ಅಂಕಣ
ಸಿದ್ಧಾಂತ ಮತ್ತು ಪತ್ರಿಕೋದ್ಯಮ
- ಹರ್ಷಕುಮಾರ್ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್
ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು ಪತ್ರಕರ್ತರು ನಿಮ್ಮ ರೀತಿ ಯೋಚನೆ ಮಾಡೋದಕ್ಕೆ ಆಗಲ್ಲ. ನಾವು ಯಾವತ್ತೂ ಯಾವುದೇ ಸಿದ್ಧಾಂತಕ್ಕೆ ವಾಲಿಕೊಳ್ಳದೇ ತಟಸ್ಥತೆ ಕಾಪಾಡಬೇಕಾಗುತ್ತದೆʼ ಎಂದು ಹೇಳಿದರು. ʼಅವರ ಜೊತೆ ನಾನು ವಾದಿಸಿದೆ.
ಸರ್, ಸುಳ್ಳನ್ನೇ ಬಂಡವಾಳ ಮಾಡಿಕೊಂಡ ಸಿದ್ಧಾಂತಗಳು ರಾರಾಜಿಸುವಾಗ ಸತ್ಯವನ್ನು ಹುಡುಕಲು ಸಹ ಸಿದ್ಧಾಂತದ ಸಹಾಯ ಬೇಕಾಗುತ್ತದೆ. ಯಾವ ವ್ಯಕ್ತಿಯೂ ಸಿದ್ಧಾಂತದ ಹೊರಗಾಗಿ ಇರಲು ಸಾಧ್ಯವಿಲ್ಲ. ನನಗೆ ಸಿದ್ದಾಂತವೇ ಇಲ್ಲ ಎನ್ನುವ ವ್ಯಕ್ತಿಯನ್ನು ಕೂಡಾ ಅವನಿಗೆ ತಿಳಿದೋ ತಿಳಿಯದೆಯೋ ಒಂದಲ್ಲಾ ಒಂದು ಸಿದ್ದಾಂತ ಇಲ್ಲವೇ ಹಲವು ಸಿದ್ಧಾಂತಗಳು ನಿರ್ದೇಶಿಸುತ್ತಿರುತ್ತವಲ್ಲ.. ʼ ಎಂದ ನನ್ನ ಮಾತಿಗೆ ನಮಗೆ ಪತ್ರಕರ್ತರಿಗೆ ಹಾಗೆ ಯೋಚಿಸಲು ಬರುವುದಿಲ್ಲ. ನೀವು ಎಡ ಪಂಥ ಅಂತೀರಿ, ಅವರು ಬಲಪಂಥ ಅಂತಾರೆ, ನಾವು ಇವೆರಡರ ನಡುವೆ ಸತ್ಯ ಹುಡುಕ್ತೀವಿʼ ಎಂದೆಲ್ಲಾ ಹೇಳಿದರು. ಕೊನೆಗೆ ಯಾರೂ ರಾಜಿಯಾಗಲಿಲ್ಲ.
ಇದಾಗಿ ಹದಿನೈದು ವರ್ಷಗಳ ನಂತರ, 2019ರಲ್ಲಿ ಅದೇ ಪತ್ರಕರ್ತ ಸ್ನೇಹಿತರು ನಮ್ಮ ಜೊತೆ ಕೆಲಸ ಮಾಡುತ್ತಿದ್ದರು. ಅವರು ನರೇಂದ್ರ ಮೋದಿ ಸರ್ಕಾರದ ಆರ್ಥಿಕ ವಂಚನೆಗಳನ್ನು ಅದ್ಭುತ ರೀತಿಯಲ್ಲಿ ಅಂಕಿಅಂಶಗಳ ಸಮೇತ ಬಯಲು ಮಾಡುತ್ತಿದ್ದುದು ಕಂಡು ನನಗೆ ಅಚ್ಚರಿ ಮತ್ತು ಸಂತೋಷವಾಗಿತ್ತು. ಅಂದು ಅವರು ನಿಜಕ್ಕೂ ಸತ್ಯದ ಪರವಾಗಿದ್ದರು. ಆದರೆ ಅವರ ಬರೆಹಗಳನ್ನು ಯಾರಾದರೂ ಬಲಪಂಥೀಯರು ಓದಿದರೆ ಅವರಿಗೆ ಖಂಡಿತಾ ಇವರು ʼಎಡಪಂಥೀಯ ಸಿದ್ಧಾಂತಿʼ, ʼನಗರ ನಕ್ಸಲ್ʼ ಎಂದೆಲ್ಲಾ ಸುಲಭವಾಗಿ ಹಣೆಪಟ್ಟಿ ಕಟ್ಟಬಹುದಿತ್ತು. ಆದರೆ ಆ ಪತ್ರಕರ್ತ ಸ್ನೇಹಿತರು ನಿಜಕ್ಕೂ ಈ ದೇಶದ ಭವಿಷ್ಯದ ಬಗ್ಗೆ ತುಂಬಾ ಆತಂಕಗೊಂಡು, ಕಾಳಜಿಯಿಂದ ಕೆಲಸ ಮಾಡುತ್ತಿದ್ದರು. ಕೊನೆಗೆ ಅವರಿಗೂ ಸಹ ಅವರು ಹಿಂದೆ ಹೇಳಿದ್ದ ರೀತಿಯಲ್ಲಿ ತಟಸ್ಥವಾಗಿ ಪತ್ರಿಕೋದ್ಯಮ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವಾಗಿರಬಹುದು ಎಂದುಕೊಂಡೆ. ಹೌದು ಪತ್ರಕತ್ರರಾದವರು ಮಾಡಲು ಇರುವ ಬಹಳ ಕೆಲಸಗಳ ನಡುವೆಯೂ ಅವರು ಅದ್ಯತೆಯನ್ನು ಗುರುತಿಸಿಕೊಂಡಿದ್ದರು.
ಪತ್ರಿಕೋದ್ಯಮದ ಬಗ್ಗೆ ಮಾತಾಡುವಾಗ ನಾವು ಒಂದು ಪ್ರಾಥಮಿಕ ಸಂಗತಿಯನ್ನು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ ಪತ್ರಿಕೋದ್ಯಮ ಆರಂಭವಾದ ಸಂದರ್ಭದಲ್ಲಿ ಯಾವೆಲ್ಲಾ ಭಾರತೀಯರು ಪತ್ರಿಕೆಗಳನ್ನು ಹೊರತರುತ್ತಿದ್ದರೋ ಅವರೆಲ್ಲರೂ ಕಟು ಸಿದ್ಧಾಂತಿಗಳಾಗಿದ್ದರು. ಸಾಮ್ರಾಜ್ಯವಾದದ ವಿರುದ್ಧದ ಸಿದ್ದಾಂತ ಅವರೆಲ್ಲರನ್ನು ಮುನ್ನಡೆಸುತ್ತಿತ್ತು. ಬಹುತೇಕ ಅವರೆಲ್ಲರೂ ಸ್ವಾತಂತ್ರ್ಯ ಹೋರಾಟಗಾರರು ಇಲ್ಲವೇ ಸ್ವಾಭಿಮಾನ ಚಳವಳಿಯ ಹೋರಾಟಗಾರರು, ನಾಯಕರು ಆಗಿದ್ದರು. ಅಂತಹ ಸ್ಪಷ್ಟ ಸೈದ್ಧಾಂತಿಕ ಬುನಾದಿಯಿಟ್ಟುಕೊಂಡು ಅವರೆಲ್ಲಾ ಬ್ರಿಟಿಷರ ವಿರುದ್ಧ ಪತ್ರಿಕೋದ್ಯಮ ನಡೆಸದಿದ್ದರೆ ಈ ದೇಶದ ಪತ್ರಿಕೋದ್ಯಮದ ಇತಿಹಾಸ ಅತ್ಯಂತ ಟೊಳ್ಳಾದ, ಬೂಸಾ ಇತಿಹಾಸವಾಗುತ್ತಿತ್ತು.
ಕೆಲ ಬ್ರಿಟಿಷ್ ಪತ್ರಕರ್ತರು ಹೇಗೆ ಬ್ರಿಟಿಷ್ ಅಧಿಕಾರಿಗಳ ಬೆಡ್ ರೂಮ್ ಸ್ಟೋರಿಗಳನ್ನು ಚಪ್ಪರಿಸಿಕೊಂಡು ಅದನ್ನೇ ಪತ್ರಿಕೋದ್ಯಮ ಎಂದು ಬೀಗುತ್ತಿದ್ದರೋ ಅಷ್ಟರಲ್ಲೇ ಭಾರತೀಯ ಪತ್ರಿಕೋದ್ಯಮ ಉಳಿದುಬಿಡುತ್ತಿತ್ತು. ಆದರೆ ಹೀಗೆ ಆಗಲು ಬಿಡದೇ ಉದಾತ್ತ ಧ್ಯೇಯಗಳ ಮೂಲಕ ದೇಶದ ಪತ್ರಿಕೋದ್ಯಮ ಬೆಳೆಸಿದ 19ನೆಯ ಶತಮಾನದ ಅಂತಹ ಧೀಮಂತ ಪತ್ರಕರ್ತರು ಹಲವರು. ಸುರೇಂದ್ರ ನಾಥ್ ಬ್ಯಾನರ್ಜಿ (ಬೆಂಗಾಲಿ ಪತ್ರಿಕೆ- 1879) ಪತ್ರಕರ್ತರಾಗಿ ಕೆಲಸ ಮಾಡುತ್ತಲೇ ಸತ್ಯ ಹೇಳಿದ ಕಾರಣಕ್ಕೆ ಬ್ರಿಟಿಷ್ ಸರ್ಕಾರ ಅವರನ್ನು ವರ್ನಾಕ್ಯುಲರ್ ಪ್ರೆಸ್ ಕಾಯ್ದೆಯ ಅಡಿ ಜೈಲಿಗಟ್ಟಿತ್ತು. ಸಂವಾದ ಕೌಮುದಿ ಎಂಬ ಪತ್ರಿಕೆ ನಡೆಸುತ್ತಿದ್ದ ರಾಜಾರಾಮ ಮೋಹನ್ ರಾಯ್ ಒಬ್ಬ ಸ್ಪಷ್ಟ ವಿಚಾರವಾದಿಯಾಗಿದ್ದರು.
ಅವರು ಈ ದೇಶದ ಅನಿಷ್ಟಗಳ ಕುರಿತೇ ತಮ್ಮ ಪತ್ರಿಕೆಯಲ್ಲಿ ಬರೆಯುತ್ತಾ ಹೋದರು. ಇದೇ ಕೆಲಸವನ್ನು ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ ಆರಂಭಿಸಿದ ಜಂಬೇಕರ್ ಮಾಡಿದರು, ಅವರು ತಮ್ಮ ದರ್ಪಣ್ ಪತ್ರಿಕೆಯ ಮೂಲಕ ಸಾಮಾಜಿಕ ಅನಿಷ್ಟಗಳು ಕುರಿತು ಜಾಗೃತಿ ಮೂಡಿಸಿದರು- ಇವರನ್ನು ಮರಾಠಿ ಪತ್ರಿಕೋದ್ಯಮದ ಪಿತಾಮಹ ಎಂದು ಕರೆಯಲಾಗುತ್ತದೆ. ಬಂಗಾಳದಲ್ಲಿ ಹರೀಶ್ಚಂದ್ರ ರಾಯ್ ಎಂಬುವವರು ಬಂಗದರ್ಶನ್ ಎಂಬ ಪತ್ರಿಕೆ ತಂದರು; ಗುಜರಾತಿಯಲ್ಲಿ ʼಬಾಂಬೆ ಸಮಾಚಾರ್ʼ ಪತ್ರಿಕೆ ಆರಂಭಿಸಿದ ಫರ್ದುನ್ಜಿ ಮರ್ಜ್ ಬಾನ್ ಎಂಬುವವರು ಸಹ ಪತ್ರಿಕೆಯ ಮೂಲಕ ಸಮಾಜ ಸುಧಾರಣೆಗೆ ಒತ್ತು ಕೊಟ್ಟರು. ಇನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಬಾಲಗಂಗಾಧರ ತಿಲಕ್ ಕೇಸರಿ ಮತ್ತು ಮರಾಟಾ ಪತ್ರಿಕೆ ಹೊರಡಿಸುತ್ತಿದ್ದರು, ಗಾಂದೀಜಿಯವರು ಆಫ್ರಿಕಾದಲ್ಲಿದ್ದಾಗಲೇ ಇಂಡಿಯನ್ ಒಪಿನಿಯನ್ ಪತ್ರಿಕೆ ನಡೆಸುತ್ತಿದ್ದರೆ, ಭಾರತಕ್ಕೆ ಬಂದ ಮೇಲೆ ಯಂಗ್ ಇಂಡಿಯಾ ಮತ್ತು ಹರಿಜನ್ ಎಂಬ ಪತ್ರಿಕೆಗಳನ್ನು ಹೊರತಂದರು,
ಸುಭಾಷ್ ಚಂದ್ರ ಬೋಸ್ ಅವರು ಸ್ವರಾಜ್ ಪತ್ರಿಕೆಯ ಸಂಪಾದಕರಾಗಿದ್ದರು, ಲಾಲಾ ಲಜಪತ್ ರಾಯ್ ಅವರು ದ ಟ್ರಿಬ್ಯೂನ್ ಎಂಬ ಇಂಗ್ಲಿಷ್ ಪತ್ರಿಕೆ ತಂದರು, ಜೊತೆಗೆ ವಂದೆ ಮಾತರಂ ಎಂಬ ಉರ್ದು ಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು- ಇವುಗಳ ಮೂಲಕ ಸ್ವದೇಶಿ ಚಿಂತನೆಯನ್ನು ಅಥವಾ ಸಿದ್ಧಾಂತವನ್ನು ಪ್ರಚುರಪಡಿಸಿದರು, ಹೋಂರೂಲ್ ಚಳವಳಿಯ ಮುಂದಾಳು ಅನಿಬೆಸೆಂಟ್ ಅವರು ನ್ಯೂ ಇಂಡಿಯಾ ಪತ್ರಿಕೆ ತಂದರು, ಇನ್ನು ಮದನ್ ಮೋಹನ್ ಮಾಳವೀಯ ಅವರು ಮೋತಿಲಾಲ್ ನೆಹರೂ ಜೊತೆ ಸೇರಿಕೊಂಡು ದ ಲೀಡರ್ ಎಂಬ ಪತ್ರಿಕೆ ತಂದರೆ, ನಂತರ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯನ್ನೂ ಪುನರುಜ್ಜೀವಗೊಳಿಸಿದರು. ಇನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ʼಅಸ್ಪೃಶ್ಯರಿಗೆ ಈ ದೇಶದಲ್ಲಿ ಪತ್ರಿಕೆಯಿಲ್ಲʼ ಎಂದು ಘೋಷಿಸಿ ಮೊದಲಿಗೆ ಶಾಹು ಮಹಾರಾಜರ ಬೆಂಬಲದಿಂದ ಮೂಕನಾಯಕ ಪತ್ರಿಕೆ (1920) ತಂದರು; ನಂತರ ಬಹಿಷ್ಕೃತ ಭಾರತ (1927), ನಂತರ ಸಮತಾ (1928), ನಂತರ ಜನತಾ (1930) ಹಾಗೂ ಪ್ರಬುದ್ಧ ಭಾರತ (1956) ಪತ್ರಿಕೆಗಳನ್ನು ಹೊರಡಿಸಿ ನಿರಂತರವಾಗಿ ಅವುಗಳಲ್ಲಿ ಬರೆಯುತ್ತಾ ತಾವೊಬ್ಬ ಧೀಮಂತ ಪತ್ರಕರ್ತ ಎಂಬುದನ್ನೂ ನಿರೂಪಿಸಿದ್ದರು.
ಇವರನ್ನೆಲ್ಲಾ ಹೊರಗಿಟ್ಟು ಕೇವಲ ಬ್ರಿಟಿಷರು ತಂದ ಬೆಂಗಾಲ್ ಗೆಜೆಟ್ ನಂತವುಗಳನ್ನು ಮಾತ್ರವೇ ಭಾರತದ ಪತ್ರಿಕೋದ್ಯಮದ ಇತಿಹಾಸ ಎಂದು ಹೇಳಲು ಬರುತ್ತದೆಯೇ? ಈ ದೇಶದ ಪತ್ರಿಕೋದ್ಯಮದ ಇತಿಹಾಸದ ಸೈದ್ಧಾಂತಿಕ ಅಡಿಪಾಯ ಅತ್ಯಂತ ಭದ್ರವಾಗಿತ್ತು ಎಂಬುದಕ್ಕೆ ಇವೆಲ್ಲಾ ಸಾಕ್ಷಿಯಲ್ಲವೆ? ಅಲ್ಲಿ ಎಡಬಿಡಂಗಿತನಕ್ಕೆ, ಸೊ ಕಾಲ್ಡ್ ತಟಸ್ಥತೆಗೆ ಯಾವುದೇ ಅವಕಾಶವಿರಲಿಲ್ಲ. ಈ ದೇಶವನ್ನು ಕಾಡುತ್ತಿದ್ದ ಸಾಮ್ರಾಜ್ಯಶಾಹಿ ಮತ್ತು ಬ್ರಾಹ್ಮಣಶಾಹಿ ಶಕ್ತಿಗಳನ್ನು ನೇರವಾಗಿ ಎದುರಿಸಿಯೇ ಭಾರತದ ಪತ್ರಿಕೋದ್ಯಮ ನಡೆದುಕೊಂಡುಬಂದಿದೆ ಎಂಬುದಕ್ಕೆ ಮೇಲಿನ ಉದಾಹರಣೆಗಳೇ ಸಾಕ್ಷಿ.
ಸ್ವಾತಂತ್ರ್ಯಾನಂತರದಲ್ಲಿ, ನಮ್ಮ ಕರ್ನಾಟಕದಲ್ಲೇ ನಾವು ಯಾರನ್ನೆಲ್ಲಾ ಇಂದು ಧೀಮಂತ ಪತ್ರಕರ್ತರೆಂದು ಪರಿಗಣಿಸಿದ್ದೇವೆಯೋ, ಯಾರನ್ನೆಲ್ಲಾ ಆದರ್ಶ ಎಂದು ನೋಡುತ್ತೇವೆಯೋ ಅವರೆಲ್ಲರೂ ಅತ್ಯಂತ ಸ್ಪಷ್ಟ ಮತ್ತು ದೃಢವಾದ ಸಿದ್ಧಾಂತಿಗಳೇ ಆಗಿದ್ದರು ಎಂಬುದನ್ನು ಮರೆಯಬಾರದು. ಕರ್ನಾಟಕದ ಪತ್ರಿಕೋದ್ಯಮಕ್ಕೇ ಹೊಸ ಮೆರಗು ತಂದು ಸಂಚಲನ ಮೂಡಿಸಿದ ಪಿ. ಲಂಕೇಶ್ ಅವರು ಕಡಿಮೆ ಸಿದ್ಧಾಂತಿಯೇ? ಸ್ಪಷ್ಟ ಸೈದ್ಧಾಂತಿಕ ತಳಹದಿಯ ಪತ್ರಿಕೋದ್ಯಮವೇ ಅವರ ಆಕ್ಟಿವಿಸಂ ಆಗಿತ್ತು ಮಾತ್ರವಲ್ಲ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ರಾಜಕೀಯ ಬದಲಾವಣೆಯನ್ನೂ ಮಾಡಲು ಸಾಧ್ಯ ಎಂದು ಪಿ ಲಂಕೇಶ್ ಒಂದು ಮಾದರಿಯನ್ನೇ ಸೃಷ್ಟಿಸಿದರು. ಅದು ಸಾಧ್ಯವಾಗಿದ್ದೇ ಅವರ ಕಟಿಬದ್ಧ ಸೈದ್ಧಾಂತಿಕ ನಿಲುವಿನಿಂದ.
ನಾಡು ಕಂಡ ಮತ್ತೊಬ್ಬ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿ ಕೂಡಾ ಗಟ್ಟಿ ತಾತ್ವಿಕ ನಿಲುವುಗಳ ಮೂಲಕ ನಾಡಿನ ಜನರನ್ನು ತಲುಪಿದರು. ಇನ್ನು 70-80ರ ದಶಕಗಳಲ್ಲಿ ಭಾರತೀಯ ಪತ್ರಿಕೋದ್ಯಮದ ಧೀಮಂತ ಪರಂಪರೆಯಲ್ಲಿ ಸಾಗಿದ ಹಲವಾರು ಕನ್ನಡ ಪತ್ರಿಕೆಗಳಿದ್ದವು- ಸುದ್ದಿ ಸಂಗಾತಿ, ಶೂದ್ರ, ಪಂಚಮ, ಸಮುದಾಯ, ಸಂಕ್ರಮಣ ಮುಂತಾದ ನಿಯತಕಾಲಿಕೆಗಳು ಕನ್ನಡಿಗರ ಅರಿವಿನ ವಿಸ್ತರಣೆಯಲ್ಲಿ ಕಡಿಮೆ ಕೆಲಸ ಮಾಡಿವೆಯೇ? ಹಾಗಾದರೆ ಇವೆಲ್ಲವೂ ಖಚಿತ ಸೈದ್ದಾಂತಿಕತೆಯಿಂದಲೇ ನಡೆಯಲಿಲ್ಲವೇ?
ಇನ್ನು ಕಳೆದ ಕೆಲವು ದಶಕಗಳಲ್ಲಿ, ಅಗ್ನಿ, ಹಾಯ್ ಬೆಂಗಳೂರು, ಗೌರಿ ಲಂಕೇಶ್ ವಾರಪತ್ರಿಗಳೂ ತಮ್ಮ ಛಾಪು ಮೂಡಿಸಿದವು. ಪಿ ಲಂಕೇಶರ ಸ್ಪೂರ್ತಿಯಲ್ಲೇ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ಅನಾವರಣಗೊಳಿಸಿದವು. ಇದ್ದುದರಲ್ಲಿ ರವಿ ಬೆಳಗರೆ ಎಡಬಿಡಂಗಿಯಾಗಿ ಕ್ರೈಂ, ಸೆಕ್ಸ್ ಗಳನ್ನ ಅಸ್ತ್ರವಾಗಿಸಿಕೊಂಡು ಟ್ಯಾಬ್ಲಾಯ್ಡ್ ಪತ್ರಿಕೋದ್ಯಮವನ್ನು ಹಳ್ಳ ಹಿಡಿಸಿದರೂ ಹಾಯ್ ಬೆಂಗಳೂರು ಸಹ ಅನೇಕ ಬ್ರಷ್ಟಾಚಾರ ಹಗರಣಗಳನ್ನು ಬಯಲು ಮಾಡಿದ್ದು ಸತ್ಯ.
ಯಾವನ್ನು ನಾವು ದಿನಪತ್ರಿಕೆಗಳು ಅಥವಾ ವೃತ್ತ ಪತ್ರಿಕೆಗಳು ಎನ್ನುತ್ತೇವೆಯೋ ಇವುಗಳ ಆದ್ಯತೆ ದಿನನಿತ್ಯದ ಸುದ್ದಿಗಳನ್ನು ಜನರಿಗೆ ತಲುಪುವುದು ಮಾತ್ರವಾಗಿದ್ದ ಕಾರಣ ಬಹಳ ಪತ್ರಿಕೆಗಳಲ್ಲಿ ಸೈದ್ಧಾಂತಿಕತೆ ದೊಡ್ಡ ವಿಷಯವಾಗಲಿಲ್ಲ. ಆದರೆ ಅಂತಹ ಕಡೆಗಳಲ್ಲಿ ಸಹ ದೊಡ್ಡ ದೊಡ್ಡ ಸಿದ್ಧಾಂತಿಗಳು ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದ್ದರು ಮತ್ತು ತಮ್ಮ ಖಚಿತ ಅಭಿಪ್ರಾಯಗಳನ್ನು ಆ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾ ಬಂದಿದ್ದರೆಂಬುದನ್ನು ನಾವು ಮರೆಯಕೂಡದು.
ಈಗ ಹೇಳಿ, ನಮ್ಮ ಪತ್ರಿಕೋದ್ಯಮಕ್ಕೆ ಸಿದ್ಧಾಂತ ಬೇಡವೆ, ಪತ್ರಕರ್ತರಾಗಿರುವವರು ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬಾರದೆ? ಆಕ್ಟಿವಿಸ್ಟುಗಳು ಪತ್ರಕರ್ತರಾಗುವುದು ಅಪರಾಧವೆ? ಪತ್ರಿಕೋದ್ಯಮ ಆಕ್ಟಿವಿಸಂಗೆ ಪೂರಕವಾಗಿರಬಾರದೆ? ಇಂದು ಬ್ರಾಹ್ಮಣ್ಯದ ದಿಗ್ವಿಜಯ ಮತ್ತೊಮ್ಮೆ ನಿಜವಾಗುವ ಕರಾಳ ಛಾಯೆ ಇಡೀ ದೇಶವನ್ನು ಆವರಿಸಿಕೊಂಡಿರುವಾಗ, ಬಾಬಾಸಾಹೇಬರು ಎಚ್ಚರಿಸಿದ್ದ ಆ ʼಪ್ರತಿಕ್ರಾಂತಿʼ ತನ್ನ ಕಬಂಧಬಾಹುಗಳನ್ನು ಚಾಚಿಕೊಂಡ ಎಲ್ಲವನ್ನೂ ನೊಣೆಯುತ್ತಿರುವಾಗ, ಅಪರಾಧವೇ ಅಧಿಕಾರವಾಗಿ ದೇಶದ ಪ್ರಮುಖ ಸಂಸ್ಥೆಗಳೆಲ್ಲವನ್ನೂ ನುಂಗಿ ನೀರುಕುಡಿದು ತಮ್ಮ ಅಂಕೆಯಲ್ಲಿ ತಂದುಕೊಂಡು ಇಡೀ ದೇಶದ ಜನರಿಗೆ ಕರಾಳತೆ ದರ್ಶನ ಮಾಡುತ್ತಾ ಭ್ರಷ್ಟಾಚಾರದ ವ್ಯಾಖ್ಯಾನವನ್ನೇ ತಿರುಗುಮರುಗು ಮಾಡುತ್ತಿರುವಾಗ ಸೊ ಕಾಲ್ಡ್ ತಟಸ್ಥತೆಯ ಬದನೇಕಾಯಿಯನ್ನು ನೆಚ್ಚಿಕೊಳ್ಳದೇ ನಿರ್ಧಾರಿತ ಜನಾಂದೋಲನಗಳಿಗೆ ಪೂರಕವಾಗಿ ಪತ್ರಿಕೋದ್ಯಮ ಮತ್ತು ಪತ್ರಕರ್ತರಾದವರು ಜೊತೆಗೂಡುವುದು ಬೇಡವೇ?
‘ಬೇಡ’ ಎಂಬ ಅಭಿಪ್ರಾಯ ನಿಮ್ಮದಾಗಿದ್ದರೆ ನಿಮ್ಮ ಬಳಿ ಹೇಳಲು ನನಗೆ ಏನೂ ಉಳಿದಿಲ್ಲ. ನೀವು ನಿಮ್ಮದೇ ಸುಖಾಸನದಲ್ಲಿ ನೆಮ್ಮದಿಯಾಗಿ ಪವಡಿಸಬಹುದು, ನನಗೇನೂ ಅಭ್ಯಂತರವಿಲ್ಲ. (ಬರಹ- ಹರ್ಷಕುಮಾರ್ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
ವಿದ್ಯಾನಾಯ್ಕ್ ಅರೇಹಳ್ಳಿ
ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.
ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.
ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.
ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.
ನಾಯಕ ನಟನಾಗಿ ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.
ಇನ್ನು 2022ರಲ್ಲಿ ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪರಿಶ್ರಮ ಮತ್ತು ಫಿಟ್ನೆಸ್
ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.
ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್
ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ
ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.
ಬಂಜಾರ ಹವೇಲಿಯ ಹರಿಕಾರ
ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.
ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.
ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ
ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.
ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ
ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.
ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ
ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.
ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ
ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.
ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ
ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.
ಭವಿಷ್ಯದ ಆಶಯ
ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ6 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ1 hour agoದಾವಣಗೆರೆ | ಇಂದು ಕರೆಂಟ್ ಇರಲ್ಲ


