್, ಇವರೆಲ್ಲ ಅದಕ್ಕೆ ನಾನು ಬೇಡ ಅಂದಿದ್ದು, ಎಂದು ಬೇಸರ ಮಾಡಿಕೊಂಡಿದ್ದ. ನಾನೇ ಆತನಿಗೆ ಸಮಾಧಾನದ ಮಾತುಗಳನ್ನು ಹೇಳಿ ಅಲ್ಲಿಂದ ಬೀಳ್ಕೊಂಡಿದ್ದೆವು.
ಮಾರನೇ ದಿನ ಮಹೇಶನ ಊರಿಗೆ ಹೋಗಿ ಎರಡು ದಿನ ಅವನ ಊರಾದ ಕುಪ್ಪೇಗಾಲದಲ್ಲಿ ಇದ್ದೆವು. ಮಹೇಶನ ತಂದೆ ದೊಡ್ಡ ಜಮೀನುದಾರರು. ಮನೆಯಲ್ಲಿ ಹತ್ತಾರು ಆಳು ಕಾಳುಗಳು ಇದ್ದು ರೈತಾಪಿ ಕೆಲಸಗಳು ನಡೆಯುತ್ತಿದ್ದವು. ರೇಷ್ಮೆ, ತೆಂಗು, ಬತ್ತದ ಬೆಳೆಗಳಿದ್ದ ಹೊಲ ಗದ್ದೆಗಳ ಕಡೆ ತಿರುಗಾಡುತ್ತಾ ಅವರೂರಿಗೆ ಹೊಂದಿಕೊಂಡ ನದಿಕಡೆ ತಿರುಗಾಡಿ ಮನೆಗೆ ಬರುತ್ತಿದ್ದೆವು. ಮಹೇಶನ ಮನೆಯವರು ವಿಶೇಷವಾಗಿ ಉಪಚರಿಸಿದರು. ಗಾಯತ್ರಿ, ಅವರ ಅಡುಗೆಯ ಮನೆಯಲ್ಲಿದ್ದ ಒಂದು ಬುಟ್ಟಿ ತುಂಬಾ ಕಟ್ಟಿಟ್ಟಿದ್ದ ರಾಗಿ ಮುದ್ದೆಗಳನ್ನು ನೋಡಿ `ಇಷ್ಟೊಂದಾ’ ಎಂದು ಉದ್ಗಾರ ತೆಗೆದಿದ್ದಳು. ಅದಕ್ಕೆ ಅವರಮ್ಮ ಕೆಲಸಗಾರರಿಗೆ ಊಟ ಕೊಡದಿದ್ದರೆ ಕೆಲಸಕ್ಕೆ ಬರುವುದಿಲ್ಲ ಎಂದೆಲ್ಲ ವಿವರಣೆ ನೀಡುತ್ತಿದ್ದರು. ಎರಡು ದಿನ ಆರಾಮ ಇದ್ದು ಕುಪ್ಪೇಗಾಲದಿಂದ ಮೈಸೂರಿಗೆ ಹೊರಟು ನಿಂತಿದ್ದ ಬಸ್ಸು ಏರಿದ್ದೆವು. ನಮ್ಮನ್ನು ಕಳಿಸಲು ಬಂದಿದ್ದ ಮಹೇಶ ಏನೋ ನೆನಪು ಮಾಡಿಕೊಂಡವನಂತೆ ಬಸ್ಸಿನ ಪಕ್ಕಕ್ಕೆ ಬಂದು 200ರೂಗಳನ್ನು ನನ್ನ ಕೈಗಿಟ್ಟು ನಾನೇ ಮದುವೆ ಕಾಲಕ್ಕೆ ಸ್ವಲ್ಪ ಮುಂಚೆ ಬರಬೇಕಾಗಿತ್ತು, ಆಗಲಿಲ್ಲ ಎಂದು ಹೇಳುತ್ತಿರುವಾಗಲೇ ಬಸ್ ಮುಂದೆ ಮುಂದೆ ಚಲಿಸುತ್ತಿತ್ತು. ಧಾವಂತದಲ್ಲಿ ಮದುವೆ ನೋಂದಾಯಿಸಿಕೊಂಡು ಮೈಸೂರು ಕಡೆಗೆ ಹೋಗಿದ್ದ ನಾನು ಬಿಆರ್ಪಿಗೆ ವಾಪಸ್ ಬಂದಿದ್ದೆ. ನಂತರ 10ನೇ ತಾರೀಖಿನಂದು ಆಯೋಜಿಸಿದ್ದ ಔತಣಕೂಟಕ್ಕೆ ರೆಡಿಯಾಗುತ್ತಿದ್ದೆವು. ಯಾರೆಲ್ಲಾ ಬರಬಹುದು, ಏನೇನು ಬೆಳವಣಿಗೆಯಾಗಬಹುದೆಂಬ ದುಗುಡದಲ್ಲಿದ್ದೆವು. ನಮ್ಮ ಮದುವೆಗೆಲ್ಲಾ ಒತ್ತಾಸೆಯಾಗಿದ್ದ ಪ್ರಭುವಿನ ಮೇಲೆ ಎಲ್ಲರ ವಕ್ರದೃಷ್ಟಿ ಬಿದ್ದಿತ್ತು. ಗಾಯತ್ರಿ ಮನೆಯವರು ಮತ್ತು ಅವರಲ್ಲಿನ ಹಿರಿಯರನೇಕರು ಶಿವಮೊಗ್ಗದ ಅವರ ಮನೆಗೆ ಬಂದು ಗಾಯತ್ರಿಯನ್ನು ಅವರುಗಳು ಮಾತಾಡಿಸಬೇಕೆಂದು ಅದಕ್ಕಾಗಿ ನೀವು ಅವರಿಬ್ಬರನ್ನು ಶಿವಮೊಗ್ಗಕ್ಕೆ ಕರೆಸಲು ಪ್ರಭುಗೆ ಒತ್ತಾಯಿಸಿದ್ದರು.
ಅವರ ಇಚ್ಛೆಯಂತೆ ನಾನು ಗಾಯತ್ರಿ ಪ್ರಭು ಮನೆಗೆ ಸುಮಾರು ಮಧ್ಯಾಹ್ನ 11-12ರ ಸಮಯಕ್ಕೆ ಹೋದೆವು. ಗಾಯತ್ರಿಯ ಹಿರಿಯ ಅಣ್ಣ ಹೆಚ್.ಸಿ. ನಂಜುಂಡಭಟ್ಟ ಮತ್ತು ಹೆಚ್.ಸಿ. ಜಗದೀಶ್ ಹಾಗೂ ಬಂಧುವಾಗಿದ್ದ ಶಾರದಮ್ಮ ಅವರುಗಳ ಜೊತೆ ಇನ್ನೂ ಹಲವರು ಗಾಯತ್ರಿಯೊಡನೆ ಮಾತನಾಡಿದರು. ಅವರನ್ನೆಲ್ಲ ನೋಡಿದ ಗಾಯತ್ರಿ ಭಾವುಕಳಾಗಿ ಕೂತಿದ್ದಳು. ಬಂದ ಗಾಯತ್ರಿ ಬಂಧುಗಳು ಯಾರೂ ನನ್ನನ್ನು ಮಾತಾಡಿಸಲಿಲ್ಲ. ಅವರೆಲ್ಲ ಗಾಯತ್ರಿಯೊಡನೆ ಮಾತಾಡಿ ಬೇರೆಲ್ಲ ಮಾತು ಮುಗಿದು ಕೊನೆಯಲ್ಲಿ ಈಗ ಎಂ.ಎ. ಮುಗಿದಿರುವ ಕಾರಣ ಮುಂದಿನ ಓದಿಗಾಗಿ ಹೊರದೇಶಕ್ಕೆ ಹೋಗುವ ವ್ಯವಸ್ಥೆ ಮಾಡುವುದಾಗಿಯೂ, ಜೀವನದಲ್ಲಿ ಭೋಗಕ್ಕಿಂದ ತ್ಯಾಗ ದೊಡ್ಡದು ಎಂಬೆಲ್ಲ ಮಾತಾಡಿ ಈಗ ಆಗಿರುವ ಮದುವೆ ಮದುವೆಯಲ್ಲ, ಬಿಟ್ಟು ಬಿಡು ಎಂದೆಲ್ಲ ಮಾತುಗಳು ಬಂದವು. ಆಗ ಅದುವರೆಗೂ ಸುಮ್ಮನಿದ್ದ ಪ್ರಭು ಮಧ್ಯೆ ಪ್ರವೇಶಿಸಿ, ಈಗ ನನ್ನ ಸ್ನೇಹಿತ ನಿಮ್ಮ ತಂಗಿಯನ್ನು ಮದುವೆಯಾಗಿದ್ದು ಮುಂದಿನ ಜೀವನದ ವಿಷಯ ಮಾತನಾಡುವುದನ್ನು ಬಿಟ್ಟು ನೀವು ಬೇರ್ಪಡಿಸುವ ಮಾತಾಡುತ್ತಿದ್ದೀರಿ ಎಂದು ಆಕ್ಷೇಪಿಸಿ, ಇನ್ನು ಸಾಕು ಹೊರಡಿ ಎಂದು ಏರು ಧ್ವನಿಯಲ್ಲಿ ಹೇಳಿದ. ಗಾಯತ್ರಿ ಚಿಕ್ಕ ಅಣ್ಣ ಜಗದೀಶ, ಇದು ಏನು ಮನೆಯೋ ಜೈಲೋ ಹೀಗೆಲ್ಲಾ ಮಾತಾಡುತ್ತೀರೆಂದು ಹೇಳುವಾಗಲೇ, ಪ್ರಭು ಹೌದು ಇದು ಜೈಲು ನಾನಿಲ್ಲಿನ ಜೈಲ್ ಸೂಪರಿಂಟೆಂಡೆಂಟ್ ಎಂದು ಏರು ಧ್ವನಿಯಲ್ಲಿ ಹೇಳಿದ ಕಾರಣ ಮುಂದಿನ ಮಾತುಗಳು ನಿಂತು ನಮ್ಮೆಲ್ಲರ ಭೇಟಿ ಕೊನೆಗೊಂಡಿತ್ತು.
ದಿನಾಂಕ 10-6-1979ರ ಮಧ್ಯಾಹ್ನ 3-4 ಗಂಟೆಗೆ ನಾವಿಬ್ಬರೂ ನಮ್ಮ ಸ್ನಾತಕೋತ್ತರ ಕೇಂದ್ರದಲ್ಲಿನ ಒಂದು ಶಾಲಾ ಕೊಠಡಿಯಲ್ಲಿ ಸಂತೋಷ ಕೂಟ ಆಯೋಜಿಸಲಾಗಿತ್ತು. ಕೃಷ್ಣಪ್ಪನವರ ಸಮಾಜವಾದಿ, ದಲಿತ ಮಿತ್ರರನೇಕರು ಹಾಜರಿದ್ದರು. ಪ್ರಾಸ್ತಾವಿಕವಾಗಿ ಕೃಷ್ಣಪ್ಪನವರು ಮಾತಾಡಿ, ಸರಳ, ಜಾತ್ಯತೀತ ಮದುವೆಗಳು ಭಾರತೀಯರಿಗೆ ಇಂದಿನ ಅವಶ್ಯಕವಾದ ಅಂಶಗಳೆಂದು ಮಾತನಾಡಿ ಇಂತಹ ಮದುವೆಯಾಗುತ್ತಿರುವ ನಮ್ಮಿಬ್ಬರಿಗೂ ಶುಭ ಕೋರಿದ್ದರು. ನಂತರದಲ್ಲಿ ಡಾ. ತೀ.ನಂ. ಶಂಕರನಾರಾಯಣ, ಡಾ. ಶ್ರೀಕಂಠ ಕೂಡಿಗೆ, ಡಾ. ಜಿ.ಎನ್ ಕೇಶವಮೂರ್ತಿ ಮತ್ತು ಪ್ರಭು ಕೂಡ ಮಾತಾಡಿದ ನಂತರ ನಾನು ಎಲ್ಲರಿಗೂ ಕೃತಜ್ಞತೆ ಹೇಳಿದ್ದೆ. ಇನ್ನೇನು ಇದೆಲ್ಲ ಆಗುವ ಸಮಯಕ್ಕೆ ಸರಿಯಾಗಿ ಗಾಯತ್ರಿಯ ತಂದೆ, ಅಣ್ಣಂದಿರು ಹಾಗೂ ಇತರ ಕೆಲವರು ಅಲ್ಲಿಗೆ ಬಂದರು. ಕೃಷ್ಣಪ್ಪನವರು ಇದೆಲ್ಲವನ್ನು ಗಮನಿಸುತ್ತಾ ಇದ್ದ ಕಾರಣ ಗಲಾಟೆ ಆಗುವ ಸಂಭವವನ್ನು ನಿರೀಕ್ಷಿಸಿ ನಮ್ಮಿಬ್ಬರನ್ನು ಒಂದು ಅಂಬಾಸಿಡರ್ ಕಾರಿನಲ್ಲಿ ಭದ್ರಾವತಿಗೆ ತರಾತುರಿಯಲ್ಲಿ ಕಳಿಸಿಕೊಟ್ಟರು. (ಸುದ್ದಿದಿನ.ಕಾಂ|ವಾಟ್ಸಾಪ್|9980346243
ಮುಂದುವರಿಯುವುದು

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ



