Connect with us

ನೆಲದನಿ

‘ಶರಣ ಶ್ರೇಷ್ಠ ಅಂಬಿಗರ ಚೌಡಯ್ಯ’ ರ ಬಗ್ಗೆ ನೀವಿಷ್ಟು ತಿಳಿಯಲೇ ಬೇಕು..!

Published

on

ತೀಕ್ಷ್ಣವಚನಗಳಿಂದ ಶರಣರ ವಚನಕ್ರಾಂತಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ಅಂಬಿಗರ ಚೌಡಯ್ಯ. ಬಸವ ಬಾನಂಗಳದಲ್ಲಿ ಶಿವಶರಣರೆಂಬ ಅಮೂಲ್ಯ ನಕ್ಷತ್ರಗಳು ಮಿನುಗಿದವು. ಈ ನಕ್ಷತ್ರಗಳಲ್ಲಿ ಧ್ರುವತಾರೆಯಂತೆ ಮಿನುಗಿದವರು ಚೌಡಯ್ಯ. ನ್ಯಾಯನಿಷ್ಠುರಿ, ಖಂಡಿತವಾದಿ ಎನಿಸಿದ ಅವರ ಜಯಂತಿಯನ್ನು ಇದೇ ಜ. 21 ಮಂಗಳವಾರದಂದು ರಾಜ್ಯಾದ್ಯಂತ ಆಚರಿಸಲಾಯಿತು.

ಭಾರತದ ಸಂವಿಧಾನ, ಸಂಸತ್ತು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸುಮಾರು ಏಳು ಶತಮಾನಗಳಷ್ಟು ಮೊದಲೇ ಮುನ್ನುಡಿ ಬರೆದವರು 12ನೇ ಶತಮಾನದ ಶಿವಶರಣರು. ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಅವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಶಿವಪುರದಲ್ಲಿ (ಇಂದಿನ ಚೌಡದಾನಪುರ) ಜನಿಸಿದ ಈ ಮಹಾಶಿವಶರಣರಿಗೆ ಉದ್ದಾಲಕರೆಂಬ ಗುರುಗಳು. ‘ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ’ ಎಂಬ ವಚನಕ್ಕೆ ತಕ್ಕಂತೆ ಇರುವ ಧರ್ಮಪತ್ನಿ ಮತ್ತು ಪುರವಂತ ಎಂಬ ಪುತ್ರ. ಸದ್ಗುರುವಿನ ಕೃಪಾಕಟಾಕ್ಷದಿಂದ ಶ್ರೇಷ್ಠ ತತ್ವಜ್ಞಾನಿಯಾದ ಇವರು ವಚನಗಳನ್ನು ರಚಿಸಿ ಶಿವಶರಣರ ಪಂಕ್ತಿಯಲ್ಲಿ ಅಗ್ರಸ್ಥಾನಕ್ಕೇರಿದರು.

ಚೌಡದಾನಪುರದಲ್ಲಿ ಪೂರ್ವ ಪಶ್ಚಿಮವಾಹಿನಿಯಾಗಿ ಹರಿಯುತ್ತಿರುವ ತುಂಗಭದ್ರಾನದಿಯಲ್ಲಿ ದೋಣಿ ಮೂಲಕ ನದಿ ದಾಟಿಸುವ ಕಾಯಕ ಮಾಡುತ್ತ ವಚನಗಳನ್ನು ರಚಿಸಿದ್ದಾರೆ. ಗುರುವಿನ ಘನಕೃಪೆಗೆ ಪಾತ್ರರಾಗಿ ಅವರ ಮೂಲಕ ಲಿಂಗಾಂಗ ಸಾಮರಸ್ಯವನ್ನರಿತು ಅಪಾರ ಪಾಂಡಿತ್ಯವನ್ನು ಗಳಿಸಿದರು. ಕಲ್ಯಾಣದ ಕೀರ್ತಿಯನ್ನು ಕೇಳಿ ಅನುಭವಮಂಟಪಕ್ಕೆ ಬಂದ ಈ ಶರಣದಂಪತಿಯನ್ನು ಶರಣ ಪ್ರಮಥರೆಲ್ಲ ಆದರದಿಂದ ಬರಮಾಡಿಕೊಂಡರಂತೆ. ಬಸವಪ್ರಭುವನ್ನು ಕಂಡು ಆನಂದಪರವಶರಾಗಿ ಭಕ್ತಿಯಿಂದ ಕೈ ಮುಗಿದ ಚೌಡಯ್ಯನವರು;

‘ಬಸವಣ್ಣನೇ ಭಕ್ತ ಪ್ರಭುದೇವರೇ ಜಂಗಮರು
ಇಂತೆಂಬ ಭೇದವಿಲ್ಲಯ್ಯ, ಅರಿವೇ ಗುರು,
ಗುರುವೇ ಪರಶಿವನು ಇದು ತಿಳಿದವನೇ
ಪರಂಜ್ಯೋತಿಯೆಂದ ಅಂಬಿಗರ ಚೌಡಯ್ಯ’

ಎಂಬ ವಚನದ ಮೂಲಕ ಮನಸಾರೆ ಹೊಗಳಿದ್ದಾರೆ. ಶಿವಶರಣರ ಸಂಗದಲ್ಲಿ ಕಾಲಕಳೆದು ಪರಿಪಕ್ವರಾದ ಇವರು ರಚಿಸಿದ ವಚನಗಳು ಹಸಿಗೋಡೆಯಲ್ಲಿ ಹರಳು ಎಸೆದಂತಿವೆ. ಇವರ ವಚನಗಳನ್ನು ಕಂಡ ಕವಿ ಕಾವ್ಯಾನಂದರು ‘ನಿಜದ ನಗಾರಿ ನಿರ್ಭಯತೆಯ ಭೇರಿ ಈ ಅಂಬಿಗರ ಚೌಡಯ್ಯ’ ಎಂದಿದ್ದಾರೆ. ಮುಪ್ಪಿನ ಷಡಕ್ಷರಿಯವರು ತಮ್ಮ ಸುಬೋಧ ಸಾಗರದಲ್ಲಿ ‘ಅಂಬಿಗರ ಚೌಡಯ್ಯನ ಮುಂಬಾಗಿಲನ್ನು ಕಾಯುವ ನಂಬಿಗೆಯ ಸೇವಕರು ಕುಂಭಿನಿಯೊಳಗಿನ್ನು ಸರಿಯದಾರು?’ ಎಂದು ಹಾಡಿ ಹರಸಿದ್ದಾರೆ.

ಘನಲಿಂಗದೇವನು (1480) ‘ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ, ಅಂಬಿಗರ ಚೌಡಯ್ಯಯಿಂತಿಪ್ಪ ಶಿವಶರಣರ ಮನೆ ಬಾಗಿಲನಿಕ್ಕುವ ಸೊಣಗನ ಮಾಡಿ ಎನ್ನಿರಿಸಯ್ಯ ಎಂದು ತಮ್ಮ ವಚನವೊಂದರಲ್ಲಿ ಹೇಳಿರುವುದೇ ಇದಕ್ಕೆ ನಿದರ್ಶನವಾಗಿದೆ. ಮಹಾಕವಿ ಷಡಕ್ಷರಿಯವರು ತಮ್ಮ ‘ಬಸವರಾಜ ವಿಜಯ’ದಲ್ಲಿ ‘ನಿಡುಗುಡಿಮಾರನಂಬಿಗರ ಚೌಡಯ್ಯ’ ಎಂದು ಸ್ಮರಿಸಿದ್ದರೆ, ಮಹಾಲಿಂಗ ವಿರಚಿತ ಗುರುಬೋಧಾಮೃತದ ‘ಕುಂಬಾರ ಗುಂಡಯ್ಯ, ಅಂಬಿಗರ ಚೌಡಯ್ಯ, ಕೆಂಭಾವಿಯೊಳಗೆ ಮೆರೆವ ಬೋಗಣ್ಣನಿಗೆ ಸಂಭ್ರಮದೊಳೆರಗಿ ನಮಿಸುವೆ’ ಎಂಬ ಪದಗಳು ಹೃದಯರ್ಸಯಾಗಿವೆ.

ಮಹಾಶಕ್ತಿಸಂಪನ್ನರಾದ ಅಂಬಿಗರ ಚೌಡಯ್ಯನವರ ಮಹಿಮೆಯಿಂದ ಸರ್ಪ ಕಚ್ಚಿ ಮೃತಪಟ್ಟ ಸೈನಿಕನು ಮರುಜೀವ ಪಡೆದ. ಕ್ಷಯ, ಕುಷ್ಠರೋಗಿಗಳು ಗುಣಮುಖರಾದರು. ಅವರು ನುಡಿದ ವಾಣಿಯಿಂದ ಭಕ್ತರ ಸಕಲ ಬೇಡಿಕೆಗಳು ಈಡೇರಿದವು. ಚೌಡಯ್ಯನವರ ಪಾರಮಾರ್ಥ ಸಾಧನೆಯನ್ನು ಕಂಡು ಮಾರುಹೋದ ಗುತ್ತಲ ಅರಸನು ಅವರಿಗೆ ದಾಸೋಹಕ್ಕೆಂದು ಶಿವಪುರಕ್ಕೆ ಹೊಂದಿಕೊಂಡಿರುವ ಭೂಮಿಯನ್ನು ಕಾಣಿಕೆಯಾಗಿ ನೀಡಿದನು.

ತಮಗೆ ನೀಡಿದ ಈ ಭೂಮಿಯನ್ನು ಚೌಡಯ್ಯನವರು ತಮ್ಮ ಮಗ ಪುರವಂತ ಹಾಗೂ ಶಿವದೇವರಿಗೆ ದಾನವಾಗಿ ನೀಡಿದರು. ಅದೇ ಕಾರಣಕ್ಕಾಗಿ ಶಿವಪುರಕ್ಕೆ ‘ಚೌಡಯ್ಯ ದಾನಪುರ’ ಎಂಬ ಹೆಸರು ಬಂದಿತೆಂದು ಹೇಳಲಾಗುತ್ತಿದ್ದು, ಅದೇ ಇಂದು ಚೌಡದಾನಪುರವಾಗಿದೆ. ಬಸವಣ್ಣನವರ ಗರಡಿಯಲ್ಲಿ ಪಳಗಿದ ಇವರ ಅನುಭವವು ಅಮೃತಧಾರೆಯಾಗಿ ವಚನಗಳ ರೂಪದಲ್ಲಿ ಹರಿದುಬಂದಿವೆ. ನಿಜವಾದ ಭಕ್ತನಾರು? ಎಂಬುದನ್ನು ಕುರಿತು ತಮ್ಮ ವಚನದಲ್ಲಿ

‘ಓಡುವಾತ ಲೆಂಕನಲ್ಲ ಬೇಡುವಾತ ಭಕ್ತನಲ್ಲ
ಓಡಲಾಗದು ಲೆಂಕನು, ಬೇಡಲಾಗದು ಭಕ್ತನು
ಓಡೆನಯ್ಯ, ಬೇಡೆನಯ್ಯ ಎಂದ ಅಂಬಿಗರ ಚೌಡಯ್ಯ’ಎಂದು ಸಾರಿದ್ದು ಅಮೋಘವಾಗಿದೆ.

ಪರಮಾತ್ಮನ ನಿಜಸ್ವರೂಪವನ್ನು ಕುರಿತು

ಅಸುರ ಮಾಲೆಗಳಿಲ್ಲ, ತ್ರಿಶೂಲ ಡಮರುಗವಿಲ್ಲ
ಬ್ರಹ್ಮಕಪಾಲವಿಲ್ಲ ಭಸ್ಮಭೂಷಣನಲ್ಲ
ವೃಷಭ ವಾಹನನಲ್ಲ, ಋಷಿಯ ಮಗಳೊಡನಿರ್ದಾತನಲ್ಲ
ಎಸಗುವ ಸಂಸಾರದ ಕುರುಹಿಲ್ಲದಾತಂಗೆ
ಹೆಸರಾವುದೆಂದಾತ ಅಂಬಿಗರ ಚೌಡಯ್ಯ’
ಎಂದಿದ್ದಾರೆ.

ಸ್ಥಿತಪ್ರಜ್ಞರಾದ ಅವರು ಕೊನೆಯಲ್ಲಿ ಚೌಡದಾನಪುರದ ನದಿಯ ದಡದಲ್ಲಿ ಸಮಾಧಿಸ್ಥರಾದರೆಂದು ತಿಳಿದುಬರುತ್ತದೆ. ಆದ್ದರಿಂದ ಈ ನದಿದಡದಲ್ಲಿರುವ ದಿಬ್ಬದ ಮೇಲಿರುವ ಸಮಾಧಿಯನ್ನು ‘ಅಂಬಿಗರ ಚೌಡಯ್ಯನವರ ಸಮಾಧಿ’ ಎಂದು ಗುರುತಿಸಲಾಗಿದೆ. ಪ್ರತಿವರ್ಷ ಅಂಬಿಗರ ಚೌಡಯ್ಯನವರ ಜಯಂತಿಯ ನಿಮಿತ್ಯ ಸಂಕ್ರಮಣದ ಪರ್ವ ಕಾಲದಲ್ಲಿ ಬಹು ಸಡಗರ ಸಂಭ್ರಮದಿಂದ ಇಲ್ಲಿ ಜಾತ್ರಾಮಹೋತ್ಸವವು ಜರಗುತ್ತಲಿತ್ತು. ಈಗ ಪ್ರತಿವರ್ಷ ಜನವರಿ 21ರಂದು ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಗುತ್ತದೆ.

ಹನ್ನೆರಡನೇ ಶತಮಾನ ಎನ್ನುವುದು ಈಗಲೂ ನಮ್ಮನ್ನು ಭಾವನಾತ್ಮಕವಾಗಿಯೇ ಆಳುತ್ತಿದೆ. ಆಚರಣೆಗಳ ಭಾರಕ್ಕೆ ಬಗ್ಗಿ ಹೋಗಿದ್ದ ಸನಾತನ ಸಂಸ್ಕೃತಿಯಲ್ಲಿ ಬೆಳೆದಿದ್ದ ವರ್ಣಕಳೆಯನ್ನು ಅಂದು ವಚನ ಸಂಸ್ಕೃತಿಯೆಂಬ ಧಾರ್ಮಿಕ ಕ್ರಾಂತಿಯು ಆವರಿಸಿಕೊಂಡಿತ್ತು. ತನ್ನ ಸರಳವಾದ ಭಾಷೆಯ ಮೂಲಕ ಜನರ ನಾಡಿ ಮಿಡಿತದೊಳಗೆ ಮಿಳಿತವಾಗಿ ಎಲ್ಲ ವರ್ಗಗಳ ವಿವೇಕ ಜಾಗೃತಿಯ ಕೆಲಸವನ್ನು ಅದು ಪರಿಣಾಮಕಾರಿಯಾಗಿ ಮಾಡಿತ್ತು. ಆ ಧಾರ್ಮಿಕ ಕ್ರಾಂತಿಗೆ ಶೋಷಿತ ವರ್ಗಕ್ಕೆ ಬೆನ್ನೆಲುಬಾಗುವ ಆಶಯವಷ್ಟೇ ಇರಲಿಲ್ಲ. ಎಲ್ಲೆಡೆಯೂ ಸಮಾನತೆಯ ತತ್ವವನ್ನು, ಜಾತಿ ರಹಿತ ವ್ಯವಸ್ಥೆಯನ್ನು ನಿರ್ಮಾಣ ಮಾಡುವ ನಿಷ್ಕಳಂಕ ಕಾಳಜಿಯೂ ಅದಕ್ಕಿತ್ತು.

ಬಸವಣ್ಣ, ಅಲ್ಲಮ ಪ್ರಭು, ಅಕ್ಕಮಹಾದೇವಿ, ಮಾದಾರ ಚೆನ್ನಯ್ಯ, ಹಡಪದ ಅಪ್ಪಣ್ಣ, ಒಬ್ಬರೇ ಇಬ್ಬರೇ! ಹತ್ತಾರು ಶಿವಶರಣರು ವರ್ಣತಂತುಗಳನ್ನು ಕಿತ್ತೊಗೆಯಲು ಪಣತೊಟ್ಟು ಸಮಾಜದ ಅಂತ:ಸತ್ವವನ್ನು ಬಡಿದೆಬ್ಬಿಸಿದ್ದರು. ವಚನ ಸಂಸ್ಕೃತಿಯು ಸಮಾಜಕ್ಕೆ ನೀಡಿದ ಕ್ರಿಯಾತ್ಮಕ ಬೆರಗು, ಒದಗಿಸಿದ ಆರೋಗ್ಯಕರ ಸಂದೇಹ ಮತ್ತು ಹರವಿಟ್ಟ ಅವಿಚ್ಛಿನ್ನ ದೃಢತೆಯ ಅಭಿವ್ಯಕ್ತಿ ಇಂದಿಗೂ ಆದರ್ಶಯುತವೇ ಆಗಿ ಉಳಿದಿದೆಯೆಂದರೆ ಅದು ನಮ್ಮ ಭಾಷೆಯ, ಸಂಸ್ಕೃತಿಯ ಉತ್ಕೃಷ್ಟತೆಯನ್ನು ಆ ದಿನಗಳಲ್ಲಿಯೇ ಸ್ಪರ್ಶಿಸಿದ್ದಲ್ಲಿ ಯಾವುದೇ ಸಂದೇಹ ಇಲ್ಲ.

ಇಂತಹ ಶರಣ ಸಂಸ್ಕೃತಿಯಲ್ಲಿ ಸಾಗಿಹೋದ ಮಹಾಚೇತನಗಳ ಕುರಿತು ಸ್ವಲ್ಪ ಸಂಯಮದೊಂದಿಗೆ ಅವಲೋಕಿಸಿದಾಗ ಒಬ್ಬ ವ್ಯಕ್ತಿ ನಮ್ಮನ್ನು ಬಿಟ್ಟೂಬಿಡದ ರೀತಿಯಲ್ಲಿ ಆವರಿಸಿಕೊಂಡು ಅಂತರಂಗವನ್ನು ತಟ್ಟುತ್ತಾನೆ. ರಭಸ ನೀರಿನ ವಿರುದ್ಧ ಈಜುವ ಹಾಯಿದೋಣಿ, ತೆಪ್ಪದಲ್ಲಿ ಕುಳಿತ ಅಮಾಯಕ ಜನ, ಧೀರನಂತೆ ನಿಂತ ಹರಿಗೋಲು ಕೈಯಲ್ಲಿ ಹಿಡಿದ ಆ ಅಂಬಿಗ- ಹೀಗೆಯೇ ಆತನನ್ನು ನಾವು ಕಲ್ಪಿಸಿಕೊಳ್ಳಬೇಕು. ಆ ಅಂಬಿಗನ ಕೈಯಲ್ಲಿದ್ದದ್ದು ಅಂತಿಂತಹ ಹರಿಗೋಲಲ್ಲ. ಅದು ತನ್ನ ಜೊತೆಗಿದ್ದವರನ್ನು ಮನೋಸ್ವಾತಂತ್ರ್ಯದ ನೆಲೆಗೆ ಕರೆದೊಯ್ಯುವ ಭರವಸೆಯ, ಬಂಡಾಯದ ಹರಿಗೋಲು ಎನ್ನುವುದನ್ನೂ ನಾವು ನೆನಪಿನಲ್ಲಿಟ್ಟುಕೊಳ್ಳಬೇಕು.

ಅಂಬಿಗರ ಚೌಡಯ್ಯ ವಚನಕಾರರರೆಲ್ಲರಲ್ಲಿ ಇದ್ದ ಸುಶಿಕ್ಷವಾದ ಅಭಿವ್ಯಕ್ತಿ ಮಾರ್ಗವನ್ನು ತುಳಿಯಲಿಲ್ಲ. ತನ್ನ ಹತಾಶೆ, ನೋವು, ಬೇಗುದಿ ಎಲ್ಲವನ್ನೂ ಆತ ತನ್ನದೇ ತೀಕ್ಷ್ಣಪದಗಳ ಆಡುನುಡಿಯ ಮೂಲಕ ನಿರ್ಭಿಡೆಯಿಂದ ಬೆತ್ತಲಾಗಿಸುತ್ತಾ ಹೋದ. ಅಲ್ಲದೇ ಎಲ್ಲಾ ವಚನಕಾರರ ಹಾದಿಯಲ್ಲಿ ತಾನು ನಡೆಯದೇ ಇಷ್ಟ ದೈವದ ಬದಲಿಗೆ ತನ್ನದೇ ಹೆಸರನ್ನು ತನ್ನ ವಚನಗಳ ಅಂಕಿತವಾಗಿ ಬಳಸಿಕೊಂಡು ಸಮಾಜದ ಓರೆಕೋರೆಗಳನ್ನು ತಿದ್ದುವ ಯತ್ನ ಮಾಡಿದ. ಅಂಬಿಗರ ಚೌಡಯ್ಯ ನಿಜಾರ್ಥದಲ್ಲಿ ಬಂಡಾಯ ವಚನ ಸಂಸ್ಕೃತಿಯ ಹರಿಕಾರ. ವಚನ ಸಂಸ್ಕೃತಿಯ ಆ ತರ್ಕದ ಲೆಕ್ಕಾಚಾರಗಳಿಂದ ದೂರವುಳಿದು ಗಟ್ಟಿ ಮೌಲ್ಯಗಳ, ನಿರ್ಭಿಡೆಯ ನುಡಿಗಟ್ಟುಗಳ ಮೂಲಕ ಸಮಾಜದ ಓರೆಕೋರೆಗಳನ್ನು ಬೆತ್ತಲೆಯಾಗಿಸಿದ ಚೌಡಯ್ಯನ ಆಕ್ರೋಶದ ಅಭಿವ್ಯಕ್ತಿಯ ಹಾದಿ ಇಂದಿಗೂ ನಮ್ಮನ್ನು ಬೆಚ್ಚಿಸಿ ವಿಸ್ಮಯಗೊಳಿಸುತ್ತದೆ. ಆತ, ಮುನ್ನೂರರ ಆಸುಪಾಸಿನ ಸಂಖ್ಯೆಯ ವಚನಗಳನ್ನು ಬರೆದಿದ್ದಾನೆ. ಒಂದೆರಡನ್ನು ಓದಿಕೊಳ್ಳಿ. ಆತನ ಆಶಯ, ಧಾಟಿ ನಿಮಗೆ ಅರ್ಥವಾದೀತು.

ಉಚ್ಚೆಯ ಬಚ್ಚಲಲ್ಲಿ ಹುಟ್ಟಿ, ನಾ ಹೆಚ್ಚು
ನೀ ಹೆಚ್ಚು ಎಂಬುವವರನ್ನು ಮಚ್ಚಿಲೇ ಹೊಡೆಯೆಂದಾನಂಬಿಗರ ಚೌಡಯ್ಯ

ಕಂತೆ ತೊಟ್ಟವ ಗುರುವಲ್ಲ
ಕಾವಿ ಹೊತ್ತವ ಜಂಗಮನಲ್ಲ
ಶೀಲ ಕಟ್ಟಿದವ ಶಿವಭಕ್ತನಲ್ಲ
ನೀರು ತೀರ್ಥವಲ್ಲ, ಕೂಳು ಪ್ರಸಾದವಲ್ಲ
ಹೌದೆಂಬವನ ಬಾಯಿ ಮೇಲೆ
ಅರ್ಧ ಮಣೆಯ ಪಾದರಕ್ಷೆಯ ತೆಗೆದುಕೊಂಡು
ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ ಟೊಕಟಕನೆ
ಹೊಡಿ ಎಂದಾತ ನಮ್ಮ ಅಂಬಿಗರ ಚೌಡಯ್ಯ

ನನ್ನ ಕುಲ ಹೆಚ್ಚು, ನಿನ್ನ ಕುಲ ಕಡಿಮೆ
ಎಂದು ಹೊಡೆದಾಡುವಂತಹ ಅಣ್ಣಗಳನ್ನು
ಹಿಡಿತಂದು ಮೂಗನೆ ಸವರಿ ಮೆಣಸಿನ ಹಿಟ್ಟು
ತುಪ್ಪವ ತುಂಬಿ ನಮ್ಮ ಪಡಿಹಾರಿ ಉತ್ತಣ್ಣನ
ವಾಮ ಪಾದುಕೆಯಿಂದ ಫಡಫಡನೆ ಹೊಡೆಯಬೇಕೆಂದ
ನಮ್ಮ ಅಂಬಿಗರ ಚೌಡಯ್ಯ

ಮೊಲೆ ಮೂಡಿ ಬಂದರೆ ಆ ಪಿಂಡವನು ಹೆಣ್ಣೆಂಬರು
ಗಡ್ಡ ಮೀಸೆಗಳು ಬಂದರೆ ಆ ಪಿಂಡವನು ಗಂಡೆಂಬರು
ಆ ಇಬ್ಬರ ನಡುವೆ ಸುಳಿವ ಆತ್ಮ ಹೆಣ್ಣೂ ಅಲ್ಲ ಗಂಡೂ ಅಲ್ಲ
ನೋಡಿರೆಂದನಮ್ಮಂಬಿಗರ ಚೌಡಯ್ಯ

ಈಶ್ವರನನ್ನು ಕಾಂಬುದೊಂದಾಶೆಯುಳ್ಳೊಡೆ
ಪರದೇಶಕ್ಕೆ ಹೋಗಿ ಬಳಲದಿರು!
ಕಾಶಿಯಲ್ಲಿ ಕಾಯುವ ವಿನಾಶ ಮಾಡಬೇಡ!
ನಿನ್ನಲ್ಲಿ ನೀ ತಿಳಿದು ನೋಡಾ, ಜಗವು ನಿನ್ನೊಳಗೆಂತಾದ ಅಂಬಿಗರ ಚೌಡಯ್ಯ

ಅಂತರಂಗದ ಬೇಗುದಿಯನ್ನು, ಕಳಕಳಿಯನ್ನು ನಿರ್ಭಿಡೆಯಿಂದ ಪ್ರಕಟಿಸಿದ ಅಂಬಿಗರ ಚೌಡಯ್ಯನ ಧಾಟಿ ಓದುಗನಿಗೆ ತೀವ್ರ ಒರಟೆನಿಸುವುದು ಸಹಜ. ಆದರೆ ಪ್ರಮುಖವಾಗಿ ನಾವು ಗಮನಿಸಬೇಕಾದ್ದು ಆ ಸಂವೇದನಾಶೀಲ ವಿಡಂಬನೆಯ ವಿಚಾರ ಸಿರಿವಂತಿಕೆ ಶತಮಾನಗಳು ಕಳೆದರೂ ಪ್ರಸ್ತುತವೇ ಆಗಿ ಉಳಿಯಬೇಕಿರುವ ಅವಶ್ಯಕತೆ.ಒಂದು ಕ್ಷಣ ನಿಲ್ಲಿ! ಇಲ್ಲಿ ನಾನು ವಿವರಿಸಹೊರಟಿರುವುದು, ಅಂಬಿಗರ ಚೌಡಯ್ಯನ ಬಂಡಾಯ ಮನೋಧರ್ಮದ ಕ್ರಾಂತಿ ಹಾದಿಯ ವೈಭವವನ್ನಲ್ಲ. ದುಷ್ಟ ಸಮಾಜದೆಡೆಗಿನ ಆತನ ತಾರ್ಕಿಕ ವಿಚಾರಣೆಯ ದಿಟ್ಟ ಧಾಟಿಯೂ ಅಲ್ಲ. ಮನೋದಾಸ್ಯದ ವಿರುದ್ಧ, ಜಾತಿ ವ್ಯವಸ್ಥೆಯ ವಿರುದ್ಧ ತನ್ನದೇ ಕಟು ನಿಃಸ್ವಾರ್ಥ ರೀತಿಯಲ್ಲಿ ಹೋರಾಡಿ ವಿಶ್ವಮಾನವ ಸಂದೇಶವನ್ನು ಬಿತ್ತಿ ಹೋದ ಛಡಿ ಏಟಿನ ಚೌಡಯ್ಯ ಇಂದಿನ ವ್ಯವಸ್ಥೆಗೆ ಅಪ್ರಸ್ತುತನಾಗುತ್ತಿದ್ದಾನೆಯೇ? ಇಂದಿನ ಅಂಬಿಗರ ಚೌಡಯ್ಯ, ಕಾಲಘಟ್ಟವೊಂದರ ಸಮಾಜವನ್ನು ಹೊಸಸ್ತರಕ್ಕೆ ಕರೆದೊಯ್ದಿದ್ದ ವಚನ ಸಂಸ್ಕೃತಿಯ ವೈಫಲ್ಯದ ಒಂದು ಪಾರ್ಶ್ವವನ್ನು ಬಿಂಬಿಸುತ್ತಿದ್ದಾನೆಯೇ? ಜಗತ್ತಿನ ಮುನ್ನಡೆಯೂ ಕಾಲದ ದೃಷ್ಟಿಯಿಂದ ಹಿನ್ನೆಡೆಯನ್ನು ಕಾಣುತ್ತದೆಯೇ? ಇಂತಹ ಪ್ರಶ್ನೆಗಳನ್ನು ಕೇಳಿಕೊಳ್ಳುವ ಕಾಲ ಇದು ಎನ್ನಿಸುತ್ತದೆ.

ಅಂಬಿಗರ ಚೌಡಯ್ಯನಂಥಹ ನಿಜಶರಣನ ಆ ಅಪೂರ್ವ ಸಂದೇಶಗಳು ಶತಮಾನಗಳು ಕಳೆಯುತ್ತಾ ಹೋದಂತೆ ಸಾಮಾಜಿಕ ವ್ಯವಸ್ಥೆಯಲ್ಲಿ ಗಟ್ಟಿಯಾಗುತ್ತಾ ಸಾಗಬೇಕಿತ್ತು. ಶೋಷಣೆಗೆ ಒಳಗಾದ ಸಮಾಜ ವರ್ಗದ ಅಂತಃಶಕ್ತಿ ಸ್ವಾವಲಂಬನೆಯಿಂದ ಸುಭದ್ರವಾಗಬೇಕಿತ್ತು. ವ್ಯವಸ್ಥೆಯಲ್ಲಿ ರೂಪಿತವಾದ ಜನಪರ ಕಲ್ಯಾಣ ಕಾರ್ಯಕ್ರಮಗಳು ಆ ವರ್ಗಗಳ ಅಂತರಂಗದಲ್ಲಿದ್ದ ಬೇಗುದಿಯನ್ನು ಭಸ್ಮ ಮಾಡಬೇಕಿತ್ತು. ಮತ್ತು ಇಡೀ ಸಮಾಜ, ಜಾತಿ-ವರ್ಗಗಳನ್ನು ಮೀರಿ ವಿಶ್ವಮಾನವ ಪ್ರಜ್ಞೆಯ ಉದಾರತೆಯನ್ನು ಗಳಿಸಿಕೊಳ್ಳುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿರಬೇಕಿತ್ತು. ಆದರೆ, ಇಂದಿನ ಪರಿಸ್ಥಿತಿ ನೋಡಿದಾಗ ಇಡೀ ವಚನ ಸಂಸ್ಕೃತಿಯ ಪರಿಣಾಮಗಳ ಬಗ್ಗೆ ವಿಷಾದವೆನಿಸುವ ಸಿನಿಕತೆ ಮೂಡುತ್ತದೆ.

ಚೌಡಯ್ಯ ಈಗ ಒಂದು ಜಾತಿಯ ಸ್ವತ್ತಾಗಿ ಸೊರಗಿದ್ದಾನೆ ಮತ್ತು ಆತನಷ್ಟೇ ಅಲ್ಲ, ಎಲ್ಲ ಶರಣರೂ ಒಂದೊಂದು ಜಾತಿಗೆ ಸೀಮಿತವಾಗಿಬಿಟ್ಟಿದ್ದಾರೆ. ಆಯಾ ಜಾತಿಯ ಇಂದಿನ ಜನಸಂಖ್ಯೆಯ ಪ್ರಾಬಲ್ಯದ ಮೇಲೆ ಆಯಾ ಶರಣರ ಸಂದೇಶಗಳು ಪ್ರಸ್ತುತತೆಯ ಕೀರ್ತಿಯನ್ನು ಗಳಿಸಿಕೊಳ್ಳುತ್ತಿರುವುದೂ ವಿಷಾದದ ಸತ್ಯ. ಅಂಬಿಗರ ಚೌಡಯ್ಯನ ವಿಷಯದಲ್ಲಿಯಂತೂ, ಶರಣನಾಗಲು ಆತ ದೀಕ್ಷೆ ನೀಡಿದ ಒಂದು ಜಾತಿ ಅವನನ್ನು ಒಂದೆಡೆಗೆ ಎಳೆಯುತ್ತಿದ್ದರೆ ಅವನು ಜನಿಸಿದ ಮೂಲಜಾತಿಯ ಮತಸ್ಥರು ಆತನನ್ನು ತಮ್ಮ ಸಾಮಾಜಿಕ ಅಸ್ತಿತ್ವದ ಕುರುಹಾಗಿ ಸ್ವೀಕರಿಸಿ ತಮ್ಮೆಡೆಗೆ ಸೆಳೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆತ, ಇಂದು ರಾಜಕಾರಣಿಗಳಿಗೆ ಮತಬ್ಯಾಂಕನ್ನು ಸೃಷ್ಟಿಸುವ ಮೋಡಿಗಾರ.

ಇಂದು ಆತನ ಹೆಸರಿನಲ್ಲಿ ಎರಡು ವಿಶ್ವ ವಿದ್ಯಾಲಯಗಳಲ್ಲಿ ‘ಪೀಠ’ ಎನ್ನುವ ಗದ್ದುಗೆಗಳನ್ನು ಸ್ಥಾಪಿಸಲಾಗಿದೆ. ರಾಜಕೀಯ ಪ್ರಾಬಲ್ಯದ ಕಾರಣ ಆತನ ಜಯಂತಿಯ ಆಚರಣೆಗೆ ಸರ್ಕಾರದ ಅಧಿಕೃತ ಮುದ್ರೆಯೂ ಬಿದ್ದಿದೆ. ಆತನ ವಚನಗಳಲ್ಲಿದ್ದ ಧರ್ಮ ನಿರ್ಭಿಡತೆಯ, ಜೀವನ ಪ್ರೀತಿಯ ಆಶಯ ಅವನತಿಯೆಡೆಗೆ ಮುಖ ಮಾಡಿ ನಿಲ್ಲುತ್ತಿದೆ. ಜಾತಿಯೆಂಬ ವಿಹೀನ ಆಚರಣೆ ಸಂಸ್ಕೃತಿಯೆಂಬ ಜೀವನತತ್ವವನ್ನೇ ಬುಡಮೇಲು ಮಾಡಲು ನಿಂತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇನ್ನು, ಆಡಳಿತ ಚುಕ್ಕಾಣಿ ಹಿಡಿದ ಸರ್ಕಾರಗಳು ಆತನ ತಾತ್ವಿಕ ಸಂದೇಶಗಳನ್ನು, ಜಾತಿ-ಧರ್ಮಗಳ ಸಂಕೋಲೆಗಳಿಂದ ಮುಕ್ತಗೊಳಿಸಿ ಇಡೀ ಸಾಮಾಜಿಕ ವ್ಯವಸ್ಥೆಯೊಳಗೆ ಹರಿಸುವ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿವೆಯೇ? ಈ ಜಾಡಿನಲ್ಲಿ ಸಿಗುವ ಕೆಲವು ಸತ್ಯಗಳು ಇಂದಿನ ಮಟ್ಟಿಗಂತೂ ನಿರಾಶೆಯನ್ನೇ ಮೂಡಿಸುತ್ತವೆ.

1. ರಾಣಿಬೆನ್ನೂರು ತಾಲ್ಲೂಕಿನ ಚೌಡಯ್ಯದಾನಪುರದ ಗ್ರಾಮದ ಪಕ್ಕದಲ್ಲಿಯೇ ವಿಶಾಲವಾಗಿ ಹರಿಯುವ ತುಂಗಭದ್ರೆಯ ತಟದಲ್ಲಿ ಚೌಡಯ್ಯ ಲಿಂಗೈಕ್ಯನಾದ ಸ್ಥಳ ಇದೆ. ಪ್ರತಿ ಮಳೆಗಾಲದಲ್ಲಿನ ನೆರೆಗೆ ಅದಕ್ಕೆ ಮುಳುಗುವ ಭಾಗ್ಯವೂ, ದೌರ್ಭಾಗ್ಯವೂ ಇದೆ. ಅಂಬಿಗನ ಆತ್ಮವಾದ ಕಾರಣ, ಮುಳುಗದೇ ಉಳಿದೆನೆನ್ನುವ ಹಾಗೆ ದರ್ಶನ ನೀಡುವ ಸೌಭಾಗ್ಯವೂ ಅದಕ್ಕಿದೆ. ಈ ಚೌಡಯ್ಯದಾನಪುರದ ಜಾಗವನ್ನು ಅಂಬಿಗರ ಚೌಡಯ್ಯ ತನ್ನ ಗುರುವಾದ ಶಿವದೇವಮುನಿಗಳಿಗೆ ದಾನವಾಗಿ ಕೊಟ್ಟಿರುವ ಬಗ್ಗೆ ಶಿಶುನಾಳ ಷರೀಫರು ರಚಿಸಿದ ‘ಶಿವದೇವ ವಿಜಯಂ’ ಎಂಬ ಪುಸ್ತಕದಲ್ಲಿ ಉಲ್ಲೇಖವಿದೆ. ಹಾಗಾಗಿಯೇ ಊರಿಗೆ ಆ ಹೆಸರು ರೂಢಿಗೆ ಬಂದಿತೆಂದೂ ಅದರಲ್ಲಿ ವಿವರಿಸಲಾಗಿದೆ.

ವೀರಶೈವ ಸಮುದಾಯದ ಶಿವದೇವಮುನಿಗಳು ಆತನಿಗೆ ಲಿಂಗದೀಕ್ಷೆ ನೀಡಿದರೆಂಬ ಕಾರಣಕ್ಕೆ, ಅನುಜನೆಂಬ ಮಮತೆಗೆ ಶ್ರೀ ಶಿವದೇವ ಒಡೆಯರ ಎಂಬ ವಕೀಲರು ಚೌಡಯ್ಯ ಲಿಂಗೈಕ್ಯನಾದ ಸ್ಥಳದಲ್ಲಿ ಗದ್ದುಗೆಯ ಜೀರ್ಣೋದ್ಧಾರ ಮಾಡಿ ೧೯೬೮ರಷ್ಟು ಹಿಂದೆಯೇ ಪುಟ್ಟದಾದ ಐಕ್ಯ ಮಂಟಪವನ್ನು ನಿರ್ಮಿಸಿದ್ದಾರೆ. ಕಾಲಾನುಕ್ರಮದಲ್ಲಿ ಸಾಮಾಜಿಕ ಪರಿಸ್ಥಿತಿಗಳ ಮನ್ವಂತರದ ಹಿನ್ನೆಲೆಯಲ್ಲಿ ರಾಜಕೀಯ ಪ್ರಾಬಲ್ಯಗಳು ಹೆಚ್ಚಿದಂತೆಲ್ಲಾ ಅಂಬಿಗರ ಚೌಡಯ್ಯನ ಮೂಲ ಸಮಾಜಸ್ಥರು ‘ಸಬಲತೆ’ಯನ್ನು ಗಳಿಸಿಕೊಂಡಿದ್ದಾರೆ. ಅದು ಸಹಜವೂ ಹೌದು. ಈ ಕಾರಣಕ್ಕೆ ಅಂಬಿಗರ ಚೌಡಯ್ಯ ತಮ್ಮವನೆಂದು ಹೇಳಿಕೊಳ್ಳುವ ಕಸುವು ಅವರಲ್ಲಿ ವೃದ್ಧಿಯಾಗಿ ಎರಡೂ ವರ್ಗಗಳಲ್ಲಿ ಹಬ್ಬಿದ ವಿಚಾರಭೇದಗಳು ಚೌಡಯ್ಯನ ಆತ್ಮವನ್ನು ಅನಾಥನನ್ನಾಗಿ ಮಾಡಿವೆ! ಇಂದು ಅಂಬಿಗರ ಚೌಡಯ್ಯನ ಐಕ್ಯಮಂಟಪದ ಸುತ್ತಲೂ, ಒಳಗೂ ಕಸ, ಕಡ್ಡಿ, ಕೊಳಚೆಗಳು ನಾರುತ್ತಿವೆ.

ಪಕ್ಕದಲ್ಲಿಯೇ ಮರಳು ಸಾಗಾಣಿಕೆ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದರೆ ಸುತ್ತಮುತ್ತಲಿನ ಜಾಗ ಗ್ರಾಮಸ್ಥರ ಬಹಿರ್ದೆಸೆಯ ನಿರಾಳತೆಗೂ ಸಾಕ್ಷಿಯಾಗಿ ನಿಂತಿದೆ. ಪಕ್ಕದಲ್ಲಿಯೇ, ಮೇಲ್ಮಟ್ಟದಲ್ಲಿ ಇದ್ದುದರಲ್ಲಿ ಸುರಕ್ಷಿತವಾಗಿರುವ ಚಾಲುಕ್ಯರ ಕಾಲದ ಮುಕ್ತೇಶ್ವರ ದೇವಸ್ಥಾನ ಪಾರಂಪರಿಕ ಪಟ್ಟ ಗಿಟ್ಟಿಸಿಕೊಂಡು ಅದನ್ನು ಅಣಕಿಸುವಂತೆ ತೋರುತ್ತದೆ.ಒಡೆಯರ ಮತದ ಇಂದಿನ ಮಠಾಧೀಶರು ಅಂಬಿಗರ ಚೌಡಯ್ಯನನ್ನು ಆತನ ಮೂಲ ಸಮುದಾಯ ರಾಜಕೀಯವಾಗಿ ಅಪಹರಿಸಿಕೊಂಡಿರುವ ವಿಷಯದ ಬಗ್ಗೆ ಖಿನ್ನತೆಯ ಉಪೇಕ್ಷೆಯನ್ನು ತೋರಿದಂತೆ ಕಂಡರೆ, ಚೌಡಯ್ಯನ ಮೂಲ ಮತಸ್ಥರು ರಾಜಕೀಯ ನಾಯಕರ ಸಹಕಾರದೊಂದಿಗೆ ಹೊಸದಾಗಿ ಬೇರೊಂದು ಸ್ಥಳದಲ್ಲಿ ‘ಅಂಬಿಗರ ಚೌಡಯ್ಯನ ಪೀಠ’ವನ್ನು ನಿರ್ಮಿಸುವ ಬೃಹತ್ ಕಾರ್ಯದಲ್ಲಿ ತೊಡಗಿದ್ದಾರೆ. ಐಕ್ಯ ಮಂಟಪ ಅನಾಥವಾಗಿದೆ. ತುಂಗಭದ್ರೆಯೂ ಸಹನೆಯಿಂದ ಸೊರಗಿದ್ದಾಳೆ.

2. ಕಳೆದ ಎಂಟು ವರ್ಷಗಳ ಹಿಂದೆ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ‘ಅಂಬಿಗರ ಚೌಡಯ್ಯನ ಪೀಠ’ ಸ್ಥಾಪನೆಯಾಗಿದೆ. ಸರ್ಕಾರ ನೀಡಿದ ಎರಡು ಕೋಟಿ ಅನುದಾನದಲ್ಲಿ ಒಂದೂವರೆ ಕೋಟಿಯಷ್ಟು ಹಣವನ್ನು ಸ್ಮಾರಕ ಭವನ ನಿರ್ಮಿಸಿ ಅದರೊಳಗೆ ಮೌನ ವಾತಾವರಣವನ್ನು ಸೃಷ್ಟಿ ಮಾಡಲಾಗಿದೆ. ಉಳಿದ ಐವತ್ತು ಲಕ್ಷವನ್ನು ಬ್ಯಾಂಕಿನಲ್ಲಿ ಸ್ಥಿರಠೇವಣಿ ಇಟ್ಟು ಅದರಿಂದ ಬರುವ ಸಣ್ಣ ಮೊತ್ತದ ಬಡ್ಡಿಯ ಮೂಲಕ ವರ್ಷಕ್ಕೊಮ್ಮೆ ‘ಅಂಬಿಗರ ಚೌಡಯ್ಯ ಜಯಂತಿ’ಯನ್ನು ಆಚರಿಸಲಾಗುತ್ತದೆ. ಆಗಾಗ್ಗೆ ಒಂದೆರಡು ವಿಚಾರ ಸಂಕಿರಣಗಳನ್ನೂ ನಡೆಸಿ ಖರ್ಚು ಭರಿಸುವ ಶಾಸ್ತ್ರ ಮಾಡಲಾಗುತ್ತದೆ.

ವಿಶ್ವವಿದ್ಯಾಲಯದಲ್ಲಿ ದೈನಂದಿನ ಪಾಠ ಮಾಡಲೂ ಲಭ್ಯವಿಲ್ಲದ ಹಾಗಿರುವ ಪ್ರೊಫೆಸರ್ ಗಳ ಕೊರತೆ ಪೀಠ ನಿರ್ವಹಣೆಗೂ ವ್ಯಾಪಿಸಿದೆ. ಆ ಸ್ಥಳಕ್ಕೆ ಆಗಾಗ್ಗೆ ಎಡತಾಕುವ ಅಂಬಿಗರ ಚೌಡಯ್ಯನ ‘ಸಮಾಜ’ದ ವ್ಯಕ್ತಿಗಳು ತಮ್ಮ ಜಾತಿಯವರನ್ನೇ ಪೀಠದ ನಿರ್ದೇಶಕರನಾಗಿ ಮಾಡಬೇಕೆಂದು ಆಗ್ರಹಿಸುತ್ತಾರೆ. ಅಲ್ಲಿರುವ ಪ್ರತಿಕೂಲ ಪರಿಸ್ಥಿತಿಯ ಕಾರಣ ಉತ್ತರ ದೊರಕದೇ ಇನ್ನೊಮ್ಮೆ ಬರುತ್ತೇವೆಂದು ಗಡುವು ನೀಡಿ ಹೋಗುತ್ತಾರೆ.

ಮಂಗಳೂರು ವಿಶ್ವವಿದ್ಯಾಲಯದಲ್ಲೂ ಅಂಬಿಗರ ಚೌಡಯ್ಯನ ಪೀಠ ೨೦೧೨ರಿಂದ ಇದ್ದು ಅಲ್ಲಿಯೂ ಪರಿಸ್ಥಿತಿ ಭಿನ್ನವಿಲ್ಲ. ವಿಚಾರ ಸಂಕಿರಣ, ಜಯಂತಿಗಳನ್ನು ಹೊರತು ಪಡಿಸಿದರೆ ಚೌಡಯ್ಯನ ತತ್ವ, ಜೀವನ, ಸಿದ್ಧಾಂತಗಳನ್ನು, ಜನಸಾಮಾನ್ಯರ ಮನಸ್ಸುಗಳಲ್ಲಿ ಬಿತ್ತುವ ವಿಶಿಷ್ಟ ಪ್ರಯತ್ನಗಳೇನೂ ಆಗಿಲ್ಲ. ಒಂದು ಪುಸ್ತಕ ಪ್ರಕಟವಾಗಿದ್ದರೂ ಸಾಮಾನ್ಯ ಜನರ ಮನಸ್ಸುಗಳನ್ನೂ ಹೇಗೆ ಮುಟ್ಟಿದೆ ಎಂಬುದರ ಬಗ್ಗೆ ಯಾರಿಗೂ ಗೊತ್ತಿಲ್ಲ. ಅಂಬಿಗರ ಚೌಡಯ್ಯನ ಮತಸ್ಥರೆನ್ನುವ ಮೊಗವೀರರು ಈ ಪೀಠದ ಕಾರಣ ಎಷ್ಟು ಲಾಭ ಪಡೆದಿದ್ದಾರೆ? ತಿಳಿಯುವುದಿಲ್ಲ. ಅಲ್ಲಿಗೂ ಸರ್ಕಾರ ನೀಡಿರುವ ಐವತ್ತೇ ಲಕ್ಷದ ಅನುದಾನದಲ್ಲಿ ಬೇರೇನಾದರೂ ಹೇಗೆ ಮಾಡಲು ಸಾಧ್ಯ?ಅಂಬಿಗರ ಚೌಡಯ್ಯ ನಮ್ಮನ್ನು ಬಿಟ್ಟೂ ಬಿಡದೇ, ಶಿಲುಬೆಯೇರಿದ ಏಸುಕ್ರಿಸ್ತನನ್ನು ನೆನಪಿಸುತ್ತಾನೆ.

ಒಂಟಿಯಾಗಿ ನಡೆದು ಹೋದ ಬುದ್ಧನನ್ನೂ ಜ್ಞಾಪಿಸುತ್ತಾನೆ. ಏಸು ಕ್ರಿಸ್ತ ಯಹೂದಿಯಾಗಿಯೇ ಶಿಲುಬೆಗೇರಿದ. ತದನಂತರ ಕ್ರೈಸ್ತಧರ್ಮ ಉದಯವಾಯಿತು. ಗೌತಮ ಬುದ್ಧ ಸಾಗಿಹೋದ ಬಳಿಕವೇ ಬೌದ್ಧ ಧರ್ಮ ಚಿಗುರೊಡೆಯಿತು. ಅವರಿಬ್ಬರಿಗೂ, ಮಾನವಪ್ರೀತಿಯ ಹೊರತು ಹೊಸದೊಂದು ಧರ್ಮ ಸ್ಥಾಪನೆಯ ಕನಸಿರಲಿಲ್ಲ. ಅಂಬಿಗರ ಚೌಡಯ್ಯನೂ ಸನಾತನ ಧರ್ಮದ ಓರೆಕೋರೆಗಳನ್ನು ಖಂಡಿಸಿದ್ದಷ್ಟೇ ಅಲ್ಲ, ಜಾತಿ ಪದ್ಧತಿಯನ್ನು ನಿರಾಕರಿಸಿದ. ತನ್ನದೇ ರೀತಿಯಲ್ಲಿ ವಿಶ್ವ ಮಾನವತಾವಾದವನ್ನು ಪ್ರತಿಪಾದಿಸಿ ಸಾಗಿಹೋದ. ಆದರೆ, ಆತನ ಆತ್ಮವನ್ನು ಇಂದು ಜಾತಿಯ ಸಂಕೋಲೆಗಳಿಂದ ಬಿಗಿದು ಬಂಧಿಸಲಾಗಿದೆ. ಮಗ್ಗುಲು ಬದಲಿಸಲು ಆತನ ಚೇತನ ಇನ್ನೆಷ್ಟು ದಿನ ಕಾಯಬೇಕೋ?

ಕುವೆಂಪುರವರು ಭಾರತೀಯತೆಯ ಹೆಸರಿನಲ್ಲಿ ಎಲ್ಲಾ ಜಾತಿ ಮತಗಳನ್ನು ಉಳಿಸಿಕೊಳ್ಳುವುದಾದರೆ ಅಂತಹ ಭಾರತೀಯತೆ ಎಂದಿಗೂ ಪ್ರಸ್ತುತವಾಗುವುದಿಲ್ಲ. ವಿಶ್ವಮಾನವ ತತ್ವದ ಹೊರತು ಬದುಕಿಗೆ ಬೇರೆ ಯಾವುದೇ ಪರ್ಯಾಯವಿಲ್ಲ ಎಂದು ಪದೇ ಪದೇ ಹೇಳುತ್ತಿದ್ದರು. ಈ ಪ್ರಸ್ತುತತೆ ಎಂಬ ಪದದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಬೇಕೇ ಎನ್ನುವ ಪ್ರಶ್ನೆಗೆ ಮನಸ್ಸು ಮೌನವನ್ನು ಮುರಿಯುವುದಿಲ್ಲ.

ಅಂದಹಾಗೆ ಅಂಬಿಗರ ಚೌಡಯ್ಯನ ಜಯಂತಿಯನ್ನು ಸರ್ಕಾರ ಅಧಿಕೃತವಾಗಿ ಜನವರಿ 21ರಂದು ಆಚರಿಸುತ್ತದೆ. ಅಂದು, ಚೌಡಯ್ಯನ ಸಮುದಾಯಕ್ಕೆ ಇನ್ನೂ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಸಿಕ್ಕಬೇಕು, ಮತ್ತು ರಾಜಕೀಯ ಪ್ರಾತಿನಿಧ್ಯ ಸಿಕ್ಕಾಗಲೇ ಸಮುದಾಯದ ಬೇಡಿಕೆಗಳಿಗೆ ಬಲ ದಕ್ಕುತ್ತದೆ ಎಂದು ರಾಜಕಾರಣಿಗಳು ಭಾಷಣ ಮಾಡುತ್ತಾರೆ. ಆತನ ಸಂದೇಶಗಳು ಇಂದಿಗೂ ಅತ್ಯಂತ ಪ್ರಸ್ತುತ ಎಂದು ಸಾಹಿತಿಗಳು ತಮ್ಮ ಮಾತುಗಳನ್ನು ಪುನರಾವರ್ತಿಸುತ್ತಾರೆ. ಜನಸಾಮಾನ್ಯರ ಬದುಕು ತುಂಗಭದ್ರೆಯ ತಿಳಿನೀರಿನಂತೆಯೇ ಎಲ್ಲವನ್ನೂ ಉಪೇಕ್ಷಿಸುತ್ತಾ, ಮರೆಯುತ್ತಾ ಮುಂದೆ ಸಾಗುತ್ತದೆ.

ಯಲ್ಲಾಲಿಂಗ ದಂಡಿನ್
ಚಿಮ್ಮಾಇದಲ್ಲಾಯಿ
ಚಿಂಚೋಳಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending