ದಿನದ ಸುದ್ದಿ
ಸಕ್ಕರೆ ಕಾಯಿಲೆ ಸುತ್ತ ಮುತ್ತ..! ; ಹುಷಾರಾಗಿರಿ..!
ಪ್ರಪಂಚದಲ್ಲಿ ಅತಿ ಹೆಚ್ಚು ಸಕ್ಕರೆ ಕಾಯಿಲೆ ಇರುವ ನಂಬರ್ ಒನ್ ದೇಶ ಚೀನಾ, ಭಾರತ ಎರಡನೇ ಸ್ಥಾನದಲ್ಲಿದೆ. 2025 ರಲ್ಲಿ ಭಾರತವೇ ನಂಬರ್ ಒನ್ ಆಗಲಿದೆ ಎಂದು ವೈದ್ಯಕೀಯ ಜಗತ್ತು ಹೇಳುತ್ತಿದೆ. ನಮ್ಮ ದೇಶದಲ್ಲಿ ಸಾಕಷ್ಟು ಆಸ್ಪತ್ರೆಗಳಿವೆ. ಸಾಕಷ್ಟು ವೈದ್ಯರಿದ್ದಾರೆ. ಪ್ರತಿಯೊಂದು ಕಾಯಿಲೆಗೂ ಉತ್ತಮವಾದ ಔಷಧಿಗಳೂ ಇವೆ.
ಒಟ್ಟಿನಲ್ಲಿ ವೈದ್ಯಕೀಯ ಕ್ಷೇತ್ರ ಅತ್ಯಂತ ಮುಂದುವರೆದಿದೆ. ಆದರೂ ಬಿಪಿ ಶುಗರ್ ನಿಯಂತ್ರಣ ಏಕೆ ಸಾಧ್ಯವಾಗುತ್ತಿಲ್ಲ. ಇಂದಿಗೂ ಅನೇಕ ವೈದ್ಯರು ಬಿಪಿ ಶುಗರ್ ಕಾಯಿಲೆಗೆ ಔಷಧಿ ಜೀವನ ಪರ್ಯಂತರ ತೆಗೆದುಕೊಳ್ಳಲೇಬೇಕೆಂದು ಏಕೆ ಹೇಳುತ್ತಿದ್ದಾರೆ? ಈ ಬಗ್ಗೆ ಆಳವಾಗಿ ನೋಡಿದಾಗ ಪ್ರಮುಖವಾಗಿ ಇಂದಿನ ಅಧಿಕ ಜನರು ಅಧಿಕ ಆಹಾರ ಸೇವಿಸುತ್ತಿದ್ದಾರೆ. ಪದೇ ಪದೇ ಆಹಾರ ಸೇವಿಸುತ್ತಿದ್ದಾರೆ. ಪ್ರತಿದಿನ ಮೂರು ಹೊತ್ತು ಊಟ ಮಾಡಲೇಬೇಕು. ಹಸಿವೆ ಇರಲಿ ಇಲ್ಲದಿರಲಿ ಆಹಾರ ಸೇವಿಸುತ್ತಿದ್ದಾರೆ. ಅದರಲ್ಲೂ ಪ್ರಕೃತಿಯಿಂದ ಗಿಡ ಮರಗಳಿಂದ ಬರುವ ಆಹಾರವನ್ನು ನೇರವಾಗಿ ಸೇವಿಸುತ್ತಿಲ್ಲ. ಪ್ರತಿಯೊಂದು ಆಹಾರವೂ ಪ್ರೊಸೆಸ್ಡ್ ಪ್ಯಾಕ್ಡ್ ಆಗಿ ಬರುತ್ತಿದೆ. ಅದರಲ್ಲೂ ಎಣ್ಣೆಯಲ್ಲಿ ಕರಿದ, ಮಸಾಲೆಯಿಂದ ರುಚಿಕರವಾದ ಆಹಾರವೇ ಬೇಕು. ಉಪವಾಸ ಮಾಡುವವರು ಅತಿ ಕಡಿಮೆಯಾಗಿದ್ದಾರೆ. ಇದಕ್ಕೆಲ್ಲ ಕಾರಣ ಇಂದಿನ ಜನರಲ್ಲಿ ಅಧಿಕ ಹಣವಿದೆ. ಆಹಾರದ ಕೊರತೆಯಿಲ್ಲ. ಮನೆಯಲ್ಲಿ ಊಟವಿಲ್ಲವೆಂದರೆ ಹೋಟೆಲ್ಗೆ ಹೋಗಿ ಊಟ ಮಾಡುತ್ತಾರೆ. ಖಾಲಿ ಹೊಟ್ಟೆಯಲ್ಲಿ ಮಾತ್ರ ಇರುವುದಿಲ್ಲ.
ದೇಶದ ಶೇಕಡ 20 ರಷ್ಟು ಜನರಿಗೆ ತಮಗೆ ಬಿಪಿ ಮತ್ತು ಸಕ್ಕರೆ ಕಾಯಿಲೆ ಇರುವ ಬಗ್ಗೆ ಅರಿವೆಯೇ ಇರುವುದಿಲ್ಲ. ಶೇ.20 ರಷ್ಟು ಜನರು ತಮಗೆ ಬಿಪಿ ಅಥವಾ ಶುಗರ್ ಕಾಯಿಲೆ ಇಲ್ಲದೆ ಇದ್ದರೂ ಮಾತ್ರೆ ಸೇವಿಸುತ್ತಿದ್ದಾರೆ. ಶೇಕಡ 50 ರಷ್ಟು ಜನರು ಆಹಾರ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳದೇ ಬಿಪಿ ಸಕ್ಕರೆ ಕಾಯಿಲೆಗೆ ಮಾತ್ರೆ ಸೇವಿಸುತ್ತಿದ್ದಾರೆ. ಶೇಕಡ 30 ರಷ್ಟು ಜನರು ಅನವಶ್ಯಕ ಅತಿಯಾದ ನಿರಂತರ ಔಷಧಿಗಳ ಸೇವನೆಯಿಂದ ಹೈಬಿಪಿ ಮತ್ತು ಶುಗರ್ ಕಾಯಿಲೆಗೆ ಈಡಾಗುತ್ತಿದ್ದಾರೆ. ಬಿಪಿ ಮತ್ತು ಶುಗರ್ ಕಾಯಿಲೆ ಇವೆರಡೂ ಅಣ್ಣ ತಮ್ಮಂದಿರಿದ್ದಂತೆ. ಒಂದು ಬಂದರೆ ಇನ್ನೊಂದು ಬರಲೇಬೇಕು. ಇವೆರಡೂ ಬಂದಾಗ ಇತರೆ ಎಲ್ಲಾ ಕಾಯಿಲೆಗಳು ಒಂದೊಂದಾಗಿ ಬರುತ್ತವೆ.
ನಮ್ಮ ದೇಹದಲ್ಲಿರುವ ಮೇದೋಜೀರಕ ಗ್ರಂಥಿಯು (pancreatitis) ಶುಗರ್ ಕಾಯಿಲೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಮೆದೋಜೀರಕ ಗ್ರಂಥಿಯು ಆಹಾರ ಜೀರ್ಣಗೊಳಿಸಲು ಕೆಲವು ರಾಸಾಯನಿಕಗಳನ್ನು ಉತ್ಪತ್ತಿ ಮಾಡುತ್ತದೆ. ಜೊತೆಗೆ ಇನ್ಸುಲಿನ್ ಉತ್ಪಾದಿಸುವ ಕೆಲಸವನ್ನೂ ಇದು ಮಾಡುತ್ತದೆ. ನಾವು ಸೇವಿಸುವ ಕೆಟ್ಟ ಆಹಾರದಿಂದ, ಕೆಟ್ಟ ಜೀವನ ಶೈಲಿಯಿಂದ ಈ ಮೆದೋಜೀರಕ ಗ್ರಂಥಿಯು ಬಲಹೀನಗೊಂಡು ಇನ್ಸುಲಿನ್ ಅನ್ನು ಕಡಿಮೆ ಉತ್ಪಾದಿಸುತ್ತದೆ ಅಥವಾ ಉತ್ಪಾದಿಸುವದನ್ನೇ ನಿಲ್ಲಿಸಿ ಬಿಡುತ್ತದೆ. ಆಗಲೇ ಶುಗರ್ ಕಾಯಿಲೆ ನಮಗೆ ಬರುತ್ತದೆ.
ನಾನು ಈ ಲೇಖನದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳವಾಗಿ ಮಾಹಿತಿ ಒದಗಿಸಿರುತ್ತೇನೆ. ನಾನು ತಿಳಿಸಿರುವ ಈ ಚಿಕಿತ್ಸಾ ಪದ್ಧತಿಯು ವಿಶ್ವದಲ್ಲಿಯೇ ಶ್ರೇಷ್ಠ ಚಿಕಿತ್ಸಾ ಪದ್ದತಿಯಾಗಿದೆ. ಇದನ್ನು 100% ಪಾಲಿಸುವ ಮೂಲಕ ನಿಮ್ಮ ಶುಗರ್ ಕಾಯಿಲೆಯನ್ನು 100% ಕಂಟ್ರೋಲ್ನಲ್ಲಿ ಇಡಬಹುದು. ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದಲ್ಲಿ ನಿಮ್ಮ ಅನುಭವಕ್ಕೆ ಬರುತ್ತದೆ. ಅವರವರ ದೇಹ ಪ್ರಕೃತಿಗೆ ಅನುಗುಣವಾಗಿ ನಿಯಂತ್ರಣ ಹೊಂದಲು, ಗುಣಮುಖ ಹೊಂದಲು ಹೆಚ್ಚು ಕಡಿಮೆ ಸಮಯ ತೆಗೆದುಕೊಳ್ಳಬಹುದು. ಆದರೆ, ಶಾಶ್ವತ ಪರಿಹಾರ ಸಿಗುತ್ತದೆ.
ಸಕ್ಕರೆ ಕಾಯಿಲೆ ಎಂದರೇನು?
ಅಧಿಕ ಸಕ್ಕರೆ ಸೇವನೆಯಿಂದ ಸಕ್ಕರೆ ಕಾಯಿಲೆ ಬರುತ್ತದೆ ಎಂದು ಅನೇಕರು ತಿಳಿದುಕೊಂಡಿದ್ದಾರೆ. ಆದರೆ, ಇದು ತಪ್ಪು. ಏಕೆಂದರೆ ನಾವು ಪ್ರತಿ ದಿನ ಬೆಳಿಗ್ಗೆಯಿಂದ ರಾತ್ರಿಯವರೆಗೂ ಸೇವಿಸುವ ಎಲ್ಲಾ ಆಹಾರಗಳು ಕಾರ್ಬೋಹೈಡ್ರೇಟ್ ಎಂಬ ಸಕ್ಕರೆ ಅಂಶವನ್ನು ಹೊಂದಿರುತ್ತವೆ. ಅಂದರೆ, ನಾವು ಪ್ರತಿ ದಿನ ಸೇವಿಸುವ ಅನ್ನ, ಚಪಾತಿ, ಇಡ್ಲಿ, ವಡಾ, ದೋಸೆ ಇತರೆ ಎಲ್ಲವುಗಳಲ್ಲೂ ಶೇ.50 ಕ್ಕಿಂತ ಹೆಚ್ಚು ಸಕ್ಕರೆ ಅಂಶವಿರುತ್ತದೆ. ಈ ಆಹಾರ ಸೇವಿಸಿದಾಗ ಜೀರ್ಣಗೊಂಡು ಗ್ಲುಕೋಸ್ ರೂಪದಲ್ಲಿ ಪರಿವರ್ತನೆ ಹೊಂದಿ ರಕ್ತ ಸೇರುತ್ತದೆ. ರಕ್ತ ಸೇರಿದ ಈ ಗ್ಲುಕೋಸನ್ನು ಮೆದೋಜೀರಕ ಗ್ರಂಥಿ ಬಿಡುಗಡೆ ಮಾಡುವ ಇನ್ಸುಲಿನ್ ಎಂಬ ಹಾರ್ಮೋನು ರಕ್ತದ ಮೂಲಕ ಶರೀರದ ಎಲ್ಲಾ ಜೀವಕೋಶಗಳಿಗೆ ತಲುಪಿಸುತ್ತದೆ. ಆಗಲೇ ನಮಗೆ ಶಕ್ತಿ ಬರುತ್ತದೆ. ಈ ಗ್ಲುಕೋಸ್ ಜೀವಕೋಶಗಳಿಗೆ ತಲುಪದೇ ರಕ್ತದಲ್ಲಿಯೇ ಅಧಿಕವಾಗಿ ಸಂಗ್ರಹವಾಗುವುದನ್ನು ಸಕ್ಕರೆ ಕಾಯಿಲೆ ಎನ್ನುವರು.
ಟೈಪ್-1 ಮತ್ತು ಟೈಪ್-2 ಡಯಾಬಿಟೀಸ್ ಎಂದರೇನು?
ಕೆಲವು ಕಾರಣಗಳಿಂದ ಮೆದೋಜೀರಕ ಗ್ರಂಥಿಯು ಇನ್ಸುಲಿನ್ ಕಡಿಮೆ ಉತ್ಪಾದಿಸುತ್ತದೆ ಅಥವಾ ಉತ್ಪಾದಿಸುವುದನ್ನೆ ನಿಲ್ಲಿಸಿಬಿಡುತ್ತದೆ. ಆಗ ರಕ್ತದಲ್ಲಿರುವ ಗ್ಲುಕೋಸ್ ಉಪಯೋಗವಾಗದೆ ರಕ್ತದಲ್ಲಿಯೇ ಅಧಿಕವಾಗಿ ಉಳಿದುಬಿಡುತ್ತದೆ. ಇದನ್ನು ಟೈಪ್-1 ಡಯಾಬಿಟೀಸ್ ಎನ್ನುವರು. ಇದು ಮಕ್ಕಳಲ್ಲಿ ಅತಿ ಹೆಚ್ಚಾಗಿ ಕಂಡುಬರುತ್ತದೆ. ಕೆಲವರಲ್ಲಿ ಮೇದೋಜೀರಕ ಗ್ರಂಥಿ ಅಗತ್ಯ ಇನ್ಸುಲಿನ್ ಉತ್ಪಾದಿಸಿದರೂ ಗ್ಲುಕೋಸ್ ಉಪಯೋಗಿಸಿಕೊಳ್ಳಲು ಜೀವಕೋಶಗಳು ವಿಫಲವಾಗುತ್ತವೆ. ಇದರಿಂದಲೂ ರಕ್ತದಲ್ಲಿ ಅಧಿಕ ಗ್ಲುಕೋಸ್ ಸಂಗ್ರಹವಾಗುತ್ತದೆ. ಇದನ್ನೇ ಟೈಪ್-2 ಡಯಾಬಿಟೀಸ್ ಎನ್ನುವರು. ಇದು ಇಂದು ಎಲ್ಲರಲ್ಲೂ ಅತೀ ಹೆಚ್ಚಾಗಿ ಕಂಡುಬರುತ್ತಿದೆ.
ಅತಿಯಾದ ಹಸಿವು, ಪದೇ ಪದೇ ಮೂತ್ರ ವಿಸರ್ಜನೆ, ತೂಕ ಕಡಿಮೆಯಾಗುವುದು, ಗಾಯ ವಾಸಿಯಾಗಲು ವಿಳಂಬ, ಕಣ್ಣು ಮಂಜಾಗುವುದು, ಇವು ಸಕ್ಕರೆ ಕಾಯಿಲೆಯ ಪ್ರಮುಖ ಲಕ್ಷಗಳಾಗಿವೆ. ಇವುಗಳಲ್ಲಿ ಕೆಲವು ಲಕ್ಷಣಗಳು ಕಾಣದೇ ಇರಬಹುದು. ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದಲ್ಲಿ ಶುಗರ್ ಪರೀಕ್ಷೆ ಮಾಡಿಸಿಕೊಳ್ಳಿ.
ಸಕ್ಕರೆ ಕಾಯಿಲೆ ಬರಲು ಕಾರಣವೇನು?
ಪ್ರಮುಖವಾಗಿ ಎರಡು ಕಾರಣಗಳಿಂದ ಸಕ್ಕರೆ ಕಾಯಿಲೆ ಬರುತ್ತದೆ. ತಪ್ಪಾದ ಆಹಾರ ಸೇವನೆ ಮತ್ತು ತಪ್ಪಾದ ಜೀವನ ಶೈಲಿಯಿಂದ ಸಕ್ಕರೆ ಕಾಯಿಲೆ ಬರುತ್ತದೆ. ಪ್ರೊಸೆಸ್ಡ್ ಪ್ಯಾಕ್ಡ್ ಫುಡ್ ಸೇವನೆ, ಕರಿದ ಹುರಿದ ಆಹಾರ, ಅತಿಯಾದ ಆಹಾರ, ಪದೇ ಪದೇ ಆಹಾರ ಸೇವನೆ, ತೂಕ ಹೆಚ್ಚಳ, ಅನವಶ್ಯಕ ಅತಿಯಾದ ಔಷಧಿಗಳ ಸೇವನೆ, ರೋಗ ನಿರೋಧಕ ವ್ಯವಸ್ಥೆಯ ಅಸಮತೋಲನ, ಅನುವಂಶಿಕ, ಮಾನಸಿಕ ಒತ್ತಡ, ಮತ್ತು ದೈಹಿಕ ಶ್ರಮ ಇಲ್ಲದೇ ಇರುವುದು ಈ ಎಲ್ಲಾ ಕಾರಣಗಳಿಂದಲೂ ಸಕ್ಕರೆ ಕಾಯಿಲೆ ಬರುತ್ತದೆ.
ಸಕ್ಕರೆ ಕಾಯಿಲೆಯ ನಾರ್ಮಲ್ ರೇಂಜ್
ಖಾಲಿ ಹೊಟ್ಟೇಲಿ 100 ರೊಳಗೆ ಇದ್ದಲ್ಲಿ ನಾರ್ಮಲ್, ಊಟದ ನಂತರ 140 ರೊಳಗಿದ್ದಲ್ಲಿ ನಾರ್ಮಲ್ ಎಂದು ವೈದ್ಯಕೀಯ ಕ್ಷೇತ್ರವು ಪರಿಗಣಿಸಿದೆ. ನಿಮಗೆ ಖಾಲಿ ಹೊಟ್ಟೇಲಿ 100 ರಿಂದ 126 ರೊಳಗಿದ್ದಲ್ಲಿ ಮತ್ತು ಊಟದ ನಂತರ 140 ರಿಂದ 200ರ ರೊಳಗಿದ್ದಲ್ಲಿ ನಿಮಗೆ ಸಕ್ಕರೆ ಖಾಯಿಲೆ ಬರುವ ಸಂಭವವಿರುತ್ತದೆ. ಮುಂಜಾಗ್ರತೆಯಾಗಿ ನಿಮ್ಮ ಆಹಾರದಲ್ಲಿ ಬದಲಾವಣೆ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಆದರೆ, ಶುಗರ್ ಮಾತ್ರೆ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಒಂದು ವೇಳೆ ಖಾಲಿ ಹೊಟ್ಟೇಲಿ 126ರ ಮೇಲಿದ್ದಲ್ಲಿ ಮತ್ತು ಊಟದ ನಂತರ 200 ಕ್ಕಿಂತ ಮೇಲಿದ್ದಲ್ಲಿ ನಿಮಗೆ ಸಕ್ಕರೆ ಕಾಯಿಲೆ ಇದ್ದು, ನಿಮ್ಮ ಆಹಾರದಲ್ಲಿ ಬದಲಾವಣೆ ಮತ್ತು ಜೀವನ ಶೈಲಿಯಲ್ಲಿ ಬದಲಾವಣೆ ಜೊತೆಗೆ ಅಲ್ಪ ಪ್ರಮಾಣದ ಶುಗರ್ ಔಷಧ ತೆಗೆದುಕೊಳ್ಳಲೇಬೇಕು. (ಬರಹ :ಸೂರ್ಯಕಾಂತ ಸಜ್ಜನ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ3 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ2 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

