ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ3 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ1 day agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

