Connect with us

ನೆಲದನಿ

‘ಶರಣ ಶ್ರೇಷ್ಠ ಅಂಬಿಗರ ಚೌಡಯ್ಯ’ ರ ಬಗ್ಗೆ ನೀವಿಷ್ಟು ತಿಳಿಯಲೇ ಬೇಕು..!

Published

on

ತೀಕ್ಷ್ಣವಚನಗಳಿಂದ ಶರಣರ ವಚನಕ್ರಾಂತಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ಅಂಬಿಗರ ಚೌಡಯ್ಯ. ಬಸವ ಬಾನಂಗಳದಲ್ಲಿ ಶಿವಶರಣರೆಂಬ ಅಮೂಲ್ಯ ನಕ್ಷತ್ರಗಳು ಮಿನುಗಿದವು. ಈ ನಕ್ಷತ್ರಗಳಲ್ಲಿ ಧ್ರುವತಾರೆಯಂತೆ ಮಿನುಗಿದವರು ಚೌಡಯ್ಯ. ನ್ಯಾಯನಿಷ್ಠುರಿ, ಖಂಡಿತವಾದಿ ಎನಿಸಿದ ಅವರ ಜಯಂತಿಯನ್ನು ಇದೇ ಜ. 21 ಮಂಗಳವಾರದಂದು ರಾಜ್ಯಾದ್ಯಂತ ಆಚರಿಸಲಾಯಿತು.

ಭಾರತದ ಸಂವಿಧಾನ, ಸಂಸತ್ತು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸುಮಾರು ಏಳು ಶತಮಾನಗಳಷ್ಟು ಮೊದಲೇ ಮುನ್ನುಡಿ ಬರೆದವರು 12ನೇ ಶತಮಾನದ ಶಿವಶರಣರು. ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಅವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಶಿವಪುರದಲ್ಲಿ (ಇಂದಿನ ಚೌಡದಾನಪುರ) ಜನಿಸಿದ ಈ ಮಹಾಶಿವಶರಣರಿಗೆ ಉದ್ದಾಲಕರೆಂಬ ಗುರುಗಳು. ‘ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ’ ಎಂಬ ವಚನಕ್ಕೆ ತಕ್ಕಂತೆ ಇರುವ ಧರ್ಮಪತ್ನಿ ಮತ್ತು ಪುರವಂತ ಎಂಬ ಪುತ್ರ. ಸದ್ಗುರುವಿನ ಕೃಪಾಕಟಾಕ್ಷದಿಂದ ಶ್ರೇಷ್ಠ ತತ್ವಜ್ಞಾನಿಯಾದ ಇವರು ವಚನಗಳನ್ನು ರಚಿಸಿ ಶಿವಶರಣರ ಪಂಕ್ತಿಯಲ್ಲಿ ಅಗ್ರಸ್ಥಾನಕ್ಕೇರಿದರು.

ಚೌಡದಾನಪುರದಲ್ಲಿ ಪೂರ್ವ ಪಶ್ಚಿಮವಾಹಿನಿಯಾಗಿ ಹರಿಯುತ್ತಿರುವ ತುಂಗಭದ್ರಾನದಿಯಲ್ಲಿ ದೋಣಿ ಮೂಲಕ ನದಿ ದಾಟಿಸುವ ಕಾಯಕ ಮಾಡುತ್ತ ವಚನಗಳನ್ನು ರಚಿಸಿದ್ದಾರೆ. ಗುರುವಿನ ಘನಕೃಪೆಗೆ ಪಾತ್ರರಾಗಿ ಅವರ ಮೂಲಕ ಲಿಂಗಾಂಗ ಸಾಮರಸ್ಯವನ್ನರಿತು ಅಪಾರ ಪಾಂಡಿತ್ಯವನ್ನು ಗಳಿಸಿದರು. ಕಲ್ಯಾಣದ ಕೀರ್ತಿಯನ್ನು ಕೇಳಿ ಅನುಭವಮಂಟಪಕ್ಕೆ ಬಂದ ಈ ಶರಣದಂಪತಿಯನ್ನು ಶರಣ ಪ್ರಮಥರೆಲ್ಲ ಆದರದಿಂದ ಬರಮಾಡಿಕೊಂಡರಂತೆ. ಬಸವಪ್ರಭುವನ್ನು ಕಂಡು ಆನಂದಪರವಶರಾಗಿ ಭಕ್ತಿಯಿಂದ ಕೈ ಮುಗಿದ ಚೌಡಯ್ಯನವರು;

‘ಬಸವಣ್ಣನೇ ಭಕ್ತ ಪ್ರಭುದೇವರೇ ಜಂಗಮರು
ಇಂತೆಂಬ ಭೇದವಿಲ್ಲಯ್ಯ, ಅರಿವೇ ಗುರು,
ಗುರುವೇ ಪರಶಿವನು ಇದು ತಿಳಿದವನೇ
ಪರಂಜ್ಯೋತಿಯೆಂದ ಅಂಬಿಗರ ಚೌಡಯ್ಯ’

ಎಂಬ ವಚನದ ಮೂಲಕ ಮನಸಾರೆ ಹೊಗಳಿದ್ದಾರೆ. ಶಿವಶರಣರ ಸಂಗದಲ್ಲಿ ಕಾಲಕಳೆದು ಪರಿಪಕ್ವರಾದ ಇವರು ರಚಿಸಿದ ವಚನಗಳು ಹಸಿಗೋಡೆಯಲ್ಲಿ ಹರಳು ಎಸೆದಂತಿವೆ. ಇವರ ವಚನಗಳನ್ನು ಕಂಡ ಕವಿ ಕಾವ್ಯಾನಂದರು ‘ನಿಜದ ನಗಾರಿ ನಿರ್ಭಯತೆಯ ಭೇರಿ ಈ ಅಂಬಿಗರ ಚೌಡಯ್ಯ’ ಎಂದಿದ್ದಾರೆ. ಮುಪ್ಪಿನ ಷಡಕ್ಷರಿಯವರು ತಮ್ಮ ಸುಬೋಧ ಸಾಗರದಲ್ಲಿ ‘ಅಂಬಿಗರ ಚೌಡಯ್ಯನ ಮುಂಬಾಗಿಲನ್ನು ಕಾಯುವ ನಂಬಿಗೆಯ ಸೇವಕರು ಕುಂಭಿನಿಯೊಳಗಿನ್ನು ಸರಿಯದಾರು?’ ಎಂದು ಹಾಡಿ ಹರಸಿದ್ದಾರೆ.

ಘನಲಿಂಗದೇವನು (1480) ‘ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ, ಅಂಬಿಗರ ಚೌಡಯ್ಯಯಿಂತಿಪ್ಪ ಶಿವಶರಣರ ಮನೆ ಬಾಗಿಲನಿಕ್ಕುವ ಸೊಣಗನ ಮಾಡಿ ಎನ್ನಿರಿಸಯ್ಯ ಎಂದು ತಮ್ಮ ವಚನವೊಂದರಲ್ಲಿ ಹೇಳಿರುವುದೇ ಇದಕ್ಕೆ ನಿದರ್ಶನವಾಗಿದೆ. ಮಹಾಕವಿ ಷಡಕ್ಷರಿಯವರು ತಮ್ಮ ‘ಬಸವರಾಜ ವಿಜಯ’ದಲ್ಲಿ ‘ನಿಡುಗುಡಿಮಾರನಂಬಿಗರ ಚೌಡಯ್ಯ’ ಎಂದು ಸ್ಮರಿಸಿದ್ದರೆ, ಮಹಾಲಿಂಗ ವಿರಚಿತ ಗುರುಬೋಧಾಮೃತದ ‘ಕುಂಬಾರ ಗುಂಡಯ್ಯ, ಅಂಬಿಗರ ಚೌಡಯ್ಯ, ಕೆಂಭಾವಿಯೊಳಗೆ ಮೆರೆವ ಬೋಗಣ್ಣನಿಗೆ ಸಂಭ್ರಮದೊಳೆರಗಿ ನಮಿಸುವೆ’ ಎಂಬ ಪದಗಳು ಹೃದಯರ್ಸಯಾಗಿವೆ.

ಮಹಾಶಕ್ತಿಸಂಪನ್ನರಾದ ಅಂಬಿಗರ ಚೌಡಯ್ಯನವರ ಮಹಿಮೆಯಿಂದ ಸರ್ಪ ಕಚ್ಚಿ ಮೃತಪಟ್ಟ ಸೈನಿಕನು ಮರುಜೀವ ಪಡೆದ. ಕ್ಷಯ, ಕುಷ್ಠರೋಗಿಗಳು ಗುಣಮುಖರಾದರು. ಅವರು ನುಡಿದ ವಾಣಿಯಿಂದ ಭಕ್ತರ ಸಕಲ ಬೇಡಿಕೆಗಳು ಈಡೇರಿದವು. ಚೌಡಯ್ಯನವರ ಪಾರಮಾರ್ಥ ಸಾಧನೆಯನ್ನು ಕಂಡು ಮಾರುಹೋದ ಗುತ್ತಲ ಅರಸನು ಅವರಿಗೆ ದಾಸೋಹಕ್ಕೆಂದು ಶಿವಪುರಕ್ಕೆ ಹೊಂದಿಕೊಂಡಿರುವ ಭೂಮಿಯನ್ನು ಕಾಣಿಕೆಯಾಗಿ ನೀಡಿದನು.

ತಮಗೆ ನೀಡಿದ ಈ ಭೂಮಿಯನ್ನು ಚೌಡಯ್ಯನವರು ತಮ್ಮ ಮಗ ಪುರವಂತ ಹಾಗೂ ಶಿವದೇವರಿಗೆ ದಾನವಾಗಿ ನೀಡಿದರು. ಅದೇ ಕಾರಣಕ್ಕಾಗಿ ಶಿವಪುರಕ್ಕೆ ‘ಚೌಡಯ್ಯ ದಾನಪುರ’ ಎಂಬ ಹೆಸರು ಬಂದಿತೆಂದು ಹೇಳಲಾಗುತ್ತಿದ್ದು, ಅದೇ ಇಂದು ಚೌಡದಾನಪುರವಾಗಿದೆ. ಬಸವಣ್ಣನವರ ಗರಡಿಯಲ್ಲಿ ಪಳಗಿದ ಇವರ ಅನುಭವವು ಅಮೃತಧಾರೆಯಾಗಿ ವಚನಗಳ ರೂಪದಲ್ಲಿ ಹರಿದುಬಂದಿವೆ. ನಿಜವಾದ ಭಕ್ತನಾರು? ಎಂಬುದನ್ನು ಕುರಿತು ತಮ್ಮ ವಚನದಲ್ಲಿ

‘ಓಡುವಾತ ಲೆಂಕನಲ್ಲ ಬೇಡುವಾತ ಭಕ್ತನಲ್ಲ
ಓಡಲಾಗದು ಲೆಂಕನು, ಬೇಡಲಾಗದು ಭಕ್ತನು
ಓಡೆನಯ್ಯ, ಬೇಡೆನಯ್ಯ ಎಂದ ಅಂಬಿಗರ ಚೌಡಯ್ಯ’ಎಂದು ಸಾರಿದ್ದು ಅಮೋಘವಾಗಿದೆ.

ಪರಮಾತ್ಮನ ನಿಜಸ್ವರೂಪವನ್ನು ಕುರಿತು

ಅಸುರ ಮಾಲೆಗಳಿಲ್ಲ, ತ್ರಿಶೂಲ ಡಮರುಗವಿಲ್ಲ
ಬ್ರಹ್ಮಕಪಾಲವಿಲ್ಲ ಭಸ್ಮಭೂಷಣನಲ್ಲ
ವೃಷಭ ವಾಹನನಲ್ಲ, ಋಷಿಯ ಮಗಳೊಡನಿರ್ದಾತನಲ್ಲ
ಎಸಗುವ ಸಂಸಾರದ ಕುರುಹಿಲ್ಲದಾತಂಗೆ
ಹೆಸರಾವುದೆಂದಾತ ಅಂಬಿಗರ ಚೌಡಯ್ಯ’
ಎಂದಿದ್ದಾರೆ.

ಸ್ಥಿತಪ್ರಜ್ಞರಾದ ಅವರು ಕೊನೆಯಲ್ಲಿ ಚೌಡದಾನಪುರದ ನದಿಯ ದಡದಲ್ಲಿ ಸಮಾಧಿಸ್ಥರಾದರೆಂದು ತಿಳಿದುಬರುತ್ತದೆ. ಆದ್ದರಿಂದ ಈ ನದಿದಡದಲ್ಲಿರುವ ದಿಬ್ಬದ ಮೇಲಿರುವ ಸಮಾಧಿಯನ್ನು ‘ಅಂಬಿಗರ ಚೌಡಯ್ಯನವರ ಸಮಾಧಿ’ ಎಂದು ಗುರುತಿಸಲಾಗಿದೆ. ಪ್ರತಿವರ್ಷ ಅಂಬಿಗರ ಚೌಡಯ್ಯನವರ ಜಯಂತಿಯ ನಿಮಿತ್ಯ ಸಂಕ್ರಮಣದ ಪರ್ವ ಕಾಲದಲ್ಲಿ ಬಹು ಸಡಗರ ಸಂಭ್ರಮದಿಂದ ಇಲ್ಲಿ ಜಾತ್ರಾಮಹೋತ್ಸವವು ಜರಗುತ್ತಲಿತ್ತು. ಈಗ ಪ್ರತಿವರ್ಷ ಜನವರಿ 21ರಂದು ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಗುತ್ತದೆ.

ಹನ್ನೆರಡನೇ ಶತಮಾನ ಎನ್ನುವುದು ಈಗಲೂ ನಮ್ಮನ್ನು ಭಾವನಾತ್ಮಕವಾಗಿಯೇ ಆಳುತ್ತಿದೆ. ಆಚರಣೆಗಳ ಭಾರಕ್ಕೆ ಬಗ್ಗಿ ಹೋಗಿದ್ದ ಸನಾತನ ಸಂಸ್ಕೃತಿಯಲ್ಲಿ ಬೆಳೆದಿದ್ದ ವರ್ಣಕಳೆಯನ್ನು ಅಂದು ವಚನ ಸಂಸ್ಕೃತಿಯೆಂಬ ಧಾರ್ಮಿಕ ಕ್ರಾಂತಿಯು ಆವರಿಸಿಕೊಂಡಿತ್ತು. ತನ್ನ ಸರಳವಾದ ಭಾಷೆಯ ಮೂಲಕ ಜನರ ನಾಡಿ ಮಿಡಿತದೊಳಗೆ ಮಿಳಿತವಾಗಿ ಎಲ್ಲ ವರ್ಗಗಳ ವಿವೇಕ ಜಾಗೃತಿಯ ಕೆಲಸವನ್ನು ಅದು ಪರಿಣಾಮಕಾರಿಯಾಗಿ ಮಾಡಿತ್ತು. ಆ ಧಾರ್ಮಿಕ ಕ್ರಾಂತಿಗೆ ಶೋಷಿತ ವರ್ಗಕ್ಕೆ ಬೆನ್ನೆಲುಬಾಗುವ ಆಶಯವಷ್ಟೇ ಇರಲಿಲ್ಲ. ಎಲ್ಲೆಡೆಯೂ ಸಮಾನತೆಯ ತತ್ವವನ್ನು, ಜಾತಿ ರಹಿತ ವ್ಯವಸ್ಥೆಯನ್ನು ನಿರ್ಮಾಣ ಮಾಡುವ ನಿಷ್ಕಳಂಕ ಕಾಳಜಿಯೂ ಅದಕ್ಕಿತ್ತು.

ಬಸವಣ್ಣ, ಅಲ್ಲಮ ಪ್ರಭು, ಅಕ್ಕಮಹಾದೇವಿ, ಮಾದಾರ ಚೆನ್ನಯ್ಯ, ಹಡಪದ ಅಪ್ಪಣ್ಣ, ಒಬ್ಬರೇ ಇಬ್ಬರೇ! ಹತ್ತಾರು ಶಿವಶರಣರು ವರ್ಣತಂತುಗಳನ್ನು ಕಿತ್ತೊಗೆಯಲು ಪಣತೊಟ್ಟು ಸಮಾಜದ ಅಂತ:ಸತ್ವವನ್ನು ಬಡಿದೆಬ್ಬಿಸಿದ್ದರು. ವಚನ ಸಂಸ್ಕೃತಿಯು ಸಮಾಜಕ್ಕೆ ನೀಡಿದ ಕ್ರಿಯಾತ್ಮಕ ಬೆರಗು, ಒದಗಿಸಿದ ಆರೋಗ್ಯಕರ ಸಂದೇಹ ಮತ್ತು ಹರವಿಟ್ಟ ಅವಿಚ್ಛಿನ್ನ ದೃಢತೆಯ ಅಭಿವ್ಯಕ್ತಿ ಇಂದಿಗೂ ಆದರ್ಶಯುತವೇ ಆಗಿ ಉಳಿದಿದೆಯೆಂದರೆ ಅದು ನಮ್ಮ ಭಾಷೆಯ, ಸಂಸ್ಕೃತಿಯ ಉತ್ಕೃಷ್ಟತೆಯನ್ನು ಆ ದಿನಗಳಲ್ಲಿಯೇ ಸ್ಪರ್ಶಿಸಿದ್ದಲ್ಲಿ ಯಾವುದೇ ಸಂದೇಹ ಇಲ್ಲ.

ಇಂತಹ ಶರಣ ಸಂಸ್ಕೃತಿಯಲ್ಲಿ ಸಾಗಿಹೋದ ಮಹಾಚೇತನಗಳ ಕುರಿತು ಸ್ವಲ್ಪ ಸಂಯಮದೊಂದಿಗೆ ಅವಲೋಕಿಸಿದಾಗ ಒಬ್ಬ ವ್ಯಕ್ತಿ ನಮ್ಮನ್ನು ಬಿಟ್ಟೂಬಿಡದ ರೀತಿಯಲ್ಲಿ ಆವರಿಸಿಕೊಂಡು ಅಂತರಂಗವನ್ನು ತಟ್ಟುತ್ತಾನೆ. ರಭಸ ನೀರಿನ ವಿರುದ್ಧ ಈಜುವ ಹಾಯಿದೋಣಿ, ತೆಪ್ಪದಲ್ಲಿ ಕುಳಿತ ಅಮಾಯಕ ಜನ, ಧೀರನಂತೆ ನಿಂತ ಹರಿಗೋಲು ಕೈಯಲ್ಲಿ ಹಿಡಿದ ಆ ಅಂಬಿಗ- ಹೀಗೆಯೇ ಆತನನ್ನು ನಾವು ಕಲ್ಪಿಸಿಕೊಳ್ಳಬೇಕು. ಆ ಅಂಬಿಗನ ಕೈಯಲ್ಲಿದ್ದದ್ದು ಅಂತಿಂತಹ ಹರಿಗೋಲಲ್ಲ. ಅದು ತನ್ನ ಜೊತೆಗಿದ್ದವರನ್ನು ಮನೋಸ್ವಾತಂತ್ರ್ಯದ ನೆಲೆಗೆ ಕರೆದೊಯ್ಯುವ ಭರವಸೆಯ, ಬಂಡಾಯದ ಹರಿಗೋಲು ಎನ್ನುವುದನ್ನೂ ನಾವು ನೆನಪಿನಲ್ಲಿಟ್ಟುಕೊಳ್ಳಬೇಕು.

ಅಂಬಿಗರ ಚೌಡಯ್ಯ ವಚನಕಾರರರೆಲ್ಲರಲ್ಲಿ ಇದ್ದ ಸುಶಿಕ್ಷವಾದ ಅಭಿವ್ಯಕ್ತಿ ಮಾರ್ಗವನ್ನು ತುಳಿಯಲಿಲ್ಲ. ತನ್ನ ಹತಾಶೆ, ನೋವು, ಬೇಗುದಿ ಎಲ್ಲವನ್ನೂ ಆತ ತನ್ನದೇ ತೀಕ್ಷ್ಣಪದಗಳ ಆಡುನುಡಿಯ ಮೂಲಕ ನಿರ್ಭಿಡೆಯಿಂದ ಬೆತ್ತಲಾಗಿಸುತ್ತಾ ಹೋದ. ಅಲ್ಲದೇ ಎಲ್ಲಾ ವಚನಕಾರರ ಹಾದಿಯಲ್ಲಿ ತಾನು ನಡೆಯದೇ ಇಷ್ಟ ದೈವದ ಬದಲಿಗೆ ತನ್ನದೇ ಹೆಸರನ್ನು ತನ್ನ ವಚನಗಳ ಅಂಕಿತವಾಗಿ ಬಳಸಿಕೊಂಡು ಸಮಾಜದ ಓರೆಕೋರೆಗಳನ್ನು ತಿದ್ದುವ ಯತ್ನ ಮಾಡಿದ. ಅಂಬಿಗರ ಚೌಡಯ್ಯ ನಿಜಾರ್ಥದಲ್ಲಿ ಬಂಡಾಯ ವಚನ ಸಂಸ್ಕೃತಿಯ ಹರಿಕಾರ. ವಚನ ಸಂಸ್ಕೃತಿಯ ಆ ತರ್ಕದ ಲೆಕ್ಕಾಚಾರಗಳಿಂದ ದೂರವುಳಿದು ಗಟ್ಟಿ ಮೌಲ್ಯಗಳ, ನಿರ್ಭಿಡೆಯ ನುಡಿಗಟ್ಟುಗಳ ಮೂಲಕ ಸಮಾಜದ ಓರೆಕೋರೆಗಳನ್ನು ಬೆತ್ತಲೆಯಾಗಿಸಿದ ಚೌಡಯ್ಯನ ಆಕ್ರೋಶದ ಅಭಿವ್ಯಕ್ತಿಯ ಹಾದಿ ಇಂದಿಗೂ ನಮ್ಮನ್ನು ಬೆಚ್ಚಿಸಿ ವಿಸ್ಮಯಗೊಳಿಸುತ್ತದೆ. ಆತ, ಮುನ್ನೂರರ ಆಸುಪಾಸಿನ ಸಂಖ್ಯೆಯ ವಚನಗಳನ್ನು ಬರೆದಿದ್ದಾನೆ. ಒಂದೆರಡನ್ನು ಓದಿಕೊಳ್ಳಿ. ಆತನ ಆಶಯ, ಧಾಟಿ ನಿಮಗೆ ಅರ್ಥವಾದೀತು.

ಉಚ್ಚೆಯ ಬಚ್ಚಲಲ್ಲಿ ಹುಟ್ಟಿ, ನಾ ಹೆಚ್ಚು
ನೀ ಹೆಚ್ಚು ಎಂಬುವವರನ್ನು ಮಚ್ಚಿಲೇ ಹೊಡೆಯೆಂದಾನಂಬಿಗರ ಚೌಡಯ್ಯ

ಕಂತೆ ತೊಟ್ಟವ ಗುರುವಲ್ಲ
ಕಾವಿ ಹೊತ್ತವ ಜಂಗಮನಲ್ಲ
ಶೀಲ ಕಟ್ಟಿದವ ಶಿವಭಕ್ತನಲ್ಲ
ನೀರು ತೀರ್ಥವಲ್ಲ, ಕೂಳು ಪ್ರಸಾದವಲ್ಲ
ಹೌದೆಂಬವನ ಬಾಯಿ ಮೇಲೆ
ಅರ್ಧ ಮಣೆಯ ಪಾದರಕ್ಷೆಯ ತೆಗೆದುಕೊಂಡು
ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ ಟೊಕಟಕನೆ
ಹೊಡಿ ಎಂದಾತ ನಮ್ಮ ಅಂಬಿಗರ ಚೌಡಯ್ಯ

ನನ್ನ ಕುಲ ಹೆಚ್ಚು, ನಿನ್ನ ಕುಲ ಕಡಿಮೆ
ಎಂದು ಹೊಡೆದಾಡುವಂತಹ ಅಣ್ಣಗಳನ್ನು
ಹಿಡಿತಂದು ಮೂಗನೆ ಸವರಿ ಮೆಣಸಿನ ಹಿಟ್ಟು
ತುಪ್ಪವ ತುಂಬಿ ನಮ್ಮ ಪಡಿಹಾರಿ ಉತ್ತಣ್ಣನ
ವಾಮ ಪಾದುಕೆಯಿಂದ ಫಡಫಡನೆ ಹೊಡೆಯಬೇಕೆಂದ
ನಮ್ಮ ಅಂಬಿಗರ ಚೌಡಯ್ಯ

ಮೊಲೆ ಮೂಡಿ ಬಂದರೆ ಆ ಪಿಂಡವನು ಹೆಣ್ಣೆಂಬರು
ಗಡ್ಡ ಮೀಸೆಗಳು ಬಂದರೆ ಆ ಪಿಂಡವನು ಗಂಡೆಂಬರು
ಆ ಇಬ್ಬರ ನಡುವೆ ಸುಳಿವ ಆತ್ಮ ಹೆಣ್ಣೂ ಅಲ್ಲ ಗಂಡೂ ಅಲ್ಲ
ನೋಡಿರೆಂದನಮ್ಮಂಬಿಗರ ಚೌಡಯ್ಯ

ಈಶ್ವರನನ್ನು ಕಾಂಬುದೊಂದಾಶೆಯುಳ್ಳೊಡೆ
ಪರದೇಶಕ್ಕೆ ಹೋಗಿ ಬಳಲದಿರು!
ಕಾಶಿಯಲ್ಲಿ ಕಾಯುವ ವಿನಾಶ ಮಾಡಬೇಡ!
ನಿನ್ನಲ್ಲಿ ನೀ ತಿಳಿದು ನೋಡಾ, ಜಗವು ನಿನ್ನೊಳಗೆಂತಾದ ಅಂಬಿಗರ ಚೌಡಯ್ಯ

ಅಂತರಂಗದ ಬೇಗುದಿಯನ್ನು, ಕಳಕಳಿಯನ್ನು ನಿರ್ಭಿಡೆಯಿಂದ ಪ್ರಕಟಿಸಿದ ಅಂಬಿಗರ ಚೌಡಯ್ಯನ ಧಾಟಿ ಓದುಗನಿಗೆ ತೀವ್ರ ಒರಟೆನಿಸುವುದು ಸಹಜ. ಆದರೆ ಪ್ರಮುಖವಾಗಿ ನಾವು ಗಮನಿಸಬೇಕಾದ್ದು ಆ ಸಂವೇದನಾಶೀಲ ವಿಡಂಬನೆಯ ವಿಚಾರ ಸಿರಿವಂತಿಕೆ ಶತಮಾನಗಳು ಕಳೆದರೂ ಪ್ರಸ್ತುತವೇ ಆಗಿ ಉಳಿಯಬೇಕಿರುವ ಅವಶ್ಯಕತೆ.ಒಂದು ಕ್ಷಣ ನಿಲ್ಲಿ! ಇಲ್ಲಿ ನಾನು ವಿವರಿಸಹೊರಟಿರುವುದು, ಅಂಬಿಗರ ಚೌಡಯ್ಯನ ಬಂಡಾಯ ಮನೋಧರ್ಮದ ಕ್ರಾಂತಿ ಹಾದಿಯ ವೈಭವವನ್ನಲ್ಲ. ದುಷ್ಟ ಸಮಾಜದೆಡೆಗಿನ ಆತನ ತಾರ್ಕಿಕ ವಿಚಾರಣೆಯ ದಿಟ್ಟ ಧಾಟಿಯೂ ಅಲ್ಲ. ಮನೋದಾಸ್ಯದ ವಿರುದ್ಧ, ಜಾತಿ ವ್ಯವಸ್ಥೆಯ ವಿರುದ್ಧ ತನ್ನದೇ ಕಟು ನಿಃಸ್ವಾರ್ಥ ರೀತಿಯಲ್ಲಿ ಹೋರಾಡಿ ವಿಶ್ವಮಾನವ ಸಂದೇಶವನ್ನು ಬಿತ್ತಿ ಹೋದ ಛಡಿ ಏಟಿನ ಚೌಡಯ್ಯ ಇಂದಿನ ವ್ಯವಸ್ಥೆಗೆ ಅಪ್ರಸ್ತುತನಾಗುತ್ತಿದ್ದಾನೆಯೇ? ಇಂದಿನ ಅಂಬಿಗರ ಚೌಡಯ್ಯ, ಕಾಲಘಟ್ಟವೊಂದರ ಸಮಾಜವನ್ನು ಹೊಸಸ್ತರಕ್ಕೆ ಕರೆದೊಯ್ದಿದ್ದ ವಚನ ಸಂಸ್ಕೃತಿಯ ವೈಫಲ್ಯದ ಒಂದು ಪಾರ್ಶ್ವವನ್ನು ಬಿಂಬಿಸುತ್ತಿದ್ದಾನೆಯೇ? ಜಗತ್ತಿನ ಮುನ್ನಡೆಯೂ ಕಾಲದ ದೃಷ್ಟಿಯಿಂದ ಹಿನ್ನೆಡೆಯನ್ನು ಕಾಣುತ್ತದೆಯೇ? ಇಂತಹ ಪ್ರಶ್ನೆಗಳನ್ನು ಕೇಳಿಕೊಳ್ಳುವ ಕಾಲ ಇದು ಎನ್ನಿಸುತ್ತದೆ.

ಅಂಬಿಗರ ಚೌಡಯ್ಯನಂಥಹ ನಿಜಶರಣನ ಆ ಅಪೂರ್ವ ಸಂದೇಶಗಳು ಶತಮಾನಗಳು ಕಳೆಯುತ್ತಾ ಹೋದಂತೆ ಸಾಮಾಜಿಕ ವ್ಯವಸ್ಥೆಯಲ್ಲಿ ಗಟ್ಟಿಯಾಗುತ್ತಾ ಸಾಗಬೇಕಿತ್ತು. ಶೋಷಣೆಗೆ ಒಳಗಾದ ಸಮಾಜ ವರ್ಗದ ಅಂತಃಶಕ್ತಿ ಸ್ವಾವಲಂಬನೆಯಿಂದ ಸುಭದ್ರವಾಗಬೇಕಿತ್ತು. ವ್ಯವಸ್ಥೆಯಲ್ಲಿ ರೂಪಿತವಾದ ಜನಪರ ಕಲ್ಯಾಣ ಕಾರ್ಯಕ್ರಮಗಳು ಆ ವರ್ಗಗಳ ಅಂತರಂಗದಲ್ಲಿದ್ದ ಬೇಗುದಿಯನ್ನು ಭಸ್ಮ ಮಾಡಬೇಕಿತ್ತು. ಮತ್ತು ಇಡೀ ಸಮಾಜ, ಜಾತಿ-ವರ್ಗಗಳನ್ನು ಮೀರಿ ವಿಶ್ವಮಾನವ ಪ್ರಜ್ಞೆಯ ಉದಾರತೆಯನ್ನು ಗಳಿಸಿಕೊಳ್ಳುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿರಬೇಕಿತ್ತು. ಆದರೆ, ಇಂದಿನ ಪರಿಸ್ಥಿತಿ ನೋಡಿದಾಗ ಇಡೀ ವಚನ ಸಂಸ್ಕೃತಿಯ ಪರಿಣಾಮಗಳ ಬಗ್ಗೆ ವಿಷಾದವೆನಿಸುವ ಸಿನಿಕತೆ ಮೂಡುತ್ತದೆ.

ಚೌಡಯ್ಯ ಈಗ ಒಂದು ಜಾತಿಯ ಸ್ವತ್ತಾಗಿ ಸೊರಗಿದ್ದಾನೆ ಮತ್ತು ಆತನಷ್ಟೇ ಅಲ್ಲ, ಎಲ್ಲ ಶರಣರೂ ಒಂದೊಂದು ಜಾತಿಗೆ ಸೀಮಿತವಾಗಿಬಿಟ್ಟಿದ್ದಾರೆ. ಆಯಾ ಜಾತಿಯ ಇಂದಿನ ಜನಸಂಖ್ಯೆಯ ಪ್ರಾಬಲ್ಯದ ಮೇಲೆ ಆಯಾ ಶರಣರ ಸಂದೇಶಗಳು ಪ್ರಸ್ತುತತೆಯ ಕೀರ್ತಿಯನ್ನು ಗಳಿಸಿಕೊಳ್ಳುತ್ತಿರುವುದೂ ವಿಷಾದದ ಸತ್ಯ. ಅಂಬಿಗರ ಚೌಡಯ್ಯನ ವಿಷಯದಲ್ಲಿಯಂತೂ, ಶರಣನಾಗಲು ಆತ ದೀಕ್ಷೆ ನೀಡಿದ ಒಂದು ಜಾತಿ ಅವನನ್ನು ಒಂದೆಡೆಗೆ ಎಳೆಯುತ್ತಿದ್ದರೆ ಅವನು ಜನಿಸಿದ ಮೂಲಜಾತಿಯ ಮತಸ್ಥರು ಆತನನ್ನು ತಮ್ಮ ಸಾಮಾಜಿಕ ಅಸ್ತಿತ್ವದ ಕುರುಹಾಗಿ ಸ್ವೀಕರಿಸಿ ತಮ್ಮೆಡೆಗೆ ಸೆಳೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆತ, ಇಂದು ರಾಜಕಾರಣಿಗಳಿಗೆ ಮತಬ್ಯಾಂಕನ್ನು ಸೃಷ್ಟಿಸುವ ಮೋಡಿಗಾರ.

ಇಂದು ಆತನ ಹೆಸರಿನಲ್ಲಿ ಎರಡು ವಿಶ್ವ ವಿದ್ಯಾಲಯಗಳಲ್ಲಿ ‘ಪೀಠ’ ಎನ್ನುವ ಗದ್ದುಗೆಗಳನ್ನು ಸ್ಥಾಪಿಸಲಾಗಿದೆ. ರಾಜಕೀಯ ಪ್ರಾಬಲ್ಯದ ಕಾರಣ ಆತನ ಜಯಂತಿಯ ಆಚರಣೆಗೆ ಸರ್ಕಾರದ ಅಧಿಕೃತ ಮುದ್ರೆಯೂ ಬಿದ್ದಿದೆ. ಆತನ ವಚನಗಳಲ್ಲಿದ್ದ ಧರ್ಮ ನಿರ್ಭಿಡತೆಯ, ಜೀವನ ಪ್ರೀತಿಯ ಆಶಯ ಅವನತಿಯೆಡೆಗೆ ಮುಖ ಮಾಡಿ ನಿಲ್ಲುತ್ತಿದೆ. ಜಾತಿಯೆಂಬ ವಿಹೀನ ಆಚರಣೆ ಸಂಸ್ಕೃತಿಯೆಂಬ ಜೀವನತತ್ವವನ್ನೇ ಬುಡಮೇಲು ಮಾಡಲು ನಿಂತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇನ್ನು, ಆಡಳಿತ ಚುಕ್ಕಾಣಿ ಹಿಡಿದ ಸರ್ಕಾರಗಳು ಆತನ ತಾತ್ವಿಕ ಸಂದೇಶಗಳನ್ನು, ಜಾತಿ-ಧರ್ಮಗಳ ಸಂಕೋಲೆಗಳಿಂದ ಮುಕ್ತಗೊಳಿಸಿ ಇಡೀ ಸಾಮಾಜಿಕ ವ್ಯವಸ್ಥೆಯೊಳಗೆ ಹರಿಸುವ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿವೆಯೇ? ಈ ಜಾಡಿನಲ್ಲಿ ಸಿಗುವ ಕೆಲವು ಸತ್ಯಗಳು ಇಂದಿನ ಮಟ್ಟಿಗಂತೂ ನಿರಾಶೆಯನ್ನೇ ಮೂಡಿಸುತ್ತವೆ.

1. ರಾಣಿಬೆನ್ನೂರು ತಾಲ್ಲೂಕಿನ ಚೌಡಯ್ಯದಾನಪುರದ ಗ್ರಾಮದ ಪಕ್ಕದಲ್ಲಿಯೇ ವಿಶಾಲವಾಗಿ ಹರಿಯುವ ತುಂಗಭದ್ರೆಯ ತಟದಲ್ಲಿ ಚೌಡಯ್ಯ ಲಿಂಗೈಕ್ಯನಾದ ಸ್ಥಳ ಇದೆ. ಪ್ರತಿ ಮಳೆಗಾಲದಲ್ಲಿನ ನೆರೆಗೆ ಅದಕ್ಕೆ ಮುಳುಗುವ ಭಾಗ್ಯವೂ, ದೌರ್ಭಾಗ್ಯವೂ ಇದೆ. ಅಂಬಿಗನ ಆತ್ಮವಾದ ಕಾರಣ, ಮುಳುಗದೇ ಉಳಿದೆನೆನ್ನುವ ಹಾಗೆ ದರ್ಶನ ನೀಡುವ ಸೌಭಾಗ್ಯವೂ ಅದಕ್ಕಿದೆ. ಈ ಚೌಡಯ್ಯದಾನಪುರದ ಜಾಗವನ್ನು ಅಂಬಿಗರ ಚೌಡಯ್ಯ ತನ್ನ ಗುರುವಾದ ಶಿವದೇವಮುನಿಗಳಿಗೆ ದಾನವಾಗಿ ಕೊಟ್ಟಿರುವ ಬಗ್ಗೆ ಶಿಶುನಾಳ ಷರೀಫರು ರಚಿಸಿದ ‘ಶಿವದೇವ ವಿಜಯಂ’ ಎಂಬ ಪುಸ್ತಕದಲ್ಲಿ ಉಲ್ಲೇಖವಿದೆ. ಹಾಗಾಗಿಯೇ ಊರಿಗೆ ಆ ಹೆಸರು ರೂಢಿಗೆ ಬಂದಿತೆಂದೂ ಅದರಲ್ಲಿ ವಿವರಿಸಲಾಗಿದೆ.

ವೀರಶೈವ ಸಮುದಾಯದ ಶಿವದೇವಮುನಿಗಳು ಆತನಿಗೆ ಲಿಂಗದೀಕ್ಷೆ ನೀಡಿದರೆಂಬ ಕಾರಣಕ್ಕೆ, ಅನುಜನೆಂಬ ಮಮತೆಗೆ ಶ್ರೀ ಶಿವದೇವ ಒಡೆಯರ ಎಂಬ ವಕೀಲರು ಚೌಡಯ್ಯ ಲಿಂಗೈಕ್ಯನಾದ ಸ್ಥಳದಲ್ಲಿ ಗದ್ದುಗೆಯ ಜೀರ್ಣೋದ್ಧಾರ ಮಾಡಿ ೧೯೬೮ರಷ್ಟು ಹಿಂದೆಯೇ ಪುಟ್ಟದಾದ ಐಕ್ಯ ಮಂಟಪವನ್ನು ನಿರ್ಮಿಸಿದ್ದಾರೆ. ಕಾಲಾನುಕ್ರಮದಲ್ಲಿ ಸಾಮಾಜಿಕ ಪರಿಸ್ಥಿತಿಗಳ ಮನ್ವಂತರದ ಹಿನ್ನೆಲೆಯಲ್ಲಿ ರಾಜಕೀಯ ಪ್ರಾಬಲ್ಯಗಳು ಹೆಚ್ಚಿದಂತೆಲ್ಲಾ ಅಂಬಿಗರ ಚೌಡಯ್ಯನ ಮೂಲ ಸಮಾಜಸ್ಥರು ‘ಸಬಲತೆ’ಯನ್ನು ಗಳಿಸಿಕೊಂಡಿದ್ದಾರೆ. ಅದು ಸಹಜವೂ ಹೌದು. ಈ ಕಾರಣಕ್ಕೆ ಅಂಬಿಗರ ಚೌಡಯ್ಯ ತಮ್ಮವನೆಂದು ಹೇಳಿಕೊಳ್ಳುವ ಕಸುವು ಅವರಲ್ಲಿ ವೃದ್ಧಿಯಾಗಿ ಎರಡೂ ವರ್ಗಗಳಲ್ಲಿ ಹಬ್ಬಿದ ವಿಚಾರಭೇದಗಳು ಚೌಡಯ್ಯನ ಆತ್ಮವನ್ನು ಅನಾಥನನ್ನಾಗಿ ಮಾಡಿವೆ! ಇಂದು ಅಂಬಿಗರ ಚೌಡಯ್ಯನ ಐಕ್ಯಮಂಟಪದ ಸುತ್ತಲೂ, ಒಳಗೂ ಕಸ, ಕಡ್ಡಿ, ಕೊಳಚೆಗಳು ನಾರುತ್ತಿವೆ.

ಪಕ್ಕದಲ್ಲಿಯೇ ಮರಳು ಸಾಗಾಣಿಕೆ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದರೆ ಸುತ್ತಮುತ್ತಲಿನ ಜಾಗ ಗ್ರಾಮಸ್ಥರ ಬಹಿರ್ದೆಸೆಯ ನಿರಾಳತೆಗೂ ಸಾಕ್ಷಿಯಾಗಿ ನಿಂತಿದೆ. ಪಕ್ಕದಲ್ಲಿಯೇ, ಮೇಲ್ಮಟ್ಟದಲ್ಲಿ ಇದ್ದುದರಲ್ಲಿ ಸುರಕ್ಷಿತವಾಗಿರುವ ಚಾಲುಕ್ಯರ ಕಾಲದ ಮುಕ್ತೇಶ್ವರ ದೇವಸ್ಥಾನ ಪಾರಂಪರಿಕ ಪಟ್ಟ ಗಿಟ್ಟಿಸಿಕೊಂಡು ಅದನ್ನು ಅಣಕಿಸುವಂತೆ ತೋರುತ್ತದೆ.ಒಡೆಯರ ಮತದ ಇಂದಿನ ಮಠಾಧೀಶರು ಅಂಬಿಗರ ಚೌಡಯ್ಯನನ್ನು ಆತನ ಮೂಲ ಸಮುದಾಯ ರಾಜಕೀಯವಾಗಿ ಅಪಹರಿಸಿಕೊಂಡಿರುವ ವಿಷಯದ ಬಗ್ಗೆ ಖಿನ್ನತೆಯ ಉಪೇಕ್ಷೆಯನ್ನು ತೋರಿದಂತೆ ಕಂಡರೆ, ಚೌಡಯ್ಯನ ಮೂಲ ಮತಸ್ಥರು ರಾಜಕೀಯ ನಾಯಕರ ಸಹಕಾರದೊಂದಿಗೆ ಹೊಸದಾಗಿ ಬೇರೊಂದು ಸ್ಥಳದಲ್ಲಿ ‘ಅಂಬಿಗರ ಚೌಡಯ್ಯನ ಪೀಠ’ವನ್ನು ನಿರ್ಮಿಸುವ ಬೃಹತ್ ಕಾರ್ಯದಲ್ಲಿ ತೊಡಗಿದ್ದಾರೆ. ಐಕ್ಯ ಮಂಟಪ ಅನಾಥವಾಗಿದೆ. ತುಂಗಭದ್ರೆಯೂ ಸಹನೆಯಿಂದ ಸೊರಗಿದ್ದಾಳೆ.

2. ಕಳೆದ ಎಂಟು ವರ್ಷಗಳ ಹಿಂದೆ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ‘ಅಂಬಿಗರ ಚೌಡಯ್ಯನ ಪೀಠ’ ಸ್ಥಾಪನೆಯಾಗಿದೆ. ಸರ್ಕಾರ ನೀಡಿದ ಎರಡು ಕೋಟಿ ಅನುದಾನದಲ್ಲಿ ಒಂದೂವರೆ ಕೋಟಿಯಷ್ಟು ಹಣವನ್ನು ಸ್ಮಾರಕ ಭವನ ನಿರ್ಮಿಸಿ ಅದರೊಳಗೆ ಮೌನ ವಾತಾವರಣವನ್ನು ಸೃಷ್ಟಿ ಮಾಡಲಾಗಿದೆ. ಉಳಿದ ಐವತ್ತು ಲಕ್ಷವನ್ನು ಬ್ಯಾಂಕಿನಲ್ಲಿ ಸ್ಥಿರಠೇವಣಿ ಇಟ್ಟು ಅದರಿಂದ ಬರುವ ಸಣ್ಣ ಮೊತ್ತದ ಬಡ್ಡಿಯ ಮೂಲಕ ವರ್ಷಕ್ಕೊಮ್ಮೆ ‘ಅಂಬಿಗರ ಚೌಡಯ್ಯ ಜಯಂತಿ’ಯನ್ನು ಆಚರಿಸಲಾಗುತ್ತದೆ. ಆಗಾಗ್ಗೆ ಒಂದೆರಡು ವಿಚಾರ ಸಂಕಿರಣಗಳನ್ನೂ ನಡೆಸಿ ಖರ್ಚು ಭರಿಸುವ ಶಾಸ್ತ್ರ ಮಾಡಲಾಗುತ್ತದೆ.

ವಿಶ್ವವಿದ್ಯಾಲಯದಲ್ಲಿ ದೈನಂದಿನ ಪಾಠ ಮಾಡಲೂ ಲಭ್ಯವಿಲ್ಲದ ಹಾಗಿರುವ ಪ್ರೊಫೆಸರ್ ಗಳ ಕೊರತೆ ಪೀಠ ನಿರ್ವಹಣೆಗೂ ವ್ಯಾಪಿಸಿದೆ. ಆ ಸ್ಥಳಕ್ಕೆ ಆಗಾಗ್ಗೆ ಎಡತಾಕುವ ಅಂಬಿಗರ ಚೌಡಯ್ಯನ ‘ಸಮಾಜ’ದ ವ್ಯಕ್ತಿಗಳು ತಮ್ಮ ಜಾತಿಯವರನ್ನೇ ಪೀಠದ ನಿರ್ದೇಶಕರನಾಗಿ ಮಾಡಬೇಕೆಂದು ಆಗ್ರಹಿಸುತ್ತಾರೆ. ಅಲ್ಲಿರುವ ಪ್ರತಿಕೂಲ ಪರಿಸ್ಥಿತಿಯ ಕಾರಣ ಉತ್ತರ ದೊರಕದೇ ಇನ್ನೊಮ್ಮೆ ಬರುತ್ತೇವೆಂದು ಗಡುವು ನೀಡಿ ಹೋಗುತ್ತಾರೆ.

ಮಂಗಳೂರು ವಿಶ್ವವಿದ್ಯಾಲಯದಲ್ಲೂ ಅಂಬಿಗರ ಚೌಡಯ್ಯನ ಪೀಠ ೨೦೧೨ರಿಂದ ಇದ್ದು ಅಲ್ಲಿಯೂ ಪರಿಸ್ಥಿತಿ ಭಿನ್ನವಿಲ್ಲ. ವಿಚಾರ ಸಂಕಿರಣ, ಜಯಂತಿಗಳನ್ನು ಹೊರತು ಪಡಿಸಿದರೆ ಚೌಡಯ್ಯನ ತತ್ವ, ಜೀವನ, ಸಿದ್ಧಾಂತಗಳನ್ನು, ಜನಸಾಮಾನ್ಯರ ಮನಸ್ಸುಗಳಲ್ಲಿ ಬಿತ್ತುವ ವಿಶಿಷ್ಟ ಪ್ರಯತ್ನಗಳೇನೂ ಆಗಿಲ್ಲ. ಒಂದು ಪುಸ್ತಕ ಪ್ರಕಟವಾಗಿದ್ದರೂ ಸಾಮಾನ್ಯ ಜನರ ಮನಸ್ಸುಗಳನ್ನೂ ಹೇಗೆ ಮುಟ್ಟಿದೆ ಎಂಬುದರ ಬಗ್ಗೆ ಯಾರಿಗೂ ಗೊತ್ತಿಲ್ಲ. ಅಂಬಿಗರ ಚೌಡಯ್ಯನ ಮತಸ್ಥರೆನ್ನುವ ಮೊಗವೀರರು ಈ ಪೀಠದ ಕಾರಣ ಎಷ್ಟು ಲಾಭ ಪಡೆದಿದ್ದಾರೆ? ತಿಳಿಯುವುದಿಲ್ಲ. ಅಲ್ಲಿಗೂ ಸರ್ಕಾರ ನೀಡಿರುವ ಐವತ್ತೇ ಲಕ್ಷದ ಅನುದಾನದಲ್ಲಿ ಬೇರೇನಾದರೂ ಹೇಗೆ ಮಾಡಲು ಸಾಧ್ಯ?ಅಂಬಿಗರ ಚೌಡಯ್ಯ ನಮ್ಮನ್ನು ಬಿಟ್ಟೂ ಬಿಡದೇ, ಶಿಲುಬೆಯೇರಿದ ಏಸುಕ್ರಿಸ್ತನನ್ನು ನೆನಪಿಸುತ್ತಾನೆ.

ಒಂಟಿಯಾಗಿ ನಡೆದು ಹೋದ ಬುದ್ಧನನ್ನೂ ಜ್ಞಾಪಿಸುತ್ತಾನೆ. ಏಸು ಕ್ರಿಸ್ತ ಯಹೂದಿಯಾಗಿಯೇ ಶಿಲುಬೆಗೇರಿದ. ತದನಂತರ ಕ್ರೈಸ್ತಧರ್ಮ ಉದಯವಾಯಿತು. ಗೌತಮ ಬುದ್ಧ ಸಾಗಿಹೋದ ಬಳಿಕವೇ ಬೌದ್ಧ ಧರ್ಮ ಚಿಗುರೊಡೆಯಿತು. ಅವರಿಬ್ಬರಿಗೂ, ಮಾನವಪ್ರೀತಿಯ ಹೊರತು ಹೊಸದೊಂದು ಧರ್ಮ ಸ್ಥಾಪನೆಯ ಕನಸಿರಲಿಲ್ಲ. ಅಂಬಿಗರ ಚೌಡಯ್ಯನೂ ಸನಾತನ ಧರ್ಮದ ಓರೆಕೋರೆಗಳನ್ನು ಖಂಡಿಸಿದ್ದಷ್ಟೇ ಅಲ್ಲ, ಜಾತಿ ಪದ್ಧತಿಯನ್ನು ನಿರಾಕರಿಸಿದ. ತನ್ನದೇ ರೀತಿಯಲ್ಲಿ ವಿಶ್ವ ಮಾನವತಾವಾದವನ್ನು ಪ್ರತಿಪಾದಿಸಿ ಸಾಗಿಹೋದ. ಆದರೆ, ಆತನ ಆತ್ಮವನ್ನು ಇಂದು ಜಾತಿಯ ಸಂಕೋಲೆಗಳಿಂದ ಬಿಗಿದು ಬಂಧಿಸಲಾಗಿದೆ. ಮಗ್ಗುಲು ಬದಲಿಸಲು ಆತನ ಚೇತನ ಇನ್ನೆಷ್ಟು ದಿನ ಕಾಯಬೇಕೋ?

ಕುವೆಂಪುರವರು ಭಾರತೀಯತೆಯ ಹೆಸರಿನಲ್ಲಿ ಎಲ್ಲಾ ಜಾತಿ ಮತಗಳನ್ನು ಉಳಿಸಿಕೊಳ್ಳುವುದಾದರೆ ಅಂತಹ ಭಾರತೀಯತೆ ಎಂದಿಗೂ ಪ್ರಸ್ತುತವಾಗುವುದಿಲ್ಲ. ವಿಶ್ವಮಾನವ ತತ್ವದ ಹೊರತು ಬದುಕಿಗೆ ಬೇರೆ ಯಾವುದೇ ಪರ್ಯಾಯವಿಲ್ಲ ಎಂದು ಪದೇ ಪದೇ ಹೇಳುತ್ತಿದ್ದರು. ಈ ಪ್ರಸ್ತುತತೆ ಎಂಬ ಪದದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಬೇಕೇ ಎನ್ನುವ ಪ್ರಶ್ನೆಗೆ ಮನಸ್ಸು ಮೌನವನ್ನು ಮುರಿಯುವುದಿಲ್ಲ.

ಅಂದಹಾಗೆ ಅಂಬಿಗರ ಚೌಡಯ್ಯನ ಜಯಂತಿಯನ್ನು ಸರ್ಕಾರ ಅಧಿಕೃತವಾಗಿ ಜನವರಿ 21ರಂದು ಆಚರಿಸುತ್ತದೆ. ಅಂದು, ಚೌಡಯ್ಯನ ಸಮುದಾಯಕ್ಕೆ ಇನ್ನೂ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಸಿಕ್ಕಬೇಕು, ಮತ್ತು ರಾಜಕೀಯ ಪ್ರಾತಿನಿಧ್ಯ ಸಿಕ್ಕಾಗಲೇ ಸಮುದಾಯದ ಬೇಡಿಕೆಗಳಿಗೆ ಬಲ ದಕ್ಕುತ್ತದೆ ಎಂದು ರಾಜಕಾರಣಿಗಳು ಭಾಷಣ ಮಾಡುತ್ತಾರೆ. ಆತನ ಸಂದೇಶಗಳು ಇಂದಿಗೂ ಅತ್ಯಂತ ಪ್ರಸ್ತುತ ಎಂದು ಸಾಹಿತಿಗಳು ತಮ್ಮ ಮಾತುಗಳನ್ನು ಪುನರಾವರ್ತಿಸುತ್ತಾರೆ. ಜನಸಾಮಾನ್ಯರ ಬದುಕು ತುಂಗಭದ್ರೆಯ ತಿಳಿನೀರಿನಂತೆಯೇ ಎಲ್ಲವನ್ನೂ ಉಪೇಕ್ಷಿಸುತ್ತಾ, ಮರೆಯುತ್ತಾ ಮುಂದೆ ಸಾಗುತ್ತದೆ.

ಯಲ್ಲಾಲಿಂಗ ದಂಡಿನ್
ಚಿಮ್ಮಾಇದಲ್ಲಾಯಿ
ಚಿಂಚೋಳಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending