ದಿನದ ಸುದ್ದಿ
2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ ; ಇಲ್ಲಿದೆ ಸಂಪೂರ್ಣ ಮಾಹಿತಿ
ಸುದ್ದಿದಿನ,ಬೆಂಗಳೂರು:ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಸ್ಥಾಪಿಸಿದ್ದು 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಹಾಗೂ ಕೆ.ಶಿವಕುಮಾರ್ ಅವರಿದ್ದ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ಒಳಗೊಂಡಿರುತ್ತದೆ.
2017ರಿಂದ 2023ರವರೆಗಿನ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರ ವಿವರ
ವಿಜಯಲಕ್ಷ್ಮಿ ಶಿಬರೂರು (2017): ಮೂಲತ: ದಕ್ಷಿಣ ಕನ್ನಡ ಜಿಲ್ಲೆಯ ಶಿಬರೂರು ಗ್ರಾಮದವರಾದ ವಿಜಯಲಕ್ಷ್ಮಿ ಅವರು, ಕಳೆದ ಸುಮಾರು 25 ವರ್ಷಗಳಿಂದ ನಾಡಿನ ವಿವಿಧ ಮಾಧ್ಯಮಗಳಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಅರಣ್ಯ ಸಂರಕ್ಷಣೆ, ಅಪಾಯಕಾರಿ ಆಹಾರ ಪದಾರ್ಥಗಳು, ಪ್ಲಾಸ್ಟಿಕ್ ಅಪಾಯಗಳು ಮತ್ತಿತರ ಜಾಗೃತಿ ಮೂಡಿಸುವ ವರದಿಗಳನ್ನು ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಣಾಮಕಾರಿಯಾಗಿ ಬಿತ್ತರಿಸಿದ್ದಾರೆ. ಪರಿಸರ ಜಾಗೃತಿಯ ವರದಿಗಳನ್ನು ಪ್ರಕಟಿಸಿದ್ದಾರೆ.
ಬಿ.ಎಂ.ಟಿ ರಾಜೀವ್ : (2018): ಮೂಲತ: ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬೆನವಾರ ಗ್ರಾಮದವರು, ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಭಾರತೀಯ ಅರಣ್ಯ ಸೇವೆಯಿಂದ 2006ರಲ್ಲಿ ನಿವೃತ್ತಿ ಹೊಂದಿದ್ದಾರೆ. 1985 ರಿಂದ ವನ್ಯಜೀವಿಗಳು, ಅರಣ್ಯ ಮತ್ತು ಪರಿಸರ ಸಂರಕ್ಷಣೆ ಕುರಿತು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಲೇಖನ, ಪ್ರಬಂಧಗಳನ್ನು ಬರೆಯುತ್ತಿದ್ದಾರೆ. ಅರಣ್ಯ/ವನ್ಯಜೀವಿ/ಪರಿಸರದಿಂದ ಮನುಕುಲಕ್ಕಿರುವ ಅನುಕೂಲಗಳು, ಅವಶ್ಯಕತೆಗಳ ಬಗ್ಗೆ ಲೇಖನಗಳನ್ನು ಬರೆದಿದ್ದಾರೆ. ಭಾರತೀಯ ವನ್ಯಪ್ರಾಣಿಗಳ ಕೈಪಿಡಿ, ಪರಿಸರ ಮಾಲಿನ್ಯ ಮತ್ತು ವಾಯುಗುಣ ಬದಲಾವಣೆ ಕುರಿತು ಒಟ್ಟು 6 ಪುಸ್ತಕಗಳನ್ನು ಪ್ರಕಟಿಸಿದ್ದಾರೆ.
ವಿನೋದಕುಮಾರ್ ಬಿ. ನಾಯ್ಕ: (2019) : ಮೂಲತ: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಗುಬ್ಬಿಹಳ್ಳಿ ಗ್ರಾಮದವರು. ಏಷಿಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಯಲ್ಲಿ ವಿಶೇಷ ಯೋಜನೆಗಳ ವಿಭಾಗದ ಸಂಪಾದಕರಾಗಿರುವ ಇವರು ವಿವಿಧ ಮಾಧ್ಯಮಗಳಲ್ಲಿ ಸುಮಾರು 23 ವರ್ಷಗಳ ಕಾಲ ವನ್ಯಜೀವಿ ಹಾಗೂ ಪರಿಸರ ಕುರಿತು ಅನೇಕ ಪರಿಣಾಮಕಾರಿ ವರದಿಗಳನ್ನು ಮಾಡಿದ್ದಾರೆ. ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಾದೇಶಿಕ ಮಾಧ್ಯಮಗಳಲ್ಲಿ ಮೊದಲ ಬಾರಿಗೆ ವನ್ಯಜೀವಿ ಸಂರಕ್ಷಣಾ ಅಭಿಯಾನಗಳನ್ನು ಹಮ್ಮಿಕೊಂಡು ಕಾಡಂಚಿನ ಗ್ರಾಮಗಳಲ್ಲಿ ಮಾನವ –ವನ್ಯಜೀವಿ ಸಂಘರ್ಷ ಕಡಿಮೆ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ‘ಜಂಗಲ್ ಡೈರಿ’ ಕೃತಿ ಪ್ರಕಟಿಸಿದ್ದಾರೆ.
ಮಾಲತೇಶ ಅಂಗೂರ (2020): ಹಾವೇರಿ ಜಿಲ್ಲೆಯ ಮಾಲತೇಶ ಗದಿಗೆಪ್ಪ ಅಂಗೂರ ಅವರು ಸುಮಾರು 34 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದಾರೆ. ಕಳೆದ 18 ವರ್ಷಗಳಿಂದ ಕೌರವ ಕನ್ನಡ ದಿನಪತ್ರಿಕೆಯ ಮುಖ್ಯ ವರದಿಗಾರರಾಗಿ ಪರಿಸರಕ್ಕೆ ಸಂಬಂಧಿಸಿದಂತೆ ವನ್ಯಜೀವಿಗಳು, ಕೆರೆಕಟ್ಟೆಗಳು, ಪ್ರಾಣಿಪಕ್ಷಿಗಳು, ಕೀಟಗಳು, ಸಸ್ಯಗಳು, ನಿಸರ್ಗ, ಗುಡ್ಡ ಗಹ್ವರಗಳು, ಅತಿವೃಷ್ಠಿ ಅನಾವೃಷ್ಠಿ ಸೇರಿದಂತೆ ವಿವಿಧ ಪರಿಸರ ಜಾಗೃತಿಯ ವರದಿಗಳನ್ನು ಪ್ರಕಟಿಸಿದ್ದಾರೆ. ‘ಕಾಡು-ಮೇಡು’ ಕೃತಿ ಪ್ರಕಟವಾಗಿದೆ.
ಸುಧೀರ್ ಶೆಟ್ಟಿ (2021): ಉಡುಪಿ ಜಿಲ್ಲೆಯ ಪಾದೆಬೆಟ್ಟು ಗ್ರಾಮದವರಾದ ಇವರು ಮುಂಬೈನಲ್ಲಿ ಫೋಟೋ ಜರ್ನಲಿಸಂ ಪದವಿ ಪಡೆದಿದ್ದಾರೆ. ಅರಣ್ಯ, ವನ್ಯಜೀವಿ, ನದಿ ಮತ್ತು ನೀರಿನ ಮೂಲಗಳ ಸಂರಕ್ಷಣೆ, ಬಂಡೀಪುರ ಅರಣ್ಯದ ಪ್ರಾಣಿಗಳ ಪ್ರಾಣ ರಕ್ಷಣೆ, ಬೆಂಗಳೂರಿನ ಕೆರೆಗಳ ನೀರು ತಮಿಳುನಾಡಿಗೆ ಹರಿದುಹೋಗಿ ಅಲ್ಲಿ ಸಂಸ್ಕರಣೆಗೊಂಡು ಕೃಷಿಗೆ ಬಳಕೆಯಾಗುತ್ತಿರುವ ಬಗ್ಗೆ ಸೆರೆಹಿಡಿದ ಛಾಯಾಚಿತ್ರಗಳು ರಾಜ್ಯದಲ್ಲಿ ಚರ್ಚೆ ಉಂಟುಮಾಡಿದ್ದವು. ಗದಗ ಜಿಲ್ಲೆಯ ಕಪ್ಪತ್ತಗುಡ್ಡದ ಸಂರಕ್ಷಣೆ ಸಾಕ್ಷ್ಯಚಿತ್ರ ನಿರ್ಮಿಸಿದ್ದಾರೆ. ಕಪ್ಪತ್ತಗುಡ್ಡ ಸಂರಕ್ಷಣೆಗೆ ಗದುಗಿನ ಡಾ:ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳು ಹಾಗೂ ಎಸ್.ಆರ್.ಹಿರೇಮಠ ಅವರ ಹೋರಾಟದ ಸಂದರ್ಭದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ್ದರು. ಮಹದಾಯಿ ತಿರುವು ಯೋಜನೆ, ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ, ಸಂಡೂರಿನ ಅಕ್ರಮ ಗಣಿಗಾರಿಕೆ ಮತ್ತಿತರ ವಿಷಯಗಳ ಕುರಿತು ಇವರ ಛಾಯಾಚಿತ್ರಗಳು ಪ್ರದರ್ಶನಗೊಂಡಿವೆ.
ಮಲ್ಲಿಕಾರ್ಜುನ ಹೊಸಪಾಳ್ಯ (2022) : ಮಲ್ಲಿಕಾರ್ಜುನ ಹೊಸಪಾಳ್ಯ ಅವರು ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಹೊಸಪಾಳ್ಯ ಗ್ರಾಮದವರು. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಮೊದಲ ರಾಂಕ್ ನೊಂದಿಗೆ ಎರಡು ಚಿನ್ನದ ಪದಕ ಮತ್ತು ಪದವಿಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚಿನ ಅಂಕಗಳಿಕೆಗಾಗಿ ಚಿನ್ನದ ಪದಕ ಪಡೆದಿದ್ದಾರೆ. ದೇಸಿ ತಳಿ, ನಾಟಿ ಬೀಜಗಳ ಸಂರಕ್ಷಣೆ ಕುರಿತು ವಿಶೇಷ ಆಸಕ್ತಿ, ಜಲಸಂರಕ್ಷಣೆ, ಸುಸ್ಥಿರ ಕೃಷಿ, ಸಿರಿಧಾನ್ಯ ಚಟುವಟಿಕೆಗಳಿಗೆ ಬೆಂಬಲ. ಜಲಜಾಗೃತಿಗಾಗಿ ಕಾರ್ಯಕ್ರಮ ಸಂಘಟನೆ. ಪಾರಂಪರಿಕ ಜಲನಿಧಿಗಳಾದ ತಲಪರಿಗೆ ಬಗ್ಗೆ ಅಧ್ಯಯನ, ಪುನರುಜ್ಜೀವನಕ್ಕಾಗಿ ಶ್ರಮಿಸುತ್ತಿದ್ದಾರೆ. ಕಳೆದ ಎರಡು ದಶಕಗಳಿಂದ ವಿವಿಧ ಪತ್ರಿಕೆಗಳಲ್ಲಿ ಹವ್ಯಾಸಿ ಬರಹಗಾರರಾಗಿ ಕೃಷಿ ವಿಚಾರಗಳ ಬರವಣಿಗೆ ಮಾಡುತ್ತಿದ್ದಾರೆ. ನೆಟ್ಟಿರಾಗಿ, ತಲಪರಿಗೆ, ನಶಿಸುತ್ತಿರುವ ನೀರಿನ ಜ್ಞಾನ,ಕರ್ನಾಟಕದ ಕೃಷಿ ಆಚರಣೆಗಳು ಸೇರಿ ಒಟ್ಟು 14 ಕೃತಿಗಳು ಪ್ರಕಟವಾಗಿವೆ.
ಆರ್.ಮಂಜುನಾಥ್ (ಕೆರೆ ಮಂಜು) (2023) : ಬೆಂಗಳೂರಿನವರಾಗಿರುವ ಆರ್.ಮಂಜುನಾಥ್ ಅವರು,1995ರಿಂದ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿರುವ ಇವರು, ಪ್ರಸ್ತುತ ಪ್ರಜಾವಾಣಿಯಲ್ಲಿ ಹಿರಿಯ ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಕೆರೆಗಳ ಬಗ್ಗೆ ‘ನಮ್ಮೂರ್ ಕೆರೆ’ಎಂಬ ಲೇಖನ ಮಾಲಿಕೆ (2008). ಅರ್ಕಾವತಿ ನದಿ ಪುನಶ್ಚೇತನ, ಧಾರವಾಡ ಕೆರೆಗಳ ಅಭಿವೃದ್ಧಿ, ಬೆಂಗಳೂರಿನಲ್ಲಿರುವ ರಾಜಕಾಲುವೆಗಳ ಒತ್ತುವರಿಯಿಂದ ಮಳೆಗಾಲದಲ್ಲಿ ನೀರು ಬಡಾವಣೆಗಳಿಗೆ ಹರಿಯುತ್ತಿದೆ. ಎಲ್ಲೆಲ್ಲಿ ಎಷ್ಟೆಷ್ಟು ರಾಜಕಾಲುವೆ ಒತ್ತುವರಿಯಾಗಿದೆ ಎಂಬುದನ್ನು ನಕ್ಷೆ ಸಹಿತ ಮಾಹಿತಿಯ ಲೇಖನಗಳು ಸೇರಿ ಕೆರೆಗಳ ರಕ್ಷಣೆ ಬಗ್ಗೆ ಪರಿಣಾಮಕಾರಿ ಲೇಖನಗಳನ್ನು ಪ್ರಕಟಿಸಿದ್ದಾರೆ.
2017ರಿಂದ 2023 ರವರೆಗಿನಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರ ವಿವರ
ಚೀ.ಜ.ರಾಜೀವ್ (2017) :ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲ್ಲೂಕು ಚೀರನಹಳ್ಳಿ ಗ್ರಾಮದವರು. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ. 1999ರಿಂದ 2001ರವರೆಗೆ ಉದಯವಾಣಿ ದಿನಪತ್ರಿಕೆಯಲ್ಲಿ, 2001 ರಿಂದ ಇಲ್ಲಿಯವರೆಗೆ ವಿಜಯ ಕರ್ನಾಟಕ ದಿನಪತ್ರಿಕೆಯ ಸುದ್ದಿ ಸಂಪಾದಕರಾಗಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೃಷಿ, ಶಿಕ್ಷಣ, ಪರಂಪರೆ, ಮತ್ತಿತರ ಕ್ಷೇತ್ರಗಳ ಸವಾಲುಗಳಿಗೆ ಕನ್ನಡಿ ಹಿಡಿಯುವ ಅಭ್ಯುದಯ ಪತ್ರಿಕೋದ್ಯಮಕ್ಕೆ ಉದಾಹರಣೆಯಾಗುವಂತಹ ವರದಿ ಅಂಕಣಗಳನ್ನು ನಿರಂತರವಾಗಿ ಪ್ರಕಟಿಸುತ್ತಿದ್ದಾರೆ.
ದೇವಯ್ಯ ಗುತ್ತೇದಾರ್ (2018): ಮೂಲತ: ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕು ಭೈರಾಮಡಗಿ ಗ್ರಾಮದವರು. 2004ರಿಂದ ಉಷಾಕಿರಣ, ಪ್ರಜಾವಾಣಿಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ವಿಜಯಕರ್ನಾಟಕ ದಿನಪತ್ರಿಕೆಯ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕರಾಗಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಮಾನವ ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕದ ತಾಲ್ಲೂಕುಗಳ ಪರಿಸ್ಥಿತಿ, ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಬಡತನ ನಿವಾರಣೆ, ಶಿಶುಮರಣ ತಡೆ ಸೇರಿದಂತೆ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕುರಿತ ಅನೇಕ ವಿಶ್ಲೇ಼ಷಣಾತ್ಮಕ ಲೇಖನಗಳು, ವರದಿಗಳನ್ನು ಪ್ರಕಟಿಸಿದ್ದಾರೆ.
ಗಿರೀಶ್ ಲಿಂಗಣ್ಣ (2019): ಬೆಂಗಳೂರಿನ ಗಿರೀಶ್ ಲಿಂಗಣ್ಣ ಅವರು ಮೆಕ್ಯಾನಿಕಲ್ ಇಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರರಾಗಿದ್ದಾರೆ. ಬಾಹ್ಯಾಕಾಶ, ರಕ್ಷಣೆ, ಅಂತಾರಾಷ್ಟ್ರೀಯ ವ್ಯವಹಾರಗಳ ವಿಶ್ಲೇಷಕ. ಸಂಯುಕ್ತ ಕರ್ನಾಟಕ ,ಕನ್ನಡ ಪ್ರಭ, ಇಂಡಿಯನ್ ಎಕ್ಸ್ಪ್ರೆಸ್ ದಿನಪತ್ರಿಕೆಗಳ ಜಾಲತಾಣಗಳ ಅಂಕಣಕಾರರಾಗಿದ್ದಾರೆ. ವಿಜಯ ಕರ್ನಾಟಕ, ಉದಯವಾಣಿ, ವಿಶ್ವವಾಣಿ, ಪತ್ರಿಕೆಗಳಲ್ಲಿ ಒನ್ ಇಂಡಿಯ ಜಾಲತಾಣದಲ್ಲಿ ನಿರಂತರ ಲೇಖನಗಳನ್ನು ಬರೆಯುತ್ತಿದ್ದಾರೆ. ವಿವಿಧ ರಾಷ್ಟ್ರೀಯ, ಅಂತಾರಾಷ್ಟ್ರೀಯ ಇಂಗ್ಲಿಷ್ ಪತ್ರಿಕೆಗಳು, ನಿಯತಕಾಲಿಕೆಗಳಲ್ಲಿ ಲೇಖನಗಳು ಪ್ರಕಟವಾಗುತ್ತಿವೆ. ಪ್ರಚಲಿತ ವಿಚಾರಗಳ ಕುರಿತು ಸುವರ್ಣ ನ್ಯೂಸ್, ದೂರದರ್ಶನ, ಆಕಾಶವಾಣಿ, ಚಂದನ ವಾಹಿನಿಗಳಲ್ಲಿ ಪ್ಯಾನೆಲಿಸ್ಟ್ ಆಗಿ ಭಾಗಿ. ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ವಾಹಿನಿಗಳಲ್ಲಿ ಸಂವಾದ, ಚರ್ಚೆಗಳಲ್ಲಿ ಪ್ಯಾನೆಲಿಸ್ಟ್ ಆಗಿದ್ದಾರೆ.
ಯೋಗೇಶ್ ಎಂ.ಎನ್. (2020): ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ಮಾರೇನಹಳ್ಳಿ ಗ್ರಾಮದವರು. ಕಳೆದ ಸುಮಾರು 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಪ್ರಜಾವಾಣಿ ದಿನಪತ್ರಿಕೆಯ ಚಿತ್ರದುರ್ಗ ಜಿಲ್ಲಾ ವರದಿಗಾರರಾಗಿದ್ದಾರೆ. ಭ್ರೂಣಹತ್ಯೆ ತಡೆ, ಉನ್ನತ ಶಿಕ್ಷಣ ಸೇರಿದಂತೆ ಅಭಿವೃದ್ಧಿ ವಿಷಯಗಳ ಕುರಿತು ಪರಿಣಾಮಕಾರಿ ವರದಿಗಳನ್ನು ಪ್ರಕಟ ಮಾಡಿದ್ದಾರೆ. ‘ಜೀವಸೆಲೆ ಕಾಮೇಗೌಡ’ ಕೃತಿಯು ಮಂಡ್ಯ ವಿಶ್ವವಿದ್ಯಾಲಯಕ್ಕೆ ಪಠ್ಯವಾಗಿದೆ. ಸಕ್ಕರೆಯ ಅಕ್ಕರೆ, ವರ್ಣ ಕೃತಿಗಳು ಪ್ರಕಟವಾಗಿವೆ. ಭಾರತೀಯ ರಂಗ ಶಿಕ್ಷಣ ಕೇಂದ್ರದಲ್ಲಿ ತರಬೇತಿ ಪಡೆದಿದ್ದಾರೆ. ವಿವಿಧ ಹವ್ಯಾಸಿ ನಾಟಕಗಳಲ್ಲಿ ಅಭಿನಯಿಸಿದ್ದಾರೆ.
ನೌಶಾದ್ ಬಿಜಾಪುರ (2021): ಮೂಲತ: ಧಾರವಾಡದವರು. ಪ್ರಸ್ತುತ ಬೆಳಗಾವಿಯಲ್ಲಿ ನೆಲೆಸಿದ್ದು, ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ದಿನಪತ್ರಿಕೆಯ ಹಿರಿಯ ಸಹಾಯಕ ಸಂಪಾದಕರಾಗಿದ್ದಾರೆ. ಕಳೆದ 25 ವರ್ಷಕ್ಕೂ ಹೆಚ್ಚು ಕಾಲದಿಂದ ಡೆಕ್ಕನ್ ಕ್ರೋನಿಕಲ್, ಡೆಕ್ಕನ್ ಹೆರಾಲ್ಡ್, ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿ ಈಗ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ದಿನಪತ್ರಿಕೆಯಲ್ಲಿ ಹಲವಾರು ಅಭಿವೃದ್ಧಿ ಮತ್ತು ಸಾಮಾಜಿಕ ಚಿಂತನೆಗಳಿಂದ ಕೂಡಿದ ಲೇಖನ ಹಾಗೂ ವರದಿಗಳನ್ನು ಪ್ರಕಟಿಸಿದ್ದಾರೆ.
ಸತೀಶ್ ಜಿ.ಟಿ (2022) : ಮೂಲತ: ಚಿತ್ರದುರ್ಗದವರು. ಮೈಸೂರು ವಿಶ್ವವಿದ್ಯಾನಿಲಯದಿಂದ ಇಂಗ್ಲೀಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2004ರಿಂದ 2011ರವರೆಗೆ ವಿಜಯ ಟೈಮ್ಸ್, ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. 2011 ರಿಂದ ಈವರೆಗೆ ದಿ ಹಿಂದೂ ದಿನಪತ್ರಿಕೆಯ ಹಾಸನ ವಿಭಾಗದ ವಿಶೇಷ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಭಿವೃದ್ಧಿಯ ವಿವಿಧ ಆಯಾಮಗಳ ಮೇಲೆ ಬೆಳಕು ಚೆಲ್ಲುವ ಅನೇಕ ವರದಿಗಳನ್ನು ಪ್ರಕಟಿಸಿದ್ದಾರೆ. ವಿನೋದ್ ಮೆಹ್ತಾ ಅವರ ಆತ್ಮಕಥೆ ‘ಲಖನೌ ಹುಡುಗ’ , ವಿನೋದ್ ಕಾಪ್ರಿ ಅವರ ‘ಮನೆ ಸೇರಲು 1232 ಕಿ.ಮೀ ಸಾಗಿದ ದೂರ’ , ನ್ಯಾಯಮೂರ್ತಿ ಕೆ.ಚಂದ್ರು ಅವರ ‘ನನ್ನ ದೂರು ಕೇಳಿ ಮಹಿಳೆಯರು ನ್ಯಾಯಾಲಯದ ಕದ ತಟ್ಟಿದಾಗ’ ಅಜಿತ್ ಪಿಳ್ಳೆ ಅವರ ‘ಇದು ಯಾವ ಸೀಮೆ ಚರಿತ್ರೆ’ ಮೊದಲಾದ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.
ಎಸ್.ಗಿರೀಶ್ ಬಾಬು (2023): ಬೆಂಗಳೂರಿನವರಾದ ಎಸ್.ಗಿರೀಶ್ ಬಾಬು ಅವರು ಉದಯಟಿವಿ, ವಿಜಯಕರ್ನಾಟಕ , ಉದಯವಾಣಿ, ಮತ್ತಿತರ ಮಾಧ್ಯಮಗಳಲ್ಲಿ 27 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಕನ್ನಡಪ್ರಭ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳಗಾವಿಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುವ ಅವಧಿಯಲ್ಲಿ ಕೊಕಟನೂರು ಜಾತ್ರೆಯಲ್ಲಿ ಮುತ್ತುಕಟ್ಟುವ (ದೇವದಾಸಿ) ಪದ್ದತಿ ಬಗ್ಗೆ ಬರೆದ ವರದಿಯು ಈ ಸಾಮಾಜಿಕ ಅನಿಷ್ಠದ ನಿರ್ಮೂಲನೆಗೆ ನೆರವಾಯಿತು. ಶಿಕ್ಷಣ, ಆರೋಗ್ಯ, ಪರಿಸರ , ರಕ್ಷಣೆ, ವಿಜ್ಞಾನ, ತಂತ್ರಜ್ಞಾನ ಬೀಟ್ಗಳಲ್ಲಿ ನೂರಾರು ವರದಿಗಳನ್ನು ಪ್ರಕಟಿಸಿದ್ದಾರೆ. ಭಾರತೀಯ ರಕ್ಷಣಾ ಇಲಾಖೆಯು ಪತ್ರಕರ್ತರಿಗಾಗಿ ನಡೆಸುವ ಡಿಫೆನ್ಸ್ ಕರೆಸ್ಪಾಂಡೆನ್ಸ್ ಕೋರ್ಸ್ನಲ್ಲಿ ಭಾಗವಹಿಸಿ ಕಾರ್ಗಿಲ್, ಲೇಹ್ ಸೇರಿದಂತೆ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಮಾಡಿರುತ್ತಾರೆ.
ಶೀಘ್ರದಲ್ಲಿಯೇ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


