ದಿನದ ಸುದ್ದಿ
ಚಿಗಟೇರಿ ಆಸ್ಪತ್ರೆಯಲ್ಲಿ ಮಹಿಳೆ ಮತ್ತು ಮಕ್ಕಳ ನೂತನ ಕಟ್ಟಡದ ಲೋಕಾರ್ಪಣೆ ; ಗ್ರೂಪ್ ಡಿ ಹುದ್ದೆಗಳಿಗೆ ನೇರಪಾವತಿಯಡಿ ನೇಮಕಕ್ಕೆ ಕಾನೂನು ಇಲಾಖೆಗೆ ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್
ಸುದ್ದಿದಿನ,ದಾವಣಗೆರೆ:ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕ್ಲಿನಿಕಲ್ ವಿಭಾಗದಲ್ಲಿ ಗ್ರೂಪ್ ಡಿ ಸೇವೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇರ ಪಾವತಿಯಡಿ ನೇಮಕ ಮಾಡಿಕೊಳ್ಳಲು ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು ಸಾಧಕ, ಬಾದಕಗಳ ಪರಿಶೀಲನೆ ನಂತರ ಹೊರಗುತ್ತಿಗೆಯ ಎಲ್ಲಾ ಗ್ರೂಪ್ ಡಿ ಸಿಬ್ಬಂದಿಗಳನ್ನು ನೇರಪಾವತಿಯಡಿ ಪಡೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.
ಅವರು ಬುಧವಾರ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ಮಾಡಿರುವ 200 ಹಾಸಿಗೆಯ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್ನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು.
ದಾವಣಗೆರೆಯಲ್ಲಿನ ಚಿಗಟೇರಿ ಆಸ್ಪತ್ರೆ ವಿಶಾಲವಾದ ಸ್ಥಳದಲ್ಲಿದ್ದು 70 ವರ್ಷದ ಹಳೆಯದಾಗಿದೆ. ಇಲ್ಲಿ ಹೊಸ ಕಟ್ಟಡ, ದುರಸ್ಥಿಯಾಗಬೇಕಾಗಿದ್ದು ಮಧ್ಯ ಕರ್ನಾಟಕದಲ್ಲಿನ ಈ ಆಸ್ಪತ್ರೆಯನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡುವ ಮೂಲಕ ಈ ಭಾಗದಲ್ಲಿನ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿಯೇ ಇಲ್ಲಿನ ಮೂಲಭೂತ ಸೌಕರ್ಯಕ್ಕೆ ಮತ್ತು ಹೊಸ ಬ್ಲಾಕ್ ನಿರ್ಮಾಣಕ್ಕೆ ರೂ.17 ಕೋಟಿ ಬಿಡುಗಡೆ ಮಾಡಲಾಗಿದ್ದು ಭವಿಷ್ಯದ ದೃಷ್ಟಿಯಿಂದ ನೂತನ ಯೋಜನೆಯನ್ನು ಸಿದ್ದಪಡಿಸಿ ಅದರಂತೆ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದರು.
ರೂ. 30 ಕೋಟಿಯಲ್ಲಿ ನಿರ್ಮಿಸಲಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 200 ಹಾಸಿಗೆ ಸಾಮಥ್ರ್ಯವಿದ್ದು ಇಲ್ಲಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ಮಂಜೂರು ಮಾಡಲು ಸರ್ಕಾರದ ಮುಂದೆ ಪ್ರಸ್ತಾವನೆ ಇದ್ದು ಇಲ್ಲಿಗೆ ಬೇಕಾಗಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಹುದ್ದೆಗಳಿಗೆ ಮಂಜೂರಾತಿಯನ್ನು ನೀಡಲಾಗುತ್ತದೆ. ಟ್ರಾಮಾ ಕೇರ್ ಸೆಂಟರ್ಗೂ ಸಿಬ್ಬಂದಿಗಳ ಅಗತ್ಯವಿದ್ದು ಪರಿಶೀಲಿಸಿ ಮಂಜೂರಾತಿ ನೀಡಲಾಗುತ್ತದೆ. ಆಸ್ಪತ್ರೆ ಕಟ್ಟಿದರೆ ಸಾಲದು, ಇಲ್ಲಿ ಅಗತ್ಯವಿರುವ ಪರಿಕರ, ಸಿಬ್ಬಂದಿಗಳು ಇದ್ದಾಗ ಮಾತ್ರ ಜನರಿಗೆ ಆರೋಗ್ಯ ಸೇವೆ ಸಿಗಲು ಸಾಧ್ಯವಿದೆ ಎಂದರು.
ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳು ಮಾನವ ಸಂಪನ್ಮೂಲ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರವಹಿಸಲಿವೆ. ಆದರೆ ಇವುಗಳಿಗೆ ಸಿಗಬೇಕಾದ ಆದ್ಯತೆ ಸಾಕಾಗುತ್ತಿಲ್ಲ. ಜನರ ಆರೋಗ್ಯ ಸಂರಕ್ಷಣೆ ಮಾಡಿದಾಗ ಆರೋಗ್ಯವಂತ ನಾಗರಿಕನಾಗಲು ಸಾಧ್ಯ, ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆಗಾಗಿ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಆರೋಗ್ಯವು ಗ್ಯಾರಂಟಿ ಯೋಜನೆಯಾಗಬೇಕು, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ಸಿಗಬೇಕಾಗಿದೆ ಎಂದರು.
ಮಾಯಕೊಂಡ ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಿದ್ದರೂ ಸಮುದಾಯ ಆರೋಗ್ಯ ಕೇಂದ್ರವಿರುವುದಿಲ್ಲ. ಮುಂದಿನ ದಿನಗಳಲ್ಲಿ ಮಾಯಕೊಂಡಕ್ಕೆ ಸಮುದಾಯ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಗುತ್ತದೆ. ಮೂಲಭೂತ ಸೌಕರ್ಯ ಕೊಟ್ಟರೆ ಸಾಕಾಗುವುದಿಲ್ಲ, ವೈದ್ಯರು ಜನರ ಸೇವೆ ಮಾಡಬೇಕು. ವೈದ್ಯಕೀಯ ಸೇವಾ ಕ್ಷೇತ್ರವಾಗಿದ್ದು ಸಹಾನುಭೂತಿಯಿಂದ ಎಲ್ಲಾ ವೈದ್ಯರು ಕೆಲಸ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ವೈದ್ಯರು, ಸಿಬ್ಬಂದಿಗಳ ಸೇವೆ ಜನರಿಗೆ ಸಿಗುವಂತಾಗಬೇಕೆಂದರು.
ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ ಆಸ್ಪತ್ರೆ ಕಟ್ಟಡದ ಜೊತೆಗೆ ಸಲಕರಣೆಗಳು ಇರಬೇಕಾಗುತ್ತದೆ, ಜೊತೆಗೆ ಸಿಬ್ಬಂದಿಗಳು ಇರಬೇಕು, ಇಲ್ಲವಾದಲ್ಲಿ ವ್ಯರ್ಥವಾಗುತ್ತದೆ. ಚಿಗಟೇರಿ ಆಸ್ಪತ್ರೆಯಿಂದ ಸಾಕಷ್ಟು ಬಡ ಜನರಿಗೆ ಅನುಕೂಲವಾಗಿದೆ. ಇಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳು ಜನರಿಗೆ ಸಿಗುವಂತಾಗಬೇಕು. ಇಲ್ಲಿ ನರ್ಸ್, ಆಯಾಗಳ ಕೊರತೆ ಇದೆ ಎಂದು ತಿಳಿದುಬಂದಿದ್ದು ವ್ಯವಸ್ಥೆ ಸರಿಪಡಿಸಬೇಕು. ಹೊರಗುತ್ತಿಗೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರಪವಾತಿಯಡಿ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿಗಳನ್ನು ಪಡೆಯುವಂತಾಗಬೇಕು. ಸಾರ್ವಜನಿಕ ಸೇವೆ ಮಾಡುವಾಗ ಬಹಳ ಪಾರದರ್ಶಕವಾಗಿ ಕೆಲಸ ಮಾಡಬೇಕಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ಖಾಸಗಿಯಾಗಿ 8 ಕೋಟಿವರೆಗೆ ವೆಚ್ಚ ಮಾಡಲಾಗಿದೆ ಎಂದರು.
ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಯಾಗಿದ್ದ ಸಮಯದಿಂದಲೂ ಚಿಗಟೇರಿ ಆಸ್ಪತ್ರೆಯ ಸ್ಥಿತಿಗತಿ ಗೊತ್ತಿದೆ. ಇಲ್ಲಿ ಸಾಕಷ್ಟು ಮೂಲಭೂತ ಸೌಕರ್ಯಗಳ ಜೊತೆಗೆ ಸುಧಾರಣೆಯಾಗಬೇಕಿದೆ. ಮಾಸ್ಟರ್ ಪ್ಲಾನ್ ತಯಾರಿಸುವ ಮೂಲಕ ಹಂತ ಹಂತವಾಗಿ ಸುಧಾರಣಾ ಕ್ರಮ ಕೈಗೊಳ್ಳಲಾಗುತ್ತದೆ. ಮುಂದಿನ ದಿನಗಳಲ್ಲಿ ಮಾನವ ಹಾಲು ಬ್ಯಾಂಕ್ ಸ್ಥಾಪನೆ ಮಾಡುವ ಮೂಲಕ ಇನ್ನಷ್ಟು ಅನುಕೂಲ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ಮುಖ್ಯ ಅತಿಥಿಗಳಾಗಿ ಮಾತನಾಡಿ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗಿದೆ, ಇದಕ್ಕೆ ಮಾನವ ಸಂಪನ್ಮೂಲ ಕಲ್ಪಿಸಬೇಕು. ಸಿಬ್ಬಂದಿಗಳು ಸಹ ಉಪಕರಣಗಳನ್ನು ನಿಷ್ಕ್ರಿಯೆಗೊಳಿಸದೇ ಉಪಯುಕ್ತ ಮಾಡಿಕೊಳ್ಳಬೇಕು. ಐಸಿಯು ಬೆಡ್ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಬೇಕು. ಶವಗಾರಕ್ಕೆ ಕಾಯಕಲ್ಪ ಮಾಡಬೇಕಾಗಿದ್ದು ಅತ್ಯುತ್ತಮವಾಗಿ ಕೆಲಸ ಮಾಡುವ ಡಾ; ಮೋಹನ್ ರವರನ್ನು ಸನ್ಮಾನಿಸಿ ಗೌರವಿಸಬೇಕೆಂದರು.
ಕಾರ್ಯಕ್ರಮದಲ್ಲಿ ಮೇಯರ್ ಕೆ.ಚಮನ್ಸಾಬ್, ದೂಡಾ ಆಧ್ಯಕ್ಷ ಕೆ.ದಿನೇಶ್ ಶೆಟ್ಟಿ, ಉಪ ಮೇಯರ್ ಸೋಗಿ ಶಾಂತಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಶಿವಕುಮಾರ್ ಕೆ.ಬಿ, ಅಭಿಯಾನ ನಿರ್ದೇಶಕರಾದ ಡಾ; ನವೀನ್ ಭಟ್ ರೈ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.ಜಿಲ್ಲಾ ಸರ್ಜನ್ ಡಾ; ನಾಗೇಂದ್ರಪ್ಪ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


