ದಿನದ ಸುದ್ದಿ
ರಾಜ್ಯಾದ್ಯಂತ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜಾಗೃತಿ ಜಾಥಾ
ಸುದ್ದಿದಿನ ಡೆಸ್ಕ್ : ನಾಡಿನಾದ್ಯಂತ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ವಿವಿಧ ಜಿಲ್ಲೆಗಳಲ್ಲಿ ಕಾರ್ಯಕ್ರಮ ಜರುಗಿದ ವರದಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಮಿಕರ ಇಲಾಖೆ ಜಂಟಿ ಸಹಯೋಗದಲ್ಲಿ ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆಯಿತು. ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೀರಾದಾರ ದೇವಿಂದ್ರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ, ಮಕ್ಕಳನ್ನು ದುಡಿಮೆಗೆ ತಳ್ಳದೆ ಉತ್ತಮ ಶಿಕ್ಷಣ ನೀಡಬೇಕೆಂದು ಕರೆ ನೀಡಿದರು.
ಮಂಡ್ಯ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಉಪವಿಭಾಗ ಅಧಿಕಾರಿ ಆರ್. ಐಶ್ವರ್ಯ ಮನವಿ ಮಾಡಿದ್ದಾರೆ. ಬಾಲ ಕಾರ್ಮಿಕ ಪದ್ಧತಿ ಕೊನೆಗೊಳಿಸಲು ಸಾರ್ವತ್ರಿಕ, ಸಾಮಾಜಿಕ ರಕ್ಷಣೆ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಯಿತು. ಬಾಲ ಕಾರ್ಮಿಕರಿಗೆ ಸಂಬಂಧಿಸಿದ ದೂರುಗಳನ್ನು 1097 ಸಹಾಯವಾಣಿಗೆ ಕರೆ ಮಾಡಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.
ಉತ್ತರಕನ್ನಡ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಕಾರವಾರದಲ್ಲಿಂದು ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾ ಬಾಲ ಕಾರ್ಮಿಕ ವಿರೋಧಿ ಅಧಿಕಾರಿ ಅಕ್ಬರ್ ಹಬೀಬಸಾಬ್ ಮುಲ್ಲಾ ಮಾತನಾಡಿ 14 ವರ್ಷ ವಯೋಮಿತಿಯ ಕೆಳಗಿನ ಮಕ್ಕಳು ಕಡ್ಡಾಯ, ಉಚಿತ ಶಿಕ್ಷಣ ಪಡೆಯಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಯಾದಗಿರಿ ಜಿಲ್ಲಾಡಳಿತ ಭವನದಲ್ಲಿ ನಡೆದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಸಾಹಿಲ್ ಅಹ್ಮದ್ ಕುನ್ನಿಬಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಆರ್ಥಿಕ ಸಂಕಷ್ಟದಿಂದ ಬಡ ಕುಟುಂಬದ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವಂತಹ ಪರಿಸ್ಥಿತಿ ಇದೆ.
ಇಂತಹ ಬಡ ಕುಟುಂಬಗಳ ಬಾಲ ಕಾರ್ಮಿಕ ಮಕ್ಕಳನ್ನು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸಂಬಂಧ ಪಟ್ಟ ಇಲಾಖೆಯವರು ಗುರುತಿಸಿ ತಕ್ಷಣ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೆ ತರಬೇಕೆಂದು ಸಲಹೆ ಮಾಡಿದರು.
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ. ಗಿರೀಶ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಯಾವುದೇ ಅಪಾಯಕಾರಿ ಸಂಸ್ಥೆಗಳಲ್ಲಿ 14 ವರ್ಷದ ಮಕ್ಕಳನ್ನು ದುಡಿಮೆಗೆ ನೇಮಕ ಮಾಡಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ವತಿಯಿಂದ ದೇಶದ 75 ಸ್ಥಳಗಳಲ್ಲಿ ಇಂದಿನಿಂದ ಬಾಲ ಕಾರ್ಮಿಕ ನಿರ್ಮೂಲನಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243