Connect with us

ದಿನದ ಸುದ್ದಿ

ಮಸೀದಿ ಧ್ವಂಸದ ಚಾರಿತ್ರಿಕ ನೋಟ : ಎಲ್ಲರೂ ನಿರ್ದೊಷಿಗಳಾದರೆ ಧ್ವಂಸಗೈದವರಾರು..?

Published

on

  • ಹಾರೋಹಳ್ಳಿ ರವೀಂದ್ರ

ಯೋಧ್ಯೆ ಭಾರತದ ಪ್ರಾಚೀನ ನಗರಗಳಲ್ಲಿ ಒಂದು. ಇದು ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯಲ್ಲಿದೆ. ಅಯೋಧ್ಯೆಯು ಸರಾಯು ನದಿಯ ತೀರದಲ್ಲಿದ್ದು, ಭಾರತದ ರಾಜಧಾನಿ ದೆಹಲಿಯಿಂದ 555 ಕಿಲೋಮೀಟರ್ ದೂರದಲ್ಲಿದೆ. ಮೊಘಲ್ ಸಾಮ್ರಾಜ್ಯವು ಭಾರತೀಯ ಉಪಖಂಡ ಉತ್ತರ ಭಾಗಗಳನ್ನು 16ನೇ ಶತಮಾನದಲ್ಲಿ ಆಳಿದ ಪ್ರಮುಖ ಸಾಮ್ರಾಜ್ಯಗಳಲ್ಲಿ ಒಂದು.

ಮೊಘಲ್ ಸಾಮ್ರಾಜ್ಯ ಅಸ್ತಿತ್ವಕ್ಕೆ ಬರುವ ಮುನ್ನ ದೆಹಲಿ ಸುಲ್ತಾನರು ಅಧಿಕಾರ ನಡೆಸುತ್ತಿದ್ದರು. ದೆಹಲಿ ಸುಲ್ತಾನರ ಕೊನೆಯ ದೊರೆಯಾದ ಇಬ್ರಾಹಿಂ ಲೂದಿಯನ್ನು 1526ರ ಮೊದಲನೇ ಪಾಣಿಪತ್ ಕದನದಲ್ಲಿ ಸೋಲಿಸಿ ಮೊಘಲ್ ಸಾಮ್ರಾಜ್ಯದ ಅಸ್ತಿತ್ವಕ್ಕೆ ಬಾಬರ್ನು ಕಾರಣಕರ್ತನಾಗುತ್ತಾನೆ.

ಅಯೋಧ್ಯೆಯಲ್ಲಿ ಒಂದು ಐತಿಹಾಸಿಕ ಹಿನ್ನೆಲೆಯುಳ್ಳ ಮಸೀದಿಯಿತ್ತು ಎಂದರೆ ಅದು ಬಾಬ್ರೀ ಮಸೀದಿ. ಈ ಬಾಬ್ರೀ ಮಸೀದಿಯನ್ನು ಮಸ್ವಿದ್-ಇ-ಜನ್ಮಸ್ಥಾನ್, ಜಾಮೀಮಸೀದಿ ಎಂದು ಹಲವಾರು ಹೆಸರುಗಳಿಂದ ಕರೆಯುತ್ತಾರೆ. ಆ ಸ್ಥಳದಲ್ಲಿ ದೇವಸ್ಥಾನ ಇದ್ದಿದ್ದೆ ಹಿಂದೂ ಹಾಗೂ ಮುಸ್ಲಿಮರ ಮನಸ್ಥಾಪಕ್ಕೆ ಕಾರಣವಾಗಿದ್ದು, ಆ ಸ್ಥಳದಲ್ಲಿ ಹಿಂದೂ ಮತ್ತು ಮುಸ್ಲೀಮರು ಒಟ್ಟಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದರು.

ಆದರೆ ದೇಗುಲ ನೆಪ ಮಾಡಿಕೊಂಡು ಹಿಂದೂ ಮತ್ತು ಮುಸಲ್ಮಾನರಿಗೆ ಮನಸ್ಥಾಪ ಉಂಟಾಗುವಂತೆ ಮಾಡಿದ್ದು ಹಿಂದೂಪರ ಸಂಘಟನೆಗಳು. ಕೋಮುವಾದದ ಬೆಂಕಿಯನ್ನು ಬಾಬ್ರೀ ಮಸೀದಿಯನ್ನು ಧ್ವಂಸಮಾಡುವ ಮೂಲಕ ಹಚ್ಚಿದರು. ಆ ಮೂಲಕ ಆತನಕವೂ ಇಲ್ಲದಿದ್ದ ಧರ್ಮ ಕಲಹ ಮೊಳಕೆಯೊಡೆಯಿತು. ಅದಕ್ಕೆ ಅವರು ನೆಪ ಮಾಡಿಕೊಂಡಿದ್ದು ರಾಮ ಮಂದಿರ ಘೋಷಾವಾಕ್ಯ.

ರಾಮಮಂದಿರ ಕಟ್ಟುವ ಘೋಷಣೆಯೊಂದಿಗೆ ಆಂದೋಲನ ಆರಂಭಿಸಿದ್ದು ವಿಶ್ವ ಹಿಂದೂ ಪರಿಷತ್ತೇ ಆದರು, ಆ ಹೋರಾಟದ ಹಿಂದಿನ ಶಕ್ತಿ ಹಾಗೂ ಅದನ್ನು ಉತ್ತುಂಗಕ್ಕೆ ಕೊಂಡೊಯ್ದದ್ದು ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ, ರಾಮ ರಥಯಾತ್ರೆ ಅವರದೇ ಕಲ್ಪನೆ. ಅದು ರಾಮಭೂಮಿ ಹೋರಾಟಕ್ಕೂ ಆ ಮೂಲಕ ಹಿಂದುತ್ವ ಹೋರಾಟಕ್ಕೂ ಜೊತೆಗೆ ದೇಶದಾದ್ಯಂತ ಬಿಜೆಪಿಗೂ ಟಾನಿಕ್ ನೀಡಿತು. ಮುಂದೆ ಅದೇ ಮಸೀದಿ ಧ್ವಂಸಕ್ಕೂ ಕಾರಣವಾಯಿತು.

ದೇಶದಾದ್ಯಂತ ಹಲವು ರಥಯಾತ್ರೆಗಳನ್ನು ನಡೆಸಿ ಪ್ರಸಿದ್ದಿಗಳಿಸಿರುವ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಅವರ ಮೊದಲ ರಥಯಾತ್ರೆ ‘ರಾಮ ರಥಯಾತ್ರೆ’ ರಾಮ ಜನ್ಮ ಭೂಮಿಯನ್ನು ಸ್ವತಂತ್ರಗೊಳಿಸುವ ಉದ್ದೇಶಗೊಳೊಂದಿಗೆ ಬಿಜೆಪಿ 1990 ಸೆಪ್ಟೆಂಬರ್ 25 ರಂದು ಗುಜರಾತ್ನ ಸೋಮನಾಥದಲ್ಲಿ ರಥಯಾತ್ರೆಗೆ ಚಾಲನೆ ನೀಡಿದರು. 10 ಸಾವಿರ ಕಿ.ಮೀ ಕ್ರಮಿಸಿ ಅದು ಅಕ್ಟೋಬರ್ 30 ರಂದು ಅಯೋಧ್ಯೆಗೆ ತಲುಪುವುದು ಎಂದು ನಿಗದಿಯಾಗಿತ್ತು. ಬಿಜೆಪಿ ಕಾರ್ಯಕರ್ತರು ಹಿಂದೂಗಳ ಮನೆಮನೆಗೆ ತೆರಳಿ ರಾಮಮಂದಿರ ಕಟ್ಟಲು ಇಟ್ಟಿಗೆ ಸಂಗ್ರಹಿಸಿದರು ಆದರೆ ಯಾತ್ರೆ ಕೊನೆಗೊಳ್ಳಲಿಲ್ಲ.

1992, ಡಿಸೆಂಬರ್ 6, ದೇಶದ ಮೂಲೆ ಮೂಲೆಗಳಿದ ಉತ್ತರ ಪ್ರದೇಶದ ಅಯೋಧ್ಯೆಗೆ ಕರಸೇವಕರ ದಂಡು ತೆರಳಿತು. ವಿಎಚ್ಪಿ, ಶಿವಸೇನೆ, ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಅಲ್ಲಿ ನೆರೆದಿದ್ದರು. ನೋಡ ನೋಡುತ್ತಿದ್ದಂತೆಯೇ ಕರಸೇವಕರ ಸೇನೆ ರಾಮ್ಕೋರ್ಟ್ ಪರ್ವತ ಏರಿ ಸಂಜೆಯ ಸೂರ್ಯ ಬಾನಂಚು ಸೇರುವುದೊಳಗೆ ಬಾಬರಿ ಮಸೀದಿಯ ಮೂರು ಗುಮ್ಮಟಗಳನ್ನು ನೆಲಕ್ಕುರುಳಿಸಿದರು. ಅವಶೇಷಗಳಡಿ ಸಿಕ್ಕಿ ಕೆಲ ಕರಸೇವಕರು ಪ್ರಾಣಬಿಟ್ಟರು.

ಕೇಂದ್ರ ಸರ್ಕಾರ ಸ್ಥಳಕ್ಕಟ್ಟಿದ್ದ ಸೇನಾಪಡೆಯ ಯೋಧರಿಗೆ ಮಸೀದಿಯ ಸಮೀಪಕ್ಕು ಹೋಗಲು ಸಾಧ್ಯವಾಗಲಿಲ್ಲ. ಅಂದು ಕೇಂದ್ರ ಸರ್ಕಾರದಲ್ಲಿ ಕಾಂಗ್ರೆಸ್ ಅಸ್ತಿತ್ವದಲ್ಲಿದ್ದು, ಈ ದುರಂತವನ್ನು ತಡೆಯುವಲ್ಲಿ ವಿಫಲವಾಯಿತು. ತದನಂತರ ಪಿ.ವಿ.ನರಸಿಂಹರಾವ್ ನೇತೃತ್ವದ ಕೇಂದ್ರ ಸಕರ್ಾರ ಉತ್ತರ ಪ್ರದೇಶದ ಕಲ್ಯಾಣ್ಸಿಂಗ್ ಅವರ ಬಿ.ಜೆ.ಪಿ ಸರ್ಕಾರವನ್ನು ವಜಾಮಾಡಿ ರಾಷ್ಟ್ರಪತಿ ಆಳ್ವಿಕೆ ಜಾರಿಮಾಡಿತು.

ಬಾಬ್ರಿ ಮಸೀದಿ ಬೆನ್ನಲ್ಲೆ ದೇಶದಾದ್ಯಂತ ಕೋಮುಗಲಭೆಗಳು ಆರಂಭವಾದವು. ಅಯೋಧ್ಯೆಗೆ ತೆರಳಿದ ಕರ ಸೇವಕರು ತವರಿಗೆ ಬಂದು ಸೇರುವುದಕ್ಕೂ ಮುನ್ನವೇ ಅವರ ಊರು ಹೊತ್ತಿ ಉರಿಯುತ್ತಿದ್ದವ್ತು. ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಸೇರಿದಂತೆ ದೇಶದ ಮೂಲೆ ಮೂಲೆಗಳಲ್ಲೂ ಎರಡು ಕೋಮುಗಳ ನಡುವೆ ಸಂಘರ್ಷ ನಡೆಯಿತು.

ಕರ್ನಾಟಕದಲ್ಲಿ ಬೆಂಗಳೂರು, ಮೈಸೂರು, ಗುಲ್ಬರ್ಗ, ಬೀದರ್, ಹುಬ್ಬಳ್ಳಿ, ಧಾರವಾಡ, ದ.ಕನ್ನಡ, ರಾಯಚೂರು, ಚಿತ್ರದುರ್ಗ, ಮಂಡ್ಯ ಮತ್ತು ತುಮಕೂರು ಸೇರಿದಂತೆ ಕೋಮು ಗಲಭೆಗಳು ನಡೆದವು ಡಿ.7 ರಂದು ಆರಂಭವಾದ ಕರ್ನಾಟಕದಲ್ಲಿನ ಹಿಂಸಾಚಾರವು ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯಿತು.

ಇದಕ್ಕೆ 78 ಮಂದಿ ಬಲಿಯಾಗಿದ್ದರು, ಅದರಲ್ಲಿ ಪೊಲೀಸರ ಗುಂಡಿಗೆ ಬಲಿಯಾದವರು 33 ಜನ. ಒಟ್ಟಾರೆ ದೇಶದಾಧ್ಯಂತ ಈ ಕೋಮುಗಲಭೆಯಿಂದ ಸುಮಾರು 2000ಕ್ಕು ಹೆಚ್ಚು ಜನರು ಪ್ರಾಣಬಿಟ್ಟರು. ಇದಾದ ನಂತರ 1996ರಲ್ಲಿ ಕೇಂದ್ರದಲ್ಲಿ ಮೊದಲಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂತು. ಅಟಲ್ಬಿಹಾರಿ ವಾಜಪೇಯಿ ಪ್ರಧಾನಿಯಾದರು.

ಲಿಬ್ಹರಾನ್ ಆಯೋಗ

16 ಡಿಸೆಂಬರ್ 1992 ರಂದು ನ್ಯಾಯಮೂರ್ತಿ ಲಿಬ್ಹರಾನ್ ನೇತೃತ್ವದಲ್ಲಿ ಬಾಬ್ರಿ ಮಸೀದಿ ಧ್ವಂಸ ಕುರಿತು ತನಿಖೆಗಾಗಿ ಆಯೋಗವೊಂದನ್ನು ರಚಿಸಲಾಯಿತು. ಆಯೋಗಕ್ಕೆ ಮೊದಲ ಆದೇಶದಲ್ಲಿ ನೀಡಿದ್ದು ಮೂರೇ ತಿಂಗಳ ಅವಧಿ. ಆದರೆ ಪ್ರಧಾನಿಯ ಕೈಗೆ ನ್ಯಾಯಮೂರ್ತಿ ಲಿಬ್ಹರಾನ್ ವರದಿಯನ್ನು ಒಪ್ಪಿಸಿದ್ದು ಅದಾದ ಹದಿನೇಳು ವರ್ಷಗಳ ನಂತರ, 48 ಬಾರಿ ಕೇಂದ್ರ ಸರ್ಕಾರ ಆಯೋಗದ ಅವಧಿಯನ್ನು ವಿಸ್ತರಿಸಬೇಕಾಯಿತು.

ವರದಿಯು 900 ಕ್ಕು ಹೆಚ್ಚು ಪುಟ್ಳನ್ನು ಒಳಗೊಂಡಿದ್ದು ಆಯೋಗದ ಕಾರ್ಯಕಲಾಪಕ್ಕೆ ಸುಮಾರು 8 ಕೋಟಿ ವೆಚ್ಚವಾಗಿದೆ. ಲಿಬ್ಹರಾನ್ ವರದಿಯಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ, ಸಚಿವ ಮುರುಳಿ ಮನೋಹರ ಜೋಶಿ, ಉಮಾಭಾರತಿ ಇವರು ಧ್ವಂಸಕ್ಕೆ ನೇರ ಕಾರಣರು, ಇದಲ್ಲದೆ ಮಸೀದಿ ಧ್ವಂಸ ತಡೆಯಲು ಅಂದಿನ ಕಾಂಗ್ರೆಸ್ ಸರ್ಕಾರ ಪ್ರಧಾನಿಯಾದ ನರಸಿಂಹರಾವ್ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಅಡ್ವಾಣಿ ರಥಯಾತ್ರೆ ಮಾಡಿದ್ದು ತಪ್ಪು. ಇಡೀ ಘಟನೆಯಲ್ಲಿ ವಿ ಎಚ್ ಪಿ ನಾಯಕರ ಪಾತ್ರ ಪ್ರಮುಖ ಎಂದು ಹೇಳಿತು.

ಮಸೀದಿಯ 2010ರ ಸೆಪ್ಟೆಂಬರ್ ತೀರ್ಪು

ಅಯೋಧ್ಯೆಯನ್ನು ಹೊಂದಿರುವ ಉತ್ತರಪ್ರದೇಶ ಭಯದ ಕಾರ್ಮೋಡ, ಇತರೆ ರಾಜ್ಯಗಳಲ್ಲಿಯೂ ಜನಮನದಲ್ಲೂ ಎಂಥದ್ದೊ ಒಂದು ರೀತಿಯ ಆತಂಕ ಮತ್ತು ಕಳವಳ, ಮುಂಜಾಗ್ರತ ಕ್ರಮವಾಗಿ ಉತ್ತರ ಪ್ರದೇಶದ ಅಂದಿನ ಮಾಯಾವತಿ ಸರ್ಕಾರವು ಅಯೋಧ್ಯೆಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ಆಗಸ್ಟ್ 30 ರಿಂದಲೇ ಜಾರಿಗೆ ತಂದಿತ್ತು. ಕೋಮು ಸಂಘರ್ಷ ಮರುಕಳಿಸದಂತೆ ತಡೆಯಲು ಅವಳಿ ನಗರಗಳಾದ ಅಯೋಧ್ಯೆ, ಫೈಜಾಬಾದ್ನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಎಲ್ಲಿ ನೋಡಿದರೂ ಖಾಕಿಗಳ ದಂಡು ಸುಮಾರು 2 ಲಕ್ಷ ಭದ್ರತಾ ಸಿಬ್ಬಂದಿ, ಉತ್ತರ ಪ್ರದೇಶದ ಪ್ರಮುಖ ಬೀದಿಗಳಲ್ಲಿ ಗಸ್ತು ತಿರುಗುತ್ತಿದ್ದರು. 1500 ಪೊಲೀಸರು ಹೈಕೋರ್ಟ್ ಆವರಣದಲ್ಲಿ ನಿಯೋಜಿಸಲಾಗಿತ್ತು.

2010 ಸೆಪ್ಟೆಂಬರ್ 30 ರಂದು ಅಲಹಬಾದ್ ಹೈಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿತು. ನ್ಯಾಯಮೂರ್ತಿಗಳಾದ ಡಿ.ವಿ.ಶರ್ಮಾ, ಸುಧೀರ್ ಅಗರವಾಲ್ ಮತ್ತು ಎಸ್.ಯು ಖಾನ್ ಅವರಿದ್ದ ತ್ರಿಸದಸ್ಯ ಪೀಠ 2-1 ರ ಆಧಾರದ ಮೇಲೆ 2.77 ಎಕರೆ ಮಸೀದಿ ಜಾಗವನ್ನು ಮೂರು ಭಾಗವಾಗಿ ವಿಂಗಡಿಸಿತು. ಹಿಂದೂ ಮಹಾಸಭಾ ಪ್ರತಿನಿಧಿತ್ವದ ರಾಮಲಲ್ಲ, ಇಸ್ಲಾಂ ಪ್ರತಿನಿಧಿತ್ವದ ಸುನ್ನಿವಕ್ಫ್ ಮಂಡಳಿ ಹಾಗೂ ನಿರ್ಮೋಹಿ ಅಖಾಡಕ್ಕೆ ಸೇರಿದಂತೆ ಮೂರು ಭಾಗಮಾಡಿತು.

ಫಲಕಾರಿಯಾಗದ ಸಂಧಾನ

ಮಸೀದಿ ವಿವಾದ ತೀರ್ಪನ್ನು ಎರಡೂ ಕಡೆಯ ಧಾರ್ಮಿಕ ಮುಖಂಡರು ಒಪ್ಪಲಿಲ್ಲ. ಆದರೆ ಇದನ್ನು ಮಾತುಕತೆ ಮೂಲಕ ಬಗೆಹರಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡರು. ಆದರೆ ಕಾಂಗ್ರೆಸ್ನ ಈ ಪ್ರಯತ್ನವನ್ನು ಬಿಜೆಪಿ ತಳ್ಳಿ ಹಾಕಿತು. ಸಂಪೂರ್ಣ ಜಾಗ ನಮ್ಮದೇ ಆಗಬೇಕೆಂದು ಹಿಂದೂ ಧಾರ್ಮಿಕ ಮುಖಂಡರು ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಂಧಾನಕ್ಕೆ ವಿರೋಧ ವ್ಯಕ್ತಪಡಿಸಿದರು. ಸಂಧಾನದ ಮೂಲಕ ಬಗೆಹರಿಯದ ಈ ಸಮಸ್ಯೆ ಅಂತಿಮವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತು.

2019 ರ ಸುಪ್ರೀಂಕೋರ್ಟ್ ತೀರ್ಪೀ

2010 ರ ಅಲಹಬಾದ್ ಕೋರ್ಟ್ ನ ತೀರ್ಪನ್ನು ಒಪ್ಪದ ರಾಮಲಲ್ಲ ಮತ್ತು ಸುನ್ನಿವಕ್ಫ್ ಬೋರ್ಡ್ ಇಬ್ಬರೂ ಸೇರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದರು 8 ವರ್ಷಗಳ ಸುಧೀರ್ಘ ವಿಚಾರಣೆಯ ನಂತರ 2019ಕ್ಕೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್, ಎಸ್.ಎ.ಬೊಬ್ಬೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಹಾಗೂ ಎಸ್.ಎ.ನಝೀರ್ ಅವರನ್ನೊಳಗೊಂಡ ಪೀಠ ತನ್ನ ತೀರ್ಪನ್ನು ಪ್ರಕಟಿಸಿತು. ಈ ಹಿಂದೆ ಅಲಹಬಾದ್ ಹೈಕೋರ್ಟ್ ಮೂವರಿಗು ಸಮನಾಗಿ ಹಂಚಿದರೆ ಸುಪ್ರೀಂಕೋರ್ಟ್ 2.77 ಎಕರೆ ಮಸೀದಿಯ ಜಾಗವನ್ನು ಮಂದಿರ ಕಟ್ಟಲು ಹಸ್ತಾಂತರಿಸಿ ಮಸೀದಿ ಕಟ್ಟಲು ಬೇರೆ ಕಡೆ ಭೂಮಿಯನ್ನು ನೀಡಲು ತೀರ್ಪು ನೀಡಿತು.

2003 ಮತ್ತು 2020 ರ ಪುರಾವೆ

2019 ರಲ್ಲಿ ಸುಪ್ರೀಂಕೋರ್ಟ್ ಮಂದಿರ ಕಟ್ಟಲು ಸಂಪೂರ್ಣ ಮಸೀದಿ ಜಾಗವನ್ನು ಹಸ್ತಾಂತರಿಸಿ ತೀರ್ಪು ನೀಡಿತು. ಈ ತೀರ್ಪಿಗೆ ಅದು ಆಧರಿಸಿಕೊಂಡಿದ್ದು 2003 ರ ಪುರಾತತ್ವ ಇಲಾಖೆ ವರದಿಯನ್ನು. ದೇವಾಲಯ ಮಾದರಿಯಲ್ಲಿ ಗೋಡೆ ಮತ್ತು ಗೋಪುರಗಳು ಇರುವುದರಿಂದ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ಪುರಾವೆ ಹೇಳಿತು.

ಇದನ್ನು ಸುಪ್ರೀಂಕೋರ್ಟ್ ಕೂಡ ಗಂಭೀರವಾಗಿ ಪರಿಗಣಿಸಿತು. ಮಂದಿರ ಕಟ್ಟಲು ಮಸೀದಿಯನ್ನು ಹಗೆಯುವಾಗ 24 ಮೇ 2020 ರಂದು ಬುದ್ಧನ ವಿಗ್ರಹ ಮಸೀದಿಯ ಕೆಳಗೆ ಸಿಕ್ಕಿತು. ಇದು ಆ ಸಂದರ್ಭದಲ್ಲಿ ಭಾರತದಾಧ್ಯಂತ ದೊಡ್ಡ ಚರ್ಚೆಯಾಯಿತು. ಅಯೋಧ್ಯೆಯು ಹಿಂದೆ ಸಾಕೇತ್ ನಗರವಾಗಿದ್ದು ಬೌದ್ಧರ ಕೇಂದ್ರವಾಗಿತ್ತು ಇದನ್ನು ನಮಗೆ ಹಸ್ತಾಂತರಿಸಿ ಎಂದು ಸಾಕಷ್ಟು ಪ್ರತಿಭಟನೆಗಳು ನಡೆದವು. 2003 ರ ಪುರಾವೆಯನ್ನು ಗಣನೆಗೆ ತೆಗೆದುಕೊಂಡ ಕೋರ್ಟ್ 2020 ರಲ್ಲಿ ಸಿಕ್ಕ ಬುದ್ಧನ ಉತ್ಖನನದ ಬಗೆ ವಿವರಣೆಯನ್ನೆ ಕೇಳಲಿಲ್ಲ.

05 ಆಗಸ್ಟ್ 2020 ಮಂದಿರ ಶಿಲಾನ್ಯಾಸ

ಸುಪ್ರೀಂಕೋರ್ಟ್ 2019 ರಲ್ಲಿ ಸಂಪೂರ್ಣ ಜಾಗವನ್ನು ರಾಮಜನ್ಮಭೂಮಿಗೆ ಹಸ್ತಾಂತರಿಸಿದ ಮೇಲೆ ಅದನ್ನು ಕಟ್ಟಲು ಮೊದಲ ಶಿಲಾನ್ಯಾಸ ಆಗಸ್ಟ್ 5 ರಂದು ನಡೆಯಿತು. ಒಂದು ಖಾಸಗಿ ಟ್ರಸ್ಟ್ ನಿರ್ಮಿಸುತ್ತಿರುವ ರಾಮ ಮಂದಿರ ಶಿಲಾನ್ಯಾಸಕ್ಕೆ ದೇಶದ ಪ್ರಧಾನಿಯಾದ ನರೇಂದ್ರ ಮೋದಿಯವರೇ ನೆರವೇರಿಸಿದರು. ಅದರ ಉಪಸ್ಥಿತಿಯ ಭಾಗವಾಗಿ ಆರ್ ಎಸ್ ಎಸ್ ನ ರಾಷ್ಟ್ರೀಯ ಸಂಚಾಲಕರಾದ ಮೋಹನ್ ಭಾಗವತ್ ಕೂಡ ಇದ್ದರು. ಇಲ್ಲಿಗೆ ಮಸೀದಿ ಕತೆ ಮುಗಿಯಿತು.

ಅಂತಿಮ ತೀರ್ಪು 30 ಸೆಪ್ಟೆಂಬರ್ 2020

ಮಸೀದಿ ಜಾಗದ ವಿವಾದ ಮುಗಿದ ನಂತರ ಮಸೀದಿ ಕೆಡವಿದ ಆರೋಪಿಗಳ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ವಹಿಸಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 49 ಆರೋಪಿಗಳಿದ್ದು ಈಗಾಗಲೇ 17 ಜನ ಮೃತಪಟ್ಟಿದ್ದರಿಂದ 32 ಆರೋಪಿಗಳು ಬದುಕುಳಿದಿದ್ದರು ಅವರಲ್ಲಿ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ, ಕಲ್ಯಾಣ್ ಸಿಂಗ್, ರಾಮಜನ್ಮಭೂಮಿ ಟ್ರಸ್ಟ್ ನ ಗೋಪಾಲ್ ದಾಸ್, ವಿನಯ್ ಕಟಿಯಾರ್, ಧರ್ಮದಾಸ್, ವೇದಾಂತಿ, ಲಲ್ಲುಸಿಂಗ್, ಸಾಕ್ಷಿ ಮಹಾರಾಜ್, ಸಾಧ್ವಿ ರಿತಂಬರಾ, ಚಂಪತ್ ರಾಯ್ ಮತ್ತು ಪವನ್ ಪಾಂಡೆ ಮುಂತಾದವರು ಇದ್ದರು. ಆದರೆ ಸಿಬಿಐ ನ್ಯಾಯಾಲಯವು ಮಸೀದಿ ಕೆಡವಿದ್ದಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲವೆಂದು ಎಲ್ಲಾ ಆರೋಪಿಗಳನ್ನು ನಿರ್ದೋಷಿಗಳೆಂದು ತೀರ್ಪು ನೀಡಿತು.

ಕಾಂಗ್ರೇಸ್ ನ ವೈಫಲ್ಯ

ಲಿಬ್ಹರಾನ್ ವರದಿ ಸಲ್ಲಿಕೆಯ ನಂತರ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮಂಡಿಸುವುದಾಗಿ ಘೋಷಿಸಿದ ಅಂದಿನ ಕಾಂಗ್ರೇಸ್ ಸರ್ಕಾರ ಲಿಬ್ಹರಾನ್ ಆಯೋಗದ ವರದಿಯ ಕಡೆ ತಿರುಗಿಯೂ ನೋಡಲಿಲ್ಲ. ಇದು ಕಾಂಗ್ರೇಸ್ ನ ನಿರ್ಲಕ್ಷ್ಯವೂ ಹೌದು. ಲಿಬ್ಹರಾನ್ ಆಯೋಗದ ವರದಿಯನ್ನು ಅಂದು ಕಾಂಗ್ರೇಸ್ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿ ಸೂಕ್ತ ಕ್ರಮ ಕೈಗೊಂಡಿದ್ದರೆ ಬಿಜೆಪಿಯ ಬಹುತೇಕ ನಾಯಕರು ಜೈಲಿನಲ್ಲಿರುತ್ತಿದ್ದರು.

ಕಾಂಗ್ರೇಸ್ ಕ್ರಮೇಣವಾಗಿ ಆಯೋಗದ ವರದಿಯನ್ನು ನಿರ್ಲಕ್ಷಿಸಿದ ಕಾರಣ ಇಂದು ಬಿಜೆಪಿ ಅಧಿಕಾರಕ್ಕೆ ಬಂದು ನ್ಯಾಯಾಂಗದ ದೃಷ್ಟಿಯಲ್ಲಿ ಎಲ್ಲರೂ ನಿರ್ದೋಷಿಗಳಾದರು. ಬಿಜೆಪಿ ನಾಯಕರ ರಕ್ಷಣೆಯ ಹಿಂದೆ ಕಾಂಗ್ರೇಸ್ ನ ಇಂತಹ ಆಷಾಢಭೂತಿತನವು ಕಾರಣವಾಗಿದೆ. ಕಾಂಗ್ರೆಸ್ ತನ್ನ ಹಳೆಯ ಸಾಂಪ್ರದಾಯಿಕ ನೆಲೆಯ ಸಂಧಾನಕ್ಕೆ ಮತ್ತು ಓಲೈಕೆ ರಾಜಕಾರಣಕ್ಕೆ ಮುಂದಾಹಿತೇ ವಿನಃ ಕೋಮು ಶಕ್ತಿಗಳನ್ನು ಹಿಮ್ಮೆಟ್ಟಿಸಲು ಸಂಪೂರ್ಣ ವಿಫಲವಾಯಿತು.

ಕೊನೆಯದಾಗಿ

1992 ಡಿಸೆಂಬರ್ 6 ರಂದು ಅಡ್ವಾಣಿ ನೇತೃತ್ವದ ರಾಮರಥಯಾತ್ರೆಯ ಮೂಲಕ ಬಂದ ಕರಸೇವಕರು ಮಸೀದಿಯನ್ನು ಧ್ವಂಸಗೊಳಿಸಿದರು ಎಂಬುದು ಇಂದಿಗೂ ಅಂತರಾಷ್ಟ್ರೀಯ ವಿಚಾರ. ಈ ಒಂದು ಘಟನೆಯಿಂದ ದೇಶದಾಧ್ಯಂತ ಗಲಭೆಗಳು ನಡೆದಿವೆ 2000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸುಧೀರ್ಘವಾಗಿ 28 ವರ್ಷಗಳ ವಿಚಾರಣೆ ನಡೆದಿದೆ ಎರಡು ಬಾರಿ ಕೋರ್ಟ್ ತೀರ್ಪು ನಿಡಿವೆ. ಈಗಿರುವಾಗ ಮಸೀದಿಯ ಧ್ವಂಸಕ್ಕೆ ಯಾರು ಕಾರಣ ಎಂಬುದು ತನಿಖೆಯಲ್ಲಿ ತಿಳಿಯಲೇ ಇಲ್ಲವೆ? ವಿಚಾರಣೆಯಲ್ಲಿದ್ದವರೆಲ್ಲಾ ನಿರ್ದೋಷಿಗಳು ಎಂದಾದ ಮೇಲೆ ಮಸೀದಿ ಧ್ವಂಸ ಮಾಡಿದವರು ಯಾರು? ಬಹುಶಃ ಕಣ್ಕಟ್ಟು ಎಂದರೆ ಇದೇ ಇರಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.

ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.

ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.

ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

Published

on

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.

ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ

ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.

ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?

ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.

ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.

ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ನಿಮ್ಮದು ದರೋಡೆಕೋರ ಸರಕಾರವಲ್ಲವೇ?

ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..

ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending