ರಾಜಕೀಯ
ಅಹಿಂಸೆ : ಎಂದಿಗೂ ಬತ್ತದ ನದಿಯ ನಿನಾದ
ಸಂಘರ್ಷವನ್ನು ಸ್ಥಾಯಿಯಾಗಿಸಿ ಪ್ರಯೋಜನ ಪಡೆದುಕೊಳ್ಳುವ ಪ್ರಯತ್ನಗಳು ನಿರಂತರವಾಗಿ ಯಶಸ್ಸು ಕಾಣುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅಹಿಂಸೆಯ ಮೌಲ್ಯದ ಆಧಾರದಲ್ಲಿ ಪರ್ಯಾಯ ರಾಜಕಾರಣ ರಾಷ್ಟ್ರದಾದ್ಯಂತ ರೂಪುಗೊಳ್ಳಬೇಕಾದ ಅನಿವಾರ್ಯತೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಕಾಡಿಸಿಕೊಳ್ಳಬೇಕಿದೆ. ದೇಶವೊಂದು ಇನ್ನೊಂದು ರಾಷ್ಟ್ರದ ಕುರಿತು ಸಿಟ್ಟಿಗೇಳುವಿಕೆ ಜಾಗತಿಕ ಮಟ್ಟದ ಸಂಘರ್ಷವನ್ನು ಸಂಕೇತಿಸಿದರೆ, ಜನರ ನಡುವೆಯೇ ನಡೆಯುವ ಜಗಳಗಳು ಆಂತರಿಕ ವ್ಯಗ್ರತೆಗೆ ಸಾಕ್ಷಿಯಾಗುತ್ತವೆ. ವಿವಿಧ ಸ್ತರಗಳಲ್ಲಿ ವ್ಯಗ್ರತೆಯು ವ್ಯಕ್ತಿಯೊಳಗೆ ಮೇಳೈಸಿಕೊಳ್ಳುತ್ತದೆ. ಅದು ವಿವಿಧ ವರ್ತನೆಗಳಲ್ಲಿ ವ್ಯಕ್ತವಾಗುತ್ತದೆ. ಆ ವರ್ತನೆಗಳು ಉಂಟುಮಾಡುವ ಪರಿಣಾಮಗಳು ವ್ಯಕ್ತಿಗತ ಹಾಗೂ ಸಾಮೂಹಿಕ ಸಂಘರ್ಷಗಳ ರೂಪದಲ್ಲಿ ಕಂಡುಬರುತ್ತವೆ. ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಅಧಿಕಾರ ಕೇಂದ್ರಗಳು ಈ ರೂಪಗಳನ್ನು ತಮ್ಮ ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಳ್ಳುತ್ತವೆ. ದೇಶ, ಧರ್ಮ ಮತ್ತು ಜಾತಿಯ ಅಸ್ಮಿತೆಯ ಪ್ರಶ್ನೆಗಳನ್ನು ಮುನ್ನೆಲೆಗೆ ತಂದು ತಮ್ಮ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ರಾಜಕಾರಣ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲ್ಪಡುತ್ತದೆ.
ಪ್ರಜಾಪ್ರಭುತ್ವವಾದಿ ಆಡಳಿತ ವಿನ್ಯಾಸಗೊಳಿಸಗೊಳಿಸಿಕೊಂಡಿರುವ ಅಭಿವೃದ್ಧಿ ಮತ್ತು ಅದಕ್ಕೆ ಸಂಬಂಧಿಸಿದ ಪರಿಕಲ್ಪನೆಗಳು ಅಂಥ ರಾಜಕಾರಣಕ್ಕೆ ಪೂರಕವಾಗಿರುವಂತೆಯೇ ಪಾತ್ರವನ್ನು ನಿರ್ವಹಿಸುತ್ತಿವೆ. ಟೊಳ್ಳುತನದ ಸಂಗತಿಗಳೊಂದಿಗೆ ಅಭಿವೃದ್ದಿಯನ್ನು ವ್ಯಾಖ್ಯಾನಿಸುವ ಪ್ರವೃತ್ತಿಯನ್ನು ಸಾರ್ವತ್ರಿಕಗೊಳಿಸುವ ಈ ಅಭಿವೃದ್ಧಿಯು ಅದಕ್ಕೆ ಸಹಕಾರಿಯಾಗಿರುತ್ತದೆ. ಪ್ರಶ್ನಿಸುವ ಬದಲಾಗಿ ಆ ಸಂಕುಚಿತ ರಾಜಕಾರಣವು ಅಧಿಕಾರ ಮತ್ತು ಪ್ರಭಾವವನ್ನು ಸ್ಥಿರವಾಗಿರಿಸಿಕೊಂಡು ಬಹುದೊಡ್ಡ ಸಾಮಾಜಿಕ ಪಲ್ಲಟದ ಸಾಧ್ಯತೆಗಳನ್ನು ಒಡೆಯುವುದರ ಕಡೆಗೆ ನಡೆದುಬಿಡುತ್ತದೆ. ಅಡ್ಡ ಎದುರಾಗುವವರನ್ನು ತಮ್ಮ ಪ್ರಭಾವೀ ಪ್ರಾಬಲ್ಯದ ಬಲದೊಂದಿಗೆ ಹತ್ತಿಕ್ಕಿಬಿಡುತ್ತದೆ. ಅಧಿಕಾರ ಕೇಂದ್ರಗಳ ಮೂಲಕ ದಾಟಿಕೊಂಡ ಶಿಕ್ಷಣವು ವ್ಯಕ್ತಿಗತ ಪ್ರಯೋಜನವಾದಿ ಯೋಚನೆಗಳನ್ನೇ ಬಿತ್ತುವುದರ ಕಡೆಗೆ ಆಸಕ್ತಿ ವಹಿಸುವುದರಿಂದ ಶಿಕ್ಷಿತ-ಸುಶಿಕ್ಷಿತ ವಲಯವೂ ಅನಕ್ಷರಸ್ತ ಸಮುದಾಯಗಳಲ್ಲಿರುವ ಮೌಢ್ಯವನ್ನೇ ಅಂತರ್ಗತ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ಅದನ್ನು ಜನರೊಳಗೂ ವ್ಯಾಪಕವಾಗಿಸಲು ಪ್ರಯತ್ನಿಸುತ್ತದೆ. ಹೀಗಾದಾಗ ಹೊಸ ಪೀಳಿಗೆಯು ಅದರ ರಹಸ್ಯ ಕಾರ್ಯಸೂಚಿಯ ಭಾಗವಾಗಿರುವ ಅಪಮೌಲ್ಯೀಕೃತ ಅಂಶಗಳು ರೂಪಿಸುವ ಚೌಕಟ್ಟುಗಳಲ್ಲಿ ಬಂಧಿಯಾಗಿ ಯೋಚಿಸಲಾರಂಭಿಸುತ್ತದೆ.
ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳು
ಈ ಹಂತದಲ್ಲಿಯೇ ಸಂಘರ್ಷದ ಪರ ನಿಲ್ಲುವ ದೃಷ್ಟಿಕೋನಗಳನ್ನೇ ಮುಖ್ಯವಾಗಿಸಿಕೊಳ್ಳುತ್ತದೆ. ಅಹಿಂಸೆಯ ಮೌಲ್ಯದ ಸಕಾರಾತ್ಮಕತೆಯು ಹಿಂಸೆಯ ಪರವಾದ ವಿತಂಡವಾದಿ ಆಲೋಚನೆಗಳ ಭರಾಟೆಯಲ್ಲಿ ಹಿನ್ನೆಲೆಗೆ ಸರಿಯುತ್ತದೆ. ಇಂಥ ಸಂದರ್ಭದಲ್ಲಿ ಅಹಿಂಸಾತ್ಮಕ ಮನೋಧರ್ಮವನ್ನು ಮುನ್ನೆಲೆಗೆ ತಂದು ಅಧಿಕೃತಗೊಳಿಸುವ ಅಪ್ಪಟ ಪ್ರಯೋಗಶೀಲ ರಾಜಕಾರಣ ಮೊಳಕೆಯೊಡೆಯಬೇಕು. ಹಾಗಾಗುತ್ತಿಲ್ಲ. ಹಾಗಾಗುವುದಕ್ಕೆ ಸಾಮಾಜಿಕ, ರಾಜಕೀಯ, ಧಾರ್ಮಿಕ ಕೇಂದ್ರಗಳ ಮುಂಚೂಣಿ ಮುಖಂಡತ್ವ ಬಿಡುತ್ತಿಲ್ಲ. ತಾವು ಸಮಸ್ಯೆ ಎಂದು ಪರಿಭಾವಿಸಿಕೊಂಡಿರುವ ಜಟಿಲತೆಗೆ ಪ್ರಾಮಾಣಿಕವಾಗಿ ಪರಿಹಾರ ಹುಡುಕಿಕೊಳ್ಳುವ ಪ್ರಯತ್ನಗಳನ್ನೂ ನಡೆಸುತ್ತಿಲ್ಲ. ಅಂಥ ಪ್ರಾಮಾಣಿಕ ಹೆಜ್ಜೆಗಳು ಅಹಿಂಸೆಯ ಪರವಾದ ಅಲೆಯನ್ನು ಸೃಷ್ಟಿಸುವ ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳನ್ನು ಹೊಳೆಸುತ್ತವೆ. ಇದರ ಬದಲಾಗಿ ಮತ್ತೆ ಜಾತಿನಿಷ್ಠ ಮಿತಿಗಳನ್ನು ವಿಸ್ತರಿಸುವ, ಧರ್ಮದೊಳಗೆ ಇಲ್ಲದೇ ಇರುವ ಸಂಗತಿಗಳನ್ನು ಇತಿಹಾಸದೊಂದಿಗೆ ತಳುಕುಹಾಕುವ ಮತ್ತು ಅಂಥ ಸಂಕುಚಿತ ಪಠ್ಯಗಳ ಆಧಾರದಲ್ಲಿಯೇ ಅಧಿಕಾರ ರಾಜಕಾರಣವನ್ನು ಬದುಕಿಸಿಬಿಡುವ ಹುನ್ನಾರಗಳನ್ನು ಹೊಳೆಸಿಕೊಳ್ಳುವುದರ ಕಡೆಗೇ ಅತ್ಯುತ್ಸಾಹ ವ್ಯಕ್ತವಾಗುತ್ತಿದೆ. ಒಳ್ಳೆಯದನ್ನು ಹೇಳಿದರೆ ಸುಲಭಕ್ಕೆ ಒಪ್ಪಿಕೊಳ್ಳದ ಹಠಮಾರಿತನ ಅದರದ್ದು. ಗಾಂಧಿ ಜೀವಂತಗೊಳಿಸಿದ ಅಹಿಂಸೆಯ ಮಾದರಿಯ ಬಗ್ಗೆ ಪ್ರಸ್ತಾಪಿಸಿದರೆ ಅದು ದಿಢೀರನೆ ಅವಿವೇಕತನದ ಅತಿರೇಕವನ್ನು ಪ್ರದರ್ಶಿಸಿಬಿಡುತ್ತದೆ. ‘ಗಾಂಧಿ ಏನಿದ್ದರೂ ಆ ಕಾಲಕ್ಕೆ, ಈಗಲ್ಲ’ ಎಂದು ಉಡಾಫೆಯ ಮನೋಭಾವವನ್ನು ತೂರಿಬಿಡುತ್ತದೆ.
ಗಾಂಧಿಯ ವ್ಯಕ್ತಿತ್ವದೊಂದಿಗೇ ಬೆರೆತುಹೋಗಿದ್ದ ಅಹಿಂಸೆಯ ಮೌಲ್ಯವು ವರ್ತಮಾನದಲ್ಲಷ್ಟೇ ಅಲ್ಲ, ಭವಿಷ್ಯದ ಜಗತ್ತಿನ ಎಲ್ಲ ಬಗೆಯ ಸಂಘರ್ಷಗಳನ್ನು ಕೊನೆಗಾಣಿಸುವ ಪ್ರಾಕೃತಿಕ ದಿವ್ಯೌಷಧ ಎಂಬುದನ್ನು ಮನಗಾಣಲೇಬೇಕು. ಗಾಂಧಿಯನ್ನು ಅರ್ಥೈಸಿಕೊಳ್ಳದ ಮನಸ್ಸುಗಳು ಈ ಕ್ಷಣಕ್ಕೆ ತಮ್ಮ ಮೂಗಿನ ನೇರಕ್ಕೆ ತೀರ್ಮಾನವನ್ನು ಕೈಗೊಂಡುಬಿಡುತ್ತವೆ. ಸಂಪೂರ್ಣ ತಿಳುವಳಿಕೆ ಇಲ್ಲದೇ ರೂಪುಗೊಳ್ಳುವ ಅಂಥ ವ್ಯಕ್ತಿಗತ ನಿಲುವುಗಳು ಸಮೂಹಕ್ಕೂ ದಾಟಿಕೊಳ್ಳುತ್ತವೆ. ಗಾಂಧಿ ಮತ್ತು ಅವರು ಪ್ರತಿಪಾದಿಸಿದ ಅಹಿಂಸಾವಾದ ಅಪ್ರಸ್ತುತ ಎಂದು ಹೇಳುವ ಕಾಲಕ್ಕೆ ಅಹಿಂಸೆಯ ತಾತ್ವಿಕತೆಯೊಂದಿಗಿನ ಗಾಂಧಿ ವ್ಯಕ್ತಿತ್ವವನ್ನು ಸಮಗ್ರವಾಗಿ ತಿಳಿದುಕೊಳ್ಳುವ ಪ್ರಯತ್ನಗಳನ್ನೇ ನಡೆಸುವುದಿಲ್ಲ. ಆ ತಾತ್ವಿಕ ಆದರ್ಶವನ್ನು ವರ್ತಮಾನದ ಸ್ಥಿತಿಗತಿಗಳಿಗೆ ತಕ್ಕಂತೆ ಅನ್ವಯಿಸಿಕೊಳ್ಳುವ ನಮ್ಯತೆಯ ಹೆಜ್ಜೆಗಳನ್ನೇ ಅನುಸರಿಸದೇ ಸಾರಾಸಗಟಾಗಿ ತಿರಸ್ಕಾರದ ಭಾವನೆಗಳು ನೆಲೆಗೊಂಡರೆ ಪ್ರಯೋಜನವಿಲ್ಲ.
ಅಹಿಂಸೆ : ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆ..?
ಈಗಿನ ರಾಜಕೀಯ ಹೇಳಿಕೆಗಳು ಇಂಥ ತಿರಸ್ಕಾರದ ಭಾವನೆಗಳ ಆಧಾರದಲ್ಲಿಯೇ ರೂಪುಗೊಳ್ಳುತ್ತಿವೆ. ಅವುಗಳು ಜನರ ಅಭಿಪ್ರಾಯಗಳನ್ನೂ ನಿಯಂತ್ರಿಸುತ್ತಿವೆ. ಗಾಂಧಿ ಮತ್ತು ಅಹಿಂಸಾ ತಾತ್ವಿಕತೆಯ ಬಗ್ಗೆ ಹೊಸ ಪೀಳಿಗೆಯು ಅರ್ಧಂಬರ್ಧ ತಿಳಿದುಕೊಂಡ ಸಂದರ್ಭದಲ್ಲಿ ಪ್ರಬಲ ಕೇಂದ್ರಗಳು ಹಿಂಸೆಯೊಂದಿಗಿನ ಕಾರ್ಯತಂತ್ರಗಳನ್ನು ಪ್ರಯೋಗಿಸಿ ಯಶಸ್ಸು ಕಂಡುಕೊಳ್ಳುತ್ತವೆ. ಈ ಕಾರ್ಯತಂತ್ರಗಳನ್ನು ಅಧಿಕಾರ ಕೇಂದ್ರಗಳು ಸಂಘಟನೆಗಳ ನೆರವಿನೊಂದಿಗೆ ಪ್ರಯೋಗಿಸುತ್ತವೆ. ಈಗಾಗಲೇ ಆಗಿಹೋದ ಇತಿಹಾಸ, ಗಾಂಧಿಯೂ ಸೇರಿದಂತೆ ವಿವಿಧ ದಾರ್ಶನಿಕರ ಕುರಿತಾದ ಸಮಗ್ರ ವಿವರಗಳು ಮತ್ತು ತಾತ್ವಿಕತೆಯ ಶಕ್ತಿಯ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿರದ ಜನಸಮೂಹದ ಅಜ್ಞಾನವನ್ನು ತಮ್ಮ ರಹಸ್ಯ ಕಾರ್ಯಸೂಚಿಗಳ ಯಶಸ್ವಿಗೆ ಪೂರಕವಾಗಿ ಬಳಸಿಕೊಳ್ಳುತ್ತವೆ. ಇಂದು ಬಹುತೇಕ ಯುವಕರು ಹಿಂಸೆ ಮತ್ತು ಅಹಿಂಸೆಯನ್ನು ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆಯಲ್ಲಿ ಚರ್ಚೆಗೊಳಪಡಿಸುತ್ತಿದ್ದಾರೆ. ಇದರರ್ಥ ಐವತ್ತು ಪರ್ಸೆಂಟ್ ಹಿಂಸೆ, ಐವತ್ತು ಪರ್ಸೆಂಟ್ ಅಹಿಂಸೆ ಇರಬೇಕು, ಅಂದಾಗಲೇ ಬ್ಯಾಲೆನ್ಸ್ ಆಗುತ್ತದೆ ಎಂಬ ಸಂಕುಚಿತತೆಯ ವಾದಗಳನ್ನು ಮುಂದಿಡುತ್ತಿದ್ದಾರೆ. ಹಿಂಸಿಸುವ ಪ್ರಾಬಲ್ಯ ನಮ್ಮ ಜೊತೆಗಿದ್ದರೆ ಉಳಿದವರು ಭಯಪಡುತ್ತಾರೆ ಎಂದು ಹಿರಿಯರ ಮುಂದೆ ಅಪ್ರಬುದ್ಧ ಮಾತುಗಳನ್ನಾಡುತ್ತಿದ್ದಾರೆ. ಅವರೊಂದಿಗೆ ಚರ್ಚಿಸುವ ಉತ್ಸಾಹದಲ್ಲಿ ಗಾಂಧಿ ವ್ಯಕ್ತಿತ್ವ, ಅವರು ಪ್ರತಿಪಾದಿಸಿದ ಅಹಿಂಸಾ ಮೌಲ್ಯ, ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಅದು ನಿರ್ವಹಿಸಿದ ಮೌಲಿಕ ಪಾತ್ರ, ವರ್ತಮಾನದಲ್ಲಿ ಅದು ಅನ್ವಯಗೊಳ್ಳಬೇಕಾದ ಅವಶ್ಯಕತೆಗಳ ಬಗ್ಗೆ ಮಾತನಾಡಿದರೆ ಆ ಅಂಶಗಳನ್ನು ಆ ಕ್ಷಣಕ್ಕೆ ಸಂಕುಚಿತವಾಗಿ ಅರ್ಥೈಸಿಕೊಂಡು ಅಪ್ರಸ್ತುತವೆನ್ನಿಸುವ, ಅವಿವೇಕತನದ ವಾದವನ್ನು ಮುಂದಿಡುತ್ತಿದ್ದಾರೆ. ಮುಖ್ಯವಾಹಿನಿಯ ಮಾಧ್ಯಮಗಳ ಒಳಗೂ ಇಂಥ ವಾದಗಳನ್ನು ನೆಚ್ಚಿಕೊಂಡವರು ಇರುವುದರಿಂದ ಗಾಂಧಿ ಕುರಿತಾದ ಸಮಗ್ರ ಅರ್ಥೈಸಿಕೊಳ್ಳುವಿಕೆಯ ಜವಾಬ್ದಾರಿಯುತ ನಡೆಗಳು ಹಿನ್ನಡೆ ಅನುಭವಿಸುವಂಥ ಸ್ಥಿತಿ ನಿರ್ಮಾಣವಾಗಿದೆ.
ಅಹಿಂಸೆಯ ಸಾರ್ವಕಾಲಿಕತೆಯ ನಿದರ್ಶನಗಳು
ಇತಿಹಾಸದ ಪುಟಗಳಲ್ಲಿ ಅಹಿಂಸೆಯ ಸಾರ್ವಕಾಲಿಕತೆಯ ಶ್ರೇಷ್ಠ ನಿದರ್ಶನಗಳು ದಾಖಲಾಗಿವೆ. ಅವುಗಳು ವರ್ತಮಾನದ ಪೀಳಿಗೆಯ ಪ್ರಜ್ಞೆಯ ಅಂತಸತ್ವವನ್ನು ಮತ್ತಷ್ಟು ಪ್ರಖರಗೊಳಿಸುವ ರೀತಿಯಲ್ಲಿ ಮೇಳೈಸಿಕೊಳ್ಳಬೇಕು. ಆದರೆ, ಮೌಲಿಕ ಆದರ್ಶ ಹೆಜ್ಜೆಗಳು ಮತ್ತು ಅವುಗಳೊಂದಿಗಿನ ಇತಿಹಾಸದ ಅರಿವು ತಂದುಕೊಳ್ಳುವ ಯಾವುದೇ ಪ್ರಯತ್ನಗಳಲ್ಲಿ ತೊಡಗಿಕೊಳ್ಳದೇ ಅಗ್ರೆಸ್ಸಿವ್ ನಡವಳಿಕೆಗಳನ್ನೇ ಬಂಡವಾಳವಾಗಿಸಿಕೊಳ್ಳುತ್ತಿರುವ ಯುವ ಸಮೂಹವು ಪ್ರಬಲ ಶಕ್ತಿಗಳು ಸಾಕಿಕೊಳ್ಳುವ ರಾಜಕೀಯ ಪಕ್ಷಗಳ
ಕಾರ್ಯಕರ್ತರಾಗುವುದಕ್ಕಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಂಡಿದೆ. ಹಿಂದಿನದ್ದನ್ನು ಅರಿತುಕೊಳ್ಳುವ ಸಂಯಮ, ಯಾರು ಯಾರನ್ನು ದಾರಿ ತಪ್ಪಿಸಿ ತಮ್ಮ ಶಕ್ತಿ ಸಂಪನ್ಮೂಲವನ್ನು ಯಾವ ಬಗೆಯ ಸಂಘರ್ಷಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಕುರಿತಾದ ಸ್ಪಷ್ಟ ತಿಳುವಳಿಕೆ, ಆ ಮೂಲಕ ಅಹಿಂಸೆಯೊಂದಿಗಿನ ಗಾಂಧಿವಾದವನ್ನು ಮುನ್ನೆಲೆಗೆ ತರುವಂಥ ಆದರ್ಶಯುತ ಹೆಜ್ಜೆಗಳೊಂದಿಗೆ ಗುರುತಿಸಿಕೊಳ್ಳಬಹುದಾದ ಅವಕಾಶವನ್ನೇ ಬಿಟ್ಟುಕೊಟ್ಟಿದೆ. ಈ ಕಾರಣಕ್ಕಾಗಿಯೇ ಯಾವುದು ಸರಿ, ಯಾವುದು ತಪ್ಪು ಎಂಬ ವಿವೇಚನೆಯ ಬದಲು ಅಧಿಕಾರ ಸಂರಚನೆಯ ಕೇಂದ್ರಗಳನ್ನು ಬಲಪಡಿಸಿ ತಮ್ಮ ತಾತ್ಪೂರ್ತಿಕ ಆಸೆಗಳನ್ನು ಅವರು ಈಡೇರಿಸಿಕೊಳ್ಳುತ್ತಿದ್ದಾರೆ. ಬೈಕ್ ಕೊಳ್ಳಬೇಕು, ಕಾರ್ ಜೊತೆಗಿರಿಸಿಕೊಂಡು ಪ್ರತಿಷ್ಠೆ ಮೆರೆಯಬೇಕು, ಸುಸಜ್ಜಿತ ಮನೆ ಹೊಂದಬೇಕು, ಐಷಾರಾಮಿ ಬದುಕು ತಮ್ಮದಾಗಿಸಿಕೊಳ್ಳಬೇಕು – ಇಂಥವೇ ತಾತ್ಪೂರ್ತಿಕ ಆಸೆಗಳನ್ನು ಈಡೇರಿಸಿಕೊಳ್ಳುವುದಕ್ಕೆ ಕಾರ್ಯಕರ್ತರಿಗೆ ಹಂತಹಂತವಾಗಿ ರಾಜಕೀಯ ಪಕ್ಷಗಳು ನೆರವಾಗುತ್ತವೆ. ಅಧಿಕಾರದ ಗಮ್ಯ ತಲುಪಿಕೊಳ್ಳಲು ಇವು ಸಂಘರ್ಷ ಸೃಷ್ಟಿಗೆ ಇಂಥ ಯುವ ಸಮೂಹವನ್ನೇ ಬಳಸಿಕೊಳ್ಳುತ್ತವೆ. ಆಗ ಹಿಂಸೆಯೇ ವ್ಯಾಪಕವಾಗುತ್ತದೆ. ಅಹಿಂಸೆಯ ತಾರ್ಕಿಕವಾದವನ್ನೇ ಅಲ್ಲಗಳೆಯುವಂಥ ವಾತಾವರಣವನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗುತ್ತದೆ.
ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳು
ನಾವು ಎಷ್ಟೇ ಕೃತಿಗಳನ್ನು ಓದಿಕೊಂಡರೂ, ತಜ್ಞರ ಬರಹಗಳನ್ನು ಗೊತ್ತುಮಾಡಿಕೊಂಡರೂ ಗಾಂಧೀಜಿಯವರ ಅಹಿಂಸೆಯ ತಾತ್ವಿಕ ದಾರ್ಶನಿಕ ನದಿಯ ಜೀವಜಲದ ಬೊಗಸೆಯಷ್ಟು ಹನಿಗಳನ್ನಷ್ಟೇ ದಕ್ಕಿಸಿಕೊಂಡಿರುತ್ತೇವೆ. ಅದರ ಜೀವಂತಿಕೆಯ ಸಮಗ್ರ ಅಮೃತಧಾರೆಯನ್ನು ನಮ್ಮೊಳಗಿಳಿಸಿಕೊಳ್ಳುವ ನಿರಂತರ ಪ್ರಯತ್ನಗಳ ಮೂಲಕವೇ ಆ ತಾತ್ವಿಕತೆಯ ಹೊಳೆಯು ಮನುಷ್ಯಸಮೂಹದೊಳಗೆ ನೆಲೆಗೊಳ್ಳುತ್ತಾ ತನ್ನ ನಡಿಗೆಯನ್ನು ಮೂಡಿಸುತ್ತಾ ಸಾಗುತ್ತದೆ. ಅದು ಸಾಗಿದಲ್ಲೆಲ್ಲಾ ಮನುಷ್ಯತ್ವ ಮತ್ತು ಜೀವಪರ ನಿಲುವುಗಳ ಫಲವತ್ತತೆಯು ವ್ಯಾಪಕವಾಗುತ್ತಿರುತ್ತದೆ. ಆದರೆ, ಇಂಥ ತಾತ್ವಿಕ ನದಿಯ ಹರಿವನ್ನು ಅರ್ಧಕ್ಕೆ ತಡೆಗಟ್ಟಿ ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳನ್ನು ಕಟ್ಟಲಾಗುತ್ತಿದೆ. ಈ ಅಣೆಕಟ್ಟುಗಳೇ ಸುಖ, ಶಾಂತಿ, ನೆಮ್ಮದಿಯೊಂದಿಗಿನ ಅಭ್ಯುದಯದ ಬೆಳೆ ಬೆಳೆಯುವುದಕ್ಕೆ ಸಹಕಾರಿಯಾಗುತ್ತವೆ ಎಂಬ ತಪ್ಪುಕಲ್ಪನೆಯನ್ನೇ ಬಿತ್ತಿ ನಂಬಿಸಲಾಗುತ್ತಿದೆ. ಇಂಥ ಸಂಕೀರ್ಣತೆಯ ಮಧ್ಯೆ ಅಹಿಂಸೆಯ ಜೀವನದಿ ಬತ್ತದಂತೆ, ಅದು ಕಾಲದಿಂದ ಕಾಲಕ್ಕೆ ಅತ್ಯಂತ ಎಚ್ಚರದೊಂದಿಗೆ ದಾಟಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸುವ ಹೊಸದೊಂದು ಪರ್ಯಾಯ ರಾಜಕಾರಣದ ಮಾದರಿ ರೂಪುಗೊಳ್ಳಬೇಕಾಗಿದೆ. ಅದಕ್ಕಿಂತ ಮುಂಚೆ ಅಹಿಂಸೆಯ ತಾತ್ವಿಕ ನದಿಯ ಹರಿವು ನಿಲ್ಲಿಸುತ್ತಿರುವ ಶಕ್ತಿಗಳನ್ನು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಾಗಿದೆ. ಆ ಶಕ್ತಿಗಳು ಈ ನದಿಯನ್ನು ಬತ್ತಿಸುವ ಪ್ರಯತ್ನದಲ್ಲಿ ತೊಡಗಿವೆ. ಅದರ ಚಲನೆಯ ಹರಿವಿನೊಳಗೆ ರಕ್ತಪಾತ ನಡೆಸಿ ಭಯ ಹುಟ್ಟಿಸಿ ತಾವು ಪ್ರಬಲರಾಗುವ ಸ್ವಹಿತಾಸಕ್ತಿಗಳನ್ನು ಕಾಯ್ದುಕೊಳ್ಳುತ್ತಿವೆ. ಜನರನ್ನು ಮರಳು ಮಾಡುವ ಮರಳುಗಾರಿಕೆಯನ್ನು ಇದೇ ಆವರಣದಲ್ಲಿಯೇ ಅತ್ಯಂತ ಚಾಣಾಕ್ಷತನದಿಂದ ನಿರ್ವಹಿಸುತ್ತಿವೆ. ಇದಕ್ಕೆ ಪರ್ಯಾಯವಾಗಿ ಅಪ್ಪಟ ಸಾತ್ವಿಕತೆಯೊಂದಿಗಿನ ರಾಜಕಾರಣ ರೂಪುಗೊಳ್ಳಬೇಕು. ಅಹಿಂಸೆಯು ಸಾರ್ವಕಾಲಿಕ ಸತ್ಯ. ಹಾಗಾಗಿಯೇ ಎಲ್ಲ ಕಾಲದ ಕೊಳಕುಗಳೊಂದಿಗೆ ಎದುರುಗೊಳ್ಳುತ್ತಲೇ ಅದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುತ್ತದೆ. ಅದು ಎಂದಿಗೂ ಬತ್ತದ ನದಿಯ ನಿನಾದದ ಹಾಗೆ. ಪ್ರಾಕೃತಿಕ ವಿಕೋಪಗಳಾದಾಗ ಅದರ ನಡಿಗೆಗೆ ಅಡ್ಡಿ-ಆತಂಕಗಳು ಎದುರಾಗುವ ಹಾಗೆ ಇದೀಗ ಪ್ರಬಲ ಶಕ್ತಿಗಳ ಉದ್ದೇಶಪೂರ್ವಕ ನಕಾರಾತ್ಮಕತೆಯ ಕಾರಣಕ್ಕಾಗಿ ಹಿಂಸೆಯೇ ಸರಿಯಾದದ್ದು ಎಂಬ ಸಂಕುಚಿತ ಅಭಿಪ್ರಾಯ ಮುನ್ನೆಲೆಗೆ ಬಂದಿದೆ. ಇದನ್ನು ಅಲ್ಲಗಳೆದು ಅಹಿಂಸೆಯೇ ನಿರ್ಣಾಯಕ, ಅದರ ಆಧಾರದಲ್ಲಿಯೇ ನವಭಾರತದ ನಿರ್ಮಾಣ ಎಂಬ ದೃಢಸಂಕಲ್ಪದೊಂದಿಗಿನ ಸನ್ಮತಿಯ ರಾಜಕಾರಣ ಶುರುವಾಗಬೇಕಿದೆ. ಅಹಿಂಸೆಯ ನಿನಾದದ ಮಾಧುರ್ಯದ ಮಾದರಿ ಜಗತ್ತನ್ನು ಸ್ವಚ್ಛಗೊಳಿಸಬೇಕಿದೆ.
-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ


