ಅಂತರಂಗ
ರಾಜಶೇಖರ್ ಜತೆ ಒಂದು ದಿನ
- ರಹಮತ್ ತರೀಕೆರೆ, ಚಿಂತಕರು
ಖುಶವಂತ ಸಿಂಗರ `ಟ್ರೈನ್ ಟು ಪಾಕಿಸ್ತಾನ್’ ಕೃತಿ ಕುರಿತ ಸಂವಾದ ಕಾರ್ಯಕ್ರಮಕ್ಕೆಂದು ಮಂಗಳೂರಿಗೆ ಹೋದವನು, ಮಾರನೇ ದಿನ ಜಿ. ರಾಜಶೇಖರ್ ಅವರ ಮನೆಗೆ ಹೋದೆ. ಭೇಟಿಯ ನೆಪದಲ್ಲಿ ಅವರ ಸಂದರ್ಶನವನ್ನೂ ಮಾಡಬೇಕಿತ್ತು. ನಮ್ಮಿಬ್ಬರ ಭೇಟಿಗೆ ಗೆಳೆಯರಾದ ಫಣಿರಾಜ್ ಹಾಗೂ ಸಂವರ್ತ ಸಾಹಿಲ್, ಪೂರ್ವಭಾವಿ ಭೂಮಿಕೆ ಕಲ್ಪಿಸಿದ್ದರು. ನಾನು ಹೋದ ದಿನ ಉಡುಪಿಯಲ್ಲಿ ಆಗಸಕ್ಕೆ ಹುಚ್ಚು ಹಿಡಿದಂತೆ ಪ್ರಳಯಕಾಲದ ಮಳೆ. ಬಳ್ಳಾರಿಯ ಬಿಸಿಲಿನಿಂದ ಹೋಗಿದ್ದ ನಾನು ಥಂಡಿಗೆ ಥರಥರಿಸುತ್ತಿದ್ದೆ. ಆಟೊದಲ್ಲಿ ಇರುವಾಗಲೇ ಇರಿಸಲು ಬಡಿದು ಅರ್ಧ ಒದ್ದೆಯಾಗಿದ್ದೆ; ಆಟೊ ಇಳಿದು, ಗೇಟುತೆಗೆದು ಮನೆಬಾಗಿಲಿಗೆ ಹೋಗುವಷ್ಟರಲ್ಲಿ ಇನ್ನರ್ಧ ತೊಯ್ದುಹೋದೆ.
ರಾಜಶೇಖರ್ ಅವರ ಮನೆ, ಉಡುಪಿಯ ದಕ್ಷಿಣದಿಕ್ಕಿನ ಅಂಚಿನಲ್ಲಿರುವ ಕೊಳಂಬೆ ಪ್ರದೇಶದಲ್ಲಿದೆ; ನೀರು ಜುಳುಜುಳಿಸುವ ತೋಡುಗಳೂ ಹಸಿರುಹೊಮ್ಮಿಸುವ ಭತ್ತದ ಗದ್ದೆಗಳೂ ಕಂಗು-ತೆಂಗಿನ ತೋಟಗಳೂ ಅದನ್ನು ಸುತ್ತುವರೆದಿವೆ. ಹಾಡುಹಗಲೇ ಜೀರುಂಡೆಯ ಜೀಕಾರವೂ ನವಿಲಿನ ಪರಾಕೂ ಅಲ್ಲಿ ಕೇಳಿಸುತ್ತದೆ. ಕಾಂಪೌಂಡಿನ ಗೋಡೆಯ ಮೇಲೆ ಹಸಿರುಪಾಚಿ ಹಬ್ಬಿಕೊಂಡು ನಡುನಡುವೆ ಫರ್ನ್ ಸಸ್ಯಗಳು ಬೆಳೆದಿವೆ; ಇನ್ನು ಕಾಂಪೌಂಡಿನೊಳಗೆ ಬೆಳೆದಿದ್ದ ಹೂಗಿಡಗಳ ಹಳುವಿನಲ್ಲಂತೂ, ಒಂದು ಹುಲಿ ಆರಾಮಾಗಿ ಅಜ್ಞಾತವಾಸ ಮಾಡಬಹುದಿತ್ತು. ನಾನು ಸೋಜಿಗದಿಂದ ಅವನ್ನೆಲ್ಲ ನೋಡುವಾಗ, ರಾಜಶೇಖರ್ ಸಂಕೋಚ ಬೆರೆತ ಅಭಿಮಾನದಿಂದ “ಇದು ಆರ್ಡರ್ ಇನ್ ಡಿಸ್ಆ ರ್ಡರ್” ಎಂದು ವರ್ಣಿಸಿದರು.
ಅದೊಂದು ಚಿಕ್ಕಮನೆ; ಹಾಲಿನ ಮೂಲೆಯಲ್ಲಿ ಮೇಜು; ಬಗಲಿಗೇ ಒಟ್ಟಿದ ಪುಸ್ತಕರಾಶಿ. ಇನ್ನೊಂದು ಮೂಲೆಯ ಗೂಡಿನಲ್ಲಿ ಆಂಜನೇಯನ ಚಿತ್ರಪಟ. ಅದರ ಮುಂದೆ ಅವರ ಹೆಂಡತಿ ಸುಮತಿ, ಪೂಜೆ ಮಾಡಿದ ಕುರುಹು. ಅದನ್ನು ನೋಡುತ್ತ ನನಗೆ ಕಾರಂತರ`ಅಳಿದಮೇಲೆ’ ನೆನಪಾಯಿತು. ಅದು ರಾಜಶೇಖರ್ ಬಹಳ ಆಸ್ಥೆಯಿಂದ ಮತ್ತೆಮತ್ತೆ ವಿಶ್ಲೇಷಣೆ ಮಾಡಿರುವ ಕಾದಂಬರಿ. ‘ನಾವು ವೈಯಕ್ತಿಕವಾಗಿ ನಾಸ್ತಿಕರಾಗಿರಬಹುದು. ಆದರೆ ಇಂಟಿಗ್ರಿಟಿಯುಳ್ಳ ಆಸ್ತಿಕರ ಶ್ರದ್ಧೆಯನ್ನು ಗೌರವಿಸುವುದು ಒಂದು ದೊಡ್ಡಮೌಲ್ಯ’ ಎಂದು ಪ್ರತಿಪಾದಿಸುವ ಕೃತಿ.
ನಮ್ಮ ಮಾತುಕತೆಯದ್ದಕ್ಕೂ ಸೋನೆ ಶೃತಿ ಹಿಡಿದಿತ್ತು. ಸುಮತಿಯವರು ನನಗೆ ಬಿಸಿಬಿಸಿ ಅನ್ನ ಸಾರು, ಹುರಿದ ಹಪ್ಪಳ, ಕುಂದಾಪುರ ಕಡೆಯ ಉಪ್ಪಿನಕಾಯಿಯ ಊಟ ಬಡಿಸಿದರು; ನಡುನಡುವೆ ರಾಜಶೇಖರ್ `ನಮ್ಮನೇಲಿ ಯಾರಿಗೂ ಒಳ್ಳೇ ಟೀ ಮಾಡೋಕೆ ಬರೋಲ್ಲಾರಿ; ನಾನೇ ಮಾಡಬೇಕು. ಅಣ್ಣನಿಗೆ (ಮಗ ವಿಷ್ಣುವಿಗೆ ಅವರು ಕರೆಯುವುದು ಹಾಗೆ.) ಈಗ ಟೀಬೇಕು’ ಎಂದು ಎದ್ದುಹೋಗಿ, ಕೈಯಾರೆ ಟೀಮಾಡಿ ತರುತ್ತಿದ್ದರು; ಅವರ ಕೈಚಹ ಕುಡಿಯಲು `ಅಪ್ಪ ಟೀ ಚೆಂದ ಮಾಡ್ತಾರೆ’ ಎಂದು ವಿಷ್ಣು ಕಣ್ಣುಮಿಟುಕಿಸಿ ಪುಸಲಾಯಿಸುತ್ತಿದ್ದರು.
ನಾನು ರಾಜಶೇಖರ್ ಅವರನ್ನು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹತ್ತಾರು ಸಲ ಕಂಡಿದ್ದೇನೆ. ಯಾವಾಗಲೂ ಅವರ ಚಹರೆ ಸರಿಸುಮಾರು ಒಂದೇ ತರಹ; ಹೇಗೆಂದರೆ-ತುಸು ಬಿಗಿದುಕೊಂಡ ಮುಖ; ಹಳೇಮಾದರಿಯ ದಪ್ಪ ಫ್ರೇಮಿನ ಕನ್ನಡಕದೊಳಗೆ ತೀಕ್ಷ್ಣನೋಟ ಹರಿಸುವ ಗಾಬರಿಗೊಂಡಂತೆ ತೋರುವ ಕಣ್ಣು; ಸರಿಯಾಗಿ ಬಾಚದ ತಲೆಗೂದಲು; ಕಪ್ಪು ಚೌಕಳಿಯ ಶರ್ಟು. ಆರ್ಡರ್ ಇನ್ ಡಿಸಾರ್ಡರ್. ಹಾಲಿನ ಇನ್ನೊಂದು ಭಾಗದಲ್ಲಿ ಅವರು ಹೆಂಡತಿ ಜತೆ ತೆಗೆಸಿಕೊಂಡ ಎರಡು ಚಿತ್ರಪಟಗಳಿದ್ದವು. ಒಂದು-ಮದುವೆಯಾದ ಹೊಸತರಲ್ಲಿ ತೆಗೆಸುಕೊಂಡಿದ್ದು. ನಗುಮುಖದ ಯುವಕನ ಸೌಮ್ಯತೆ ಲಾಸ್ಯವಾಡುತ್ತಿದೆ. ಇನ್ನೊಂದು-ನಿವೃತ್ತಿಯ ದಿನ ತಾಂತ್ರಿಕ ಕಾರಣಕ್ಕೆ ತೆಗೆಸಿಕೊಂಡಿದ್ದಿರಬೇಕು- ನೆರಿಗೆ ಸಡಿಲಗೊಂಡಿರದ ಬಿಗುಮುಖ ಗುರುಗುಟ್ಟುತಿದೆ.
ರಾಜಶೇಖರರ ಮುಖದ ಚಿಂತನಶೀಲ ಗಾಂಭೀರ್ಯಕ್ಕೆ ಅವರ ಸ್ವಭಾವದಲ್ಲಿ ಅರ್ಧ ಕಾರಣವಿದ್ದರೆ, ಅವರ ಹೆಚ್ಚಿನ ಕಾರ್ಯಕ್ರಮಗಳೆಲ್ಲ ಪ್ರತಿಭಟನೆಗೆ ಸಂಬಂಧಿಸಿದವೇ ಆಗಿರುವುದು ಇನ್ನರ್ಧ ಕಾರಣ. ಅವರ ನನ್ನ ಮೊದಲ ಭೇಟಿ ನೆನಪಾಗುತ್ತಿದೆ. ಮಡಿಕೇರಿಯಲ್ಲಿ ಪಟ್ಟಾಭಿರಾಮ ಸೋಮಯಾಜಿಯವರು ಸಂಘಟಿಸಿದ್ದ ಕಾರ್ಯಕ್ರಮವದು. ರಾಜಶೇಖರ ಅವರನ್ನು ಮೊದಲ ಸಲ ಕಾಣುವ ಪುಳಕದಲ್ಲಿ ನಾನು ಭೇಟಿಯಾದೆ. ಅವರು ಕೈಕುಲುಕಿ ನಿರ್ಭಾವುಕವಾಗಿ `ಹ್ಞಾ! ಯಾವಾಗ ಬಂದ್ರಿ?’ ಎಂಬ ವಾಕ್ಯಬಿಟ್ಟರೆ ಹೆಚ್ಚೇನೂ ಆಡಲಿಲ್ಲ. ನನಗೆ ತುಸು ನಿರಾಶೆಯಾಗಿತ್ತು. ಬಹುಶಃ ಅವರು ಅಂದಿನ ಕಾರ್ಯಕ್ರಮದ ಬಗ್ಗೆ ತವಕಿತರಾಗಿದ್ದರು. ಕಾರಣ, ಕಾರ್ಯಕ್ರಮ ತಡೆಯಲು ಎದುರಾಳಿಗಳು ಭಯಂಕರ ತಯಾರಿ ಮಾಡಿಕೊಂಡಿದ್ದರಿಂದ, ವಾತಾವರಣ ಬಿಗುವಾಗಿತ್ತು. ಪೋಲಿಸರ ಸಂಖ್ಯೆ ನಮ್ಮನ್ನು ಮೀರಿಸುವಷ್ಟಿತ್ತು. ರಾಜಶೇಖರರ ಆತಂಕ ನಿಜವಾಗುವಂತೆ ಅಂದಿನ ಕಾರ್ಯಕ್ರಮ ನಡೆಯಲಿಲ್ಲ. ನಾವೆಲ್ಲ ಪೆಟ್ಟುತಿನ್ನದೇ ಮರಳಿದ್ದೇ ದೊಡ್ಡ ಸಂಗತಿ.
ನಾನು ಮಾತುಕತೆಗೆ ಮನೆಗೆ ಹೋದ ದಿನ ಅವರು, ಕರಿಬಿಳಿಯ ಉದ್ದಗೆರೆಯಿರುವ ಅಂಗಿ ಹಾಗೂ ಆಗಸನೀಲಿಯ ಚೌಕುಳಿಲುಂಗಿ ಧರಿಸಿದ್ದರು. ವಯಸ್ಸಿನ ಕಾರಣದಿಂದ ದೇಹ ನಸುಬಾಗಿತ್ತು. ಆದರೆ ಲವಲವಿಕೆಯಿತ್ತು. ನಾಲ್ಕೈದು ತಾಸು ಕಾಲ, ಸಾಹಿತ್ಯದ ಬಗ್ಗೆ, ಭಾರತದ ರಾಜಕೀಯ ವಿದ್ಯಮಾನಗಳ ಬಗ್ಗೆ, ಒಳನೋಟಗಳಿಂದ ಕೂಡಿದ ಮಾತುಕತೆಯನ್ನು ನಡೆಸಿಕೊಟ್ಟರು. ನಾನು ಕಳೆದ ೨೫ ವರುಷಗಳಲ್ಲಿ ಮಾಡಿದ ಅತ್ಯತ್ತಮ ಸಂದರ್ಶನವದು. ಇದು ‘ನ್ಯಾಯ ನಿಷ್ಠುರಿಗಳ ಜತೆಯಲ್ಲಿ’ ಸಂಪುಟದಲ್ಲಿ ಅಚ್ಚಾಯಿತು.
ಎದುರು ನಾನೊಬ್ಬನೇ ಇದ್ದರೂ, ರಾಜಶೇಖರ್ ದೊಡ್ಡಸಭೆಯನ್ನು ಸಂಬೋಧಿಸುವಂತೆ ಏರುದನಿಯಲ್ಲಿ ಮಾತಾಡುತ್ತಿದ್ದರು; ಮತೀಯ ರಾಜಕಾರಣದ ಚರ್ಚೆ ಬಂದಾಗಲೆಲ್ಲ ಉದ್ವಿಗ್ನತೆಯಿಂದ ಅವರ ದನಿ ವ್ಯಗ್ರಗೊಳ್ಳುತ್ತಿತ್ತು. ಆದರೆ ಹುಟ್ಟೂರಾದ ಗುಂಡ್ಮಿ, ತಮ್ಮ ಬಾಲ್ಯ, ತಾಯಿ, ತಂದೆ, ಅಲ್ಲಿನ ಪರಿಸರ, ಅಡುಗೆ ಇತ್ಯಾದಿ ವಿಷಯ ಬಂದಾಗ, ದನಿ ಮೃದುಗೊಂಡು ಆಪ್ತತೆ ತನ್ಮಯತೆ ಪಡೆಯುತ್ತಿತ್ತು-ಕುವೆಂಪು ಮಲೆನಾಡಿನ ವಿಷಯ ಬಂದರೆ ಭಾವುಕರಾಗುವ ಹಾಗೆ. ಬದುಕಿನ ಸಣ್ಣಸಂಗತಿಗಳಿಗೆ ಮಿಡಿಯುವ ಅವರ ಆಸ್ಥೆ ಮತ್ತು ಜೀವನ ಪ್ರೀತಿಗಳು, ಅವರಲ್ಲಿರುವ ಪ್ರತಿರೋಧ ಪ್ರಜ್ಞೆಯಷ್ಟೇ ತೀವ್ರವಾಗಿದ್ದವು.
ರಾಜಶೇಖರ್ ಆದಿನ ಒಳ್ಳೇ ಮೂಡಲ್ಲಿದ್ದರು. ಅವರಲ್ಲಿರುವ ಹಾಸ್ಯಪ್ರಜ್ಞೆ ಸುಳಿಸುಳಿಯಾಗಿ ಹೊರಹೊಮ್ಮುತಿತ್ತು. ಅವರು ಸಾಮಾನ್ಯವಾಗಿ ಉಡುಪಿ ಬಿಟ್ಟು ಹೆಚ್ಚು ಹೊರ ಹೋದವರಲ್ಲ. ಉಡುಪಿಯ ಜತೆ ಅವರಿಗೆ ಆಪ್ತವಾದ ಗಾಢವಾದ ನಂಟಿತ್ತು. ಹಿಂದೊಮ್ಮೆ ನನ್ನ ಗುರುಗಳಾದ ಪುಣೇಕರ್ ಅವರು ಉಡುಪಿಯಲ್ಲಿ ವಾಸವಿದ್ದ ವಿಷಯ ಪ್ರಸ್ತಾಪಕ್ಕೆ ಬಂತು. ಆಗ ರಾಜಶೇಖರ್ ಹೇಳಿದರು: “ಅವರು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿದ್ದು ಗೊತ್ತಲ್ಲ? ಅವರಿದ್ದ ಮನೆಯಲ್ಲಿಯೇ ಅಡಿಗರು ಇದ್ರು. ಅದೊಂದು ಹಳೇ ಕಾಲದ ಮನೆ. ಅದರ ಎದುರು ಒಂದಿಷ್ಟು ಖಾಲಿ ಜಾಗ ಇತ್ತು. ಅದನ್ನು ಹಾಗೇ ಹಾಳು ಬಿಟ್ಟಿದ್ರು. ಪುಣೇಕರ್ ಆಗಲಿ, ಅವರ ನಂತರ ಬಂದ ಅಡಿಗರಾಗಲಿ, ಇವರಿಬ್ಬರಿಗಿಂತ ಮೊದಲಿದ್ದ ವಿ.ಎಂ.ಇನಾಂದಾರ್ ಆಗಲಿ, ಮೂರೂ ಪುಣ್ಯಾತ್ಮರು ಒಂದು ಗಿಡಾನೂ ಅಲ್ಲಿ ನೆಡಲಿಲ್ಲ. ಆ ಮನೆಗೊಂದು ಮೊಗಸಾಲೆ ಇತ್ತು. ಅಲ್ಲಿ ಈ ಮೂವರು ಸಂಜೆ ವಿರಾಜಮಾನರಾಗಿರುತ್ತಿದ್ದರು. ಅಡಿಗರಂತೂ ಒಂದಾದ ಮೇಲೊಂದು ಸಿಗರೇಟ್ ಸುಡ್ತಾ ಇದ್ದರು.” ಮಾತಿನ ಮಧ್ಯೆ ಕೆಲವು ಪತ್ರಿಕೆಗಳ ವಿಷಯ ನುಸುಳಿತು. “ನಾನು ಅವನ್ನು ಓದುವುದಿಲ್ಲ” ಎಂದೆ. ಅವರು ತುಸು ಅಸೂಯೆಯಿಂದ “ನೀವು ಅದೃಷ್ಟವಂತರು ಕಂಡ್ರಿ. ದಾರೀಲಿ ನಡೀವಾಗ ಸೈಡಲ್ಲಿ ಬಿದ್ದಿರೋ ಮಲಕ್ಕೆ ಬೇಡವೆಂದೂ ನಮ್ಮ ದೃಷ್ಟಿಹೋಗುತ್ತೆ” ಎಂದು ಸ್ವಗೇಲಿ ಮಾಡಿಕೊಂಡರು.
ರಾಜಶೇಖರ್ ಗೆ, ಸಾಹಿತ್ಯ ಕ್ಷೇತ್ರದಾಚೆ ಇರುವ ಸಾರ್ವಜನಿಕ ವ್ಯಕ್ತಿಗಳ ಬರೆಹ-ಮಾತುಗಾರಿಕೆ ಬಗ್ಗೆ ಬಹಳ ಆಸಕ್ತಿಯಿತ್ತು “ನೀವು ಗದುಗಿನ ತೋಂಟದಾರ್ಯ ಸ್ವಾಮಿಗಳ ಭಾಷಣದಿಂದ, ಅದರಲ್ಲೂ ಅವರ ಕನ್ನಡದಿಂದ ಬಹಳ ಪ್ರಭಾವಿತರಾಗಿದ್ದಿರಿ ಅಂತ ಕೇಳೀದೀನಿ. ಯಾವ ಸನ್ನಿವೇಶ ಅದು?” ಎಂದು ಕೇಳಿದೆ. “ ತೋಂಟದಾರ್ಯ ಸ್ವಾಮಿಗಳೂ, ನಿಡುಮಾಮಿಡಿ ಸ್ವಾಮಿಯವರೂ ಮತ್ತು ನಾನೂ, ಮಂಗಳೂರಿನ ಕೋಮು ಸೌಹಾರ್ದ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯಲ್ಲಿದ್ದೆವು. ಇಬ್ಬರದೂ ಒಂದು ಜುಗಲಬಂದಿ ನಡೀತು ಸ್ವಲ್ಪಹೊತ್ತು-‘ಎಷ್ಟು ಸೊಗಸಾಗಿ ಮಾತಾಡಿದಿರಿ ತಾವು’ ಅಂತ ಒಬ್ಬರು. ‘ಇಲ್ಲಿಲ್ಲ. ತಾವು ತುಂಬ ಚೆನ್ನಾಗಿ ಮಾತಾಡಿದಿರಿ’ ಅಂತ ಇನ್ನೊಬ್ಬರು. ಅದರೆ ಇಬ್ಬರೂ ಸೊಗಸಾಗಿ ಮಾತಾಡಿದ್ದರು. ಗದುಗಿನ ಸ್ವಾಮಿಗಳಂತೂ ಬಹಳ ಸಹಜವಾಗಿ ಮಾತಾಡಿದ್ದರು” ಎಂದು ಸಂತೋಷದಲ್ಲಿ ನೆನೆದರು.
ಹಳೇ ಉಡುಪಿ ಶಹರಿನ ಚಹರೆ ಚರ್ಚೆಗೆ ಬಂತು. ಆಗ ರಾಜಶೇಖರ್ ಬನ್ನಂಜೆಯಲ್ಲಿದ್ದ ಒಂದು ಗುಡಿಯನ್ನು ನೆನೆಸಿಕೊಂಡು ನುಡಿದರು: “ಅಲ್ಲೊಂದು ಬಹಳ ಸುಂದರವಾದ ದೇವಸ್ಥಾನ ಇತ್ತು. ಸರಳವಾದ ಜಾಮಿಟ್ರಿಕಲ್ ಆದ ವಾಸ್ತು ಅದು. ಈಗ ಆ ಟೆಂಪಲ್ನ ವರಿಗೆ ಬುದ್ಧಿ ಬಂದು, ಅದರ ಮೂಲ ಆಕೃತಿ ಮರವೆ ಆಗುವ ಹಾಗೆ ಸುತ್ತ ಒಂದು ತಗಡಿನ ಚಪ್ಪರ ಎಬ್ಬಿಸಿ, ಅದರ ಎದುರುಗಡೆ ಶಿಲೆಯ ಕಾಂಕ್ರೀಟಿನಲ್ಲಿ ಏನೆಲ್ಲವನ್ನು ಮಾಡಬಹುದೊ ಅದನ್ನೆಲ್ಲ ಮಾಡಿದಾರೆ” ಎಂದರು. ಮಸೀದಿ ಕೆಡವಿ ಗುಡಿ ಕಟ್ಟುವುದನ್ನು ಸಾಂಸ್ಕøತಿಕ ಅಪಚಾರವೆಂದು ಭಾವಿಸಿರುವ ಚಿಂತಕನಿಗೆ, ತನ್ನೂರಿನ ಗುಡಿಯ ವಾಸ್ತುವಿನ ಬಗ್ಗೆ ಇದ್ದ ಆಸಕ್ತಿ ಪ್ರೀತಿ ಸೋಜಿಗ ಹುಟ್ಟಿಸಿತು. ಚಿಕ್ಕಮಗಳೂರಿನಲ್ಲಿ ನಡೆದ ಬಾಬಾಬುಡನಗಿರಿ ಕುರಿತ ಕಾರ್ಯಕ್ರಮದಲ್ಲಿ, ಶಬನಂ ವೀರಮಾನ್ವಿ ಹಾಡಿದ ಕಬೀರ್ ಭಜನನ್ನು ಕೇಳಿ ಅವರು `ಹಾ! ಎಂಥಾ ಎನರ್ಜಿ ಮತ್ತು ತನ್ಮಯಗೊಳಿಸುವ ಶಕ್ತಿಯಿದೆ ಈ ಕಂಠಕ್ಕೆ’ ಎಂದು ಆನಂದಪಟ್ಟಿದ್ದನ್ನು ನೆನೆಸಿಕೊಂಡೆ.
ನಾಸ್ತಿಕರು ಅಥವಾ ಕೋಮುವಾದ ಮೂಲಭೂತವಾದ ವಿರೋಧ ಮಾಡುವವರು, ಜನತೆಯ ಧಾರ್ಮಿಕ ಲೋಕಗಳ ಬಗ್ಗೆ ಗೌರವವುಳ್ಳವರು; ಅಲ್ಲಿರುವ ಕಲೆ ಸೌಂದರ್ಯಗಳ ಬಗ್ಗೆ ಪ್ರೀತಿಯುಳ್ಳವರು- ಎಂದರೆ ಕೆಲವರು ನಂಬುವುದಿಲ್ಲ. ಶಕ್ತಿ ರಾಜಕಾರಣವು ಧರ್ಮವನ್ನು ತನ್ನ ಹತ್ಯಾರದಂತೆ ಬಳಸುವುದನ್ನು ವಿರೋಧಿಸುವುದು ಬೇರೆ: ನಿತ್ಯ ಜೀವನದಲ್ಲಿ ಸಾಮಾನ್ಯ ಜನ ಬದುಕುವ ಧರ್ಮವನ್ನು ಮನ್ನಿಸುವುದು ಬೇರೆ ಎಂದರೆ, ಅವರಿಗೆ ಅರ್ಥವಾಗುವುದಿಲ್ಲ. ಅರ್ಥವಾಗುವ ಕೆಲವರು ಇವುಗಳ ನಡುವಿನ ಫರಕನ್ನು ಉದ್ದೇಶಪೂರ್ವಕವಾಗಿ ಮರೆಯಿಸಿ, ‘ವಿಚಾರವಾದಿ’ ‘ಬುದ್ಧಿಜೀವಿ’ ಲೇಖಕರು’ ಎಂಬುವರನ್ನು ‘ಸಮಾಜದ ಕ್ಷೇಮಕ್ಕಾಗಿ ನಿವಾರಿಸಬೇಕಾದ ಪೀಡೆಗಳು’ ಎಂಬ ಗೊಂದಲದ ಸನ್ನಿವೇಶವನ್ನು ನಿರ್ಮಾಣ ಮಾಡಿರುವರು.
ಈ ಸನ್ನಿವೇಶವೇ ಲೇಖಕರ ಹತ್ಯೆಗಳಿಗೂ ಕಾರಣವಾಗುತ್ತಿದೆ. ಆದರೆ ನಿಜವಾದ ವಿಚಾರವಾದವು, ಧರ್ಮದ ಹೆಸರಲ್ಲಿರುವ ಮತೀಯ ರಾಜಕಾರಣವನ್ನು ನಿರಾಕರಿಸುತ್ತಲೇ, ಪರಂಪರೆಯಿಂದ ಬಂದ ಜೀವನ ಕ್ರಮಗಳ ಬಗ್ಗೆ, ಅದು ಸೃಷ್ಟಿಮಾಡಿರುವ ಅಡುಗೆ, ವಾಸ್ತು, ಇತ್ಯಾದಿ ಕ್ಷೇತ್ರಗಳಲ್ಲಿರುವ ಕುಶಲತೆ ಬಗ್ಗೆ ಅಪಾರ ಶ್ರದ್ಧೆ ತೋರುತ್ತದೆ. ಇದು ಕಾರಂತ ಕುವೆಂಪು ಅವರಿಂದ ಕನ್ನಡದಲ್ಲಿ ಹರಿದು ಬಂದಿರುವ ಪರಂಪರೆ. ಲೋಹಿಯಾ ಅವರು ಮಹಾನ್ ವಿಚಾರವಾದಿ. ಆದರೆ ಅವರ `ರಾಮಕೃಷ್ಣಶಿವ’ ಲೇಖನ ಸಾಂಸ್ಕøತಿಕ ಆಸ್ಥೆಯಿರುವ ಮನಸ್ಸು ಮಾತ್ರ ಬರೆಯುವಂಥದ್ದು. ರಾಜಶೇಖರ್ ಇಂಥಾ ಪರಂಪರೆಗೆ ಸೇರಿದ ಚಿಂತಕರು.
ರಾಜಶೇಖರ್ ಜೀವವಿಮಾ ಕಛೇರಿಯಲ್ಲಿ ಸಹಾಯಕರಾಗಿ ಸೇವೆ ಸಲ್ಲಿಸಿದವರು. ಕಳೆದ ದಶಕದಿಂದ ಕೋಮಸೌಹಾರ್ದ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದ ಅವರು, ಜೀವಮಾನ ಉದ್ದಕ್ಕೂ ಬೇರೆಬೇರೆ ಜನಪರ ಚಳುವಳಿಗಳ ಭಾಗವಾದವರು; ಸಾವಿರಾರು ಬೀದಿಭಾಷಣಗಳನ್ನು ಮಾಡಿದವರು. ಅವರ ವಿಮರ್ಶೆ ಓದುವುದು ಮತ್ತು ಭಾಷಣ ಕೇಳುವುದು ಎಂದರೆ, ಸಾಹಿತ್ಯವನ್ನೂ ಅದರ ಘನತೆಯಲ್ಲಿ, ಸಮಾಜವನ್ನು ಅದರ ಸಂಕೀರ್ಣತೆಯಲ್ಲಿ, ಅರಿಯುವ ಕ್ರಮವೇ ಆಗಿದೆ. ಅವರ ಚಿಂತನೆ ಮತ್ತು ಭಾಷೆಗಳಲ್ಲಿರುವ ತೀಕ್ಷ್ಣತೆಗೂ ವ್ಯಕ್ತಿತ್ವದಲ್ಲಿರುವ ತಳಮಳಿಕೆಗೂ ಕಾರಣ, ಅವರ ಸೂಕ್ಷ್ಮಸಂವೇದನೆ ಮಾತ್ರವಲ್ಲ, ಹಾಲಿ ಕರಾವಳಿ ಕರ್ನಾಟಕದ ಪ್ರಕ್ಷುಬ್ಧ ಸನ್ನಿವೇಶ ಕೂಡ.
ಮಾತುಕತೆಯಲ್ಲಿ ನಾನು ಕೇಳುತ್ತಿದ್ದ ಪ್ರಶ್ನೆಗಳಿಗೆ ಅವರು ಬಹಳ ಸಲ `ನನಗೆ ಗೊತ್ತಿಲ್ಲ’ ಎಂದು ವಿವರಣೆ ಶುರುಮಾಡುತ್ತಿದ್ದರು. ಆದರೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಅವರಷ್ಟು ಓದಿದವರು ಕನ್ನಡದಲ್ಲಿ ಕಡಿಮೆ. ಅವರಷ್ಟು ಆಳವಾದ ವ್ಯಾಪಕವಾದ ಓದನ್ನು ವಿಶ್ವವಿದ್ಯಾಲಯಗಳಲ್ಲಿರುವ ನಾವು ಮಾಡಿದ್ದರೆ, ನಮ್ಮ ವಿದ್ಯಾರ್ಥಿಗಳು ಏನೇನಾಗಿರುತ್ತಿದ್ದರೊ? ಆ ದಿನದ ಮಾತುಕತೆಯಲ್ಲಿ ನನಗೆ ಅವರು ಆಂಗ್ಲ ಶಿಕ್ಷಕರಾಗಿದ್ದ ಸಂಗತಿ ಆಕಸ್ಮಿಕವಾಗಿ ತಿಳಿಯಿತು. ಅವರ ಇಂಗ್ಲೀಶ್ ಓದು ಕೂಡ ವ್ಯಾಪಕ.
ಅವರೊಬ್ಬ ಅದ್ಭುತ ಕನ್ನಡ ಗದ್ಯಕಾರ. ಕನ್ನಡದಲ್ಲಿ ಅವರಂತೆ ಮುಕ್ಕಾಗದ ನೈತಿಕ ಪ್ರಜ್ಞೆ ಮತ್ತು ಧೀಮಂತಿಕೆಯುಳ್ಳ ಚಿಂತಕರು ವಿರಳ. ಕನ್ನಡ ಬರೆಹದಲ್ಲಿರುವ ಜಡತೆ ಮತ್ತು ಲಯಗೇಡಿತನ ಕಂಡಾಗಲೆಲ್ಲ ಹರಿಹಾಯುತ್ತಿದ್ದ ಲಂಕೇಶ್, ತಮ್ಮ ಸಾಯುವ ಕೊನೆಯ ಕ್ಷಣಗಳಲ್ಲಿ ಬರೆದ ಟಿಪ್ಪಣಿ, ರಾಜಶೇಖರ ಅವರ ಪ್ರಾಂಜಲವಾದ ಕನ್ನಡವನ್ನು ಕುರಿತಾಗಿತ್ತು. ಬಾಳಿಡೀ ಪ್ರತಿರೋಧ ಮತ್ತು ಆಕ್ಟಿವಿಸಂನಿಂದ ಜಗಜಗಿಸಿದ ರಾಜಶೇಖರ್ ಅವರಲ್ಲಿ, ಮತೀಯವಾದವು ದೇಶವನ್ನು ಈ ಪರಿಯಲ್ಲಿ ಆವರಿಸಿಕೊಂಡಿರುವ ಬಗ್ಗೆ ನಿರಾಶೆಯಿತ್ತು; ಅವರು ಮತ್ತಷ್ಟು ಹತಾಶೆಯ ಗಳಿಗೆಗಳಿಗೆ ತಮ್ಮನ್ನು ಸಿದ್ಧಗೊಳಿಸಿಕೊಳ್ಳುತ್ತಿದ್ದಾರೆ ಎಂದೂ ಅನಿಸಿತು. ಒಳ್ಳೆಯ ಮಾತುಗಾರರಾದ ಅವರು, ಮಾತು ಮತ್ತು ಬರೆಹದ ನಿಷ್ಫಲತೆಯನ್ನೂ ಅರಿತವರು. ಸದ್ಯದ ಚಾರಿತ್ರಿಕ ಸನ್ನಿವೇಶವೇ ಅವರ ಬರೆಹ ಮತ್ತು ಮಾತಿಗೆ ತೀವ್ರತೆಯನ್ನೂ ವಿಷಾದದ ಗುಣವನ್ನೂ ತಂದುಕೊಟ್ಟಂತೆ ತೋರಿತು.
“ನೀವು ಅಷ್ಟೊಂದು ಬೀದಿಭಾಷಣ ಮಾಡಿದವರು. ಆದರೆ ಸೆಮಿನಾರುಗಳಲ್ಲಿ ಬರಕೊಂಡು ಬಂದು ಮಾತಾಡ್ತೀರಲ್ಲ, ಯಾಕೆ?” ಎಂದೆ. “ಎಕ್ಸಟೆಂಪರ್ ಮಾತಾಡೋ ಧೈರ್ಯವೇ ಇಲ್ಲ ನನಗೆ. ಮೈಕ್ ಮುಂದೆ ನಿಂತು ಮಾತಾಡುವಾಗ ಯೋಚನೆ ಮಾಡಿಕೊಂಡು ಬಂದಿದ್ದ ಮಾತೆಲ್ಲ ಮರೆತೇ ಹೋಗುತ್ತೆ. ನನಗೆ ಅಲ್ಲಲ್ಲೇ ನಿಂತುಗೊಂಡು ಸೃಷ್ಟಿ ಮಾತಾಡೋವಷ್ಟು ಸೃಜನಶೀಲತೆ ಇಲ್ಲ. ಕಿ.ರಂ. ಮಾಡ್ತಿದ್ದರಂತೆ ಅದನ್ನ. ಕಿ.ರಂ. ಭಾಷಣ ಮಾಡೋಕೆ ಪುಟಗಟ್ಟಲೆ ನೋಟ್ಸ್ ಮಾಡ್ಕೊಂಡು ಹೋಗ್ತಾರೆ. ಮೈಕ್ ಮುಂದೆ ನಿಂತುಕೊಳ್ತಾರೆ.
ಆಮೇಲೆ ಅದನ್ನು ನೋಡೋದೇ ಇಲ್ಲವಂತೆ. ಮಾಡ್ಕೊಂಡಿರೋ ನೋಟ್ಸೇ ಬೇರೆ; ಎದುರುಗಡೆ ಬಂದು ಹೇಳೋದೇ ಬೇರೆ. ಆ ತರಹದ ಕುಶಲತೆ ನನ್ನ ಹತ್ತರ ಇಲ್ಲ. ಮಾತಿಗೆ ತಡವರಿಸೋದೇ ಜಾಸ್ತಿ. ಸುಮಾರಷ್ಟು ಡಿಸಾಸ್ಟರಸ್ ಎಕ್ಸ್ ಪೀರಿಯನ್ಸ್ ಆಗಿವೆ ನನಗೆ” ಎಂದರು. “ನೀವು ಮೇನ್ ಸ್ಟ್ರೀಂ ಪತ್ರಿಕೆಗಳಲ್ಲಿ ಯಾಕೆ ಬರೆಯೋಲ್ಲ?” ಎಂದೆ. “ನಾನು ಬರೆದಿದ್ದನ್ನು ಅವರು ಹಾಕುವುದಿಲ್ಲ. ನಾನು ಹಿಂದೆ ಬರೆಯುತ್ತಿದ್ದುದು `ಲಂಕೇಶ್ ಪತ್ರಿಕೆ’ಗೆ; ನಂತರ ‘ಗೌರಿಲಂಕೇಶ್’ಗೆ. ಈಗ ಎರಡೂ ಇಲ್ಲ. ನನಗೆ ಬರೆಸುವವರ ಪ್ರಚೋದನೆಯೇ ಇಲ್ಲವಾಗಿದೆ” ಎಂದು ಜವಾಬಿಸಿದರು.
ಹೊರಡುವಾಗ ಅವರ ಜತೆ ನಿಂತು ಫೋಟೊ ತೆಗೆಸಿಕೊಂಡೆ. ಅವರನ್ನು ನಗಿಸಬೇಕೆಂದು ನಾನೂ ವಿಷ್ಣುವೂ ಯತ್ನಿಸಿದೆವು. ತುಸುವೇ ತುಟಿ ಅರಳಿಸಿದರು. ಆಹೊತ್ತಿಗೆ ಮಳೆನಿಂತಿತ್ತು. ಆಗಸ ಹೊರಪಾಗಿತ್ತು. ಬರುತ್ತ ಅವರ ಕಾನನ ಸದೃಶ ಹಿತ್ತಲಿನಿಂದ ಒಂದು ಹೂಗಿಡದ ಸಸಿಯನ್ನು ಹಿಡಿದುಕೊಂಡು ಬಂದೆ.
ತಲ್ಲೂರು ಪ್ರತಿಷ್ಠಾನದ ಉಪನ್ಯಾಸ ಮಾಲೆಯಲ್ಲಿ, ‘ಬಹುತ್ವದ ಬಹುಮುಖಗಳು’ ವಿಷಯ ಕುರಿತು ಮಾತಾಡಲು ಉಡುಪಿಗೆ ಹೋಗಿದ್ದೆ. ಅಲ್ಲಿಗೆ ಹೋದಾಗಲೆಲ್ಲ ನನ್ನ ಪ್ರಿಯ ಚಿಂತಕರಾದ ಜಿ.ರಾಜಶೇಖರ ಅವರನ್ನು ಕಾಣುವ, ಚರ್ಚಿಸುವ ಇರಾದೆಯೂ ಇರುತ್ತಿತ್ತು. ನನ್ನ ಉಪನ್ಯಾಸವನ್ನು ಅವರಿಗೆ ಅರ್ಪಿಸಿ ಮಾತಾಡಿದೆ. ಮಾತು ಮುಗಿಯುವಾಗ ಅವರೇ ಸಭಾಂಗಣಕ್ಕೆ ಬಂದರು. ನನ್ನ ಓದು ಬರೆಹಗಳ ಮೇಲೆ ತುಂಬ ಪ್ರಭಾವ ಬೀರಿದ ಅವರನ್ನು ಈ ಹಿಂದೆ ಮುಖಾಮುಖಿ ಮಾಡುವಾಗೆಲ್ಲ, ಗುರುವಿನ ಮುಂದೆ ಕೂತಾಗಿನ ಆದರ ಅಳುಕು ವಿಸ್ಮಯ. ಈಗ ಒಂದು ಮಗುವಿನ ಮುಂದೆ ಕೂತಂತಾಯಿತು. ಎದೆ ಭಾರವಾಗಿಸುವ ರೂಪಾಂತರ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243




