ದಿನದ ಸುದ್ದಿ
‘ಮತದಾರ ದೇವರು’ ಎಂದ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇರು ನಟ ಡಾ.ರಾಜ್ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ಎಂದರು.
ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.
ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.
ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.
ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.
ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.
ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.
ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ
ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.
ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.
ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.
ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.
ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.
ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.
ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.
ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.
ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.
ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.
ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.
ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.
ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.. ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ3 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ2 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ4 hours agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 hour agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

