ರಾಜಕೀಯ
ಅಹಿಂಸೆ : ಎಂದಿಗೂ ಬತ್ತದ ನದಿಯ ನಿನಾದ
ಸಂಘರ್ಷವನ್ನು ಸ್ಥಾಯಿಯಾಗಿಸಿ ಪ್ರಯೋಜನ ಪಡೆದುಕೊಳ್ಳುವ ಪ್ರಯತ್ನಗಳು ನಿರಂತರವಾಗಿ ಯಶಸ್ಸು ಕಾಣುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅಹಿಂಸೆಯ ಮೌಲ್ಯದ ಆಧಾರದಲ್ಲಿ ಪರ್ಯಾಯ ರಾಜಕಾರಣ ರಾಷ್ಟ್ರದಾದ್ಯಂತ ರೂಪುಗೊಳ್ಳಬೇಕಾದ ಅನಿವಾರ್ಯತೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಕಾಡಿಸಿಕೊಳ್ಳಬೇಕಿದೆ. ದೇಶವೊಂದು ಇನ್ನೊಂದು ರಾಷ್ಟ್ರದ ಕುರಿತು ಸಿಟ್ಟಿಗೇಳುವಿಕೆ ಜಾಗತಿಕ ಮಟ್ಟದ ಸಂಘರ್ಷವನ್ನು ಸಂಕೇತಿಸಿದರೆ, ಜನರ ನಡುವೆಯೇ ನಡೆಯುವ ಜಗಳಗಳು ಆಂತರಿಕ ವ್ಯಗ್ರತೆಗೆ ಸಾಕ್ಷಿಯಾಗುತ್ತವೆ. ವಿವಿಧ ಸ್ತರಗಳಲ್ಲಿ ವ್ಯಗ್ರತೆಯು ವ್ಯಕ್ತಿಯೊಳಗೆ ಮೇಳೈಸಿಕೊಳ್ಳುತ್ತದೆ. ಅದು ವಿವಿಧ ವರ್ತನೆಗಳಲ್ಲಿ ವ್ಯಕ್ತವಾಗುತ್ತದೆ. ಆ ವರ್ತನೆಗಳು ಉಂಟುಮಾಡುವ ಪರಿಣಾಮಗಳು ವ್ಯಕ್ತಿಗತ ಹಾಗೂ ಸಾಮೂಹಿಕ ಸಂಘರ್ಷಗಳ ರೂಪದಲ್ಲಿ ಕಂಡುಬರುತ್ತವೆ. ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಅಧಿಕಾರ ಕೇಂದ್ರಗಳು ಈ ರೂಪಗಳನ್ನು ತಮ್ಮ ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಳ್ಳುತ್ತವೆ. ದೇಶ, ಧರ್ಮ ಮತ್ತು ಜಾತಿಯ ಅಸ್ಮಿತೆಯ ಪ್ರಶ್ನೆಗಳನ್ನು ಮುನ್ನೆಲೆಗೆ ತಂದು ತಮ್ಮ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ರಾಜಕಾರಣ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲ್ಪಡುತ್ತದೆ.
ಪ್ರಜಾಪ್ರಭುತ್ವವಾದಿ ಆಡಳಿತ ವಿನ್ಯಾಸಗೊಳಿಸಗೊಳಿಸಿಕೊಂಡಿರುವ ಅಭಿವೃದ್ಧಿ ಮತ್ತು ಅದಕ್ಕೆ ಸಂಬಂಧಿಸಿದ ಪರಿಕಲ್ಪನೆಗಳು ಅಂಥ ರಾಜಕಾರಣಕ್ಕೆ ಪೂರಕವಾಗಿರುವಂತೆಯೇ ಪಾತ್ರವನ್ನು ನಿರ್ವಹಿಸುತ್ತಿವೆ. ಟೊಳ್ಳುತನದ ಸಂಗತಿಗಳೊಂದಿಗೆ ಅಭಿವೃದ್ದಿಯನ್ನು ವ್ಯಾಖ್ಯಾನಿಸುವ ಪ್ರವೃತ್ತಿಯನ್ನು ಸಾರ್ವತ್ರಿಕಗೊಳಿಸುವ ಈ ಅಭಿವೃದ್ಧಿಯು ಅದಕ್ಕೆ ಸಹಕಾರಿಯಾಗಿರುತ್ತದೆ. ಪ್ರಶ್ನಿಸುವ ಬದಲಾಗಿ ಆ ಸಂಕುಚಿತ ರಾಜಕಾರಣವು ಅಧಿಕಾರ ಮತ್ತು ಪ್ರಭಾವವನ್ನು ಸ್ಥಿರವಾಗಿರಿಸಿಕೊಂಡು ಬಹುದೊಡ್ಡ ಸಾಮಾಜಿಕ ಪಲ್ಲಟದ ಸಾಧ್ಯತೆಗಳನ್ನು ಒಡೆಯುವುದರ ಕಡೆಗೆ ನಡೆದುಬಿಡುತ್ತದೆ. ಅಡ್ಡ ಎದುರಾಗುವವರನ್ನು ತಮ್ಮ ಪ್ರಭಾವೀ ಪ್ರಾಬಲ್ಯದ ಬಲದೊಂದಿಗೆ ಹತ್ತಿಕ್ಕಿಬಿಡುತ್ತದೆ. ಅಧಿಕಾರ ಕೇಂದ್ರಗಳ ಮೂಲಕ ದಾಟಿಕೊಂಡ ಶಿಕ್ಷಣವು ವ್ಯಕ್ತಿಗತ ಪ್ರಯೋಜನವಾದಿ ಯೋಚನೆಗಳನ್ನೇ ಬಿತ್ತುವುದರ ಕಡೆಗೆ ಆಸಕ್ತಿ ವಹಿಸುವುದರಿಂದ ಶಿಕ್ಷಿತ-ಸುಶಿಕ್ಷಿತ ವಲಯವೂ ಅನಕ್ಷರಸ್ತ ಸಮುದಾಯಗಳಲ್ಲಿರುವ ಮೌಢ್ಯವನ್ನೇ ಅಂತರ್ಗತ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ಅದನ್ನು ಜನರೊಳಗೂ ವ್ಯಾಪಕವಾಗಿಸಲು ಪ್ರಯತ್ನಿಸುತ್ತದೆ. ಹೀಗಾದಾಗ ಹೊಸ ಪೀಳಿಗೆಯು ಅದರ ರಹಸ್ಯ ಕಾರ್ಯಸೂಚಿಯ ಭಾಗವಾಗಿರುವ ಅಪಮೌಲ್ಯೀಕೃತ ಅಂಶಗಳು ರೂಪಿಸುವ ಚೌಕಟ್ಟುಗಳಲ್ಲಿ ಬಂಧಿಯಾಗಿ ಯೋಚಿಸಲಾರಂಭಿಸುತ್ತದೆ.
ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳು
ಈ ಹಂತದಲ್ಲಿಯೇ ಸಂಘರ್ಷದ ಪರ ನಿಲ್ಲುವ ದೃಷ್ಟಿಕೋನಗಳನ್ನೇ ಮುಖ್ಯವಾಗಿಸಿಕೊಳ್ಳುತ್ತದೆ. ಅಹಿಂಸೆಯ ಮೌಲ್ಯದ ಸಕಾರಾತ್ಮಕತೆಯು ಹಿಂಸೆಯ ಪರವಾದ ವಿತಂಡವಾದಿ ಆಲೋಚನೆಗಳ ಭರಾಟೆಯಲ್ಲಿ ಹಿನ್ನೆಲೆಗೆ ಸರಿಯುತ್ತದೆ. ಇಂಥ ಸಂದರ್ಭದಲ್ಲಿ ಅಹಿಂಸಾತ್ಮಕ ಮನೋಧರ್ಮವನ್ನು ಮುನ್ನೆಲೆಗೆ ತಂದು ಅಧಿಕೃತಗೊಳಿಸುವ ಅಪ್ಪಟ ಪ್ರಯೋಗಶೀಲ ರಾಜಕಾರಣ ಮೊಳಕೆಯೊಡೆಯಬೇಕು. ಹಾಗಾಗುತ್ತಿಲ್ಲ. ಹಾಗಾಗುವುದಕ್ಕೆ ಸಾಮಾಜಿಕ, ರಾಜಕೀಯ, ಧಾರ್ಮಿಕ ಕೇಂದ್ರಗಳ ಮುಂಚೂಣಿ ಮುಖಂಡತ್ವ ಬಿಡುತ್ತಿಲ್ಲ. ತಾವು ಸಮಸ್ಯೆ ಎಂದು ಪರಿಭಾವಿಸಿಕೊಂಡಿರುವ ಜಟಿಲತೆಗೆ ಪ್ರಾಮಾಣಿಕವಾಗಿ ಪರಿಹಾರ ಹುಡುಕಿಕೊಳ್ಳುವ ಪ್ರಯತ್ನಗಳನ್ನೂ ನಡೆಸುತ್ತಿಲ್ಲ. ಅಂಥ ಪ್ರಾಮಾಣಿಕ ಹೆಜ್ಜೆಗಳು ಅಹಿಂಸೆಯ ಪರವಾದ ಅಲೆಯನ್ನು ಸೃಷ್ಟಿಸುವ ಸಾರ್ವಕಾಲಿಕ ಮೌಲಿಕ ರಾಜಕೀಯ ಆಂದೋಲನದ ಹೊಳಹುಗಳನ್ನು ಹೊಳೆಸುತ್ತವೆ. ಇದರ ಬದಲಾಗಿ ಮತ್ತೆ ಜಾತಿನಿಷ್ಠ ಮಿತಿಗಳನ್ನು ವಿಸ್ತರಿಸುವ, ಧರ್ಮದೊಳಗೆ ಇಲ್ಲದೇ ಇರುವ ಸಂಗತಿಗಳನ್ನು ಇತಿಹಾಸದೊಂದಿಗೆ ತಳುಕುಹಾಕುವ ಮತ್ತು ಅಂಥ ಸಂಕುಚಿತ ಪಠ್ಯಗಳ ಆಧಾರದಲ್ಲಿಯೇ ಅಧಿಕಾರ ರಾಜಕಾರಣವನ್ನು ಬದುಕಿಸಿಬಿಡುವ ಹುನ್ನಾರಗಳನ್ನು ಹೊಳೆಸಿಕೊಳ್ಳುವುದರ ಕಡೆಗೇ ಅತ್ಯುತ್ಸಾಹ ವ್ಯಕ್ತವಾಗುತ್ತಿದೆ. ಒಳ್ಳೆಯದನ್ನು ಹೇಳಿದರೆ ಸುಲಭಕ್ಕೆ ಒಪ್ಪಿಕೊಳ್ಳದ ಹಠಮಾರಿತನ ಅದರದ್ದು. ಗಾಂಧಿ ಜೀವಂತಗೊಳಿಸಿದ ಅಹಿಂಸೆಯ ಮಾದರಿಯ ಬಗ್ಗೆ ಪ್ರಸ್ತಾಪಿಸಿದರೆ ಅದು ದಿಢೀರನೆ ಅವಿವೇಕತನದ ಅತಿರೇಕವನ್ನು ಪ್ರದರ್ಶಿಸಿಬಿಡುತ್ತದೆ. ‘ಗಾಂಧಿ ಏನಿದ್ದರೂ ಆ ಕಾಲಕ್ಕೆ, ಈಗಲ್ಲ’ ಎಂದು ಉಡಾಫೆಯ ಮನೋಭಾವವನ್ನು ತೂರಿಬಿಡುತ್ತದೆ.
ಗಾಂಧಿಯ ವ್ಯಕ್ತಿತ್ವದೊಂದಿಗೇ ಬೆರೆತುಹೋಗಿದ್ದ ಅಹಿಂಸೆಯ ಮೌಲ್ಯವು ವರ್ತಮಾನದಲ್ಲಷ್ಟೇ ಅಲ್ಲ, ಭವಿಷ್ಯದ ಜಗತ್ತಿನ ಎಲ್ಲ ಬಗೆಯ ಸಂಘರ್ಷಗಳನ್ನು ಕೊನೆಗಾಣಿಸುವ ಪ್ರಾಕೃತಿಕ ದಿವ್ಯೌಷಧ ಎಂಬುದನ್ನು ಮನಗಾಣಲೇಬೇಕು. ಗಾಂಧಿಯನ್ನು ಅರ್ಥೈಸಿಕೊಳ್ಳದ ಮನಸ್ಸುಗಳು ಈ ಕ್ಷಣಕ್ಕೆ ತಮ್ಮ ಮೂಗಿನ ನೇರಕ್ಕೆ ತೀರ್ಮಾನವನ್ನು ಕೈಗೊಂಡುಬಿಡುತ್ತವೆ. ಸಂಪೂರ್ಣ ತಿಳುವಳಿಕೆ ಇಲ್ಲದೇ ರೂಪುಗೊಳ್ಳುವ ಅಂಥ ವ್ಯಕ್ತಿಗತ ನಿಲುವುಗಳು ಸಮೂಹಕ್ಕೂ ದಾಟಿಕೊಳ್ಳುತ್ತವೆ. ಗಾಂಧಿ ಮತ್ತು ಅವರು ಪ್ರತಿಪಾದಿಸಿದ ಅಹಿಂಸಾವಾದ ಅಪ್ರಸ್ತುತ ಎಂದು ಹೇಳುವ ಕಾಲಕ್ಕೆ ಅಹಿಂಸೆಯ ತಾತ್ವಿಕತೆಯೊಂದಿಗಿನ ಗಾಂಧಿ ವ್ಯಕ್ತಿತ್ವವನ್ನು ಸಮಗ್ರವಾಗಿ ತಿಳಿದುಕೊಳ್ಳುವ ಪ್ರಯತ್ನಗಳನ್ನೇ ನಡೆಸುವುದಿಲ್ಲ. ಆ ತಾತ್ವಿಕ ಆದರ್ಶವನ್ನು ವರ್ತಮಾನದ ಸ್ಥಿತಿಗತಿಗಳಿಗೆ ತಕ್ಕಂತೆ ಅನ್ವಯಿಸಿಕೊಳ್ಳುವ ನಮ್ಯತೆಯ ಹೆಜ್ಜೆಗಳನ್ನೇ ಅನುಸರಿಸದೇ ಸಾರಾಸಗಟಾಗಿ ತಿರಸ್ಕಾರದ ಭಾವನೆಗಳು ನೆಲೆಗೊಂಡರೆ ಪ್ರಯೋಜನವಿಲ್ಲ.
ಅಹಿಂಸೆ : ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆ..?
ಈಗಿನ ರಾಜಕೀಯ ಹೇಳಿಕೆಗಳು ಇಂಥ ತಿರಸ್ಕಾರದ ಭಾವನೆಗಳ ಆಧಾರದಲ್ಲಿಯೇ ರೂಪುಗೊಳ್ಳುತ್ತಿವೆ. ಅವುಗಳು ಜನರ ಅಭಿಪ್ರಾಯಗಳನ್ನೂ ನಿಯಂತ್ರಿಸುತ್ತಿವೆ. ಗಾಂಧಿ ಮತ್ತು ಅಹಿಂಸಾ ತಾತ್ವಿಕತೆಯ ಬಗ್ಗೆ ಹೊಸ ಪೀಳಿಗೆಯು ಅರ್ಧಂಬರ್ಧ ತಿಳಿದುಕೊಂಡ ಸಂದರ್ಭದಲ್ಲಿ ಪ್ರಬಲ ಕೇಂದ್ರಗಳು ಹಿಂಸೆಯೊಂದಿಗಿನ ಕಾರ್ಯತಂತ್ರಗಳನ್ನು ಪ್ರಯೋಗಿಸಿ ಯಶಸ್ಸು ಕಂಡುಕೊಳ್ಳುತ್ತವೆ. ಈ ಕಾರ್ಯತಂತ್ರಗಳನ್ನು ಅಧಿಕಾರ ಕೇಂದ್ರಗಳು ಸಂಘಟನೆಗಳ ನೆರವಿನೊಂದಿಗೆ ಪ್ರಯೋಗಿಸುತ್ತವೆ. ಈಗಾಗಲೇ ಆಗಿಹೋದ ಇತಿಹಾಸ, ಗಾಂಧಿಯೂ ಸೇರಿದಂತೆ ವಿವಿಧ ದಾರ್ಶನಿಕರ ಕುರಿತಾದ ಸಮಗ್ರ ವಿವರಗಳು ಮತ್ತು ತಾತ್ವಿಕತೆಯ ಶಕ್ತಿಯ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡಿರದ ಜನಸಮೂಹದ ಅಜ್ಞಾನವನ್ನು ತಮ್ಮ ರಹಸ್ಯ ಕಾರ್ಯಸೂಚಿಗಳ ಯಶಸ್ವಿಗೆ ಪೂರಕವಾಗಿ ಬಳಸಿಕೊಳ್ಳುತ್ತವೆ. ಇಂದು ಬಹುತೇಕ ಯುವಕರು ಹಿಂಸೆ ಮತ್ತು ಅಹಿಂಸೆಯನ್ನು ಫಿಫ್ಟಿ-ಫಿಪ್ಟಿ ಲೆಕ್ಕಾಚಾರದ ನೆಲೆಗಟ್ಟಿನ ಪರಿಭಾಷೆಯಲ್ಲಿ ಚರ್ಚೆಗೊಳಪಡಿಸುತ್ತಿದ್ದಾರೆ. ಇದರರ್ಥ ಐವತ್ತು ಪರ್ಸೆಂಟ್ ಹಿಂಸೆ, ಐವತ್ತು ಪರ್ಸೆಂಟ್ ಅಹಿಂಸೆ ಇರಬೇಕು, ಅಂದಾಗಲೇ ಬ್ಯಾಲೆನ್ಸ್ ಆಗುತ್ತದೆ ಎಂಬ ಸಂಕುಚಿತತೆಯ ವಾದಗಳನ್ನು ಮುಂದಿಡುತ್ತಿದ್ದಾರೆ. ಹಿಂಸಿಸುವ ಪ್ರಾಬಲ್ಯ ನಮ್ಮ ಜೊತೆಗಿದ್ದರೆ ಉಳಿದವರು ಭಯಪಡುತ್ತಾರೆ ಎಂದು ಹಿರಿಯರ ಮುಂದೆ ಅಪ್ರಬುದ್ಧ ಮಾತುಗಳನ್ನಾಡುತ್ತಿದ್ದಾರೆ. ಅವರೊಂದಿಗೆ ಚರ್ಚಿಸುವ ಉತ್ಸಾಹದಲ್ಲಿ ಗಾಂಧಿ ವ್ಯಕ್ತಿತ್ವ, ಅವರು ಪ್ರತಿಪಾದಿಸಿದ ಅಹಿಂಸಾ ಮೌಲ್ಯ, ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಅದು ನಿರ್ವಹಿಸಿದ ಮೌಲಿಕ ಪಾತ್ರ, ವರ್ತಮಾನದಲ್ಲಿ ಅದು ಅನ್ವಯಗೊಳ್ಳಬೇಕಾದ ಅವಶ್ಯಕತೆಗಳ ಬಗ್ಗೆ ಮಾತನಾಡಿದರೆ ಆ ಅಂಶಗಳನ್ನು ಆ ಕ್ಷಣಕ್ಕೆ ಸಂಕುಚಿತವಾಗಿ ಅರ್ಥೈಸಿಕೊಂಡು ಅಪ್ರಸ್ತುತವೆನ್ನಿಸುವ, ಅವಿವೇಕತನದ ವಾದವನ್ನು ಮುಂದಿಡುತ್ತಿದ್ದಾರೆ. ಮುಖ್ಯವಾಹಿನಿಯ ಮಾಧ್ಯಮಗಳ ಒಳಗೂ ಇಂಥ ವಾದಗಳನ್ನು ನೆಚ್ಚಿಕೊಂಡವರು ಇರುವುದರಿಂದ ಗಾಂಧಿ ಕುರಿತಾದ ಸಮಗ್ರ ಅರ್ಥೈಸಿಕೊಳ್ಳುವಿಕೆಯ ಜವಾಬ್ದಾರಿಯುತ ನಡೆಗಳು ಹಿನ್ನಡೆ ಅನುಭವಿಸುವಂಥ ಸ್ಥಿತಿ ನಿರ್ಮಾಣವಾಗಿದೆ.
ಅಹಿಂಸೆಯ ಸಾರ್ವಕಾಲಿಕತೆಯ ನಿದರ್ಶನಗಳು
ಇತಿಹಾಸದ ಪುಟಗಳಲ್ಲಿ ಅಹಿಂಸೆಯ ಸಾರ್ವಕಾಲಿಕತೆಯ ಶ್ರೇಷ್ಠ ನಿದರ್ಶನಗಳು ದಾಖಲಾಗಿವೆ. ಅವುಗಳು ವರ್ತಮಾನದ ಪೀಳಿಗೆಯ ಪ್ರಜ್ಞೆಯ ಅಂತಸತ್ವವನ್ನು ಮತ್ತಷ್ಟು ಪ್ರಖರಗೊಳಿಸುವ ರೀತಿಯಲ್ಲಿ ಮೇಳೈಸಿಕೊಳ್ಳಬೇಕು. ಆದರೆ, ಮೌಲಿಕ ಆದರ್ಶ ಹೆಜ್ಜೆಗಳು ಮತ್ತು ಅವುಗಳೊಂದಿಗಿನ ಇತಿಹಾಸದ ಅರಿವು ತಂದುಕೊಳ್ಳುವ ಯಾವುದೇ ಪ್ರಯತ್ನಗಳಲ್ಲಿ ತೊಡಗಿಕೊಳ್ಳದೇ ಅಗ್ರೆಸ್ಸಿವ್ ನಡವಳಿಕೆಗಳನ್ನೇ ಬಂಡವಾಳವಾಗಿಸಿಕೊಳ್ಳುತ್ತಿರುವ ಯುವ ಸಮೂಹವು ಪ್ರಬಲ ಶಕ್ತಿಗಳು ಸಾಕಿಕೊಳ್ಳುವ ರಾಜಕೀಯ ಪಕ್ಷಗಳ
ಕಾರ್ಯಕರ್ತರಾಗುವುದಕ್ಕಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಂಡಿದೆ. ಹಿಂದಿನದ್ದನ್ನು ಅರಿತುಕೊಳ್ಳುವ ಸಂಯಮ, ಯಾರು ಯಾರನ್ನು ದಾರಿ ತಪ್ಪಿಸಿ ತಮ್ಮ ಶಕ್ತಿ ಸಂಪನ್ಮೂಲವನ್ನು ಯಾವ ಬಗೆಯ ಸಂಘರ್ಷಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಕುರಿತಾದ ಸ್ಪಷ್ಟ ತಿಳುವಳಿಕೆ, ಆ ಮೂಲಕ ಅಹಿಂಸೆಯೊಂದಿಗಿನ ಗಾಂಧಿವಾದವನ್ನು ಮುನ್ನೆಲೆಗೆ ತರುವಂಥ ಆದರ್ಶಯುತ ಹೆಜ್ಜೆಗಳೊಂದಿಗೆ ಗುರುತಿಸಿಕೊಳ್ಳಬಹುದಾದ ಅವಕಾಶವನ್ನೇ ಬಿಟ್ಟುಕೊಟ್ಟಿದೆ. ಈ ಕಾರಣಕ್ಕಾಗಿಯೇ ಯಾವುದು ಸರಿ, ಯಾವುದು ತಪ್ಪು ಎಂಬ ವಿವೇಚನೆಯ ಬದಲು ಅಧಿಕಾರ ಸಂರಚನೆಯ ಕೇಂದ್ರಗಳನ್ನು ಬಲಪಡಿಸಿ ತಮ್ಮ ತಾತ್ಪೂರ್ತಿಕ ಆಸೆಗಳನ್ನು ಅವರು ಈಡೇರಿಸಿಕೊಳ್ಳುತ್ತಿದ್ದಾರೆ. ಬೈಕ್ ಕೊಳ್ಳಬೇಕು, ಕಾರ್ ಜೊತೆಗಿರಿಸಿಕೊಂಡು ಪ್ರತಿಷ್ಠೆ ಮೆರೆಯಬೇಕು, ಸುಸಜ್ಜಿತ ಮನೆ ಹೊಂದಬೇಕು, ಐಷಾರಾಮಿ ಬದುಕು ತಮ್ಮದಾಗಿಸಿಕೊಳ್ಳಬೇಕು – ಇಂಥವೇ ತಾತ್ಪೂರ್ತಿಕ ಆಸೆಗಳನ್ನು ಈಡೇರಿಸಿಕೊಳ್ಳುವುದಕ್ಕೆ ಕಾರ್ಯಕರ್ತರಿಗೆ ಹಂತಹಂತವಾಗಿ ರಾಜಕೀಯ ಪಕ್ಷಗಳು ನೆರವಾಗುತ್ತವೆ. ಅಧಿಕಾರದ ಗಮ್ಯ ತಲುಪಿಕೊಳ್ಳಲು ಇವು ಸಂಘರ್ಷ ಸೃಷ್ಟಿಗೆ ಇಂಥ ಯುವ ಸಮೂಹವನ್ನೇ ಬಳಸಿಕೊಳ್ಳುತ್ತವೆ. ಆಗ ಹಿಂಸೆಯೇ ವ್ಯಾಪಕವಾಗುತ್ತದೆ. ಅಹಿಂಸೆಯ ತಾರ್ಕಿಕವಾದವನ್ನೇ ಅಲ್ಲಗಳೆಯುವಂಥ ವಾತಾವರಣವನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗುತ್ತದೆ.
ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳು
ನಾವು ಎಷ್ಟೇ ಕೃತಿಗಳನ್ನು ಓದಿಕೊಂಡರೂ, ತಜ್ಞರ ಬರಹಗಳನ್ನು ಗೊತ್ತುಮಾಡಿಕೊಂಡರೂ ಗಾಂಧೀಜಿಯವರ ಅಹಿಂಸೆಯ ತಾತ್ವಿಕ ದಾರ್ಶನಿಕ ನದಿಯ ಜೀವಜಲದ ಬೊಗಸೆಯಷ್ಟು ಹನಿಗಳನ್ನಷ್ಟೇ ದಕ್ಕಿಸಿಕೊಂಡಿರುತ್ತೇವೆ. ಅದರ ಜೀವಂತಿಕೆಯ ಸಮಗ್ರ ಅಮೃತಧಾರೆಯನ್ನು ನಮ್ಮೊಳಗಿಳಿಸಿಕೊಳ್ಳುವ ನಿರಂತರ ಪ್ರಯತ್ನಗಳ ಮೂಲಕವೇ ಆ ತಾತ್ವಿಕತೆಯ ಹೊಳೆಯು ಮನುಷ್ಯಸಮೂಹದೊಳಗೆ ನೆಲೆಗೊಳ್ಳುತ್ತಾ ತನ್ನ ನಡಿಗೆಯನ್ನು ಮೂಡಿಸುತ್ತಾ ಸಾಗುತ್ತದೆ. ಅದು ಸಾಗಿದಲ್ಲೆಲ್ಲಾ ಮನುಷ್ಯತ್ವ ಮತ್ತು ಜೀವಪರ ನಿಲುವುಗಳ ಫಲವತ್ತತೆಯು ವ್ಯಾಪಕವಾಗುತ್ತಿರುತ್ತದೆ. ಆದರೆ, ಇಂಥ ತಾತ್ವಿಕ ನದಿಯ ಹರಿವನ್ನು ಅರ್ಧಕ್ಕೆ ತಡೆಗಟ್ಟಿ ಸಾಂಪ್ರದಾಯಿಕ ಸಂಕುಚಿತ ಮೂಲಭೂತವಾದಿ ಅಣೆಕಟ್ಟುಗಳನ್ನು ಕಟ್ಟಲಾಗುತ್ತಿದೆ. ಈ ಅಣೆಕಟ್ಟುಗಳೇ ಸುಖ, ಶಾಂತಿ, ನೆಮ್ಮದಿಯೊಂದಿಗಿನ ಅಭ್ಯುದಯದ ಬೆಳೆ ಬೆಳೆಯುವುದಕ್ಕೆ ಸಹಕಾರಿಯಾಗುತ್ತವೆ ಎಂಬ ತಪ್ಪುಕಲ್ಪನೆಯನ್ನೇ ಬಿತ್ತಿ ನಂಬಿಸಲಾಗುತ್ತಿದೆ. ಇಂಥ ಸಂಕೀರ್ಣತೆಯ ಮಧ್ಯೆ ಅಹಿಂಸೆಯ ಜೀವನದಿ ಬತ್ತದಂತೆ, ಅದು ಕಾಲದಿಂದ ಕಾಲಕ್ಕೆ ಅತ್ಯಂತ ಎಚ್ಚರದೊಂದಿಗೆ ದಾಟಿಕೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸುವ ಹೊಸದೊಂದು ಪರ್ಯಾಯ ರಾಜಕಾರಣದ ಮಾದರಿ ರೂಪುಗೊಳ್ಳಬೇಕಾಗಿದೆ. ಅದಕ್ಕಿಂತ ಮುಂಚೆ ಅಹಿಂಸೆಯ ತಾತ್ವಿಕ ನದಿಯ ಹರಿವು ನಿಲ್ಲಿಸುತ್ತಿರುವ ಶಕ್ತಿಗಳನ್ನು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಾಗಿದೆ. ಆ ಶಕ್ತಿಗಳು ಈ ನದಿಯನ್ನು ಬತ್ತಿಸುವ ಪ್ರಯತ್ನದಲ್ಲಿ ತೊಡಗಿವೆ. ಅದರ ಚಲನೆಯ ಹರಿವಿನೊಳಗೆ ರಕ್ತಪಾತ ನಡೆಸಿ ಭಯ ಹುಟ್ಟಿಸಿ ತಾವು ಪ್ರಬಲರಾಗುವ ಸ್ವಹಿತಾಸಕ್ತಿಗಳನ್ನು ಕಾಯ್ದುಕೊಳ್ಳುತ್ತಿವೆ. ಜನರನ್ನು ಮರಳು ಮಾಡುವ ಮರಳುಗಾರಿಕೆಯನ್ನು ಇದೇ ಆವರಣದಲ್ಲಿಯೇ ಅತ್ಯಂತ ಚಾಣಾಕ್ಷತನದಿಂದ ನಿರ್ವಹಿಸುತ್ತಿವೆ. ಇದಕ್ಕೆ ಪರ್ಯಾಯವಾಗಿ ಅಪ್ಪಟ ಸಾತ್ವಿಕತೆಯೊಂದಿಗಿನ ರಾಜಕಾರಣ ರೂಪುಗೊಳ್ಳಬೇಕು. ಅಹಿಂಸೆಯು ಸಾರ್ವಕಾಲಿಕ ಸತ್ಯ. ಹಾಗಾಗಿಯೇ ಎಲ್ಲ ಕಾಲದ ಕೊಳಕುಗಳೊಂದಿಗೆ ಎದುರುಗೊಳ್ಳುತ್ತಲೇ ಅದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುತ್ತದೆ. ಅದು ಎಂದಿಗೂ ಬತ್ತದ ನದಿಯ ನಿನಾದದ ಹಾಗೆ. ಪ್ರಾಕೃತಿಕ ವಿಕೋಪಗಳಾದಾಗ ಅದರ ನಡಿಗೆಗೆ ಅಡ್ಡಿ-ಆತಂಕಗಳು ಎದುರಾಗುವ ಹಾಗೆ ಇದೀಗ ಪ್ರಬಲ ಶಕ್ತಿಗಳ ಉದ್ದೇಶಪೂರ್ವಕ ನಕಾರಾತ್ಮಕತೆಯ ಕಾರಣಕ್ಕಾಗಿ ಹಿಂಸೆಯೇ ಸರಿಯಾದದ್ದು ಎಂಬ ಸಂಕುಚಿತ ಅಭಿಪ್ರಾಯ ಮುನ್ನೆಲೆಗೆ ಬಂದಿದೆ. ಇದನ್ನು ಅಲ್ಲಗಳೆದು ಅಹಿಂಸೆಯೇ ನಿರ್ಣಾಯಕ, ಅದರ ಆಧಾರದಲ್ಲಿಯೇ ನವಭಾರತದ ನಿರ್ಮಾಣ ಎಂಬ ದೃಢಸಂಕಲ್ಪದೊಂದಿಗಿನ ಸನ್ಮತಿಯ ರಾಜಕಾರಣ ಶುರುವಾಗಬೇಕಿದೆ. ಅಹಿಂಸೆಯ ನಿನಾದದ ಮಾಧುರ್ಯದ ಮಾದರಿ ಜಗತ್ತನ್ನು ಸ್ವಚ್ಛಗೊಳಿಸಬೇಕಿದೆ.
-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ4 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ11 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ


