Connect with us

ಅಂತರಂಗ

ತನ್ನಿಮಿತ್ತ : ಪುಸ್ತಕಗಳ ಮಧ್ಯೆ ಪ್ರಾಣ ಬಿಟ್ಟ ಅಂಬೇಡ್ಕರ್

Published

on

ಮ್ಮ ಪ್ರಾಣಕ್ಕಿಂತಲೂ ಹೆಚ್ಚಾಗಿ ಪ್ರೀತಿಸುತ್ತಿದ್ದ ಪುಸ್ತಕಗಳ ನಡುವೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಹಲೋಕ ತ್ಯಜಿಸಿದರು. ಡಿಸೆಂಬರ್ 5ನೇ ತಾರೀಖು ರಾತ್ರಿ ಬಹಳ ಹೊತ್ತಿನವರೆಗೆ ಓದು ಮತ್ತು ಬರವಣಿಗೆಯಲ್ಲಿ ಮಗ್ನರಾಗಿದ್ದ ಅವರು ತಮ್ಮ ಮುಂದಿದ್ದ ಪುಸ್ತಕಗಳ ಮೇಲೆಯೇ ಕುಸಿದು ಬಿದ್ದಿದ್ದರು. ಡಿಸೆಂಬರ್ 6ರ ಬೆಳಗ್ಗೆ ನೋಡಿದಾಗ ಅವರು ನಾಲ್ಕಾರು ಗಂಟೆಗಳ ಹಿಂದೆಯೇ ಈ ಪ್ರಪಂಚವನ್ನು ತ್ಯಜಿಸಿ ಮಹಾ ಪರಿನಿಬ್ಬಾಣ ಹೊಂದಿದ್ದರು.

ನಂಬಲಸಾಧ್ಯವಾದ ಪುಸ್ತಕ ವ್ಯಾಮೋಹವನ್ನು ಹೊಂದಿದ್ದ ಡಾ. ಅಂಬೇಡ್ಕರ್ರವರು ನಿಧನರಾಗುವ ಹಿಂದಿನ ರಾತ್ರಿಯ (1956 ಡಿಸೆಂಬರ್ 5ರ ರಾತ್ರಿ) ನೈಜ ಪ್ರಸಂಗವನ್ನು ಅಂಬೇಡ್ಕರ್ರವರಿಗೆ 17 ವರ್ಷಗಳ ಕಾಲ ಸಹಾಯಕರಾಗಿ ಸೇವೆ ಸಲ್ಲಿಸಿದ್ದ ನಾನಕ್ಚಂದ್ ರತ್ತು ಹೀಗೆ ದಾಖಲಿಸಿದ್ದಾರೆ: ಡಿಸೆಂಬರ್ 5ನೇ ತಾರೀಖು ಅವರು ಇಡೀ ದಿನ ಅಧ್ಯಯನದಲ್ಲಿ ಮುಳುಗಿದ್ದರು, ರಾತ್ರಿ 10 ಗಂಟೆಯ ವೇಳೆಗೆ ತುಂಬಾ ಬಳಲಿದ್ದರು. ಕೆಲಸದಾಳು ಸುಧಾಮ ಹಲವಾರು ಸಾರಿ ಊಟಕ್ಕೆ ಕರೆದಿದ್ದನು.

ಆದರೂ ಬಾಬಾಸಾಹೇಬರು ಊಟಕ್ಕೆ ಹೋಗದೆ ಅಧ್ಯಯನದಲ್ಲಿ ತಲ್ಲೀನರಾಗಿದ್ದರು. ಕೊನೆಗೂ ನಮ್ಮೆಲ್ಲರ ಬಲವಂತದಿಂದಾಗಿ ಒಲ್ಲದ ಮನಸ್ಸಿನಿಂದ (ಅಧ್ಯಯನ ನಿಲ್ಲಿಸಿ ಊಟಕ್ಕೆ ಕರೆಯುತ್ತಾರಲ್ಲ ಎಂಬ ಸಿಟ್ಟಿನಿಂದಲೂ ಸಹ) ಸುಮಾರು ರಾತ್ರಿ 10.15ರ ಸಮಯಕ್ಕೆ ತಮ್ಮ ಅಧ್ಯಯನದ ಕೊಠಡಿಯಿಂದ ಎದ್ದು ಊಟದ ಕೋಣೆಯ ಕಡೆಗೆ ಹೊರಟರು. ಡೈನಿಂಗ್ ರೂಂಗೆ ಹೋಗುವಾಗ ತಮ್ಮ ಬಹತ್ತಾದ ಲೈಬ್ರರಿಯು ಅತೀ ದೊಡ್ಡ ಮೈನ್ ಹಾಲ್ನಲ್ಲಿತ್ತು. ತಮ್ಮ ಕೈಯನ್ನು ನನ್ನ ಭುಜದ ಮೇಲಿಟ್ಟುಕೊಂಡು ತಮ್ಮ ಇನ್ನೊಂದು ಕೈಯಲ್ಲಿ ಊರುಗೋಲನ್ನಿಡಿದು, ಪುಸ್ತಕಗಳಿಂದ ತುಂಬಿಹೋಗಿದ್ದ ತಮ್ಮ ದೊಡ್ಡ ಟೇಬಲ್ನೆಡೆಗೆ ನಡೆದು ಅಲ್ಲಿದ್ದ ಕುರ್ಚಿಯ ಮೇಲೆ ಕುಳಿತುಕೊಂಡರು.ಒಂದು ಚಿಕ್ಕ ಪೆಟ್ಟಿಗೆಯನ್ನು ತೆರೆದರು.

ತಮ್ಮ ಫೌಂಟನ್ ಪೆನ್ ಹೊರತೆಗೆದು ಕೆಲವು ಹಾಳೆಗಳಿಗೆ ಹುಡುಕಾಡಿದರು. ಕೆಲಸದಾಳು ಮೂರನೇ ಬಾರಿಗೆ ಬಂದ. ಅವರು ಕುರ್ಚಿಯಿಂದ ಮೇಲೆದ್ದು ಮುಂದೆ ನಡೆದರು. ಒಂದು ಕ್ಷಣ ನಿಂತು ಕೆಲವು ಪುಸ್ತಕಗಳನ್ನು ಕಪಾಟಿನಿಂದ ಹೊರ ತೆಗೆದು ನನ್ನ ಕೈಗಿತ್ತರು. ಸ್ವಲ್ಪ ಮುಂದೆ ಹೋಗಿ ಅವರು ಎರಡೂ ಕಡೆ ನೋಡಿ ಬೇರೆ ಅಲ್ಮೆರಾಗಳಿಂದ ಇನ್ನೂ ಹೆಚ್ಚು ಪುಸ್ತಕಗಳನ್ನು ತೆಗೆದುಕೊಂಡರು. ಆ ಪುಸ್ತಕಗಳನ್ನು ಹಾಸಿಗೆಯ ಹತ್ತಿರದ ತಮ್ಮ ಟೇಬಲ್ಲಿನ ಮೇಲಿಡಲು ನನಗೆ ಹೇಳಿದರು. ಊಟದ ಕೊಠಡಿಯನ್ನು ಪ್ರವೇಶಿಸುವುದಕ್ಕೆ ಮೊದಲು ಹಿಂದಕ್ಕೆ ತಿರುಗಿದರು.

ಒಂದು ಕ್ಷಣ ನಿಂತುಕೊಂಡು ತಮ್ಮ ಜೀವಿತ ಕಾಲದ ನಿಜವಾದ ಮತ್ತು ಮಹಾ ಗೆಳೆಯರಾಗಿದ್ದ ಅಲ್ಮಿರಾಗಳೊಳಗಿದ್ದ ಆ ಪುಸ್ತಕಗಳ ಮೇಲೆ ನೋಟವನ್ನು ಹರಿಸುತ್ತಾ ಊಟದ ಕೊಠಡಿಯ ಒಳಗೆ ಹೋದರು. ಅಡುಗೆ ಮನೆಯ ಎದುರಿಗಿದ್ದ ಕುರ್ಚಿಯ ಮೇಲೆ ಕುಳಿತುಕೊಳ್ಳಲು ನಾನು ಅವರಿಗೆ ಸಹಾಯ ಮಾಡಿದೆ. ಕೆಲಸದಾಳು ಅವರಿಗೆ ಊಟ ಬಡಿಸಿದ. ಸ್ವಲ್ಪ ಅನ್ನವನ್ನು ತಿಂದು ತಟ್ಟೆಯನ್ನು ನನ್ನ ಕಡೆಗೆ ತಳ್ಳಿದರು. ”ನೀನು ತಿನ್ನು,” ಎಂದು ಹೇಳಿದರು. ತಮ್ಮ ತಲೆಯನ್ನು ನೀವಲು ನನಗೆ ಹೇಳಿದರು.

ನಾನು ಸ್ವಲ್ಪ ಹೊತ್ತು ನೀವಿದೆ. ಸ್ವಲ್ಪ ಸಮಯದ ನಂತರ ”ಚಲ್ ಕಬೀರಾ ತೇರಾ ಭವ್ಸಾಗರ್ ದೇರಾ,”ಎಂದು ಗುನುಗುತ್ತ, ಊರುಗೋಲಿನ ಸಹಾಯದಿಂದ ಮೇಲೆದ್ದರು. ನನ್ನ ಭುಜದ ಮೇಲೆ ತಮ್ಮ ತೋಳನ್ನಿರಿಸಿ ಕೆಲವು ಹೆಜ್ಜೆಗಳಷ್ಟು ನಡೆದು ನಿಂತುಕೊಂಡರು. ಲೈಬ್ರರಿಯೊಳಗಿದ್ದ ಪುಸ್ತಕಗಳನ್ನು ಮತ್ತೊಮ್ಮೆ ಮಮತೆಯಿಂದ ನೋಡಿದರು, ನಂತರ ಮಲಗುವ ಕೊಠಡಿ ಪ್ರವೇಶಿಸಿದರು.

ಆಗ ರಾತ್ರಿ ಸುಮಾರು 11-30 ಗಂಟೆ. ವಿಶ್ರಾಂತಿಯಿಲ್ಲದೆ ಹಿಂದಿನ ನಾಲ್ಕು ರಾತ್ರಿಗಳೂ ಸತತವಾಗಿ ಕೆಲಸ ಮಾಡಿದ್ದರಿಂದ ನಾನು ದಣಿದು ಹೋಗಿದ್ದೆ. ನನ್ನ ಹೆಂಡತಿ ಮಕ್ಕಳು ನನಗೋಸ್ಕರ ಆತಂಕದಿಂದ ಕಾಯುತ್ತಿರಬಹುದೆಂದು ಅರಿತಿದ್ದ ನಾನು ಮನೆಗೆ ಹೋಗಲು ಅಣಿಯಾದೆ. ಬಾಬಾ ಸಾಹೇಬರ ದಣಿದುಹೋದ ಮುಖ ಕಣ್ಣುಗಳನ್ನು ನೋಡಿ, ಅವರು ಗಾಢವಾದ ನಿದ್ರೆಗೆ ಹೋಗುತ್ತಾರೆಂದು ನಾನು ಚೆನ್ನಾಗಿ ಊಹಿಸಬಲ್ಲವನಾಗಿದ್ದೆ. ಅವರ ಗಮನವನ್ನು ಸೆಳೆಯಲೆಂದೇ ನಾನು ಟೇಬಲ್ ಮೇಲಿದ್ದ ಪುಸ್ತಕಗಳನ್ನು ಸ್ಥಳಾಂತರಿಸುತ್ತಾ ಟೇಬಲ್ಲನ್ನು ಅಲುಗಾಡಿಸಿದೆ.

ಅವರು ಕಣ್ಣೆತ್ತಿ ನೋಡಿದರು. ಇದರ ಸದುಪಯೋಗ ಪಡೆದುಕೊಂಡು ”ಸ್ವಾಮಿ ಈ ರಾತ್ರಿ ನಾನು ಇಲ್ಲೇ ಇರಬೇಕೆ? ಅಥವಾ ನಾನು ಮನೆಗೆ ಹೋಗಬಹುದೋ?,” ಎಂದು ನಾನು ವಿನೀತನಾಗಿ ಕೇಳಿದೆ. ”ಆಗಲಿ ನೀನು ಮನೆಗೆ ಹೋಗು ವಿಶ್ರಾಂತಿ ಪಡೆದುಕೋ, ನೀನು ಈ ಎಲ್ಲಾ ದಿನಗಳಲ್ಲೂ ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದೀಯ,” ಎಂದು ಅವರು ಹೇಳಿದರು. ನಾನು ಇನ್ನೇನು ಮೈನ್ ಗೇಟನ್ನು ತಲುಪಿ, ನನ್ನ ಬೈಸಿಕಲ್ನೊಡನೆ ಹೊರಗೆ ಹೆಜ್ಜೆ ಇಡುತ್ತಿದ್ದಂತೆಯೇ ಸೇವಕನು ಓಡುತ್ತಾ ಬಂದನು. ”ಸ್ವಾಮಿ, ಬಾಬಾಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ,” ಎಂದನು.

ನನ್ನ ಬೈಸಿಕಲ್ಲನ್ನು ಗೇಟಿನಲ್ಲೇ ಬಿಟ್ಟು, ಕೊಠಡಿ ಪ್ರವೇಶಿಸಿದಂತೆ ಅವರು ಪ್ರಶ್ನಾರ್ಥಕ ಕಣ್ಣುಗಳಿಂದ ಮೇಲೆ ನೋಡಿ ”ನೀನು ಮನೆಗೆ ಹೋಗುವ ಮೊದಲು ಬುದ್ಧ ಶಾಸನ ಕೌನ್ಸಿಲ್ಗೆ, ಅತ್ರೆ ಮತ್ತು ಜೋಷಿಯವರಿಗೆ ನಾನು ಹೇಳಿ ಬರೆಸಿದ್ದ ಕರಡು ಪತ್ರಗಳನ್ನೂ, ಬುದ್ಧ ಅಂಡ್ ಹಿಸ್ ಧಮ್ಮ ಗ್ರಂಥದ ಮುನ್ನುಡಿ ಮತ್ತು ಪರಿಚಯದ ಟೈಪ್ ಮಾಡಿರುವ ಪ್ರತಿಯನ್ನೂ ತೆಗೆದಿಡು ನಂತರ ನಾನು ಅವುಗಳನ್ನೊಮ್ಮೆ ಓದುತ್ತೇನೆ,” ಎಂದರು.

ಇವುಗಳನ್ನು ತಪ್ಪದೇ ಕಳುಹಿಸಬೇಕಾಗಿರುವುದರಿಂದ ಬೆಳಿಗ್ಗೆ ಬೇಗನೇ ಬರಬೇಕೆಂದು ನನ್ನನ್ನು ಕೇಳಿಕೊಂಡರು.
ನಾನು ಅವರ ಆತಂಕವನ್ನು ಚೆನ್ನಾಗಿ ಊಹಿಸಬಲ್ಲವನಾಗಿದ್ದೆ. ನಾನು ಮನೆಗೆ ಹೋಗುವುದಿಲ್ಲವೆಂದೂ ಮತ್ತು ಆ ರಾತ್ರಿ ಅಲ್ಲಿಯೇ ಉಳಿಯುವೆನೆಂದೂ ಅವರಿಗೆ ನಮ್ರವಾಗಿ ಹೇಳಿದೆ. ”ಬೇಡ, ನೀನು ಬಹಳ ದಿನಗಳು ಮನೆಗೆ ಹೋಗಿಲ್ಲ. ನಿನಗೆ ತೊಂದರೆಯುಂಟಾದದ್ದಕ್ಕೆ ನನಗೆ ಬೇಸರವಿದೆ. ಆದರೆ ನೀನು ಸಮರ್ಪಣಾ ಭಾವದಿಂದ, ಭಕ್ತಿಯಿಂದ ಮಾಡಿದ ಸೇವೆಗಾಗಿ ನಾನು ನಿನಗೆ ಕತಜ್ಞನಾಗಿದ್ದೇನೆ. ಆರಾಮವಾಗಿ ಮನೆಗೆ ಹೋಗು, ನಾನು ತುಂಬಾ ಚೆನ್ನಾಗಿದ್ದೇನೆ. ತಲೆ ಕೆಡಿಸಿಕೊಳ್ಳಬೇಡ,” ಎಂದು ಹೇಳಿದರು. ನಾನು ಅವರ ಪಾದಗಳನ್ನು ಮುಟ್ಟಿ ಪೂಜ್ಯಭಾವದಿಂದ ನಮಸ್ಕರಿಸಿ ಮನೆಗೆ ಹೊರಟೆ.

ಅದೊಂದು ನೀರಸ ರಾತ್ರಿಯಾಗಿತ್ತು. ಮಧ್ಯರಾತ್ರಿ ಮುಗಿದುಹೋಗಿತ್ತು. ಮೋಡಗಳ ಮೇಲೆ ಮೋಡಗಳು ರಾಶಿ ರಾಶಿಯಾಗಿ ಕವಿದಿದ್ದವು, ನಾನು ಹಳೆಯ ತರಕಾರಿ ಮಂಡಿ ತಲುಪಿದಾಗ ನನ್ನ ಬೈಸಿಕಲ್ನ ಮುಂದಿನ ಟೈರ್ ಪಂಕ್ಚರ್ ಆಯಿತು. ಬೈಸಿಕಲ್ಅನ್ನು ಮೂರು ಮೈಲಿಗಳಿಗೂ ಹೆಚ್ಚು ದೂರ ತಳ್ಳಿಕೊಂಡು ಹೋಗಬೇಕಾಯಿತು. ತುಂಬಾ ಹೊತ್ತು ಕಾಯ್ದು ಮಲಗಿಬಿಟ್ಟಿದ್ದ ನನ್ನ ಹೆಂಡತಿ ಮಕ್ಕಳಿಗೆ ಬೇಸರವಾಗುವಂತೆ ಬೆಳಗಿನ ಜಾವ 2 ಗಂಟೆಗೆ ಮನೆ ತಲುಪಿದೆ. ಅವಸರವಾಗಿ ಊಟ ಮಾಡಿದೆ.

ನಿದ್ರಿಸಲು ಹೋದೆ, ಬಾಬಾ ಸಾಹೇಬರ ಬಳಿ ಈ ಸಮಯದಲ್ಲಿ ಇರಬೇಕಾಗಿರುವುದರಿಂದ ನನ್ನನ್ನು ಬೇಗನೇ ಎಬ್ಬಿಸಲು ನನ್ನ ಹೆಂಡತಿಗೆ ತಿಳಿಸಿದೆ. ಬಹಳ ದಿನಗಳ ನಂತರ ಮನೆಗೆ ಬಂದಿದ್ದರಿಂದ ಅವಳು ಪ್ರಶ್ನಾರ್ಥಕ ಕಣ್ಣುಗಳಿಂದ ನನ್ನತ್ತ ನೋಡಿದಳು. ಆದರೆ ಆ ನೋಟ ನನ್ನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲವೆಂದು ಅವಳು ಚೆನ್ನಾಗಿ ಅರಿತಿದ್ದಳು. ನನಗೂ ಮಾತನಾಡುವ ಧೈರ್ಯವಾಗಲೀ ಶಕ್ತಿಯಾಗಲೀ ಇರಲಿಲ್ಲ.
ಬೆಳಿಗ್ಗೆ ಸವಿತಾ ಅಂಬೇಡ್ಕರ್ರವರು ನನ್ನನ್ನು ಕರೆತರಲು ಬಾಬಾ ಸಾಹೇಬರ ಮನೆಯ ಅಡುಗೆ ಭಟ್ಟ ಸುಧಾಮ ಮತ್ತು ಬಾಬಾ ಸಾಹೇಬರ ಕಾರು ಚಾಲಕ ಕಾಳು ರವರನ್ನು ಬಾಬಾ ಸಾಹೇಬರ ಕಾರಿನಲ್ಲಿ ನನ್ನ ಮನೆಗೆ ಕಳುಹಿಸಿದ್ದರು.

ಬಾಗಿಲ ಮುಂದೆ ನಿಂತಿದ್ದ ಇವರಿಬ್ಬರನ್ನು ಹಾಗೂ ಬಾಬಾ ಸಾಹೇಬರ ‘ಅಂಬಾಸಿಡರ್ ಕಾರನ್ನು ನೋಡಿ ಏನೋ ಅನಾಹುತವಾಗಿರಬೇಕೆಂದು ಅನ್ನಿಸಿತು. ನನ್ನ ನರಗಳಲ್ಲಿ ಆಘಾತದ ಅಲೆಗಳು ಪ್ರವಹಿಸಿದವು. ನನ್ನ ಇಡೀ ದೇಹ ಬೆವರತೊಡಗಿತು. ನನ್ನ ಕೈ ಕಾಲುಗಳು ನಡುಗತೊಡಗಿದವು. ”ಏನಾಯಿತು? ಬಾಬಾ ಸಾಹೇಬರು ಚೆನ್ನಾಗಿದ್ದಾರೆಯೇ?,” ಎಂದು ನಾನು ಅವರನ್ನು ಕೇಳಿದೆ.

ನಿಮ್ಮನ್ನು ತುರ್ತಾಗಿ ಕರೆದುಕೊಂಡು ಬರಲು ಸವಿತಾ ಮೇಡಂರವರು ನಮ್ಮನ್ನು ಕಳುಹಿಸಿದ್ದಾರೆ ಎಂದಷ್ಟೆ ಹೇಳಿದರು. ನಾನು ನಿಂತ ಹೆಜ್ಜೆಯಲ್ಲೇ ಹೊರಟೆ. ಬಾಬಾ ಸಾಹೇಬರ ಮನೆಯನ್ನು ತಲುಪಿದಾಗ ವರಾಂಡದಲ್ಲಿ ಅಳುತ್ತಾ ಕುಳಿತಿದ್ದ ಸವಿತಾರವರು ”ನಾನಕ್ಚಂದ್! ಸಾಹೇಬರು ನಮ್ಮನ್ನು ಬಿಟ್ಟು ಹೊರಟು ಹೋದರು,” ಎಂದು ಅಳುತ್ತ ಹೇಳಿದರು.

ಬಾಬಾ ಸಾಹೇಬರ ಸಾವಿನ ವಾರ್ತೆಯು ನನ್ನ ಜೀವನದ ಅತ್ಯಂತ ಆಘಾತಕರವಾದ ಅನುಭವವಾಗಿತ್ತು. ನಾನು ಹುಚ್ಚನಂತಾದೆ. ನನ್ನ ತಲೆಯನ್ನು ಬಾಗಿಲಿಗೆ ಚಚ್ಚಿಕೊಂಡೆ. ”ಅಯ್ಯೋ ಬಾಬಾ ಸಾಹೇಬ್ ನಾನಾದರೂ ಸತ್ತು ನೀವಾದರೂ ಬದುಕಬಾರದಿತ್ತೆ ಎಂದು ಅರಚಿಕೊಂಡೆ. ಬಾಬಾ ಸಾಹೇಬರ ಮಲಗುವ ಕೊಠಡಿಯನ್ನು ಪ್ರವೇಶಿಸುತ್ತಿದ್ದಂತೆಯೇ ಸವಿತಾರವರು ನನ್ನನ್ನು ಹಿಂಬಾಲಿಸಿದರು.

ಹಿಂದಿನ ರಾತ್ರಿ ಅವರನ್ನು ಎಲ್ಲಿ ಬೀಳ್ಕೊಟ್ಟಿದ್ದೆನೋ ಅದೇ ಹಾಸಿಗೆಯ ಮೇಲೆ ಚಿರನಿದ್ರೆಯಲ್ಲಿದ್ದ ಆ ಮಹಾಪುರುಷನನ್ನು ಕಂಡು ಸ್ಥಂಭೀಭೂತನಾದೆ. ಆ ಮಹಾಪುರುಷನ ಸುತ್ತಾ ಓಡಾಡಿದೆ, ಮಂಡಿಯೂರಿ ಬಾಬಾ ಸಾಹೇಬರ ಎರಡೂ ಪಾದಗಳ ಮೇಲೆ ನನ್ನ ತಲೆಯನ್ನಿಟ್ಟು ಗೋಳಾಡತೊಡಗಿದೆ. ಹಿಂದಿನ ರಾತ್ರಿ ಅವರು ಟೇಬಲ್ ಮೇಲೆ ಇಡಲು ಹೇಳಿದ್ದ ಹಾಸಿಗೆಯ ಹತ್ತಿರ ಬಿದ್ದಿದ್ದ ಕಾಗದಗಳತ್ತ ನೋಡಿ, ನನ್ನ ದುಃಖ ಮಿತಿಮೀರಿತು.

ಹಣಕಾಸಿನ ಮುಗ್ಗಟ್ಟು
ಡಾ. ಬಿ.ಆರ್. ಅಂಬೇಡ್ಕರ್ರವರಿಗಿದ್ದ ಪ್ರತಿಭೆ ಹಾಗೂ ಸಾಮರ್ಥ್ಯಕ್ಕೆ ಅವರೇನಾದರೂ ಅಸ್ಪೃಶ್ಯ ಜಾತಿಯಲ್ಲಿ ಹುಟ್ಟದೇ ಮೇಲ್ಜಾತಿಯಲ್ಲಿ ಹುಟ್ಟಿದ್ದರೆ ಈ ದೇಶದ ಮೊದಲ ಪ್ರಧಾನಮಂತ್ರಿಯಾಗುತ್ತಿದ್ದರು.
1947ರಲ್ಲಿ ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡುವಾಗ ಮುಸ್ಲಿಮರಿಗಾಗಿಯೇ ಒಂದು ಪ್ರತ್ಯೇಕ ರಾಷ್ಟ್ರ ನೀಡಬೇಕೆಂದು ಮಹಮದ್ ಅಲಿ ಜಿನ್ನಾರವರ ಬೇಡಿಕೆಯಂತೆ ಅಖಂಡ ಭಾರತವನ್ನು ಭಾರತ ಮತ್ತು ಪಾಕಿಸ್ತಾನಗಳೆಂದು ಎರಡು ಪ್ರತ್ಯೇಕ ರಾಷ್ಟ್ರಗಳನ್ನಾಗಿ ವಿಭಜಿಸಿದರು ಇದೇ ರೀತಿ ಡಾ. ಅಂಬೇಡ್ಕರ್ರವರು ಮುಸ್ಲಿಮರಿಗಿಂತ ಹೆಚ್ಚು ಜನಸಂಖ್ಯೆ ಹೊಂದಿದ್ದ ದಲಿತರಿಗಾಗಿಯೂ ಒಂದು ಪ್ರತ್ಯೇಕ ರಾಷ್ಟ್ರ ಕೇಳಿದ್ದರೆ, ಅಖಂಡ ಭಾರತವನ್ನು ಮೂರು ಪ್ರತ್ಯೇಕ ದೇಶಗಳನ್ನಾಗಿ ವಿಭಜಿಸಲು ಬ್ರಿಟಿಷರು ತುದಿಗಾಲ ಮೇಲೆ ನಿಂತಿದ್ದರು. ಆಗ ದಲಿತರಿಗಾಗಿ ವಿಭಜಿಸುವ ಹೊಸ ದೇಶಕ್ಕೆ ಡಾ. ಅಂಬೇಡ್ಕರ್ರವರು ತಾವು ಬದುಕಿರುವವರೆಗೂ ಪ್ರಧಾನಮಂತ್ರಿಗಳಾಗಿರಬಹುದಿತ್ತು.

ಆದರೆ ಭಗವಾನ್ ಬುದ್ಧನ ತತ್ವಗಳಿಂದ ಪ್ರಭಾವಿತರಾಗಿದ್ದ ಅಪ್ಪಟ ರಾಷ್ಟ್ರೀಯವಾದಿ ಡಾ. ಅಂಬೇಡ್ಕರ್ ಪ್ರಧಾನಿಯಾಗುವ ಆಸೆಯಿಂದ ಅಖಂಡ ಭಾರತವನ್ನು ಹೋಳು ಮಾಡಲು ಇಷ್ಟ ಪಡಲೂ ಇಲ್ಲ ಮತ್ತು ಅಂತಹ ಪ್ರಯತ್ನಕ್ಕೆ ಕೈ ಹಾಕಲೂ ಇಲ್ಲ.

ಅತಿ ಹೆಚ್ಚು ವಿದ್ಯಾಭ್ಯಾಸ ಮಾಡಿದ್ದ ಹಾಗೂ ಬಹುದೊಡ್ಡ ಜ್ಞಾನಿಯಾಗಿದ್ದ ಡಾ. ಅಂಬೇಡ್ಕರ್ರವರು ತನ್ನ ಜ್ಞಾನವನ್ನು ವಾಣಿಜ್ಯೋದ್ಯಮಕ್ಕೆ ಬಳಸಿಕೊಂಡಿದ್ದರೆ ಸಾವಿರಾರು ಕೋಟಿ ರೂಪಾಯಿಗಳ ವಹಿವಾಟು ಹೊಂದಿದ ಬಹುದೊಡ್ಡ ವಾಣಿಜ್ಯೋದ್ಯಮಿಯಾಗಿ ದೊಡ್ಡ ಸಿರಿವಂತರಾಗಬಹುದಿತ್ತು. ಆದರೆ ತಮ್ಮ ಇಡೀ ಬದುಕನ್ನು ಅವರ ದುರ್ಬಲ ವರ್ಗದ ಏಳಿಗೆಗೆ ಮೀಸಲಿಟ್ಟರು. ಅವರು ಬದುಕಿರುವವರೆಗೂ ಆರ್ಥಿಕ ಮುಗ್ಗಟ್ಟನ್ನೂ ಎದುರಿಸುತ್ತಿದ್ದರು.

ಕೊನೆಗೆ ಈ ಮಹಾಪುರುಷ ನಿಧನರಾದಾಗ ಅವರ ಪಾರ್ಥೀವ ಶರೀರ ಕೊಂಡೊಯ್ಯಲೂ ಆರ್ಥಿಕ ಮುಗ್ಗಟ್ಟು ಎದುರಾಗಿದ್ದು, ಎಲ್ಲರ ಕಣ್ಣಲ್ಲಿ ನೀರು ಹರಿಸುತ್ತದೆ.ಡಾ. ಅಂಬೇಡ್ಕರ್ರವರ ಪಾರ್ಥೀವ ಶರೀರವನ್ನು ದೆಹಲಿಯಿಂದ ಮುಂಬೈಗೆ ಸಾಗಿಸಲು ಇಂಡಿಯನ್ ಏರ್ಲೈನ್ಸ್ನ ಲಘು ವಿಶೇಷ ವಿಮಾನವನ್ನು ಬಾಡಿಗೆಗೆ ಕೇಳಿದಾಗ 5000 ರೂಪಾಯಿ ಬಾಡಿಗೆಯಾಗುತ್ತದೆಂದು ತಿಳಿಸಲಾಯಿತು. ಮಾಜಿ ಕಾನೂನು ಸಚಿವರೂ ಆಗಿದ್ದ ಅಂಬೇಡ್ಕರ್ರವರ ಅಲ್ಮೆರಾವನ್ನು ತೆಗೆದು ನೋಡಿದಾಗ ಅಲ್ಲಿ ಕೇವಲ 300 ರೂಪಾಯಿಗಳು ಮಾತ್ರ ಇತ್ತು.

ನಂತರ ರತ್ತುರವರು ಶ್ರೀಮತಿ ಸವಿತಾ ಅಂಬೇಡ್ಕರ್ರವರಲ್ಲಿ ಉಳಿಕೆ ಹಣ ಕೇಳಿದಾಗ ಅವರು ನನ್ನ ಹತ್ತಿರ ಸ್ವಲ್ಪವೂ ಹಣವಿಲ್ಲವೆಂದರು. ಟಿ.ಬಿ. ಬೋನ್ಸ್ಲೆ ಎಂಬುವರು ತನ್ನ ಅಂಬಾಸಿಡರ್ ಕಾರನ್ನು ಮಾರಾಟ ಮಾಡಿ ಹಣ ನೀಡಲು ಮುಂದಾದರು. ಆದರೆ ಆ ಕಾರನ್ನು ತಕ್ಷಣಕ್ಕೆ ಕೊಳ್ಳಲು ಯಾರು ಸಹ ಮುಂದೆ ಬರಲಿಲ್ಲ. ಕೊನೆಗೆ ಅಂದಿನ ಕೇಂದ್ರ ಸರ್ಕಾರವನ್ನು ಕೋರಲಾಯಿತು.

ಆಗ ಕೇಂದ್ರ ಸರ್ಕಾರದ ವಿಮಾನಯಾನ ಖಾತೆ ಸಚಿವರು ಸದ್ಯಕ್ಕೆ ನಿಮ್ಮ ಕೈಯ್ಯಲ್ಲಿರುವ ಹಣವನ್ನು ಪಾವತಿಸಿ, ಉಳಿಕೆ ಹಣವನ್ನು ನಂತರ ಪಾವತಿಸಿ ಎಂದು ಹೇಳಿ ವಿಶೇಷ ವಿಮಾನ ವ್ಯವಸ್ಥೆ ಮಾಡಿದರು. ನಂತರ ಈ ಉಳಿಕೆ ಹಣವನ್ನು ಬಾಂಬೆಯಲ್ಲಿ ಡಾ॥ ಅಂಬೇಡ್ಕರ್ ರವರ ನಿಕಟವರ್ತಿಗಳಾದ ಬಿ.ಕೆ. ಗಾಯಕ್ವಾಡ್ರವರು ಪಾವತಿಸಿದರು.

ಚೈತ್ಯಭೂಮಿ ಮುಂಬೈನ ಸಮುದ್ರ ತೀರದಲ್ಲಿರುವ ದಾದರ್ನಲ್ಲಿ ಡಾ. ಅಂಬೇಡ್ಕರ್ರವರ ಅಂತಿಮ ಸಂಸ್ಕಾರವು ಬೌದ್ಧಧರ್ಮದ ವಿಧಿ ವಿಧಾನಗಳಂತೆ 1956ರ ಡಿಸೆಂಬರ್ 7ರ ಸಂಜೆ 7.30ಕ್ಕೆ ನಡೆಯಿತು. ಆ ಸ್ಥಳವನ್ನು ‘ಚೈತ್ಯಭೂಮಿ’ ಎಂದು ಕರೆಯಲಾಗುತ್ತದೆ. ಆ ಸ್ಥಳದಲ್ಲಿ ಈಗ ಒಂದು ಬಹತ್ ಸ್ಮಾರಕ ನಿರ್ಮಿಸಲಾಗಿದೆ. ಆ ಸ್ಮಾರಕದೊಳಗೆ ಬಾಬಾಸಾಹೇಬರ ಚಿತಾಭಸ್ಮವನ್ನು ಇಡಲಾಗಿದೆ.

”ಬಾಬಾ ! ನಿನ್ನ ಸೇವಕ ನಾನು ರತ್ತು ಬಂದಿದ್ದೇನೆ, ನಾನು ಬಂದಿದ್ದೇನೆ… ಎದ್ದೇಳಿ ಬಾಬಾ… ನನಗೆ ಈ ದಿನ ಮಾಡಬೇಕಾದ ಕೆಲಸಗಳ ಬಗ್ಗೆ ಆದೇಶ ನೀಡಿ, ನನಗೆ ಕೆಲಸ ಕೊಡಿ, ನಾನು ಟೈಪ್ ಮಾಡಲು ನೀವು ರಾತ್ರಿ ಬರೆದಿರುವ ಹಾಳೆಗಳನ್ನು ನೀಡಿ ಇವುಗಳನ್ನು ಬೇಗ ಟೈಪ್ ಮಾಡಿ ಮುಗಿಸು ಎಂದು ಆಜ್ಞೆ ಮಾಡಿ,” ಎಂದು ಜೋರಾಗಿ ಹೇಳುತ್ತಾ ದುಃಖದಿಂದ ಅತ್ತುಬಿಟ್ಟೆ.

ಸಂಗ್ರಹ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending