ಅಂತರಂಗ
ರಾಜಶೇಖರ್ ಜತೆ ಒಂದು ದಿನ
- ರಹಮತ್ ತರೀಕೆರೆ, ಚಿಂತಕರು
ಖುಶವಂತ ಸಿಂಗರ `ಟ್ರೈನ್ ಟು ಪಾಕಿಸ್ತಾನ್’ ಕೃತಿ ಕುರಿತ ಸಂವಾದ ಕಾರ್ಯಕ್ರಮಕ್ಕೆಂದು ಮಂಗಳೂರಿಗೆ ಹೋದವನು, ಮಾರನೇ ದಿನ ಜಿ. ರಾಜಶೇಖರ್ ಅವರ ಮನೆಗೆ ಹೋದೆ. ಭೇಟಿಯ ನೆಪದಲ್ಲಿ ಅವರ ಸಂದರ್ಶನವನ್ನೂ ಮಾಡಬೇಕಿತ್ತು. ನಮ್ಮಿಬ್ಬರ ಭೇಟಿಗೆ ಗೆಳೆಯರಾದ ಫಣಿರಾಜ್ ಹಾಗೂ ಸಂವರ್ತ ಸಾಹಿಲ್, ಪೂರ್ವಭಾವಿ ಭೂಮಿಕೆ ಕಲ್ಪಿಸಿದ್ದರು. ನಾನು ಹೋದ ದಿನ ಉಡುಪಿಯಲ್ಲಿ ಆಗಸಕ್ಕೆ ಹುಚ್ಚು ಹಿಡಿದಂತೆ ಪ್ರಳಯಕಾಲದ ಮಳೆ. ಬಳ್ಳಾರಿಯ ಬಿಸಿಲಿನಿಂದ ಹೋಗಿದ್ದ ನಾನು ಥಂಡಿಗೆ ಥರಥರಿಸುತ್ತಿದ್ದೆ. ಆಟೊದಲ್ಲಿ ಇರುವಾಗಲೇ ಇರಿಸಲು ಬಡಿದು ಅರ್ಧ ಒದ್ದೆಯಾಗಿದ್ದೆ; ಆಟೊ ಇಳಿದು, ಗೇಟುತೆಗೆದು ಮನೆಬಾಗಿಲಿಗೆ ಹೋಗುವಷ್ಟರಲ್ಲಿ ಇನ್ನರ್ಧ ತೊಯ್ದುಹೋದೆ.
ರಾಜಶೇಖರ್ ಅವರ ಮನೆ, ಉಡುಪಿಯ ದಕ್ಷಿಣದಿಕ್ಕಿನ ಅಂಚಿನಲ್ಲಿರುವ ಕೊಳಂಬೆ ಪ್ರದೇಶದಲ್ಲಿದೆ; ನೀರು ಜುಳುಜುಳಿಸುವ ತೋಡುಗಳೂ ಹಸಿರುಹೊಮ್ಮಿಸುವ ಭತ್ತದ ಗದ್ದೆಗಳೂ ಕಂಗು-ತೆಂಗಿನ ತೋಟಗಳೂ ಅದನ್ನು ಸುತ್ತುವರೆದಿವೆ. ಹಾಡುಹಗಲೇ ಜೀರುಂಡೆಯ ಜೀಕಾರವೂ ನವಿಲಿನ ಪರಾಕೂ ಅಲ್ಲಿ ಕೇಳಿಸುತ್ತದೆ. ಕಾಂಪೌಂಡಿನ ಗೋಡೆಯ ಮೇಲೆ ಹಸಿರುಪಾಚಿ ಹಬ್ಬಿಕೊಂಡು ನಡುನಡುವೆ ಫರ್ನ್ ಸಸ್ಯಗಳು ಬೆಳೆದಿವೆ; ಇನ್ನು ಕಾಂಪೌಂಡಿನೊಳಗೆ ಬೆಳೆದಿದ್ದ ಹೂಗಿಡಗಳ ಹಳುವಿನಲ್ಲಂತೂ, ಒಂದು ಹುಲಿ ಆರಾಮಾಗಿ ಅಜ್ಞಾತವಾಸ ಮಾಡಬಹುದಿತ್ತು. ನಾನು ಸೋಜಿಗದಿಂದ ಅವನ್ನೆಲ್ಲ ನೋಡುವಾಗ, ರಾಜಶೇಖರ್ ಸಂಕೋಚ ಬೆರೆತ ಅಭಿಮಾನದಿಂದ “ಇದು ಆರ್ಡರ್ ಇನ್ ಡಿಸ್ಆ ರ್ಡರ್” ಎಂದು ವರ್ಣಿಸಿದರು.
ಅದೊಂದು ಚಿಕ್ಕಮನೆ; ಹಾಲಿನ ಮೂಲೆಯಲ್ಲಿ ಮೇಜು; ಬಗಲಿಗೇ ಒಟ್ಟಿದ ಪುಸ್ತಕರಾಶಿ. ಇನ್ನೊಂದು ಮೂಲೆಯ ಗೂಡಿನಲ್ಲಿ ಆಂಜನೇಯನ ಚಿತ್ರಪಟ. ಅದರ ಮುಂದೆ ಅವರ ಹೆಂಡತಿ ಸುಮತಿ, ಪೂಜೆ ಮಾಡಿದ ಕುರುಹು. ಅದನ್ನು ನೋಡುತ್ತ ನನಗೆ ಕಾರಂತರ`ಅಳಿದಮೇಲೆ’ ನೆನಪಾಯಿತು. ಅದು ರಾಜಶೇಖರ್ ಬಹಳ ಆಸ್ಥೆಯಿಂದ ಮತ್ತೆಮತ್ತೆ ವಿಶ್ಲೇಷಣೆ ಮಾಡಿರುವ ಕಾದಂಬರಿ. ‘ನಾವು ವೈಯಕ್ತಿಕವಾಗಿ ನಾಸ್ತಿಕರಾಗಿರಬಹುದು. ಆದರೆ ಇಂಟಿಗ್ರಿಟಿಯುಳ್ಳ ಆಸ್ತಿಕರ ಶ್ರದ್ಧೆಯನ್ನು ಗೌರವಿಸುವುದು ಒಂದು ದೊಡ್ಡಮೌಲ್ಯ’ ಎಂದು ಪ್ರತಿಪಾದಿಸುವ ಕೃತಿ.
ನಮ್ಮ ಮಾತುಕತೆಯದ್ದಕ್ಕೂ ಸೋನೆ ಶೃತಿ ಹಿಡಿದಿತ್ತು. ಸುಮತಿಯವರು ನನಗೆ ಬಿಸಿಬಿಸಿ ಅನ್ನ ಸಾರು, ಹುರಿದ ಹಪ್ಪಳ, ಕುಂದಾಪುರ ಕಡೆಯ ಉಪ್ಪಿನಕಾಯಿಯ ಊಟ ಬಡಿಸಿದರು; ನಡುನಡುವೆ ರಾಜಶೇಖರ್ `ನಮ್ಮನೇಲಿ ಯಾರಿಗೂ ಒಳ್ಳೇ ಟೀ ಮಾಡೋಕೆ ಬರೋಲ್ಲಾರಿ; ನಾನೇ ಮಾಡಬೇಕು. ಅಣ್ಣನಿಗೆ (ಮಗ ವಿಷ್ಣುವಿಗೆ ಅವರು ಕರೆಯುವುದು ಹಾಗೆ.) ಈಗ ಟೀಬೇಕು’ ಎಂದು ಎದ್ದುಹೋಗಿ, ಕೈಯಾರೆ ಟೀಮಾಡಿ ತರುತ್ತಿದ್ದರು; ಅವರ ಕೈಚಹ ಕುಡಿಯಲು `ಅಪ್ಪ ಟೀ ಚೆಂದ ಮಾಡ್ತಾರೆ’ ಎಂದು ವಿಷ್ಣು ಕಣ್ಣುಮಿಟುಕಿಸಿ ಪುಸಲಾಯಿಸುತ್ತಿದ್ದರು.
ನಾನು ರಾಜಶೇಖರ್ ಅವರನ್ನು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹತ್ತಾರು ಸಲ ಕಂಡಿದ್ದೇನೆ. ಯಾವಾಗಲೂ ಅವರ ಚಹರೆ ಸರಿಸುಮಾರು ಒಂದೇ ತರಹ; ಹೇಗೆಂದರೆ-ತುಸು ಬಿಗಿದುಕೊಂಡ ಮುಖ; ಹಳೇಮಾದರಿಯ ದಪ್ಪ ಫ್ರೇಮಿನ ಕನ್ನಡಕದೊಳಗೆ ತೀಕ್ಷ್ಣನೋಟ ಹರಿಸುವ ಗಾಬರಿಗೊಂಡಂತೆ ತೋರುವ ಕಣ್ಣು; ಸರಿಯಾಗಿ ಬಾಚದ ತಲೆಗೂದಲು; ಕಪ್ಪು ಚೌಕಳಿಯ ಶರ್ಟು. ಆರ್ಡರ್ ಇನ್ ಡಿಸಾರ್ಡರ್. ಹಾಲಿನ ಇನ್ನೊಂದು ಭಾಗದಲ್ಲಿ ಅವರು ಹೆಂಡತಿ ಜತೆ ತೆಗೆಸಿಕೊಂಡ ಎರಡು ಚಿತ್ರಪಟಗಳಿದ್ದವು. ಒಂದು-ಮದುವೆಯಾದ ಹೊಸತರಲ್ಲಿ ತೆಗೆಸುಕೊಂಡಿದ್ದು. ನಗುಮುಖದ ಯುವಕನ ಸೌಮ್ಯತೆ ಲಾಸ್ಯವಾಡುತ್ತಿದೆ. ಇನ್ನೊಂದು-ನಿವೃತ್ತಿಯ ದಿನ ತಾಂತ್ರಿಕ ಕಾರಣಕ್ಕೆ ತೆಗೆಸಿಕೊಂಡಿದ್ದಿರಬೇಕು- ನೆರಿಗೆ ಸಡಿಲಗೊಂಡಿರದ ಬಿಗುಮುಖ ಗುರುಗುಟ್ಟುತಿದೆ.
ರಾಜಶೇಖರರ ಮುಖದ ಚಿಂತನಶೀಲ ಗಾಂಭೀರ್ಯಕ್ಕೆ ಅವರ ಸ್ವಭಾವದಲ್ಲಿ ಅರ್ಧ ಕಾರಣವಿದ್ದರೆ, ಅವರ ಹೆಚ್ಚಿನ ಕಾರ್ಯಕ್ರಮಗಳೆಲ್ಲ ಪ್ರತಿಭಟನೆಗೆ ಸಂಬಂಧಿಸಿದವೇ ಆಗಿರುವುದು ಇನ್ನರ್ಧ ಕಾರಣ. ಅವರ ನನ್ನ ಮೊದಲ ಭೇಟಿ ನೆನಪಾಗುತ್ತಿದೆ. ಮಡಿಕೇರಿಯಲ್ಲಿ ಪಟ್ಟಾಭಿರಾಮ ಸೋಮಯಾಜಿಯವರು ಸಂಘಟಿಸಿದ್ದ ಕಾರ್ಯಕ್ರಮವದು. ರಾಜಶೇಖರ ಅವರನ್ನು ಮೊದಲ ಸಲ ಕಾಣುವ ಪುಳಕದಲ್ಲಿ ನಾನು ಭೇಟಿಯಾದೆ. ಅವರು ಕೈಕುಲುಕಿ ನಿರ್ಭಾವುಕವಾಗಿ `ಹ್ಞಾ! ಯಾವಾಗ ಬಂದ್ರಿ?’ ಎಂಬ ವಾಕ್ಯಬಿಟ್ಟರೆ ಹೆಚ್ಚೇನೂ ಆಡಲಿಲ್ಲ. ನನಗೆ ತುಸು ನಿರಾಶೆಯಾಗಿತ್ತು. ಬಹುಶಃ ಅವರು ಅಂದಿನ ಕಾರ್ಯಕ್ರಮದ ಬಗ್ಗೆ ತವಕಿತರಾಗಿದ್ದರು. ಕಾರಣ, ಕಾರ್ಯಕ್ರಮ ತಡೆಯಲು ಎದುರಾಳಿಗಳು ಭಯಂಕರ ತಯಾರಿ ಮಾಡಿಕೊಂಡಿದ್ದರಿಂದ, ವಾತಾವರಣ ಬಿಗುವಾಗಿತ್ತು. ಪೋಲಿಸರ ಸಂಖ್ಯೆ ನಮ್ಮನ್ನು ಮೀರಿಸುವಷ್ಟಿತ್ತು. ರಾಜಶೇಖರರ ಆತಂಕ ನಿಜವಾಗುವಂತೆ ಅಂದಿನ ಕಾರ್ಯಕ್ರಮ ನಡೆಯಲಿಲ್ಲ. ನಾವೆಲ್ಲ ಪೆಟ್ಟುತಿನ್ನದೇ ಮರಳಿದ್ದೇ ದೊಡ್ಡ ಸಂಗತಿ.
ನಾನು ಮಾತುಕತೆಗೆ ಮನೆಗೆ ಹೋದ ದಿನ ಅವರು, ಕರಿಬಿಳಿಯ ಉದ್ದಗೆರೆಯಿರುವ ಅಂಗಿ ಹಾಗೂ ಆಗಸನೀಲಿಯ ಚೌಕುಳಿಲುಂಗಿ ಧರಿಸಿದ್ದರು. ವಯಸ್ಸಿನ ಕಾರಣದಿಂದ ದೇಹ ನಸುಬಾಗಿತ್ತು. ಆದರೆ ಲವಲವಿಕೆಯಿತ್ತು. ನಾಲ್ಕೈದು ತಾಸು ಕಾಲ, ಸಾಹಿತ್ಯದ ಬಗ್ಗೆ, ಭಾರತದ ರಾಜಕೀಯ ವಿದ್ಯಮಾನಗಳ ಬಗ್ಗೆ, ಒಳನೋಟಗಳಿಂದ ಕೂಡಿದ ಮಾತುಕತೆಯನ್ನು ನಡೆಸಿಕೊಟ್ಟರು. ನಾನು ಕಳೆದ ೨೫ ವರುಷಗಳಲ್ಲಿ ಮಾಡಿದ ಅತ್ಯತ್ತಮ ಸಂದರ್ಶನವದು. ಇದು ‘ನ್ಯಾಯ ನಿಷ್ಠುರಿಗಳ ಜತೆಯಲ್ಲಿ’ ಸಂಪುಟದಲ್ಲಿ ಅಚ್ಚಾಯಿತು.
ಎದುರು ನಾನೊಬ್ಬನೇ ಇದ್ದರೂ, ರಾಜಶೇಖರ್ ದೊಡ್ಡಸಭೆಯನ್ನು ಸಂಬೋಧಿಸುವಂತೆ ಏರುದನಿಯಲ್ಲಿ ಮಾತಾಡುತ್ತಿದ್ದರು; ಮತೀಯ ರಾಜಕಾರಣದ ಚರ್ಚೆ ಬಂದಾಗಲೆಲ್ಲ ಉದ್ವಿಗ್ನತೆಯಿಂದ ಅವರ ದನಿ ವ್ಯಗ್ರಗೊಳ್ಳುತ್ತಿತ್ತು. ಆದರೆ ಹುಟ್ಟೂರಾದ ಗುಂಡ್ಮಿ, ತಮ್ಮ ಬಾಲ್ಯ, ತಾಯಿ, ತಂದೆ, ಅಲ್ಲಿನ ಪರಿಸರ, ಅಡುಗೆ ಇತ್ಯಾದಿ ವಿಷಯ ಬಂದಾಗ, ದನಿ ಮೃದುಗೊಂಡು ಆಪ್ತತೆ ತನ್ಮಯತೆ ಪಡೆಯುತ್ತಿತ್ತು-ಕುವೆಂಪು ಮಲೆನಾಡಿನ ವಿಷಯ ಬಂದರೆ ಭಾವುಕರಾಗುವ ಹಾಗೆ. ಬದುಕಿನ ಸಣ್ಣಸಂಗತಿಗಳಿಗೆ ಮಿಡಿಯುವ ಅವರ ಆಸ್ಥೆ ಮತ್ತು ಜೀವನ ಪ್ರೀತಿಗಳು, ಅವರಲ್ಲಿರುವ ಪ್ರತಿರೋಧ ಪ್ರಜ್ಞೆಯಷ್ಟೇ ತೀವ್ರವಾಗಿದ್ದವು.
ರಾಜಶೇಖರ್ ಆದಿನ ಒಳ್ಳೇ ಮೂಡಲ್ಲಿದ್ದರು. ಅವರಲ್ಲಿರುವ ಹಾಸ್ಯಪ್ರಜ್ಞೆ ಸುಳಿಸುಳಿಯಾಗಿ ಹೊರಹೊಮ್ಮುತಿತ್ತು. ಅವರು ಸಾಮಾನ್ಯವಾಗಿ ಉಡುಪಿ ಬಿಟ್ಟು ಹೆಚ್ಚು ಹೊರ ಹೋದವರಲ್ಲ. ಉಡುಪಿಯ ಜತೆ ಅವರಿಗೆ ಆಪ್ತವಾದ ಗಾಢವಾದ ನಂಟಿತ್ತು. ಹಿಂದೊಮ್ಮೆ ನನ್ನ ಗುರುಗಳಾದ ಪುಣೇಕರ್ ಅವರು ಉಡುಪಿಯಲ್ಲಿ ವಾಸವಿದ್ದ ವಿಷಯ ಪ್ರಸ್ತಾಪಕ್ಕೆ ಬಂತು. ಆಗ ರಾಜಶೇಖರ್ ಹೇಳಿದರು: “ಅವರು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿದ್ದು ಗೊತ್ತಲ್ಲ? ಅವರಿದ್ದ ಮನೆಯಲ್ಲಿಯೇ ಅಡಿಗರು ಇದ್ರು. ಅದೊಂದು ಹಳೇ ಕಾಲದ ಮನೆ. ಅದರ ಎದುರು ಒಂದಿಷ್ಟು ಖಾಲಿ ಜಾಗ ಇತ್ತು. ಅದನ್ನು ಹಾಗೇ ಹಾಳು ಬಿಟ್ಟಿದ್ರು. ಪುಣೇಕರ್ ಆಗಲಿ, ಅವರ ನಂತರ ಬಂದ ಅಡಿಗರಾಗಲಿ, ಇವರಿಬ್ಬರಿಗಿಂತ ಮೊದಲಿದ್ದ ವಿ.ಎಂ.ಇನಾಂದಾರ್ ಆಗಲಿ, ಮೂರೂ ಪುಣ್ಯಾತ್ಮರು ಒಂದು ಗಿಡಾನೂ ಅಲ್ಲಿ ನೆಡಲಿಲ್ಲ. ಆ ಮನೆಗೊಂದು ಮೊಗಸಾಲೆ ಇತ್ತು. ಅಲ್ಲಿ ಈ ಮೂವರು ಸಂಜೆ ವಿರಾಜಮಾನರಾಗಿರುತ್ತಿದ್ದರು. ಅಡಿಗರಂತೂ ಒಂದಾದ ಮೇಲೊಂದು ಸಿಗರೇಟ್ ಸುಡ್ತಾ ಇದ್ದರು.” ಮಾತಿನ ಮಧ್ಯೆ ಕೆಲವು ಪತ್ರಿಕೆಗಳ ವಿಷಯ ನುಸುಳಿತು. “ನಾನು ಅವನ್ನು ಓದುವುದಿಲ್ಲ” ಎಂದೆ. ಅವರು ತುಸು ಅಸೂಯೆಯಿಂದ “ನೀವು ಅದೃಷ್ಟವಂತರು ಕಂಡ್ರಿ. ದಾರೀಲಿ ನಡೀವಾಗ ಸೈಡಲ್ಲಿ ಬಿದ್ದಿರೋ ಮಲಕ್ಕೆ ಬೇಡವೆಂದೂ ನಮ್ಮ ದೃಷ್ಟಿಹೋಗುತ್ತೆ” ಎಂದು ಸ್ವಗೇಲಿ ಮಾಡಿಕೊಂಡರು.
ರಾಜಶೇಖರ್ ಗೆ, ಸಾಹಿತ್ಯ ಕ್ಷೇತ್ರದಾಚೆ ಇರುವ ಸಾರ್ವಜನಿಕ ವ್ಯಕ್ತಿಗಳ ಬರೆಹ-ಮಾತುಗಾರಿಕೆ ಬಗ್ಗೆ ಬಹಳ ಆಸಕ್ತಿಯಿತ್ತು “ನೀವು ಗದುಗಿನ ತೋಂಟದಾರ್ಯ ಸ್ವಾಮಿಗಳ ಭಾಷಣದಿಂದ, ಅದರಲ್ಲೂ ಅವರ ಕನ್ನಡದಿಂದ ಬಹಳ ಪ್ರಭಾವಿತರಾಗಿದ್ದಿರಿ ಅಂತ ಕೇಳೀದೀನಿ. ಯಾವ ಸನ್ನಿವೇಶ ಅದು?” ಎಂದು ಕೇಳಿದೆ. “ ತೋಂಟದಾರ್ಯ ಸ್ವಾಮಿಗಳೂ, ನಿಡುಮಾಮಿಡಿ ಸ್ವಾಮಿಯವರೂ ಮತ್ತು ನಾನೂ, ಮಂಗಳೂರಿನ ಕೋಮು ಸೌಹಾರ್ದ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯಲ್ಲಿದ್ದೆವು. ಇಬ್ಬರದೂ ಒಂದು ಜುಗಲಬಂದಿ ನಡೀತು ಸ್ವಲ್ಪಹೊತ್ತು-‘ಎಷ್ಟು ಸೊಗಸಾಗಿ ಮಾತಾಡಿದಿರಿ ತಾವು’ ಅಂತ ಒಬ್ಬರು. ‘ಇಲ್ಲಿಲ್ಲ. ತಾವು ತುಂಬ ಚೆನ್ನಾಗಿ ಮಾತಾಡಿದಿರಿ’ ಅಂತ ಇನ್ನೊಬ್ಬರು. ಅದರೆ ಇಬ್ಬರೂ ಸೊಗಸಾಗಿ ಮಾತಾಡಿದ್ದರು. ಗದುಗಿನ ಸ್ವಾಮಿಗಳಂತೂ ಬಹಳ ಸಹಜವಾಗಿ ಮಾತಾಡಿದ್ದರು” ಎಂದು ಸಂತೋಷದಲ್ಲಿ ನೆನೆದರು.
ಹಳೇ ಉಡುಪಿ ಶಹರಿನ ಚಹರೆ ಚರ್ಚೆಗೆ ಬಂತು. ಆಗ ರಾಜಶೇಖರ್ ಬನ್ನಂಜೆಯಲ್ಲಿದ್ದ ಒಂದು ಗುಡಿಯನ್ನು ನೆನೆಸಿಕೊಂಡು ನುಡಿದರು: “ಅಲ್ಲೊಂದು ಬಹಳ ಸುಂದರವಾದ ದೇವಸ್ಥಾನ ಇತ್ತು. ಸರಳವಾದ ಜಾಮಿಟ್ರಿಕಲ್ ಆದ ವಾಸ್ತು ಅದು. ಈಗ ಆ ಟೆಂಪಲ್ನ ವರಿಗೆ ಬುದ್ಧಿ ಬಂದು, ಅದರ ಮೂಲ ಆಕೃತಿ ಮರವೆ ಆಗುವ ಹಾಗೆ ಸುತ್ತ ಒಂದು ತಗಡಿನ ಚಪ್ಪರ ಎಬ್ಬಿಸಿ, ಅದರ ಎದುರುಗಡೆ ಶಿಲೆಯ ಕಾಂಕ್ರೀಟಿನಲ್ಲಿ ಏನೆಲ್ಲವನ್ನು ಮಾಡಬಹುದೊ ಅದನ್ನೆಲ್ಲ ಮಾಡಿದಾರೆ” ಎಂದರು. ಮಸೀದಿ ಕೆಡವಿ ಗುಡಿ ಕಟ್ಟುವುದನ್ನು ಸಾಂಸ್ಕøತಿಕ ಅಪಚಾರವೆಂದು ಭಾವಿಸಿರುವ ಚಿಂತಕನಿಗೆ, ತನ್ನೂರಿನ ಗುಡಿಯ ವಾಸ್ತುವಿನ ಬಗ್ಗೆ ಇದ್ದ ಆಸಕ್ತಿ ಪ್ರೀತಿ ಸೋಜಿಗ ಹುಟ್ಟಿಸಿತು. ಚಿಕ್ಕಮಗಳೂರಿನಲ್ಲಿ ನಡೆದ ಬಾಬಾಬುಡನಗಿರಿ ಕುರಿತ ಕಾರ್ಯಕ್ರಮದಲ್ಲಿ, ಶಬನಂ ವೀರಮಾನ್ವಿ ಹಾಡಿದ ಕಬೀರ್ ಭಜನನ್ನು ಕೇಳಿ ಅವರು `ಹಾ! ಎಂಥಾ ಎನರ್ಜಿ ಮತ್ತು ತನ್ಮಯಗೊಳಿಸುವ ಶಕ್ತಿಯಿದೆ ಈ ಕಂಠಕ್ಕೆ’ ಎಂದು ಆನಂದಪಟ್ಟಿದ್ದನ್ನು ನೆನೆಸಿಕೊಂಡೆ.
ನಾಸ್ತಿಕರು ಅಥವಾ ಕೋಮುವಾದ ಮೂಲಭೂತವಾದ ವಿರೋಧ ಮಾಡುವವರು, ಜನತೆಯ ಧಾರ್ಮಿಕ ಲೋಕಗಳ ಬಗ್ಗೆ ಗೌರವವುಳ್ಳವರು; ಅಲ್ಲಿರುವ ಕಲೆ ಸೌಂದರ್ಯಗಳ ಬಗ್ಗೆ ಪ್ರೀತಿಯುಳ್ಳವರು- ಎಂದರೆ ಕೆಲವರು ನಂಬುವುದಿಲ್ಲ. ಶಕ್ತಿ ರಾಜಕಾರಣವು ಧರ್ಮವನ್ನು ತನ್ನ ಹತ್ಯಾರದಂತೆ ಬಳಸುವುದನ್ನು ವಿರೋಧಿಸುವುದು ಬೇರೆ: ನಿತ್ಯ ಜೀವನದಲ್ಲಿ ಸಾಮಾನ್ಯ ಜನ ಬದುಕುವ ಧರ್ಮವನ್ನು ಮನ್ನಿಸುವುದು ಬೇರೆ ಎಂದರೆ, ಅವರಿಗೆ ಅರ್ಥವಾಗುವುದಿಲ್ಲ. ಅರ್ಥವಾಗುವ ಕೆಲವರು ಇವುಗಳ ನಡುವಿನ ಫರಕನ್ನು ಉದ್ದೇಶಪೂರ್ವಕವಾಗಿ ಮರೆಯಿಸಿ, ‘ವಿಚಾರವಾದಿ’ ‘ಬುದ್ಧಿಜೀವಿ’ ಲೇಖಕರು’ ಎಂಬುವರನ್ನು ‘ಸಮಾಜದ ಕ್ಷೇಮಕ್ಕಾಗಿ ನಿವಾರಿಸಬೇಕಾದ ಪೀಡೆಗಳು’ ಎಂಬ ಗೊಂದಲದ ಸನ್ನಿವೇಶವನ್ನು ನಿರ್ಮಾಣ ಮಾಡಿರುವರು.
ಈ ಸನ್ನಿವೇಶವೇ ಲೇಖಕರ ಹತ್ಯೆಗಳಿಗೂ ಕಾರಣವಾಗುತ್ತಿದೆ. ಆದರೆ ನಿಜವಾದ ವಿಚಾರವಾದವು, ಧರ್ಮದ ಹೆಸರಲ್ಲಿರುವ ಮತೀಯ ರಾಜಕಾರಣವನ್ನು ನಿರಾಕರಿಸುತ್ತಲೇ, ಪರಂಪರೆಯಿಂದ ಬಂದ ಜೀವನ ಕ್ರಮಗಳ ಬಗ್ಗೆ, ಅದು ಸೃಷ್ಟಿಮಾಡಿರುವ ಅಡುಗೆ, ವಾಸ್ತು, ಇತ್ಯಾದಿ ಕ್ಷೇತ್ರಗಳಲ್ಲಿರುವ ಕುಶಲತೆ ಬಗ್ಗೆ ಅಪಾರ ಶ್ರದ್ಧೆ ತೋರುತ್ತದೆ. ಇದು ಕಾರಂತ ಕುವೆಂಪು ಅವರಿಂದ ಕನ್ನಡದಲ್ಲಿ ಹರಿದು ಬಂದಿರುವ ಪರಂಪರೆ. ಲೋಹಿಯಾ ಅವರು ಮಹಾನ್ ವಿಚಾರವಾದಿ. ಆದರೆ ಅವರ `ರಾಮಕೃಷ್ಣಶಿವ’ ಲೇಖನ ಸಾಂಸ್ಕøತಿಕ ಆಸ್ಥೆಯಿರುವ ಮನಸ್ಸು ಮಾತ್ರ ಬರೆಯುವಂಥದ್ದು. ರಾಜಶೇಖರ್ ಇಂಥಾ ಪರಂಪರೆಗೆ ಸೇರಿದ ಚಿಂತಕರು.
ರಾಜಶೇಖರ್ ಜೀವವಿಮಾ ಕಛೇರಿಯಲ್ಲಿ ಸಹಾಯಕರಾಗಿ ಸೇವೆ ಸಲ್ಲಿಸಿದವರು. ಕಳೆದ ದಶಕದಿಂದ ಕೋಮಸೌಹಾರ್ದ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದ ಅವರು, ಜೀವಮಾನ ಉದ್ದಕ್ಕೂ ಬೇರೆಬೇರೆ ಜನಪರ ಚಳುವಳಿಗಳ ಭಾಗವಾದವರು; ಸಾವಿರಾರು ಬೀದಿಭಾಷಣಗಳನ್ನು ಮಾಡಿದವರು. ಅವರ ವಿಮರ್ಶೆ ಓದುವುದು ಮತ್ತು ಭಾಷಣ ಕೇಳುವುದು ಎಂದರೆ, ಸಾಹಿತ್ಯವನ್ನೂ ಅದರ ಘನತೆಯಲ್ಲಿ, ಸಮಾಜವನ್ನು ಅದರ ಸಂಕೀರ್ಣತೆಯಲ್ಲಿ, ಅರಿಯುವ ಕ್ರಮವೇ ಆಗಿದೆ. ಅವರ ಚಿಂತನೆ ಮತ್ತು ಭಾಷೆಗಳಲ್ಲಿರುವ ತೀಕ್ಷ್ಣತೆಗೂ ವ್ಯಕ್ತಿತ್ವದಲ್ಲಿರುವ ತಳಮಳಿಕೆಗೂ ಕಾರಣ, ಅವರ ಸೂಕ್ಷ್ಮಸಂವೇದನೆ ಮಾತ್ರವಲ್ಲ, ಹಾಲಿ ಕರಾವಳಿ ಕರ್ನಾಟಕದ ಪ್ರಕ್ಷುಬ್ಧ ಸನ್ನಿವೇಶ ಕೂಡ.
ಮಾತುಕತೆಯಲ್ಲಿ ನಾನು ಕೇಳುತ್ತಿದ್ದ ಪ್ರಶ್ನೆಗಳಿಗೆ ಅವರು ಬಹಳ ಸಲ `ನನಗೆ ಗೊತ್ತಿಲ್ಲ’ ಎಂದು ವಿವರಣೆ ಶುರುಮಾಡುತ್ತಿದ್ದರು. ಆದರೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಅವರಷ್ಟು ಓದಿದವರು ಕನ್ನಡದಲ್ಲಿ ಕಡಿಮೆ. ಅವರಷ್ಟು ಆಳವಾದ ವ್ಯಾಪಕವಾದ ಓದನ್ನು ವಿಶ್ವವಿದ್ಯಾಲಯಗಳಲ್ಲಿರುವ ನಾವು ಮಾಡಿದ್ದರೆ, ನಮ್ಮ ವಿದ್ಯಾರ್ಥಿಗಳು ಏನೇನಾಗಿರುತ್ತಿದ್ದರೊ? ಆ ದಿನದ ಮಾತುಕತೆಯಲ್ಲಿ ನನಗೆ ಅವರು ಆಂಗ್ಲ ಶಿಕ್ಷಕರಾಗಿದ್ದ ಸಂಗತಿ ಆಕಸ್ಮಿಕವಾಗಿ ತಿಳಿಯಿತು. ಅವರ ಇಂಗ್ಲೀಶ್ ಓದು ಕೂಡ ವ್ಯಾಪಕ.
ಅವರೊಬ್ಬ ಅದ್ಭುತ ಕನ್ನಡ ಗದ್ಯಕಾರ. ಕನ್ನಡದಲ್ಲಿ ಅವರಂತೆ ಮುಕ್ಕಾಗದ ನೈತಿಕ ಪ್ರಜ್ಞೆ ಮತ್ತು ಧೀಮಂತಿಕೆಯುಳ್ಳ ಚಿಂತಕರು ವಿರಳ. ಕನ್ನಡ ಬರೆಹದಲ್ಲಿರುವ ಜಡತೆ ಮತ್ತು ಲಯಗೇಡಿತನ ಕಂಡಾಗಲೆಲ್ಲ ಹರಿಹಾಯುತ್ತಿದ್ದ ಲಂಕೇಶ್, ತಮ್ಮ ಸಾಯುವ ಕೊನೆಯ ಕ್ಷಣಗಳಲ್ಲಿ ಬರೆದ ಟಿಪ್ಪಣಿ, ರಾಜಶೇಖರ ಅವರ ಪ್ರಾಂಜಲವಾದ ಕನ್ನಡವನ್ನು ಕುರಿತಾಗಿತ್ತು. ಬಾಳಿಡೀ ಪ್ರತಿರೋಧ ಮತ್ತು ಆಕ್ಟಿವಿಸಂನಿಂದ ಜಗಜಗಿಸಿದ ರಾಜಶೇಖರ್ ಅವರಲ್ಲಿ, ಮತೀಯವಾದವು ದೇಶವನ್ನು ಈ ಪರಿಯಲ್ಲಿ ಆವರಿಸಿಕೊಂಡಿರುವ ಬಗ್ಗೆ ನಿರಾಶೆಯಿತ್ತು; ಅವರು ಮತ್ತಷ್ಟು ಹತಾಶೆಯ ಗಳಿಗೆಗಳಿಗೆ ತಮ್ಮನ್ನು ಸಿದ್ಧಗೊಳಿಸಿಕೊಳ್ಳುತ್ತಿದ್ದಾರೆ ಎಂದೂ ಅನಿಸಿತು. ಒಳ್ಳೆಯ ಮಾತುಗಾರರಾದ ಅವರು, ಮಾತು ಮತ್ತು ಬರೆಹದ ನಿಷ್ಫಲತೆಯನ್ನೂ ಅರಿತವರು. ಸದ್ಯದ ಚಾರಿತ್ರಿಕ ಸನ್ನಿವೇಶವೇ ಅವರ ಬರೆಹ ಮತ್ತು ಮಾತಿಗೆ ತೀವ್ರತೆಯನ್ನೂ ವಿಷಾದದ ಗುಣವನ್ನೂ ತಂದುಕೊಟ್ಟಂತೆ ತೋರಿತು.
“ನೀವು ಅಷ್ಟೊಂದು ಬೀದಿಭಾಷಣ ಮಾಡಿದವರು. ಆದರೆ ಸೆಮಿನಾರುಗಳಲ್ಲಿ ಬರಕೊಂಡು ಬಂದು ಮಾತಾಡ್ತೀರಲ್ಲ, ಯಾಕೆ?” ಎಂದೆ. “ಎಕ್ಸಟೆಂಪರ್ ಮಾತಾಡೋ ಧೈರ್ಯವೇ ಇಲ್ಲ ನನಗೆ. ಮೈಕ್ ಮುಂದೆ ನಿಂತು ಮಾತಾಡುವಾಗ ಯೋಚನೆ ಮಾಡಿಕೊಂಡು ಬಂದಿದ್ದ ಮಾತೆಲ್ಲ ಮರೆತೇ ಹೋಗುತ್ತೆ. ನನಗೆ ಅಲ್ಲಲ್ಲೇ ನಿಂತುಗೊಂಡು ಸೃಷ್ಟಿ ಮಾತಾಡೋವಷ್ಟು ಸೃಜನಶೀಲತೆ ಇಲ್ಲ. ಕಿ.ರಂ. ಮಾಡ್ತಿದ್ದರಂತೆ ಅದನ್ನ. ಕಿ.ರಂ. ಭಾಷಣ ಮಾಡೋಕೆ ಪುಟಗಟ್ಟಲೆ ನೋಟ್ಸ್ ಮಾಡ್ಕೊಂಡು ಹೋಗ್ತಾರೆ. ಮೈಕ್ ಮುಂದೆ ನಿಂತುಕೊಳ್ತಾರೆ.
ಆಮೇಲೆ ಅದನ್ನು ನೋಡೋದೇ ಇಲ್ಲವಂತೆ. ಮಾಡ್ಕೊಂಡಿರೋ ನೋಟ್ಸೇ ಬೇರೆ; ಎದುರುಗಡೆ ಬಂದು ಹೇಳೋದೇ ಬೇರೆ. ಆ ತರಹದ ಕುಶಲತೆ ನನ್ನ ಹತ್ತರ ಇಲ್ಲ. ಮಾತಿಗೆ ತಡವರಿಸೋದೇ ಜಾಸ್ತಿ. ಸುಮಾರಷ್ಟು ಡಿಸಾಸ್ಟರಸ್ ಎಕ್ಸ್ ಪೀರಿಯನ್ಸ್ ಆಗಿವೆ ನನಗೆ” ಎಂದರು. “ನೀವು ಮೇನ್ ಸ್ಟ್ರೀಂ ಪತ್ರಿಕೆಗಳಲ್ಲಿ ಯಾಕೆ ಬರೆಯೋಲ್ಲ?” ಎಂದೆ. “ನಾನು ಬರೆದಿದ್ದನ್ನು ಅವರು ಹಾಕುವುದಿಲ್ಲ. ನಾನು ಹಿಂದೆ ಬರೆಯುತ್ತಿದ್ದುದು `ಲಂಕೇಶ್ ಪತ್ರಿಕೆ’ಗೆ; ನಂತರ ‘ಗೌರಿಲಂಕೇಶ್’ಗೆ. ಈಗ ಎರಡೂ ಇಲ್ಲ. ನನಗೆ ಬರೆಸುವವರ ಪ್ರಚೋದನೆಯೇ ಇಲ್ಲವಾಗಿದೆ” ಎಂದು ಜವಾಬಿಸಿದರು.
ಹೊರಡುವಾಗ ಅವರ ಜತೆ ನಿಂತು ಫೋಟೊ ತೆಗೆಸಿಕೊಂಡೆ. ಅವರನ್ನು ನಗಿಸಬೇಕೆಂದು ನಾನೂ ವಿಷ್ಣುವೂ ಯತ್ನಿಸಿದೆವು. ತುಸುವೇ ತುಟಿ ಅರಳಿಸಿದರು. ಆಹೊತ್ತಿಗೆ ಮಳೆನಿಂತಿತ್ತು. ಆಗಸ ಹೊರಪಾಗಿತ್ತು. ಬರುತ್ತ ಅವರ ಕಾನನ ಸದೃಶ ಹಿತ್ತಲಿನಿಂದ ಒಂದು ಹೂಗಿಡದ ಸಸಿಯನ್ನು ಹಿಡಿದುಕೊಂಡು ಬಂದೆ.
ತಲ್ಲೂರು ಪ್ರತಿಷ್ಠಾನದ ಉಪನ್ಯಾಸ ಮಾಲೆಯಲ್ಲಿ, ‘ಬಹುತ್ವದ ಬಹುಮುಖಗಳು’ ವಿಷಯ ಕುರಿತು ಮಾತಾಡಲು ಉಡುಪಿಗೆ ಹೋಗಿದ್ದೆ. ಅಲ್ಲಿಗೆ ಹೋದಾಗಲೆಲ್ಲ ನನ್ನ ಪ್ರಿಯ ಚಿಂತಕರಾದ ಜಿ.ರಾಜಶೇಖರ ಅವರನ್ನು ಕಾಣುವ, ಚರ್ಚಿಸುವ ಇರಾದೆಯೂ ಇರುತ್ತಿತ್ತು. ನನ್ನ ಉಪನ್ಯಾಸವನ್ನು ಅವರಿಗೆ ಅರ್ಪಿಸಿ ಮಾತಾಡಿದೆ. ಮಾತು ಮುಗಿಯುವಾಗ ಅವರೇ ಸಭಾಂಗಣಕ್ಕೆ ಬಂದರು. ನನ್ನ ಓದು ಬರೆಹಗಳ ಮೇಲೆ ತುಂಬ ಪ್ರಭಾವ ಬೀರಿದ ಅವರನ್ನು ಈ ಹಿಂದೆ ಮುಖಾಮುಖಿ ಮಾಡುವಾಗೆಲ್ಲ, ಗುರುವಿನ ಮುಂದೆ ಕೂತಾಗಿನ ಆದರ ಅಳುಕು ವಿಸ್ಮಯ. ಈಗ ಒಂದು ಮಗುವಿನ ಮುಂದೆ ಕೂತಂತಾಯಿತು. ಎದೆ ಭಾರವಾಗಿಸುವ ರೂಪಾಂತರ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243



