ದಿನದ ಸುದ್ದಿ
ದಾವಣಗೆರೆ | ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ; ಡಿಸಿ, ತಹಶೀಲ್ದಾರ್ ಖಾತೆಗಳಲ್ಲಿ 666 ಕೋಟಿ ಹಣವಿದೆ : ಸಚಿವ ಕೃಷ್ಣ ಬೈರೇಗೌಡ
ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು.
ಅವರು ಶುಕ್ರವಾರ ಜಗಳೂರು ತಾಲ್ಲೂಕಿನ ಸಂಗೇನಹಳ್ಳಿ ಕೆರೆ ಕೋಡಿ ವೀಕ್ಷಣೆ, ಹಿರೇಮಲ್ಲನಹೊಳೆಯಲ್ಲಿ ಹಾನಿಯಾದ ಮನೆ ವೀಕ್ಷಣೆ ಮತ್ತು ಬೆಳೆ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ ತಿಂಗಳಲ್ಲಿಯೇ ಅತೀ ಹೆಚ್ಚು ಮಳೆಯಾಗಿದ್ದು ಪ್ರಾಥಮಿಕ ಅಂದಾಜು ಬೆಳೆ ನಷ್ಟಕ್ಕಿಂತ ಇನ್ನೂ ಹೆಚ್ಚಿನ ಬೆಳೆ ನಷ್ಟವಾಗಿರುವ ವರದಿ ನಿರೀಕ್ಷಿಸಲಾಗಿದ್ದು ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆಯ ನಂತರ ಬೆಳೆ ನಷ್ಟದ ನಿಖರತೆ ತಿಳಿಯಲಿದೆ. ಇದಕ್ಕಾಗಿಯೇ ಶನಿವಾರ ಮುಖ್ಯಮಂತ್ರಿಗಳೊಂದಿಗೆ ಅಧಿಕ ಮಳೆಯಾದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಸೂಚನೆ ನೀಡಲಾಗುತ್ತದೆ ಎಂದರು.
ಹಿಂಗಾರು ಹಂಗಾಮಿನಲ್ಲಿ 21 ಜನರ ಪ್ರಾಣಹಾನಿಯಾಗಿದ್ದು ಇದರಲ್ಲಿ 9 ಜನರು ಸಿಡಿಲಿನಿಂದ ಮರಣ ಹೊಂದಿದ್ದರೆ, 6 ಜನರು ಮನೆ ಕುಸಿತದಿಂದ ಸಾವನ್ನಪ್ಪಿದ್ದಾರೆ. 3 ರಿಂದ 4 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮುಂಗಾರು ಸೇರಿದಂತೆ ಇಲ್ಲಿಯವರೆಗೆ 121 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮುಂಗಾರು ಹಂಗಾಮಿನಲ್ಲಿ 2589 ಮತ್ತು ಹಿಂಗಾರಿನಲ್ಲಿ 121 ಮನೆಗಳು ಬಿದ್ದು ಹೋಗಿವೆ, ಇವರಿಗೆ ಮನೆ ಪರಿಹಾರದ ಜೊತೆಗೆ ಮನೆ ನಿರ್ಮಿಸಿಕೊಡಲಾಗುತ್ತದೆ. ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ ಮನೆ ಬಿದ್ದು ಹೋಗಿದ್ದಲ್ಲಿ ಎಸ್.ಡಿ.ಆರ್.ಎಫ್ ನಡಿ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ. ಮುಂಗಾರು ಹಂಗಾಮಿನಲ್ಲಿ 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆನಷ್ಟವಾಗಿದ್ದು ಈಗಾಗಲೇ ಪರಿಹಾರ ನೀಡಲಾಗಿದ್ದು ಕೆಲವೇ ದಿನಗಳಲ್ಲಿ ಮುಂಗಾರು ಬೆಳೆನಷ್ಟ ಪರಿಹಾರ ಪಾವತಿ ಪೂರ್ಣವಾಗಲಿದೆ ಎಂದರು.
666 ಕೋಟಿ ಲಭ್ಯ
ಬೆಳೆಹಾನಿ, ಜೀವಹಾನಿ ಹಾಗೂ ಮನೆ ಬಿದ್ದುಹೋಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲು ಜಿಲ್ಲಾಧಿಕಾರಿ, ತಹಶೀಲ್ದಾರರ ಖಾತೆಗಳಲ್ಲಿ 666 ಕೋಟಿಯಷ್ಟು ಹಣವಿದ್ದು ಪ್ರಕೃತಿ ವಿಕೋಪ ಎದುರಿಸಲು ಯಾವುದೇ ಅನುದಾನದ ಕೊರತೆ ಇರುವುದಿಲ್ಲ. ಕಷ್ಟ ಕಾಲದಲ್ಲಿ ಪರಿಹಾರ ನೀಡಿದಲ್ಲಿ ಉಪಯುಕ್ತವಾಗಲಿದೆ ಎಂದು ತ್ವರಿತವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ಶೇ 190 ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರಿಂದ ಅನೇಕ ಕೆರೆ, ಕಟ್ಟೆಗಳು ತುಂಬಿವೆ ಮತ್ತು ಬೆಳೆ ನಷ್ಟ ಉಂಟಾಗಿದೆ. ಬೆಳೆ ನಷ್ಟವಾದ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ.
ಹಿರೇಮಲ್ಲನಹೊಳೆ ಗ್ರಾಮದಲ್ಲಿ ಕೆರೆ ಕೋಡಿಯಲ್ಲಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿದ್ದರಿಂದ ಇಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು ಇಲ್ಲಿರುವ 35 ಮನೆಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಸೂಚಿಸಲಾಗಿದ್ದು ಮನೆ ಪರಿಹಾರದ ಜೊತೆಗೆ ಬೇರೆಡೆ ನಿವೇಶನ ನೀಡಿ ಇವರಿಗೆ ಮನೆ ನಿರ್ಮಿಸಿಕೊಡಲಾಗುತ್ತದೆ. ಇವರಿಗೆ ಮುಂದಿನ ಎರಡು ತಿಂಗಳಲ್ಲಿ ಶಾಶ್ವತವಾದ ಪರಿಹಾರ ಕಂಡುಕೊಳ್ಳಲು ಸೂಚಿಸಲಾಗಿದೆ. ಮತ್ತು ಇದೇ ಗ್ರಾಮದಲ್ಲಿ ಮನೆಗಳು ಕುಸಿದಿದ್ದು ಈ ಮನೆಗಳಿಗೂ ಪರಿಹಾರದ ಜೊತೆಗೆ ಬದಲಿ ನಿವೇಶನ ಹಾಗೂ ಮನೆ ನಿರ್ಮಾಣ ಮಾಡಿಕೊಡಲು ತಿಳಿಸಲಾಗಿದೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ ಮಾರ್ಚ್ ನಿಂದ ಮೇ ವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಹಾನಿಯಾದ 1 ಮನೆ, ಭಾಗಶಃ 35 ಮನೆಗಳು, 25 ಕುರಿಗಳು ಮೃತ, 251.8 ಹೆಕ್ಟೇರ್ ಬೆಳೆ ಹಾನಿಯಾಗಿದ್ದು ರೂ.11.24 ಲಕ್ಷ ಪರಿಹಾರ ನೀಡಿದೆ.
ಜೂನ್ ನಿಂದ ಸೆಪ್ಟೆಂಬರ್ ವರೆಗೆ 5 ಹಸು, 17 ಕುರಿಗಳು ಮೃತಪಟ್ಟಿದ್ದು ರೂ.2.71 ಲಕ್ಷ ಪರಿಹಾರ ನೀಡಲಾಗಿದೆ.
ಮನೆಗಳಲ್ಲಿ 85 ಪೂರ್ಣ ಹಾನಿ, 97 ಭಾಗಶಃ ಹಾನಿ, 109 ಅಲ್ಪ ಹಾನಿಯಾಗಿದ್ದು ಒಟ್ಟು 1,83,20,000 ರೂ.ಗಳ ಪರಿಹಾರ ನೀಡಿದೆ. ಹಾನಿಯಾದ ಮೂಲ ಸೌಕರ್ಯಗಳ ಅಭಿವೃದ್ದಿಗೆ ರೂ.2,14,95,000 ಗಳನ್ನು ಒದಗಿಸಲಾಗಿದೆ.
ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ನಲ್ಲಿ ಮನೆ ಗೋಡೆ ಬಿದ್ದು ಮೃತರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ ನೀಡಿದೆ. ನ್ಯಾಮತಿ ತಾಲ್ಲೂಕಿನಲ್ಲಿ ಹಳ್ಳದಲ್ಲಿ ಕೊಚ್ಚಿ ಮೃತರಿಗೆ ವರದಿ ಬಂದ ತಕ್ಷಣ ಪರಿಹಾರ ಒದಗಿಸಲಾಗುತ್ತದೆ. 4 ಹಸುಗಳು, 16 ಕುರಿಗಳು ಮರಣ ಹೊಂದಿದ್ದು ರೂ.2.13 ಲಕ್ಷ ಪರಿಹಾರ ನೀಡಲಾಗಿದೆ. ಬೆಳೆ ಸಮೀಕ್ಷೆ ನಡೆಯುತ್ತಿದ್ದು ಸಮೀಕ್ಷೆ ನಂತರ ಪರಿಹಾರ ನೀಡಲಾಗುತ್ತದೆ. ಜಿಲ್ಲೆಯ ಎಲ್ಲಾ ತಹಶೀಲ್ದಾರರ ಖಾತೆಯಲ್ಲಿ ರೂ.1.68 ಕೋಟಿ ಮತ್ತು ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ರೂ.10.60 ಕೋಟಿ ಹಣವಿರುತ್ತದೆ.
ಸಚಿವರೊಂದಿಗೆ ಸಮೀಕ್ಷೆ ವೇಳೆ ಶಾಸಕರಾದ ಬಿ.ದೇವೇಂದ್ರಪ್ಪ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಸೇರಿದಂತೆ ಕಂದಾಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ7 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ3 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ2 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ2 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

