Connect with us

ದಿನದ ಸುದ್ದಿ

ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್‍ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಬಜೆಟ್‍ನಲ್ಲಿ ಅನುಮೋದನೆ ನೀಡಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಅವರು ಶುಕ್ರವಾರ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಸರ್ಕಾರದ ಅನುದಾನ ಸೇರಿ ರೂ.3.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿ 76 ಸಾವಿರದಷ್ಟು ಶಾಲೆಗಳಿದ್ದು 1.08 ಕೋಟಿ ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದು ಒಟ್ಟು ನೌಕರರಲ್ಲಿ ಶೇ 37 ರಷ್ಟು ಸಿಬ್ಬಂದಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 57 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕೊರತೆಯೂ ಇದ್ದು ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಜೊತೆಗೆ ದಾನಿಗಳಿಂದ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಮ್ಮ ಶಾಲೆ, ನಮ್ಮ ಜವಾಬ್ದಾರಿ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ ಎಂದರು.

ಪೌಷ್ಟಿಕತೆ ಹೆಚ್ಚಿಸಲು ಪ್ರತಿನಿತ್ಯ ಮೊಟ್ಟೆ

ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರತಿನಿತ್ಯ ಮೊಟ್ಟೆ ನೀಡಲಾಗುತ್ತಿದೆ. ಇದರಲ್ಲಿ ಆಜೀಂ ಪ್ರೇಂಜೀ ಪೌಂಢೇಷನ್‍ನಿಂದ ನಾಲ್ಕು ದಿನ, ಸರ್ಕಾರದಿಂದ 2 ದಿನ ಮೊಟ್ಟೆ ನೀಡಲಾಗುತ್ತಿದ್ದು ಸ್ಥಳೀಯವಾಗಿ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತಿದೆ. ಎಲ್ಲ ದಿನವೂ ಮೊಟ್ಟೆ ನೀಡಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟ ಅವರು ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಮತ್ತು ಪೋಷಕರೊಂದಿಗೆ ಮಕ್ಕಳನ್ನು ಕರೆದುಕೊಂಡು ಹೋಗದೆ ಶಾಲೆಗೆ ಕಳುಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಪ್ರತಿ ದಿನದ ಹಾಜರಾತಿಗೆ ರೂ.1 ರಂತೆ ಮಕ್ಕಳಿಗೆ ನೀಡಲಾಗುತ್ತಿತ್ತು, ನಂತರ ಮಧ್ಯಾಹ್ನ ಊಟ ನೀಡುತ್ತಾ ಬಂದು ಈಗ ಹಾಲು, ಮೊಟ್ಟೆಯನ್ನು ನೀಡಲಾಗುತ್ತಿದೆ. ಭವಿಷ್ಯದ ಪ್ರಜೆಗಳಾಗುವ ಮಕ್ಕಳು ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆದು ದೇಶದ ಆಸ್ತಿಯಾಗಬೇಕು ಮತ್ತು ಸಂವಿಧಾನ ಉಳಿಯಲು ಎಲ್ಲರೂ ಶಿಕ್ಷಣವಂತರಾಗಬೇಕೆಂದರು.

ಗ್ರಂಥಾಲಯಗಳಿಗೆ ಮಹತ್ವ

ಶಾಲೆಗಳಿಗೆ ನೀಡುವ ಮಹತ್ವವನ್ನು ಗ್ರಂಥಾಲಯಗಳಿಗೆ ನೀಡುವ ಅವಶ್ಯಕತೆ ಇದೆ. ಜಗಳೂರು ಪಟ್ಟಣದಲ್ಲಿ ಮುಖ್ಯಗ್ರಂಥಾಲಯವನ್ನು ಬಹಳ ಸುಸಜ್ಜಿತವಾಗಿ ನಿರ್ಮಾಣ ಮಾಡಿ ನಡೆಸಲಾಗುತ್ತಿದೆ. ಗ್ರಂಥಾಲಯಗಳು ಶಿಕ್ಷಕ ರಹಿತವಾದ ವಿಶ್ವವಿದ್ಯಾನಿಲಯಗಳಿದ್ದಂತೆ, ಗ್ರಂಥಾಲಯಗಳಲ್ಲಿ ಅಧ್ಯಯನ ಮಾಡಿದ ಅನೇಕರು ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಓದುಗರನ್ನು ಸಂದರ್ಶಿಸಿದಾಗ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಆಯ್ಕೆಯಾಗಿದ್ದು ಕೆಎಎಸ್ ಅಧಿಕಾರಿಯಾಗುವ ಆಸೆ ಇದ್ದು ಮುಂದಿನ ದಿನಗಳಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಈಗಿನಿಂದಲೇ ತಯಾರಿ ನಡೆಸುತ್ತಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಇದೇ ಮಾದರಿಯಲ್ಲಿ ರಾಜ್ಯಾದ್ಯಂತ ಗ್ರಂಥಾಲಯಗಳನ್ನು ಅಭಿವೃದ್ದಿ ಮಾಡುವ ಗುರು ಹೊಂದಲಾಗಿದೆ ಎಂದರು.

8 ನೇ ತರಗತಿವರೆಗೆ ವಿಸ್ತರಣೆ

ಹುಚ್ಚಂಗಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ ಮಾತ್ರ ಇದ್ದು ಇದನ್ನು 8 ನೇ ತರಗತಿಯವರೆಗೆ 2025-26 ಶೈಕ್ಷಣಿಕ ವರ್ಷದಿಂದಲೇ ವಿಸ್ತರಣೆ ಮಾಡಲು ಆದೇಶಿಸಲಾಗಿದೆ. 9-10 ನೇ ತರಗತಿಯನ್ನು ಇಲ್ಲಿಯೇ ಮುಂದುವರೆಗೆಸಲು ಮಕ್ಕಳ ಸಂಖ್ಯೆಯನ್ನಾಧರಿಸಿ ಮುಂದಿನ ನಿರ್ಧಾರವನ್ನು ಇಲಾಖೆ ಕೈಗೊಳ್ಳಲಿದೆ, ಶಾಲೆಯ ಅಭಿವೃದ್ದಿಗೆ ರೂ.25 ಲಕ್ಷಗಳನ್ನು ಕೇಳಿದ್ದು ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಜಗಳೂರು ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೆಂದ್ರಪ್ಪ ಮಾತನಾಡಿ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವರು ತಮ್ಮ ಅನುದಾನದಲ್ಲಿ ಹುಟ್ಟೂರಿನ ಶಾಲೆ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಇದೇ ಮಾದರಿಯಲ್ಲಿ ಚಿಮ್ಮನಕಟ್ಟೆಯಲ್ಲಿಯು ಹೈಟೆಕ್ ಶಾಲೆ ನಿರ್ಮಾಣ ಮಾಡಲಾಗುತ್ತದೆ.
ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ನದಿ ನೀರನ್ನು ಕುಡಿಯುವ ಉದ್ದೇಶಕ್ಕೆ ಸರಬರಾಜು ಮಾಡಲು ಉದ್ದೇಶಿಸಿದ್ದು ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿದೆ. ಜಗಳೂರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜು ಬಹು ದಿನಗಳ ಬೇಡಿಕೆಯಾಗಿದ್ದು ಆರಂಭಿಸಲು ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.

ವಿಧಾನಪರಿಷತ್ತಿನ ಸದಸ್ಯರಾದ ರವಿಕುಮಾರ್ ಎನ್ ಪ್ರಾಸ್ತಾವಿಕವಾಗಿ ಮಾತನಾಡಿ ಈ ಶಾಲೆಯಲ್ಲಿ ನಾನು ಓದಿದ್ದು ನಮ್ಮ ತಾಯಿಯ ಆಸೆಯಂತೆ ನಮ್ಮೂರಿಗೆ ಶಾಲಾ ಕಟ್ಟಡ ನಿರ್ಮಿಸಲು ಶ್ರಮಿಸಿದ್ದೇನೆ. ಈ ಹಿಂದೆ ನಾಲ್ಕನೇ ತರಗತಿವರೆಗೆ ಮಾತ್ರ ಇದ್ದು ಈಗ 7 ನೇ ತರಗತಿವರಗೆ ಇದೆ. ಇಲ್ಲಿನ ಜನರು ಶ್ರಮ ಜೀವಿಗಳಾಗಿದ್ದು ಕೆಲಸಕ್ಕಾಗಿ ವಲಸ ಹೋಗುತ್ತಾರೆ. ಆದ್ದರಿಂದ ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಸ್ಮಾರ್ಟ್ ಕ್ಲಾಸ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಶಾಲೆಯಲ್ಲಿ ಕಲ್ಪಿಸಿದ್ದು ಇದಕ್ಕೆ ರಾಜ್ಯಸಭಾ ಸದಸ್ಯರ ಅನುದಾನ ಮತ್ತು ವಿಧಾನ ಪರಿಷತ್‍ರ ನಿಧಿಯಲ್ಲಿ 2.5 ಕೋಟಿ ನೀಡಲಾಗಿದೆ, ಒಟ್ಟು ರೂ.3.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಶಾಲೆ ನಿರ್ಮಿಸಿದ್ದು ಕಂಪ್ಯೂಟರ್ ಸೇರಿದಂತೆ ಇತರೆ ಉದ್ದೇಶಗಳಿಗಾಗಿ ಇಲಾಖೆಯಿಂದ ರೂ.25 ಲಕ್ಷ ಅನುದಾನ ಬಿಡುಗಡೆ ಮಾಡಬೇಕೆಂದರು.

ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ ಎಂ ಮಾತನಾಡಿ ಗ್ರಾಮದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಹಾಕಬಾರದು ಎಂದರು.

ವಿಧಾನ ಪರಿಷತ್ ಸದಸ್ಯರಾದ ಪ್ರೊ;ಎಸ್.ವಿ. ಸಂಕನೂರು, ಕೆ.ಎಸ್. ನವೀನ್, ಚಿದಾನಂದಗೌಡ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಮಾಜಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ದಿದ್ದಿಗಿ ಗ್ರಾ.ಪಂ ಅಧ್ಯಕ್ಷರಾದ ಗುತ್ಯಮ್ಮ ಸಿದ್ದಪ್ಪ, ಎಸ್‍ಡಿಎಂಸಿ ಅಧ್ಯಕ್ಷ ಪಿ.ಟಿ.ರಮೇಶ, ದಾನಿಗಳಾದ ಸ್ಪೇಸ್ ಮ್ಯಾನೇಜ್‍ಮೆಂಟ್ ಸಲ್ಯೂಷನ್ ಲಿಮಿಟೆಡ್ ಡಾ.ದಿನೇಶ್, ವೋಲ್ಲೋ ಗ್ರೂಪ್ ಜಿ.ವಿ.ರಾವ್, ಜಿ.ಪಂ.ಉಪಕಾರ್ಯದರ್ಶಿ ಕೃಷ್ಣನಾಯ್ಕ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9989346243

ದಿನದ ಸುದ್ದಿ

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Published

on

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.

ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)

ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.

ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.

ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.

ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.

ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್‌ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending