ದಿನದ ಸುದ್ದಿ
ಮಸೀದಿ ಧ್ವಂಸದ ಚಾರಿತ್ರಿಕ ನೋಟ : ಎಲ್ಲರೂ ನಿರ್ದೊಷಿಗಳಾದರೆ ಧ್ವಂಸಗೈದವರಾರು..?
- ಹಾರೋಹಳ್ಳಿ ರವೀಂದ್ರ
ಅಯೋಧ್ಯೆ ಭಾರತದ ಪ್ರಾಚೀನ ನಗರಗಳಲ್ಲಿ ಒಂದು. ಇದು ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯಲ್ಲಿದೆ. ಅಯೋಧ್ಯೆಯು ಸರಾಯು ನದಿಯ ತೀರದಲ್ಲಿದ್ದು, ಭಾರತದ ರಾಜಧಾನಿ ದೆಹಲಿಯಿಂದ 555 ಕಿಲೋಮೀಟರ್ ದೂರದಲ್ಲಿದೆ. ಮೊಘಲ್ ಸಾಮ್ರಾಜ್ಯವು ಭಾರತೀಯ ಉಪಖಂಡ ಉತ್ತರ ಭಾಗಗಳನ್ನು 16ನೇ ಶತಮಾನದಲ್ಲಿ ಆಳಿದ ಪ್ರಮುಖ ಸಾಮ್ರಾಜ್ಯಗಳಲ್ಲಿ ಒಂದು.
ಮೊಘಲ್ ಸಾಮ್ರಾಜ್ಯ ಅಸ್ತಿತ್ವಕ್ಕೆ ಬರುವ ಮುನ್ನ ದೆಹಲಿ ಸುಲ್ತಾನರು ಅಧಿಕಾರ ನಡೆಸುತ್ತಿದ್ದರು. ದೆಹಲಿ ಸುಲ್ತಾನರ ಕೊನೆಯ ದೊರೆಯಾದ ಇಬ್ರಾಹಿಂ ಲೂದಿಯನ್ನು 1526ರ ಮೊದಲನೇ ಪಾಣಿಪತ್ ಕದನದಲ್ಲಿ ಸೋಲಿಸಿ ಮೊಘಲ್ ಸಾಮ್ರಾಜ್ಯದ ಅಸ್ತಿತ್ವಕ್ಕೆ ಬಾಬರ್ನು ಕಾರಣಕರ್ತನಾಗುತ್ತಾನೆ.
ಅಯೋಧ್ಯೆಯಲ್ಲಿ ಒಂದು ಐತಿಹಾಸಿಕ ಹಿನ್ನೆಲೆಯುಳ್ಳ ಮಸೀದಿಯಿತ್ತು ಎಂದರೆ ಅದು ಬಾಬ್ರೀ ಮಸೀದಿ. ಈ ಬಾಬ್ರೀ ಮಸೀದಿಯನ್ನು ಮಸ್ವಿದ್-ಇ-ಜನ್ಮಸ್ಥಾನ್, ಜಾಮೀಮಸೀದಿ ಎಂದು ಹಲವಾರು ಹೆಸರುಗಳಿಂದ ಕರೆಯುತ್ತಾರೆ. ಆ ಸ್ಥಳದಲ್ಲಿ ದೇವಸ್ಥಾನ ಇದ್ದಿದ್ದೆ ಹಿಂದೂ ಹಾಗೂ ಮುಸ್ಲಿಮರ ಮನಸ್ಥಾಪಕ್ಕೆ ಕಾರಣವಾಗಿದ್ದು, ಆ ಸ್ಥಳದಲ್ಲಿ ಹಿಂದೂ ಮತ್ತು ಮುಸ್ಲೀಮರು ಒಟ್ಟಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದರು.
ಆದರೆ ದೇಗುಲ ನೆಪ ಮಾಡಿಕೊಂಡು ಹಿಂದೂ ಮತ್ತು ಮುಸಲ್ಮಾನರಿಗೆ ಮನಸ್ಥಾಪ ಉಂಟಾಗುವಂತೆ ಮಾಡಿದ್ದು ಹಿಂದೂಪರ ಸಂಘಟನೆಗಳು. ಕೋಮುವಾದದ ಬೆಂಕಿಯನ್ನು ಬಾಬ್ರೀ ಮಸೀದಿಯನ್ನು ಧ್ವಂಸಮಾಡುವ ಮೂಲಕ ಹಚ್ಚಿದರು. ಆ ಮೂಲಕ ಆತನಕವೂ ಇಲ್ಲದಿದ್ದ ಧರ್ಮ ಕಲಹ ಮೊಳಕೆಯೊಡೆಯಿತು. ಅದಕ್ಕೆ ಅವರು ನೆಪ ಮಾಡಿಕೊಂಡಿದ್ದು ರಾಮ ಮಂದಿರ ಘೋಷಾವಾಕ್ಯ.
ರಾಮಮಂದಿರ ಕಟ್ಟುವ ಘೋಷಣೆಯೊಂದಿಗೆ ಆಂದೋಲನ ಆರಂಭಿಸಿದ್ದು ವಿಶ್ವ ಹಿಂದೂ ಪರಿಷತ್ತೇ ಆದರು, ಆ ಹೋರಾಟದ ಹಿಂದಿನ ಶಕ್ತಿ ಹಾಗೂ ಅದನ್ನು ಉತ್ತುಂಗಕ್ಕೆ ಕೊಂಡೊಯ್ದದ್ದು ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ, ರಾಮ ರಥಯಾತ್ರೆ ಅವರದೇ ಕಲ್ಪನೆ. ಅದು ರಾಮಭೂಮಿ ಹೋರಾಟಕ್ಕೂ ಆ ಮೂಲಕ ಹಿಂದುತ್ವ ಹೋರಾಟಕ್ಕೂ ಜೊತೆಗೆ ದೇಶದಾದ್ಯಂತ ಬಿಜೆಪಿಗೂ ಟಾನಿಕ್ ನೀಡಿತು. ಮುಂದೆ ಅದೇ ಮಸೀದಿ ಧ್ವಂಸಕ್ಕೂ ಕಾರಣವಾಯಿತು.
ದೇಶದಾದ್ಯಂತ ಹಲವು ರಥಯಾತ್ರೆಗಳನ್ನು ನಡೆಸಿ ಪ್ರಸಿದ್ದಿಗಳಿಸಿರುವ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಅವರ ಮೊದಲ ರಥಯಾತ್ರೆ ‘ರಾಮ ರಥಯಾತ್ರೆ’ ರಾಮ ಜನ್ಮ ಭೂಮಿಯನ್ನು ಸ್ವತಂತ್ರಗೊಳಿಸುವ ಉದ್ದೇಶಗೊಳೊಂದಿಗೆ ಬಿಜೆಪಿ 1990 ಸೆಪ್ಟೆಂಬರ್ 25 ರಂದು ಗುಜರಾತ್ನ ಸೋಮನಾಥದಲ್ಲಿ ರಥಯಾತ್ರೆಗೆ ಚಾಲನೆ ನೀಡಿದರು. 10 ಸಾವಿರ ಕಿ.ಮೀ ಕ್ರಮಿಸಿ ಅದು ಅಕ್ಟೋಬರ್ 30 ರಂದು ಅಯೋಧ್ಯೆಗೆ ತಲುಪುವುದು ಎಂದು ನಿಗದಿಯಾಗಿತ್ತು. ಬಿಜೆಪಿ ಕಾರ್ಯಕರ್ತರು ಹಿಂದೂಗಳ ಮನೆಮನೆಗೆ ತೆರಳಿ ರಾಮಮಂದಿರ ಕಟ್ಟಲು ಇಟ್ಟಿಗೆ ಸಂಗ್ರಹಿಸಿದರು ಆದರೆ ಯಾತ್ರೆ ಕೊನೆಗೊಳ್ಳಲಿಲ್ಲ.
1992, ಡಿಸೆಂಬರ್ 6, ದೇಶದ ಮೂಲೆ ಮೂಲೆಗಳಿದ ಉತ್ತರ ಪ್ರದೇಶದ ಅಯೋಧ್ಯೆಗೆ ಕರಸೇವಕರ ದಂಡು ತೆರಳಿತು. ವಿಎಚ್ಪಿ, ಶಿವಸೇನೆ, ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಅಲ್ಲಿ ನೆರೆದಿದ್ದರು. ನೋಡ ನೋಡುತ್ತಿದ್ದಂತೆಯೇ ಕರಸೇವಕರ ಸೇನೆ ರಾಮ್ಕೋರ್ಟ್ ಪರ್ವತ ಏರಿ ಸಂಜೆಯ ಸೂರ್ಯ ಬಾನಂಚು ಸೇರುವುದೊಳಗೆ ಬಾಬರಿ ಮಸೀದಿಯ ಮೂರು ಗುಮ್ಮಟಗಳನ್ನು ನೆಲಕ್ಕುರುಳಿಸಿದರು. ಅವಶೇಷಗಳಡಿ ಸಿಕ್ಕಿ ಕೆಲ ಕರಸೇವಕರು ಪ್ರಾಣಬಿಟ್ಟರು.
ಕೇಂದ್ರ ಸರ್ಕಾರ ಸ್ಥಳಕ್ಕಟ್ಟಿದ್ದ ಸೇನಾಪಡೆಯ ಯೋಧರಿಗೆ ಮಸೀದಿಯ ಸಮೀಪಕ್ಕು ಹೋಗಲು ಸಾಧ್ಯವಾಗಲಿಲ್ಲ. ಅಂದು ಕೇಂದ್ರ ಸರ್ಕಾರದಲ್ಲಿ ಕಾಂಗ್ರೆಸ್ ಅಸ್ತಿತ್ವದಲ್ಲಿದ್ದು, ಈ ದುರಂತವನ್ನು ತಡೆಯುವಲ್ಲಿ ವಿಫಲವಾಯಿತು. ತದನಂತರ ಪಿ.ವಿ.ನರಸಿಂಹರಾವ್ ನೇತೃತ್ವದ ಕೇಂದ್ರ ಸಕರ್ಾರ ಉತ್ತರ ಪ್ರದೇಶದ ಕಲ್ಯಾಣ್ಸಿಂಗ್ ಅವರ ಬಿ.ಜೆ.ಪಿ ಸರ್ಕಾರವನ್ನು ವಜಾಮಾಡಿ ರಾಷ್ಟ್ರಪತಿ ಆಳ್ವಿಕೆ ಜಾರಿಮಾಡಿತು.
ಬಾಬ್ರಿ ಮಸೀದಿ ಬೆನ್ನಲ್ಲೆ ದೇಶದಾದ್ಯಂತ ಕೋಮುಗಲಭೆಗಳು ಆರಂಭವಾದವು. ಅಯೋಧ್ಯೆಗೆ ತೆರಳಿದ ಕರ ಸೇವಕರು ತವರಿಗೆ ಬಂದು ಸೇರುವುದಕ್ಕೂ ಮುನ್ನವೇ ಅವರ ಊರು ಹೊತ್ತಿ ಉರಿಯುತ್ತಿದ್ದವ್ತು. ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಸೇರಿದಂತೆ ದೇಶದ ಮೂಲೆ ಮೂಲೆಗಳಲ್ಲೂ ಎರಡು ಕೋಮುಗಳ ನಡುವೆ ಸಂಘರ್ಷ ನಡೆಯಿತು.
ಕರ್ನಾಟಕದಲ್ಲಿ ಬೆಂಗಳೂರು, ಮೈಸೂರು, ಗುಲ್ಬರ್ಗ, ಬೀದರ್, ಹುಬ್ಬಳ್ಳಿ, ಧಾರವಾಡ, ದ.ಕನ್ನಡ, ರಾಯಚೂರು, ಚಿತ್ರದುರ್ಗ, ಮಂಡ್ಯ ಮತ್ತು ತುಮಕೂರು ಸೇರಿದಂತೆ ಕೋಮು ಗಲಭೆಗಳು ನಡೆದವು ಡಿ.7 ರಂದು ಆರಂಭವಾದ ಕರ್ನಾಟಕದಲ್ಲಿನ ಹಿಂಸಾಚಾರವು ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯಿತು.
ಇದಕ್ಕೆ 78 ಮಂದಿ ಬಲಿಯಾಗಿದ್ದರು, ಅದರಲ್ಲಿ ಪೊಲೀಸರ ಗುಂಡಿಗೆ ಬಲಿಯಾದವರು 33 ಜನ. ಒಟ್ಟಾರೆ ದೇಶದಾಧ್ಯಂತ ಈ ಕೋಮುಗಲಭೆಯಿಂದ ಸುಮಾರು 2000ಕ್ಕು ಹೆಚ್ಚು ಜನರು ಪ್ರಾಣಬಿಟ್ಟರು. ಇದಾದ ನಂತರ 1996ರಲ್ಲಿ ಕೇಂದ್ರದಲ್ಲಿ ಮೊದಲಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂತು. ಅಟಲ್ಬಿಹಾರಿ ವಾಜಪೇಯಿ ಪ್ರಧಾನಿಯಾದರು.
ಲಿಬ್ಹರಾನ್ ಆಯೋಗ
16 ಡಿಸೆಂಬರ್ 1992 ರಂದು ನ್ಯಾಯಮೂರ್ತಿ ಲಿಬ್ಹರಾನ್ ನೇತೃತ್ವದಲ್ಲಿ ಬಾಬ್ರಿ ಮಸೀದಿ ಧ್ವಂಸ ಕುರಿತು ತನಿಖೆಗಾಗಿ ಆಯೋಗವೊಂದನ್ನು ರಚಿಸಲಾಯಿತು. ಆಯೋಗಕ್ಕೆ ಮೊದಲ ಆದೇಶದಲ್ಲಿ ನೀಡಿದ್ದು ಮೂರೇ ತಿಂಗಳ ಅವಧಿ. ಆದರೆ ಪ್ರಧಾನಿಯ ಕೈಗೆ ನ್ಯಾಯಮೂರ್ತಿ ಲಿಬ್ಹರಾನ್ ವರದಿಯನ್ನು ಒಪ್ಪಿಸಿದ್ದು ಅದಾದ ಹದಿನೇಳು ವರ್ಷಗಳ ನಂತರ, 48 ಬಾರಿ ಕೇಂದ್ರ ಸರ್ಕಾರ ಆಯೋಗದ ಅವಧಿಯನ್ನು ವಿಸ್ತರಿಸಬೇಕಾಯಿತು.
ವರದಿಯು 900 ಕ್ಕು ಹೆಚ್ಚು ಪುಟ್ಳನ್ನು ಒಳಗೊಂಡಿದ್ದು ಆಯೋಗದ ಕಾರ್ಯಕಲಾಪಕ್ಕೆ ಸುಮಾರು 8 ಕೋಟಿ ವೆಚ್ಚವಾಗಿದೆ. ಲಿಬ್ಹರಾನ್ ವರದಿಯಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ, ಸಚಿವ ಮುರುಳಿ ಮನೋಹರ ಜೋಶಿ, ಉಮಾಭಾರತಿ ಇವರು ಧ್ವಂಸಕ್ಕೆ ನೇರ ಕಾರಣರು, ಇದಲ್ಲದೆ ಮಸೀದಿ ಧ್ವಂಸ ತಡೆಯಲು ಅಂದಿನ ಕಾಂಗ್ರೆಸ್ ಸರ್ಕಾರ ಪ್ರಧಾನಿಯಾದ ನರಸಿಂಹರಾವ್ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಅಡ್ವಾಣಿ ರಥಯಾತ್ರೆ ಮಾಡಿದ್ದು ತಪ್ಪು. ಇಡೀ ಘಟನೆಯಲ್ಲಿ ವಿ ಎಚ್ ಪಿ ನಾಯಕರ ಪಾತ್ರ ಪ್ರಮುಖ ಎಂದು ಹೇಳಿತು.
ಮಸೀದಿಯ 2010ರ ಸೆಪ್ಟೆಂಬರ್ ತೀರ್ಪು
ಅಯೋಧ್ಯೆಯನ್ನು ಹೊಂದಿರುವ ಉತ್ತರಪ್ರದೇಶ ಭಯದ ಕಾರ್ಮೋಡ, ಇತರೆ ರಾಜ್ಯಗಳಲ್ಲಿಯೂ ಜನಮನದಲ್ಲೂ ಎಂಥದ್ದೊ ಒಂದು ರೀತಿಯ ಆತಂಕ ಮತ್ತು ಕಳವಳ, ಮುಂಜಾಗ್ರತ ಕ್ರಮವಾಗಿ ಉತ್ತರ ಪ್ರದೇಶದ ಅಂದಿನ ಮಾಯಾವತಿ ಸರ್ಕಾರವು ಅಯೋಧ್ಯೆಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ಆಗಸ್ಟ್ 30 ರಿಂದಲೇ ಜಾರಿಗೆ ತಂದಿತ್ತು. ಕೋಮು ಸಂಘರ್ಷ ಮರುಕಳಿಸದಂತೆ ತಡೆಯಲು ಅವಳಿ ನಗರಗಳಾದ ಅಯೋಧ್ಯೆ, ಫೈಜಾಬಾದ್ನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಎಲ್ಲಿ ನೋಡಿದರೂ ಖಾಕಿಗಳ ದಂಡು ಸುಮಾರು 2 ಲಕ್ಷ ಭದ್ರತಾ ಸಿಬ್ಬಂದಿ, ಉತ್ತರ ಪ್ರದೇಶದ ಪ್ರಮುಖ ಬೀದಿಗಳಲ್ಲಿ ಗಸ್ತು ತಿರುಗುತ್ತಿದ್ದರು. 1500 ಪೊಲೀಸರು ಹೈಕೋರ್ಟ್ ಆವರಣದಲ್ಲಿ ನಿಯೋಜಿಸಲಾಗಿತ್ತು.
2010 ಸೆಪ್ಟೆಂಬರ್ 30 ರಂದು ಅಲಹಬಾದ್ ಹೈಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿತು. ನ್ಯಾಯಮೂರ್ತಿಗಳಾದ ಡಿ.ವಿ.ಶರ್ಮಾ, ಸುಧೀರ್ ಅಗರವಾಲ್ ಮತ್ತು ಎಸ್.ಯು ಖಾನ್ ಅವರಿದ್ದ ತ್ರಿಸದಸ್ಯ ಪೀಠ 2-1 ರ ಆಧಾರದ ಮೇಲೆ 2.77 ಎಕರೆ ಮಸೀದಿ ಜಾಗವನ್ನು ಮೂರು ಭಾಗವಾಗಿ ವಿಂಗಡಿಸಿತು. ಹಿಂದೂ ಮಹಾಸಭಾ ಪ್ರತಿನಿಧಿತ್ವದ ರಾಮಲಲ್ಲ, ಇಸ್ಲಾಂ ಪ್ರತಿನಿಧಿತ್ವದ ಸುನ್ನಿವಕ್ಫ್ ಮಂಡಳಿ ಹಾಗೂ ನಿರ್ಮೋಹಿ ಅಖಾಡಕ್ಕೆ ಸೇರಿದಂತೆ ಮೂರು ಭಾಗಮಾಡಿತು.
ಫಲಕಾರಿಯಾಗದ ಸಂಧಾನ
ಮಸೀದಿ ವಿವಾದ ತೀರ್ಪನ್ನು ಎರಡೂ ಕಡೆಯ ಧಾರ್ಮಿಕ ಮುಖಂಡರು ಒಪ್ಪಲಿಲ್ಲ. ಆದರೆ ಇದನ್ನು ಮಾತುಕತೆ ಮೂಲಕ ಬಗೆಹರಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡರು. ಆದರೆ ಕಾಂಗ್ರೆಸ್ನ ಈ ಪ್ರಯತ್ನವನ್ನು ಬಿಜೆಪಿ ತಳ್ಳಿ ಹಾಕಿತು. ಸಂಪೂರ್ಣ ಜಾಗ ನಮ್ಮದೇ ಆಗಬೇಕೆಂದು ಹಿಂದೂ ಧಾರ್ಮಿಕ ಮುಖಂಡರು ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಂಧಾನಕ್ಕೆ ವಿರೋಧ ವ್ಯಕ್ತಪಡಿಸಿದರು. ಸಂಧಾನದ ಮೂಲಕ ಬಗೆಹರಿಯದ ಈ ಸಮಸ್ಯೆ ಅಂತಿಮವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತು.
2019 ರ ಸುಪ್ರೀಂಕೋರ್ಟ್ ತೀರ್ಪೀ
2010 ರ ಅಲಹಬಾದ್ ಕೋರ್ಟ್ ನ ತೀರ್ಪನ್ನು ಒಪ್ಪದ ರಾಮಲಲ್ಲ ಮತ್ತು ಸುನ್ನಿವಕ್ಫ್ ಬೋರ್ಡ್ ಇಬ್ಬರೂ ಸೇರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದರು 8 ವರ್ಷಗಳ ಸುಧೀರ್ಘ ವಿಚಾರಣೆಯ ನಂತರ 2019ಕ್ಕೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್, ಎಸ್.ಎ.ಬೊಬ್ಬೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಹಾಗೂ ಎಸ್.ಎ.ನಝೀರ್ ಅವರನ್ನೊಳಗೊಂಡ ಪೀಠ ತನ್ನ ತೀರ್ಪನ್ನು ಪ್ರಕಟಿಸಿತು. ಈ ಹಿಂದೆ ಅಲಹಬಾದ್ ಹೈಕೋರ್ಟ್ ಮೂವರಿಗು ಸಮನಾಗಿ ಹಂಚಿದರೆ ಸುಪ್ರೀಂಕೋರ್ಟ್ 2.77 ಎಕರೆ ಮಸೀದಿಯ ಜಾಗವನ್ನು ಮಂದಿರ ಕಟ್ಟಲು ಹಸ್ತಾಂತರಿಸಿ ಮಸೀದಿ ಕಟ್ಟಲು ಬೇರೆ ಕಡೆ ಭೂಮಿಯನ್ನು ನೀಡಲು ತೀರ್ಪು ನೀಡಿತು.
2003 ಮತ್ತು 2020 ರ ಪುರಾವೆ
2019 ರಲ್ಲಿ ಸುಪ್ರೀಂಕೋರ್ಟ್ ಮಂದಿರ ಕಟ್ಟಲು ಸಂಪೂರ್ಣ ಮಸೀದಿ ಜಾಗವನ್ನು ಹಸ್ತಾಂತರಿಸಿ ತೀರ್ಪು ನೀಡಿತು. ಈ ತೀರ್ಪಿಗೆ ಅದು ಆಧರಿಸಿಕೊಂಡಿದ್ದು 2003 ರ ಪುರಾತತ್ವ ಇಲಾಖೆ ವರದಿಯನ್ನು. ದೇವಾಲಯ ಮಾದರಿಯಲ್ಲಿ ಗೋಡೆ ಮತ್ತು ಗೋಪುರಗಳು ಇರುವುದರಿಂದ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ಪುರಾವೆ ಹೇಳಿತು.
ಇದನ್ನು ಸುಪ್ರೀಂಕೋರ್ಟ್ ಕೂಡ ಗಂಭೀರವಾಗಿ ಪರಿಗಣಿಸಿತು. ಮಂದಿರ ಕಟ್ಟಲು ಮಸೀದಿಯನ್ನು ಹಗೆಯುವಾಗ 24 ಮೇ 2020 ರಂದು ಬುದ್ಧನ ವಿಗ್ರಹ ಮಸೀದಿಯ ಕೆಳಗೆ ಸಿಕ್ಕಿತು. ಇದು ಆ ಸಂದರ್ಭದಲ್ಲಿ ಭಾರತದಾಧ್ಯಂತ ದೊಡ್ಡ ಚರ್ಚೆಯಾಯಿತು. ಅಯೋಧ್ಯೆಯು ಹಿಂದೆ ಸಾಕೇತ್ ನಗರವಾಗಿದ್ದು ಬೌದ್ಧರ ಕೇಂದ್ರವಾಗಿತ್ತು ಇದನ್ನು ನಮಗೆ ಹಸ್ತಾಂತರಿಸಿ ಎಂದು ಸಾಕಷ್ಟು ಪ್ರತಿಭಟನೆಗಳು ನಡೆದವು. 2003 ರ ಪುರಾವೆಯನ್ನು ಗಣನೆಗೆ ತೆಗೆದುಕೊಂಡ ಕೋರ್ಟ್ 2020 ರಲ್ಲಿ ಸಿಕ್ಕ ಬುದ್ಧನ ಉತ್ಖನನದ ಬಗೆ ವಿವರಣೆಯನ್ನೆ ಕೇಳಲಿಲ್ಲ.
05 ಆಗಸ್ಟ್ 2020 ಮಂದಿರ ಶಿಲಾನ್ಯಾಸ
ಸುಪ್ರೀಂಕೋರ್ಟ್ 2019 ರಲ್ಲಿ ಸಂಪೂರ್ಣ ಜಾಗವನ್ನು ರಾಮಜನ್ಮಭೂಮಿಗೆ ಹಸ್ತಾಂತರಿಸಿದ ಮೇಲೆ ಅದನ್ನು ಕಟ್ಟಲು ಮೊದಲ ಶಿಲಾನ್ಯಾಸ ಆಗಸ್ಟ್ 5 ರಂದು ನಡೆಯಿತು. ಒಂದು ಖಾಸಗಿ ಟ್ರಸ್ಟ್ ನಿರ್ಮಿಸುತ್ತಿರುವ ರಾಮ ಮಂದಿರ ಶಿಲಾನ್ಯಾಸಕ್ಕೆ ದೇಶದ ಪ್ರಧಾನಿಯಾದ ನರೇಂದ್ರ ಮೋದಿಯವರೇ ನೆರವೇರಿಸಿದರು. ಅದರ ಉಪಸ್ಥಿತಿಯ ಭಾಗವಾಗಿ ಆರ್ ಎಸ್ ಎಸ್ ನ ರಾಷ್ಟ್ರೀಯ ಸಂಚಾಲಕರಾದ ಮೋಹನ್ ಭಾಗವತ್ ಕೂಡ ಇದ್ದರು. ಇಲ್ಲಿಗೆ ಮಸೀದಿ ಕತೆ ಮುಗಿಯಿತು.
ಅಂತಿಮ ತೀರ್ಪು 30 ಸೆಪ್ಟೆಂಬರ್ 2020
ಮಸೀದಿ ಜಾಗದ ವಿವಾದ ಮುಗಿದ ನಂತರ ಮಸೀದಿ ಕೆಡವಿದ ಆರೋಪಿಗಳ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ವಹಿಸಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 49 ಆರೋಪಿಗಳಿದ್ದು ಈಗಾಗಲೇ 17 ಜನ ಮೃತಪಟ್ಟಿದ್ದರಿಂದ 32 ಆರೋಪಿಗಳು ಬದುಕುಳಿದಿದ್ದರು ಅವರಲ್ಲಿ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ, ಕಲ್ಯಾಣ್ ಸಿಂಗ್, ರಾಮಜನ್ಮಭೂಮಿ ಟ್ರಸ್ಟ್ ನ ಗೋಪಾಲ್ ದಾಸ್, ವಿನಯ್ ಕಟಿಯಾರ್, ಧರ್ಮದಾಸ್, ವೇದಾಂತಿ, ಲಲ್ಲುಸಿಂಗ್, ಸಾಕ್ಷಿ ಮಹಾರಾಜ್, ಸಾಧ್ವಿ ರಿತಂಬರಾ, ಚಂಪತ್ ರಾಯ್ ಮತ್ತು ಪವನ್ ಪಾಂಡೆ ಮುಂತಾದವರು ಇದ್ದರು. ಆದರೆ ಸಿಬಿಐ ನ್ಯಾಯಾಲಯವು ಮಸೀದಿ ಕೆಡವಿದ್ದಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲವೆಂದು ಎಲ್ಲಾ ಆರೋಪಿಗಳನ್ನು ನಿರ್ದೋಷಿಗಳೆಂದು ತೀರ್ಪು ನೀಡಿತು.
ಕಾಂಗ್ರೇಸ್ ನ ವೈಫಲ್ಯ
ಲಿಬ್ಹರಾನ್ ವರದಿ ಸಲ್ಲಿಕೆಯ ನಂತರ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮಂಡಿಸುವುದಾಗಿ ಘೋಷಿಸಿದ ಅಂದಿನ ಕಾಂಗ್ರೇಸ್ ಸರ್ಕಾರ ಲಿಬ್ಹರಾನ್ ಆಯೋಗದ ವರದಿಯ ಕಡೆ ತಿರುಗಿಯೂ ನೋಡಲಿಲ್ಲ. ಇದು ಕಾಂಗ್ರೇಸ್ ನ ನಿರ್ಲಕ್ಷ್ಯವೂ ಹೌದು. ಲಿಬ್ಹರಾನ್ ಆಯೋಗದ ವರದಿಯನ್ನು ಅಂದು ಕಾಂಗ್ರೇಸ್ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿ ಸೂಕ್ತ ಕ್ರಮ ಕೈಗೊಂಡಿದ್ದರೆ ಬಿಜೆಪಿಯ ಬಹುತೇಕ ನಾಯಕರು ಜೈಲಿನಲ್ಲಿರುತ್ತಿದ್ದರು.
ಕಾಂಗ್ರೇಸ್ ಕ್ರಮೇಣವಾಗಿ ಆಯೋಗದ ವರದಿಯನ್ನು ನಿರ್ಲಕ್ಷಿಸಿದ ಕಾರಣ ಇಂದು ಬಿಜೆಪಿ ಅಧಿಕಾರಕ್ಕೆ ಬಂದು ನ್ಯಾಯಾಂಗದ ದೃಷ್ಟಿಯಲ್ಲಿ ಎಲ್ಲರೂ ನಿರ್ದೋಷಿಗಳಾದರು. ಬಿಜೆಪಿ ನಾಯಕರ ರಕ್ಷಣೆಯ ಹಿಂದೆ ಕಾಂಗ್ರೇಸ್ ನ ಇಂತಹ ಆಷಾಢಭೂತಿತನವು ಕಾರಣವಾಗಿದೆ. ಕಾಂಗ್ರೆಸ್ ತನ್ನ ಹಳೆಯ ಸಾಂಪ್ರದಾಯಿಕ ನೆಲೆಯ ಸಂಧಾನಕ್ಕೆ ಮತ್ತು ಓಲೈಕೆ ರಾಜಕಾರಣಕ್ಕೆ ಮುಂದಾಹಿತೇ ವಿನಃ ಕೋಮು ಶಕ್ತಿಗಳನ್ನು ಹಿಮ್ಮೆಟ್ಟಿಸಲು ಸಂಪೂರ್ಣ ವಿಫಲವಾಯಿತು.
ಕೊನೆಯದಾಗಿ
1992 ಡಿಸೆಂಬರ್ 6 ರಂದು ಅಡ್ವಾಣಿ ನೇತೃತ್ವದ ರಾಮರಥಯಾತ್ರೆಯ ಮೂಲಕ ಬಂದ ಕರಸೇವಕರು ಮಸೀದಿಯನ್ನು ಧ್ವಂಸಗೊಳಿಸಿದರು ಎಂಬುದು ಇಂದಿಗೂ ಅಂತರಾಷ್ಟ್ರೀಯ ವಿಚಾರ. ಈ ಒಂದು ಘಟನೆಯಿಂದ ದೇಶದಾಧ್ಯಂತ ಗಲಭೆಗಳು ನಡೆದಿವೆ 2000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸುಧೀರ್ಘವಾಗಿ 28 ವರ್ಷಗಳ ವಿಚಾರಣೆ ನಡೆದಿದೆ ಎರಡು ಬಾರಿ ಕೋರ್ಟ್ ತೀರ್ಪು ನಿಡಿವೆ. ಈಗಿರುವಾಗ ಮಸೀದಿಯ ಧ್ವಂಸಕ್ಕೆ ಯಾರು ಕಾರಣ ಎಂಬುದು ತನಿಖೆಯಲ್ಲಿ ತಿಳಿಯಲೇ ಇಲ್ಲವೆ? ವಿಚಾರಣೆಯಲ್ಲಿದ್ದವರೆಲ್ಲಾ ನಿರ್ದೋಷಿಗಳು ಎಂದಾದ ಮೇಲೆ ಮಸೀದಿ ಧ್ವಂಸ ಮಾಡಿದವರು ಯಾರು? ಬಹುಶಃ ಕಣ್ಕಟ್ಟು ಎಂದರೆ ಇದೇ ಇರಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.
ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ1 day agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ1 day agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

