ದಿನದ ಸುದ್ದಿ
2019 ರ ಚುನಾವಣಾ ತೀರ್ಪು : ಬಲಪಂಥೀಯ ದಾಳಿಯ ಕ್ರೋಡೀಕರಣದ ಸೂಚನೆ
- ಮೋದಿಯವರನ್ನು ಒಬ್ಬ ಬಲಿಷ್ಠ ನಾಯಕನನ್ನಾಗಿ ಬಿಂಬಿಸಿ ಬಿಜೆಪಿ ಪ್ರಚಾರ ನಡೆಸಿದ್ದು ಮತ್ತು ಪುಲ್ವಾಮಾ ನಂತರದ ಪರಿಸ್ಥಿತಿ ಹಾಗೂ ಬಾಲಾಕೋಟ್ ದಾಳಿಯನ್ನು ಬಳಸಿಕೊಂಡು ಕೋಮುವಾದಿ ಛಾಯೆಯ ರಾಷ್ಟ್ರವಾದವನ್ನು ಬಡಿದೆಬ್ಬಿಸಿದ್ದು ಮೋದಿ ಸರಕಾರದ ಅಡಿಯಲ್ಲಿ ಜನರು ಎದುರಿಸಿದ ನೈಜ ಸಮಸ್ಯೆಗಳಾದ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಹದಗೆಡುತ್ತಿರುವ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ದಲಿತರ ಮೇಲಿನ ನಿರಂತರ ದಾಳಿಗಳು ಇವುಗಳನ್ನು ಮೀರಿ ನಿಲ್ಲುವಲ್ಲಿ ಯಶಸ್ಸನ್ನು ತಂದುಕೊಟ್ಟಿತೆಂದು ಕಾಣಿಸುತ್ತದೆ. 2014ರ ನಂತರ ಬಲಪಂಥೀಯ ದಾಳಿ ಇನ್ನಷ್ಟು ಕ್ರೋಡೀಕರಣಗೊಂಡಿರುವುದನ್ನು ಈ ಫಲಿತಾಂಶ ಸೂಚಿಸುತ್ತದೆ.
17ನೇ ಲೋಕಸಭೆ ಚುನಾವಣೆಯ ಫಲಿತಾಂಶವಾಗಿ ಬಿಜೆಪಿ ಮತ್ತು ಎನ್ಡಿಎ ನಿರ್ಣಾಯಕ ಬಹುಮತವನ್ನು ಪಡೆದು ಮೋದಿ ಸರಕಾರ ಅಧಿಕಾರಕ್ಕೆ ಮರಳಿದೆ. ಬಿಜೆಪಿಯ ಬಹುಮತ ಏರಿಕೆಯಾಗಿದೆ ಹಾಗೂ ಎನ್ಡಿಎಯ ಒಟ್ಟಾರೆ ಸಂಖ್ಯೆಯೂ ಏರಿದೆ.
ಮೋದಿಯವರನ್ನು ಒಬ್ಬ ಬಲಿಷ್ಠ ನಾಯಕನನ್ನಾಗಿ ಬಿಂಬಿಸಿ ಬಿಜೆಪಿ ಪ್ರಚಾರ ನಡೆಸಿದ್ದು ಹಾಗೂ ಪುಲ್ವಾಮಾ ನಂತರದ ಪರಿಸ್ಥಿತಿ ಹಾಗೂ ಬಾಲಾಕೋಟ್ ದಾಳಿಯನ್ನು ಬಳಸಿಕೊಂಡು ಕೋಮುವಾದಿ ಛಾಯೆಯ ರಾಷ್ಟ್ರವಾದವನ್ನು ಬಡಿದೆಬ್ಬಿಸಿದ್ದು ಮೋದಿ ಸರಕಾರದ ಅಡಿಯಲ್ಲಿ ಜನರು ಎದುರಿಸಿದ ನೈಜ ಸಮಸ್ಯೆಗಳಾದ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಹದಗೆಡುತ್ತಿರುವ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ದಲಿತರ ಮೇಲಿನ ನಿರಂತರ ದಾಳಿಗಳು ಇವುಗಳನ್ನು ಮೀರಿ ನಿಲ್ಲುವಲ್ಲಿ ಯಶಸ್ಸನ್ನು ತಂದುಕೊಟ್ಟಿತೆಂದು ಕಾಣಿಸುತ್ತದೆ.
ಮೋದಿ ಯುದ್ಧಕೋರ ರಾಷ್ಟ್ರವಾದ ಮತ್ತು ಅದರ ಜತೆಗೆ ರಾಷ್ಟ್ರವಾದದ ಮುಸುಕಿನಲ್ಲಿ ಬಹುಸಂಖ್ಯಾತತ್ವದ ಭಾವನೆಗಳನ್ನು ಬಡಿದೆಬ್ಬಿಸುವ ಉದ್ದೇಶವನ್ನೇ ಹೊಂದಿದ ಕೋಮುವಾದಿ ಅಜೆಂಡಾವನ್ನು ಬೆರೆಸಿದ ಪ್ರಚಾರದ ನೇತೃತ್ವವನ್ನು ವಹಿಸಿದ್ದರು. ಚುನಾವಣೆ ಪ್ರಚಾರದ ಎಲ್ಲಾ ರಂಗಗಳಲ್ಲಿ ಅಭೂತಪೂರ್ವ ರೀತಿಯಲ್ಲಿ ಹಣಬಲದ ಬಳಕೆಯಾಯಿತು. ಸಾಮಾಜಿಕ ಮಾಧ್ಯಮ ಪ್ರಚಾರಕ್ಕೆ ಬಿಜೆಪಿ ನೂರಾರು ಕೋಟಿ ರೂಪಾಯಿಗಳನ್ನು ವ್ಯಯಿಸಿತು. ಮೋದಿ ಒಬ್ಬ ನಿರ್ಣಾಯಕ ನಾಯಕ ಎಂಬ ಸಂದೇಶ ಹಾಗೂ ಅಂತಾರ್ರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಒಂದು ಗೌರವಯುತ ದೇಶವನ್ನಾಗಿ ಅವರು ಮಾಡಿದರು ಮತ್ತು ಪಾಕಿಸ್ತಾನದಿಂದ ನಡೆಯುವ ಭಯೋತ್ಪಾದನೆಯನ್ನು ಎದುರಿಸಿದರು ಎಂದು ವಾಟ್ಸ್ಆಪ್ ಮತ್ತು ಇತರೆ ಸಾಮಾಜಿಕ ಮಾಧ್ಯಮಗಳ ಮೂಲಕ ವ್ಯಾಪಕವಾಗಿ ಬಿಂಬಿಸಲಾಯಿತು.
2014ರ ಚುನಾವಣೆ ನಂತರ ಹರಿಬಿಡಲಾದ ಬಲಪಂಥೀಯ ದಾಳಿ ಇನ್ನಷ್ಟು ಕ್ರೋಡೀಕರಣಗೊಂಡಿರುವುದನ್ನು ಈ ಚುನಾವಣೆ ಫಲಿತಾಂಶ ಸೂಚಿಸುತ್ತದೆ. ಬಿಜೆಪಿ-ಆರ್ಎಸ್ಎಸ್ ಕೂಟ ಸ್ಥಾಪಿಸಿರುವ ರಾಜಕೀಯ ಮತ್ತು ಸೈದ್ಧಾಂತಿಕ ಪ್ರಾಬಲ್ಯದ ವಿರುದ್ಧ ಪರಿಣಾಮಕಾರಿ ಸವಾಲನ್ನು ಎಸೆಯಲು ಎಡ ಪಕ್ಷಗಳೂ ಸೇರಿದಂತೆ ಜಾತ್ಯತೀತ ಪ್ರತಿಪಕ್ಷಗಳಿಗೆ ಸಾಧ್ಯವಾಗಲಿಲ್ಲ ಎನ್ನುವುದು ವಾಸ್ತವ ಸಂಗತಿ.
ಚುನಾವಣೆ ಆಯೋಗ ತಾನು ಮಾಡಬೇಕಾದ್ದನ್ನು ಮಾಡದೆ, ಮಾಡಬಾರದ್ದನ್ನು ಮಾಡುವ ಮೂಲಕ ಬಿಜೆಪಿಗೆ ನೆರವು ನೀಡುತ್ತ ವಹಿಸಿದ ಪಾತ್ರವೂ ಈ ಚುನಾವಣೆಯ ಒಂದು ಕಳವಳಕಾರಿ ಸಂಗತಿಯಾಗಿದೆ. ಪ್ರತಿಪಕ್ಷಗಳಿಗೆ ಸಮಾನ ನೆಲೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಖಾತ್ರಿಗೊಳಿಸುವಲ್ಲಿ ಚುನಾವಣೆ ಆಯೋಗ ವಿಫಲವಾಗಿದ್ದು ಮಾತ್ರವೇ ಅಲ್ಲದೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಕೋಮುವಾದಿ ಹಾಗು ಜಗಳಗಂಟಿ ಭಾಷಣಗಳನ್ನು ನ್ಯಾಯಸಮ್ಮತಗೊಳಿಸಿತು ಕೂಡ.
ಸಿಪಿಐ (ಎಂ) ಮತ್ತು ಎಡ ಪಕ್ಷಗಳು ತೀವ್ರ ಸೋಲನ್ನು ಅನುಭವಿಸಿವೆ. ಪಶ್ಚಿಮ ಬಂಗಾಳ ಮತ್ತು ತ್ರಿಪುರಾದಲ್ಲಿ ಸಿಪಿಐ (ಎಂ) ಭಾರೀ ಅಡ್ಡಿ ಆತಂಕಗಳಲ್ಲದೆ ಭಯೋತ್ಪಾದನೆ, ಹಿಂಸೆ ಮತ್ತು ದಾಳಿಗಳ ನಡುವೆ ಈ ಚುನಾವಣೆಗಳನ್ನು ಎದುರಿಸಿತು. ಸರ್ವ ಪ್ರಯತ್ನಗಳನ್ನು ಮಾಡಿದರೂ ಯಾವುದೇ ಯಶಸ್ಸನ್ನು ಸಾಧಿಸಲು ಪಕ್ಷಕ್ಕೆ ಸಾಧ್ಯವಾಗಲಿಲ್ಲ. ಕೇರಳದಲ್ಲಿ ಎಲ್ಡಿಎಫ್ ಭಾರೀ ಸೋಲನ್ನು ಅನುಭವಿಸಿದ್ದು ನಿರಾಶಾದಾಯಕ ಹಾಗೂ ದೊಡ್ಡ ಹಿನ್ನಡೆಯಾಗಿದೆ. ತಮಿಳುನಾಡಿನಲ್ಲಿ ಮಾತ್ರ ಪಕ್ಷ ಉತ್ತಮ ಫಲಿತಾಂಧ ಪಡೆದಿದೆ. ಅಲ್ಲಿ ಡಿಎಂಕೆ ನೇತೃತ್ವದ ಮೈತ್ರಿಯ ಭಾಗವಾಗಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸಿಪಿಐ (ಎಂ) ಜಯ ಸಾಧಿಸಿದೆ.
ಈ ಗಂಭೀರ ಚುನಾವಣಾ ಹಿನ್ನಡೆಯ ಬಗ್ಗೆ ಪಕ್ಷವು ಸ್ವಯಂಟೀಕಾತ್ಮಕ ಪರೀಕ್ಷಣೆಯನ್ನು ನಡೆಸಲಿದೆ. ಆ ಮೂಲಕ ಸರಿಯಾದ ಪಾಠವನ್ನು ಕಲಿತು ಪಕ್ಷದ ರಾಜಕೀಯ, ಸೈದ್ಧಾಂತಿಕ ಮತ್ತು ಸಂಘಟನಾತ್ಮಕ ಕಾರ್ಯವನ್ನು ನವೀಕರಿಸಲು ಮತ್ತು ಬಲಪಡಿಸಲು ಒಂದು ಸಮಗ್ರ ಕಾರ್ಯತಂತ್ರವನ್ನು ಅಂಗೀಕರಿಸಲಾಗುವುದು.
–ಪ್ರಕಾಶ್ ಕಾರಟ್
ಲೇಖನ ಕೃಪೆ : ಜನಶಕ್ತಿ ಮೀಡಿಯಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

