ದಿನದ ಸುದ್ದಿ
ದಾವಣಗೆರೆಯಲ್ಲಿ ಇಂದು ‘ಕಸಾಪ ಉಳಿಸಿ ಆಂದೋಲನ’ ಸಭೆ : ಶಿವಕುಮಾರಸ್ವಾಮಿ ಕುರ್ಕಿ
ದಾವಣಗೆರೆಯ ಕಸಾಪ ಆಜೀವ ಸದಸ್ಯರ ಸಮಾನ ಮನಸ್ಕರ ವೇದಿಕೆಯು 11 ಮಾರ್ಚ್ 2018 ರಂದು ಇಲ್ಲಿನ ಕನ್ನಡ ಭವನದ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ಹಾಲಿ ಇರುವ ಬೈಲಾವನ್ನು ತಿದ್ದುಪಡಿ ಮಾಡಿಕೊಂಡ ಕಸಾಪ ಅಧ್ಯಕ್ಷರ ಅಧಿಕಾರಾವಧಿಯನ್ನು ತಂತಾನೆ ಹೆಚ್ಚಿಸಿಕೊಳ್ಳುವುದನ್ನು ವಿರೋಧಿಸಿದ್ದೆವು.
ಅಲ್ಲದೆ ನಾವು ಹೈಕೋರ್ಟ್ ಮೆಟ್ಟಿಲೇರಿ ಬಹುದೂರದ ದ.ಕ. ಜಿಲ್ಲೆಯ ಪುಟ್ಟಗ್ರಾಮ ಕೋಟದಲ್ಲಿ ನಡೆವ ಸಭೆಗೆ ತಡೆಯಾಜ್ಞೆ ತರಲು ಲಾಯರ್ ಬಳ್ಳಾರಿ ರೇವಣ್ಣನವರ ವಕಾಲತ್ತಿನ ಮೂಲಕ ಪ್ರಯತ್ನಿಸಿದ್ದೆವು. ಆಗ ಸಮಯದ ಅಭಾವದಿಂದ ಈ ಕೆಲಸ ಆಗಿರಲಿಲ್ಲ. ಆದರೆ “ಸಹಕಾರಿ ಸಂಘಸಂಸ್ಥೆಗಳ ಉಪ ನೋಂದಣಾಧಿಕಾರಿಗಳಿಗೆ ತಿದ್ದುಪಡಿಮಾಡದಿರಲು ಅರ್ಜಿ ಹಾಕಬಹುದು ” ಎಂಬ ಸಲಹೆಯನ್ನು ಹೈಕೋರ್ಟ್ ಸೂಚಿಸಿತ್ತು.
ಆದ ಕಾರಣ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯಿಂದ ಈ ಕುರಿತ ಅರ್ಜಿಯೊಂದಿಗೆ ನಾವು ಹೈಕೋರ್ಟ್ಗೆ ನೀಡಿದ ಎಲ್ಲಾ ದಾಖಲೆಗಳನ್ನೂ ಬೆಂಗಳೂರು ಮಲ್ಲೇಶ್ವರಂ ಸಹಕಾರ ಭವನದಲ್ಲಿರುವ ಈ ಸಂಘ ಸಂಸ್ಥೆಗಳ ಉಪನೋಂದಾವಣಾಧಿಕಾರಿಗಳ ಕಡೆ ನೀಡಿದ್ದೆವು.
ಜುಲೈ 9ರಂದು ಬೆಂಗಳೂರು ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಡಾ.ಕೋ.ವೆಂ.ರಾಮಕೃಷ್ಣೇಗೌಡರು, ಧಾರವಾಡದ ಲೇಖಕಿ ಹೊರಾಟಗಾರ್ತಿ ಡಾ.ಹನುಮಾಕ್ಷಿ ಗೋಗಿ ಹಾಗೂ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯ ಪರವಾಗಿ ಸಂಚಾಲಕರಾದ ಆರ್. ಶಿವಕುಮಾರಸ್ವಾಮಿ ಕುರ್ಕಿ ಎಂಬ ನಾನು ಇಲ್ಲಿನ ಉಪನಿಬಂಧಕರ ನ್ಯಾಯಾಲಯಕ್ಕೆ ಹಾಜರಾಗಿದ್ದೆವು.
ಆ ವಿಚಾರಣೆಯಲ್ಲಿ ಕಸಾಪ ಅಧ್ಯಕ್ಷರಾದ ಡಾ.ಮನುಬಳಿಗಾರ್ ಹಾಗೂ ಗೌ.ಕಾರ್ಯದರ್ಶಿಗಳು ಉಪಸ್ಥಿತರಿದ್ದು ಮತ್ತೆ ತಮ್ಮ ಅದೇ ಹಳೇ ರಾಗದಲ್ಲಿ ” ಅಧ್ಯಕ್ಷರ ಅಧಿಕಾರ ಅವಧಿಯನ್ನು 3 ರ ಬದಲು 5 ವರ್ಷ ಮಾಡಿಕೊಳ್ಳಲು ಅವಕಾಶ ನೀಡಲು ಕೇಳಿಕೊಂಡರು. ಅಲ್ಲದೆ ಈ ನಿಬಂಧನೆಗಳನ್ನು ಇವತ್ತೇ ಈಗಲೇ ಅನುಮೋದಿಸುವಂತೆ , ತಮ್ಮ ಅಧಿಕಾರ ಅವಧಿಯಿಂದಲೇ ಜಾರಿಯಾಗುವಂತೆ ಕೋಟಾದಲ್ಲಿ ನಡೆಸಿದ ಸಭೆಯ ನಿಬಂಧನೆಗಳನ್ನು ಅನುಮೋದಿಸಬೇಕಾಗಿ ಹಟಕ್ಕೆ ಬಿದ್ದವರಂತೆ ಕೇಳಿಕೊಂಡರು.
ಆಗ ನಾವು ಮೂವರೂ ಸೂಕ್ತ ಕಾರಣಗಳನ್ನು ನೀಡಿ ಅದನ್ನು ಬಲವಾಗಿ ವಿರೋಧಿಸಿದೆವು. ಚುನಾವಣೆ ನಡೆದುದು 3 ವರ್ಷಗಳ ಕಾಲಾವಧಿಗಾಗಿಯೇ ವಿನಃ 5 ವರ್ಷಗಳಿಗಲ್ಲ. ಅಲ್ಲದೆ ನ್ಶಾ.ಶ್ಯಾಮಸಂದರ್ ಆಯೋಗ ಹಿಂದೊಮ್ಮೆ ಹಂ.ಪ.ನಾ. ಅವರು ತಮ್ಮ ಆಧಿಕಾರ ಅವಧಿ ವಿಸ್ತರೀಕರಣ ಮಾಡಿಕೊಳ್ಳಲು ಇವರಂತೆಯೇ ಮುಂದಾದಾಗ ಅದನ್ನು ತಿರಸ್ಕರಿಸಿತ್ತು. ಅಗ ಅವರು ತಿದ್ದಿಕೊಂಡಿದ್ದ 5 ರ ಬದಲು 3 ವರ್ಷವೇ ಇರುವಂತೆ ಸರಕಾರ ನೇಮಿಸಿದ ಆಯೋಗ ತಾಕೀತು ಮಾಡಿತ್ತು’ ಎಂಬ ವಿಷಯವನ್ನು ಕೋರ್ಟ್ ಗಮನಕ್ಕೆ ತಂದೆವು.
ಆಗ ಸ್ಪಂದಿಸಿದ ಉಪನಿಬಂಧಕರು ಅದನ್ನು ಆಸಕ್ತಿಯಿಂದ ಆಲಿಸಿದರು. ಅಲ್ಲದೆ ಬಳಿಗಾರರ ವಾದವನ್ನು ಒಪ್ಪದೆ ಈ ಕುರಿತು ಮಾಹಿತಿ ಸಾಕ್ಷಿಗಳನ್ನು ತೋರಿಸಲು ನಾವು ಮೂವರಿಗೆ ಅವಕಾಶ ಕೊಟ್ಟು ಜು.20 ರಂದು ವಿಚಾರಣೆ ಮಾಡಲಾಗುವುದೆಂದು ತಿಳಿಸಿದರು.
ಕನ್ನಡ ವಿದ್ವಾಂಶರು ದಿಗ್ಗಜರು ಕವಿಪುಂಗವರು 100 ವರ್ಷಗಳ ಹಿಂದೆ ನಿಸ್ವಾರ್ಥತೆಯಿಂದ ಕಟ್ಟಿದ ಈ ಕನ್ನಡ ಸಾಹಿತ್ಯ ಹೃನ್ಮಂದಿರ ಇದೀಗ ಹಣ-ಅಧಿಕಾರ ಲಾಲಸೆ ಇರುವ ಮನುಬಳಿಗಾರ ಅವರಂತಹ ಸ್ವಾರ್ಥಪರ ಜನರಿಂದ ಪೂರ್ಣ ಕಲುಷಿತವಾಗಿದೆ.
ಇದರ ಶುದ್ಧೀಕರಣಕ್ಕಾಗಿ ಇಂದು (ಜುಲೈ12) ರ ಸಂಜೆ 6 ಗಂಟೆಗೆ ದಾವಣಗೆರೆಯ ಉದ್ಯಾನವನದ ಕಾವ್ಯ ಮಂಟಪದಲ್ಲಿ “ಕಸಾಪ ಉಳಿಸಿ” ಆಂದೋಲನ ನಡೆಸಲು ಪೂರ್ವಬಾವೀ ಸಮಾಲೋಚನಾ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕಸಾಪ ಆಜೀವ ಸದಸ್ಯರುಗಳು ಸ್ವಯಂಸ್ಫೂರ್ತಿಯಿಂದ ಪಾಲ್ಗೊಂಡು ಕಸಾಪ ಕ್ಕೆ ಬಂದಿರುವ ಈ ಕುತ್ತನ್ನು ದೂರಮಾಡಲು ಸಹಕರಿಸಲು ವಿನಂತಿ.
ಈಗಾಗಲೆ ಧಾರವಾಡ, ಬೆಂಗಳೂರು, ಮಂಗಳೂರು, ಬಳ್ಳಾರಿ, ಮೈಸೂರು, ಮಂಡ್ಯ, ಮುಂತಾದ ಕಡೆ ಆಂಧೋಲನ ನಡೆಸಲು ಹುರಿಗೊಳ್ಳುತ್ತಿದ್ದಾರೆ. ಆದ್ದರಿಂದ ಹಾಲಿ ಕಸಾಪ ಸಮಿತಿಯ ಯಾವುದೇ ಆಸೆ ಆಮಿಷ, ಹಿಂಜರಿಕೆಗೆ ಒಳಗಾಗದೆ ನಾಳೆ ಜು.12 ರ ಗುರುವಾರ ಸಂಜೆ 6.00 ಗಂಟೆಗೆ ಸರಿಯಾಗಿ ದಾವಣಗೆರೆ ವಿದ್ಯಾನಗರದ ಕಾವ್ಯಮಂಟಪ ಉದ್ಯಾನವನಕ್ಕೆ ಆಗಮಿಸಲು ಆಹ್ವಾನಿಸುತ್ತೇವೆ. ತಮ್ಮ ಆತ್ಮೀಯರೆಲ್ಲರಿಗೂ ಈ ಸಂದೇಶವನ್ನು ರವಾನಿಸಲು ವಿನಂತಿ.
ಆರ್.ಶಿವಕುಮಾರಸ್ವಾಮಿ ಕುರ್ಕಿ, ಸಂಚಾಲಕರು, ದಾವಣಗೆರೆ
ಮೊ: 8970948221

ದಿನದ ಸುದ್ದಿ
ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಅವರು, ದೇಶಭಕ್ತಿ ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬರೂ ತಮ್ಮ ಮೂಲಭೂತ ಕರ್ತವ್ಯಗಳನ್ನು ಅರಿತು, ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಅಭಿರುಚಿಗೆ ತಕ್ಕಂತೆ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದರಲ್ಲಿ ಅಡಗಿದೆ ಎಂದು ಕರೆ ನೀಡಿದರು. ಪ್ರಾಮಾಣಿಕ ಪರಿಶ್ರಮ ಮತ್ತು ಜವಾಬ್ದಾರಿಯುತ ನಾಗರಿಕತ್ವವೇ ಬಲಿಷ್ಠ ಭಾರತದ ನಿರ್ಮಾಣಕ್ಕೆ ಅಡಿಪಾಯ ಎಂದರು.
ವಿದ್ಯಾರ್ಥಿಗಳ ಮನೋಜ್ಞ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಪ್ರದರ್ಶನಗಳು ಹಾಗೂ ಶಿಸ್ತುಬದ್ಧ ಮೆರವಣಿಗೆಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ಕೊಡಿಪಾಳ್ಯ ಮತ್ತು ಕೆಂಗೇರಿಯಲ್ಲಿ 445 ಮೀಟರ್ ಇರುವ ವಿಶೇಷ ಧ್ವಜದೊಂದಿಗೆ ವಿದ್ಯಾರ್ಥಿಗಳ ಮೆರವಣಿಗೆ ಗಮನ ಸೆಳೆಯಿತು. ಶತಪ್ರತಿಶತ ಫಲಿತಾಂಶ ಸಾಧಿಸಿದ ಬೋಧಕ ಸಿಬ್ಬಂದಿಯನ್ನು ಮತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನೇರ ಪ್ರಸಾರವೂ ನಡೆಯಿತು. 2,500 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವಿಶೇಷ ಮಧ್ಯಾಹ್ನದ ಊಟ ಮತ್ತು ಸಿಹಿತಿಂಡಿ ವ್ಯವಸ್ಥೆ ಮಾಡಲಾಗಿದ್ದು, ಒಗ್ಗಟ್ಟು ಮತ್ತು ದೇಶಪ್ರೇಮದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.
ಈ ಸಂದರ್ಭದಲ್ಲಿ ವಿವಿಐಎಸ್ ನ ಅಕಾಡೆಮಿಕ್ ಅಡ್ವೈಸರ್ ಡಾ. ರಾಜೇಶ್ವರಿ ದತ್ತಾತ್ರಿ, ವಿವಿ ವಿದ್ಯಾಸಂಸ್ಥೆಯ ಡೀನ್ ಶ್ರೀ ಕಿಶೋರ್ ಕಟ್ಟ, ಪ್ರಾಂಶುಪಾಲೆ ಶ್ರೀಮತಿ ಲಕ್ಷ್ಮಿ ಟಿ.ಎನ್, ಕೆಪಿಸಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ. ಐ. ಚೆನ್ನಾರೆಡ್ಡಿ, ಸಿಬಿಎಸ್ಇ ಪ್ರಾಂಶುಪಾಲರಾದ ಪ್ರೊ. ಪ್ರಹ್ಲಾದ, ಉಪಪ್ರಾಂಶುಪಾಲರಾದ ಶ್ರೀ ಮದನ್ ರಾಜ್, ಪ್ರಾಂಶುಪಾಲರಾದ ಡಾ. ಸುರೇಶ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ22 hours agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ18 hours agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ2 hours agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

