Connect with us

ದಿನದ ಸುದ್ದಿ

ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ.

ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.

ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.
ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.

ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.
ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ.

ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.

ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.

ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.

ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.

ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.

ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ.

ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.

ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.

ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್‌ಸಿಎಸ್‌ಪಿ/ಟಿಎಸ್‌‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.

ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.
ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ.

ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ.

ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ.
ಸತ್ಯಮೇವ ಜಯತೇ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

Published

on

ಸುದ್ದಿದಿನ,ದಾವಣಗೆರೆ:ಎ.ವಿ.ಕೆ. ಕಾಲೇಜು ಹಾಗೂ ಹಳೆ ಬಿಸ್ಲೇರಿ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. ವಿಶೇಷ ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಅಧಿಕಾರಿಗಳಾದ ಉಪ್ಪಾರ ಮತ್ತು ರಫಿಕ್ ಅವರು ಬೆಂಕಿ ನಂದಿಸುವ ವಿಧಾನಗಳು, ಗ್ಯಾಸ್ ಲೀಕ್ ಆದಾಗ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು ಹಾಗೂ ಬೆಂಕಿ ಅವಘಡಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು. ಅಗ್ನಿ ಆಕಸ್ಮಿಕ ನಿರ್ವಹಣೆಯ ಪ್ರಾತ್ಯಕ್ಷಿಕೆ ಶಿಬಿರಾರ್ಥಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಿಜಿ ಆಸ್ಪತ್ರೆ, ದಾವಣಗೆರೆ ಉಪಮುಖ್ಯ ವೈದ್ಯಾಧಿಕಾರಿಗಳಾದ ಡಾ. ಪ್ರಭು ಎಂ. ಬಿಸ್ಲೇರಿ ಅವರು ಮಾನಸಿಕ ಆರೋಗ್ಯದ ಮಹತ್ವ, ದುಶ್ಚಟಗಳಿಂದ ದೂರವಿರುವ ಅಗತ್ಯ ಮತ್ತು ಯುವ ಪೀಳಿಗೆ ಉತ್ತಮ ಜೀವನ ರೂಪಿಸಿಕೊಳ್ಳುವ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಒತ್ತಡವನ್ನು ಸಮರ್ಥವಾಗಿ ನಿಭಾಯಿಸಬೇಕು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ತಿಪ್ಪೇಸ್ವಾಮಿ ಅವರು ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ ವಿವಿಧ ಶೈಕ್ಷಣಿಕ ಹಾಗೂ ಉದ್ಯೋಗಾವಕಾಶಗಳ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಸತೀಶ್ ಕಲಹಾಳ್ ಅವರು “ತಂಬಾಕು ಮುಕ್ತ ಯುವ ಅಭಿಯಾನ 2.0” ಕುರಿತು ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಹಾನಿ, ತಂಬಾಕು ಬಿಡುವ ಲಾಭಗಳು ಹಾಗೂ ತಂಬಾಕು ಉತ್ಪಾದನೆಯ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ಜೀವಿತ ಎಂ.ಪಿ., ಶ್ರೀಮತಿ ಉಷಾ ಎಂ.ಆರ್., ಡಾ. ಲೋಹಿತ್, ಡಾ. ಸತೀಶ್, ಡಾ. ವೀಣಾ, ಡಾ. ರಾಜಕುಮಾರ, ಸೂರ್ಯಪ್ರಸಾದ್, ಕವಿತಾ ಎಂ.ಎಂ., ವಿಶ್ವನಾಥ ಡಿ.ಆರ್. ಪರಶುರಾಮ್ ಕಟಾವು ಕರ್, ಗ್ರಾಮಸ್ಥರಾದ ಶ್ರೀಮತಿ ರಶ್ಮಿ ಸತೀಶ್, ಶ್ರೀಮತಿ ರತ್ನಮ್ಮ ಮಹೇಶ್, ಶ್ರೀಮತಿ ಮಂಜುಳಾ ಮಲ್ಲೇಶ್, ಶ್ರೀ ಶಾರದ, ಶಿವರಾಧಿಕಾರಿಗಳಾದ ಡಾ. ವಿಶ್ವನಾಥ ಪಿ., ಡಾ. ಕವಿತ ಆರ್.ಜಿ. ಹಾಗೂ ಅನೇಕ ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ಕಾರ್ಯಕ್ರಮವು ಆರೋಗ್ಯ ಮತ್ತು ಸುರಕ್ಷತೆ ಕುರಿತ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ

Published

on

ಸುದ್ದಿದಿನ,ದಾವಣಗೆರೆ:ಎ.ವಿ.ಕೆ ಮಹಿಳಾ ಕಾಲೇಜು ಹಾಗೂ ಹಳೆಬಿಸಲೇರಿ ಗ್ರಾಮದ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಹಳೆಬಿಸಲೇರಿ ಗ್ರಾಮದಲ್ಲಿ ಆಯೋಜಿಸಲಾದ 5ನೇ ದಿನದ ಸಂಜೆ 6:30 ಕ್ಕೆ ವೇದಿಕೆ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ ಶ್ರೀ ಬಸವನಗೌಡರ್ ಕುಂದೂರು ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು. ಇವರು ಶಿಬಿರಾರ್ಥಿಗಳನ್ನು ಕುರಿತು ಮಾತನಾಡುತ್ತಾ ಯುವಜನತೆ ಮೊಬೈಲ್ ಅನ್ನು ಅವಶ್ಯಕತೆಗೆ ಅನುಗುಣವಾಗಿ ಹಿತಮಿತವಾಗಿ ಬಳಸಿದ್ದಲ್ಲಿ ಅದರ ಸದುಪಯೋಗ ಅರಿವು ಮೂಡಿಸಿದಂತಾಗುತ್ತದೆ ಹಾಗೂ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಇದ್ದಲ್ಲಿ ಬರುತ್ತದೆಂದು ತಿಳಿಸಿದರು.

ಹಾಗೆಯೇ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕಮಲ ಸೊಪ್ಪಿನ್ ರವರು ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿ ಬದುಕಿಗೆ ಶಿಸ್ತು, ಸಮಯ ಪ್ರಜ್ಞೆ ಬೇಕು ದಾನ, ಧರ್ಮದ ಸಮಾಜಮುಖಿ ಚಟುವಟಿಕೆಗಳನ್ನು ಸೇವಾ ಮನೋಭಾವದಿಂದ ಪಾಲಿಸಬೇಕೆಂದು ಕರೆ ನೀಡಿದರು.

ಶ್ರೀಯುತ ವಿಶ್ವನಾಥ.ಡಿ.ಆರ್ ಉಪನ್ಯಾಸಕರು ಹಾಗೂ ಪತ್ರಿಕ ವರದಿಗಾರರು ಇಂದಿನ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸದ ಮೂಲಕ ಇಂದಿನ ಯುವಜನತೆ ಗ್ರಾಮೀಣ ಬದುಕನ್ನು ಅಪ್ಪಿಕೊಳ್ಳಬೇಕೆಂದು ಹಾಗೂ ವಿಶೇಷ ವ್ಯಕ್ತಿಗಳ ಅನುಭವದ ಮಾತುಗಳು ತರಗತಿಯ ಜ್ಞಾನಕ್ಕಿಂತ(ಕಲಿಕೆ) ತಿಳಿಸಿದರು. ಎ.ವಿ.ಕೆ ಮಹಿಳಾ ಕಾಲೇಜಿನ ಕನ್ನಡ ಉಪನ್ಯಾಸಕರಾದ ಕಳಚಾರ ಅವರು ಮಾನವೀಯತೆ ಕುರಿತು ಮಾತನಾಡಿದರು.

ಇಂದಿನ ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿನಿ ಚಂದನ ಪ್ರಾರ್ಥನೆ ನೆರವೇರಿಸಿದರು. ಭೂಮಿಕಾ ರವರು ಸ್ವಾಗತಿಸಿದರು. ಮಾಲ ಮತ್ತು ಜ್ಯೋತಿ ಅವರು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಡಾ. ಕವಿತಾ ಆರ್. ಜಿ. ಅತಿಥಿ ಪರಿಚಯ ಮಾಡಿಕೊಟ್ಟರು ಹಾಗೂ ಡಾ. ವಿಶ್ವನಾಥ್ ಪಿ ಇವರು ಶಿಬಿರಾರ್ಥಿಗಳು ಆಯೋಜಿಸಿದ್ದ ವಿವಿಧ ಮಹಿಳಾ ಸಂಘಗಳ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರ ಬಗ್ಗೆ ವಾಚಿಸಿದರು ಊರಿನ ಹಿರಿಯ ಮುಖಂಡರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವೇದಿಕೆಯನ್ನು ಅಲಂಕರಿಸಿದರು.

ಕಾಲೇಜಿನ ಬೋಧಕರಾದ ಶ್ರೀ ಚನ್ನಬಸವನಗೌಡ, ದಿವ್ಯಶ್ರೀ ಜಿ, ಶ್ರೀಮತಿ ಉಷಾ ಎಲ್, ಆಂಗ್ಲ ಭಾಷೆ ಉಪನ್ಯಾಸಕ ಮುಂತಾದವರು ಉಪಸ್ಥಿತರಿದ್ದರು ಈ ವಿಶೇಷ ಶಿಬಿರವು ಗ್ರಾಮದ ಮಹಿಳೆಯರನ್ನು ಒಗ್ಗೂಡಿಸುವ, ಶಬರಿಕರಣ ಗೊಳಿಸುವ ಉಧಾರತೆಯ ಗುಣಗಳನ್ನು ಬೆಳೆಸುವಲ್ಲಿ ಮಹತ್ವದ ಕಾರ್ಯಕ್ರಮವಾಗಿ ಎಲ್ಲರ ಗಮನ ಸೆಳೆಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ

Published

on

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದಾವಣಗೆರೆ ವತಿಯಿಂದ 2025–26ನೇ ಸಾಲಿನ ಪಠ್ಯಪೂರಕ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭವು ದಿನಾಂಕ 09-05-2026ರಂದು ಬೆಳಿಗ್ಗೆ 11.30 ಗಂಟೆಗೆ ಕಾಲೇಜು ಆವರಣದಲ್ಲಿ ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮದ ಉದ್ಘಾಟನೆ ಹಾಗೂ ಸಮಾರೋಪ ಭಾಷಣವನ್ನು ಧಾರಾಶಿವ್ (ಮಹಾರಾಷ್ಟ್ರ) ಜಿಲ್ಲಾಧಿಕಾರಿಗಳಾದ ಶ್ರೀ ಕೀರ್ತಿ ಕಿರಣ್ ಹೆಚ್. ಪೂಜಾರ್, ಐಎಎಸ್ ಅವರು ನೆರವೇರಿಸಿದರು. ತಮ್ಮ ಭಾಷಣದಲ್ಲಿ ವಿದ್ಯಾರ್ಥಿನಿಯರು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯಪೂರಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವುದು ಅವರ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ನೆರವಾಗುತ್ತದೆ ಎಂದು ತಿಳಿಸಿದರು.

ಶಿಸ್ತು, ಸಮಯಪಾಲನೆ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಮಹತ್ವವನ್ನು ಅವರು ಒತ್ತಿ ಹೇಳಿದರು. ವಿದ್ಯಾರ್ಥಿನಿಯರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿಯನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ಬಿ. ಅವರು ಕಾಲೇಜಿನ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಾಧನೆಗಳನ್ನು ಸಂಕ್ಷಿಪ್ತವಾಗಿ ವಿವರಿಸಿ, ವಿದ್ಯಾರ್ಥಿನಿಯರ ಪರಿಶ್ರಮವನ್ನು ಮೆಚ್ಚಿದರು. ಸಂಸದರ ಮತ್ತು ಶಾಸಕರು, ಸಿ ಡಿ ಸಿ ಸದಸ್ಯರು ಸಹಕಾರವನ್ನು ಸ್ಮರಸಿದರು.

ಉಪಸ್ಥಿತರಾಗಿ ಡಾ. ನಾಗನಗೌಡ ಎಸ್.ಪಿ., ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು, ಅರ್ಥಶಾಸ್ತ್ರ ವಿಭಾಗ; ಡಾ. ಭೀಮಪ್ಪ ಎಂ.ಪಿ., ಸಂಚಾಲಕರು, ಐಕ್ಯುಎಸಿ; ಶ್ರೀಮತಿ ಸವಿತಾ ಎಸ್., ಕಚೇರಿ ಅಧೀಕ್ಷಕರು ಸೇರಿದಂತೆ ಹಲವಾರು ವೇದಿಕೆ ಮೇಲೆ ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಪ್ರಸ್ತಾವಿಕ ನುಡಿ ಹಾಗೂ ವಾರ್ಷಿಕ ವರದಿಯನ್ನು ಡಾ. ಶೋಭಾ ಸಾವಕಾರ, ಸಂಚಾಲಕರು, ಸಾಂಸ್ಕೃತಿಕ ಸಮಿತಿ ವಾಚಿಸಿದರು. ಸ್ವಾಗತವನ್ನು ಡಾ. ಭೀಮಪ್ಪ ಎಂ.ಪಿ. ನೆರವೇರಿಸಿದರು. ನಿರೂಪಣೆಯನ್ನು ಸುಭಾಸ್ ನಿರ್ವಹಿಸಿದರು. ವಿದ್ಯಾರ್ಥಿನಿ ಕವನ ಪ್ರಾರ್ಥನಾ ಗೀತೆಯನ್ನು ಹಾಡಿದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕೆ.ಎಸ್. ಈಶ್ವರಪ್ಪ ಮಾತನಾಡಿ, ಪಠ್ಯೇತರ ಚಟುವಟಿಕೆಗಳು ನಾಯಕತ್ವ ಹಾಗೂ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ ಎಂದು ಅಭಿಪ್ರಾಯಪಟ್ಟರು. ಸಿ.ಡಿ.ಸಿ. ಸದಸ್ಯರಾದ ಅನಿಲ್ ಗೌಡ್ರು ಮತ್ತು ಶ್ರೀಮತಿ ಸುಜಾತಾ ಉಪಸ್ಥಿತರಿದ್ದರು.

ಉಪನ್ಯಾಸಕರಾದ ತೊಪ್ಪಲು ಮಲ್ಲಿಕಾರ್ಜುನರವರು ಮುಖ್ಯ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಡಾ. ಕುಮಾರ್ ವಿದ್ಯಾರ್ಥಿನಿಯರ ಸನ್ಮಾನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕ್ರೀಡಾ ವಿಭಾಗದ ಸನ್ಮಾನವನ್ನು ದೈಹಿಕ ನಿರ್ದೇಶಕಿ ಸುನೀತಾ, ಸಾಂಸ್ಕೃತಿಕ ವಿಭಾಗದ ಸನ್ಮಾನವನ್ನು ಹಾಗೂ ವಂದನಾರ್ಪಣೆಯನ್ನು ಸುರೇಖಾ ನೆರವೇರಿಸಿದರು.

ಸಮಾರಂಭದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು. ವೇದಿಕೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243,

Continue Reading

Trending