Connect with us

ಅಂತರಂಗ

ರಾಜಶೇಖರ್ ಜತೆ ಒಂದು ದಿನ

Published

on

ಬಿ. ರಾಜಶೇಖರ್
  • ರಹಮತ್ ತರೀಕೆರೆ, ಚಿಂತಕರು

ಖುಶವಂತ ಸಿಂಗರ `ಟ್ರೈನ್ ಟು ಪಾಕಿಸ್ತಾನ್’ ಕೃತಿ ಕುರಿತ ಸಂವಾದ ಕಾರ್ಯಕ್ರಮಕ್ಕೆಂದು ಮಂಗಳೂರಿಗೆ ಹೋದವನು, ಮಾರನೇ ದಿನ ಜಿ. ರಾಜಶೇಖರ್ ಅವರ ಮನೆಗೆ ಹೋದೆ. ಭೇಟಿಯ ನೆಪದಲ್ಲಿ ಅವರ ಸಂದರ್ಶನವನ್ನೂ ಮಾಡಬೇಕಿತ್ತು. ನಮ್ಮಿಬ್ಬರ ಭೇಟಿಗೆ ಗೆಳೆಯರಾದ ಫಣಿರಾಜ್ ಹಾಗೂ ಸಂವರ್ತ ಸಾಹಿಲ್, ಪೂರ್ವಭಾವಿ ಭೂಮಿಕೆ ಕಲ್ಪಿಸಿದ್ದರು. ನಾನು ಹೋದ ದಿನ ಉಡುಪಿಯಲ್ಲಿ ಆಗಸಕ್ಕೆ ಹುಚ್ಚು ಹಿಡಿದಂತೆ ಪ್ರಳಯಕಾಲದ ಮಳೆ. ಬಳ್ಳಾರಿಯ ಬಿಸಿಲಿನಿಂದ ಹೋಗಿದ್ದ ನಾನು ಥಂಡಿಗೆ ಥರಥರಿಸುತ್ತಿದ್ದೆ. ಆಟೊದಲ್ಲಿ ಇರುವಾಗಲೇ ಇರಿಸಲು ಬಡಿದು ಅರ್ಧ ಒದ್ದೆಯಾಗಿದ್ದೆ; ಆಟೊ ಇಳಿದು, ಗೇಟುತೆಗೆದು ಮನೆಬಾಗಿಲಿಗೆ ಹೋಗುವಷ್ಟರಲ್ಲಿ ಇನ್ನರ್ಧ ತೊಯ್ದುಹೋದೆ.

ರಾಜಶೇಖರ್ ಅವರ ಮನೆ, ಉಡುಪಿಯ ದಕ್ಷಿಣದಿಕ್ಕಿನ ಅಂಚಿನಲ್ಲಿರುವ ಕೊಳಂಬೆ ಪ್ರದೇಶದಲ್ಲಿದೆ; ನೀರು ಜುಳುಜುಳಿಸುವ ತೋಡುಗಳೂ ಹಸಿರುಹೊಮ್ಮಿಸುವ ಭತ್ತದ ಗದ್ದೆಗಳೂ ಕಂಗು-ತೆಂಗಿನ ತೋಟಗಳೂ ಅದನ್ನು ಸುತ್ತುವರೆದಿವೆ. ಹಾಡುಹಗಲೇ ಜೀರುಂಡೆಯ ಜೀಕಾರವೂ ನವಿಲಿನ ಪರಾಕೂ ಅಲ್ಲಿ ಕೇಳಿಸುತ್ತದೆ. ಕಾಂಪೌಂಡಿನ ಗೋಡೆಯ ಮೇಲೆ ಹಸಿರುಪಾಚಿ ಹಬ್ಬಿಕೊಂಡು ನಡುನಡುವೆ ಫರ್ನ್ ಸಸ್ಯಗಳು ಬೆಳೆದಿವೆ; ಇನ್ನು ಕಾಂಪೌಂಡಿನೊಳಗೆ ಬೆಳೆದಿದ್ದ ಹೂಗಿಡಗಳ ಹಳುವಿನಲ್ಲಂತೂ, ಒಂದು ಹುಲಿ ಆರಾಮಾಗಿ ಅಜ್ಞಾತವಾಸ ಮಾಡಬಹುದಿತ್ತು. ನಾನು ಸೋಜಿಗದಿಂದ ಅವನ್ನೆಲ್ಲ ನೋಡುವಾಗ, ರಾಜಶೇಖರ್ ಸಂಕೋಚ ಬೆರೆತ ಅಭಿಮಾನದಿಂದ “ಇದು ಆರ್ಡರ್ ಇನ್ ಡಿಸ್ಆ ರ್ಡರ್” ಎಂದು ವರ್ಣಿಸಿದರು.

ಅದೊಂದು ಚಿಕ್ಕಮನೆ; ಹಾಲಿನ ಮೂಲೆಯಲ್ಲಿ ಮೇಜು; ಬಗಲಿಗೇ ಒಟ್ಟಿದ ಪುಸ್ತಕರಾಶಿ. ಇನ್ನೊಂದು ಮೂಲೆಯ ಗೂಡಿನಲ್ಲಿ ಆಂಜನೇಯನ ಚಿತ್ರಪಟ. ಅದರ ಮುಂದೆ ಅವರ ಹೆಂಡತಿ ಸುಮತಿ, ಪೂಜೆ ಮಾಡಿದ ಕುರುಹು. ಅದನ್ನು ನೋಡುತ್ತ ನನಗೆ ಕಾರಂತರ`ಅಳಿದಮೇಲೆ’ ನೆನಪಾಯಿತು. ಅದು ರಾಜಶೇಖರ್ ಬಹಳ ಆಸ್ಥೆಯಿಂದ ಮತ್ತೆಮತ್ತೆ ವಿಶ್ಲೇಷಣೆ ಮಾಡಿರುವ ಕಾದಂಬರಿ. ‘ನಾವು ವೈಯಕ್ತಿಕವಾಗಿ ನಾಸ್ತಿಕರಾಗಿರಬಹುದು. ಆದರೆ ಇಂಟಿಗ್ರಿಟಿಯುಳ್ಳ ಆಸ್ತಿಕರ ಶ್ರದ್ಧೆಯನ್ನು ಗೌರವಿಸುವುದು ಒಂದು ದೊಡ್ಡಮೌಲ್ಯ’ ಎಂದು ಪ್ರತಿಪಾದಿಸುವ ಕೃತಿ.

ನಮ್ಮ ಮಾತುಕತೆಯದ್ದಕ್ಕೂ ಸೋನೆ ಶೃತಿ ಹಿಡಿದಿತ್ತು. ಸುಮತಿಯವರು ನನಗೆ ಬಿಸಿಬಿಸಿ ಅನ್ನ ಸಾರು, ಹುರಿದ ಹಪ್ಪಳ, ಕುಂದಾಪುರ ಕಡೆಯ ಉಪ್ಪಿನಕಾಯಿಯ ಊಟ ಬಡಿಸಿದರು; ನಡುನಡುವೆ ರಾಜಶೇಖರ್ `ನಮ್ಮನೇಲಿ ಯಾರಿಗೂ ಒಳ್ಳೇ ಟೀ ಮಾಡೋಕೆ ಬರೋಲ್ಲಾರಿ; ನಾನೇ ಮಾಡಬೇಕು. ಅಣ್ಣನಿಗೆ (ಮಗ ವಿಷ್ಣುವಿಗೆ ಅವರು ಕರೆಯುವುದು ಹಾಗೆ.) ಈಗ ಟೀಬೇಕು’ ಎಂದು ಎದ್ದುಹೋಗಿ, ಕೈಯಾರೆ ಟೀಮಾಡಿ ತರುತ್ತಿದ್ದರು; ಅವರ ಕೈಚಹ ಕುಡಿಯಲು `ಅಪ್ಪ ಟೀ ಚೆಂದ ಮಾಡ್ತಾರೆ’ ಎಂದು ವಿಷ್ಣು ಕಣ್ಣುಮಿಟುಕಿಸಿ ಪುಸಲಾಯಿಸುತ್ತಿದ್ದರು.

ನಾನು ರಾಜಶೇಖರ್ ಅವರನ್ನು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹತ್ತಾರು ಸಲ ಕಂಡಿದ್ದೇನೆ. ಯಾವಾಗಲೂ ಅವರ ಚಹರೆ ಸರಿಸುಮಾರು ಒಂದೇ ತರಹ; ಹೇಗೆಂದರೆ-ತುಸು ಬಿಗಿದುಕೊಂಡ ಮುಖ; ಹಳೇಮಾದರಿಯ ದಪ್ಪ ಫ್ರೇಮಿನ ಕನ್ನಡಕದೊಳಗೆ ತೀಕ್ಷ್ಣನೋಟ ಹರಿಸುವ ಗಾಬರಿಗೊಂಡಂತೆ ತೋರುವ ಕಣ್ಣು; ಸರಿಯಾಗಿ ಬಾಚದ ತಲೆಗೂದಲು; ಕಪ್ಪು ಚೌಕಳಿಯ ಶರ್ಟು. ಆರ್ಡರ್ ಇನ್ ಡಿಸಾರ್ಡರ್. ಹಾಲಿನ ಇನ್ನೊಂದು ಭಾಗದಲ್ಲಿ ಅವರು ಹೆಂಡತಿ ಜತೆ ತೆಗೆಸಿಕೊಂಡ ಎರಡು ಚಿತ್ರಪಟಗಳಿದ್ದವು.‌ ಒಂದು-ಮದುವೆಯಾದ ಹೊಸತರಲ್ಲಿ ತೆಗೆಸುಕೊಂಡಿದ್ದು. ನಗುಮುಖದ ಯುವಕನ ಸೌಮ್ಯತೆ ಲಾಸ್ಯವಾಡುತ್ತಿದೆ. ಇನ್ನೊಂದು-ನಿವೃತ್ತಿಯ ದಿನ ತಾಂತ್ರಿಕ ಕಾರಣಕ್ಕೆ ತೆಗೆಸಿಕೊಂಡಿದ್ದಿರಬೇಕು- ನೆರಿಗೆ ಸಡಿಲಗೊಂಡಿರದ ಬಿಗುಮುಖ ಗುರುಗುಟ್ಟುತಿದೆ.

ರಾಜಶೇಖರರ ಮುಖದ ಚಿಂತನಶೀಲ ಗಾಂಭೀರ್ಯಕ್ಕೆ ಅವರ ಸ್ವಭಾವದಲ್ಲಿ ಅರ್ಧ ಕಾರಣವಿದ್ದರೆ, ಅವರ ಹೆಚ್ಚಿನ ಕಾರ್ಯಕ್ರಮಗಳೆಲ್ಲ ಪ್ರತಿಭಟನೆಗೆ ಸಂಬಂಧಿಸಿದವೇ ಆಗಿರುವುದು ಇನ್ನರ್ಧ ಕಾರಣ. ಅವರ ನನ್ನ ಮೊದಲ ಭೇಟಿ ನೆನಪಾಗುತ್ತಿದೆ. ಮಡಿಕೇರಿಯಲ್ಲಿ ಪಟ್ಟಾಭಿರಾಮ ಸೋಮಯಾಜಿಯವರು ಸಂಘಟಿಸಿದ್ದ ಕಾರ್ಯಕ್ರಮವದು. ರಾಜಶೇಖರ ಅವರನ್ನು ಮೊದಲ ಸಲ‌ ಕಾಣುವ ಪುಳಕದಲ್ಲಿ ನಾನು ಭೇಟಿಯಾದೆ. ಅವರು ಕೈಕುಲುಕಿ ನಿರ್ಭಾವುಕವಾಗಿ `ಹ್ಞಾ! ಯಾವಾಗ ಬಂದ್ರಿ?’ ಎಂಬ ವಾಕ್ಯಬಿಟ್ಟರೆ ಹೆಚ್ಚೇನೂ ಆಡಲಿಲ್ಲ. ನನಗೆ ತುಸು ನಿರಾಶೆಯಾಗಿತ್ತು. ಬಹುಶಃ ಅವರು ಅಂದಿನ ಕಾರ್ಯಕ್ರಮದ ಬಗ್ಗೆ ತವಕಿತರಾಗಿದ್ದರು. ಕಾರಣ, ಕಾರ್ಯಕ್ರಮ ತಡೆಯಲು ಎದುರಾಳಿಗಳು ಭಯಂಕರ ತಯಾರಿ ಮಾಡಿಕೊಂಡಿದ್ದರಿಂದ, ವಾತಾವರಣ ಬಿಗುವಾಗಿತ್ತು. ಪೋಲಿಸರ ಸಂಖ್ಯೆ ನಮ್ಮನ್ನು ಮೀರಿಸುವಷ್ಟಿತ್ತು. ರಾಜಶೇಖರರ ಆತಂಕ ನಿಜವಾಗುವಂತೆ ಅಂದಿನ ಕಾರ್ಯಕ್ರಮ ನಡೆಯಲಿಲ್ಲ. ನಾವೆಲ್ಲ ಪೆಟ್ಟುತಿನ್ನದೇ ಮರಳಿದ್ದೇ ದೊಡ್ಡ ಸಂಗತಿ.

ನಾನು ಮಾತುಕತೆಗೆ ಮನೆಗೆ ಹೋದ ದಿನ ಅವರು, ಕರಿಬಿಳಿಯ ಉದ್ದಗೆರೆಯಿರುವ ಅಂಗಿ ಹಾಗೂ ಆಗಸನೀಲಿಯ ಚೌಕುಳಿಲುಂಗಿ ಧರಿಸಿದ್ದರು. ವಯಸ್ಸಿನ ಕಾರಣದಿಂದ ದೇಹ ನಸುಬಾಗಿತ್ತು. ಆದರೆ ಲವಲವಿಕೆಯಿತ್ತು. ನಾಲ್ಕೈದು ತಾಸು ಕಾಲ, ಸಾಹಿತ್ಯದ ಬಗ್ಗೆ, ಭಾರತದ ರಾಜಕೀಯ ವಿದ್ಯಮಾನಗಳ ಬಗ್ಗೆ, ಒಳನೋಟಗಳಿಂದ ಕೂಡಿದ ಮಾತುಕತೆಯನ್ನು ನಡೆಸಿಕೊಟ್ಟರು. ನಾನು ಕಳೆದ ೨೫ ವರುಷಗಳಲ್ಲಿ ಮಾಡಿದ ಅತ್ಯತ್ತಮ ಸಂದರ್ಶನವದು. ಇದು ‘ನ್ಯಾಯ ನಿಷ್ಠುರಿಗಳ ಜತೆಯಲ್ಲಿ’ ಸಂಪುಟದಲ್ಲಿ ಅಚ್ಚಾಯಿತು.

ಎದುರು ನಾನೊಬ್ಬನೇ ಇದ್ದರೂ, ರಾಜಶೇಖರ್ ದೊಡ್ಡಸಭೆಯನ್ನು ಸಂಬೋಧಿಸುವಂತೆ ಏರುದನಿಯಲ್ಲಿ ಮಾತಾಡುತ್ತಿದ್ದರು; ಮತೀಯ ರಾಜಕಾರಣದ ಚರ್ಚೆ ಬಂದಾಗಲೆಲ್ಲ ಉದ್ವಿಗ್ನತೆಯಿಂದ ಅವರ ದನಿ ವ್ಯಗ್ರಗೊಳ್ಳುತ್ತಿತ್ತು. ಆದರೆ ಹುಟ್ಟೂರಾದ ಗುಂಡ್ಮಿ, ತಮ್ಮ ಬಾಲ್ಯ, ತಾಯಿ, ತಂದೆ, ಅಲ್ಲಿನ ಪರಿಸರ, ಅಡುಗೆ ಇತ್ಯಾದಿ ವಿಷಯ ಬಂದಾಗ, ದನಿ ಮೃದುಗೊಂಡು ಆಪ್ತತೆ ತನ್ಮಯತೆ ಪಡೆಯುತ್ತಿತ್ತು-ಕುವೆಂಪು ಮಲೆನಾಡಿನ ವಿಷಯ ಬಂದರೆ ಭಾವುಕರಾಗುವ ಹಾಗೆ. ಬದುಕಿನ ಸಣ್ಣಸಂಗತಿಗಳಿಗೆ ಮಿಡಿಯುವ ಅವರ ಆಸ್ಥೆ ಮತ್ತು ಜೀವನ ಪ್ರೀತಿಗಳು, ಅವರಲ್ಲಿರುವ ಪ್ರತಿರೋಧ ಪ್ರಜ್ಞೆಯಷ್ಟೇ ತೀವ್ರವಾಗಿದ್ದವು.

ರಾಜಶೇಖರ್ ಆದಿನ ಒಳ್ಳೇ ಮೂಡಲ್ಲಿದ್ದರು. ಅವರಲ್ಲಿರುವ ಹಾಸ್ಯಪ್ರಜ್ಞೆ ಸುಳಿಸುಳಿಯಾಗಿ ಹೊರಹೊಮ್ಮುತಿತ್ತು. ಅವರು ಸಾಮಾನ್ಯವಾಗಿ ಉಡುಪಿ ಬಿಟ್ಟು ಹೆಚ್ಚು ಹೊರ ಹೋದವರಲ್ಲ. ಉಡುಪಿಯ ಜತೆ ಅವರಿಗೆ ಆಪ್ತವಾದ ಗಾಢವಾದ ನಂಟಿತ್ತು. ಹಿಂದೊಮ್ಮೆ ನನ್ನ ಗುರುಗಳಾದ ಪುಣೇಕರ್ ಅವರು ಉಡುಪಿಯಲ್ಲಿ ವಾಸವಿದ್ದ ವಿಷಯ ಪ್ರಸ್ತಾಪಕ್ಕೆ ಬಂತು. ಆಗ ರಾಜಶೇಖರ್ ಹೇಳಿದರು: “ಅವರು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿದ್ದು ಗೊತ್ತಲ್ಲ? ಅವರಿದ್ದ ಮನೆಯಲ್ಲಿಯೇ ಅಡಿಗರು ಇದ್ರು. ಅದೊಂದು ಹಳೇ ಕಾಲದ ಮನೆ. ಅದರ ಎದುರು ಒಂದಿಷ್ಟು ಖಾಲಿ ಜಾಗ ಇತ್ತು. ಅದನ್ನು ಹಾಗೇ ಹಾಳು ಬಿಟ್ಟಿದ್ರು. ಪುಣೇಕರ್ ಆಗಲಿ, ಅವರ ನಂತರ ಬಂದ ಅಡಿಗರಾಗಲಿ, ಇವರಿಬ್ಬರಿಗಿಂತ ಮೊದಲಿದ್ದ ವಿ.ಎಂ.ಇನಾಂದಾರ್ ಆಗಲಿ, ಮೂರೂ ಪುಣ್ಯಾತ್ಮರು ಒಂದು ಗಿಡಾನೂ ಅಲ್ಲಿ ನೆಡಲಿಲ್ಲ. ಆ ಮನೆಗೊಂದು ಮೊಗಸಾಲೆ ಇತ್ತು. ಅಲ್ಲಿ ಈ ಮೂವರು ಸಂಜೆ ವಿರಾಜಮಾನರಾಗಿರುತ್ತಿದ್ದರು. ಅಡಿಗರಂತೂ ಒಂದಾದ ಮೇಲೊಂದು ಸಿಗರೇಟ್ ಸುಡ್ತಾ ಇದ್ದರು.” ಮಾತಿನ ಮಧ್ಯೆ ಕೆಲವು ಪತ್ರಿಕೆಗಳ ವಿಷಯ ನುಸುಳಿತು. “ನಾನು ಅವನ್ನು ಓದುವುದಿಲ್ಲ” ಎಂದೆ. ಅವರು ತುಸು ಅಸೂಯೆಯಿಂದ “ನೀವು ಅದೃಷ್ಟವಂತರು ಕಂಡ್ರಿ. ದಾರೀಲಿ ನಡೀವಾಗ ಸೈಡಲ್ಲಿ ಬಿದ್ದಿರೋ ಮಲಕ್ಕೆ ಬೇಡವೆಂದೂ ನಮ್ಮ ದೃಷ್ಟಿಹೋಗುತ್ತೆ” ಎಂದು ಸ್ವಗೇಲಿ ಮಾಡಿಕೊಂಡರು.

ರಾಜಶೇಖರ್ ಗೆ, ಸಾಹಿತ್ಯ ಕ್ಷೇತ್ರದಾಚೆ ಇರುವ ಸಾರ್ವಜನಿಕ ವ್ಯಕ್ತಿಗಳ ಬರೆಹ-ಮಾತುಗಾರಿಕೆ ಬಗ್ಗೆ ಬಹಳ ಆಸಕ್ತಿಯಿತ್ತು “ನೀವು ಗದುಗಿನ ತೋಂಟದಾರ್ಯ ಸ್ವಾಮಿಗಳ ಭಾಷಣದಿಂದ, ಅದರಲ್ಲೂ ಅವರ ಕನ್ನಡದಿಂದ ಬಹಳ ಪ್ರಭಾವಿತರಾಗಿದ್ದಿರಿ ಅಂತ ಕೇಳೀದೀನಿ. ಯಾವ ಸನ್ನಿವೇಶ ಅದು?” ಎಂದು ಕೇಳಿದೆ. “ ತೋಂಟದಾರ್ಯ ಸ್ವಾಮಿಗಳೂ, ನಿಡುಮಾಮಿಡಿ ಸ್ವಾಮಿಯವರೂ ಮತ್ತು ನಾನೂ, ಮಂಗಳೂರಿನ ಕೋಮು ಸೌಹಾರ್ದ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯಲ್ಲಿದ್ದೆವು. ಇಬ್ಬರದೂ ಒಂದು ಜುಗಲಬಂದಿ ನಡೀತು ಸ್ವಲ್ಪಹೊತ್ತು-‘ಎಷ್ಟು ಸೊಗಸಾಗಿ ಮಾತಾಡಿದಿರಿ ತಾವು’ ಅಂತ ಒಬ್ಬರು. ‘ಇಲ್ಲಿಲ್ಲ. ತಾವು ತುಂಬ ಚೆನ್ನಾಗಿ ಮಾತಾಡಿದಿರಿ’ ಅಂತ ಇನ್ನೊಬ್ಬರು. ಅದರೆ ಇಬ್ಬರೂ ಸೊಗಸಾಗಿ ಮಾತಾಡಿದ್ದರು. ಗದುಗಿನ ಸ್ವಾಮಿಗಳಂತೂ ಬಹಳ ಸಹಜವಾಗಿ ಮಾತಾಡಿದ್ದರು” ಎಂದು ಸಂತೋಷದಲ್ಲಿ ನೆನೆದರು.

ಹಳೇ ಉಡುಪಿ ಶಹರಿನ ಚಹರೆ ಚರ್ಚೆಗೆ ಬಂತು. ಆಗ ರಾಜಶೇಖರ್ ಬನ್ನಂಜೆಯಲ್ಲಿದ್ದ ಒಂದು ಗುಡಿಯನ್ನು ನೆನೆಸಿಕೊಂಡು ನುಡಿದರು: “ಅಲ್ಲೊಂದು ಬಹಳ ಸುಂದರವಾದ ದೇವಸ್ಥಾನ ಇತ್ತು. ಸರಳವಾದ ಜಾಮಿಟ್ರಿಕಲ್ ಆದ ವಾಸ್ತು ಅದು. ಈಗ ಆ ಟೆಂಪಲ್ನ ವರಿಗೆ ಬುದ್ಧಿ ಬಂದು, ಅದರ ಮೂಲ ಆಕೃತಿ ಮರವೆ ಆಗುವ ಹಾಗೆ ಸುತ್ತ ಒಂದು ತಗಡಿನ ಚಪ್ಪರ ಎಬ್ಬಿಸಿ, ಅದರ ಎದುರುಗಡೆ ಶಿಲೆಯ ಕಾಂಕ್ರೀಟಿನಲ್ಲಿ ಏನೆಲ್ಲವನ್ನು ಮಾಡಬಹುದೊ ಅದನ್ನೆಲ್ಲ ಮಾಡಿದಾರೆ” ಎಂದರು. ಮಸೀದಿ ಕೆಡವಿ ಗುಡಿ ಕಟ್ಟುವುದನ್ನು ಸಾಂಸ್ಕøತಿಕ ಅಪಚಾರವೆಂದು ಭಾವಿಸಿರುವ ಚಿಂತಕನಿಗೆ, ತನ್ನೂರಿನ ಗುಡಿಯ ವಾಸ್ತುವಿನ ಬಗ್ಗೆ ಇದ್ದ ಆಸಕ್ತಿ ಪ್ರೀತಿ ಸೋಜಿಗ ಹುಟ್ಟಿಸಿತು. ಚಿಕ್ಕಮಗಳೂರಿನಲ್ಲಿ ನಡೆದ ಬಾಬಾಬುಡನಗಿರಿ ಕುರಿತ ಕಾರ್ಯಕ್ರಮದಲ್ಲಿ, ಶಬನಂ ವೀರಮಾನ್ವಿ ಹಾಡಿದ ಕಬೀರ್ ಭಜನನ್ನು ಕೇಳಿ ಅವರು `ಹಾ! ಎಂಥಾ ಎನರ್ಜಿ ಮತ್ತು ತನ್ಮಯಗೊಳಿಸುವ ಶಕ್ತಿಯಿದೆ ಈ ಕಂಠಕ್ಕೆ’ ಎಂದು ಆನಂದಪಟ್ಟಿದ್ದನ್ನು ನೆನೆಸಿಕೊಂಡೆ.

ನಾಸ್ತಿಕರು ಅಥವಾ ಕೋಮುವಾದ ಮೂಲಭೂತವಾದ ವಿರೋಧ ಮಾಡುವವರು, ಜನತೆಯ ಧಾರ್ಮಿಕ ಲೋಕಗಳ ಬಗ್ಗೆ ಗೌರವವುಳ್ಳವರು; ಅಲ್ಲಿರುವ ಕಲೆ ಸೌಂದರ್ಯಗಳ ಬಗ್ಗೆ ಪ್ರೀತಿಯುಳ್ಳವರು- ಎಂದರೆ ಕೆಲವರು ನಂಬುವುದಿಲ್ಲ. ಶಕ್ತಿ ರಾಜಕಾರಣವು ಧರ್ಮವನ್ನು ತನ್ನ ಹತ್ಯಾರದಂತೆ ಬಳಸುವುದನ್ನು ವಿರೋಧಿಸುವುದು ಬೇರೆ: ನಿತ್ಯ ಜೀವನದಲ್ಲಿ ಸಾಮಾನ್ಯ ಜನ ಬದುಕುವ ಧರ್ಮವನ್ನು ಮನ್ನಿಸುವುದು ಬೇರೆ ಎಂದರೆ, ಅವರಿಗೆ ಅರ್ಥವಾಗುವುದಿಲ್ಲ. ಅರ್ಥವಾಗುವ ಕೆಲವರು ಇವುಗಳ ನಡುವಿನ ಫರಕನ್ನು ಉದ್ದೇಶಪೂರ್ವಕವಾಗಿ ಮರೆಯಿಸಿ, ‘ವಿಚಾರವಾದಿ’ ‘ಬುದ್ಧಿಜೀವಿ’ ಲೇಖಕರು’ ಎಂಬುವರನ್ನು ‘ಸಮಾಜದ ಕ್ಷೇಮಕ್ಕಾಗಿ ನಿವಾರಿಸಬೇಕಾದ ಪೀಡೆಗಳು’ ಎಂಬ ಗೊಂದಲದ ಸನ್ನಿವೇಶವನ್ನು ನಿರ್ಮಾಣ ಮಾಡಿರುವರು.

ಈ ಸನ್ನಿವೇಶವೇ ಲೇಖಕರ ಹತ್ಯೆಗಳಿಗೂ ಕಾರಣವಾಗುತ್ತಿದೆ. ಆದರೆ ನಿಜವಾದ ವಿಚಾರವಾದವು, ಧರ್ಮದ ಹೆಸರಲ್ಲಿರುವ ಮತೀಯ ರಾಜಕಾರಣವನ್ನು ನಿರಾಕರಿಸುತ್ತಲೇ, ಪರಂಪರೆಯಿಂದ ಬಂದ ಜೀವನ ಕ್ರಮಗಳ ಬಗ್ಗೆ, ಅದು ಸೃಷ್ಟಿಮಾಡಿರುವ ಅಡುಗೆ, ವಾಸ್ತು, ಇತ್ಯಾದಿ ಕ್ಷೇತ್ರಗಳಲ್ಲಿರುವ ಕುಶಲತೆ ಬಗ್ಗೆ ಅಪಾರ ಶ್ರದ್ಧೆ ತೋರುತ್ತದೆ. ಇದು ಕಾರಂತ ಕುವೆಂಪು ಅವರಿಂದ ಕನ್ನಡದಲ್ಲಿ ಹರಿದು ಬಂದಿರುವ ಪರಂಪರೆ. ಲೋಹಿಯಾ ಅವರು ಮಹಾನ್ ವಿಚಾರವಾದಿ. ಆದರೆ ಅವರ `ರಾಮಕೃಷ್ಣಶಿವ’ ಲೇಖನ ಸಾಂಸ್ಕøತಿಕ ಆಸ್ಥೆಯಿರುವ ಮನಸ್ಸು ಮಾತ್ರ ಬರೆಯುವಂಥದ್ದು. ರಾಜಶೇಖರ್ ಇಂಥಾ ಪರಂಪರೆಗೆ ಸೇರಿದ ಚಿಂತಕರು.

ರಾಜಶೇಖರ್ ಜೀವವಿಮಾ ಕಛೇರಿಯಲ್ಲಿ ಸಹಾಯಕರಾಗಿ ಸೇವೆ ಸಲ್ಲಿಸಿದವರು. ಕಳೆದ ದಶಕದಿಂದ ಕೋಮಸೌಹಾರ್ದ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದ ಅವರು, ಜೀವಮಾನ ಉದ್ದಕ್ಕೂ ಬೇರೆಬೇರೆ ಜನಪರ ಚಳುವಳಿಗಳ ಭಾಗವಾದವರು; ಸಾವಿರಾರು ಬೀದಿಭಾಷಣಗಳನ್ನು ಮಾಡಿದವರು. ಅವರ ವಿಮರ್ಶೆ ಓದುವುದು ಮತ್ತು ಭಾಷಣ ಕೇಳುವುದು ಎಂದರೆ, ಸಾಹಿತ್ಯವನ್ನೂ ಅದರ ಘನತೆಯಲ್ಲಿ, ಸಮಾಜವನ್ನು ಅದರ ಸಂಕೀರ್ಣತೆಯಲ್ಲಿ, ಅರಿಯುವ ಕ್ರಮವೇ ಆಗಿದೆ. ಅವರ ಚಿಂತನೆ ಮತ್ತು ಭಾಷೆಗಳಲ್ಲಿರುವ ತೀಕ್ಷ್ಣತೆಗೂ ವ್ಯಕ್ತಿತ್ವದಲ್ಲಿರುವ ತಳಮಳಿಕೆಗೂ ಕಾರಣ, ಅವರ ಸೂಕ್ಷ್ಮಸಂವೇದನೆ ಮಾತ್ರವಲ್ಲ, ಹಾಲಿ ಕರಾವಳಿ ಕರ್ನಾಟಕದ ಪ್ರಕ್ಷುಬ್ಧ ಸನ್ನಿವೇಶ ಕೂಡ.

ಮಾತುಕತೆಯಲ್ಲಿ ನಾನು ಕೇಳುತ್ತಿದ್ದ ಪ್ರಶ್ನೆಗಳಿಗೆ ಅವರು ಬಹಳ ಸಲ `ನನಗೆ ಗೊತ್ತಿಲ್ಲ’ ಎಂದು ವಿವರಣೆ ಶುರುಮಾಡುತ್ತಿದ್ದರು. ಆದರೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಅವರಷ್ಟು ಓದಿದವರು ಕನ್ನಡದಲ್ಲಿ ಕಡಿಮೆ. ಅವರಷ್ಟು ಆಳವಾದ ವ್ಯಾಪಕವಾದ ಓದನ್ನು ವಿಶ್ವವಿದ್ಯಾಲಯಗಳಲ್ಲಿರುವ ನಾವು ಮಾಡಿದ್ದರೆ, ನಮ್ಮ ವಿದ್ಯಾರ್ಥಿಗಳು ಏನೇನಾಗಿರುತ್ತಿದ್ದರೊ? ಆ ದಿನದ ಮಾತುಕತೆಯಲ್ಲಿ ನನಗೆ ಅವರು ಆಂಗ್ಲ ಶಿಕ್ಷಕರಾಗಿದ್ದ ಸಂಗತಿ ಆಕಸ್ಮಿಕವಾಗಿ ತಿಳಿಯಿತು. ಅವರ ಇಂಗ್ಲೀಶ್ ಓದು ಕೂಡ ವ್ಯಾಪಕ.

ಅವರೊಬ್ಬ ಅದ್ಭುತ ಕನ್ನಡ ಗದ್ಯಕಾರ. ಕನ್ನಡದಲ್ಲಿ ಅವರಂತೆ ಮುಕ್ಕಾಗದ ನೈತಿಕ ಪ್ರಜ್ಞೆ ಮತ್ತು ಧೀಮಂತಿಕೆಯುಳ್ಳ ಚಿಂತಕರು ವಿರಳ. ಕನ್ನಡ ಬರೆಹದಲ್ಲಿರುವ ಜಡತೆ ಮತ್ತು ಲಯಗೇಡಿತನ ಕಂಡಾಗಲೆಲ್ಲ ಹರಿಹಾಯುತ್ತಿದ್ದ ಲಂಕೇಶ್, ತಮ್ಮ ಸಾಯುವ ಕೊನೆಯ ಕ್ಷಣಗಳಲ್ಲಿ ಬರೆದ ಟಿಪ್ಪಣಿ, ರಾಜಶೇಖರ ಅವರ ಪ್ರಾಂಜಲವಾದ ಕನ್ನಡವನ್ನು ಕುರಿತಾಗಿತ್ತು. ಬಾಳಿಡೀ ಪ್ರತಿರೋಧ‌ ಮತ್ತು ಆಕ್ಟಿವಿಸಂನಿಂದ ಜಗಜಗಿಸಿದ ರಾಜಶೇಖರ್ ಅವರಲ್ಲಿ, ಮತೀಯವಾದವು ದೇಶವನ್ನು ಈ ಪರಿಯಲ್ಲಿ ಆವರಿಸಿಕೊಂಡಿರುವ ಬಗ್ಗೆ ನಿರಾಶೆಯಿತ್ತು; ಅವರು ಮತ್ತಷ್ಟು ಹತಾಶೆಯ ಗಳಿಗೆಗಳಿಗೆ ತಮ್ಮನ್ನು ಸಿದ್ಧಗೊಳಿಸಿಕೊಳ್ಳುತ್ತಿದ್ದಾರೆ ಎಂದೂ ಅನಿಸಿತು. ಒಳ್ಳೆಯ ಮಾತುಗಾರರಾದ ಅವರು, ಮಾತು ಮತ್ತು ಬರೆಹದ ನಿಷ್ಫಲತೆಯನ್ನೂ ಅರಿತವರು. ಸದ್ಯದ ಚಾರಿತ್ರಿಕ ಸನ್ನಿವೇಶವೇ ಅವರ ಬರೆಹ ಮತ್ತು ಮಾತಿಗೆ ತೀವ್ರತೆಯನ್ನೂ ವಿಷಾದದ ಗುಣವನ್ನೂ ತಂದುಕೊಟ್ಟಂತೆ ತೋರಿತು.

“ನೀವು ಅಷ್ಟೊಂದು ಬೀದಿಭಾಷಣ ಮಾಡಿದವರು. ಆದರೆ ಸೆಮಿನಾರುಗಳಲ್ಲಿ ಬರಕೊಂಡು ಬಂದು ಮಾತಾಡ್ತೀರಲ್ಲ, ಯಾಕೆ?” ಎಂದೆ. “ಎಕ್ಸಟೆಂಪರ್ ಮಾತಾಡೋ ಧೈರ್ಯವೇ ಇಲ್ಲ ನನಗೆ. ಮೈಕ್ ಮುಂದೆ ನಿಂತು ಮಾತಾಡುವಾಗ ಯೋಚನೆ ಮಾಡಿಕೊಂಡು ಬಂದಿದ್ದ ಮಾತೆಲ್ಲ ಮರೆತೇ ಹೋಗುತ್ತೆ. ನನಗೆ ಅಲ್ಲಲ್ಲೇ ನಿಂತುಗೊಂಡು ಸೃಷ್ಟಿ ಮಾತಾಡೋವಷ್ಟು ಸೃಜನಶೀಲತೆ ಇಲ್ಲ. ಕಿ.ರಂ. ಮಾಡ್ತಿದ್ದರಂತೆ ಅದನ್ನ. ಕಿ.ರಂ. ಭಾಷಣ ಮಾಡೋಕೆ ಪುಟಗಟ್ಟಲೆ ನೋಟ್ಸ್ ಮಾಡ್ಕೊಂಡು ಹೋಗ್ತಾರೆ. ಮೈಕ್ ಮುಂದೆ ನಿಂತುಕೊಳ್ತಾರೆ.

ಆಮೇಲೆ ಅದನ್ನು ನೋಡೋದೇ ಇಲ್ಲವಂತೆ. ಮಾಡ್ಕೊಂಡಿರೋ ನೋಟ್ಸೇ ಬೇರೆ; ಎದುರುಗಡೆ ಬಂದು ಹೇಳೋದೇ ಬೇರೆ. ಆ ತರಹದ ಕುಶಲತೆ ನನ್ನ ಹತ್ತರ ಇಲ್ಲ. ಮಾತಿಗೆ ತಡವರಿಸೋದೇ ಜಾಸ್ತಿ. ಸುಮಾರಷ್ಟು ಡಿಸಾಸ್ಟರಸ್ ಎಕ್ಸ್ ಪೀರಿಯನ್ಸ್ ಆಗಿವೆ ನನಗೆ” ಎಂದರು. “ನೀವು ಮೇನ್ ಸ್ಟ್ರೀಂ ಪತ್ರಿಕೆಗಳಲ್ಲಿ ಯಾಕೆ ಬರೆಯೋಲ್ಲ?” ಎಂದೆ. “ನಾನು ಬರೆದಿದ್ದನ್ನು ಅವರು ಹಾಕುವುದಿಲ್ಲ. ನಾನು ಹಿಂದೆ ಬರೆಯುತ್ತಿದ್ದುದು `ಲಂಕೇಶ್ ಪತ್ರಿಕೆ’ಗೆ; ನಂತರ ‘ಗೌರಿಲಂಕೇಶ್’ಗೆ. ಈಗ ಎರಡೂ ಇಲ್ಲ. ನನಗೆ ಬರೆಸುವವರ ಪ್ರಚೋದನೆಯೇ ಇಲ್ಲವಾಗಿದೆ” ಎಂದು ಜವಾಬಿಸಿದರು.

ಹೊರಡುವಾಗ ಅವರ ಜತೆ ನಿಂತು ಫೋಟೊ ತೆಗೆಸಿಕೊಂಡೆ. ಅವರನ್ನು ನಗಿಸಬೇಕೆಂದು ನಾನೂ ವಿಷ್ಣುವೂ ಯತ್ನಿಸಿದೆವು. ತುಸುವೇ ತುಟಿ ಅರಳಿಸಿದರು. ಆಹೊತ್ತಿಗೆ ಮಳೆನಿಂತಿತ್ತು. ಆಗಸ ಹೊರಪಾಗಿತ್ತು. ಬರುತ್ತ ಅವರ ಕಾನನ ಸದೃಶ ಹಿತ್ತಲಿನಿಂದ ಒಂದು ಹೂಗಿಡದ ಸಸಿಯನ್ನು ಹಿಡಿದುಕೊಂಡು ಬಂದೆ.

ತಲ್ಲೂರು ಪ್ರತಿಷ್ಠಾನದ ಉಪನ್ಯಾಸ ಮಾಲೆಯಲ್ಲಿ, ‘ಬಹುತ್ವದ ಬಹುಮುಖಗಳು’ ವಿಷಯ ಕುರಿತು ಮಾತಾಡಲು ಉಡುಪಿಗೆ ಹೋಗಿದ್ದೆ. ಅಲ್ಲಿಗೆ ಹೋದಾಗಲೆಲ್ಲ ನನ್ನ ಪ್ರಿಯ ಚಿಂತಕರಾದ ಜಿ.‌ರಾಜಶೇಖರ ಅವರನ್ನು ಕಾಣುವ, ಚರ್ಚಿಸುವ ಇರಾದೆಯೂ ಇರುತ್ತಿತ್ತು. ನನ್ನ ಉಪನ್ಯಾಸವನ್ನು ಅವರಿಗೆ ಅರ್ಪಿಸಿ ಮಾತಾಡಿದೆ. ಮಾತು ಮುಗಿಯುವಾಗ ಅವರೇ ಸಭಾಂಗಣಕ್ಕೆ ಬಂದರು. ನನ್ನ ಓದು ಬರೆಹಗಳ‌ ಮೇಲೆ ತುಂಬ ಪ್ರಭಾವ ಬೀರಿದ ಅವರನ್ನು ಈ ಹಿಂದೆ ಮುಖಾಮುಖಿ ಮಾಡುವಾಗೆಲ್ಲ, ಗುರುವಿನ ಮುಂದೆ ಕೂತಾಗಿನ ಆದರ ಅಳುಕು ವಿಸ್ಮಯ. ಈಗ ಒಂದು ಮಗುವಿನ ಮುಂದೆ ಕೂತಂತಾಯಿತು. ಎದೆ ಭಾರವಾಗಿಸುವ ರೂಪಾಂತರ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

Trending