ದಿನದ ಸುದ್ದಿ
ತುರ್ತುಪರಿಸ್ಥಿತಿಯ ಛಾಯೆಯೂ, ‘ಅರ್ನಾಬ್’ ಮಾಯೆಯೂ..!
- ನಾ ದಿವಾಕರ
“ಭೂತದ ಬಾಯಲ್ಲಿ ಭಗವದ್ಗೀತೆ,,,,” ಈ ಗಾದೆ ಮಾತಿಗೆ ಭಾರತವೇ ಜನ್ಮಭೂಮಿ. ಕರ್ಮಭೂಮಿಯೂ ಹೌದು. ಈ ಗಾದೆಯ ಅರ್ಥ ಏನು ಎಂದು ಕೇಳುವವರಿಗೆ ಭಾರತದ ರಾಜಕಾರಣಿಗಳ ಭಾಷಣ, ಹೇಳಿಕೆಗಳನ್ನು ಕೇಳುವಂತೆ ಸಲಹೆ ನೀಡಿದರೆ ಸಾಕು. ಅರ್ಥವಾಗಿಬಿಡುತ್ತದೆ. ಕಳೆದ ಆರು ವರ್ಷಗಳಲ್ಲಿ ಪ್ರಜಾತಂತ್ರ ಮೌಲ್ಯಗಳನ್ನು ಹಿಮಾಲಯದೆತ್ತರದಲ್ಲಿಟ್ಟು ವಿಶ್ವಮಾನ್ಯತೆ ಪಡೆದಿದ್ದ ಭಾರತದ ಆಡಳಿತ ವ್ಯವಸ್ಥೆ, ನ್ಯಾಯ ವ್ಯವಸ್ಥೆ ಮತ್ತು ಪ್ರಭುತ್ವಕ್ಕೆ ಇಂದು 1975ರ ಕರಾಳ ಛಾಯೆ ಆವರಿಸಿದಂತೆ ಕಾಣುತ್ತಿದೆ !!! ಈ ಹಿನ್ನೆಲೆಯಲ್ಲೇ ಮೇಲಿನ ಗಾದೆ ಮಾತು ಸಹ ನೆನಪಾಗುತ್ತಿದೆ.
ಜನಸಾಮಾನ್ಯರ ಪರಿಭಾಷೆಯಲ್ಲಿ ಬಚ್ಚಲುಬಾಯಿ ಎಂಬ ಪದವನ್ನು ಬಳಸುವುದನ್ನು ಕೇಳಿದ್ದೇವೆ. ಇತ್ತೀಚೆಗೆ ಈ ಬಚ್ಚಲು ಬಾಯಿ ಎಂಬ ಪದದ ಅರ್ಥವನ್ನೂ ನಮ್ಮ ರಾಜಕೀಯ ನಾಯಕರುಗಳು ಮನವರಿಕೆ ಮಾಡಿಕೊಟ್ಟಿದ್ದಾರೆ. ಭಾರತ ಸ್ವಚ್ಚವಾಗುತ್ತಿದೆ ಆದರೆ ಅಧಿಕಾರ ರಾಜಕಾರಣದ ವಾರಸುದಾರರ, ಜನಪ್ರತಿನಿಧಿಗಳ ಬಚ್ಚಲು ಬಾಯಿ ಸಂಸ್ಕೃತಿಯಿಂದ ಸಮಸ್ತ ಭಾರತವೇ ಕೊಳಕು ಎನಿಸುತ್ತಿದೆ.
ಬಹುಶಃ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತವನ್ನು ಕೊಳಕು ಎಂದಾಗ ಇದೂ ಅವರ ಮನಸಿನಲ್ಲಿದ್ದಿರಬಹುದು ಈ ಹೊಲಸು ರಾಜಕಾರಣದ ಆಂತರಿಕ ಮಾಲಿನ್ಯವನ್ನು, ಬಾಹ್ಯ ಸ್ವರೂಪದ ತ್ಯಾಜ್ಯವನ್ನು ಹೊರಹಾಕಿ, ಪ್ರಜೆಗಳಲ್ಲಿ ಪ್ರಜಾತಂತ್ರ ಮೌಲ್ಯಗಳ ಬಗ್ಗೆ ಸುಪ್ರಜ್ಞೆ ಮೂಡಿಸುವ ಗುರುತರ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ಡಿಜಿಟಲ್ ಯುಗದಲ್ಲಿ ಇದು ವಿದ್ಯುನ್ಮಾನ ಸುದ್ದಿಮನೆಗಳ ಆದ್ಯತೆಯೂ ಆಗಬೇಕಿದೆ.
ಇಂತಹ ಒಂದು ಪ್ರಯತ್ನಕ್ಕೆ ಅವಕಾಶವನ್ನೂ ನೀಡದಂತೆ ಮಾಧ್ಯಮ ಜಗತ್ತನ್ನೇ ಘನತ್ಯಾಜ್ಯ ಶಿಖರವನ್ನಾಗಿ ಮಾಡುವುದರಲ್ಲಿ ತಮ್ಮದೇ ಆದ ಕೊಡುಗೆ ಸಲ್ಲಿಸಿರುವ ಸುದ್ದಿವಾಹಿನಿಯ ಸಂಪಾದಕ ಅರ್ನಾಬ್ ಗೋಸ್ವಾಮಿ ಇಂದು ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.
ಮುಂಜಾನೆಯ ಹೊತ್ತಿನಲ್ಲಿ, ಯಾವುದೇ ಪೂರ್ವ ಸೂಚನೆ ಇಲ್ಲದೆ, ಏಕಾಏಕಿ ಮನೆಗೆ ನುಗ್ಗಿ, ಮೂರು ವರ್ಷದ ಹಿಂದಿನ ಆತ್ಮಹತ್ಯೆ ಪ್ರಕರಣವೊಂದರ ಹಿನ್ನೆಲೆಯಲ್ಲಿ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿರುವ ರೀತಿ ಒಪ್ಪುವಂತಹುದಲ್ಲ.
ಟಿ ಆರ್ ಪಿ ಹಗರಣದಲ್ಲಿ ಗೋಸ್ವಾಮಿಯ ವಿರುದ್ಧ ಗುರುತರ ಆರೋಪಗಳು ಇರುವುದನ್ನೂ ಮರೆಯುವಂತಿಲ್ಲ. ಆದರೆ ಇಂದಿನ ಘಟನೆ ಮುಂಬೈ ಪೊಲೀಸರ ಉದ್ಧಟತನ, ಮಹಾರಾಷ್ಟ್ರ ಸರ್ಕಾರದ ಪ್ರಜಾತಂತ್ರ ವಿರೋಧಿ ಧೋರಣೆಯ ಸಂಕೇತ.
ನಿಜ, ಆದರೆ ಹೀಗೆ ಹೇಳುವ ನೈತಿಕ ಹಕ್ಕು ಮತ್ತು ಹೊಣೆಗಾರಿಕೆ ಇರುವ ರಾಜಕೀಯ ನಾಯಕರು ನಮ್ಮ ನಡುವೆ ಇದ್ದಾರೆಯೇ ? ಗೋಸ್ವಾಮಿಯ ಬಂಧನದ ನಂತರ ರಿಪಬ್ಲಿಕ್ ವಾಹಿನಿಯ ನಿರೂಪಕರು ವಾಕ್ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿದ್ದುದನ್ನು ( ಸುದ್ದಿಮನೆಯ ಕೂಗುಮಾರಿ ಪರಿಭಾಷೆಯಲ್ಲಿ ಅರಚುತ್ತಿದ್ದುದು ಎಂದು ಓದಿಕೊಳ್ಳಬಹುದು) ಕಂಡು “ ಭೂತದ,,,,,” ಗಾದೆ ನೆನಪಾಯಿತು. ಈ ಗಾದೆಯ ಬಗ್ಗೆಯೇ ಅಸಹ್ಯ ಬರುವಂತಾಗಿದ್ದು ಕೆಲವು ಕೇಂದ್ರ ಬಿಜೆಪಿ ಸಚಿವರ ಟ್ವಿಟರ್ ಸಂದೇಶಗಳನ್ನು ಕಂಡು.
ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ “ ಹಿರಿಯ ಪತ್ರಕರ್ತ ಅರ್ನಾಬ್ ಗೋಸ್ವಾಮಿಯ ಬಂಧನ ಖಂಡನಾರ್ಹವಾಗಿದ್ದು, ಚಿಂತೆಗೀಡುಮಾಡುವ ವಿಚಾರವಾಗಿದೆ. ನಾವು 1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದೆವು ”
ಕೇಂದ್ರ ಗೃಹ ಸಚಿವ ಅಮಿತ್ಶಾ “ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಪ್ರಜಾತಂತ್ರಕ್ಕೆ ಅವಮಾನ ಮಾಡಿವೆ.
ರಿಪಬ್ಲಿಕ್ ಟಿವಿ ವಿರುದ್ಧ ಅಧಿಕಾರ ದುರುಪಯೋಗ ಮಾಡಿದೆ. ವ್ಯಕ್ತಿಗತ ಸ್ವಾತಂತ್ರ್ಯ ಮತ್ತು ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಸ್ತಂಭದ ಮೇಲೆ ಆಕ್ರಮಣ ನಡೆಸುವ ಮೂಲಕ ತುರ್ತುಪರಿಸ್ಥಿತಿಯನ್ನು ನೆನಪಿಸಿದೆ ”. ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವ ಪ್ರಕಾಶ್ ಜಾವಢೇಕರ್ “ ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆದಿರುವ ಆಕ್ರಮಣವನ್ನು ನಾವು ಖಂಡಿಸುತ್ತೇವೆ. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇದೇ ರೀತಿ ನಡೆಯುತ್ತಿದ್ದುದನ್ನು ಇದು ನೆನಪಿಸುತ್ತದೆ.”
ಈ ಮೂರೂ ಅಣಿಮುತ್ತುಗಳನ್ನು ಕೇಳಿಸಿಕೊಳ್ಳುವ ಕಿವಿಗಳೇ ಧನ್ಯ ಅಲ್ಲವೇ ? ನಿಜ, ಮಹಾರಾಷ್ಟ್ರ ಪೊಲೀಸರ ನಡೆ ಅಕ್ಷಮ್ಯ, ಸರ್ಕಾರದ ಧೋರಣೆ ಖಂಡನಾರ್ಹ ಆದರೆ ಶಿವಸೇನೆ ಪಳಗಿರುವ ಗರಡಿಯಲ್ಲೇ ಈ ಮೂವರೂ ನಾಯಕರು ಪಳಗಿರುವುದಲ್ಲವೇ ? ಅರ್ನಾಬ್ ಗೋಸ್ವಾಮಿಯ ವಿರುದ್ಧ ಗಂಭೀರ ಆರೋಪಗಳು ಇದ್ದುದೇ ಆದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಇದು ಶಿವಸೇನೆಯ ಸಂಸ್ಕೃತಿಗೆ ಹೊರತಾದದ್ದು ಎನ್ನುವುದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ ? ಇಂದು ಶಿವಸೇನೆ ಕಾಂಗ್ರೆಸ್ ಬಾಹುಗಳಲ್ಲಿದೆ. ಆದರೆ ಹುಟ್ಟಿದ ದಿನದಿಂದಲೂ ಬೆಳೆದಿದ್ದು ಸಂಘಪರಿವಾರದ ಮಡಿಲಲ್ಲೇ ಅಲ್ಲವೇ ?
ಈ ಗೋಸುಂಬೆಗಳನ್ನು ಬದಿಗಿಟ್ಟು ಭಾರತದ ಪ್ರಸ್ತುತ ಸನ್ನಿವೇಶವನ್ನು ಒಮ್ಮೆ ಗಮನಿಸೋಣ. ಇತ್ತೀಚೆಗೆ ತಾನೇ ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗನ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದ ಪವರ್ ಟಿವಿ ವಾಹಿನಿಯನ್ನು ಮಾನ್ಯ ಮುಖ್ಯಮಂತ್ರಿಯವರು ಮುಚ್ಚಿಸಿಬಿಟ್ಟರು. ಈಗ ಮತ್ತೊಂದು ಹೆಸರಿನಲ್ಲಿ ಆರಂಭವಾಗಿದ್ದರೂ ಬಾಯಿ ಮುಚ್ಚಿಸಿದಂತೆ ಕಾಣುತ್ತಿದೆ.
ಮಾಧ್ಯಮ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ ಇವೆಲ್ಲವನ್ನೂ ಗೌರವಿಸುತ್ತಲೇ ಅರ್ನಾಬ್ ಅವರನ್ನು ಬಂಧಿಸಿದ ರೀತಿಯನ್ನು ಖಂಡಿಸೋಣ. ಆದರೆ ದೇಶಾದ್ಯಂತ ಪತ್ರಕರ್ತರ ವಿರುದ್ಧ ರಣಬೇಟೆಯಾಡಿದ ಕೇಂದ್ರ ಸರ್ಕಾರದ ಕ್ರಮಗಳನ್ನು ಮೇಜು ಕುಟ್ಟಿ ಸ್ವಾಗತಿಸುತ್ತಾ ಭಟ್ಟಂಗಿಯಂತೆ ಪ್ರಭುತ್ವದ ಹೆಜ್ಜೆಗೆ ಗೆಜ್ಜೆಯಾಗಿ, ತಮ್ಮ ಪತ್ರಿಕಾ ವೃತ್ತಿಧರ್ಮವನ್ನೂ ಮರೆತು ವರ್ತಿಸಿದ ಅರ್ನಾಬ್ ಗೋಸ್ವಾಮಿಯಾಗಲೀ ಅಥವಾ ಇತರ ಬಿಜೆಪಿ ನಾಯಕರಾಗಲೀ ಈ ಪ್ರಕರಣದ ಬಗ್ಗೆ ಕನಿಷ್ಟ ಮಾತನಾಡುವ ನೈತಿಕತೆಯನ್ನು ಉಳಿಸಿಕೊಂಡಿದ್ದಾರೆಯೇ ? ನಮ್ಮನ್ನೇ ಪ್ರಶ್ನಿಸಿಕೊಳ್ಳೋಣ.
ಅರ್ನಾಬ್ ಗೋಸ್ವಾಮಿಯನ್ನು ಮೂರು ವರ್ಷದ ಹಿಂದಿನ ಆತ್ಮಹತ್ಯೆಯ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿಸಿರುವುದೇ ಮಹಾರಾಷ್ಟ್ರ ಸರ್ಕಾರದ ಘೋರ ಅಪರಾಧ ಎಂದಾದರೆ, ಸುಮ್ಮನೆ ಗುಜರಾತ್ನ ಹಿರಿಯ ಅಧಿಕಾರಿ ಸಂಜೀವ್ ಭಟ್ ಅವರನ್ನು ನೆನೆಯಿರಿ. ಮೂವತ್ತು ವರ್ಷದ ಹಿಂದಿನ , ಮುಚ್ಚಿಹೋಗಿದ್ದ ಪ್ರಕರಣದ ಕಡತವನ್ನು ಹೆಕ್ಕಿ ತೆಗೆದು ಅವರನ್ನು ಬಂಧಿಸಿದಾಗ ಭಾರತದ ಎಷ್ಟು ಸುದ್ದಿಮನೆಗಳು ವಿರೋಧಿಸಿದ್ದವು ? ಮಾನ್ಯ ಗೋಸ್ವಾಮಿ ಎಲ್ಲಿದ್ದರು ಸ್ವಾಮಿ ? ಭಾರತದ ಜನಸಾಮಾನ್ಯರು ಮಾಸ್ಕ್ ಧರಿಸುತ್ತಿರುವುದು ಕೊರೋನಾ ಬಂದ ನಂತರ. ಭಾರತದ ಬಹುತೇಕ ಸುದ್ದಿಮಾಧ್ಯಮಗಳು 2014ರಿಂದಲೇ ಮಾಸ್ಕ್ ಧರಿಸಲಾರಂಭಿಸಿವೆ.
ಸ್ವತಂತ್ರ ಭಾರತದ ಕಾನೂನು ವ್ಯವಸ್ಥೆಯಲ್ಲಿ ಎಫ್ಐಆರ್ ಎಂಬ ಪದ ಜನಸಾಮಾನ್ಯರ ಅರಿವಿಗೆ ನಿಲುಕದಷ್ಟು ಅಪರೂಪವಾಗಿತ್ತು. ಯಾವುದೋ ಗಂಭೀರ ಅಪರಾಧಗಳಲ್ಲಿ ಮಾತ್ರ ಈ ಪದ ಕೇಳಿಬರುತ್ತಿತ್ತು. ಆದರೆ ಕಳೆದ ಆರು ವರ್ಷಗಳಲ್ಲಿ ಎಫ್ಐಆರ್ ಎನ್ನುವುದು ಸಂತೆಯಲ್ಲಿನ ಸರಕಿನಂತೆ ಕಾಣುತ್ತಿದೆ.
ದೇಶದ್ರೋಹದ ಆರೋಪ ಮತ್ತು ಎಫ್ಐಆರ್ ಅಧಿಕಾರಸ್ಥರ ಬತ್ತಳಿಕೆಯಲ್ಲಿರುವ ಸುಲಭ ಅಸ್ತ್ರಗಳಾಗಿರುವುದರಿಂದಲೇ ಕೊರೋನಾ ಸಂದರ್ಭದಲ್ಲೇ 55 ಪತ್ರಕರ್ತರ ವಿರುದ್ಧ 22 ಎಫ್ಐಆರ್ ದಾಖಲಿಸಲಾಗಿದೆ. ಮಾರ್ಚ್ 25 ರಿಂದ ಜೂನ್ 30ರ ಅವಧಿಯಲ್ಲಿ ಕೋವಿದ್19 ವರದಿಗಳಿಗೆ ಸಂಬಂಧಪಟ್ಟಂತೆ ಇಷ್ಟು ಎಫ್ಐಆರ್ ಗಳನ್ನು ಪತ್ರಕರ್ತರ ವಿರುದ್ಧ ದಾಖಲಿಸಲಾಗಿದೆ.
ದ ವೈರ್ ಪತ್ರಿಕೆಯ ಸಿದ್ಧಾರ್ಥ ವರದರಾಜನ್, ವಿನೋದ್ ದುವಾ, ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆಯ ಮಾಜಿ ನಿರ್ದೇಶಕ ಮತ್ತು ಅಂಕಣಕಾರ ಆಕರ್ ಪಟೇಲ್, ಸ್ಕ್ರೋಲ್ ಪತ್ರಿಕೆಯ ಸುಪ್ರಿಯಾ ಶರ್ಮ ಇವರು ಕೇಂದ್ರ ಸರ್ಕಾರದ ಪ್ರಹಾರಕ್ಕೆ ಬಲಿಯಾಗುತ್ತಿದ್ದಾರೆ. ಸುಪ್ರಿಯಾ ಶರ್ಮ ಅವರ ಅಪರಾಧ ಏನು ಗೊತ್ತೇ ? ಪ್ರಧಾನಮಂತ್ರಿ ಮೋದಿ ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ದತ್ತುಪಡೆದಿರುವ ವಾರಣಾಸಿಯ ದೊಹಾರಿ ಗ್ರಾಮದಲ್ಲಿನ ಜನಜೀವನವನ್ನು ತೆರೆದಿಟ್ಟಿದ್ದು. ಉತ್ತರಪ್ರದೇಶದಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ವರದಿ ಮಾಡಿದ್ದ ಪವನ್ ಕುಮಾರ್ ಜೈಸ್ವಾಲ್ ಮತ್ತೋರ್ವ ಎಫ್ಐಆರ್ ಬಲಿ.
ಕೊರೋನಾ ಸಂದರ್ಭದಲ್ಲಿ ಮಹಾರಾಷ್ಟ್ರದ ವಲಸೆ ಕಾರ್ಮಿಕರ ಸಮಸ್ಯೆಗೆ ಕೋಮು ಬಣ್ಣ ನೀಡಿದ್ದ ಅರ್ನಾಬ್ ವಿರುದ್ಧ ದಾಖಲಿಸಿದ್ದ ಎಫ್ಐಆರ್ ಮುಂಬೈ ಹೈಕೋರ್ಟ್ ಕೃಪೆಯಿಂದ ರದ್ದಾಗಿದೆ. ಸೂಫಿ ಸಂತ ಮೊಯಿನುದ್ದಿನ್ ಕ್ರಿಸ್ಟಿಯನ್ನು ದರೋಡೆಕೋರ ಎಂದು ಅವಮಾನಿಸಿದ ಅಮೀಶ್ ದೇವಗನ್ ಸಹ ಕೋರ್ಟ್ ಕೃಪೆಗೆ ಪಾತ್ರರಾಗಿದ್ದಾರೆ. ಆದರೆ ತಮ್ಮ ಪತ್ರಿಕಾ ಧರ್ಮ ಪಾಲಿಸುತ್ತಾ ಜನಸಾಮಾನ್ಯರಿಗೆ ಸತ್ಯ ಹೇಳುವ ಆಕರ್ ಪಟೇಲ್, ವಿನೋದ್ ದುವಾ ಪೊಲೀಸ್ ಠಾಣೆಗೆ ಅಲೆಯುತ್ತಿದ್ದಾರೆ.
ಅರ್ನಾಬ್ ಗೋಸ್ವಾಮಿ ಬಂಧನದ ವೈಖರಿಯನ್ನು ಖಂಡಿಸೋಣ. ಬಂಧನಕ್ಕೆ ಕಾರಣಗಳಿದ್ದರೆ ಬಿಡುಗಡೆಗೂ ಕಾರಣಗಳಿರುತ್ತವೆ. ಎಲ್ಲವೂ ಅಧಿಕಾರ ಪೀಠದ ಕೃಪೆಯನ್ನು ಆಧರಿಸಿರುತ್ತದೆ. ಯಾವುದೇ ಆರೋಪ ಇಲ್ಲದೆ, ವಾರಂಟ್ ಇಲ್ಲದೆ, ಏಕಾಏಕಿ ಬಂಧಿಸುವುದು ಘೋರ ಅಪರಾಧವೇನೋ ಹೌದು. ಇದು ಕಾನೂನು, ಸಂವಿಧಾನ, ಪೊಲೀಸ್ ನಿಯಮಾವಳಿ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಮಾನ್ಯತೆ ನೀಡುವವರಿಗೆ ಅನ್ವಯಿಸುವ ಮಾತು.
ಭೀಮಾ ಕೊರೆಗಾಂವ್ ಪ್ರಕರಣದ ಹಿನ್ನೆಲೆಯಲ್ಲಿ ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿದ ರೀತಿ ಜಗಜ್ಜಾಹೀರಾಗಿದೆ. ಈ ಬಂಧನದ ಸಮಯದಲ್ಲಿ ಗೋಸ್ವಾಮಿಯವರ ಕೂಗುಮಾರಿ ಸುದ್ದಿವಾಚನವನ್ನು ಪ್ರಜ್ಞೆ ಇರುವವರು ಮರೆತಿರಲಾರರು. ಇತ್ತೀಚೆಗೆ 83ರ ವೃದ್ಧ, ಸಾಮಾಜಿಕ ಕಾರ್ಯಕರ್ತರಾದ ಸ್ಟಾನ್ ಸ್ವಾಮಿಯವರನ್ನು ಬಂಧಿಸಿದಾಗ, ಸುಧಾ ಭರದ್ವಾಜ್, ವರಾವರರಾವ್, ಉಮರ್ ಖಲೀದ್, ಗರ್ಭಿಣಿ ಮಹಿಳೆ ಸಫೂರ ಜರ್ಗರ್ ಅವರನ್ನು ಬಂಧಿಸಿದಾಗ ಗೋಸ್ವಾಮಿಯಾಗಲೀ, ತುರ್ತುಪರಿಸ್ಥಿತಿಯಲ್ಲಿ ಹೋರಾಡಿದ, ಇಂದಿನ ಟ್ವಿಟರ್ ವೀರರಾಗಲೀ ಖಂಡಿಸಿದ್ದರೇ ? ಪ್ರಭುತ್ವ ಅಥವಾ ಆಡಳಿತ ವ್ಯವಸ್ಥೆಯ ಒಂದು ಅಂಗ ಯಾರನ್ನೋ ನಗರ ನಕ್ಸಲರು ಎಂದು ಹೇಳಿಬಿಟ್ಟರೆ ಅವರನ್ನು ಯಾವ ಹೊತ್ತಿನಲ್ಲಾದರೂ, ಯಾವ ರೀತಿಯಲ್ಲಾದರೂ ಬಂಧಿಸಬಹುದು ಎಂದು ಸಂವಿಧಾನದಲ್ಲಿ ಹೇಳಲಾಗಿದೆಯೇ ?
ಇದು ವ್ಯಕ್ತಿ ಅಥವಾ ಸಂಸ್ಥೆಯ ಪ್ರಶ್ನೆಯಲ್ಲ. ಮೌಲ್ಯಗಳ ಪ್ರಶ್ನೆ. ಗೋಸ್ವಾಮಿ ಯಾವ ಮೌಲ್ಯಗಳನ್ನು ಪ್ರತಿನಿಧಿಸುತ್ತಾರೆ, ಪ್ರತಿನಿಧಿಸುತ್ತಿದ್ದಾರೆ ? ಇವರನ್ನೇ ಅನುಕರಿಸಿ, ಅನುಸರಿಸುವ ಕನ್ನಡದ ಕೂಗುಮಾರಿ ಸುದ್ದಿಮನೆಗಳು ಯಾವ ಸಂಸ್ಕೃತಿಯನ್ನು ಅನುಸರಿಸುತ್ತಿವೆ ? ತುರ್ತುಪರಿಸ್ಥಿತಿಯಲ್ಲಿ ತಾವು ಪ್ರಜಾತಂತ್ರದ ಉಳಿವಿಗಾಗಿ ನಡೆಸಿದ ಹೋರಾಟವನ್ನು ಹೆಮ್ಮೆಯಿಂದ ನೆನೆಯುವ ಸಚಿವರು, ರಾಜಕೀಯ ನಾಯಕರು ಯಾವ ಸಂಸ್ಕೃತಿ ಅನುಸರಿಸುತ್ತಿದ್ದಾರೆ ?
ಓರ್ವ ಗೋಸ್ವಾಮಿಯ ಬಂಧನದಿಂದ ತುರ್ತುಪರಿಸ್ಥಿತಿಯ ಛಾಯೆ ಕವಿದಂತೆ ಭಾವಿಸುವ ಕೇಂದ್ರ ಸಚಿವರಿಗೆ ಒಂದು ವರ್ಷದ ಕಾಲ ಗೃಹಬಂಧನದಲ್ಲಿದ್ದ ಕಾಶ್ಮೀರದ ಸಮಸ್ತ ಜನತೆ ಹೇಗೆ ಕಂಡಿದ್ದರು ? ಯಾವುದೇ ಅಪರಾಧ ಮಾಡದಿದ್ದರೂ ಸೆರೆಮನೆಯಲ್ಲಿರುವ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು ಹೇಗೆ ಕಾಣುತ್ತಿದ್ದಾರೆ ?
ನಡೆದಾಡುವ ಸ್ಥಿತಿಯಲ್ಲೂ ಇಲ್ಲದ ಸಾಯಿಬಾಬಾ ಅವರಂತಹ ವಿದ್ವಾಂಸರನ್ನು ಉಗ್ರಗಾಮಿ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಿ, ಜಾಮೀನು ಸಹ ನೀಡದೆ ಇರುವ ಆಡಳಿತ ವ್ಯವಸ್ಥೆಗೆ ಮತ್ತು ಅಧಿಕಾರಪೀಠದ ವಾರಸುದಾರರಿಗೆ ಗೋಸ್ವಾಮಿಯ ಬಂಧನ ತುರ್ತುಪರಿಸ್ಥಿತಿಯನ್ನು ನೆನಪಿಸುವುದೆಂದರೆ, ಭಾರತ ಮೌಲಿಕವಾಗಿ, ನೈತಿಕವಾಗಿ ಹಾದಿ ತಪ್ಪಿದೆ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
“ ಬಂಧಿಸಲಿ ಬಿಡಿ, ತಪ್ಪು ಮಾಡದಿದ್ದರೆ ಬಿಡುಗಡೆಯಾಗುತ್ತಾರೆ,,,,,” ಮಧ್ಯಮ ವರ್ಗಗಳ ಹಿತವಲಯದಲ್ಲಿ, ಬೌದ್ಧಿಕ ವಲಯದಲ್ಲಿ, ಬುದ್ಧಿಜೀವಿಗಳಲ್ಲದವರಲ್ಲಿ ಮತ್ತು ವಂದಿಮಾಗಧ ಸುದ್ದಿಮನೆಗಳಲ್ಲಿ ಕೇಳಿಬರುವ ಈ ಹೇಳಿಕೆ ಅರ್ನಾಬ್ ಗೋಸ್ವಾಮಿಗೂ ಅನ್ವಯಿಸುತ್ತದೆ. ಅವರಿಗೆ ಪ್ರಭುತ್ವವೂ ನೆರವಾಗಬಹುದು, ನ್ಯಾಯಾಂಗವೂ ನೆರವಾಗಬಹುದು.
ಇಂದಿನ ಭಾರತ ಕೇವಲ ಸಾಂವಿಧಾನಿಕ ಮೌಲ್ಯಗಳನ್ನು ಮಾತ್ರ ಕಳೆದುಕೊಳ್ಳುತ್ತಿಲ್ಲ, ಪ್ರಜಾತಂತ್ರ ಮೌಲ್ಯಗಳನ್ನೂ ಕಳೆದುಕೊಂಡಿದೆ. ಈ ಪ್ರಜ್ಞೆ ತಮ್ಮೊಳಗಿದ್ದು, ತಾವು ಪ್ರತಿನಿಧಿಸುವ “ಪತ್ರಿಕೋದ್ಯಮ ಅಥವಾ ಮಾಧ್ಯಮ ” ಎನ್ನುವ ಮೌಲ್ಯಯುತ ಸ್ತಂಭಕ್ಕೆ ಬದ್ಧತೆಯಿಂದ ನಡೆದುಕೊಂಡಿದ್ದರೆ ಬಹುಶಃ ಅರ್ನಾಬ್ ಗೋಸ್ವಾಮಿ ಜನತೆಯ ಅನುಕಂಪಕ್ಕೆ ಅರ್ಹರಾಗುತ್ತಿದ್ದರೇನೋ !
ನೆನ್ನೆ ಬಿಜೆಪಿ-ಶಿವಸೇನೆ ಮಾಡಿರುವುದನ್ನೇ ಇಂದು ಶಿವಸೇನೆ-ಕಾಂಗ್ರೆಸ್ ಸರ್ಕಾರ ಮಾಡಿದೆ. ಇದು ಒಂದು ಸರ್ಕಾರ ಅಥವಾ ಒಬ್ಬ ಮುಖ್ಯಮಂತ್ರಿಯ ಪ್ರಶ್ನೆಯಲ್ಲ.. ಮೌಲ್ಯಗಳ ಪ್ರಶ್ನೆ. ಮೌಲ್ಯ ಎಂದರೇನು ? ಇದು ಇಂದಿನ ಸಂದರ್ಭದಲ್ಲಿ ಕಾಡಬೇಕಾದ ಗಹನವಾದ ಪ್ರಶ್ನೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.
ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.
ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ, ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.
ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.
ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.
ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.
ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.
ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.
*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿಸಚಿವ ಎಚ್.ಆಂಜನೇಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ದಿನದ ಸುದ್ದಿ
ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
ಮುಖ್ಯಾಂಶಗಳು
ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ
ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ
ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್
ಸುದ್ದಿದಿನ,ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.
ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ತನಿಖೆ ಎದುರಿಸುತ್ತಿರುವವರು
ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.
ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.
ಕಚೇರಿಯಲ್ಲಿ ತಪಾಸಣೆ
ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.
ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.
ಅವರು ಸೋಮವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲೂ ಕೂಡ ಸಾಮೂಹಿಕವಾಗಿ ಫಾರಂ ವಿತರಣೆ ಮಾಡುತ್ತಿಲ್ಲ ಮತ್ತು ಮಾಡುವುದೂ ಇಲ್ಲ, ಕೆಲವು ಬೂತ್ಗಳಲ್ಲಿ ಸಾರ್ವಜನಿಕರೇ ಗುಂಪುಗೂಡಿ ಇಲ್ಲೇ ಫಾರಂ ನೀಡಿ ಎಂದು ಕೇಳಿರುವ ಉದಾಹರಣೆಗಳು ಇವೆಯೇ ಹೊರತು, ಇಲಾಖೆಯಿಂದ ಸಾಮೂಹಿಕ ವಿತರಣೆ ನಡೆದಿಲ್ಲ ಎಂದರು.
ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ಲಿಖಿತ ಸೂಚನೆ ಹಾಗೂ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಅವರು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಮನೆಗೆ ಭೇಟಿ ನೀಡಿ ಫಾರಂಗಳನ್ನು ವಿತರಿಸುವರು. ಭೇಟಿ ನೀಡಿದ ನಂತರ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಬೇಕೆಂದು ಆದೇಶಿಸಲಾಗಿದೆ. ಹಳ್ಳಿಗಳಲ್ಲಿ ಹಾಗೂ ಕೆಲವು ಕಡೆ ಸಾರ್ವಜನಿಕರು ತಮ್ಮ ಫಾರಂಗಳನ್ನು ಬೇಗ ಮಾಡಿಕೊಡಿ ಎಂದು ಬಿ.ಎಲ್.ಓಗಳ ಬಳಿ ಗುಂಪುಗೂಡುತ್ತಿರುವುದು ಕಂಡುಬಂದಿದೆ. ಆದರೆ, ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲು ನಮ್ಮ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಪೂರ್ಣ ತಂಡವು ಬಿ.ಎಲ್.ಓ.ಗಳಿಗೆ ನೆರವಾಗಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 40 ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ನೇರವಾಗಿ ಈ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಫಾರಂಗಳನ್ನು ಭರ್ತಿ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಫಾರಂಗಳನ್ನು ಕಡ್ಡಾಯವಾಗಿ ಬಿ.ಎಲ್.ಓ.ಗಳಿಗೆ ಹಸ್ತಾಂತರಿಸಬೇಕು ಎಂದರು
ರಾಷ್ಟ್ರೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿ.ಎಲ್.ಎ (ಬೂತ್ ಮಟ್ಟದ ಏಜೆಂಟ್ಗಳು) ಸಾರ್ವಜನಿಕರಿಗೆ ಫಾರಂ ಭರ್ತಿ ಮಾಡಲು ಸಹಾಯ ಮಾಡಬಹುದು. ಅವರು ಮೊದಲ ಹಂತದಲ್ಲಿ ತಲಾ 50 ಫಾರಂಗಳನ್ನು ಸಂಗ್ರಹಿಸಿ, ಭರ್ತಿ ಮಾಡಿ ನಮ್ಮ ಬಿ.ಎಲ್.ಓ.ಗಳಿಗೆ ತಂದುಕೊಡಲು ಅವಕಾಶ ಕಲ್ಪಿಸಲಾಗಿದೆ. ಇದು ಗುಂಪಾಗಿ ಮಾಡುವುದಲ್ಲ, ಬದಲಿಗೆ ಮನೆ ಮನೆಗೆ ಹೋಗಿ ಬಿ.ಎಲ್.ಓಗಳ ಸಹಯೋಗದೊಂದಿಗೆ ಮಾಡುವ ಕಾರ್ಯವಾಗಿದೆ ಎಂದರು.
ಸಹಿ ಮಾಡುವ ಪ್ರಕ್ರಿಯೆಯು ಮತದಾರರದ್ದೇ ಆಗಿರುತ್ತದೆ. ಮೊಬೈಲ್ ಬಳಸಲು ಬಾರದ ಅನಕ್ಷರಸ್ಥರಿಗೆ ಅಥವಾ ತಾಂತ್ರಿಕ ತೊಂದರೆ ಇರುವವರಿಗೆ ಬಿ.ಎಲ್.ಓ ಹಾಗೂ ಬಿ.ಎಲ್.ಎ.ಗಳು ಸಹಾಯ ಮಾಡಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಅಡಿಯಲ್ಲೇ ನಮ್ಮ ಇಡೀ ತಂಡ ಕೆಲಸ ಮಾಡುತ್ತಿದೆ ಎಂದರು.
ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಶಿಫ್ಟ್ ಮಾಡಿಕೊಂಡಿರುವ ಮತದಾರರು, ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ. ಅಂತಹ ಮತದಾರರು ‘ಫಾರಂ-8’ ಅನ್ನು ಸಲ್ಲಿಸುವ ಮೂಲಕ ತಮ್ಮ ವಿಳಾಸವನ್ನು ಸುಲಭವಾಗಿ ಬದಲಾಯಿಸಿಕೊಳ್ಳಬಹುದು ಎಂದರು.
ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಒಂದು ವೇಳೆ ತಪ್ಪಾಗಿ ಮ್ಯಾಪಿಂಗ್ ಆಗಿದ್ದರೆ ಅಥವಾ ತಂದೆ-ತಾಯಿಯ ಹೆಸರುಗಳಲ್ಲಿ ತಪ್ಪುಗಳಾಗಿದ್ದರೆ, 2002ರ ಹಳೆಯ ವೋಟರ್ ಐಡಿ ವಿವರಗಳ ಆಧಾರದ ಮೇಲೆ ಬಿ.ಎಲ್.ಓ ಮೊಬೈಲ್ ಆಪ್ (BLO Mobile App) ಮೂಲಕ ತಿದ್ದುಪಡಿ ಹಾಗೂ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
18 ವರ್ಷ ತುಂಬಿರುವ ಅರ್ಹ ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದ ಫಾರಂಗಳನ್ನು ಪಡೆದು ಭರ್ತಿ ಮಾಡಬಹುದಾಗಿದೆ. ಇದಕ್ಕಾಗಿ ಸಾರ್ವಜನಿಕರು ಯಾರೂ ಮತಗಟ್ಟೆಗಳನ್ನಾಗಲಿ ಅಥವಾ ಬಿ.ಎಲ್.ಓಗಳನ್ನಾಗಲಿ ಹುಡುಕಿಕೊಂಡು ಹೋಗುವ ಅಗತ್ಯವಿಲ್ಲ, ನಾವೇ ನಿಮ್ಮ ಮನೆ ಬಾಗಿಲಿಗೆ ಬರುತ್ತೇವೆ ಎಂದು ತಿಳಿಸಿದರು.
ಅನಾಥಾಶ್ರಮಗಳಲ್ಲಿರುವ ಹಾಗೂ ತಂದೆ-ತಾಯಿಯರ ಮಾಹಿತಿ ಇಲ್ಲದವರಿಗೂ ಸಹ ಮತದಾನದ ಹಕ್ಕನ್ನು ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಕ್ರಮ ಕೈಗೊಂಡಿದೆ. ಸರ್ಕಾರಿ ಅನಾಥಾಶ್ರಮವೊಂದರಲ್ಲಿರುವ 43 ಯುವಕರು 2025ನೇ ಇಸವಿಯಲ್ಲೂ ಮತದಾರರ ಪಟ್ಟಿಯಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರವೇ ಅವರಿಗೆ ಪೋಷಕರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರೆ ಅವರ ಅಧಿಕೃತ ಪೋಷಕರಾಗಿರುತ್ತಾರೆ ಎಂದರು.
ದೇವದಾಸಿಯರಂತಹ ಪ್ರಕರಣಗಳಲ್ಲಿ ತಂದೆಯ ವಿವರಗಳು ಲಭ್ಯವಿಲ್ಲದಿದ್ದರೆ, ತಾಯಿಯ ವಿವರಗಳನ್ನು ನೀಡಿ ಹೆಸರು ನಮೂದಿಸಲು ಅವಕಾಶವಿದೆ. ಇನ್ನು ಕೆಲವು ಸಂದರ್ಭಗಳಲ್ಲಿ ತಂದೆ-ತಾಯಿ ಇಬ್ಬರೂ ಇಲ್ಲದಿದ್ದರೆ, ಅಂತವರು ತಮ್ಮ ಅಜ್ಜ ಅಥವಾ ಅಜ್ಜಿಯ ಹೆಸರನ್ನು ಸಂಬಂಧದ ಕಾಲಂನಲ್ಲಿ ನಮೂದಿಸಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ಚುನಾವಣಾ ಆಯೋಗವು ಇಂತಹ ಎಲ್ಲಾ ಸವಾಲುಗಳಿಗೂ ಕಾನೂನಾತ್ಮಕವಾಗಿ ಹಾಗೂ ecinet ಮೊಬೈಲ್ ಆಪ್ ಮತ್ತು https://voters.eci.gov.in ಮೂಲಕ ಸೂಕ್ತ ಪರಿಹಾರವನ್ನು ಕಲ್ಪಿಸಿದೆ. ಹೀಗಾಗಿ ಯಾವುದೇ ಮತದಾರರು ಆತಂಕ ಪಡುವ ಅಗತ್ಯವಿಲ್ಲ. ಬಿ.ಎ.ಲ್.ಓ ಗಳು ಮನೆಗೆ ಬಂದಾಗ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸಾರ್ವಜನಿಕರು ಸ್ಪಂದಿಸಿ, ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಫಾರಂ ಹಂಚಿಕೆಯಲ್ಲಿ ರಾಜ್ಯದಲ್ಲೇ ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ; ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಪ್ರಗತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟಾರೆ ಶೇ. 94 ರಷ್ಟು ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಫಾರಂಗಳನ್ನು ಹಂಚಿಕೆ ಮಾಡುವ ಮೂಲಕ ದಾವಣಗೆರೆ ಜಿಲ್ಲೆಯು ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದು ಅಭೂತಪೂರ್ವ ಸಾಧನೆ ಮಾಡಿದೆ. ಇದೇ ವೇಳೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 99.81 ರಷ್ಟು ದಾಖಲೆ ಪ್ರಮಾಣದ ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಪಾರಂಗಳನ್ನು ಅತ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಲಾಗಿದ್ದು, ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಹಾಗೂ ಶೇ. 10.8 ರಷ್ಟು ಗಣಕೀಕರಣವಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮನೆ ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹ ಪ್ರಗತಿಯಲ್ಲಿ
ದಾವಣಗೆರೆ ಜಿಲ್ಲೆಯಲ್ಲಿ ಜೂನ್ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಮುದ್ರಿಸಿ ಬಿಎಲ್ಓಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್ 06 ರಿಂದ ಜುಲೈ 29 ರ ಅವಧಿಯಲ್ಲಿ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.
ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮತ್ತು ಪ್ರಗತಿ ವಿವರ
ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.
103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ. 105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ. 106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, 2,44,948 ನಮೂನೆಗಳನ್ನು ವಿತರಿಸಲಾಗಿದ್ದು, 7,120 ನಮೂನೆಗಳನ್ನು ಗಣಕೀಕರಿಸಲಾಗಿದೆ. 107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ. 108-ಮಾಯಕೊಂಡ: ಒಟ್ಟು 197,048 ಮತದಾರರಿದ್ದು, 196,486 ನಮೂನೆಗಳನ್ನು ವಿತರಿಸಲಾಗಿದ್ದು, 42,785 ನಮೂನೆಗಳನ್ನು ಗಣಕೀಕರಿಸಲಾಗಿದೆ. 109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ. 110- ಹೊನ್ನಾಳಿ ಒಟ್ಟು 2,00,033 ಮತದಾರರಿದ್ದು, 182,419 ನಮೂನೆಗಳನ್ನು ವಿತರಿಸಲಾಗಿದ್ದು, 12,350 ನಮೂನೆಗಳನ್ನು ಗಣಕೀಕರಿಸಲಾಗಿದೆ.
ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಮತದಾರರ ಗುರುತಿಸುವಿಕೆ ಪ್ರಗತಿ
ಜೂನ್ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ (Duplicate) ಪ್ರಕರಣಗಳಾಗಿವೆ.
ಜಗಳೂರು ಕ್ಷೇತ್ರದಲ್ಲಿ 122 ಪ್ರಕರಣಗಳನ್ನು ಗುರುತಿಸಲಾಗಿದ್ದು (2 ಗೈರು, 31 ಶಾಶ್ವತ ವಲಸೆ, 47 ಮರಣ, 40 ದ್ವಿಪ್ರತಿ, 2 ಇತರೆ), ಹರಿಹರ ಕ್ಷೇತ್ರದಲ್ಲಿ 149 ಪ್ರಕರಣಗಳು (2 ಗೈರು, 48 ಶಾಶ್ವತ ವಲಸೆ, 71 ಮರಣ, 26 ದ್ವಿಪ್ರತಿ, 2 ಇತರೆ), ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 246 ಪ್ರಕರಣಗಳು (5 ಗೈರು, 98 ಶಾಶ್ವತ ವಲಸೆ, 112 ಮರಣ, 31 ದ್ವಿಪ್ರತಿ), ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 235 ಪ್ರಕರಣಗಳು (6 ಗೈರು, 123 ಶಾಶ್ವತ ವಲಸೆ, 60 ಮರಣ, 44 ದ್ವಿಪ್ರತಿ, 2 ಇತರೆ), ಮಾಯಕೊಂಡ ಕ್ಷೇತ್ರದಲ್ಲಿ 337 ಪ್ರಕರಣಗಳು (4 ಗೈರು, 113 ಶಾಶ್ವತ ವಲಸೆ, 174 ಮರಣ, 45 ದ್ವಿಪ್ರತಿ,1 ಇತರೆ), ಚನ್ನಗಿರಿ ಕ್ಷೇತ್ರದಲ್ಲಿ 386 ಪ್ರಕರಣಗಳು (10 ಗೈರು, 139 ಶಾಶ್ವತ ವಲಸೆ, 167 ಮರಣ, 63 ದ್ವಿಪ್ರತಿ, 7 ಇತರೆ) ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 232 ಪ್ರಕರಣಗಳ (1 ಗೈರು, 89 ಶಾಶ್ವತ ವಲಸೆ, 120 ಮರಣ, 22 ದ್ವಿಪ್ರತಿ) ಗುರುತಿಸಿದೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರ್ಮ್ಗಳನ್ನು (Enumeration Forms) ಪಾರಂಗಳನ್ನು ನಮೂದಿಸಿ ಬಿ.ಎಲ್.ಓ ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ಕಾರ್ಯದರ್ಶಿ ಮಮತ ಹಸ ಗೌಡರ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಪಾಲಿಕೆ ಆಯುಕ್ತ ಮಹಾಂತೇಶ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ5 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

