ರಾಜಕೀಯ
ಮುಖ್ಯಮಂತ್ರಿಯಾಗಿ ಬಿ .ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ
ಸುದ್ದಿದಿನ, ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಬಿ ಎಸ್ ಯಡಿಯೂರಪ್ಪ ಅವರು ಕನ್ನಡ ಭಾಷೆಯಲ್ಲಿ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ರುಢಾಭಾಯಿ ವಾಲಾ ಅವರು ಯಡಿಯೂರಪ್ಪ ಅವರಿಗೆ ಅಧಿಕಾರಪದ ಮತ್ತು ಗೋಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಂಜೆ ಆರೂವರೆ ಗಂಟೆಗೆ ಪ್ರಾರಂಭವಾದ ಈ ಸಮಾರಂಭವು ಆರು ನಿಮಿಷಗಳ ಕಾಲ ನಡೆಯಿತು.
ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ ಭಾಸ್ಕರ್ ಅವರು ಕಾರ್ಯಕ್ರಮವನ್ನು ನಿರೂಪಿಸಿ, ನಿರ್ವಹಿಸಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರೂ ಒಳಗೊಂಡಂತೆ ಹಿರಿಯ ಅಧಿಕಾರಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಈ ಮುನ್ನ 2007 ರ ನವೆಂಬರ್ 12 ರಲ್ಲಿ ಪ್ರಪ್ರಥಮ ಬಾರಿಗೆ ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದರು. ತದನಂತರ, 2008 ರ ಮೇ 30 ರಂದು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು. ಹದಿನೈದನೇ ವಿಧಾನ ಸಭೆಯ ಪ್ರಾರಂಭದಲ್ಲಿ 2018 ರ ಮೇ 17 ರಂದು ಮೂರನೇ ಬಾರಿಗೆ ಮೂರು ದಿನಗಳ ಅವಧಿಗೆ ಹಾಗೂ ಹದಿನಾಲ್ಕು ತಿಂಗಳ ನಂತರ ಇದೀಗ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243