ದಿನದ ಸುದ್ದಿ
2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ ; ಇಲ್ಲಿದೆ ಸಂಪೂರ್ಣ ಮಾಹಿತಿ
ಸುದ್ದಿದಿನ,ಬೆಂಗಳೂರು:ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಸ್ಥಾಪಿಸಿದ್ದು 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಹಾಗೂ ಕೆ.ಶಿವಕುಮಾರ್ ಅವರಿದ್ದ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ಒಳಗೊಂಡಿರುತ್ತದೆ.
2017ರಿಂದ 2023ರವರೆಗಿನ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರ ವಿವರ
ವಿಜಯಲಕ್ಷ್ಮಿ ಶಿಬರೂರು (2017): ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಶಿಬರೂರು ಗ್ರಾಮದವರಾದ ವಿಜಯಲಕ್ಷ್ಮಿ ಅವರು, ಕಳೆದ ಸುಮಾರು 25 ವರ್ಷಗಳಿಂದ ನಾಡಿನ ವಿವಿಧ ಮಾಧ್ಯಮಗಳಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಅರಣ್ಯ ಸಂರಕ್ಷಣೆ, ಅಪಾಯಕಾರಿ ಆಹಾರ ಪದಾರ್ಥಗಳು, ಪ್ಲಾಸ್ಟಿಕ್ ಅಪಾಯಗಳು ಮತ್ತಿತರ ಜಾಗೃತಿ ಮೂಡಿಸುವ ವರದಿಗಳನ್ನು ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಣಾಮಕಾರಿಯಾಗಿ ಬಿತ್ತರಿಸಿದ್ದಾರೆ. ಪರಿಸರ ಜಾಗೃತಿಯ ವರದಿಗಳನ್ನು ಪ್ರಕಟಿಸಿದ್ದಾರೆ.
ಬಿ.ಎಂ.ಟಿ ರಾಜೀವ್ : (2018): ಮೂಲತ: ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬೆನವಾರ ಗ್ರಾಮದವರು, ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಭಾರತೀಯ ಅರಣ್ಯ ಸೇವೆಯಿಂದ 2006ರಲ್ಲಿ ನಿವೃತ್ತಿ ಹೊಂದಿದ್ದಾರೆ. 1985 ರಿಂದ ವನ್ಯಜೀವಿಗಳು, ಅರಣ್ಯ ಮತ್ತು ಪರಿಸರ ಸಂರಕ್ಷಣೆ ಕುರಿತು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಲೇಖನ, ಪ್ರಬಂಧಗಳನ್ನು ಬರೆಯುತ್ತಿದ್ದಾರೆ. ಅರಣ್ಯ/ವನ್ಯಜೀವಿ/ಪರಿಸರದಿಂದ ಮನುಕುಲಕ್ಕಿರುವ ಅನುಕೂಲಗಳು, ಅವಶ್ಯಕತೆಗಳ ಬಗ್ಗೆ ಲೇಖನಗಳನ್ನು ಬರೆದಿದ್ದಾರೆ. ಭಾರತೀಯ ವನ್ಯಪ್ರಾಣಿಗಳ ಕೈಪಿಡಿ, ಪರಿಸರ ಮಾಲಿನ್ಯ ಮತ್ತು ವಾಯುಗುಣ ಬದಲಾವಣೆ ಕುರಿತು ಒಟ್ಟು 6 ಪುಸ್ತಕಗಳನ್ನು ಪ್ರಕಟಿಸಿದ್ದಾರೆ.
ವಿನೋದಕುಮಾರ್ ಬಿ. ನಾಯ್ಕ: (2019) : ಮೂಲತ: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಗುಬ್ಬಿಹಳ್ಳಿ ಗ್ರಾಮದವರು. ಏಷಿಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಯಲ್ಲಿ ವಿಶೇಷ ಯೋಜನೆಗಳ ವಿಭಾಗದ ಸಂಪಾದಕರಾಗಿರುವ ಇವರು ವಿವಿಧ ಮಾಧ್ಯಮಗಳಲ್ಲಿ ಸುಮಾರು 23 ವರ್ಷಗಳ ಕಾಲ ವನ್ಯಜೀವಿ ಹಾಗೂ ಪರಿಸರ ಕುರಿತು ಅನೇಕ ಪರಿಣಾಮಕಾರಿ ವರದಿಗಳನ್ನು ಮಾಡಿದ್ದಾರೆ. ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಾದೇಶಿಕ ಮಾಧ್ಯಮಗಳಲ್ಲಿ ಮೊದಲ ಬಾರಿಗೆ ವನ್ಯಜೀವಿ ಸಂರಕ್ಷಣಾ ಅಭಿಯಾನಗಳನ್ನು ಹಮ್ಮಿಕೊಂಡು ಕಾಡಂಚಿನ ಗ್ರಾಮಗಳಲ್ಲಿ ಮಾನವ –ವನ್ಯಜೀವಿ ಸಂಘರ್ಷ ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ‘ಜಂಗಲ್ ಡೈರಿ’ ಕೃತಿ ಪ್ರಕಟಿಸಿದ್ದಾರೆ.
ಮಾಲತೇಶ ಅಂಗೂರ (2020): ಹಾವೇರಿ ಜಿಲ್ಲೆಯ ಮಾಲತೇಶ ಗದಿಗೆಪ್ಪ ಅಂಗೂರ ಅವರು ಸುಮಾರು 34 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದಾರೆ. ಕಳೆದ 18 ವರ್ಷಗಳಿಂದ ಕೌರವ ಕನ್ನಡ ದಿನಪತ್ರಿಕೆಯ ಮುಖ್ಯ ವರದಿಗಾರರಾಗಿ ಪರಿಸರಕ್ಕೆ ಸಂಬಂಧಿಸಿದಂತೆ ವನ್ಯಜೀವಿಗಳು, ಕೆರೆಕಟ್ಟೆಗಳು, ಪ್ರಾಣಿಪಕ್ಷಿಗಳು, ಕೀಟಗಳು, ಸಸ್ಯಗಳು, ನಿಸರ್ಗ, ಗುಡ್ಡ ಗಹ್ವರಗಳು, ಅತಿವೃಷ್ಠಿ ಅನಾವೃಷ್ಠಿ ಸೇರಿದಂತೆ ವಿವಿಧ ಪರಿಸರ ಜಾಗೃತಿಯ ವರದಿಗಳನ್ನು ಪ್ರಕಟಿಸಿದ್ದಾರೆ. ‘ಕಾಡು-ಮೇಡು’ ಕೃತಿ ಪ್ರಕಟವಾಗಿದೆ.
ಸುಧೀರ್ ಶೆಟ್ಟಿ (2021): ಉಡುಪಿ ಜಿಲ್ಲೆಯ ಪಾದೆಬೆಟ್ಟು ಗ್ರಾಮದವರಾದ ಇವರು ಮುಂಬೈನಲ್ಲಿ ಫೋಟೋ ಜರ್ನಲಿಸಂ ಪದವಿ ಪಡೆದಿದ್ದಾರೆ. ಅರಣ್ಯ, ವನ್ಯಜೀವಿ, ನದಿ ಮತ್ತು ನೀರಿನ ಮೂಲಗಳ ಸಂರಕ್ಷಣೆ, ಬಂಡೀಪುರ ಅರಣ್ಯದ ಪ್ರಾಣಿಗಳ ಪ್ರಾಣ ರಕ್ಷಣೆ, ಬೆಂಗಳೂರಿನ ಕೆರೆಗಳ ನೀರು ತಮಿಳುನಾಡಿಗೆ ಹರಿದುಹೋಗಿ ಅಲ್ಲಿ ಸಂಸ್ಕರಣೆಗೊಂಡು ಕೃಷಿಗೆ ಬಳಕೆಯಾಗುತ್ತಿರುವ ಬಗ್ಗೆ ಸೆರೆಹಿಡಿದ ಛಾಯಾಚಿತ್ರಗಳು ರಾಜ್ಯದಲ್ಲಿ ಚರ್ಚೆ ಉಂಟುಮಾಡಿದ್ದವು. ಗದಗ ಜಿಲ್ಲೆಯ ಕಪ್ಪತ್ತಗುಡ್ಡದ ಸಂರಕ್ಷಣೆ ಸಾಕ್ಷ್ಯಚಿತ್ರ ನಿರ್ಮಿಸಿದ್ದಾರೆ. ಕಪ್ಪತ್ತಗುಡ್ಡ ಸಂರಕ್ಷಣೆಗೆ ಗದುಗಿನ ಡಾ:ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳು ಹಾಗೂ ಎಸ್.ಆರ್.ಹಿರೇಮಠ ಅವರ ಹೋರಾಟದ ಸಂದರ್ಭದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ್ದರು. ಮಹದಾಯಿ ತಿರುವು ಯೋಜನೆ, ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ, ಸಂಡೂರಿನ ಅಕ್ರಮ ಗಣಿಗಾರಿಕೆ ಮತ್ತಿತರ ವಿಷಯಗಳ ಕುರಿತು ಇವರ ಛಾಯಾಚಿತ್ರಗಳು ಪ್ರದರ್ಶನಗೊಂಡಿವೆ.
ಮಲ್ಲಿಕಾರ್ಜುನ ಹೊಸಪಾಳ್ಯ (2022) : ಮಲ್ಲಿಕಾರ್ಜುನ ಹೊಸಪಾಳ್ಯ ಅವರು ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಹೊಸಪಾಳ್ಯ ಗ್ರಾಮದವರು. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಮೊದಲ ರಾಂಕ್ ನೊಂದಿಗೆ ಎರಡು ಚಿನ್ನದ ಪದಕ ಮತ್ತು ಪದವಿಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚಿನ ಅಂಕಗಳಿಕೆಗಾಗಿ ಚಿನ್ನದ ಪದಕ ಪಡೆದಿದ್ದಾರೆ. ದೇಸಿ ತಳಿ, ನಾಟಿ ಬೀಜಗಳ ಸಂರಕ್ಷಣೆ ಕುರಿತು ವಿಶೇಷ ಆಸಕ್ತಿ, ಜಲಸಂರಕ್ಷಣೆ, ಸುಸ್ಥಿರ ಕೃಷಿ, ಸಿರಿಧಾನ್ಯ ಚಟುವಟಿಕೆಗಳಿಗೆ ಬೆಂಬಲ. ಜಲಜಾಗೃತಿಗಾಗಿ ಕಾರ್ಯಕ್ರಮ ಸಂಘಟನೆ. ಪಾರಂಪರಿಕ ಜಲನಿಧಿಗಳಾದ ತಲಪರಿಗೆ ಬಗ್ಗೆ ಅಧ್ಯಯನ, ಪುನರುಜ್ಜೀವನಕ್ಕಾಗಿ ಶ್ರಮಿಸುತ್ತಿದ್ದಾರೆ. ಕಳೆದ ಎರಡು ದಶಕಗಳಿಂದ ವಿವಿಧ ಪತ್ರಿಕೆಗಳಲ್ಲಿ ಹವ್ಯಾಸಿ ಬರಹಗಾರರಾಗಿ ಕೃಷಿ ವಿಚಾರಗಳ ಬರವಣಿಗೆ ಮಾಡುತ್ತಿದ್ದಾರೆ. ನೆಟ್ಟಿರಾಗಿ, ತಲಪರಿಗೆ, ನಶಿಸುತ್ತಿರುವ ನೀರಿನ ಜ್ಞಾನ,ಕರ್ನಾಟಕದ ಕೃಷಿ ಆಚರಣೆಗಳು ಸೇರಿ ಒಟ್ಟು 14 ಕೃತಿಗಳು ಪ್ರಕಟವಾಗಿವೆ.
ಆರ್.ಮಂಜುನಾಥ್ (ಕೆರೆ ಮಂಜು) (2023) : ಬೆಂಗಳೂರಿನವರಾಗಿರುವ ಆರ್.ಮಂಜುನಾಥ್ ಅವರು,1995ರಿಂದ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿರುವ ಇವರು, ಪ್ರಸ್ತುತ ಪ್ರಜಾವಾಣಿಯಲ್ಲಿ ಹಿರಿಯ ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಕೆರೆಗಳ ಬಗ್ಗೆ ‘ನಮ್ಮೂರ್ ಕೆರೆ’ಎಂಬ ಲೇಖನ ಮಾಲಿಕೆ (2008). ಅರ್ಕಾವತಿ ನದಿ ಪುನಶ್ಚೇತನ, ಧಾರವಾಡ ಕೆರೆಗಳ ಅಭಿವೃದ್ಧಿ, ಬೆಂಗಳೂರಿನಲ್ಲಿರುವ ರಾಜಕಾಲುವೆಗಳ ಒತ್ತುವರಿಯಿಂದ ಮಳೆಗಾಲದಲ್ಲಿ ನೀರು ಬಡಾವಣೆಗಳಿಗೆ ಹರಿಯುತ್ತಿದೆ. ಎಲ್ಲೆಲ್ಲಿ ಎಷ್ಟೆಷ್ಟು ರಾಜಕಾಲುವೆ ಒತ್ತುವರಿಯಾಗಿದೆ ಎಂಬುದನ್ನು ನಕ್ಷೆ ಸಹಿತ ಮಾಹಿತಿಯ ಲೇಖನಗಳು ಸೇರಿ ಕೆರೆಗಳ ರಕ್ಷಣೆ ಬಗ್ಗೆ ಪರಿಣಾಮಕಾರಿ ಲೇಖನಗಳನ್ನು ಪ್ರಕಟಿಸಿದ್ದಾರೆ.
2017ರಿಂದ 2023 ರವರೆಗಿನಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರ ವಿವರ
ಚೀ.ಜ.ರಾಜೀವ್ (2017) :ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲ್ಲೂಕು ಚೀರನಹಳ್ಳಿ ಗ್ರಾಮದವರು. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ. 1999ರಿಂದ 2001ರವರೆಗೆ ಉದಯವಾಣಿ ದಿನಪತ್ರಿಕೆಯಲ್ಲಿ, 2001 ರಿಂದ ಇಲ್ಲಿಯವರೆಗೆ ವಿಜಯ ಕರ್ನಾಟಕ ದಿನಪತ್ರಿಕೆಯ ಸುದ್ದಿ ಸಂಪಾದಕರಾಗಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೃಷಿ, ಶಿಕ್ಷಣ, ಪರಂಪರೆ, ಮತ್ತಿತರ ಕ್ಷೇತ್ರಗಳ ಸವಾಲುಗಳಿಗೆ ಕನ್ನಡಿ ಹಿಡಿಯುವ ಅಭ್ಯುದಯ ಪತ್ರಿಕೋದ್ಯಮಕ್ಕೆ ಉದಾಹರಣೆಯಾಗುವಂತಹ ವರದಿ ಅಂಕಣಗಳನ್ನು ನಿರಂತರವಾಗಿ ಪ್ರಕಟಿಸುತ್ತಿದ್ದಾರೆ.
ದೇವಯ್ಯ ಗುತ್ತೇದಾರ್ (2018): ಮೂಲತ: ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕು ಭೈರಾಮಡಗಿ ಗ್ರಾಮದವರು. 2004ರಿಂದ ಉಷಾಕಿರಣ, ಪ್ರಜಾವಾಣಿಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ವಿಜಯಕರ್ನಾಟಕ ದಿನಪತ್ರಿಕೆಯ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕರಾಗಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಮಾನವ ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕದ ತಾಲ್ಲೂಕುಗಳ ಪರಿಸ್ಥಿತಿ, ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಬಡತನ ನಿವಾರಣೆ, ಶಿಶುಮರಣ ತಡೆ ಸೇರಿದಂತೆ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕುರಿತ ಅನೇಕ ವಿಶ್ಲೇ಼ಷಣಾತ್ಮಕ ಲೇಖನಗಳು, ವರದಿಗಳನ್ನು ಪ್ರಕಟಿಸಿದ್ದಾರೆ.
ಗಿರೀಶ್ ಲಿಂಗಣ್ಣ (2019): ಬೆಂಗಳೂರಿನ ಗಿರೀಶ್ ಲಿಂಗಣ್ಣ ಅವರು ಮೆಕ್ಯಾನಿಕಲ್ ಇಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರರಾಗಿದ್ದಾರೆ. ಬಾಹ್ಯಾಕಾಶ, ರಕ್ಷಣೆ, ಅಂತಾರಾಷ್ಟ್ರೀಯ ವ್ಯವಹಾರಗಳ ವಿಶ್ಲೇಷಕ. ಸಂಯುಕ್ತ ಕರ್ನಾಟಕ ,ಕನ್ನಡ ಪ್ರಭ, ಇಂಡಿಯನ್ ಎಕ್ಸ್ಪ್ರೆಸ್ ದಿನಪತ್ರಿಕೆಗಳ ಜಾಲತಾಣಗಳ ಅಂಕಣಕಾರರಾಗಿದ್ದಾರೆ. ವಿಜಯ ಕರ್ನಾಟಕ, ಉದಯವಾಣಿ, ವಿಶ್ವವಾಣಿ, ಪತ್ರಿಕೆಗಳಲ್ಲಿ ಒನ್ ಇಂಡಿಯ ಜಾಲತಾಣದಲ್ಲಿ ನಿರಂತರ ಲೇಖನಗಳನ್ನು ಬರೆಯುತ್ತಿದ್ದಾರೆ. ವಿವಿಧ ರಾಷ್ಟ್ರೀಯ, ಅಂತಾರಾಷ್ಟ್ರೀಯ ಇಂಗ್ಲಿಷ್ ಪತ್ರಿಕೆಗಳು, ನಿಯತಕಾಲಿಕೆಗಳಲ್ಲಿ ಲೇಖನಗಳು ಪ್ರಕಟವಾಗುತ್ತಿವೆ. ಪ್ರಚಲಿತ ವಿಚಾರಗಳ ಕುರಿತು ಸುವರ್ಣ ನ್ಯೂಸ್, ದೂರದರ್ಶನ, ಆಕಾಶವಾಣಿ, ಚಂದನ ವಾಹಿನಿಗಳಲ್ಲಿ ಪ್ಯಾನೆಲಿಸ್ಟ್ ಆಗಿ ಭಾಗಿ. ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ವಾಹಿನಿಗಳಲ್ಲಿ ಸಂವಾದ, ಚರ್ಚೆಗಳಲ್ಲಿ ಪ್ಯಾನೆಲಿಸ್ಟ್ ಆಗಿದ್ದಾರೆ.
ಯೋಗೇಶ್ ಎಂ.ಎನ್. (2020): ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ಮಾರೇನಹಳ್ಳಿ ಗ್ರಾಮದವರು. ಕಳೆದ ಸುಮಾರು 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಪ್ರಜಾವಾಣಿ ದಿನಪತ್ರಿಕೆಯ ಚಿತ್ರದುರ್ಗ ಜಿಲ್ಲಾ ವರದಿಗಾರರಾಗಿದ್ದಾರೆ. ಭ್ರೂಣಹತ್ಯೆ ತಡೆ, ಉನ್ನತ ಶಿಕ್ಷಣ ಸೇರಿದಂತೆ ಅಭಿವೃದ್ಧಿ ವಿಷಯಗಳ ಕುರಿತು ಪರಿಣಾಮಕಾರಿ ವರದಿಗಳನ್ನು ಪ್ರಕಟ ಮಾಡಿದ್ದಾರೆ. ‘ಜೀವಸೆಲೆ ಕಾಮೇಗೌಡ’ ಕೃತಿಯು ಮಂಡ್ಯ ವಿಶ್ವವಿದ್ಯಾಲಯಕ್ಕೆ ಪಠ್ಯವಾಗಿದೆ. ಸಕ್ಕರೆಯ ಅಕ್ಕರೆ, ವರ್ಣ ಕೃತಿಗಳು ಪ್ರಕಟವಾಗಿವೆ. ಭಾರತೀಯ ರಂಗ ಶಿಕ್ಷಣ ಕೇಂದ್ರದಲ್ಲಿ ತರಬೇತಿ ಪಡೆದಿದ್ದಾರೆ. ವಿವಿಧ ಹವ್ಯಾಸಿ ನಾಟಕಗಳಲ್ಲಿ ಅಭಿನಯಿಸಿದ್ದಾರೆ.
ನೌಶಾದ್ ಬಿಜಾಪುರ (2021): ಮೂಲತ: ಧಾರವಾಡದವರು. ಪ್ರಸ್ತುತ ಬೆಳಗಾವಿಯಲ್ಲಿ ನೆಲೆಸಿದ್ದು, ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ದಿನಪತ್ರಿಕೆಯ ಹಿರಿಯ ಸಹಾಯಕ ಸಂಪಾದಕರಾಗಿದ್ದಾರೆ. ಕಳೆದ 25 ವರ್ಷಕ್ಕೂ ಹೆಚ್ಚು ಕಾಲದಿಂದ ಡೆಕ್ಕನ್ ಕ್ರೋನಿಕಲ್, ಡೆಕ್ಕನ್ ಹೆರಾಲ್ಡ್, ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿ ಈಗ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ದಿನಪತ್ರಿಕೆಯಲ್ಲಿ ಹಲವಾರು ಅಭಿವೃದ್ಧಿ ಮತ್ತು ಸಾಮಾಜಿಕ ಚಿಂತನೆಗಳಿಂದ ಕೂಡಿದ ಲೇಖನ ಹಾಗೂ ವರದಿಗಳನ್ನು ಪ್ರಕಟಿಸಿದ್ದಾರೆ.
ಸತೀಶ್ ಜಿ.ಟಿ (2022) : ಮೂಲತ: ಚಿತ್ರದುರ್ಗದವರು. ಮೈಸೂರು ವಿಶ್ವವಿದ್ಯಾನಿಲಯದಿಂದ ಇಂಗ್ಲೀಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2004ರಿಂದ 2011ರವರೆಗೆ ವಿಜಯ ಟೈಮ್ಸ್, ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. 2011 ರಿಂದ ಈವರೆಗೆ ದಿ ಹಿಂದೂ ದಿನಪತ್ರಿಕೆಯ ಹಾಸನ ವಿಭಾಗದ ವಿಶೇಷ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಭಿವೃದ್ಧಿಯ ವಿವಿಧ ಆಯಾಮಗಳ ಮೇಲೆ ಬೆಳಕು ಚೆಲ್ಲುವ ಅನೇಕ ವರದಿಗಳನ್ನು ಪ್ರಕಟಿಸಿದ್ದಾರೆ. ವಿನೋದ್ ಮೆಹ್ತಾ ಅವರ ಆತ್ಮಕಥೆ ‘ಲಖನೌ ಹುಡುಗ’ , ವಿನೋದ್ ಕಾಪ್ರಿ ಅವರ ‘ಮನೆ ಸೇರಲು 1232 ಕಿ.ಮೀ ಸಾಗಿದ ದೂರ’ , ನ್ಯಾಯಮೂರ್ತಿ ಕೆ.ಚಂದ್ರು ಅವರ ‘ನನ್ನ ದೂರು ಕೇಳಿ ಮಹಿಳೆಯರು ನ್ಯಾಯಾಲಯದ ಕದ ತಟ್ಟಿದಾಗ’ ಅಜಿತ್ ಪಿಳ್ಳೆ ಅವರ ‘ಇದು ಯಾವ ಸೀಮೆ ಚರಿತ್ರೆ’ ಮೊದಲಾದ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.
ಎಸ್.ಗಿರೀಶ್ ಬಾಬು (2023): ಬೆಂಗಳೂರಿನವರಾದ ಎಸ್.ಗಿರೀಶ್ ಬಾಬು ಅವರು ಉದಯಟಿವಿ, ವಿಜಯಕರ್ನಾಟಕ , ಉದಯವಾಣಿ, ಮತ್ತಿತರ ಮಾಧ್ಯಮಗಳಲ್ಲಿ 27 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಕನ್ನಡಪ್ರಭ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳಗಾವಿಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುವ ಅವಧಿಯಲ್ಲಿ ಕೊಕಟನೂರು ಜಾತ್ರೆಯಲ್ಲಿ ಮುತ್ತುಕಟ್ಟುವ (ದೇವದಾಸಿ) ಪದ್ದತಿ ಬಗ್ಗೆ ಬರೆದ ವರದಿಯು ಈ ಸಾಮಾಜಿಕ ಅನಿಷ್ಠದ ನಿರ್ಮೂಲನೆಗೆ ನೆರವಾಯಿತು. ಶಿಕ್ಷಣ, ಆರೋಗ್ಯ, ಪರಿಸರ , ರಕ್ಷಣೆ, ವಿಜ್ಞಾನ, ತಂತ್ರಜ್ಞಾನ ಬೀಟ್ಗಳಲ್ಲಿ ನೂರಾರು ವರದಿಗಳನ್ನು ಪ್ರಕಟಿಸಿದ್ದಾರೆ. ಭಾರತೀಯ ರಕ್ಷಣಾ ಇಲಾಖೆಯು ಪತ್ರಕರ್ತರಿಗಾಗಿ ನಡೆಸುವ ಡಿಫೆನ್ಸ್ ಕರೆಸ್ಪಾಂಡೆನ್ಸ್ ಕೋರ್ಸ್ನಲ್ಲಿ ಭಾಗವಹಿಸಿ ಕಾರ್ಗಿಲ್, ಲೇಹ್ ಸೇರಿದಂತೆ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಮಾಡಿರುತ್ತಾರೆ.
ಶೀಘ್ರದಲ್ಲಿಯೇ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.
ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.
ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ, ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.
ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.
ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.
ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.
ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.
ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.
*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿಸಚಿವ ಎಚ್.ಆಂಜನೇಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ದಿನದ ಸುದ್ದಿ
ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
ಮುಖ್ಯಾಂಶಗಳು
ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ
ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ
ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್
ಸುದ್ದಿದಿನ,ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.
ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ತನಿಖೆ ಎದುರಿಸುತ್ತಿರುವವರು
ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.
ಕಚೇರಿಯಲ್ಲಿ ತಪಾಸಣೆ
ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.
ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.
ಅವರು ಸೋಮವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲೂ ಕೂಡ ಸಾಮೂಹಿಕವಾಗಿ ಫಾರಂ ವಿತರಣೆ ಮಾಡುತ್ತಿಲ್ಲ ಮತ್ತು ಮಾಡುವುದೂ ಇಲ್ಲ, ಕೆಲವು ಬೂತ್ಗಳಲ್ಲಿ ಸಾರ್ವಜನಿಕರೇ ಗುಂಪುಗೂಡಿ ಇಲ್ಲೇ ಫಾರಂ ನೀಡಿ ಎಂದು ಕೇಳಿರುವ ಉದಾಹರಣೆಗಳು ಇವೆಯೇ ಹೊರತು, ಇಲಾಖೆಯಿಂದ ಸಾಮೂಹಿಕ ವಿತರಣೆ ನಡೆದಿಲ್ಲ ಎಂದರು.
ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ಲಿಖಿತ ಸೂಚನೆ ಹಾಗೂ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಅವರು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಮನೆಗೆ ಭೇಟಿ ನೀಡಿ ಫಾರಂಗಳನ್ನು ವಿತರಿಸುವರು. ಭೇಟಿ ನೀಡಿದ ನಂತರ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಬೇಕೆಂದು ಆದೇಶಿಸಲಾಗಿದೆ. ಹಳ್ಳಿಗಳಲ್ಲಿ ಹಾಗೂ ಕೆಲವು ಕಡೆ ಸಾರ್ವಜನಿಕರು ತಮ್ಮ ಫಾರಂಗಳನ್ನು ಬೇಗ ಮಾಡಿಕೊಡಿ ಎಂದು ಬಿ.ಎಲ್.ಓಗಳ ಬಳಿ ಗುಂಪುಗೂಡುತ್ತಿರುವುದು ಕಂಡುಬಂದಿದೆ. ಆದರೆ, ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲು ನಮ್ಮ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಪೂರ್ಣ ತಂಡವು ಬಿ.ಎಲ್.ಓ.ಗಳಿಗೆ ನೆರವಾಗಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 40 ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ನೇರವಾಗಿ ಈ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಫಾರಂಗಳನ್ನು ಭರ್ತಿ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಫಾರಂಗಳನ್ನು ಕಡ್ಡಾಯವಾಗಿ ಬಿ.ಎಲ್.ಓ.ಗಳಿಗೆ ಹಸ್ತಾಂತರಿಸಬೇಕು ಎಂದರು
ರಾಷ್ಟ್ರೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿ.ಎಲ್.ಎ (ಬೂತ್ ಮಟ್ಟದ ಏಜೆಂಟ್ಗಳು) ಸಾರ್ವಜನಿಕರಿಗೆ ಫಾರಂ ಭರ್ತಿ ಮಾಡಲು ಸಹಾಯ ಮಾಡಬಹುದು. ಅವರು ಮೊದಲ ಹಂತದಲ್ಲಿ ತಲಾ 50 ಫಾರಂಗಳನ್ನು ಸಂಗ್ರಹಿಸಿ, ಭರ್ತಿ ಮಾಡಿ ನಮ್ಮ ಬಿ.ಎಲ್.ಓ.ಗಳಿಗೆ ತಂದುಕೊಡಲು ಅವಕಾಶ ಕಲ್ಪಿಸಲಾಗಿದೆ. ಇದು ಗುಂಪಾಗಿ ಮಾಡುವುದಲ್ಲ, ಬದಲಿಗೆ ಮನೆ ಮನೆಗೆ ಹೋಗಿ ಬಿ.ಎಲ್.ಓಗಳ ಸಹಯೋಗದೊಂದಿಗೆ ಮಾಡುವ ಕಾರ್ಯವಾಗಿದೆ ಎಂದರು.
ಸಹಿ ಮಾಡುವ ಪ್ರಕ್ರಿಯೆಯು ಮತದಾರರದ್ದೇ ಆಗಿರುತ್ತದೆ. ಮೊಬೈಲ್ ಬಳಸಲು ಬಾರದ ಅನಕ್ಷರಸ್ಥರಿಗೆ ಅಥವಾ ತಾಂತ್ರಿಕ ತೊಂದರೆ ಇರುವವರಿಗೆ ಬಿ.ಎಲ್.ಓ ಹಾಗೂ ಬಿ.ಎಲ್.ಎ.ಗಳು ಸಹಾಯ ಮಾಡಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಅಡಿಯಲ್ಲೇ ನಮ್ಮ ಇಡೀ ತಂಡ ಕೆಲಸ ಮಾಡುತ್ತಿದೆ ಎಂದರು.
ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಶಿಫ್ಟ್ ಮಾಡಿಕೊಂಡಿರುವ ಮತದಾರರು, ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ. ಅಂತಹ ಮತದಾರರು ‘ಫಾರಂ-8’ ಅನ್ನು ಸಲ್ಲಿಸುವ ಮೂಲಕ ತಮ್ಮ ವಿಳಾಸವನ್ನು ಸುಲಭವಾಗಿ ಬದಲಾಯಿಸಿಕೊಳ್ಳಬಹುದು ಎಂದರು.
ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಒಂದು ವೇಳೆ ತಪ್ಪಾಗಿ ಮ್ಯಾಪಿಂಗ್ ಆಗಿದ್ದರೆ ಅಥವಾ ತಂದೆ-ತಾಯಿಯ ಹೆಸರುಗಳಲ್ಲಿ ತಪ್ಪುಗಳಾಗಿದ್ದರೆ, 2002ರ ಹಳೆಯ ವೋಟರ್ ಐಡಿ ವಿವರಗಳ ಆಧಾರದ ಮೇಲೆ ಬಿ.ಎಲ್.ಓ ಮೊಬೈಲ್ ಆಪ್ (BLO Mobile App) ಮೂಲಕ ತಿದ್ದುಪಡಿ ಹಾಗೂ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
18 ವರ್ಷ ತುಂಬಿರುವ ಅರ್ಹ ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದ ಫಾರಂಗಳನ್ನು ಪಡೆದು ಭರ್ತಿ ಮಾಡಬಹುದಾಗಿದೆ. ಇದಕ್ಕಾಗಿ ಸಾರ್ವಜನಿಕರು ಯಾರೂ ಮತಗಟ್ಟೆಗಳನ್ನಾಗಲಿ ಅಥವಾ ಬಿ.ಎಲ್.ಓಗಳನ್ನಾಗಲಿ ಹುಡುಕಿಕೊಂಡು ಹೋಗುವ ಅಗತ್ಯವಿಲ್ಲ, ನಾವೇ ನಿಮ್ಮ ಮನೆ ಬಾಗಿಲಿಗೆ ಬರುತ್ತೇವೆ ಎಂದು ತಿಳಿಸಿದರು.
ಅನಾಥಾಶ್ರಮಗಳಲ್ಲಿರುವ ಹಾಗೂ ತಂದೆ-ತಾಯಿಯರ ಮಾಹಿತಿ ಇಲ್ಲದವರಿಗೂ ಸಹ ಮತದಾನದ ಹಕ್ಕನ್ನು ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಕ್ರಮ ಕೈಗೊಂಡಿದೆ. ಸರ್ಕಾರಿ ಅನಾಥಾಶ್ರಮವೊಂದರಲ್ಲಿರುವ 43 ಯುವಕರು 2025ನೇ ಇಸವಿಯಲ್ಲೂ ಮತದಾರರ ಪಟ್ಟಿಯಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರವೇ ಅವರಿಗೆ ಪೋಷಕರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರೆ ಅವರ ಅಧಿಕೃತ ಪೋಷಕರಾಗಿರುತ್ತಾರೆ ಎಂದರು.
ದೇವದಾಸಿಯರಂತಹ ಪ್ರಕರಣಗಳಲ್ಲಿ ತಂದೆಯ ವಿವರಗಳು ಲಭ್ಯವಿಲ್ಲದಿದ್ದರೆ, ತಾಯಿಯ ವಿವರಗಳನ್ನು ನೀಡಿ ಹೆಸರು ನಮೂದಿಸಲು ಅವಕಾಶವಿದೆ. ಇನ್ನು ಕೆಲವು ಸಂದರ್ಭಗಳಲ್ಲಿ ತಂದೆ-ತಾಯಿ ಇಬ್ಬರೂ ಇಲ್ಲದಿದ್ದರೆ, ಅಂತವರು ತಮ್ಮ ಅಜ್ಜ ಅಥವಾ ಅಜ್ಜಿಯ ಹೆಸರನ್ನು ಸಂಬಂಧದ ಕಾಲಂನಲ್ಲಿ ನಮೂದಿಸಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಚುನಾವಣಾ ಆಯೋಗವು ಇಂತಹ ಎಲ್ಲಾ ಸವಾಲುಗಳಿಗೂ ಕಾನೂನಾತ್ಮಕವಾಗಿ ಹಾಗೂ ecinet ಮೊಬೈಲ್ ಆಪ್ ಮತ್ತು https://voters.eci.gov.in ಮೂಲಕ ಸೂಕ್ತ ಪರಿಹಾರವನ್ನು ಕಲ್ಪಿಸಿದೆ. ಹೀಗಾಗಿ ಯಾವುದೇ ಮತದಾರರು ಆತಂಕ ಪಡುವ ಅಗತ್ಯವಿಲ್ಲ. ಬಿ.ಎ.ಲ್.ಓ ಗಳು ಮನೆಗೆ ಬಂದಾಗ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸಾರ್ವಜನಿಕರು ಸ್ಪಂದಿಸಿ, ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಫಾರಂ ಹಂಚಿಕೆಯಲ್ಲಿ ರಾಜ್ಯದಲ್ಲೇ ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ; ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಪ್ರಗತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟಾರೆ ಶೇ. 94 ರಷ್ಟು ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಫಾರಂಗಳನ್ನು ಹಂಚಿಕೆ ಮಾಡುವ ಮೂಲಕ ದಾವಣಗೆರೆ ಜಿಲ್ಲೆಯು ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದು ಅಭೂತಪೂರ್ವ ಸಾಧನೆ ಮಾಡಿದೆ. ಇದೇ ವೇಳೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 99.81 ರಷ್ಟು ದಾಖಲೆ ಪ್ರಮಾಣದ ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಪಾರಂಗಳನ್ನು ಅತ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಲಾಗಿದ್ದು, ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಹಾಗೂ ಶೇ. 10.8 ರಷ್ಟು ಗಣಕೀಕರಣವಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮನೆ ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹ ಪ್ರಗತಿಯಲ್ಲಿ
ದಾವಣಗೆರೆ ಜಿಲ್ಲೆಯಲ್ಲಿ ಜೂನ್ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಮುದ್ರಿಸಿ ಬಿಎಲ್ಓಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್ 06 ರಿಂದ ಜುಲೈ 29 ರ ಅವಧಿಯಲ್ಲಿ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.
ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮತ್ತು ಪ್ರಗತಿ ವಿವರ
ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.
103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ. 105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ. 106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, 2,44,948 ನಮೂನೆಗಳನ್ನು ವಿತರಿಸಲಾಗಿದ್ದು, 7,120 ನಮೂನೆಗಳನ್ನು ಗಣಕೀಕರಿಸಲಾಗಿದೆ. 107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ. 108-ಮಾಯಕೊಂಡ: ಒಟ್ಟು 197,048 ಮತದಾರರಿದ್ದು, 196,486 ನಮೂನೆಗಳನ್ನು ವಿತರಿಸಲಾಗಿದ್ದು, 42,785 ನಮೂನೆಗಳನ್ನು ಗಣಕೀಕರಿಸಲಾಗಿದೆ. 109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ. 110- ಹೊನ್ನಾಳಿ ಒಟ್ಟು 2,00,033 ಮತದಾರರಿದ್ದು, 182,419 ನಮೂನೆಗಳನ್ನು ವಿತರಿಸಲಾಗಿದ್ದು, 12,350 ನಮೂನೆಗಳನ್ನು ಗಣಕೀಕರಿಸಲಾಗಿದೆ.
ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಮತದಾರರ ಗುರುತಿಸುವಿಕೆ ಪ್ರಗತಿ
ಜೂನ್ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ (Duplicate) ಪ್ರಕರಣಗಳಾಗಿವೆ.
ಜಗಳೂರು ಕ್ಷೇತ್ರದಲ್ಲಿ 122 ಪ್ರಕರಣಗಳನ್ನು ಗುರುತಿಸಲಾಗಿದ್ದು (2 ಗೈರು, 31 ಶಾಶ್ವತ ವಲಸೆ, 47 ಮರಣ, 40 ದ್ವಿಪ್ರತಿ, 2 ಇತರೆ), ಹರಿಹರ ಕ್ಷೇತ್ರದಲ್ಲಿ 149 ಪ್ರಕರಣಗಳು (2 ಗೈರು, 48 ಶಾಶ್ವತ ವಲಸೆ, 71 ಮರಣ, 26 ದ್ವಿಪ್ರತಿ, 2 ಇತರೆ), ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 246 ಪ್ರಕರಣಗಳು (5 ಗೈರು, 98 ಶಾಶ್ವತ ವಲಸೆ, 112 ಮರಣ, 31 ದ್ವಿಪ್ರತಿ), ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 235 ಪ್ರಕರಣಗಳು (6 ಗೈರು, 123 ಶಾಶ್ವತ ವಲಸೆ, 60 ಮರಣ, 44 ದ್ವಿಪ್ರತಿ, 2 ಇತರೆ), ಮಾಯಕೊಂಡ ಕ್ಷೇತ್ರದಲ್ಲಿ 337 ಪ್ರಕರಣಗಳು (4 ಗೈರು, 113 ಶಾಶ್ವತ ವಲಸೆ, 174 ಮರಣ, 45 ದ್ವಿಪ್ರತಿ,1 ಇತರೆ), ಚನ್ನಗಿರಿ ಕ್ಷೇತ್ರದಲ್ಲಿ 386 ಪ್ರಕರಣಗಳು (10 ಗೈರು, 139 ಶಾಶ್ವತ ವಲಸೆ, 167 ಮರಣ, 63 ದ್ವಿಪ್ರತಿ, 7 ಇತರೆ) ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 232 ಪ್ರಕರಣಗಳ (1 ಗೈರು, 89 ಶಾಶ್ವತ ವಲಸೆ, 120 ಮರಣ, 22 ದ್ವಿಪ್ರತಿ) ಗುರುತಿಸಿದೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಪಾರಂಗಳನ್ನು ನಮೂದಿಸಿ ಬಿ.ಎಲ್.ಓ ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ಕಾರ್ಯದರ್ಶಿ ಮಮತ ಹಸ ಗೌಡರ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಪಾಲಿಕೆ ಆಯುಕ್ತ ಮಹಾಂತೇಶ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ6 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

