Connect with us

ದಿನದ ಸುದ್ದಿ

ಆತ್ಮನಿರ್ಭರ ಭಾರತದ ಆತ್ಮವಂಚಕ ಮುಖಗಳು..!

Published

on

  • ನಾ ದಿವಾಕರ

ಒಂದು ಪ್ರಜಾಸತ್ತಾತ್ಮಕ ಗಣತಂತ್ರದ ಸಂಸದೀಯ ಪ್ರಜಾಸತ್ತೆಯ ಚೌಕಟ್ಟಿನಲ್ಲಿ , ಪ್ರಜೆಗಳಿಂದಲೇ ಚುನಾಯಿತವಾದ ಸರ್ಕಾರ ಆಡಳಿತ ನಡೆಸುತ್ತಿರುವ ದೇಶದಲ್ಲಿ, ಸಾರ್ವಭೌಮ ಪ್ರಜೆಗಳ ಒಂದು ವರ್ಗ ತನ್ನ ನ್ಯಾಯಯುತ ಹಕ್ಕುಗಳಿಗಾಗಿ ನೂರು ದಿನಗಳ ಕಾಲ ಮುಷ್ಕರ ನಡೆಸುವುದು ಪ್ರಜಾಸತ್ತೆಯ ಜೀವಂತಿಕೆಗೆ ಸಾಕ್ಷಿ. ಹಾಗೆಯೇ ಆಳುವ ವರ್ಗಗಳ ನಿಷ್ಕ್ರಿಯತೆಗೂ ಸಾಕ್ಷಿ. ಪ್ರಜಾಸತ್ತೆಯ ಜೀವಂತಿಕೆಯ ಹಿಂದೆ 220 ಜೀವಗಳ ಬಲಿದಾನ, ಲಕ್ಷಾಂತರ ರೈತರ, ಸಾವಿರಾರು ರೈತ ಕುಟುಂಬಗಳ ಬವಣೆ, ಜನಸಾಮಾನ್ಯರ ನೋವು ಅಡಗಿರುವುದನ್ನು ಗಮನಿಸಿದಾಗ ಈ ಜೀವಂತಿಕೆಯ ಔಚಿತ್ಯವೇ ಪ್ರಶ್ನಾರ್ಹವಾಗಿಬಿಡುತ್ತದೆ.

ತಮ್ಮ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನೂರು ದಿನಗಳ ಕಾಲ ಬಿಸಿಲು, ಮಳೆ, ಚಳಿ ಲೆಕ್ಕಿಸದೆ, ಪ್ರಭುತ್ವದ ದಮನಕಾರಿ ನೀತಿಗಳನ್ನು ದಿಟ್ಟತನದಿಂದ ಎದುರಿಸಿ, ದೆಹಲಿಯ ಗಡಿಗಳಲ್ಲಿ ಕುಳಿತಿರುವ ಲಕ್ಷಾಂತರ ರೈತರು ಇಂದಿಗೂ ಬಸವಳಿದಿಲ್ಲ, ಅವರ ಉತ್ಸಾಹ ಕುಂದಿಲ್ಲ ಎನ್ನುವುದನ್ನು ಗಮನಿಸಿದಾಗ ಪ್ರಜಾಸತ್ತೆಯ ಉಳಿವು ಇರುವುದು ಯಾರ ಕೈಯ್ಯಲ್ಲಿ ಎನ್ನುವುದು ಸ್ಪಷ್ಟವಾಗುತ್ತದೆ. ಹೌದು, ಭಾರತದಲ್ಲಿ ಪ್ರಜಾಸತ್ತೆ ಉಳಿದಿದೆ ಎನ್ನುವುದೇ ಆದರೆ ಅದು ಈ ದೇಶದ ಶೋಷಿತ ವರ್ಗಗಳ, ದಮನಿತ ಜನಸಮುದಾಯಗಳ ಮತ್ತು ಅನ್ಯಾಯಕ್ಕೊಳಗಾದ ಶ್ರಮಜೀವಿಗಳ ದೃಢ ನಂಬಿಕೆ ಮತ್ತು ವಿಶ್ವಾಸದಿಂದ ಮಾತ್ರ.

ಪ್ರಜಾತಂತ್ರವನ್ನು ಗ್ರಾಂಥಿಕವಾಗಿ ಉಳಿಸಲು ಆಳುವ ವರ್ಗಗಳು ಪ್ರಯತ್ನಿಸುತ್ತಲೇ ಇವೆ. ಆದರೆ ಸಾಂಸ್ಥಿಕವಾಗಿ ಪ್ರಜಾಸತ್ತೆ ಶಿಥಿಲವಾಗುತ್ತಲೇ ಇದೆ. ಈ ಶಿಥಿಲ ಸಾಂಸ್ಥಿಕ ನೆಲೆಗಳನ್ನು ಬಲಪಡಿಸುವ ಹೊಣೆ ಇದೇ ಹೋರಾಟನಿರತ ಜನತೆಯ ಮೇಲಿದೆ. ಈ ದ್ವಂದ್ವದ ನಡುವೆಯೇ ಆತ್ಮನಿರ್ಭರ ಭಾರತ ಮತ್ತೊಂದು ಹೊಸ ಪರ್ವವನ್ನು ಪ್ರವೇಶಿಸುತ್ತಿದೆ.

“ ರೈತರು ನೂರು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ, ನಮ್ಮ ಸರ್ಕಾರ ಅವರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದುಕೊಂಡಿಲ್ಲ ” ಎಂದು ಎದೆತಟ್ಟಿ ಹೇಳಿಕೊಳ್ಳುವ ನೈತಿಕತೆಯನ್ನು ಕೇಂದ್ರ ಸರ್ಕಾರ ಎಂದೋ ಕಳೆದುಕೊಂಡುಬಿಟ್ಟಿದೆ. ಏಕೆಂದರೆ ಈ ಮುಷ್ಕರ ನಿರತ ರೈತರು ಅಶ್ರುವಾಯು, ಜಲಫಿರಂಗಿ, ರಸ್ತೆ ಕಂದಕಗಳು, ಬೃಹತ್ ತಡೆಗೋಡೆಗಳು, ಮುಳ್ಳಿನ ಬೇಲಿಗಳು, ಪೊಲೀಸರ ಲಾಠಿ ಪ್ರಹಾರ ಮತ್ತು ಶರಮಂಚದ ಹಾಸುಗಳನ್ನೂ ದಾಟಿ ಮುನ್ನಡೆದಿದ್ದಾರೆ.

ಇಡೀ ದೇಶದ ಜನತೆ ‘ ಅನ್ನದಾತ ’ ಎಂದು ಗೌರವಿಸುವ ರೈತಾಪಿಯನ್ನು ಖಲಿಸ್ತಾನಿ, ಪಾಕಿಸ್ತಾನಿ, ದೇಶದ್ರೋಹಿ, ನಗರ ನಕ್ಸಲರು ಎಂದು ಹೀಗಳೆಯುವ ಮೂಲಕ ಅಪಮಾನಿಸುತ್ತಲೇ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಿಸಿದ ಒಂದು ಸರ್ಕಾರ ತನ್ನ ತಣ್ಣನೆಯ ಕ್ರೌರ್ಯಕ್ಕೆ ತಾನೇ ನಾಚಿ ತಲೆ ತಗ್ಗಿಸುವಂತಾಗಿರುವುದು ಸ್ಪಷ್ಟ.

ಭಾರತದ ರೈತರ ಪಾಲಿಗೆ, ಜನಸಾಮಾನ್ಯರ ಪಾಲಿಗೆ ಮತ್ತು ಸಮಸ್ತ ಕೃಷಿ ಚಟುವಟಿಕೆಗಳ ದೃಷ್ಟಿಯಿಂದ ಮರಣ ಶಾಸನವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ರೈತ ಸಮುದಾಯದ ಆಗ್ರಹಕ್ಕೆ ಮಾನ್ಯತೆಯನ್ನೇ ನೀಡದೆ ಕಾಲಹರಣ ಮಾಡುತ್ತಿರುವ ಕೇಂದ್ರ ಸರ್ಕಾರ ಚಳುವಳಿಯನ್ನು ವಿಫಲಗೊಳಿಸಲು ವಿಭಿನ್ನ ವಾಮ ಮಾರ್ಗಗಳನ್ನು ಅನುಸರಿಸುತ್ತಿರುವುದು ಈ ತಣ್ಣನೆಯ ಕ್ರೌರ್ಯಕ್ಕೆ ಸಾಕ್ಷಿಯಾಗಿದೆ.

ಸರ್ಕಾರ ಯಾರನ್ನು ಉದ್ದೇಶಿಸಿ ಅಥವಾ ಯಾರ ಏಳಿಗೆಗಾಗಿ ಹೊಸ ಕಾಯ್ದೆಗಳನ್ನು ಜಾರಿಗೊಳಿಸಿರುವುದೋ, ಆ ಜನಸಮುದಾಯಗಳೇ ಈ ಕಾಯ್ದೆಯ ಕರಾಳ ಸ್ವರೂಪವನ್ನು ಬಹಿರಂಗಪಡಿಸಿ, ಇದು ಹೇಗೆ ಇತರ ಜನಸಾಮಾನ್ಯರ ಜೀವನೋಪಾಯಕ್ಕೂ ಸಂಚಕಾರ ತರುತ್ತದೆ ಎನ್ನುವುದನ್ನು ನಿರೂಪಿಸಿದ ನಂತರವೂ, ಈ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂಬ ಹಠಮಾರಿ ಧೋರಣೆ ಪ್ರದರ್ಶಿಸುವುದು ಸರ್ವಾಧಿಕಾರದ ಲಕ್ಷಣ.

ಈ ಹಠಮಾರಿ ಧೋರಣೆಯನ್ನು ಸಮರ್ಥಿಸಿಕೊಳ್ಳುವ ಸಲುವಾಗಿ, ರೈತರ ಹೋರಾಟ ಮತ್ತು ಬೇಡಿಕೆಗಳನ್ನು ಬೆಂಬಲಿಸಿದವರೆಲ್ಲರೂ ದೇಶದ್ರೋಹಿಗಳು ಎಂದು ಬಿಂಬಿಸುವುದು ತಣ್ಣನೆಯ ಕ್ರೌರ್ಯದ ಅಮಾನುಷ ಸ್ವರೂಪ. ಈ ಎರಡೂ ಧೋರಣೆಗಳು ಪ್ರಜಾಸತ್ತೆಗೆ ಶೋಭಿಸುವುಂತಹುದಲ್ಲ.

ಭಾರತದ ಪ್ರಜಾತಂತ್ರ ವ್ಯವಸ್ಥೆ ಪರ್ವಕಾಲದಲ್ಲಿದೆ ಎನಿಸಲು ರೈತ ಮುಷ್ಕರವೊಂದೇ ಕಾರಣವಲ್ಲ. ಇಂದು ಸಮೂಹ ಸನ್ನಿಗೊಳಗಾದ ಮಧ್ಯಮ ವರ್ಗಗಳ ಹಿತವಲಯಗಳನ್ನು ಹೊರತುಪಡಿಸಿ, ದೇಶದ ಸಮಸ್ತ ಜನತೆ, ಶ್ರಮಜೀವಿ ವರ್ಗಗಳು, ದುಡಿಯುವ ವರ್ಗಗಳು ಮತ್ತು ಶೋಷಿತ ಸಮುದಾಯಗಳು ಅನಿಶ್ಚಿತತೆಯನ್ನು ಎದುರಿಸುತ್ತಿವೆ.

ಸಾಮಾಜಿಕ-ಆರ್ಥಿಕ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸದಿದ್ದರೆ ರಾಜಕೀಯ ಸಮಾನತೆ ಅಥವಾ ರಾಜಕೀಯ ನ್ಯಾಯ ಅರ್ಥಹೀನವಾಗುತ್ತದೆ ಎಂದು ಡಾ ಅಂಬೇಡ್ಕರ್ ಹೇಳಿರುವುದನ್ನು ಇಂದು ಮತ್ತೊಮ್ಮೆ ನೆನೆಯಬೇಕಿದೆ. ಭಾರತ ಇಂದು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನೇ ಹೊಸಕಿ ಹಾಕುವ ಹೊಸ ಮಾರ್ಗವನ್ನು ಅನುಸರಿಸುತ್ತಿದೆ.

ಅಧಿಕಾರ ರಾಜಕಾರಣದ ನೆಲೆಯಲ್ಲಿ ನಿಂತು ನೋಡಿದರೆ ಇಂದು ಭಾರತ ಸುಸ್ಥಿರ ಸರ್ಕಾರ ಮತ್ತು ಸುಸ್ಥಿರ ಆಡಳಿತ ವ್ಯವಸ್ಥೆಯನ್ನು ಹೊಂದಿದೆ. ಆದರೆ ಈ ಸುಸ್ಥಿರತೆಯ ಮಂಜಿನ ಪರದೆಯನ್ನು ಸರಿಸಿ ನೋಡಿದಾಗ ಅರಾಜಕತೆ ತಾಂಡವಾಡುತ್ತಿರುವುದೂ ಕಾಣುತ್ತದೆ.

ಆಡಳಿತಾರೂಢ ಸರ್ಕಾರವನ್ನು ‘ ಭಾರತ ದೇಶ ’ಕ್ಕೆ ಸಮೀಕರಿಸುವ ಮೂಲಕ ಸರ್ಕಾರವನ್ನು, ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸುವುದೇ ದೇಶದ್ರೋಹ ಎನ್ನುವ ಅಭಿಪ್ರಾಯ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಹಾಗಾಗಿಯೇ ಕೃಷಿ ಕಾಯ್ದೆಯನ್ನು ವಿರೋಧಿಸುವ ಪರಿಸರ ಹೋರಾಟಗಾರ್ತಿ ದಿಶಾ ರವಿ ರಾತ್ರೋರಾತ್ರಿ ಬಂಧನಕ್ಕೊಳಗಾಗಿ, ದೇಶದ್ರೋಹದ ಆರೋಪ ಎದುರಿಸಬೇಕಾಗುತ್ತದೆ.

ಆತ್ಮನಿರ್ಭರ ಭಾರತದಲ್ಲಿ ಜನಸಾಮಾನ್ಯರ ಬದುಕು ದುರ್ಭರವಾಗುತ್ತಿರುವುದನ್ನು ಕಂಡೂ ಕಾಣದಂತೆ ವ್ಯಕ್ತಿ ಪೂಜೆಯಲ್ಲಿ ತೊಡಗಿರುವ ಭಾರತದ ಬಹುದೊಡ್ಡ ಮಧ್ಯಮ ವರ್ಗ ಇಂದು ತಲೆತಗ್ಗಿಸಿ ನಿಲ್ಲುವಂತಾಗಿದೆ. ಜನರು ದಿನನಿತ್ಯ ಬಳಸುವ ಅವಶ್ಯ ವಸ್ತುಗಳ ಬೆಲೆಗಳು ನಿರಂತರವಾಗಿ ಏರುತ್ತಲೇ ಇವೆ. ಇಂಧನ ಬೆಲೆಗಳು ಕೈಗೆಟುಕದಂತಾಗುತ್ತಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂ ಗಡಿ ದಾಟುವುದರಲ್ಲಿದೆ.

ಡೀಸೆಲ್ ಬೆಲೆಗಳು ಇದರೊಂದಿಗೆ ಪೈಪೋಟಿ ನಡೆಸುತ್ತಿವೆ. ಅಡುಗೆ ಅನಿಲ 1000ದ ಗಡಿ ದಾಟುವುದರಲ್ಲಿದೆ. ಬೇಳೆ ಕಾಳುಗಳು, ಅಡುಗೆ ಎಣ್ಣೆ ಬೆಲೆಗಳು ಗಗನಕ್ಕೇರಿವೆ. ಇದು ಮುಕ್ತ ಮಾರುಕಟ್ಟೆ ನೀತಿಯ ಪರಿಣಾಮ ಎನ್ನುವ ಸಾಮಾನ್ಯ ಪರಿಜ್ಞಾನಕ್ಕೆ ಅರ್ಥಶಾಸ್ತ್ರದ ಪರಿಣತಿಯೇನೂ ಬೇಕಿಲ್ಲ. ಭಾರತದಲ್ಲಿ ಈ ರೀತಿಯ ಬೆಲೆ ಏರಿಕೆ ಹೊಸತೂ ಅಲ್ಲ.

ಆದರೆ ಹೊಸತಾಗಿ ಕಾಣುವುದು ಮಧ್ಯಮ ವರ್ಗಗಳ ನಿಷ್ಕ್ರಿಯ ಮೌನ. ತಾವೇ ಕಟ್ಟಿ ಬೆಳೆಸಿದ ಬದುಕು ಕಟ್ಟಿಕೊಡುವ ಸಾಂಸ್ಥಿಕ ನೆಲೆಗಳು ತಮ್ಮ ಕಣ್ಣೆದುರಿನಲ್ಲೇ ಹರಾಜು ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿರುವುದನ್ನು ‘ ದೇಶದ ಒಳಿತಿಗಾಗಿ ’ ಸಹಿಸಿಕೊಳ್ಳುವುದು ಬೌದ್ಧಿಕ ದಾರಿದ್ರ್ಯದ ಸಂಕೇತ. ಸ್ವತಂತ್ರ ಭಾರತದ ಸಾರ್ವಭೌಮ ಪ್ರಜೆಗಳು ಹಿಂದೆಂದೂ ಈ ಸಹನೆ (?)ಯನ್ನು ತೋರಿರುವ ಉದಾಹರಣೆಗಳಿಲ್ಲ.

ಈ ಬೆಲೆ ಏರಿಕೆಗೆ ಕೇಂದ್ರ ಸಚಿವರು ನೀಡುವ ಕಾರಣಗಳು ಅಧಿಕಾರಸ್ಥರ ಬೌದ್ಧಿಕ ದಾರಿದ್ರ್ಯವನ್ನೂ ಪ್ರದರ್ಶಿಸುತ್ತಿದೆ. ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ಬೆಲೆಗಳನ್ನು ಹತ್ತು ರೂಗಳಿಂದ ಐವತ್ತು ರೂಗಳಿಗೆ ಏರಿಸಿ, ಜನಸಂದಣಿ ಕಡಿಮೆ ಮಾಡಲು ಬೆಲೆ ಏರಿಸಿಲಾಗಿದೆ ಎಂದು ಹೇಳುವ ರೈಲ್ವೆ ಸಚಿವರು ದೆಹಲಿಯಲ್ಲಿ ಕುಳಿತಿದ್ದಾರೆ.

ಅತಿ ಹೆಚ್ಚು ಜನರು ಪ್ರಯಾಣಿಸುವ ಪ್ಯಾಸೆಂಜರ್ ರೈಲುಗಳು ಭಾರತದ ದುಡಿಯುವ ವರ್ಗಗಳ, ಶ್ರಮಜೀವಿಗಳ ಮತ್ತು ವಲಸೆ ಕಾರ್ಮಿಕರ ಜೀವನಾಡಿಯಂತೆ. ನಿಜವಾದ ಭಾರತವನ್ನು ನೋಡಬೇಕೆಂದರೆ ಪ್ಯಾಸೆಂಜರ್ ರೈಲುಗಳಲ್ಲಿ ಓಡಾಡಬೇಕು. ಕೂಲಿನಾಲಿ ಮಾಡಲು ಊರಿಂದ ಊರಿಗೆ ಹೋಗುವ ಕಟ್ಟಡ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಇತರ ದುಡಿಯುವ ಜನರು ಅಲ್ಪ ದರದ ಪ್ಯಾಸೆಂಜರ್ ರೈಲುಗಳನ್ನೇ ಅವಲಂಬಿಸಿ ಬದುಕುತ್ತಾರೆ.

ಈ ರೈಲುಗಳ ಪ್ರಯಾಣ ದರವನ್ನೂ ಹೆಚ್ಚಿಸಲಾಗಿದ್ದು, ಅನಗತ್ಯ ಓಡಾಟ ತಪ್ಪಿಸಲು ಟಿಕೆಟ್ ದರಗಳನ್ನು ಹೆಚ್ಚಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಹೇಳುತ್ತದೆ. ರೈಲು ದರ ಹೆಚ್ಚಳಕ್ಕಿಂತಲೂ ಹೆಚ್ಚು ಕ್ರೂರ ಎನಿಸುವುದು ಸಚಿವರ ಈ ಹೇಳಿಕೆ. ಯಾವುದೇ ವಸ್ತು, ಪದಾರ್ಥ ಅಥವಾ ಸೇವೆಯ ಬೆಲೆ, ಮೌಲ್ಯ ಮಾರುಕಟ್ಟೆಯಲ್ಲಿ ಹೆಚ್ಚಾದರೆ ಅದಕ್ಕೆ ಮಾರುಕಟ್ಟೆಯ ನಿಯಮಗಳು ಮತ್ತು ಆರ್ಥಿಕ ನೀತಿಗಳು ಕಾರಣ ಎನ್ನುವುದು ಸಾಮಾನ್ಯರಿಗೂ ಅರ್ಥವಾಗುವ ಸಂಗತಿ. ಆದರೆ ಈ ಶ್ರೀಸಾಮಾನ್ಯ ಇಂದು ತನ್ನ ಪ್ರಜ್ಞೆ ಮತ್ತು ಸ್ವಂತಿಕೆಯನ್ನು ಒಂದು ನಿರ್ದಿಷ್ಟ ವ್ಯಕ್ತಿ-ಸಿದ್ಧಾಂತ(?)ಕ್ಕೆ ಅಡಮಾನ ಇಟ್ಟಿರುವುದು ದುರಂತ.

ಭಾರತದ ಸುಶಿಕ್ಷಿತ ವರ್ಗದ ಬೃಹತ್ ಸಂಖ್ಯೆಯ ಜನರು ತಮ್ಮ ಹಿತವಲಯದ ಹಿತಾನುಭವದಲ್ಲಿ ಮುಳುಗಿ ಶ್ರೀಸಾಮಾನ್ಯರ ಬವಣೆಯನ್ನು ನಿರ್ಲಕ್ಷಿಸುತ್ತಿರುವುದು ಆತ್ಮನಿರ್ಭರ ಭಾರತದ ದುರಂತಗಳಲ್ಲಿ ಒಂದು. ಕೋವಿದ್ ಲಾಕ್ ಡೌನ್ ಸಂದರ್ಭದಲ್ಲಿ ಜೀವನ ಮತ್ತು ಜೀವನೋಪಾಯದ ಬಗ್ಗೆ ಪುಂಖಾನುಪುಂಖವಾಗಿ ಭಾಷಣಗಳನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿ ಇಂದು ಬಹುಸಂಖ್ಯೆಯ ಜನರ ಜೀವನ ಮೂರಾಬಟ್ಟೆಯಾಗಿ, ಜೀವನೋಪಾಯದ ಮಾರ್ಗಗಳು ಮುಚ್ಚಿಹೋಗುತ್ತಿದ್ದರೂ ತಮ್ಮ ಮನದ ಮಾತುಗಳಲ್ಲಿ ಇದನ್ನು ಉಲ್ಲೇಖಿಸಲೂ ಹಿಂಜರಿಯುತ್ತಾರೆ. ಇಂದಿನ ಬೆಲೆ ಏರಿಕೆಗೆ ಏಳು ವರ್ಷದ ಹಿಂದಿನ ಸರ್ಕಾರ ಕಾರಣ ಎಂದು ಹೇಳುವ ಒಂದು ಸರ್ಕಾರ ಪಡೆಯಲು ಭಾರತ 70 ವರ್ಷ ಕಾಯಬೇಕಾಯಿತು !!!!!

ಇಂತಹ ಒಂದು ಅಪ್ರಬುದ್ಧ ಆಡಳಿತ ವ್ಯವಸ್ಥೆಯ ನಡುವೆ ಭಾರತದ ಶ್ರಮಜೀವಿಗಳು ನಿತ್ಯ ಬದುಕಿಗಾಗಿ ಹೆಣಗಾಡಬೇಕಿದೆ. ಈ ಕ್ರಮಗಳೆಲ್ಲವೂ ‘ ದೇಶದ ಹಿತಕ್ಕಾಗಿ ’ ಎನ್ನುವುದಾದರೆ ‘ ದೇಶ ’ ಎಂದರೇನು ಎಂದು ಪ್ರಶ್ನಿಸಬೇಕಾಗುತ್ತದೆ. ದೇಶವನ್ನು ಕಟ್ಟಿದ ಬೃಹತ್ ಸಾರ್ವಜನಿಕ ಉದ್ದಿಮೆಗಳು ಇಂದು ಖಾಸಗಿಯವರ ಪಾಲಾಗುತ್ತಿದೆ.

ನಷ್ಟ ಅನುಭವಿಸುತ್ತಿರುವ ಸಾರ್ವಜನಿಕ ಬ್ಯಾಂಕುಗಳನ್ನು ಲಾಭದಾಯಕ ಬ್ಯಾಂಕುಗಳೊಡನೆ ವಿಲೀನಗೊಳಿಸುವ ಮೂಲಕ ಬಲಿಷ್ಠ ಬ್ಯಾಂಕುಗಳನ್ನೂ ದುರ್ಬಲಗೊಳಿಸಲಾಗುತ್ತಿದೆ. ಮತ್ತೊಂದೆಡೆ ಲಾಭದಾಯಕ ಬ್ಯಾಂಕುಗಳನ್ನು ಖಾಸಗೀಕರಿಸುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಪಾರದರ್ಶಕತೆಯೇ ಪ್ರಾಧಾನ್ಯತೆ ಪಡೆಯಬೇಕಾದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ತೆರೆಮರೆಯಲ್ಲಿ ಆಡಳಿತ ನೀತಿಗಳನ್ನು ಜಾರಿಗೊಳಿಸುವ ವಿಕೃತಿಯನ್ನು ಕಾಣುತ್ತಿದ್ದೇವೆ. ಇದು ಸಮಸ್ತ ಭಾರತೀಯರನ್ನು ಕತ್ತಲಲ್ಲಿರಿಸುವ ತಂತ್ರ ಎಂದು ಹೇಳಬೇಕಿಲ್ಲ.

“ ವ್ಯಾಪಾರ ವಹಿವಾಟು ಸರ್ಕಾರದ ಕೆಲಸ ಅಲ್ಲ ” ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ಹಿಂದೆ ಇಡೀ ಸಾರ್ವಜನಿಕ ಉದ್ದಿಮೆಯನ್ನು ಖಾಸಗೀಕರಿಸುವ ಸೂಚನೆ ಇರುವುದನ್ನು ಗ್ರಹಿಸಬೇಕಿದೆ. ಈಗಾಗಲೇ ಬಿಪಿಸಿಎಲ್ ಹರಾಜು ಮಾರುಕಟ್ಟೆಯಲ್ಲಿದೆ, ಬಿಇಎಂಎಲ್ ಮಾರಾಟಕ್ಕೆ ಸಿದ್ಧವಾಗುತ್ತಿದೆ, ಬಿಎಸ್ಎ್ನ್ಎಸಲ್ಗೆರ ಶವಪೆಟ್ಟಿಗೆಯನ್ನು ಸಿದ್ಧಪಡಿಸಿ ಹಲವು ತಿಂಗಳುಗಳೇ ಕಳೆದಿವೆ.

ಬ್ಯಾಂಕುಗಳು ಸದ್ದಿಲ್ಲದೆ ಒಂದರೊಳಗೊಂದು ವಿಲೀನವಾಗಿ ಕಣ್ಮರೆಯಾಗುತ್ತಿವೆ. ದೇಶದ ಅತಿ ದೊಡ್ಡ ಸಾರ್ವಜನಿಕ ಉದ್ದಿಮೆ ರೈಲ್ವೆ ಇಲಾಖೆ ಹಂತ ಹಂತವಾಗಿ ಅವಸಾನ ಕಾಣುತ್ತಿದೆ. ಉದ್ದಿಮೆ, ವ್ಯಾಪಾರ, ವ್ಯವಹಾರ ಸರ್ಕಾರದ ಹೊಣೆ ಅಲ್ಲ ಎನ್ನುವ ತತ್ವವೇ ಭಾರತದ ಅರ್ಥವ್ಯವಸ್ಥೆಯ ಬುನಾದಿಯಾಗಿದ್ದಲ್ಲಿ ಭಾರತ ಎಂದೋ ಮತ್ತೊಮ್ಮೆ ಸಾಮ್ರಾಜ್ಯಶಾಹಿಗಳ ಗುಲಾಮಗಿರಿಗೆ ಒಳಗಾಗುತ್ತಿತ್ತು. ಇಂದು ಸರ್ಕಾರ ಹೆಮ್ಮೆಯಿಂದ “ ಆತ್ಮನಿರ್ಭರ ” ಭಾರತದ ಬಗ್ಗೆ ಮಾತನಾಡುವಷ್ಟು ಸಾಮರ್ಥ್ಯ ಗಳಿಸಿದ್ದರೆ ಅದಕ್ಕೆ ಆರು ದಶಕಗಳ ಸ್ವಾವಲಂಬಿ ಭಾರತವೇ ಆಧಾರ ಎನ್ನುವುದನ್ನು ಸಮೂಹ ಸನ್ನಿಗೊಳಗಾದ ವಿದ್ಯಾವಂತರು ಅರ್ಥಮಾಡಿಕೊಳ್ಳಬೇಕಿದೆ.

ತಮ್ಮ ಬದುಕಿಗೆ ಅಡಿಪಾಯ ಹಾಕಿದ, ತಾವೇ ಕಟ್ಟಿ ಬೆಳೆಸಿದ, ತಮ್ಮ ಅಪ್ಪ ಅಮ್ಮಂದಿರುವ ಕಟ್ಟಿ ಬೆಳೆಸಿದ ಮತ್ತು ತಮ್ಮ ಇಂದಿನ ಹಿತವಲಯವನ್ನು ರೂಪಿಸಲು ನೆರವಾದ ನೂರಾರು ಸಾರ್ವಜನಿಕ ಉದ್ದಿಮೆಗಳು, ಸಂಸ್ಥೆಗಳು ಇಂದು ಮಾರುಕಟ್ಟೆಯ ಶಕ್ತಿಗಳಿಗೆ ಬಲಿಯಾಗುತ್ತಿರುವುದನ್ನು ಮೌನವಾಗಿ ಸಹಿಸಿಕೊಳ್ಳುತ್ತಿರುವ ಬೃಹತ್ ಜನಸಮುದಾಯಕ್ಕೆ ಆತ್ಮಸಾಕ್ಷಿ ಇದ್ದರೆ ಇಂದಿನ ಆತ್ಮನಿರ್ಭರ ಭಾರತವನ್ನು ಎದುರಿಸಿ, ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ಸಜ್ಜಾಗಬೇಕಿದೆ.

ಬಹುಸಂಖ್ಯೆಯ ಜನರ ಬದುಕು ದುರ್ಭರವಾಗಿರುವ ಆತ್ಮನಿರ್ಭರ ಭಾರತ ಮತ್ತೊಮ್ಮೆ ದೇಶವನ್ನು ಬಂಡವಾಳ ಮಾರುಕಟ್ಟೆಯ ದಾಸ್ಯಕ್ಕೆ ದೂಡುತ್ತಿರುವುದನ್ನು “ ದೇಶಭಕ್ತಿ ”ಯ ಹೆಸರಿನಲ್ಲಿ, “ ಭವಿಷ್ಯ ಭಾರತ ” ದ ಹೆಸರಿನಲ್ಲಿ ಸಮರ್ಥಿಸುವುದು ಬೌದ್ಧಿಕ ದಾರಿದ್ರ್ಯದ ಸಂಕೇತ.

ನೂತನ ಕೃಷಿ ಕಾಯ್ದೆಗಳು ಈ ದೇಶದ ರೈತರಿಗೆ ಮಾತ್ರವೇ ಅಲ್ಲ, ಜನಸಾಮಾನ್ಯರ ಬದುಕಿಗೂ ಮರಣ ಶಾಸನವಾಗುತ್ತದೆ ಎನ್ನುವ ವಾಸ್ತವವನ್ನು ಅರ್ಥಮಾಡಿಕೊಳ್ಳಲು, ಈ ಬೌದ್ಧಿಕ ದಾರಿದ್ರ್ಯದಿಂದ ಹೊರಬರಬೇಕಿದೆ. ಸರ್ಕಾರ ಸೃಷ್ಟಿಸಿರುವ ಸಮೂಹ ಸನ್ನಿಯಿಂದ ಹೊರಬರಬೇಕಿದೆ. ವಾಟ್ಸಾಪ್ ವಿಶ್ವವಿದ್ಯಾಲಯದಿಂದ ನಿರ್ಗಮಿಸಬೇಕಿದೆ.

ವಂದಿಮಾಗಧ ಭಟ್ಟಂಗಿ ಮಾಧ್ಯಮಗಳ ಸುಳಿಯಿಂದ ವಿಮೋಚನೆ ಪಡೆಯಬೇಕಿದೆ. ಹಾಗಾದಲ್ಲಿ ಮಾತ್ರ ಭಾರತದ ಭವಿಷ್ಯ ಉಜ್ವಲವಾಗಲು ಸಾಧ್ಯ. ಭಾರತ ಹೀಗಿರಲಿಲ್ಲ. ಈ ದೇಶದ ಸಾರ್ವಭೌಮ ಜನತೆ ಅಪಾಯಕ್ಕೆ ಸಿಲುಕಿದಾಗಲೆಲ್ಲಾ ಇಲ್ಲಿನ ಬೌದ್ಧಿಕ ಶಕ್ತಿಯೇ ಶತ್ರುಗಳನ್ನು ಹಿಮ್ಮೆಟ್ಟಿಸಿದೆ. ಇಂದು ಈ ಬೌದ್ಧಿಕ ಶಕ್ತಿ ತನ್ನ ಸ್ವಂತಿಕೆಯನ್ನು ಕಳೆದುಕೊಂಡಿದೆ.

ಪ್ರತಿರೋಧದ ದನಿಗಳಿಗೆ ದನಿಯಾಗುತ್ತಿರುವ ಒಂದು ಬೌದ್ಧಿಕ ವಲಯವನ್ನು ದೇಶದ್ರೋಹಿಗಳಂತೆ ಕಾಣುವ ಈ ಪ್ರಜ್ಞಾಶೂನ್ಯ ಸಮುದಾಯವೇ ಇಂದು ಭಾರತಕ್ಕೆ ಮಾರಕವಾಗಿ ಪರಿಣಮಿಸಲಿದೆ. 70 ವರ್ಷಗಳ ಸ್ವತಂತ್ರ ಇತಿಹಾಸದಲ್ಲಿ ಭಾರತ ಎಂದೂ ಇಂತಹ ಸಮೂಹ ಸನ್ನಿಯನ್ನು ಕಂಡಿರಲಿಲ್ಲ. ಈ ಮಟ್ಟಿನ ನಿಷ್ಕ್ರಿಯತೆಯನ್ನೂ ಕಂಡಿರಲಿಲ್ಲ. ಈ ನಿಷ್ಕ್ರಿಯತೆಗೆ ತದ್ವಿರುದ್ಧವಾಗಿ ದೆಹಲಿಯ ಗಡಿಯಲ್ಲಿನ ರೈತ ಹೋರಾಟ ಉಜ್ವಲ ಭಾರತದ ಕನಸುಗಳನ್ನು ಚಿಗುರಿಸುತ್ತಿದೆ.

ಆತ್ಮನಿರ್ಭರ ಭಾರತವನ್ನು ಕಾಣುವುದೇ ಆದರೆ ನೂರು ದಿನಗಳನ್ನು ಪೂರೈಸಿರುವ ಈ ರೈತ ಹೋರಾಟದಲ್ಲಿ ಕಾಣಬೇಕಿದೆಯೇ ಹೊರತು, ಆತ್ಮವಂಚಕ ವ್ಯವಸ್ಥೆಯ ಮತ್ತು ಈ ವ್ಯವಸ್ಥೆಯ ಸಮರ್ಥಕರ ರಂಗುರಂಗಿನ ಮಾತುಗಳಲ್ಲಿ ಅಲ್ಲ.

ಪ್ರಭುತ್ವದಿಂದ ಯಾವುದೇ ಪರಿಹಾರ ಮಾರ್ಗಗಳನ್ನು ಕಾಣದೆ ಒಂದು ನ್ಯಾಯಯುತ ಜನಾಂದೋಲನ ನೂರು ದಿನಗಳನ್ನು ಪೂರೈಸುವುದು ಪ್ರಜಾತಂತ್ರ ವ್ಯವಸ್ಥೆಯ ಗೆಲುವು ಎನ್ನಬಹುದಾದರೂ, ಇದು ಆಡಳಿತ ವ್ಯವಸ್ಥೆಗೆ ನಾಚಿಕೆಗೇಡಿನ ವಿಚಾರವಾಗಬೇಕು. ಸಾರ್ವಭೌಮ ಪ್ರಜೆಗಳ ದನಿಗೆ ದನಿಯಾಗದ ಒಂದು ಆಡಳಿತ ವ್ಯವಸ್ಥೆಯ ಆತ್ಮನಿರ್ಭರತೆಯ ಮತ್ತೊಂದು ಮುಖ ಆತ್ಮವಂಚನೆಯಲ್ಲಿ ಕಾಣುವಂತಾಗಿರುವುದು ನವ ಭಾರತದ ಅತಿ ದೊಡ್ಡ ದುರಂತ. ಇದು ಶತಮಾನದ ದುರಂತವೂ ಹೌದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.

ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.

ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ2 days ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ2 days ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ3 days ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ3 days ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

ದಿನದ ಸುದ್ದಿ5 days ago

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...

ದಿನದ ಸುದ್ದಿ6 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ6 days ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ7 days ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ1 week ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

Trending