ದಿನದ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ’ಅಸಾನಿ’ ಚಂಡಮಾರುತ ತೀವ್ರ; ಒಡಿಶಾ, ಆಂಧ್ರ, ತೆಲಂಗಾಣ, ಕರ್ನಾಟಕ, ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Published

on

ಸುದ್ದಿದಿನ ಡೆಸ್ಕ್ : ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದಿಂದ ’ಅಸಾನಿ’ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಇಂದು ನಸುಕಿನ ಜಾವ 5.30ರ ಹೊತ್ತಿಗೆ ಕೇಂದ್ರೀಕೃತವಾಗಿತ್ತು, ಮುಂದಿನ 24ಗಂಟೆಗಳಲ್ಲಿ ಇದು ವಾಯವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ. ಮುಂದಿನ 24ಗಂಟೆಗಳಲ್ಲಿ ಪೂರ್ವ ಮಧ್ಯ ಬಂಗಾಳ ಕೊಲ್ಲಿಯಲ್ಲಿ ತೀವ್ರವಾದ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಿಂದ ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯವ್ಯ ಬಂಗಾಳ ಕೊಲ್ಲಿಯಲ್ಲಿ ತೀವ್ರ ಚಂಡಮಾರುತದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತ ರಾಜ್ಯದ ಕರಾವಳಿಗೆ ಅಪ್ಪಳಿಸುವುದಿಲ್ಲ ಎಂಬ ಮಾಹಿತಿ ಪಡೆದ ನಂತರವೂ ಭದ್ರತಾಪಡೆಗಳನ್ನು ತೀವ್ರ ಕಟ್ಟೆಚ್ಚರ ವಹಿಸುವಂತೆ ನಿಯೋಜಿಸಲಾಗಿದೆ. ಅಗತ್ಯವಿದ್ದರೆ 7.5 ಲಕ್ಷ ಜನರನ್ನು ಸ್ಥಳಾಂತರಿಸಲು ರಾಜ್ಯ ಸಿದ್ಧವಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗಿದೆ. ಮುಂದಿನ ಮೂರು ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಸಾನಿ ಚಂಡಮಾರುತದ ಪ್ರಭಾವದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಬಿರುಗಾಳಿ ಬೀಸಲಿದೆ. ತೀರ ಪ್ರದೇಶದಲ್ಲಿರುವ ಮೀನುಗಾರರು ಹಾಗೂ ಇತರೆ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ಮುಂದಿನ ಒಂದು ವಾರದ ಕಾಲ ಮೀನುಗಾರಿಕೆಗೆ ತೆರಳದಂತೆಯೂ ಸೂಚನೆ ನೀಡಲಾಗಿದೆ
ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿಯೂ ಆಸಾನಿ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಇದು ಕರಾವಳಿ ಭಾಗಗಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂದಿನ ಕೆಲವು ಗಂಟೆಗಳ ನಂತರ ಬಿರುಗಾಳಿಯ ವೇಗದ ಪ್ರಮಾಣ ಇನ್ನಷ್ಟು ಹೆಚ್ಚಬಹುದು ಎಂದು ನಿರೀಕ್ಷಿಸಲಾಗಿದೆ. ತೆಲಂಗಾಣದ ಕರಾವಳಿ ಭಾಗಗಳಲ್ಲಿಯೂ ಭಾರಿ ಮಳೆಯಾಗುತ್ತಿದೆ. ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಇತರೆ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version