ದಿನದ ಸುದ್ದಿ
ಯಲ್ಲಮ್ಮನ ಸವದತ್ತಿ ಕ್ಷೇತ್ರಾಭಿವೃದ್ಧಿಗೆ ಆದ್ಯತೆ : ಸಿಎಂ ಸಿದ್ದರಾಮಯ್ಯ ಭರವಸೆ
ಸುದ್ದಿದಿನಡೆಸ್ಕ್:ಯಲ್ಲಮ್ಮನ ಗುಡ್ಡವಿರುವ ಸವದತ್ತಿ ಕ್ಷೇತ್ರಕ್ಕೆ ಪ್ರತಿವರ್ಷ ಕೋಟ್ಯಾಂತರ ಭಕ್ತಾದಿಗಳು ಭೇಟಿ ನೀಡುತ್ತಾರೆ. ಅವರಿಗೆ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಲ್ಲಮ್ಮನ ಗುಡ್ಡದಲ್ಲಿ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದರು.
ಯಲ್ಲಮ್ಮನ ಗುಡ್ಡಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಮತ್ತು ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಗೋವಾದಿಂದಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅವರಿಗೆ ಉತ್ತಮ ವಸತಿ ಸೌಲಭ್ಯ ಕಲ್ಪಿಸಲು ದೇವಸ್ಥಾನ ಮತ್ತು ಸುತ್ತಮುತ್ತಲಿರುವ ಸರ್ಕಾರಿ ಜಮೀನು ಒತ್ತುವರಿಯನ್ನು ನಿಯಂತ್ರಿಸಲು ತಡೆಗೋಡೆ ನಿರ್ಮಿಸಬೇಕು ಎಂದರು.
ಸವದತ್ತಿಯಲ್ಲಿ ವ್ಯಾಪಾರ ವಹಿವಾಟುದಾರರಿಗೆ ಪ್ರತ್ಯೇಕ ಜಾಗವನ್ನು ಗುರುತಿಸಬೇಕು. ಉತ್ತಮ ಸೌಲಭ್ಯ ಒದಗಿಸಿದಲ್ಲಿ, ಪ್ರವಾಸಿಗರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಲಿದೆ. ತಿರುಪತಿ, ಧರ್ಮಸ್ಥಳ ಕ್ಷೇತ್ರಗಳ ಮಾದರಿಯಲ್ಲಿ ಸವದತ್ತಿಯಲ್ಲೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಹುಣ್ಣಿಮೆ ದಿನಗಳಲ್ಲಿ ಸವದತ್ತಿಗೆ ಚಕ್ಕಡಿಗಳಲ್ಲಿ ಜನರು ಆಗಮಿಸುತ್ತಾರೆ. ಅವರ ಜಾನುವಾರುಗಳಿಗೆ ಮೇವು ಒದಗಿಸಲು ಮೇವು ಬ್ಯಾಂಕ್ ಸ್ಥಾಪಿಸಬೇಕು. ಈ ಎಲ್ಲ ಸೌಲಭ್ಯಗಳಿಗೆ ನೆರವಾಗಲು ಮುಂದಾಗುವ ದಾನಿಗಳು ಮತ್ತು ಸಂಸ್ಥೆಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು. ಸವದತ್ತಿ ಕ್ಷೇತ್ರದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲ ಪರಿಶ್ಟಿಷ್ಟ ವರ್ಗದ ವಸತಿ ಶಾಲೆಗಳಿಗೆ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ, ಅವರು ಮಾತನಾಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಅವರ ಕಲ್ಯಾಣಕ್ಕೆ ತಮ್ಮ ಸರ್ಕಾರ ಬಜೆಟ್ನಲ್ಲಿ ಮೊಟ್ಟ ಮೊದಲ ಬಾರಿಗೆ ಹಣ ನಿಗದಿಮಾಡಿತ್ತು ಎಂದರು.
ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ನಿವಾರಣೆಯಾಗದ ಹೊರತು, ಸಮಾನತೆ ಬರುವುದಿಲ್ಲ ಎಂದರು. ಕಾರ್ಯಕ್ರಮದಲ್ಲಿ ರಾಜಾನಹಳ್ಳಿ ವಾಲ್ಮೀಕಿ ಸಮುದಾಯ ಮಠದ ಜಗದ್ಗುರು ಪ್ರಸನ್ನಾನಂದಪುರಿ, ಸಚಿವರಾದ ಸತೀಶ್ ಜಾರಕಿಹೊಳ್ಳಿ, ಕೆ.ಎನ್. ರಾಜಣ್ಣ, ಸತೀಶ್ ಜಾರಕಿಹೊಳಿ, ಎಚ್.ಕೆ. ಪಾಟೀಲ್ ಮೊದಲಾದವರು ಹಾಜರಿದ್ದರು.
ವಾಲ್ಮೀಕಿ ಪ್ರಶಸ್ತಿ
ಜಾನುವಾರು ರಕ್ಷಣೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಗ್ರಾಮೀಣ ಸೊಗಡನ್ನು ಉಳಿಸಿ, ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸಿದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ, ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ ಅವಿರತ ಹೋರಾಟ ಮಾಡಿದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಡಾ. ಎಸ್. ರತ್ನಮ್ಮ, ಬೆಳಗಾವಿಯ ರಾಜಶೇಖರ ತಳವಾರ, ಬೆಂಗಳೂರು ಮೂಲದ ಕೆ.ಎಸ್. ಮೃತ್ಯುಂಜಯ,ವಿಜಯನಗರ ಜಿಲ್ಲೆಯ ರತ್ಮಮ್ಮ ಬಿ. ಸೋಗಿ ಅವರಿಗೆ ಪ್ರಶಸ್ತಿ ನೀಡಿ, ಗೌರವಿಸಲಾಯಿತು. ಪ್ರಶಸ್ತಿ, 20 ಗ್ರಾಂ ಬಂಗಾರದ ಪದಕ ಹಾಗೂ 5 ಲಕ್ಷ ರೂಪಾಯಿ ನಗದು ಒಳಗೊಂಡಿದೆ.
ರಾಜ್ಯದಲ್ಲಿ ವಾಲ್ಮೀಕಿ ಜಯಂತಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧೆಡೆಗಳಲ್ಲಿ ಇಂದು ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಮಾತನಾಡಿ, ಬದುಕಿನ ಮೌಲ್ಯಗಳನ್ನು ಬಿಂಬಿಸುವ ರಾಮಾಯಣ ಕಾವ್ಯ ರಚಿಸಿದ ವಾಲ್ಮೀಕಿ ಮಹರ್ಷಿ ಸದಾ ಸ್ಮರಣೀಯರಾಗಿದ್ದಾರೆ ಎಂದರು.
ದೊಡ್ಡಬಳ್ಳಾಪುರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಮಹರ್ಷಿಗಳ ಸಾಧನೆ ಮತ್ತು ಸಮಾಜಕ್ಕೆ ನೀಡಿದ ಸಂದೇಶವನ್ನು ಅರಿಯಬೇಕಿದೆ ಎಂದರು.
ಹಾಸನದಲ್ಲಿಂದು ಆಯೋಜಿಸಲಾಗಿದ್ದ ಆಕರ್ಷಕ ಮೆರವಣಿಗೆಗೆ ಶಾಸಕ ಸ್ವರೂಪ ಪ್ರಕಾಶ್ ಚಾಲನೆ ನೀಡಿದರು. ಬಳಿಕ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಸಾಗಿತು.
ಕೋಲಾರದಲ್ಲಿ ಶಾಸಕ ಕೊತ್ತೂರು ಜಿ. ಮಂಜುನಾಥ್ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿ, ನಂತರ ಡೊಳ್ಳು ಹೊಡೆಯುವ ಮೂಲಕ ಬೃಹತ್ ಪಲ್ಲಕ್ಕಿಗಳ ಮೆರವಣಿಗೆಗೆ ಚಾಲನೆ ನೀಡಿದರು.
ಚಿತ್ರದುರ್ಗದಲ್ಲಿ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆ ವಿವಿಧ ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ನಡೆಯಿತು. ಹಾವೇರಿಯಲ್ಲಿಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಕ್ಷಯ ಶ್ರೀಧರ್ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಪ್ಪು ನಮನ ಸಲ್ಲಿಸಿದರು.
ಗದಗ ಜಿಲ್ಲೆಯ ನಾಗಾವಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಸಚಿವ ಪ್ರೋಫೆಸರ್ ಸುರೇಶ್ ನಾಡಗೌಡ ಮಾತನಾಡಿ, ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರವಾರದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ರಾಮಾಯಣದಲ್ಲಿ ಪರಿಸರಕ್ಕೆ ಮಹತ್ವ ನೀಡಿದ್ದು, ಅದರಂತೆಯೇ ಉತ್ತರಕನ್ನಡ ಜಿಲ್ಲೆಯಲ್ಲಿನ ವನ್ಯ ಸಂಪತನ್ನು ಕಾಪಾಡಲು ಜನತೆ ಕಾಳಜಿ ತೋರಬೇಕು ಎಂದು ಹೇಳಿದರು.
ಬೆಳಗಾವಿಯಲ್ಲೂ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಜಯಂತಿ ಆಚರಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳ ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ
ಸುದ್ದಿದಿನಡೆಸ್ಕ್:ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ವಿವಿಧೆಡೆ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ.
ಮಹರ್ಷಿ ವಾಲ್ಮೀಕಿಯನ್ನು ’ಆದಿ ಕವಿ’ ಅಥವಾ ಸಂಸ್ಕೃತ ಭಾಷೆಯ ಮೊದಲ ಕವಿ ಎಂದು ಹೇಳಲಾಗುತ್ತದೆ. ಹಲವೆಡೆ ಜಯಂತಿಯ ಅಂಗವಾಗಿ ಶೋಭಾ ಯಾತ್ರೆ ಮೆರವಣಿಗೆಗಳನ್ನು ಹಮ್ಮಿಕೊಳ್ಳಲಾಗಿದೆ.
ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕರ್ನಾಟಕ ಸರ್ಕಾರ 2024 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಿಸಿದೆ.
ಜಾನುವಾರುಗಳ ಸಂತತಿಯ ಸಂರಕ್ಷಣೆಯಲ್ಲಿ ತೊಡಗಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಿಲಾರಿ ಜೋಗಯ್ಯ, ಬುಡಕಟ್ಟು ಮಕ್ಕಳ ಶಿಕ್ಷಣದ ಹೋರಾಟಗಾರ್ತಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಡಾ.ರತ್ನಮ್ಮ.ಎಸ್, ಗುಡ್ಡಗಾಡು ಪ್ರದೇಶದಲ್ಲಿರುವ ಬುಡಕಟ್ಟು ಸಮುದಾಯದ ಜನರಿಗೆ ಶಿಕ್ಷಣ, ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುತ್ತಿರುವ ಬೆಳಗಾವಿಯ ಗಾಂಧಿನಗರದ ರಾಜಶೇಖರ ತಳವಾರ, ಪರಿಶಿಷ್ಟ ಪಂಗಡ ಸಮುದಾಯದ ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿ ಕುರಿತು ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಬೆಂಗಳೂರು ನಿವಾಸಿಯಾದ ಕೆ.ಎಸ್.ಮೃತ್ಯುಂಜಯ, ರಂಗಭೂಮಿ ಕಲಾವಿದೆಯಾದ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿಯವರಾದ ರತ್ನಮ್ಮ ಬಿ ಸೋಗಿ ಅವರಿಗೆ ಈ ಸಾಲಿನ ಪ್ರಶಸ್ತಿಗಳನ್ನು ಇಂದು ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಜಾತಿ ಪ್ರಮಾಣಪತ್ರ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸುದ್ದಿದಿನಡೆಸ್ಕ್:ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು ಸೂಚಿಸಿದ್ದಾರೆ.
ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89 ಕೋಟಿ 63 ಲಕ್ಷ ರೂಪಾಯಿಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂಪಾಯಿಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84 ಕೋಟಿ 63 ಲಕ್ಷ ರೂಪಾಯಿಗಳಲ್ಲಿ 71 ಕೋಟಿ 54 ಲಕ್ಷ ರೂಪಾಯಿಗಳನ್ನು ವಸೂಲು ಮಾಡಲಾಗಿದೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಡಿನೆಲ್ಲೆಡೆ ಆಯುಧಪೂಜೆ ಸಡಗರ; ಮೈಸೂರು ಅರಮನೆಯಲ್ಲಿ ಪಟ್ಟದ ಹಸು, ಆನೆ, ಆಯುಧಗಳಿಗೆ ಯದುವೀರ್ ಒಡೆಯರ್ ಪೂಜೆ
-
ದಿನದ ಸುದ್ದಿ6 days ago
ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ
-
ದಿನದ ಸುದ್ದಿ6 days ago
ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ
-
ದಿನದ ಸುದ್ದಿ6 days ago
ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್
-
ದಿನದ ಸುದ್ದಿ4 days ago
ಅಕ್ಟೋಬರ್ 20 ರಂದು ಬೃಹತ್ ಉದ್ಯೋಗ ಮೇಳ
-
ದಿನದ ಸುದ್ದಿ2 days ago
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ
-
ದಿನದ ಸುದ್ದಿ2 days ago
ಜಾತಿ ಪ್ರಮಾಣಪತ್ರ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
-
ದಿನದ ಸುದ್ದಿ20 hours ago
ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳ ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ