ದಿನದ ಸುದ್ದಿ
ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ; ಒಂದು ಚಿಂತನೆ
- ಮಹಾಂತೇಶ್.ಬಿ.ನಿಟ್ಟೂರು, ದಾವಣಗೆರೆ
ನಿಜ ಶರಣ ಶ್ರೀ ಅಂಬಿಗರ ಚೌಡಯ್ಯನವರ ಜೀವಿತ ಕಾಲ 12 ನೇ ಶತಮಾನದ ಬಸವಾದಿ ಶರಣರ ಕಾಲದಲ್ಲೇ ಇತ್ತು ಎಂಬುದು ಇತಿಹಾಸಕಾರರ ಸಂಶೋಧನೆಯಿಂದ ತಿಳಿದು ಬರುತ್ತದೆ. ಅವರ ಹುಟ್ಟೂರು ಹಾವೇರಿ ಜಿಲ್ಲೆಯ ಆಗಿನ ಶಿವಪುರ, ಈಗಿನ ಚೌಡಯ್ಯದಾನಪುರ. ಅವರ ತಂದೆಯ ಹೆಸರು ಶ್ರೀ ವಿರೂಪಾಕ್ಷ, ತಾಯಿಯ ಹೆಸರು ಪಂಪಾಂಭಿಕೆ, ಹೆಂಡತಿಯ ಹೆಸರು ಸುಲೋಚನಾ ಹಾಗೂ ಮಗನ ಹೆಸರು ಪುರವಂತ.
ಅಂಬಿಗ ವೃತ್ತಿಯ ಚೌಡಯ್ಯನವರು ಅಲ್ಲಮ ಪ್ರಭು ಮತ್ತು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಇದ್ದ ಒಬ್ಬ ಕ್ರಾಂತಿಕಾರಿ, ದಿಟ್ಟ, ನೇರ, ನಿಷ್ಠುರ ನುಡಿಯ ವಚನಕಾರ. ಕಲ್ಯಾಣ ಕ್ರಾಂತಿಯ ನಂತರ ಇವರು ತಮ್ಮ ವಚನಗಳ ಗಂಟನ್ನು ಹೊತ್ತು ಉಳವಿಗೆ ನಂತರ ತಮ್ಮ ಗ್ರಾಮವಾದ ತುಂಗಭದ್ರಾ ನದಿಯ ದಡದ ಮೇಲಿರುವ ಶಿವಪುರಕ್ಕೆ ಬಂದು ದೋಣಿ ನಡೆಸುವ ವೃತ್ತಿಯಲ್ಲಿ ನಿರತರಾಗಿ ವಚನ ರಚನೆ ಮಾಡಿರುವುದು ತಿಳಿದು ಬರುತ್ತದೆ.
ಚೌಡಯ್ಯನವರು ತಮ್ಮ ಜೀವಿತಾವಧಿಯಲ್ಲಿ ಅನೇಕ ಪವಾಡಗಳನ್ನು ಮಾಡಿರುತ್ತಾರೆ. ಗಿಡಮೂಲಿಕೆ ಔಷಧಿಗಳಿಂದ ಕ್ಷಯ ರೋಗ, ಕುಷ್ಠರೋಗ ಗುಣಪಡಿಸುವುದು, ಹಾವು ಕಚ್ಚಿದವರನ್ನು
ಬದುಕಿಸುವುದು ಇತ್ಯಾದಿ..
ಒಮ್ಮೆ ಗುತ್ತಲದ ಅರಸನು ಬೇಟೆಗಾಗಿ ಈ ಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ, ಆತನ ಸೇನಾಧಿಪತಿಯು ಹಾವು ಕಚ್ಚಿ ಮೃತಪಟ್ಟನು. ಇದರಿಂದಾಗಿ ಅರಸನಿಗೆ ಅತೀವ ದುಃಖವುಂಟಾಗಿ ರೋಧಿಸತೊಡಗಿದನು. ಆಗ ಆತನ ಸೈನಿಕನೊಬ್ಬನು ಶ್ರೀ ಚೌಡಯ್ಯನವರ ಪವಾಡಗಳ ಬಗ್ಗೆ ವಿವರಿಸಿ ಹೇಳಲಾಗಿ, ಅರಸನು ತನ್ನ ಮೃತ ಸೇನಾಧಿಪತಿಯ ಶರೀರವನ್ನು ಚೌಡಯ್ಯನವರಲ್ಲಿಗೆ ತಂದು ಆತನನ್ನು ಬದುಕಿಸುವಂತೆ ಕೇಳಿಕೊಂಡರು, ಆಗ ಚೌಡಯ್ಯನವರು ಸೇನಾಧಿಪತಿಯನ್ನು ಬದುಕಿಸುತ್ತಾರೆ. ಇದರಿಂದ ಸಂತುಷ್ಟನಾದ ಅರಸನು ಶಿವಪುರದ ಸುತ್ತಲಿನ ಪೂರ್ವ – ಪಶ್ಚಿಮಕ್ಕೆ 14 ಮೈಲು ಹಾಗೂ ಉತ್ತರ – ದಕ್ಷಿಣಕ್ಕೆ 7 ಮೈಲು ಸುತ್ತಳತೆಯ ಭೂಮಿಯನ್ನು ಚೌಡಯ್ಯನವರಿಗೆ ದಾನವಾಗಿ ನೀಡಿದನು.
ಆದರೆ ಚೌಡಯ್ಯನರು ವೈರಾಗ್ಯಶಾಲಿಯು, ಲೌಕಿಕದಲ್ಲಿ ನಿರಾಸಕ್ತಿ ಹೊಂದಿದವರು ಆಗಿದ್ದರಿಂದ, ಅರಸನು ಕೊಡಮಾಡಿದ್ದ ಸಂಪೂರ್ಣ ಜಮೀನನ್ನು ತನ್ನ ಗುರುಗಳಾದ ಶ್ರೀ ಶಿವದೇವರಿಗೆ ದಾನವಾಗಿ ನೀಡಿದರು ಎಂಬ ಉಲ್ಲೇಖವಿದೆ. ಅಂದಿನಿಂದ ಶಿವಪುರ ಗ್ರಾಮಕ್ಕೆ ‘ಚೌಡಯ್ಯದಾನಪುರ’ ಎಂದು ಹೆಸರು ಬರುತ್ತದೆ. ಮುಂದೆ ಚೌಡಯ್ಯನರು ಅಲ್ಲಿ ದೇಹ ತ್ಯಾಗ ಮಾಡಿದ್ದರಿಂದ ತುಂಗಭದ್ರಾ ನದಿಯ ದಡದಲ್ಲಿ ಈಗಲೂ ಚೌಡಯ್ಯನವರ ಸಮಾಧಿ ಗದ್ದುಗೆ ಇದೆ.
ಭ್ರಮಾಲೋಕದಲ್ಲಿ ವಿಹರಿಸುತ್ತಾ ಕುಳಿತ, ಆಡಂಬರದಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಮಂದಿಯ ಕಪಾಳಕ್ಕೆ ಹೊಡೆದು ಎಚ್ಚರಿಸುವಂತಿವೆ ಚೌಡಯ್ಯನವರ ವಚನಗಳು. ಧಾರ್ಮಿಕ ಮೂಢನಂಬಿಕೆ ಬಿತ್ತುವವರಿಗೆ, ಸ್ವಾರ್ಥಿಗಳಾಗಿ ಬದುಕುವವರಿಗೆ, ಮುಖವಾಡ ಹಾಕಿ ಮಂಕು ಬೂದಿ ಎರಚುವವರಿಗೆ ಸಿಂಹ ಸ್ವಪ್ನದಂತೆ ಬೆಚ್ಚಿ ಬೀಳಿಸುತ್ತವೆ ನಿಜ ಶರಣ ಅಂಬಿಗರ ಚೌಡಯ್ಯನವರ ವಚನಗಳು. ಇದಕ್ಕೆ ತಾತ್ಪೂರ್ತಿಕವಾಗಿ ಕೆಲವು ವಚನಗಳು ಈ ಕೆಳಗಿನಂತಿವೆ;
“ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು/ನಂಬಿದರೆ ಒಂದೇ ಹುಟ್ಟಲಿ/ಕಡೆಯ ಹಾಯಿಸುವೆನೆಂದಾತನಂಬಿಗರ/ಚೌಡಯ್ಯ ನಿಜಶರಣನು”
ಈ ಮೇಲಿನ ವಚನ ಶ್ರೀ ಅಂಬಿಗರ ಚೌಡಯ್ಯನವರ ಸ್ವಾಭಿಮಾನ, ಧೈರ್ಯ, ನೇರ, ನಿರ್ಭಿಡೆಯ ವ್ಯಕ್ತಿತ್ವದ ಪ್ರತೀಕವಾಗಿದೆ.
ಹನ್ನೆರಡನೇ ಶತಮಾನದ ಸಂದರ್ಭದಲ್ಲಿ ಜಾತಿ ಮತ್ತು ವರ್ಗ ವ್ಯವಸ್ಥೆ ಎಷ್ಟರಮಟ್ಟಿಗಿತ್ತು ಎಂಬುದನ್ನು ಈ ವಚನ ಸೂಚಿಸುತ್ತದೆ. ಅಂತಹ ವಿಚಿತ್ರ, ವಿಕ್ಷಿಪ್ತ ಸನ್ನಿವೇಶದಲ್ಲಿ ಬಸವಾದಿ ಶರಣರು ಜಾತೀಯತೆ, ವರ್ಗ – ವರ್ಣ ವ್ಯವಸ್ಥೆಯ ವಿರುದ್ಧ ಬೃಹತ್ ಚಳುವಳಿಯನ್ನು ಕೈಗೊಂಡಾಗ ಅಂಬಿಗರ ಚೌಡಯ್ಯನವರ ಸತ್ಯನಿಷ್ಠೆ, ಪ್ರಾಮಾಣಿಕತೆಯ ವಚನಗಳು ಪ್ರಖರವಾಗಿ ಕಾಣಿಸುತ್ತವೆ. ಕೆಲವು ಢೋಂಗಿ ಭಕ್ತರಿಗೆ, ಕಪಟ ಸನ್ಯಾಸಿಗಳಿಗೆ ತನ್ನ ಖಾರವಾದ ವಚನಗಳ ಮೂಲಕ ಚುರುಕು ಮುಟ್ಟಿಸುತ್ತಾರೆ.
ಆಡಂಬರ ಮತ್ತು ದುರಾಸೆಯ ಜನರ ಮನಸ್ಥಿತಿ ಕಂಡು ಕೆಂಡಾಮಂಡಲವಾಗಿ ಪ್ರಸ್ತುತ ಪಡಿಸಿದ ಒಂದು ವಚನ ಇಂತಿದೆ;
“ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಕಾಳೋಗರನ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹಾರುವ ಪಕ್ಷಿಯನು/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೆಬ್ಬುಲಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೊಯ್ವ ಹೆಮ್ಮಾರಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಬರುವ ಉರಿ ಬಾಣವನು/ಇಂತೆಲ್ಲವನು ಒಂದೇ ಮಂತ್ರದಲ್ಲಿ ನಿಲ್ಲಿಸಬಹುದು;/ಲೋಭವೆಂಬ ಗ್ರಹಣ ಹಿಡಿದವರ ಏತರಿಂದಲೂ/ನಿಲ್ಲಿಸಲಾಗದು/ಈ ಲೋಭಕ್ಕೆ ದಾರಿದ್ರ್ಯವೇ ಔಷಧವು;/ಹೇಳಿದರೆ ಕೇಳರು, ತಾವು ತಿಳಿಯರು/ಶಾಸ್ತ್ರವ ನೋಡರು, ಭಕ್ತಿಯ ಹಿಡಿಯರು/ಇಂತಹ ಗೊಡ್ಡು ಮೂಳ ಹೊಲೆಯರಿಗೆ/ಕರ್ಮವೆಂಬ ಶರದ್ಧಿಯಲ್ಲಿ ಬಿದ್ದು ಹೊರಳಾಡುವುದೇ/ಸತ್ಯವೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು”
ಸಂಸಾರದ ಜಂಜಾಟದಲ್ಲಿ ಬಿದ್ದು ಒದ್ದಾಡುತ್ತಾ ಶಿವನನ್ನು ಮರೆತು ಹತ್ತು ಹಲವು ಚಿಂತೆಯಲ್ಲಿ ಮುಳುಗಿರುವ ಶವ ಮುಖದ ಜನರ ಸ್ಥಿತಿ-ಗತಿಯನ್ನು ಅರ್ಥಗರ್ಭಿತವಾಗಿ ಸಾದರಪಡಿಸುವ ಒಂದು ವಚನ ಇಂತಿದೆ;
“ಬಡತನಕೆ ಉಂಬುವ ಚಿಂತೆ/ಉಣಲಾದಡೆ ಉಡುವ ಚಿಂತೆ/ಉಡಲಾದಡೆ ಇಡುವ ಚಿಂತೆ/ಇಡಲಾದಡೆ ಹೆಂಡಿರ ಚಿಂತೆ/ಹೆಂಡಿರಾದರೆ ಮಕ್ಕಳ ಚಿಂತೆ/ಮಕ್ಕಳಾದಡೆ ಬದುಕಿನ ಚಿಂತೆ/ಬದುಕಾದಡೆ ಕೇಡಿನ ಚಿಂತೆ/ಕೇಡಾದಡೆ ಮರಣದ ಚಿಂತೆ/ಇಂತೀ ಹಲವು ಚಿಂತೆಯಲ್ಲಿಪ್ಪವರ ಕಂಡೆನು/ಶಿವನ ಚಿಂತೆಯಲ್ಲಿದ್ದಾತರೊಬ್ಬರನೂ ಕಾಣೆನೆಂದಾತ/ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು!”
ಸಮಯದ ಸದ್ಬಳಕೆ ಮಾಡಿಕೊಂಡು ಕಾಯಕ ಮಾಡುತ್ತಾ ಶಿವಭಕ್ತರಾಗಿ, ಜೀವನ ಪಾವನವಾಗಿಸುವಂತೆ ಕರೆ ನೀಡುವ ಒಂದು ವಚನ ಇಂತಿದೆ;
“ಗಾಳಿ ಬಿಟ್ಟಾಗ ತೂರಿಕೊಳ್ಳಿರಯ್ಯ/ಗಾಳಿ ನಿಮ್ಮ ಅಧೀನವಲ್ಲ ಕಂಡಯ್ಯ/ನಾಳೆ ತೂರಿಹೆನೆಂದಡಿಲ್ಲ ಕಂಡಯ್ಯ/ಶಿವಶರಣೆ ಎಂಬುದೊಂದು ಗಾಳಿ ಬಿಟ್ಟಲ್ಲಿ/ಬೇಗ ತೂರೆಂದನಂಬಿಗರ ಚೌಡಯ್ಯ”
ಕಾವಿ ಬಟ್ಟೆ ತೊಟ್ಟು, ಭಿಕ್ಷೆಗಾಗಿ ಜೋಳಿಗೆ ಹಾಕಿದವರೆಲ್ಲರೂ ಜಂಗಮರು, ಗುರುಗಳಾಗಲಾರರು ಎಂಬುದನ್ನು ವಿಡಂಬಿಸುವ ಒಂದು ವಚನ ಇಂತಿದೆ;
“ಕಂಥೆ ತೊಟ್ಟವ ಗುರುವಲ್ಲ/ಕಾವಿ ಹೊದ್ದವ ಜಂಗಮನಲ್ಲ/ಶೀಲ ಕಟ್ಟಿದವ ಶಿವಭಕ್ತನಲ್ಲ/ನೀರು ತೀರ್ಥವಲ್ಲ/ಕೂಳು ಪ್ರಸಾದವಲ್ಲ/ಹೌದೆಂಬವನ ಬಾಯ ಮೇಲೆ/ಅರ್ಧ ಮಣದ ಪಾದರಕ್ಷೆಯ ತೆಗೆದುಕೊಂಡು/ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ/ಟೊಕ ಟೊಕನೆ ಹೊಡೆ ಎಂದಾತ/ನಮ್ಮ ಅಂಬಿಗರ ಚೌಡಯ್ಯ”
ಹೀಗೆ ಬಸವಾದಿ ಶರಣರ ಸಮಾಜ ಸುಧಾರಣಾ ಚಳವಳಿಯಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಮುಡುಪಾಗಿಟ್ಟ ಶ್ರೀ ಅಂಬಿಗರ ಚೌಡಯ್ಯನವರು ತಮ್ಮ ಬದುಕಿನ ನೀತಿಯಿಂದ, ನಿಷ್ಠೆಯಿಂದ, ತೀಕ್ಷ್ಣ ಖಂಡನೆಯ ಬಂಡಾಯ ವಚನಗಳಿಂದ ಗಮನ ಸೆಳೆದು, ಅವರು ರಚಿಸಿದ ವಚನಗಳಿಗೆ ತಮ್ಮ ಹೆಸರನ್ನೇ ಅಂಕಿತವನ್ನಾಗಿಟ್ಟಿರುವದು ವಿಶೇಷವಾಗಿದೆ. ಸಮಾಜದ ಕೊಳೆಯನ್ನು ತೊಳೆಯುವ ನಿಟ್ಟಿನಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ಎದ್ದು ಕಾಣುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.
ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.
ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

