ನೆಲದನಿ
ಬಡತನವ ಮೆಟ್ಟಿನಿಂತ ಯಕ್ಷಗಾನ ಭಾಗವತ: ಪರಮೇಶ್ವರ ನಾಯ್ಕ್ ಎಂಬ ಕಲಾದನಿ
ಭಾರತದ ಬಹುತೇಕ ಜನಪದ ಕಲೆಗಳು ತಳ ಸಮುದಾಯಗಳಿಂದಲೆ ಜೀವಂತಿಕೆಯನ್ನು ಪಡೆದುಕೊಂಡಿವೆ. ಈಗಲೂ ಈ ಕಲೆಗಳು ತನ್ನ ಜೀವಂತಿಕೆಯನ್ನು ಪಡೆದುಕೊಂಡಿರುವುದು ಬಡತನದ ಬದುಕಿನಲ್ಲಿಯೇ. ಹೀಗಾಗಿ ಬಡತನ ಹಾಗೂ ಜನಪದ ಕಲೆಗಳಿಗೆ ನಿಕಟವಾದ ಸಂಬಂಧವೊಂದು ಬಿಡದ ನಂಟಾಗಿ ಬೆಳೆದುಕೊಂಡು ಬಂದಿದೆ. ಇಂತಹ ಜಾನಪದ ಕಲೆಗಳಲ್ಲಿ ಯಕ್ಷಗಾನವು ಒಂದು ಪ್ರಮುಖ ಕಲೆಯಾಗಿ ಬೆಳೆದುಕೊಂಡು ಬಂದಿದೆ. ಇಂತಹ ಯಕ್ಷಗಾನ ಕಲೆಯನ್ನು ತಮ್ಮ ಬದುಕಿನ ಭಾಗವಾಗಿ ಮುಂದುವರೆಸಿಕೊಂಡು ಬಂದಿರುವ ಕಲಾವಿದರಲ್ಲಿ ಪರಮೇಶ್ವರ ನಾಯ್ಕರು ಒಬ್ಬರಾಗಿದ್ದಾರೆ.
ಶ್ರೀಯುತ ಪರಮೆಶ್ವರ ನಾಯ್ಕರು ಅಕ್ಟೋಬರ್ 20, 1969 ರಲ್ಲಿ ಉತ್ತರ ಕನ್ನಡದ ಮಂಕೋಡ ಎಂಬಲ್ಲಿ ಜನ್ಮತಾಳಿದರು. ಶ್ರೀ ಕೆರಿಯ ನಾಯ್ಕ ಹಾಗೂ ಶ್ರೀಮತಿ ಗೌರಿಯವರ ಸುಪುತ್ರರಾಗಿದ್ದಾರೆ. ಇವರ ತಂದೆಗೆ ಒಂಭತ್ತು ಜನ ಮಕ್ಕಳು. ಇವರಲ್ಲಿ ನಾಲ್ಕು ಜನ ಗಂಡು ಹಾಗೂ ಐದು ಜನ ಹೆಣ್ಣು ಮಕ್ಕಳು. ಪರಮೇಶ್ವರ ನಾಯ್ಕ ಅವರ ತಂದೆವರು ತಮಗಿರುವ ಅಲ್ಪ ಪ್ರಮಾಣದ ಜಮೀನಿನಲ್ಲಿ ದುಡಿದು ಜೀವನ ಸಾಗಿಸುತ್ತಿದ್ದರು. ಇವರಿಗೆ ಆಶ್ರಯವಾಗಿ ತಾಯಿ ಗೌರಿ ಅವರು ಕೂಡ ಕೂಲಿ ಜೀವನ ನಡೆಸಿ ಮಕ್ಕಳನ್ನು ಸಾಕುತ್ತಿದ್ದರು. ಆದರೆ ಇದರಿಂದ ತಮ್ಮ ಮಕ್ಕಳನ್ನು ಸಾಕುವುದು ಕಷ್ಟವಾದಾಗ ತಮ್ಮ ಹಿರಿಯ ಮಗವಾದ ಪರಮೇಶ್ವರ ನಾಯ್ಕ ಅವರನ್ನು ಮೂರನೇ ತರಗತಿಗೆ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿ, ಶ್ರೀಮಂತರ ಮನೆಯೊಂದರಲ್ಲಿ ಜೀತಕ್ಕೆ ನೇಮಿಸಲಾಗುತ್ತದೆ. ಮನೆಯಲ್ಲಿ ಸಾಕಷ್ಟು ಬಡತನದ ಕಾರಣ ತಮ್ಮ ವಿದ್ಯಾರ್ಥಿ ಜೀವನದಿಂದ ದೂರ ಸರಿದು ಧಣಿಗಳ ಮನೆಯಲ್ಲಿ ದನ ಕಾಯುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಈ ವೇಳೆಯಲ್ಲಿ ಪರಮೇಶ್ವರ ನಾಯ್ಕ ಅವರ ಅಂತರಾಳದಲ್ಲಿ ಯಕ್ಷಗಾನ ಕಲಾವಿದನೊಬ್ಬ ಮೊಳಕೆಯೊಡೆಯಲು ಪ್ರಾರಂಭಿಸುತ್ತಾನೆ. ದನ ಕರುಗಳನ್ನು ಮೇಯಿಸುವ ಕಾಯಕದ ಜೊತೆಯಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಆಸಕ್ತಿಯನ್ನು ಮೂಡಿಸಿಕೊಂಡ ಇವರು ರಾತ್ರಿಯ ವೇಳೆಯಲ್ಲಿ ತಮ್ಮ ಗ್ರಾಮದ ಸುತ್ತಮುತ್ತಲ ಊರುಗಳಲ್ಲಿ ಜರುಗುವಂತಹ ಯಕ್ಷಗಾನವನ್ನು ನೋಡುವುದಕ್ಕೆ ಹೋಗುತ್ತಿರುತ್ತಾರೆ. ಹೀಗೆ ಬೆಳೆದ ಹವ್ಯಾಸದಿಂದ ಸುಶ್ರಾವ್ಯವಾಗಿ ಭಾಗವಂತಿಕೆಯ ಹಾಡುಗಳನ್ನು ಪ್ರಯೋಗ ಮಾಡುತ್ತಾರೆ. ಇವರಲ್ಲಿ ಅಂತರ್ಗತವಾಗಿ ನೆಲೆಯೂರಿದ್ದ ಕಂಠಸಿರಿಯ ಮೂಲಕವಾಗಿ ಭಾಗವತಿಕೆ ಹಾಡುಗಳನ್ನು ಸುಂದರವಾಗಿ ಹಾಡುವುದಕ್ಕೆ ಪ್ರಯೋಗ ಮಾಡುತ್ತಾರೆ. ಪರಮೇಶ್ವರ ನಾಯ್ಕ ಅವರು ಯಾವೊಬ್ಬ ಗುರುವಿನ ಮಾರ್ಗದರ್ಶನವಿಲ್ಲದೆ ಸ್ವತಃ ಪರಿಶ್ರಮ ಹಾಗೂ ಆಸಕ್ತಯಿಂದಾಗಿ ಹಲವಾರು ಪದ್ಯಗಳನ್ನು ಕಂಠಪಾಠದ ಮೂಲಕವಾಗಿ ಕರಗತ ಮಾಡಿಕೊಳ್ಳುತ್ತಾರೆ. ಹೀಗೆ ಕಾಡುಹಕ್ಕಿಯಂತೆ ಸ್ವತಂತ್ರವಾಗಿ ಹಾಡು ಕಲಿತ ಪರಮೇಶ್ವರ ನಾಯ್ಕ ಅವರು ಸುಮಾರು ಹನ್ನೆರಡನೇ ವಯಸ್ಸಿಗೆ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೆ ಆದ ವಿದ್ವತ್ತನ್ನು ಗಳಿಸಿಕೊಳ್ಳುತ್ತಾರೆ.
ಪರಮೇಶ್ವರ ನಾಯ್ಕ್ ಅವರು ಬಾಲ್ಯದಲ್ಲಿ ತಮ್ಮ ಮನೆಯಲ್ಲಿನ ಕೌಟುಂಬಿಕ ಬಡತನದ ಕಾರಣದಿಂದಾಗಿ ಸಿದ್ಧಾಪುರದ ಮಂಜುನಾಥ ಹೆಗಡೆಯವರ ಮನೆಯಲ್ಲಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ಮಂಜುನಾಥ ಹೆಗಡೆಯವರು ಹವ್ಯಾಸಿ ಭಾಗವತರಾಗಿದ್ದು, ಸಾಕಷ್ಟು ಯಕ್ಷಗಾನಗಳಲ್ಲಿ ಪ್ರದರ್ಶನ ನೀಡಿದ್ದರು. ಇವರ ಒಡನಾಟದಿಂದ ಪರಮೇಶ್ವರ ನಾಯ್ಕ್ ಅವರು ಕೂಡ ಈ ಕಲೆಯ ಗೀಳನ್ನು ಮೈಗೂಡಿಸಿಕೊಂಡು, ಮಂಜುನಾಥ ಹೆಗಡೆಯವರೊಂದಿಗೆ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಹೀಗೆ ಯಕ್ಷಗಾನದ ಹುಚ್ಚು ಹತ್ತಿಸಿಕೊಂಡ ಪರಮೇಶ್ವರ ನಾಯ್ಕ್ ಅವರು ಪದ್ಯಗಳನ್ನು ಕಂಠಪಾಠ ಮಾಡಿಕೊಂಡು ಹಾಡುವುದಕ್ಕೆ ಪ್ರಾರಂಭಿಸಿದರು. ಮಂಜುನಾಥ ಹೆಗಡೆಯವರ ತಂದೆಯವರಾದ ತಿಮ್ಮಪ್ಪ ಹೆಗಡೆಯವರು ಕೂಡ ಹೆಸರಾಂತ ಭಾಗವತರಾಗಿದ್ದು ಹಲವಾರು ಯಕ್ಷಗಾನ ಪ್ರಸಂಗಗಳನ್ನು ಬರೆದಿದ್ದರು. ಇಂತಹ ವಾತಾವರಣದಲ್ಲಿ ಬೆಳೆದ ಪರಮೇಶ್ವರ ನಾಯ್ಕ್ ಅವರಿಗೆ ಭಾಗವತಿಕೆಯ ಪ್ರೇರಣೆ ಪ್ರಭಾವವು ಈ ದಿನಗಳಲ್ಲಿ ಉಂಟಾಯಿತು. ಈ ಸಂದರ್ಭದಲ್ಲಿ ಪರಮೇಶ್ವರ ನಾಯ್ಕ್ ಅವರಿಗೆ ಕೇವಲ ಹನ್ನೆರಡು ವರ್ಷ ವಯಸ್ಸಾಗಿತ್ತು. ಕೌಟುಂಬಿಕ ಬಡತನವು ಇವರನ್ನು ಶಾಲಾ ಶಿಕ್ಷಣದಿಂದ ವಂಚಿತಗೊಳಿಸಿದರು ಸಹ, ಕಲಾ ಶಿಕ್ಷಣವು ಇವರ ಬದುಕಿಗೆ ವರವಾಗಿ ಪರಿಣಮಿಸಿತು. ಈ ಕಲೆಯೇ ಮುಂದೆ ಇವರ ಬಡತನದ ನಿವಾರಣೆಯ ಪ್ರಮುಖ ಅಸ್ತ್ರವಾಗಿ ಸಹಯಾಸ್ತವನ್ನು ನೀಡಿತು ಎಂದರೆ ತಪ್ಪಾಗಲಾರದು.
ಪರಮೇಶ್ವರ ನಾಯ್ಕ್ರವರು ಅಲ್ಲಿ ಇಲ್ಲಿ ನಡೆಯುವ ಯಕ್ಷಗಾನದ ಪ್ರದರ್ಶನಗಳನ್ನು ನೋಡಿ, ಕೇಳಿಯೇ ಹಲವಾರು ಪ್ರಸಂಗಗಳನ್ನು ಕಂಠಪಾಠ ಮಾಡಿಕೊಂಡಿದ್ದರು. ಚಿಕ್ಕವರಿದ್ದಾಗಲೇ ಇವರಲ್ಲಿ ಒಡಮೂಡಿರುವ ಕಂಠಸಿರಿಯನ್ನು ಗಮನಿಸಿದ ಆರ್ತಿಕಟ್ಟದ ಗಜಾನನ ಸಮಿತಿಯವರು ಇವರ ಕಂಠವನ್ನು ಗಮನಿಸಿ, ಇವರಿಂದ ಯಕ್ಷಗಾನ ಪ್ರಸಂಗಗಳನ್ನು ಹಾಡಿಸಿ, ಧ್ವನಿ ಮುದ್ರಿಕೆಯಲ್ಲಿ ದಾಖಲಿಸಿದರು. ಈ ಧ್ವನಿ ಮುದ್ರಿಕೆಯನ್ನು ಅನಂತರಾಯರು ಮತ್ತು ಶ್ರೀಕಾಂತರಾಯರು ಸೇರಿಕೊಂಡು ಉಪ್ಪರಿಗೆ ಮೇಲೆ ಹೋಗಿ ಹೆಸರಾಂತ ಯಕ್ಷಗಾನ ದಿಗ್ಗಜರಾದ ಕಾಳಿಂಗ ನಾವಡರಿಗೆ ಇವರ ಕಂಠವನ್ನು ಪರಿಚಯಿಸಿದರು. ಪರಮೇಶ್ವರ ನಾಯ್ಕ್ ಅವರ ಕಂಠಸಿರಿಯನ್ನು ಗಮನಿಸಿದ ಕಾಳಿಂಗ ನಾವಡರು ಇವರನ್ನು ಮೆಚ್ಚಿಕೊಂಡರು. ಆಗ ಪರಮೇಶ್ವರ ನಾಯ್ಕ್ ಅವರು ಓದಿರುವುದು ಕೇಲವ ಮೂರನೇ ತರಗತಿ ಮಾತ್ರ, ಆದರೆ ಯಕ್ಷಗಾನದ ಮೊದಲ ವೇಷ ಎಂದರೆ ಅದು ಭಾಗವತಿಕೆ. ಇದನ್ನು ನಿಭಾಯಿಸಲಿಕ್ಕೆ ಹತ್ತನೇ ತರಗತಿಯಾದರೂ ಓದಿದ್ದರೆ ಒಳ್ಳೆಯದು ಎಂಬುದಾಗಿ ಮಾತನಾಡಿಕೊಂಡರು. ಆದರೆ ಬಾಲ ಗೋಪಾಲದಿಂದ ಒಡ್ಡೋಲಗದವರೆಗೆ ನಿರ್ವಹಿಸಲಿಕ್ಕೆ ತೊಂದರೆ ಇಲ್ಲ ಎಂಬುದಾಗಿ ತೀರ್ಮಾನಿಸಿದರು. ನಂತರದಲ್ಲಿ ಇವರ ಕಂಠ ಮತ್ತು ಇವರಿಗಿರುವ ಆಸಕ್ತಿ, ಉತ್ಸಾಹವನ್ನು ಗಮನಿಸಿ ತಮ್ಮೊಂದಿಗೆ ಮಂಡಳಿಗೆ ಬರುವುದಾಗಿ ಕೇಳಿಕೊಂಡರು. ಆಗಿನ ಸಂದರ್ಭದಲ್ಲಿ ಜೀವನ ನಡೆಸುವುದು ಕಷ್ಟಕರವಾಗಿ ಕೆಲಸಕ್ಕೆ ಸೇರಿಕೊಂಡ ಪರಮೇಶ್ವರ ನಾಯ್ಕ್ ಅವರಿಗೆ ಕೆಲಸದ ಮನೆಯನ್ನು ತೊರೆದು ಬರುವಷ್ಟು ಶಕ್ತಿ ಮತ್ತು ಸಾಮಥ್ರ್ಯವಿರಲಿಲ್ಲ. ಆದ ಕಾರಣದಿಂದಾಗಿ ತಮ್ಮ ಕಷ್ಟವನ್ನು ಹೇಳಿಕೊಂಡು ವಿನಯನಾಗಿಯೇ ಇದನ್ನು ನಿರಾಕರಿಸಿದರು. ಆದರೂ ಕಲೆಯ ಬಗೆಗಿನ ಆಸಕ್ತಿ ಹಾಗೂ ಉತ್ಸಾಹ ಮಾತ್ರ ದಿನದಿಂದ ದಿನಕ್ಕೆ ವೃದ್ಧಿಸುತ್ತಲೆ ಇತ್ತು. ಇವರ ಕಂಠ ದಿನದಿಂದ ದಿನಕ್ಕೆ ಪಕ್ವಗೊಳ್ಳುತ್ತ ಸಾಗಿತು.
ಪರಮೇಶ್ವರ ನಾಯ್ಕ್ ಅವರು ತಮ್ಮ ಬಡತನದ ಬದುಕಿನ ನಡುವೆಯೇ ಹಲವಾರು ಯಕ್ಷಗಾನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕವಾಗಿ ಇದರ ಬಗೆಗಿನ ಕಾಳಜಿಯನ್ನು, ತನ್ನೊಳಗಿನ ಕಲೆಯ ಹವ್ಯಾಸವನ್ನು ಹಾಗೆ ಮುಂದುವರೆಸಿಕೊಂಡು ಬಂದರು. ದನ ಕರುಗಳನ್ನು ಮೇಯಿಸುತ್ತಲೇ ಯಕ್ಷಗಾನ ಪದ್ಯಗಳನ್ನು ಹಾಡುತ್ತ ತಮ್ಮ ಜೀವನವನ್ನು ನಿರ್ವಹಿಸುತ್ತ ಬಂದರು. ಹೀಗೆ ದನಗಳನ್ನು ಕಾಯುತ್ತಿರುವ ಸಂದರ್ಭದಲ್ಲಿ ಕೃಷ್ಣಗೌಡ್ರು ಮಾದ್ಲುಮನೆ ಎಂಬ ಹವ್ಯಾಸಿ ಕಲಾವಿದರ ಜೊತೆಗೂಡಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕವಾಗಿ ಹಾಡುಗಾರಿಕೆಯನ್ನು ಗಟ್ಟಿಗೊಳಿಸಿಕೊಂಡರು. ನಂತರದಲ್ಲಿ ತಮ್ಮಲ್ಲಿ ಒಡಮೂಡುತ್ತಿರುವ ಕಲಾಸಕ್ತಿಯಿಂದಾಗಿ ಕೃಷ್ಣಜಿ ಬೇಡ್ಕಣೆ ಎಂಬುವವರು ಯಕ್ಷಗಾನ ತರಗತಿಗಳನ್ನು ನಡೆಸುತ್ತಿದ್ದರು. ಬಿಡುವಿನ ಸಮಯದಲ್ಲಿ ಇವರ ಬಳಿ ತೆರಳಿ ತರಬೇತಿಯನ್ನು ಪಡೆಯುವ ಮೂಲಕವಾಗಿ, ಇವರ ಬಳಿಯಲ್ಲಿಯೇ ಯಕ್ಷದೀಕ್ಷೆಯನ್ನು ಪಡೆದು, ಯಕ್ಷಗಾನ ಬದುಕಿನತ್ತ ಮುಖ ಮಾಡಿದರು. ಹೀಗೆ ಸುಮಾರು ದಿನಗಳ ಕಾಲ ಇವರ ತರಬೇತಿ ಶಾಲೆಯಲ್ಲಿ ಹವ್ಯಾಸ ನಡೆಸಿ, ಹಲವಾರು ತೆರನಾಗಿ ಕೌಶಲ್ಯವನ್ನು ಕರಗತ ಮಾಡಿಕೊಂಡರು. ಹೀಗೆ ಯಕ್ಷದೀಕ್ಷೆಯನ್ನು ಪಡೆದು, ಸರಾಗವಾಗಿ ಹಾಡುವುದನ್ನು ಕರಗತ ಮಾಡಿಕೊಂಡಿದ್ದ ಪರಮೇಶ್ವರ ನಾಯ್ಕ್ ಅವರು ಒಂದು ಕಡೆ ಅವಕಾಶಕ್ಕಾಗಿ ಕಾಯುತ್ತಿರುವ ಸಂದರ್ಭದಲ್ಲಿ ತಮ್ಮ ಸ್ನೇಹಿತರಾದ ಮಾದ್ಲುಮನೆ ಭಾಸ್ಕರ್ಗೌಡ ಎಂಬುವರೊಂದಿಗೆ ಒಮ್ಮೆ ಶಿರಸಿಯ ಮಾರಿಕಾಂಬ ಜಾತ್ರೆಗೆ ಆಗಮಿಸಿದರು. ಜಾತ್ರೆಯಲ್ಲಿ ಬಿಡಾರ ಹೂಡಿದ್ದ ಯಕ್ಷಗಾನ ಮಂಡಳಿಯತ್ತ ಇವರ ಗಮನವು ಕೇಂದ್ರಿಕೃತವಾಯಿತು. ಹೇಗಾದರೂ ಮಾಡಿ ಇವರ ಸ್ನೇಹ ಹಾಗೂ ವಿಶ್ವಾಸ ಗಳಿಸುವ ಮೂಲಕವಾಗಿ ಇವರ ಕಲಾ ಮಂಡಳಿಯಲ್ಲಿ ಅವಕಾಶ ಗಳಿಸಿಕೊಳ್ಳಬೇಕೆಂಬ ಹಂಬಲವೊಂದು ಇವರಲ್ಲಿ ಮೊಳಕೆಯೊಡೆಯಿತು. ಇದರಿಂದಾಗಿ ಈ ಮಂಡಳಿಯತ್ತ ನಡೆದರು. ಇಲ್ಲಿಯೂ ಕೂಡ ಪರಮೇಶ್ವರ ನಾಯ್ಕರು ತಮ್ಮ ಕಂಠಸಿರಿಯ ಮೂಲಕ ಕಂಪನಿ ಮಾಲಿಕರ ಜೀವನಶೆಟ್ಟಿಯವರ ಮನಗೆದ್ದು ತಮ್ಮ ಕಲಾ ಸೇವೆಯನ್ನು ಮುಂದುವರೆಸಿಕೊಂಡು ಬಂದರು.
ಶ್ರೀಯುತ ಪರಮೇಶ್ವರ ನಾಯ್ಕ್ ಅವರು ತಮ್ಮ ಬಾಲ್ಯದ ಹನ್ನೆರಡನೇ ವಯಸ್ಸಿನಿಂದಲೆ ಯಕ್ಷಗಾನ ಕಲೆಯ ಗೀಳನ್ನು ಮೈಗೂಡಿಸಿಕೊಂಡು ಬಂದವರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ತಮ್ಮ ಸೇವೆಯನ್ನು ಯಕ್ಷಗಾನ ಕ್ಷೇತ್ರಕ್ಕೆ ಸಲ್ಲಿಸುತ್ತಿದ್ದಾರೆ. ಇವರ ಈ ಸೇವೆಯನ್ನು ಗಮನಿಸಿ ನಾಡಿನ ವಿವಿಧ ಭಾಗಗಳಲ್ಲಿ ಹಲವಾರು ಸನ್ಮಾನ ಹಾಗೂ ಗೌರವಗಳು ಇವರಿಗೆ ಲಭಿಸಿವೆ. ಇವರ ಸೇವೆಯನ್ನು ಗಮನಿಸಿ ಕಾನಗೋಡು, ಹಳ್ಳಿಬೈಲು, ಕಕ್ಕುಂಜೆ ಹಾಗೂ ವಿವಿಧೆಡೆಗಳಲ್ಲಿ ಹಲವಾರು ಸಂಘ ಸಂಸ್ಥೆಗಳು ಗೌರವಗಳು ಲಭಿಸಿವೆ. ಹಾಗೆಯೇ ಕರಾವಳಿ ಭಾಗದ ಹೆಸರಾಂತ ‘ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್’ ವತಿಯಿಂದಲೂ ಇವರಿಗೆ ಗೌರವ ಸನ್ಮಾನಗಳು ಲಭಿಸಿವೆ. ಹಾಗೆಯೇ ಸಿದ್ಧಾಪುರ ತಾಲ್ಲೂಕಿನ ತರಳಿಮಠದ ವತಿಯಿಂದ ‘ತರಳಿಮಠ’ ಪ್ರಶಸ್ತಿಯು ಶ್ರೀಯುತ ಪರಮೇಶ್ವರ ನಾಯ್ಕ್ ಅವರಿಗೆ ಲಭಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ7 hours agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ22 hours agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್



