ರಾಜಕೀಯ
ಮಾತು, ಮೌನ ಮತ್ತು ಮಿಥ್ಯಾವಾಸ್ತವ
ಈಗ ಮಾತುಗಳದ್ದೇ ಆರ್ಭಟ. ಮಾತು, ಪ್ರತಿಮಾತು, ದಿಢೀರನೆ ಪ್ರತಿಕ್ರಿಯಿಸಿಬಿಡುವ ಸಿಟ್ಟು-ಸೆಡವಿನ ಪ್ರವೃತ್ತಿಗಳ ವಿಜೃಂಭಣೆ. ನಾಯಕರೆನ್ನಿಸಿಕೊಂಡು ಜನಪ್ರಿಯಗೊಂಡವರ ವಿರುದ್ಧ ಯಾರೂ ಉಸಿರೆತ್ತುವ ಹಾಗಿಲ್ಲ. ಆರಾಧನೆಯ ಗುಂಗಿನೊಳಗೆ ಪ್ರಶ್ನಿಸಿದವರನ್ನು ಸುಮ್ಮನಾಗಿಸಿಬಿಡುವ ಜಾಯಮಾನಗಳದ್ದೇ ಪ್ರಭಾವಳಿ. ಅನುಭವಕ್ಕೆ ಬಂದ ಮತ್ತು ಕಣ್ಣಮುಂದಿನ ವಾಸ್ತವಗಳನ್ನು ನೋಡಿಯೂ ನೋಡದಂತಿದ್ದು ಎಲ್ಲರ ಹಾಗೆ ಹೊಗಳುವ ಮನೋವೃತ್ತಿಯನ್ನು ಒತ್ತಾಯಪೂರ್ವಕವಾಗಿ ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ. ಇಂಥದ್ದೊಂದು ವಾತಾವರಣವನ್ನೇ ಸಮಕಾಲೀನ ರಾಜಕಾರಣ ನಿರೀಕ್ಷಿಸುತ್ತಿದೆ. ಮಾತು ಮತ್ತು ಮೌನಗಳ ಚಾಣಾಕ್ಷಯುತ ನಿರ್ವಹಣೆಯ ಮೂಲಕ ಅದು ಹೊಸ ಪೀಳಿಗೆಯ ಯೋಚಿಸುವ ಶಕ್ತಿಯನ್ನು ಕೊಂದುಬಿಟ್ಟಿದೆ. ಅಧಿಕಾರರೂಢ ಮತ್ತು ವಿರೋಧ ಪಕ್ಷಗಳು ಯಾವುದು ವಾಸ್ತವವಲ್ಲವೋ ಅದನ್ನು ಸೃಷ್ಟಿಸಿ ಸಮ್ಮತಿಯನ್ನು ಉತ್ಪಾದಿಸಿಕೊಳ್ಳುತ್ತಿವೆ. ವಾಸ್ತವವನ್ನು ಮುಚ್ಚಿಟ್ಟು ಭಾವುಕ ಸಂಗತಿಗಳ ದಾಳಗಳನ್ನು ಎಸೆದು ಪ್ರಜಾಪ್ರಭುತ್ವದ ಅಖಾಡದ ಸಂವೈಧಾನಿಕ ನಿಯಮಾವಳಿಗಳನ್ನು ಉಲ್ಲಂಘಿಸುತ್ತಿವೆ.
ಈಗ ನಮಗೆ ಎಂಥ ರಾಜಕಾರಣ ಬೇಕಾಗಿದೆ ಎಂದರೆ ನಮ್ಮ ಬದುಕು ಅದರಿಂದ ಉದ್ಧರಿಸಲ್ಪಡುವಂತಿರಬೇಕು. ಈ ನಮ್ಮ ಬದುಕಿನ ವ್ಯಾಪ್ತಿಯೊಳಗೆ ಎಲ್ಲ ಧರ್ಮಗಳವರೂ ಇರಬೇಕು. ಎಲ್ಲ ಜಾತಿಗಳವರೂ ಇರಬೇಕು. ಅವರವರ ನಂಬಿಕೆಗಳ ಭಾವಜಗತ್ತನ್ನು ಮತ್ತಷ್ಟು ಉದಾತ್ತಗೊಳಿಸುವ ಪ್ರಯತ್ನಗಳಿಗೆ ಅಲ್ಲಿ ಅವಕಾಶವಿರಬೇಕು. ಆ ಮೂಲಕ ಹೊಸ ವಿಶ್ವಾಸಾರ್ಹತೆ ಮೂಡಬೇಕು. ಅಪನಂಬಿಕೆ ಮತ್ತು ಮೂಢನಂಬಿಕೆಗಳ ಜಾಡ್ಯಗಳನ್ನು ತೊರೆಯುವ ಹೃದಯವೈಶಾಲ್ಯತೆ ನೆಲೆಗೊಳ್ಳಬೇಕು. ಹಾಗಾಗುವ ಹಾಗೆ ರಾಜಕಾರಣವು ನಾಯಕತ್ವವನ್ನು ಚಿಗುರಿಸಬೇಕು. ಮಾತಿನ ಭಾಷಿಕ ಅಬ್ಬರದ ಬದಲು ಮಿತಭಾಷಿಕ ಸೌಜನ್ಯವನ್ನು ಸೃಷ್ಟಿಸಬೇಕು.
ಘಾಸಿಗೊಳ್ಳುತ್ತಿರುವ ಆಯ್ಕೆ ಹಕ್ಕು
ಹಾಗೆ ಆಗುತ್ತಿಲ್ಲ. ಸ್ವಾತಂತ್ರ್ಯಾನಂತರ ಹಲವು ದಶಕಗಳಾದರೂ ಭಾರತದ ಕನಸುಗಳ್ಯಾವುವೂ ಸಾಕಾರಗೊಳ್ಳಲಿಲ್ಲ ಮತ್ತು ಅಧಿಕಾರದಲ್ಲಿದ್ದ ಹಿಂದಿನವರು ಉದ್ದೇಶಪೂರ್ವಕವಾಗಿ ಆ ಕನಸುಗಳನ್ನು ಸಾಕಾರಗೊಳಿಸುವುದರ ಕಡೆಗೆ ಗಮನಹರಿಸಲಿಲ್ಲ ಎಂಬ ಕೊರಗುಗಳನ್ನು ಮುಂದಿಡುತ್ತಲೇ ತಮ್ಮ ಪರವಾದ ಅಲೆಯನ್ನು ಸೃಷ್ಟಿಸಿಕೊಂಡ ರಾಜಕೀಯ ಪಡೆಗಳು ಅಧಿಕಾರಕ್ಕೆ ಬಂದ ತಕ್ಷಣ ಮತ್ತದೇ ಸ್ಥಗಿತತೆಯ ಜಾಡ್ಯವನ್ನೇ ಪರಮಲಕ್ಷಣವಾಗಿಸಿಕೊಂಡಿವೆ. ಯಾವುದನ್ನು ವಿರೋಧಿಸಿ ಅಧಿಕಾರಕ್ಕೆ ಬರುತ್ತಾರೋ ಅವರೇ ತಾವು ಹಿಂದೆ ವಿರೋಧಿಸಿದ್ದ ನಡೆಯನ್ನೇ ಮರುಪ್ರತಿಷ್ಠಾಪಿಸಿಕೊಳ್ಳುವುದು ರಾಜಕಾರಣಿ, ರಾಜಕೀಯ ಪಕ್ಷಗಳ ಅಲಿಖಿತ ಕಡ್ಡಾಯ ನಿಯಮವಾಗಿಬಿಟ್ಟಿದೆಯೇನೋ ಎಂದು ಭಾಸವಾಗುತ್ತಿದೆ. ಈ ವಿಚಿತ್ರ ನಡೆಗಳು ಭಾರತದ ಪ್ರಜೆಗಳ ಆಯ್ಕೆಯ ಹಕ್ಕನ್ನು ಘಾಸಿಗೊಳಿಸಿವೆ.
ನಿರ್ಲಿಪ್ತ ಭಾವ
ಅಧಿಕಾರದಲ್ಲಿದ್ದವರನ್ನು ಪ್ರಶ್ನಿಸಬೇಕು ಎಂಬ ಮನೋಭಾವವು ವಿರೋಧ ಪಕ್ಷಗಳಿಂದ ಪ್ರಚೋದಿತವಾಗಬೇಕಿಲ್ಲ. ಮಾಧ್ಯಮಗಳ ವಿಶ್ಲೇಷಣೆಗಳನ್ನೇ ನೆಚ್ಚಿಕೊಂಡು ಪ್ರಶ್ನಿಸುವ ಅಗತ್ಯವಿಲ್ಲ. ಈ ದೇಶದ ಸಂವಿಧಾನ ಒದಗಿಸಿರುವ ಪ್ರಶ್ನಿಸುವ ಅವಕಾಶವನ್ನು ಬಳಸಿಕೊಳ್ಳುವ ವಿವೇಕ ನಮ್ಮೆಲ್ಲರದ್ದಾಗಿರಬೇಕು. ಈ ವಿವೇಕವನ್ನು ಪ್ರಖರಗೊಳಿಸುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳು ಗಮನಾರ್ಹ ಪಾತ್ರನಿರ್ವಹಿಸಬೇಕು. ಪ್ರಶ್ನೆ ಕೇಳುವ ಸಾಧ್ಯತೆಗಳನ್ನು ವರ್ತಮಾನದ ರಾಜಕಾರಣ ಹೇಗೆ ಮೊಟಕುಗೊಳಿಸುತ್ತಿದೆ ಎಂದರೆ ಕಣ್ಣಮುಂದೆ ಎಷ್ಟೆಲ್ಲಾ ಊನಗಳಿದ್ದರೂ, ಸ್ವತಃ ವ್ಯವಸ್ಥೆಯ ಲೋಪಗಳ ಕಾರಣಕ್ಕಾಗಿಯೇ ನೋವು ಅನುಭವಿಸಿದರೂ ಅವುಗಳ ಬಗ್ಗೆ ಮಾತನಾಡಬಾರದು ಎಂಬ ನಿರ್ಲಿಪ್ತ ಭಾವವನ್ನೇ ನೆಚ್ಚಿಕೊಳ್ಳುವಂತೆ ಒತ್ತಡಗಳು ಸೃಷ್ಟಿಯಾಗುತ್ತಿವೆ.
ಪ್ರತಿಮೆಯ ನೆಗೆತ!
ಅಧಿಕಾರಕ್ಕೆ ಹತ್ತಿರವಾಗುವ ರಹಸ್ಯ ಕಾರ್ಯಸೂಚಿಯೊಂದಿಗೆ ರಾಜಕೀಯ ಪಡೆಗಳು ಇತಿಹಾಸದ ಮೌಲಿಕ ಸಂಸ್ಥೆಯನ್ನು ತಮ್ಮ ಹತಾರೆಗಳೊಂದಿಗೆ ಈಗಾಗಲೇ ಪ್ರವೇಶಿಸಿಬಿಟ್ಟಿವೆ. ಈಗಾಗಲೇ ಆಗಿಹೋದ ಸಂಗತಿಯೊಂದರ ವಿವರವನ್ನು ತಮ್ಮ ಉದ್ದೇಶಕ್ಕೆ ತಿರುಗಿಸಿಕೊಳ್ಳುವ ಚಾಣಾಕ್ಷ ನಡೆಗಳೊಂದಿಗೆ ಅವು ಯಶಸ್ಸು ಸಾಧಿಸುತ್ತಿವೆ. ಈಗಾಗಲೇ ಆಗಿಹೋದವರನ್ನು ಟೀಕಿಸುವ ಹುಮ್ಮಸ್ಸಿನಲ್ಲಿ ಸದ್ಯಕ್ಕೆ ಸರಿಯಾದ ಹಾದಿ ತೋರಿಸುವ ಆದರ್ಶದ ಐತಿಹಾಸಿಕ ಪರಂಪರೆಯ ಮೌಲಿಕತೆಯನ್ನು ಉದ್ದೇಶಪೂರ್ವಕವಾಗಿ ಹಿನ್ನೆಲೆಗೆ ಸರಿಸಲಾಗುತ್ತಿದೆ. ಈ ಹಿಂದಿನವರು ವಿಜೃಂಭಿಸಿದ ಪ್ರತಿಮಾ ರಾಜಕಾರಣವು ಇದೀಗ ಹೊಸದೊಂದು ನೆಗೆತ ನೆಗೆದಿದೆ ಅಷ್ಟೇ. ಯಾರ ಆದರ್ಶಗಳನ್ನು ನಾವು ಬದುಕಿನೊಳಗೆ ಅಳವಡಿಸಿಕೊಳ್ಳುತ್ತಾ ಸಾಗುವ ಬದಲು ಅವುಗಳನ್ನು ನಾಮ್ಕೇವಾಸ್ತೆ ಎಂಬಂತೆ ನೆನಪಿಸಿಕೊಳ್ಳುತ್ತಾ ಅವರ ಮೂರ್ತಿಗಳನ್ನು ಆರಾಧಿಸಿದೆವು. ಹಾಗೆ ಆರಾಧಿಸುವ ಹಾಗೆ ನಮ್ಮ ಮೇಲೆ ಭಾವುಕ ಪ್ರಭಾವವನ್ನು ಬೀರಲಾಯಿತು. ಈಗ ಆ ತರಹದ ಪ್ರಭಾವ ದಟ್ಟವಾಗಿ ಪ್ರತಿಮಾ ರಾಜಕಾರಣ ಹೊಸದೊಂದು ಕಾರ್ಯಸೂಚಿಯನ್ನು ಕಾರ್ಯಗತಗೊಳಿಸುವುದರ ಕಡೆಗೆ ಕಾರ್ಯೋನ್ಮುಖವಾಗಿದೆ.
ಇತಿಹಾಸ ತಿರುಚುವ ರೋಚಕ ಶೈಲಿ
ಇತಿಹಾಸವನ್ನು ಜನಪ್ರಿಯ ಶೈಲಿಯಲ್ಲಿ ತಿರುಚುವ ನಕಾರಾತ್ಮಕ ಶೈಲಿಯು ಒಂದು ಟ್ರೆಂಡ್ನ ರೂಪದಲ್ಲಿ ಇದೀಗ ಅಸ್ತಿತ್ವದಲ್ಲಿದೆ. ಈಗಾಗಲೇ ಆಗಿಹೋದ ಇತಿಹಾಸದಲ್ಲಿ ನಾವು ನಿಖರ ವಿವರಗಳ ಆಧಾರದಲ್ಲಿ ಮಹತ್ವದ ವ್ಯಕ್ತಿತ್ವಗಳ ಕೊಡುಗೆಗಳನ್ನು ಗ್ರಹಿಸಿಕೊಂಡಿರುತ್ತೇವೆ. ಆ ಕೊಡುಗೆಗಳು ವರ್ತಮಾನ ಮತ್ತು ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವ ರೀತಿಯಲ್ಲಿಯೇ ಚರ್ಚಿತವಾಗಬೇಕು ಎಂಬ ಎಚ್ಚರವನ್ನೂ ಇದೇ ಇತಿಹಾಸದ ವಿವೇಚನಾತ್ಮಕ ವಿಶ್ಲೇಷಣೆಗಳು ನಮ್ಮೊಳಗೆ ನೆಲೆಗೊಳಿಸಿರುತ್ತವೆ. ರಾಜಕೀಯ ಪಡೆಗಳ ಕಾರ್ಯಸೂಚಿಗಳು ಈ ವಿವೇಚನಾತ್ಮಕ ಎಚ್ಚರದ ಪ್ರಜ್ಞೆಯನ್ನು ಒಡೆದುಬಿಡುತ್ತವೆ. ಇಲ್ಲಿಯವರೆಗೆ ಸರಿಯಾಗಿ ಗ್ರಹಿಸಿದವರ ತಲೆಮಾರಿನ ಪ್ರಜ್ಞೆಯನ್ನು ಛಿದ್ರಗೊಳಿಸಿದ್ದಲ್ಲದೇ ಹೊಸ ಪೀಳಿಗೆಯೊಳಗೂ ಅನುಮಾನಗಳನ್ನು ಬಿತ್ತಿ ಅಧಿಕಾರದ ಗಮ್ಯವನ್ನು ತಲುಪಿಕೊಳ್ಳುವ ಹುನ್ನಾರಗಳು ತೀವ್ರಗೊಳ್ಳುವ ಹಾಗೆಯೇ ಈ ಒಡೆಯುವಿಕೆಯು ಅಗಾಧವಾಗಿರುತ್ತದೆ. ಅಹಿಂಸೆಯಿಂದಲಷ್ಟೇ ಸ್ವಾತಂತ್ರ್ಯ ಹೋರಾಟಕ್ಕೆ ಯಶಸ್ಸು ದಕ್ಕಲಿಲ್ಲ, ಗಾಂಧೀಜಿಯೊಬ್ಬರಿಂದಲೇ ಎಲ್ಲವೂ ಆಗಲಿಲ್ಲ, ಹಿಂಸೆಗೆ ಪ್ರಚೋದನೆ ನೀಡಿದವರು ಇಲ್ಲದಿದ್ದರೆ ಸ್ವಾತಂತ್ರ್ಯ ದಕ್ಕುತ್ತಿರಲಿಲ್ಲ, ಸಂವಿಧಾನವನ್ನು ಈ ದೇಶದ ಆಚಾರ-ವಿಚಾರಗಳಿಗೆ ಅನುಗುಣವಾಗಿ ಬದಲಿಸಬೇಕು, ಅದರಲ್ಲಿ ಅನೇಕ ಸಮಸ್ಯೆಗಳಿವೆ, ಇಂಥವರ ಬದಲು ಇಂಥವರು ಪ್ರಧಾನಿಯಾಗಿದ್ದಿದ್ದರೆ ಈ ದೇಶದ ಚಿತ್ರಣವೇ ಬದಲಾಗಿಬಿಟ್ಟಿರುತ್ತಿತ್ತು… – ಹೀಗೆ ವಿವಿಧ ರೀತಿಗಳಲ್ಲಿ ತರಹೇವಾರಿ ವಿತಂಡವಾದಿ ದೃಷ್ಟಿಕೋನಗಳನ್ನು ಹರಿಬಿಟ್ಟು ಇತಿಹಾಸದ ಸಾಂಸ್ಥಿಕ ಮೌಲ್ಯಕ್ಕೆ ಧಕ್ಕೆಯುಂಟುಮಾಡಲಾಗುತ್ತಿದೆ.
ಭಾವುಕ ಸರೋವರಕ್ಕೆ ವಿಷ ಬೆರೆಕೆ
ಒಂದು ಕಡೆಗೆ ದೇವರು, ಧರ್ಮ, ನಂಬಿಕೆಗಳ ಕುರಿತ ಜಿಜ್ಞಾಸೆ. ಮತ್ತೊಂದು ಕಡೆಗೆ ಯಾತನೆಗಳೊಂದಿಗೇ ಬದುಕು ದೂಡುವ ಅನಿವಾರ್ಯತೆ ಎದುರಿಸುತ್ತಿರುವ ಜನರು. ಸಮಸ್ಯೆಗಳನ್ನು ನಿವಾರಿಸುವ ಮಹತ್ವದ ಹೊಣೆಗಾರಿಕೆಯನ್ನು ನಿಭಾಯಿಸಬೇಕಿದ್ದ ಅಧಿಕಾರರೂಢ ಆಡಳಿತಾತ್ಮಕ ವ್ಯವಸ್ಥೆಯು ತನ್ನ ಪಾಡಿಗೆ ತಾನಿರುತ್ತಾ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುತ್ತಾ ಸಹನಶೀಲತೆಯು ಭಾರತೀಯ ಪರಂಪರೆಯ ಬಹುದೊಡ್ಡ ಹೆಮ್ಮೆ ಎಂಬುದನ್ನೇ ಮುನ್ನೆಲೆಗೆ ತರುತ್ತದೆ. ಬದಲಾವಣೆಗೆ ಕಾಯಬೇಕು, ಸಮಸ್ಯೆಗಳಿದ್ದರೆ ಸಹಿಸಿಕೊಳ್ಳಬೇಕು, ಒಂದಲ್ಲ ಒಂದು ದಿವಸ ಅವು ಪರಿಹಾರ ಕಾಣುತ್ತವೆ, ಅದಕ್ಕಾಗಿಯೇ ನಾವು ಶ್ರಮಿಸುತ್ತಿರುವುದು ಎಂದು ಅಧಿಕಾರರೂಢ ರಾಜಕಾರಣ ನಂಬಿಸುತ್ತದೆ. ಪ್ರಶ್ನೆಗಳು, ಪ್ರತಿರೋಧದ ಅಲೆ ಶುರುವಾಗುತ್ತಿದ್ದಂತೆ ದೇವರು, ಧರ್ಮ ಮತ್ತು ನಂಬಿಕೆಗಳಿಗೆ ಸಂಬಂಧಿಸಿದ ಭಾವುಕ ಸಂಗತಿಗಳ ಸರೋವರಕ್ಕೆ ಕಲ್ಲೆಸೆದು ವೈರುಧ್ಯದ ಅಲೆಗಳನ್ನೇಳಿಸಿಬಿಡುತ್ತದೆ.ಶುದ್ಧ ತಿಳಿವಿನ ತಿಳಿನೀರಿನೊಳಗೆ ಧರ್ಮ, ಜಾತಿ, ಲಿಂಗ ಬೇಧದ ವಿವಾದದ ವಿಷವನ್ನು ಬೆರೆಸಿ ರಾಡಿ ಎಬ್ಬಿಸಿಬಿಡುತ್ತದೆ.
ಸ್ವಯಂದ್ವಂದ್ವಗಳ ಒದ್ದಾಟ
ಇದಾವುದರ ಅರಿವಿಲ್ಲದ ಮುಗ್ಧ ಜನರು ದೇವರೇ ಅವತಾರವೆತ್ತಿ ಮುಂದೊಂದು ದಿನ ತಮ್ಮ ಸಮಸ್ಯೆಗೆ ಪರಿಹಾರ ನೀಡುತ್ತಾರೆ ಅಂದುಕೊಳ್ಳುತ್ತಾ, ತಮ್ಮ ಬದುಕನ್ನು ಉದ್ಧರಿಸಿಕೊಳ್ಳುವ ಸಂವಿಧಾನಾತ್ಮಕ ಅವಕಾಶಗಳನ್ನು ನಿರಾಕರಿಸುತ್ತಾ ಅದೇ ರಾಡಿಯೊಳಗೇ ಸಿಲುಕಿ ಹೊರಬರಲಾಗದೇ ಒದ್ದಾಡುತ್ತಿರುತ್ತಾರೆ. ದೇವಾಲಯ ಪ್ರವೇಶಿಸಬೇಕೇ? ಬೇಡವೇ? ಪ್ರವೇಶಿಸದಿದ್ದರೆ ಏನಾಗುತ್ತದೆ? ಪ್ರವೇಶಿಸಿದರೆ ಏನಾಗುತ್ತದೆ? ದೇವಾಲಯ ಪ್ರವೇಶದ ಮೂಲಕವೇ ಭಾರತದ ಸಮಾನತೆಯ ಕನಸು ಸಾಕಾರಗೊಳ್ಳುವ ಮೊದಲ ಹೆಜ್ಜೆ ಶುರುವಾಗಬೇಕು? ಎಂಬ ಪ್ರಶ್ನೆಗಳನ್ನೇ ದೃಷ್ಟಿಯಲ್ಲಿರಿಸಿಕೊಂಡ ಚರ್ಚೆಗಳೇ ಪ್ರಧಾನ ಆದ್ಯತೆ ಪಡೆದುಕೊಂಡುಬಿಡುತ್ತವೆ. ದೇವಾಲಯದೊಳಗೆ ಪ್ರವೇಶ ಸರಿಯೇ ತಪ್ಪೇ? ದೇವಸ್ಥಾನದೊಳಗೆ ಪ್ರವೇಶಿಸಿ ಆಮೇಲೆ ದೇವರು ಕುಪಿತಗೊಂಡರೆ? ಈ ತರಹದ ಸ್ವಯಂದ್ವಂದ್ವಗಳೊಂದಿಗೆ ಜನರು ಒದ್ದಾಡುವ ಹಾಗೆ ವಿಚಿತ್ರ ಸನ್ನಿವೇಶ ಸೃಷ್ಟಿಯಾಗುತ್ತದೆ. ಅಂಥ ಒದ್ದಾಟವನ್ನೇ ರಾಜಕಾರಣ ತನ್ನ ಸಂಕುಚಿತ ಇರುವಿಕೆಯನ್ನು ನಿರಂತರವಾಗಿ ಚಾಲ್ತಿಯಲ್ಲಿರಿಸಿಕೊಳ್ಳುವುದಕ್ಕೆ ಬಳಸಿಕೊಳ್ಳುತ್ತದೆ.
ತಿರುಚಿದ ವಿವರಗಳ ವೈಭವ!
ಸರಿಯಾಗಿ ಆಲೋಚಿಸುವ ಮತ್ತು ಸರಿಯಾಗಿ ಆಲೋಚಿಸದ ಎರಡು ಗುಂಪುಗಳಲ್ಲಿ ಚಿಂತಕರು ವಿಭಜಿಸಲ್ಪಡುತ್ತಿದ್ದಾರೆ. ಸರಿಯಾಗಿ ಆಲೋಚಿಸುವ ಗುಂಪಿನೊಳಗೂ ಸರಿಯಾಗಿ ಆಲೋಚಿಸದವರೂ ಇರಬಹುದು. ಅಂಥವರು ಅತ್ಯಂತ ವಿವೇಚನಾಪೂರ್ಣವಾಗಿ ಯೋಚಿಸಿ ಪ್ರತಿಕ್ರಿಯಿಸುವವರು. ಓದಿಕೊಳ್ಳುವ, ತಿಳಿದುಕೊಳ್ಳುವ, ಇತಿಹಾಸಕ್ಕೆ ಅಪಚಾರ ಬಗೆಯದ ಸಂಯಮದ ವ್ಯಕ್ತಿತ್ವಗಳವರು ಅವರು. ಈ ಗುಂಪಿನಲ್ಲಿಯೂ ಸರಿಯಾಗಿ ಆಲೋಚಿಸದವರೂ ಸಿಗಬಹುದು. ಸರಿಯಾಗಿ ಯೋಚಿಸುವ ಮತ್ತು ಯೋಚಿಸದ ಸಮ್ಮಿಶ್ರ ಗುಂಪಿಗೆ ಪ್ರತಿಯಾಗಿ ಮತ್ತೊಂದು ಗುಂಪು ಯೋಚಿಸುವ ಸಹನೆಯನ್ನೇ ಹೊಂದಿರುವುದಿಲ್ಲ. ಯಥಾಸ್ಥಿತಿ ವಾದಗಳನ್ನೇ ಅತ್ಯಂತ ರಂಜನೀಯವಾಗಿ ಬಿಂಬಿಸುವುದರಲ್ಲಿಯೇ ಖುಷಿ ಕಾಣುವವರು ಇವರು. ತಾವೂ ಯೋಚಿಸುವುದಿಲ್ಲ, ಇನ್ನೊಬ್ಬರು ಯೋಚಿಸುವುದಕ್ಕೂ ಬಿಡುವುದಿಲ್ಲ. ಅಂಥ ಕೆಟಗರಿಯವರು. ಇಂಥ ಗುಂಪುಗಳ ವೈರುಧ್ಯಗಳನ್ನೇ ಇವತ್ತಿನ ರಾಜಕಾರಣವು ತನ್ನ ಮೂಗಿನ ನೇರಕ್ಕೆ ಬಳಸಿಕೊಂಡು ಹೊಸಪೀಳಿಗೆಯನ್ನು ದಾರಿ ತಪ್ಪಿಸುವ ತನ್ನ ಅಜೆಂಡಾವನ್ನು ಅನುಷ್ಠಾನಗೊಳಿಸುತ್ತಿದೆ. ಇತಿಹಾಸದ ಯಾವ ಗಂಧಗಾಳಿ ಗೊತ್ತಿಲ್ಲದವರ ಮುಂದೆ ತಿರುಚಿದ ವಿವರಗಳನ್ನು ಮುಂದಿಟ್ಟಾಗ ಸಹಜವಾಗಿಯೇ ಆರಾಧನಾ ಭಾವ ಹುಟ್ಟಿಕೊಳ್ಳುತ್ತದೆ.
ಚಿಂತಕರ ಅಪಹರಣ
ಈಗಿನ ವೈಚಿತ್ರ್ಯವೆಂದರೆ ಈ ಆರಾಧನೆಯ ಭಾವೋನ್ಮಾದವು ಸರಿಯಾಗಿ ಆಲೋಚಿಸಬೇಕಾದ ಚಿಂತಕರನ್ನೂ ಆವರಿಸಿಕೊಂಡಿದೆ. ತಮಗಿರುವ ಯೋಚಿಸುವ ಶಕ್ತಿಯನ್ನು ಅಧಿಕಾರದಲ್ಲಿರುವವರ ಸುಪರ್ದಿಗೆ ಒಪ್ಪಿಸಿ ಅವರು ಇಟ್ಟ ಹೆಜ್ಜೆಗಳೆಲ್ಲವೂ ಸರಿ ಎಂಬ ಮೂಢನಂಬಿಕೆಯೊಂದಿಗೆ ಇದ್ದು, ಆ ಮೌಢ್ಯವನ್ನು ವರ್ಣರಂಜಿತ ಪದಗಳ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಈ ಗುಂಪಿನಲ್ಲಿ ಈಗಾಗಲೇ ಜನಪ್ರಿಯರಾದ ಲೇಖಕರಿದ್ದಾರೆ. ಸುದಿ ಮಾಧ್ಯಮ ಪ್ರತಿನಿಧಿಸುವ ಹಿರಿಯ ಪತ್ರಕರ್ತರಿದ್ದಾರೆ. ನಟರುಗಳಿದ್ದಾರೆ. ನಟಿಯರಿದ್ದಾರೆ. ತಮ್ಮ ಪ್ರತಿಭೆಯ ಮೂಲಕ ಪಡೆದ ಜನರ ಮನ್ನಣೆಯನ್ನು ಅವರು ಅಧಿಕಾರದಲ್ಲಿರುವವರನ್ನು ಆರಾಧಿಸುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅದೇ ಆರಾಧನಾ ಮನೋಭಾವನೆಯನ್ನು ಜನರೂ ತಾಳುವಂತೆ ಪ್ರಚೋದಿಸುತ್ತಿದ್ದಾರೆ.
ವಿತಂಡವಾದಿ ಸರಳಸೂತ್ರ
ಇಂಥ ಸಂದರ್ಭದಲ್ಲೆಲ್ಲಾ ಅವರು ಸರಳ ಸೂತ್ರವನ್ನು ಅಳವಡಿಸಿಕೊಳ್ಳುತ್ತಾರೆ. ಅಧಿಕಾರದಲ್ಲಿರುವವರನ್ನು ನೀವು ಪ್ರಶ್ನಿಸುತ್ತೀರಿ ಎಂದಾದರೆ, ಯಾರನ್ನು ಆಯ್ಕೆ ಮಾಡುತ್ತೀರಿ? ಇಂಥವರನ್ನಾ? ಎಂದು ಎಸೆದದ್ದಷ್ಟೇ ಅಲ್ಲ, ಇತಿಹಾಸದಲ್ಲಿ ಆಗಿಹೋದ ನಕಾರಾತ್ಮಕ ಸಂಗತಿಗಳನ್ನು ದೇವರು, ಧರ್ಮ ಮತ್ತು ನಂಬಿಕೆಗಳಂತಹ ವಿಷಯಗಳಿಗೆ ತಳುಕು ಹಾಕಿ ಸರಳೀಕರಿಸಿ ವಿತಂಡವಾದವನ್ನು ಮುಂದಿಡುತ್ತಾರೆ. ಟಿವಿ ಚಾನಲ್ಗಳ ಆ್ಯಂಕರ್ಗಳು, ‘ಸುದ್ದಿಮಿತ್ರರು’ ಈ ವಿತಂಡವಾದದ ಒಳಗೇ ಲಭ್ಯವಾಗುವ ವಿವರಗಳನ್ನೇ ಆಧರಿಸಿ ತಾವೇನೋ ಮಹತ್ವದ್ದನ್ನು ಸಂಶೋಧಿಸಿದ್ದೇವೆ ಎನ್ನುವಂತೆ ಮಾತನಾಡುತ್ತಾರೆ. ಈ ಬಗೆಯ ದಾರಿ ತಪ್ಪಿಸುವ ಆಟ ಬಹಳ ದಿವಸಗಳ ಕಾಲ ನಡೆಯುವುದಿಲ್ಲ ಎಂಬ ಸತ್ಯ ಅವರಿಗೆ ಗೊತ್ತಿದ್ದರೂ ನಡೆದಷ್ಟು ದಿವಸ ಮಾಧ್ಯಮಗಳಿಗೆ ಲಾಭ ದಕ್ಕಿದರೆ ಸಾಕಲ್ಲವೇ ಎಂಬ ಭಂಡಧೈರ್ಯದೊಂದಿಗೆ ಇರುತ್ತಾರೆ.
ಪ್ರಶ್ನಿಸಬೇಕು, ದ್ವೇಷಿಸಬಾರದು
ಪ್ರಶ್ನಿಸಬೇಕು, ದ್ವೇಷಿಸಬಾರದು. ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದವರನ್ನು ತಾರ್ಕಿಕವಾಗಿ ಪ್ರಶ್ನಿಸಿ ಸರಿಹಾದಿಯಲ್ಲಿರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಚಿಂತಕರು ನಿರ್ವಹಿಸಬೇಕು. ಯಾರೇ ಅಧಿಕಾರಕ್ಕೆ ಬಂದರೂ ಅವರನ್ನು ಎಚ್ಚರಿಸಬೇಕು. ಜನರು ಸರಿಯಾಗಿ ಆಲೋಚಿಸುವಂತೆ ಪ್ರೇರಣೆ ನೀಡಬೇಕು. ಚಿಂತಕರು ಮುಖ್ಯವಾಗಿ ಯಾವುದೇ ರಾಜಕೀಯ ಪಕ್ಷಗಳ ಕಾರ್ಯಕರ್ತರಾಗಿರುವುದಿಲ್ಲ ಎಂಬ ವಿಶ್ವಾಸ ಜನರಲ್ಲಿದೆ. ಆ ವಿಶ್ವಾಸವನ್ನು ಕಳೆದುಕೊಳ್ಳಬಾರದು. ಈ ದೇಶದ ಉನ್ನತ ಹುದ್ದೆಯಿಂದ ಕೆಳಹಂತಗಳ ಆಡಳಿತಾತ್ಮಕ ಸಂಸ್ಥೆಗಳನ್ನು ಪ್ರತಿನಿಧಿಸುವ ನಾಯಕರೆನ್ನಿಸಿಕೊಂಡವರೆಲ್ಲರೂ ನಮಗೆ ಮುಖ್ಯ. ಅವರು ಆ ಹುದ್ದೆಗಳನ್ನು ಅಲಂಕರಿಸಿದ ನಂತರ ಅವರ ಹೊಣೆಗಾರಿಕೆ ಹೆಚ್ಚುತ್ತಲೇ ಇರುತ್ತದೆ ಎಂಬುದನ್ನು ಚಿಂತಕರೆನ್ನಿಸಿಕೊಂಡವರು ನೆನಪಿಸುತ್ತಲೇ ಇರಬೇಕು. ಆದರೆ, ಇಂಥ ಜವಾಬ್ದಾರಿಯನ್ನು ಕೆಲವೇ ಕೆಲವು ಬದ್ಧತೆಯುಳ್ಳವರು ನಿರ್ವಹಿಸುತ್ತಿದ್ದಾರೆ. ಉಳಿದ ಅನೇಕರು ಅಧಿಕಾರದಲ್ಲಿರುವವರ ಬಗ್ಗೆ ಅಂಧಾಭಿಮಾನ ಪ್ರದರ್ಶಿಸುತ್ತಿದ್ದಾರೆ. ಇಂಥವರನ್ನೇ ಬಳಸಿಕೊಂಡು ರಾಜಕೀಯ ಪಡೆಗಳು ತಮ್ಮ ರಹಸ್ಯ ಕಾರ್ಯಸೂಚಿಯನ್ನು ಪ್ರಯೋಗಿಸುತ್ತಿವೆ. ಚಿಂತಕರ ಆ ಪಂಥ ಮತ್ತು ಈ ಪಂಥಗಳನ್ನು ಪರಸ್ಪರ ಸಂಘರ್ಷಕ್ಕಿಳಿಸಿ ಇತಿಹಾಸದ ವ್ಯಾಪ್ತಿಯನ್ನು ಸಂಕುಚಿತಗೊಳಿಸಿ ತಮ್ಮ ಅಧಿಕಾರದಾಹದ ಉದ್ದೇಶಗಳನ್ನು ಈಡೇರಿಸಿಕೊಳ್ಳುತ್ತಿವೆ.
–ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.
ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.
ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.
ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ6 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ7 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ18 hours agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

