Connect with us

ದಿನದ ಸುದ್ದಿ

ಆತ್ಮನಿರ್ಭರ ಭಾರತದ ಆತ್ಮವಂಚಕ ಮುಖಗಳು..!

Published

on

  • ನಾ ದಿವಾಕರ

ಒಂದು ಪ್ರಜಾಸತ್ತಾತ್ಮಕ ಗಣತಂತ್ರದ ಸಂಸದೀಯ ಪ್ರಜಾಸತ್ತೆಯ ಚೌಕಟ್ಟಿನಲ್ಲಿ , ಪ್ರಜೆಗಳಿಂದಲೇ ಚುನಾಯಿತವಾದ ಸರ್ಕಾರ ಆಡಳಿತ ನಡೆಸುತ್ತಿರುವ ದೇಶದಲ್ಲಿ, ಸಾರ್ವಭೌಮ ಪ್ರಜೆಗಳ ಒಂದು ವರ್ಗ ತನ್ನ ನ್ಯಾಯಯುತ ಹಕ್ಕುಗಳಿಗಾಗಿ ನೂರು ದಿನಗಳ ಕಾಲ ಮುಷ್ಕರ ನಡೆಸುವುದು ಪ್ರಜಾಸತ್ತೆಯ ಜೀವಂತಿಕೆಗೆ ಸಾಕ್ಷಿ. ಹಾಗೆಯೇ ಆಳುವ ವರ್ಗಗಳ ನಿಷ್ಕ್ರಿಯತೆಗೂ ಸಾಕ್ಷಿ. ಪ್ರಜಾಸತ್ತೆಯ ಜೀವಂತಿಕೆಯ ಹಿಂದೆ 220 ಜೀವಗಳ ಬಲಿದಾನ, ಲಕ್ಷಾಂತರ ರೈತರ, ಸಾವಿರಾರು ರೈತ ಕುಟುಂಬಗಳ ಬವಣೆ, ಜನಸಾಮಾನ್ಯರ ನೋವು ಅಡಗಿರುವುದನ್ನು ಗಮನಿಸಿದಾಗ ಈ ಜೀವಂತಿಕೆಯ ಔಚಿತ್ಯವೇ ಪ್ರಶ್ನಾರ್ಹವಾಗಿಬಿಡುತ್ತದೆ.

ತಮ್ಮ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನೂರು ದಿನಗಳ ಕಾಲ ಬಿಸಿಲು, ಮಳೆ, ಚಳಿ ಲೆಕ್ಕಿಸದೆ, ಪ್ರಭುತ್ವದ ದಮನಕಾರಿ ನೀತಿಗಳನ್ನು ದಿಟ್ಟತನದಿಂದ ಎದುರಿಸಿ, ದೆಹಲಿಯ ಗಡಿಗಳಲ್ಲಿ ಕುಳಿತಿರುವ ಲಕ್ಷಾಂತರ ರೈತರು ಇಂದಿಗೂ ಬಸವಳಿದಿಲ್ಲ, ಅವರ ಉತ್ಸಾಹ ಕುಂದಿಲ್ಲ ಎನ್ನುವುದನ್ನು ಗಮನಿಸಿದಾಗ ಪ್ರಜಾಸತ್ತೆಯ ಉಳಿವು ಇರುವುದು ಯಾರ ಕೈಯ್ಯಲ್ಲಿ ಎನ್ನುವುದು ಸ್ಪಷ್ಟವಾಗುತ್ತದೆ. ಹೌದು, ಭಾರತದಲ್ಲಿ ಪ್ರಜಾಸತ್ತೆ ಉಳಿದಿದೆ ಎನ್ನುವುದೇ ಆದರೆ ಅದು ಈ ದೇಶದ ಶೋಷಿತ ವರ್ಗಗಳ, ದಮನಿತ ಜನಸಮುದಾಯಗಳ ಮತ್ತು ಅನ್ಯಾಯಕ್ಕೊಳಗಾದ ಶ್ರಮಜೀವಿಗಳ ದೃಢ ನಂಬಿಕೆ ಮತ್ತು ವಿಶ್ವಾಸದಿಂದ ಮಾತ್ರ.

ಪ್ರಜಾತಂತ್ರವನ್ನು ಗ್ರಾಂಥಿಕವಾಗಿ ಉಳಿಸಲು ಆಳುವ ವರ್ಗಗಳು ಪ್ರಯತ್ನಿಸುತ್ತಲೇ ಇವೆ. ಆದರೆ ಸಾಂಸ್ಥಿಕವಾಗಿ ಪ್ರಜಾಸತ್ತೆ ಶಿಥಿಲವಾಗುತ್ತಲೇ ಇದೆ. ಈ ಶಿಥಿಲ ಸಾಂಸ್ಥಿಕ ನೆಲೆಗಳನ್ನು ಬಲಪಡಿಸುವ ಹೊಣೆ ಇದೇ ಹೋರಾಟನಿರತ ಜನತೆಯ ಮೇಲಿದೆ. ಈ ದ್ವಂದ್ವದ ನಡುವೆಯೇ ಆತ್ಮನಿರ್ಭರ ಭಾರತ ಮತ್ತೊಂದು ಹೊಸ ಪರ್ವವನ್ನು ಪ್ರವೇಶಿಸುತ್ತಿದೆ.

“ ರೈತರು ನೂರು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ, ನಮ್ಮ ಸರ್ಕಾರ ಅವರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದುಕೊಂಡಿಲ್ಲ ” ಎಂದು ಎದೆತಟ್ಟಿ ಹೇಳಿಕೊಳ್ಳುವ ನೈತಿಕತೆಯನ್ನು ಕೇಂದ್ರ ಸರ್ಕಾರ ಎಂದೋ ಕಳೆದುಕೊಂಡುಬಿಟ್ಟಿದೆ. ಏಕೆಂದರೆ ಈ ಮುಷ್ಕರ ನಿರತ ರೈತರು ಅಶ್ರುವಾಯು, ಜಲಫಿರಂಗಿ, ರಸ್ತೆ ಕಂದಕಗಳು, ಬೃಹತ್ ತಡೆಗೋಡೆಗಳು, ಮುಳ್ಳಿನ ಬೇಲಿಗಳು, ಪೊಲೀಸರ ಲಾಠಿ ಪ್ರಹಾರ ಮತ್ತು ಶರಮಂಚದ ಹಾಸುಗಳನ್ನೂ ದಾಟಿ ಮುನ್ನಡೆದಿದ್ದಾರೆ.

ಇಡೀ ದೇಶದ ಜನತೆ ‘ ಅನ್ನದಾತ ’ ಎಂದು ಗೌರವಿಸುವ ರೈತಾಪಿಯನ್ನು ಖಲಿಸ್ತಾನಿ, ಪಾಕಿಸ್ತಾನಿ, ದೇಶದ್ರೋಹಿ, ನಗರ ನಕ್ಸಲರು ಎಂದು ಹೀಗಳೆಯುವ ಮೂಲಕ ಅಪಮಾನಿಸುತ್ತಲೇ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಿಸಿದ ಒಂದು ಸರ್ಕಾರ ತನ್ನ ತಣ್ಣನೆಯ ಕ್ರೌರ್ಯಕ್ಕೆ ತಾನೇ ನಾಚಿ ತಲೆ ತಗ್ಗಿಸುವಂತಾಗಿರುವುದು ಸ್ಪಷ್ಟ.

ಭಾರತದ ರೈತರ ಪಾಲಿಗೆ, ಜನಸಾಮಾನ್ಯರ ಪಾಲಿಗೆ ಮತ್ತು ಸಮಸ್ತ ಕೃಷಿ ಚಟುವಟಿಕೆಗಳ ದೃಷ್ಟಿಯಿಂದ ಮರಣ ಶಾಸನವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ರೈತ ಸಮುದಾಯದ ಆಗ್ರಹಕ್ಕೆ ಮಾನ್ಯತೆಯನ್ನೇ ನೀಡದೆ ಕಾಲಹರಣ ಮಾಡುತ್ತಿರುವ ಕೇಂದ್ರ ಸರ್ಕಾರ ಚಳುವಳಿಯನ್ನು ವಿಫಲಗೊಳಿಸಲು ವಿಭಿನ್ನ ವಾಮ ಮಾರ್ಗಗಳನ್ನು ಅನುಸರಿಸುತ್ತಿರುವುದು ಈ ತಣ್ಣನೆಯ ಕ್ರೌರ್ಯಕ್ಕೆ ಸಾಕ್ಷಿಯಾಗಿದೆ.

ಸರ್ಕಾರ ಯಾರನ್ನು ಉದ್ದೇಶಿಸಿ ಅಥವಾ ಯಾರ ಏಳಿಗೆಗಾಗಿ ಹೊಸ ಕಾಯ್ದೆಗಳನ್ನು ಜಾರಿಗೊಳಿಸಿರುವುದೋ, ಆ ಜನಸಮುದಾಯಗಳೇ ಈ ಕಾಯ್ದೆಯ ಕರಾಳ ಸ್ವರೂಪವನ್ನು ಬಹಿರಂಗಪಡಿಸಿ, ಇದು ಹೇಗೆ ಇತರ ಜನಸಾಮಾನ್ಯರ ಜೀವನೋಪಾಯಕ್ಕೂ ಸಂಚಕಾರ ತರುತ್ತದೆ ಎನ್ನುವುದನ್ನು ನಿರೂಪಿಸಿದ ನಂತರವೂ, ಈ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂಬ ಹಠಮಾರಿ ಧೋರಣೆ ಪ್ರದರ್ಶಿಸುವುದು ಸರ್ವಾಧಿಕಾರದ ಲಕ್ಷಣ.

ಈ ಹಠಮಾರಿ ಧೋರಣೆಯನ್ನು ಸಮರ್ಥಿಸಿಕೊಳ್ಳುವ ಸಲುವಾಗಿ, ರೈತರ ಹೋರಾಟ ಮತ್ತು ಬೇಡಿಕೆಗಳನ್ನು ಬೆಂಬಲಿಸಿದವರೆಲ್ಲರೂ ದೇಶದ್ರೋಹಿಗಳು ಎಂದು ಬಿಂಬಿಸುವುದು ತಣ್ಣನೆಯ ಕ್ರೌರ್ಯದ ಅಮಾನುಷ ಸ್ವರೂಪ. ಈ ಎರಡೂ ಧೋರಣೆಗಳು ಪ್ರಜಾಸತ್ತೆಗೆ ಶೋಭಿಸುವುಂತಹುದಲ್ಲ.

ಭಾರತದ ಪ್ರಜಾತಂತ್ರ ವ್ಯವಸ್ಥೆ ಪರ್ವಕಾಲದಲ್ಲಿದೆ ಎನಿಸಲು ರೈತ ಮುಷ್ಕರವೊಂದೇ ಕಾರಣವಲ್ಲ. ಇಂದು ಸಮೂಹ ಸನ್ನಿಗೊಳಗಾದ ಮಧ್ಯಮ ವರ್ಗಗಳ ಹಿತವಲಯಗಳನ್ನು ಹೊರತುಪಡಿಸಿ, ದೇಶದ ಸಮಸ್ತ ಜನತೆ, ಶ್ರಮಜೀವಿ ವರ್ಗಗಳು, ದುಡಿಯುವ ವರ್ಗಗಳು ಮತ್ತು ಶೋಷಿತ ಸಮುದಾಯಗಳು ಅನಿಶ್ಚಿತತೆಯನ್ನು ಎದುರಿಸುತ್ತಿವೆ.

ಸಾಮಾಜಿಕ-ಆರ್ಥಿಕ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸದಿದ್ದರೆ ರಾಜಕೀಯ ಸಮಾನತೆ ಅಥವಾ ರಾಜಕೀಯ ನ್ಯಾಯ ಅರ್ಥಹೀನವಾಗುತ್ತದೆ ಎಂದು ಡಾ ಅಂಬೇಡ್ಕರ್ ಹೇಳಿರುವುದನ್ನು ಇಂದು ಮತ್ತೊಮ್ಮೆ ನೆನೆಯಬೇಕಿದೆ. ಭಾರತ ಇಂದು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನೇ ಹೊಸಕಿ ಹಾಕುವ ಹೊಸ ಮಾರ್ಗವನ್ನು ಅನುಸರಿಸುತ್ತಿದೆ.

ಅಧಿಕಾರ ರಾಜಕಾರಣದ ನೆಲೆಯಲ್ಲಿ ನಿಂತು ನೋಡಿದರೆ ಇಂದು ಭಾರತ ಸುಸ್ಥಿರ ಸರ್ಕಾರ ಮತ್ತು ಸುಸ್ಥಿರ ಆಡಳಿತ ವ್ಯವಸ್ಥೆಯನ್ನು ಹೊಂದಿದೆ. ಆದರೆ ಈ ಸುಸ್ಥಿರತೆಯ ಮಂಜಿನ ಪರದೆಯನ್ನು ಸರಿಸಿ ನೋಡಿದಾಗ ಅರಾಜಕತೆ ತಾಂಡವಾಡುತ್ತಿರುವುದೂ ಕಾಣುತ್ತದೆ.

ಆಡಳಿತಾರೂಢ ಸರ್ಕಾರವನ್ನು ‘ ಭಾರತ ದೇಶ ’ಕ್ಕೆ ಸಮೀಕರಿಸುವ ಮೂಲಕ ಸರ್ಕಾರವನ್ನು, ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸುವುದೇ ದೇಶದ್ರೋಹ ಎನ್ನುವ ಅಭಿಪ್ರಾಯ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಹಾಗಾಗಿಯೇ ಕೃಷಿ ಕಾಯ್ದೆಯನ್ನು ವಿರೋಧಿಸುವ ಪರಿಸರ ಹೋರಾಟಗಾರ್ತಿ ದಿಶಾ ರವಿ ರಾತ್ರೋರಾತ್ರಿ ಬಂಧನಕ್ಕೊಳಗಾಗಿ, ದೇಶದ್ರೋಹದ ಆರೋಪ ಎದುರಿಸಬೇಕಾಗುತ್ತದೆ.

ಆತ್ಮನಿರ್ಭರ ಭಾರತದಲ್ಲಿ ಜನಸಾಮಾನ್ಯರ ಬದುಕು ದುರ್ಭರವಾಗುತ್ತಿರುವುದನ್ನು ಕಂಡೂ ಕಾಣದಂತೆ ವ್ಯಕ್ತಿ ಪೂಜೆಯಲ್ಲಿ ತೊಡಗಿರುವ ಭಾರತದ ಬಹುದೊಡ್ಡ ಮಧ್ಯಮ ವರ್ಗ ಇಂದು ತಲೆತಗ್ಗಿಸಿ ನಿಲ್ಲುವಂತಾಗಿದೆ. ಜನರು ದಿನನಿತ್ಯ ಬಳಸುವ ಅವಶ್ಯ ವಸ್ತುಗಳ ಬೆಲೆಗಳು ನಿರಂತರವಾಗಿ ಏರುತ್ತಲೇ ಇವೆ. ಇಂಧನ ಬೆಲೆಗಳು ಕೈಗೆಟುಕದಂತಾಗುತ್ತಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂ ಗಡಿ ದಾಟುವುದರಲ್ಲಿದೆ.

ಡೀಸೆಲ್ ಬೆಲೆಗಳು ಇದರೊಂದಿಗೆ ಪೈಪೋಟಿ ನಡೆಸುತ್ತಿವೆ. ಅಡುಗೆ ಅನಿಲ 1000ದ ಗಡಿ ದಾಟುವುದರಲ್ಲಿದೆ. ಬೇಳೆ ಕಾಳುಗಳು, ಅಡುಗೆ ಎಣ್ಣೆ ಬೆಲೆಗಳು ಗಗನಕ್ಕೇರಿವೆ. ಇದು ಮುಕ್ತ ಮಾರುಕಟ್ಟೆ ನೀತಿಯ ಪರಿಣಾಮ ಎನ್ನುವ ಸಾಮಾನ್ಯ ಪರಿಜ್ಞಾನಕ್ಕೆ ಅರ್ಥಶಾಸ್ತ್ರದ ಪರಿಣತಿಯೇನೂ ಬೇಕಿಲ್ಲ. ಭಾರತದಲ್ಲಿ ಈ ರೀತಿಯ ಬೆಲೆ ಏರಿಕೆ ಹೊಸತೂ ಅಲ್ಲ.

ಆದರೆ ಹೊಸತಾಗಿ ಕಾಣುವುದು ಮಧ್ಯಮ ವರ್ಗಗಳ ನಿಷ್ಕ್ರಿಯ ಮೌನ. ತಾವೇ ಕಟ್ಟಿ ಬೆಳೆಸಿದ ಬದುಕು ಕಟ್ಟಿಕೊಡುವ ಸಾಂಸ್ಥಿಕ ನೆಲೆಗಳು ತಮ್ಮ ಕಣ್ಣೆದುರಿನಲ್ಲೇ ಹರಾಜು ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿರುವುದನ್ನು ‘ ದೇಶದ ಒಳಿತಿಗಾಗಿ ’ ಸಹಿಸಿಕೊಳ್ಳುವುದು ಬೌದ್ಧಿಕ ದಾರಿದ್ರ್ಯದ ಸಂಕೇತ. ಸ್ವತಂತ್ರ ಭಾರತದ ಸಾರ್ವಭೌಮ ಪ್ರಜೆಗಳು ಹಿಂದೆಂದೂ ಈ ಸಹನೆ (?)ಯನ್ನು ತೋರಿರುವ ಉದಾಹರಣೆಗಳಿಲ್ಲ.

ಈ ಬೆಲೆ ಏರಿಕೆಗೆ ಕೇಂದ್ರ ಸಚಿವರು ನೀಡುವ ಕಾರಣಗಳು ಅಧಿಕಾರಸ್ಥರ ಬೌದ್ಧಿಕ ದಾರಿದ್ರ್ಯವನ್ನೂ ಪ್ರದರ್ಶಿಸುತ್ತಿದೆ. ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ಬೆಲೆಗಳನ್ನು ಹತ್ತು ರೂಗಳಿಂದ ಐವತ್ತು ರೂಗಳಿಗೆ ಏರಿಸಿ, ಜನಸಂದಣಿ ಕಡಿಮೆ ಮಾಡಲು ಬೆಲೆ ಏರಿಸಿಲಾಗಿದೆ ಎಂದು ಹೇಳುವ ರೈಲ್ವೆ ಸಚಿವರು ದೆಹಲಿಯಲ್ಲಿ ಕುಳಿತಿದ್ದಾರೆ.

ಅತಿ ಹೆಚ್ಚು ಜನರು ಪ್ರಯಾಣಿಸುವ ಪ್ಯಾಸೆಂಜರ್ ರೈಲುಗಳು ಭಾರತದ ದುಡಿಯುವ ವರ್ಗಗಳ, ಶ್ರಮಜೀವಿಗಳ ಮತ್ತು ವಲಸೆ ಕಾರ್ಮಿಕರ ಜೀವನಾಡಿಯಂತೆ. ನಿಜವಾದ ಭಾರತವನ್ನು ನೋಡಬೇಕೆಂದರೆ ಪ್ಯಾಸೆಂಜರ್ ರೈಲುಗಳಲ್ಲಿ ಓಡಾಡಬೇಕು. ಕೂಲಿನಾಲಿ ಮಾಡಲು ಊರಿಂದ ಊರಿಗೆ ಹೋಗುವ ಕಟ್ಟಡ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಇತರ ದುಡಿಯುವ ಜನರು ಅಲ್ಪ ದರದ ಪ್ಯಾಸೆಂಜರ್ ರೈಲುಗಳನ್ನೇ ಅವಲಂಬಿಸಿ ಬದುಕುತ್ತಾರೆ.

ಈ ರೈಲುಗಳ ಪ್ರಯಾಣ ದರವನ್ನೂ ಹೆಚ್ಚಿಸಲಾಗಿದ್ದು, ಅನಗತ್ಯ ಓಡಾಟ ತಪ್ಪಿಸಲು ಟಿಕೆಟ್ ದರಗಳನ್ನು ಹೆಚ್ಚಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಹೇಳುತ್ತದೆ. ರೈಲು ದರ ಹೆಚ್ಚಳಕ್ಕಿಂತಲೂ ಹೆಚ್ಚು ಕ್ರೂರ ಎನಿಸುವುದು ಸಚಿವರ ಈ ಹೇಳಿಕೆ. ಯಾವುದೇ ವಸ್ತು, ಪದಾರ್ಥ ಅಥವಾ ಸೇವೆಯ ಬೆಲೆ, ಮೌಲ್ಯ ಮಾರುಕಟ್ಟೆಯಲ್ಲಿ ಹೆಚ್ಚಾದರೆ ಅದಕ್ಕೆ ಮಾರುಕಟ್ಟೆಯ ನಿಯಮಗಳು ಮತ್ತು ಆರ್ಥಿಕ ನೀತಿಗಳು ಕಾರಣ ಎನ್ನುವುದು ಸಾಮಾನ್ಯರಿಗೂ ಅರ್ಥವಾಗುವ ಸಂಗತಿ. ಆದರೆ ಈ ಶ್ರೀಸಾಮಾನ್ಯ ಇಂದು ತನ್ನ ಪ್ರಜ್ಞೆ ಮತ್ತು ಸ್ವಂತಿಕೆಯನ್ನು ಒಂದು ನಿರ್ದಿಷ್ಟ ವ್ಯಕ್ತಿ-ಸಿದ್ಧಾಂತ(?)ಕ್ಕೆ ಅಡಮಾನ ಇಟ್ಟಿರುವುದು ದುರಂತ.

ಭಾರತದ ಸುಶಿಕ್ಷಿತ ವರ್ಗದ ಬೃಹತ್ ಸಂಖ್ಯೆಯ ಜನರು ತಮ್ಮ ಹಿತವಲಯದ ಹಿತಾನುಭವದಲ್ಲಿ ಮುಳುಗಿ ಶ್ರೀಸಾಮಾನ್ಯರ ಬವಣೆಯನ್ನು ನಿರ್ಲಕ್ಷಿಸುತ್ತಿರುವುದು ಆತ್ಮನಿರ್ಭರ ಭಾರತದ ದುರಂತಗಳಲ್ಲಿ ಒಂದು. ಕೋವಿದ್ ಲಾಕ್ ಡೌನ್ ಸಂದರ್ಭದಲ್ಲಿ ಜೀವನ ಮತ್ತು ಜೀವನೋಪಾಯದ ಬಗ್ಗೆ ಪುಂಖಾನುಪುಂಖವಾಗಿ ಭಾಷಣಗಳನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿ ಇಂದು ಬಹುಸಂಖ್ಯೆಯ ಜನರ ಜೀವನ ಮೂರಾಬಟ್ಟೆಯಾಗಿ, ಜೀವನೋಪಾಯದ ಮಾರ್ಗಗಳು ಮುಚ್ಚಿಹೋಗುತ್ತಿದ್ದರೂ ತಮ್ಮ ಮನದ ಮಾತುಗಳಲ್ಲಿ ಇದನ್ನು ಉಲ್ಲೇಖಿಸಲೂ ಹಿಂಜರಿಯುತ್ತಾರೆ. ಇಂದಿನ ಬೆಲೆ ಏರಿಕೆಗೆ ಏಳು ವರ್ಷದ ಹಿಂದಿನ ಸರ್ಕಾರ ಕಾರಣ ಎಂದು ಹೇಳುವ ಒಂದು ಸರ್ಕಾರ ಪಡೆಯಲು ಭಾರತ 70 ವರ್ಷ ಕಾಯಬೇಕಾಯಿತು !!!!!

ಇಂತಹ ಒಂದು ಅಪ್ರಬುದ್ಧ ಆಡಳಿತ ವ್ಯವಸ್ಥೆಯ ನಡುವೆ ಭಾರತದ ಶ್ರಮಜೀವಿಗಳು ನಿತ್ಯ ಬದುಕಿಗಾಗಿ ಹೆಣಗಾಡಬೇಕಿದೆ. ಈ ಕ್ರಮಗಳೆಲ್ಲವೂ ‘ ದೇಶದ ಹಿತಕ್ಕಾಗಿ ’ ಎನ್ನುವುದಾದರೆ ‘ ದೇಶ ’ ಎಂದರೇನು ಎಂದು ಪ್ರಶ್ನಿಸಬೇಕಾಗುತ್ತದೆ. ದೇಶವನ್ನು ಕಟ್ಟಿದ ಬೃಹತ್ ಸಾರ್ವಜನಿಕ ಉದ್ದಿಮೆಗಳು ಇಂದು ಖಾಸಗಿಯವರ ಪಾಲಾಗುತ್ತಿದೆ.

ನಷ್ಟ ಅನುಭವಿಸುತ್ತಿರುವ ಸಾರ್ವಜನಿಕ ಬ್ಯಾಂಕುಗಳನ್ನು ಲಾಭದಾಯಕ ಬ್ಯಾಂಕುಗಳೊಡನೆ ವಿಲೀನಗೊಳಿಸುವ ಮೂಲಕ ಬಲಿಷ್ಠ ಬ್ಯಾಂಕುಗಳನ್ನೂ ದುರ್ಬಲಗೊಳಿಸಲಾಗುತ್ತಿದೆ. ಮತ್ತೊಂದೆಡೆ ಲಾಭದಾಯಕ ಬ್ಯಾಂಕುಗಳನ್ನು ಖಾಸಗೀಕರಿಸುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಪಾರದರ್ಶಕತೆಯೇ ಪ್ರಾಧಾನ್ಯತೆ ಪಡೆಯಬೇಕಾದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ತೆರೆಮರೆಯಲ್ಲಿ ಆಡಳಿತ ನೀತಿಗಳನ್ನು ಜಾರಿಗೊಳಿಸುವ ವಿಕೃತಿಯನ್ನು ಕಾಣುತ್ತಿದ್ದೇವೆ. ಇದು ಸಮಸ್ತ ಭಾರತೀಯರನ್ನು ಕತ್ತಲಲ್ಲಿರಿಸುವ ತಂತ್ರ ಎಂದು ಹೇಳಬೇಕಿಲ್ಲ.

“ ವ್ಯಾಪಾರ ವಹಿವಾಟು ಸರ್ಕಾರದ ಕೆಲಸ ಅಲ್ಲ ” ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ಹಿಂದೆ ಇಡೀ ಸಾರ್ವಜನಿಕ ಉದ್ದಿಮೆಯನ್ನು ಖಾಸಗೀಕರಿಸುವ ಸೂಚನೆ ಇರುವುದನ್ನು ಗ್ರಹಿಸಬೇಕಿದೆ. ಈಗಾಗಲೇ ಬಿಪಿಸಿಎಲ್ ಹರಾಜು ಮಾರುಕಟ್ಟೆಯಲ್ಲಿದೆ, ಬಿಇಎಂಎಲ್ ಮಾರಾಟಕ್ಕೆ ಸಿದ್ಧವಾಗುತ್ತಿದೆ, ಬಿಎಸ್ಎ್ನ್ಎಸಲ್ಗೆರ ಶವಪೆಟ್ಟಿಗೆಯನ್ನು ಸಿದ್ಧಪಡಿಸಿ ಹಲವು ತಿಂಗಳುಗಳೇ ಕಳೆದಿವೆ.

ಬ್ಯಾಂಕುಗಳು ಸದ್ದಿಲ್ಲದೆ ಒಂದರೊಳಗೊಂದು ವಿಲೀನವಾಗಿ ಕಣ್ಮರೆಯಾಗುತ್ತಿವೆ. ದೇಶದ ಅತಿ ದೊಡ್ಡ ಸಾರ್ವಜನಿಕ ಉದ್ದಿಮೆ ರೈಲ್ವೆ ಇಲಾಖೆ ಹಂತ ಹಂತವಾಗಿ ಅವಸಾನ ಕಾಣುತ್ತಿದೆ. ಉದ್ದಿಮೆ, ವ್ಯಾಪಾರ, ವ್ಯವಹಾರ ಸರ್ಕಾರದ ಹೊಣೆ ಅಲ್ಲ ಎನ್ನುವ ತತ್ವವೇ ಭಾರತದ ಅರ್ಥವ್ಯವಸ್ಥೆಯ ಬುನಾದಿಯಾಗಿದ್ದಲ್ಲಿ ಭಾರತ ಎಂದೋ ಮತ್ತೊಮ್ಮೆ ಸಾಮ್ರಾಜ್ಯಶಾಹಿಗಳ ಗುಲಾಮಗಿರಿಗೆ ಒಳಗಾಗುತ್ತಿತ್ತು. ಇಂದು ಸರ್ಕಾರ ಹೆಮ್ಮೆಯಿಂದ “ ಆತ್ಮನಿರ್ಭರ ” ಭಾರತದ ಬಗ್ಗೆ ಮಾತನಾಡುವಷ್ಟು ಸಾಮರ್ಥ್ಯ ಗಳಿಸಿದ್ದರೆ ಅದಕ್ಕೆ ಆರು ದಶಕಗಳ ಸ್ವಾವಲಂಬಿ ಭಾರತವೇ ಆಧಾರ ಎನ್ನುವುದನ್ನು ಸಮೂಹ ಸನ್ನಿಗೊಳಗಾದ ವಿದ್ಯಾವಂತರು ಅರ್ಥಮಾಡಿಕೊಳ್ಳಬೇಕಿದೆ.

ತಮ್ಮ ಬದುಕಿಗೆ ಅಡಿಪಾಯ ಹಾಕಿದ, ತಾವೇ ಕಟ್ಟಿ ಬೆಳೆಸಿದ, ತಮ್ಮ ಅಪ್ಪ ಅಮ್ಮಂದಿರುವ ಕಟ್ಟಿ ಬೆಳೆಸಿದ ಮತ್ತು ತಮ್ಮ ಇಂದಿನ ಹಿತವಲಯವನ್ನು ರೂಪಿಸಲು ನೆರವಾದ ನೂರಾರು ಸಾರ್ವಜನಿಕ ಉದ್ದಿಮೆಗಳು, ಸಂಸ್ಥೆಗಳು ಇಂದು ಮಾರುಕಟ್ಟೆಯ ಶಕ್ತಿಗಳಿಗೆ ಬಲಿಯಾಗುತ್ತಿರುವುದನ್ನು ಮೌನವಾಗಿ ಸಹಿಸಿಕೊಳ್ಳುತ್ತಿರುವ ಬೃಹತ್ ಜನಸಮುದಾಯಕ್ಕೆ ಆತ್ಮಸಾಕ್ಷಿ ಇದ್ದರೆ ಇಂದಿನ ಆತ್ಮನಿರ್ಭರ ಭಾರತವನ್ನು ಎದುರಿಸಿ, ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ಸಜ್ಜಾಗಬೇಕಿದೆ.

ಬಹುಸಂಖ್ಯೆಯ ಜನರ ಬದುಕು ದುರ್ಭರವಾಗಿರುವ ಆತ್ಮನಿರ್ಭರ ಭಾರತ ಮತ್ತೊಮ್ಮೆ ದೇಶವನ್ನು ಬಂಡವಾಳ ಮಾರುಕಟ್ಟೆಯ ದಾಸ್ಯಕ್ಕೆ ದೂಡುತ್ತಿರುವುದನ್ನು “ ದೇಶಭಕ್ತಿ ”ಯ ಹೆಸರಿನಲ್ಲಿ, “ ಭವಿಷ್ಯ ಭಾರತ ” ದ ಹೆಸರಿನಲ್ಲಿ ಸಮರ್ಥಿಸುವುದು ಬೌದ್ಧಿಕ ದಾರಿದ್ರ್ಯದ ಸಂಕೇತ.

ನೂತನ ಕೃಷಿ ಕಾಯ್ದೆಗಳು ಈ ದೇಶದ ರೈತರಿಗೆ ಮಾತ್ರವೇ ಅಲ್ಲ, ಜನಸಾಮಾನ್ಯರ ಬದುಕಿಗೂ ಮರಣ ಶಾಸನವಾಗುತ್ತದೆ ಎನ್ನುವ ವಾಸ್ತವವನ್ನು ಅರ್ಥಮಾಡಿಕೊಳ್ಳಲು, ಈ ಬೌದ್ಧಿಕ ದಾರಿದ್ರ್ಯದಿಂದ ಹೊರಬರಬೇಕಿದೆ. ಸರ್ಕಾರ ಸೃಷ್ಟಿಸಿರುವ ಸಮೂಹ ಸನ್ನಿಯಿಂದ ಹೊರಬರಬೇಕಿದೆ. ವಾಟ್ಸಾಪ್ ವಿಶ್ವವಿದ್ಯಾಲಯದಿಂದ ನಿರ್ಗಮಿಸಬೇಕಿದೆ.

ವಂದಿಮಾಗಧ ಭಟ್ಟಂಗಿ ಮಾಧ್ಯಮಗಳ ಸುಳಿಯಿಂದ ವಿಮೋಚನೆ ಪಡೆಯಬೇಕಿದೆ. ಹಾಗಾದಲ್ಲಿ ಮಾತ್ರ ಭಾರತದ ಭವಿಷ್ಯ ಉಜ್ವಲವಾಗಲು ಸಾಧ್ಯ. ಭಾರತ ಹೀಗಿರಲಿಲ್ಲ. ಈ ದೇಶದ ಸಾರ್ವಭೌಮ ಜನತೆ ಅಪಾಯಕ್ಕೆ ಸಿಲುಕಿದಾಗಲೆಲ್ಲಾ ಇಲ್ಲಿನ ಬೌದ್ಧಿಕ ಶಕ್ತಿಯೇ ಶತ್ರುಗಳನ್ನು ಹಿಮ್ಮೆಟ್ಟಿಸಿದೆ. ಇಂದು ಈ ಬೌದ್ಧಿಕ ಶಕ್ತಿ ತನ್ನ ಸ್ವಂತಿಕೆಯನ್ನು ಕಳೆದುಕೊಂಡಿದೆ.

ಪ್ರತಿರೋಧದ ದನಿಗಳಿಗೆ ದನಿಯಾಗುತ್ತಿರುವ ಒಂದು ಬೌದ್ಧಿಕ ವಲಯವನ್ನು ದೇಶದ್ರೋಹಿಗಳಂತೆ ಕಾಣುವ ಈ ಪ್ರಜ್ಞಾಶೂನ್ಯ ಸಮುದಾಯವೇ ಇಂದು ಭಾರತಕ್ಕೆ ಮಾರಕವಾಗಿ ಪರಿಣಮಿಸಲಿದೆ. 70 ವರ್ಷಗಳ ಸ್ವತಂತ್ರ ಇತಿಹಾಸದಲ್ಲಿ ಭಾರತ ಎಂದೂ ಇಂತಹ ಸಮೂಹ ಸನ್ನಿಯನ್ನು ಕಂಡಿರಲಿಲ್ಲ. ಈ ಮಟ್ಟಿನ ನಿಷ್ಕ್ರಿಯತೆಯನ್ನೂ ಕಂಡಿರಲಿಲ್ಲ. ಈ ನಿಷ್ಕ್ರಿಯತೆಗೆ ತದ್ವಿರುದ್ಧವಾಗಿ ದೆಹಲಿಯ ಗಡಿಯಲ್ಲಿನ ರೈತ ಹೋರಾಟ ಉಜ್ವಲ ಭಾರತದ ಕನಸುಗಳನ್ನು ಚಿಗುರಿಸುತ್ತಿದೆ.

ಆತ್ಮನಿರ್ಭರ ಭಾರತವನ್ನು ಕಾಣುವುದೇ ಆದರೆ ನೂರು ದಿನಗಳನ್ನು ಪೂರೈಸಿರುವ ಈ ರೈತ ಹೋರಾಟದಲ್ಲಿ ಕಾಣಬೇಕಿದೆಯೇ ಹೊರತು, ಆತ್ಮವಂಚಕ ವ್ಯವಸ್ಥೆಯ ಮತ್ತು ಈ ವ್ಯವಸ್ಥೆಯ ಸಮರ್ಥಕರ ರಂಗುರಂಗಿನ ಮಾತುಗಳಲ್ಲಿ ಅಲ್ಲ.

ಪ್ರಭುತ್ವದಿಂದ ಯಾವುದೇ ಪರಿಹಾರ ಮಾರ್ಗಗಳನ್ನು ಕಾಣದೆ ಒಂದು ನ್ಯಾಯಯುತ ಜನಾಂದೋಲನ ನೂರು ದಿನಗಳನ್ನು ಪೂರೈಸುವುದು ಪ್ರಜಾತಂತ್ರ ವ್ಯವಸ್ಥೆಯ ಗೆಲುವು ಎನ್ನಬಹುದಾದರೂ, ಇದು ಆಡಳಿತ ವ್ಯವಸ್ಥೆಗೆ ನಾಚಿಕೆಗೇಡಿನ ವಿಚಾರವಾಗಬೇಕು. ಸಾರ್ವಭೌಮ ಪ್ರಜೆಗಳ ದನಿಗೆ ದನಿಯಾಗದ ಒಂದು ಆಡಳಿತ ವ್ಯವಸ್ಥೆಯ ಆತ್ಮನಿರ್ಭರತೆಯ ಮತ್ತೊಂದು ಮುಖ ಆತ್ಮವಂಚನೆಯಲ್ಲಿ ಕಾಣುವಂತಾಗಿರುವುದು ನವ ಭಾರತದ ಅತಿ ದೊಡ್ಡ ದುರಂತ. ಇದು ಶತಮಾನದ ದುರಂತವೂ ಹೌದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.

ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)

ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.

ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.

ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.

ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.

ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್‌ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.

ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.

ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 hour ago

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ...

ದಿನದ ಸುದ್ದಿ2 hours ago

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್...

ದಿನದ ಸುದ್ದಿ2 days ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ2 days ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ3 days ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ3 days ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ3 days ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

ದಿನದ ಸುದ್ದಿ5 days ago

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...

ದಿನದ ಸುದ್ದಿ6 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ6 days ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

Trending