ದಿನದ ಸುದ್ದಿ
ಬ್ಯಾಂಕ್ ಖಾಸಗೀಕರಣ ದೇಶಕ್ಕೆ ಹಿತಾಸಕ್ತಿಗೆ ಮಾರಕ..!
- ಕೆ.ರಾಘವೇಂದ್ರ ನಾಯರಿ
ಮುಖ್ಯಾಂಶಗಳು
- ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳು ಗಳಿಸುವ ಲಾಭದ ಹಣವು ಜನರ ಅಭ್ಯುದಯಕ್ಕೆ ವಿನಯೋಗವಾಗಬೇಕೇ ಹೊರತು ಖಾಸಗಿ ಬಂಡವಾಳಷಾಹಿಗಳು ಲೂಟಿಗೆ ಅಲ್ಲ.
- ಬ್ಯಾಂಕ್ ಖಾಸಗೀಕರಣವು ದೇಶದ ಹಿತಾಸಕ್ತಿಗೆ ಮಾರಕವಾಗಲಿದೆ.
- ದೇಶದ ಅರ್ಥ ವ್ಯವಸ್ಥೆಯ ಜೀವ ನಾಡಿಗಳಾದ ಸಾರ್ವಜನಿಕ ಬ್ಯಾಂಕುಗಳು ಸರಕಾರದ ಅಧೀನದಲ್ಲೇ ನಡೆಯಬೇಕೇ ಹೊರತು ಖಾಸಗಿಯವರಿಂದ ಅಲ್ಲ.
- ಜನಸಾಮಾನ್ಯರ ಲಕ್ಷಾಂತರ ಕೋಟಿ ರೂಪಾಯಿಗಳ ಠೇವಣಿ ಹಣದ ಭದ್ರತೆಗೆ ಅಪಾಯವಾಗುವ ಸಾಧ್ಯತೆ.
- ಸರಕಾರದ ಖಾಸಗೀಕರಣ ನೀತಿಯ ವಿರುದ್ಧ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ನಡೆಸುತ್ತಿರುವ ಹೋರಾಟಕ್ಕೆ ಸಾರ್ವಜನಿಕರ ಬೆಂಬಲವೂ ಅತ್ಯಗತ್ಯ.
ಸಾರ್ವಜನಿಕ ಕ್ಷೇತ್ರದ ಕೆಲ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳ ಸಂಖ್ಯೆಯನ್ನು 4 ಅಥವಾ 5 ಕ್ಕೆ ಇಳಿಸುವುದಾಗಿ ಕೇಂದ್ರ ಸರಕಾರ ಇತ್ತೀಚೆಗೆ ಹೇಳಿಕೊಂಡಿದೆ. ಇದು ಈ ದೇಶಕ್ಕೆ, ಈ ದೇಶದ ಬ್ಯಾಂಕುಗಳಿಗೆ ಮತ್ತು ಈ ದೇಶದ ಜನಸಾಮಾನ್ಯರಿಗೆ ಆಘಾತವನ್ನುಂಟು ಮಾಡಿದೆ. ಏಕೆಂದರೆ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಖಾಸಗಿಯವರಿಗೆ ಮಾರುವುದರಿಂದ ದೇಶದ ಆರ್ಥಿಕ ವ್ಯವಸ್ಥೆಯ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟಾಗಲಿದೆ.
ಜೊತೆಗೆ ಲಕ್ಷಾಂತರ ಕೋಟಿಯ ಪ್ರಮಾಣದಲ್ಲಿರುವ ಜನತೆಯ ಠೇವಣಿ ಹಣದ ಭದ್ರತೆಯ ಕುರಿತಾಗಿ ಠೇವಣಿದಾರರಿಗೆ ಆತಂಕದ ವಾತಾವರಣ ಸೃಷ್ಠಿಯಾಗಿದೆ. ಇದಕ್ಕಿಂತಲೂ ದುರ್ದೈವದ ವಿಷಯವೆಂದರೆ ದೇಶದಲ್ಲಿ ನಡೆಯುತ್ತಿರುವ ಸರಕಾರದ ಈ ಕೆಟ್ಟ ನೀತಿಯ ವಿರುದ್ಧ ವಿರೋಧ ಪಕ್ಷಗಳನ್ನು ಒಳಗೊಂಡಂತೆ ಯಾವುದೇ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು, ಮಾಧ್ಯಮ ವಲಯದವರು, ವಿಚಾರವಾದಿಗಳು, ಆರ್ಥಿಕ ತಜ್ಞರು, ಲೇಖಕರು-ಅಂಕಣಕಾರರು, ಹೋರಾಟಗಾರರು, ಜನಸಾಮಾನ್ಯರು ತುಟಿ ಬಿಚ್ಚದೇ, ವಿರೋಧವನ್ನು ವ್ಯಕ್ತಪಡಿಸದೇ, ಪ್ರತಿಭಟನೆಯನ್ನು ತೋರಿಸದೇ ಇರುವಂತದ್ದು.
ಬ್ಯಾಂಕ್ ನೌಕರ ಸಂಘಟನೆಗಳ ಪೈಕಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (AIBEA) ಮಾತ್ರ ತನ್ನ ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದೆ ಮತ್ತು ಹೋರಾಟವನ್ನು ರೂಪಿಸುತ್ತಿದೆ. ಇನ್ನೆಲ್ಲ ಸಂಘಟನೆಗಳು ಮೌನವಾಗಿ ಸರಕಾರದ ದೇಶವಿರೋಧಿ ನೀತಿಯನ್ನು ಒಪ್ಪಿಕೊಂಡಂತೆ ಗೋಚರಿಸುತ್ತಿದೆ. ಬ್ಯಾಂಕ್ ರಾಷ್ಟ್ರೀಕರಣ ನೀತಿಯನ್ನೇ ತಲೆ ಕೆಳಗಾಗಿಸುವ ಈ ಹುನ್ನಾರ ಖಂಡಿತವಾಗಿಯೂ ನಮ್ಮ ದೇಶಕ್ಕೆ ಮಾರಕ.
ಸುಮಾರು 51 ವರ್ಷಗಳ ಹಿಂದೆ ಅಂದರೆ 1969ರಲ್ಲಿ ಖಾಸಗಿ ವ್ಯಕ್ತಿಗಳ/ಸಂಸ್ಥೆಗಳ ಬಿಗಿ ಮುಷ್ಠಿಯಲ್ಲಿದ್ದ ನಮ್ಮ ದೇಶದ ಪ್ರಮುಖ 14 ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಲಾಯಿತು. 1969ರವರೆಗೆ ಖಾಸಗಿ ವಲಯದಲ್ಲಿದ್ದ ಬಹುತೇಕ ಬ್ಯಾಂಕುಗಳ ಮಾಲೀಕರು ದೇಶದ ಆರ್ಥಿಕ ಬೆಳವಣಿಗೆಯ ಕುರಿತಾಗಿ ಯಾವುದೇ ರೀತಿಯಲ್ಲಿ ಸ್ಪಂದನೆ ನೀಡುತ್ತಿರಲಿಲ್ಲ. ಈ ಬಂಡವಾಳಷಾಹಿಗಳು ತಮ್ಮ ಕೈಗಾರಿಕೆಗಳ ಅಗತ್ಯಗಳಿಗೆ ಮತ್ತು ತಮಗೆ ಬೇಕಾದವರಿಗೆ ಮಾತ್ರ ಬ್ಯಾಂಕುಗಳಲ್ಲಿದ್ದ ಜನರ ಠೇವಣಿ ಹಣವನ್ನು ಬಳಸುತ್ತಿದ್ದರು.
ಬ್ಯಾಂಕುಗಳಲ್ಲಿರುವ ಅಗಾಧ ಪ್ರಮಾಣದ ಠೇವಣಿ ಹಣ ಜನಸಾಮಾನ್ಯರಿಗೆ ಸೇರಿರುವಂತದ್ದು ಎಂದು ಎಲ್ಲರೂ ತಿಳಿದುಕೊಳ್ಳಬೇಕು. ಮತ್ತು ಇದೇ ಠೇವಣಿ ಹಣದ ಮುಖಾಂತರ ಬ್ಯಾಂಕುಗಳು ಗಳಿಸುವ ಲಾಭದ ಹಣವನ್ನು ಈ ದೇಶದ ಜನಸಾಮಾನ್ಯರ ಅಭ್ಯುದಯಕ್ಕಾಗಿ ವಿನಿಯೋಗಿಸಬೇಕೇ ಹೊರತು ಖಾಸಗಿ ವ್ಯಕ್ತಿಗಳ ಲೂಟಿಗಾಗಿ ಅಲ್ಲ ಎನ್ನುವುದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಅತ್ಯಂತ ಸ್ಪಷ್ಟವಾದ ನಿಲುವಾಗಿದೆ ಮತ್ತು ಅದಕ್ಕಾಗಿ ಹೋರಾಟವನ್ನು ಮಾಡಲಾಗುತ್ತಿದೆ.
ರಾಷ್ಟ್ರೀಕರಣವಾದ ನಂತರದಲ್ಲಿ ಬ್ಯಾಂಕುಗಳು ಅಭೂತಪೂರ್ವವಾಗಿ ಬೆಳವಣಿಗೆಯನ್ನು ಕಂಡಿವೆ. ಜೊತೆಗೆ ದೇಶದ ಆರ್ಥಿಕ ಬೆಳವಣಿಗೆಗೆ, ಜನರ ಆರ್ಥಿಕ ಸ್ವಾವಲಂಬನೆಗೆ ಕಾರಣೀಭೂತವಾಗಿದೆ. ಪ್ರಸ್ತುತ ಬ್ಯಾಂಕುಗಳಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಠೇವಣಿ ಹಣವಿದೆ. ಈ ಠೇವಣಿ ಹಣವನ್ನು ನಮ್ಮ ದೇಶದ ಕೈಗಾರಿಕೋಧ್ಯಮದ ಬೆಳವಣಿಗೆಗೆ, ಸಾರಿಗೆ-ಸಂಪರ್ಕದ ಸ್ಥಾಪನೆಗೆ, ಕೃಷಿ-ನೀರಾವರಿ, ಸಣ್ಣ-ಮದ್ಯಮ ಗಾತ್ರದ ಕೈಗಾರಿಕೆಗಳ ಬೆಳವಣಿಗೆಗೆ, ಶಿಕ್ಷಣ ಪಡೆಯಲು ಮತ್ತು ಜನ ಸಾಮಾನ್ಯರು ಸ್ವ ಉದ್ಯೋಗ ಕಲ್ಪಿಸಿಕೊಳ್ಳುವಂತಹ ಮಹತ್ಕಾರ್ಯಗಳಿಗೆ ಬಳಸಲಾಗುತ್ತಿದೆ.
ಒಟ್ಟಾರೆಯಾಗಿ ಹೇಳುವುದಾದರೆ ನಮ್ಮ ದೇಶದ ಆರ್ಥಿಕ ಬೆಳವಣಿಗೆಗೆ ಜೀವ ನಾಡಿಯಂತೆ ಕಾರ್ಯ ನಿರ್ವಹಿಸುತ್ತಿವೆ ಈ ರಾಷ್ಟ್ರೀಕೃತ ಬ್ಯಾಂಕುಗಳು.
ಈಗಿನ ಕೇಂದ್ರ ಸರಕಾರ ತಮ್ಮದೇ ಆದ ಉದ್ದೇಶಗಳಿಗಾಗಿ ನಮ್ಮ ದೇಶದ ಸಾರ್ವಜನಿಕ ಕ್ಷೇತ್ರದಲ್ಲಿ ಇರುವಂತಹ ಕೈಗಾರಿಕೆಗಳು, ಬ್ಯಾಂಕುಗಳು, ವಿಮಾ ಸಂಸ್ಥೆಗಳು, ರೈಲ್ವೇ, ಭಾರತೀಯ ಸಂಚಾರ ನಿಗಮ, ಏರ್ ಇಂಡಿಯಾ ಮುಂತಾದ ಹಲವಾರು ಪ್ರಮುಖ ಸರಕಾರಿ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಉದ್ದೇಶಿಸಿದೆ. ಈ ಆಸ್ತಿಗಳನ್ನು ಮಾರಲು ಈಗಿನ ಸರಕಾರಕ್ಕೆ ಯಾವುದೇ ನೈತಿಕ ಹಕ್ಕಿಲ್ಲ. ಈ ಎಲ್ಲ ಸಂಸ್ಥೆಗಳು ದೇಶದ ಜನಸಾಮಾನ್ಯರ ಶ್ರಮದಿಂದ, ಬೆವರಿನ ಪ್ರತಿಫಲವಾಗಿ ಸ್ಥಾಪನೆಯಾಗಿವೆ ಮತ್ತು ಬೆಳವಣಿಗೆಯನ್ನು ಕಂಡಿವೆ.
ಖಾಸಗಿ ಕ್ಷೇತ್ರದ ಬ್ಯಾಂಕುಗಳು ತುಂಬಾ ಚೆನ್ನಾಗಿ ಕೆಲಸ ಮಾಡುತ್ತಿವೆ ಎಂದು ಸರಕಾರ ಹೇಳುತ್ತಿದೆ. ಆದರೆ ನಿಜವಾದ ಸಂಗತಿಯೆಂದರೆ ಈ ಹೊಸ ತಲೆಮಾರಿನ ಖಾಸಗಿ ಬ್ಯಾಂಕುಗಳ ಮಾಲೀಕರು ಹಲವು ಬ್ಯಾಂಕುಗಳನ್ನು ಲೂಟಿ ಮಾಡಿದ್ದರಿಂದ ಆ ಲೂಟಿಗೊಳಗಾದ ಬ್ಯಾಂಕುಗಳನ್ನು ಮತ್ತು ಆ ಬ್ಯಾಂಕುಗಳ ಗ್ರಾಹಕರನ್ನು ರಕ್ಷಿಸುವ ಕೆಲಸವನ್ನು ನಮ್ಮ ಹೆಮ್ಮೆಯ ರಾಷ್ಟ್ರೀಕೃತ ಬ್ಯಾಂಕುಗಳು ಮಾಡಿವೆ ಎನ್ನುವುದನ್ನು ಸರಕಾರ ಮರೆಯಬಾರದು ಮತ್ತು ಸಾರ್ವಜನಿಕರಿಗೆ ಇದನ್ನು ಮುಕ್ತವಾಗಿ ತಿಳಿಸಬೇಕು.
ಸಾರ್ವಜನಿಕ ಬ್ಯಾಂಕುಗಳಲ್ಲಿ ಕ್ಲುಪ್ತ ಸಮಯದಲ್ಲಿ ವಸೂಲಾಗದ ಸಾಲದ ಪ್ರಮಾಣ (NON PERFORMING ASSETS) ಅತೀ ಹೆಚ್ಚಿದೆ ಎನ್ನುತ್ತಿದೆ. ಹಾಗಿದ್ದರೆ ಇದಕ್ಕೆ ಕಾರಣರಾರು? ಜನಸಾಮಾನ್ಯರೇ? ಬ್ಯಾಂಕುಗಳ ಠೇವಣಿದಾರರೇ? ಈ ಪರಿಸ್ಥತಿಗೆ ನಿಶ್ಚಿತವಾಗಿಯೂ ಅತೀ ದೊಡ್ಡ ಪ್ರಮಾಣದಲ್ಲಿ ಸಾಲ ಮರುಪಾವತಿ ಮಾಡದಿರುವ ಬೃಹತ್ ಖಾಸಗಿ ಬಂಡವಾಳಷಾಹಿಗಳು ಮತ್ತು ಕೇಂದ್ರ ಸರಕಾರದ ನೀತಿಗಳೇ ಕಾರಣ ಎನ್ನುವುದನ್ನು ಯಾರೂ ಮರೆಯುವಂತಿಲ್ಲ. ಬ್ಯಾಂಕುಗಳ ಇಂದಿನ ಸ್ಥಿತಿಗೆ ಆಳುವ ವರ್ಗದ ರಾಜಕಾರಣಿಗಳ ಕುಮ್ಮಕ್ಕು ಇದೆ ಎನ್ನುವುದನ್ನು ನಾವು ಮನಗಾಣಬೇಕು.
ಸಾಲ ವಸೂಲಾತಿ ವಿಷಯದಲ್ಲಿ ಸರಕಾರ ಬಿಗಿಯಾದ ಕ್ರಮವನ್ನು ಕೈಗೊಂಡಲ್ಲಿ ಸಾಲ ವಸೂಲಾತಿಗೆ ಯಾವುದೇ ಸಮಸ್ಯೆಯಿಲ್ಲ. ಇನ್ನೊಂದೆಡೆ ಸರಕಾರವು ರಾಷ್ಟ್ರೀಕ್ರತ ಬ್ಯಾಂಕುಗಳು ನಷ್ಟದಲ್ಲಿವೆ ಎಂದು ಹೇಳಿಕೊಳ್ಳುತ್ತಿದೆ. ವಸೂಲಾಗದ ಸಾಲವನ್ನು ಬ್ಯಾಂಕುಗಳು ಗಳಿಸುವ ಲಾಭದಿಂದ ವಜಾ ಮಾಡಲಾಗುತ್ತಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಬ್ಯಾಂಕುಗಳ ಲೆಕ್ಕ ಪತ್ರವನ್ನು ಅವಲೋಕಿಸಿದರೆ ಇದು ತಿಳಿಯುತ್ತದೆ. ಆರ್ಥಿಕ ಬಲಾಡ್ಯರು, ರಾಜಕೀಯ ಹಿನ್ನಲೆಯ ಬಲಾಡ್ಯರಿಂದ ಸಾಲವನ್ನು ವಸೂಲಾತಿ ಮಾಡದೇ ಬಡ್ಡಿ ಮನ್ನಾ, ಸಾಲವನ್ನೇ ಮನ್ನಾ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಬ್ಯಾಂಕುಗಳು ಮೊದಲಿಂದಲೂ ಒಳ್ಳೆಯ ಲಾಭವನ್ನು ಗಳಿಸುತ್ತಿವೆ.
ಆದರೆ ಸರಕಾರದ ಮತ್ತು ಬ್ಯಾಂಕ್ ಆಡಳಿತ ಮಂಡಳಿಗಳ ಕೆಟ್ಟ ನೀತಿಯಿಂದಾಗಿ ಬ್ಯಾಂಕುಗಳು ಅನಿವಾರ್ಯವಾಗಿ ನಷ್ಟವನ್ನು ದಾಖಲಿಸಬೇಕಾಗಿದೆ.
ಬ್ಯಾಂಕುಗಳಿಗೆ ಅಗತ್ಯ ಬಂಡವಾಳವನ್ನು ನೀಡಲು ತನ್ನ ಬಳಿ ಹಣವಿಲ್ಲ ಎಂದು ಸರಕಾರ ಒಂದೆಡೆ ಹೇಳುತ್ತಿದೆ. ಬ್ಯಾಂಕುಗಳಲ್ಲಿ ದುಬಾರಿ ಬಂಡವಾಳವಿರಬೇಕೆಂದು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಗಳು ಒಂದೆಡೆ ಷರತ್ತುಗಳನ್ನು ಹಾಕುತ್ತಿವೆ. ನಮ್ಮ ದೇಶದ ಬ್ಯಾಂಕುಗಳಿಗೆ ಆ ತೆರನಾದ ಅಗಾಧ ಪ್ರಮಾಣದ ಅಗತ್ಯ ಖಂಡಿತವಾಗಿಯೂ ಬೇಕಾಗಿಲ. ಸರಕಾರ ಇದರ ಬಗ್ಗೆ ಅಗತ್ಯವಾದ ಕಠಿಣ ನಿಲುವನ್ನು ತೆಗೆದುಕೊಳ್ಳಬೇಕು.
ಠೇವಣಿದಾರರಿಗೆ ನಮ್ಮ ದೇಶದ ಸಾರ್ವಜನಿಕ ಬ್ಯಾಂಕುಗಳ ಮೇಲೆ ಸಂಪೂರ್ಣ ವಿಶ್ವಾಸವಿದೆ. ಆದರೆ ಈ ವಿಶ್ವಾಸ ಖಾಸಗಿ ಬ್ಯಾಂಕುಗಳ ಮೇಲಿಲ್ಲ. ಇನ್ನೊಂದು ಪ್ರಮುಖವಾದ ವಿಷಯವೆಂದರೆ ಕೇಂದ್ರ ಸರಕಾರದ ಎಲ್ಲ ಆರ್ಥಿಕ ಯೋಜನೆಗಳನ್ನು ಮತ್ತು ನೀತಿಗಳನ್ನು ಕಾರ್ಯಗತಗೊಳಿಸುವುದು ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳು ಮಾತ್ರ. ಇಂತಹ ಮಹತ್ವದ ಸೇವೆಗಳನ್ನು ಬ್ಯಾಂಕುಗಳು ಯಾವುದೇ ಶುಲ್ಕವಿಲ್ಲದೇ ಮಾಡುತ್ತಿವೆ. ಆದರೆ ಇದೇ ಸೇವೆಯನ್ನು ಖಾಸಗಿ ಬ್ಯಾಂಕುಗಳಿಂದ ನಿರೀಕ್ಷಿಸಲು ಸಾಧ್ಯವೇ? ಖಾಸಗಿ ಬ್ಯಾಂಕುಗಳ ಮೂಲ ಉದ್ದೇಶ ಲಾಭ ಮಾಡುವುದೇ ಹೊರತು ಸೇವಾ ಉದ್ದೇಶವಿಲ್ಲ.
ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳು ದೇಶದ ಆಮೂಲಾಗ್ರ ಬೆಳವಣಿಗೆಗೆ ಸಹಕಾರ ನೀಡಿದೆ. ದೇಶದ ಕಷ್ಟದ ಸಂದರ್ಭದಲ್ಲೆಲ್ಲ ದೇಶದೊಂದಿಗೆ ನಿಂತಿದೆ. ಇಂತಿರುವಾಗ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳಿಗೆ ಸರಕಾರ ಅಗತ್ಯವಿರುವ ಬಂಡವಾಳ ನೀಡಲೇಬೇಕು. ಇಲ್ಲಿಯವರೆಗೆ ಬ್ಯಾಂಕುಗಳು ನೀಡಿರುವ ಸೇವೆ, ಸರಕಾರಕ್ಕೆ ನೀಡಿರುವ ಲಾಭಾಂಶ, ಡಿವಿಡೆಂಡ್ ಗಳನ್ನು ಗಣನೆಗೆ ತೆಗೆದುಕೊಳ್ಳಬೇಕಲ್ಲವೇ… ದೇಶದ ಕಷ್ಟದ ಸಂದರ್ಭದಲ್ಲಿ ದೇಶದ ಜೊತೆಗೆ ನಿಂತಿರುವ ಬ್ಯಾಂಕುಗಳ ಜೊತೆಗೆ ಈಗಿನ ಪ್ರತಿಕೂಲದ ಸಂದರ್ಭದಲ್ಲಿ ಬ್ಯಾಂಕುಗಳ ಜೊತೆಗೆ ನಿಲ್ಲಬೇಕಾದದ್ದು ಸರಕಾರದ ಜವಾಬ್ದಾರಿಯಲ್ಲವೇ?
ಈಗಿನ ಕೇಂದ್ರ ಸರಕಾರದ ಮುಖ್ಯ ಉದ್ದೇಶ ಕಾರ್ಪೋರೇಟರ್ ಗಳಿಗೆ ನೆರವು ಕೊಡುವುದಾಗಿದೆ.
ಇದಕ್ಕೆ ಸಾಕಷ್ಟು ನಿದರ್ಶನಗಳಿವೆ. ಅವರ ಹಿತಕ್ಕಾಗಿ ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಬಲಿ ಕೊಡಲಾಗುತ್ತಿದೆ. ಜೊತೆಗೆ ವಿದೇಶಿ ಬಂಡವಾಳಷಾಹಿಗಳಿಗೂ ರತ್ನಗಂಬಳಿಯನ್ನು ಹಾಸಿ ಸ್ವಾಗತಿಸಿ ಸಹಕಾರ ನೀಡಲಾಗುತ್ತಿದೆ. ದೇಶದ ಆಸ್ತಿಗಳನ್ನು ರಕ್ಷಿಸುವ ಉದ್ದೇಶವನ್ನು ಹೊಂದಿರುವಂತೆ ಕಾಣಿಸುತ್ತಿಲ್ಲ. ಬ್ಯಾಂಕ್ ಖಾಸಗೀಕರಣದ ನಡೆ ನಮ್ಮ ಆರ್ಥಿಕ ಸ್ವಾವಲಂಬನೆಗೆ, ದೇಶದ ಸಾರ್ವಭೌಮತ್ವಕ್ಕೆ ದೊಡ್ಡ ಹೊಡೆತ ನೀಡುವುದರಲ್ಲಿ ಸಂಶಯವಿಲ್ಲ. ಬಡವರಿಗೆ, ಜನಸಾಮಾನ್ಯರಿಗೆ, ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ, ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಇನ್ನು ಮುಂದೆ ಸಾಲ ಸಿಗುವುದು ಒತ್ತಟ್ಟಿಗಿರಲಿ ಬ್ಯಾಂಕುಗಳ ಒಳಗೆ ಪ್ರವೇಶವೂ ಕಷ್ಟಸಾಧ್ಯವಾಗುವ ಎಲ್ಲ ಸಾಧ್ಯತೆಗಳೂ ಇವೆ. ಜೊತೆಗೆ ಠೇವಣಿ ಹಣವೂ ಲೂಟಿಯಾಗುವ ಅತೀ ದೊಡ್ಡ ಅಪಾಯವೂ ಇದೆ.
ಸರಕಾರದ ಈ ಖಾಸಗೀಕರಣ ನೀತಿಯನ್ನು ಪಕ್ಷ ಬೇಧವಿಲ್ಲದೇ ಸಾರ್ವಜನಿಕರು ವಿರೋಧಿಸಬೇಕು. ಸಾರ್ವಜನಿಕ ಕ್ಷೇತ್ರದ ಉಳಿವಿಗಾಗಿ ದೇಶದ ಜನತೆ ಒಗ್ಗಟ್ಟಾಗಿ ಚಳುವಳಿ ಮಾಡಬೇಕಾಗಿದೆ ಮತ್ತು ಈ ಕುರಿತಾಗಿ ಜನ ಜಾಗೃತಿ ಅಭಿಯಾನವನ್ನು ನಡೆಸಬೇಕಾಗಿದೆ. ರಾಷ್ಟ್ರೀಕರಣ ಬ್ಯಾಂಕಿಂಗ್ ವ್ಯವಸ್ಥೆಗಾಗಿ 60 ರ ದಶಕದಲ್ಲಿ ಹೋರಾಡಿದ್ದ ಏಕೈಕ ಬ್ಯಾಂಕ್ ನೌಕರರ ಸಂಘಟನೆಯಾದ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಇದು ಅದರ ಉಳಿವಿಗಾಗಿ ಹಲವಾರು ರೀತಿಯ ಹೋರಾಟವನ್ನು ಮಾಡುತ್ತಿದೆ.
ಕೋವಿಡ್19 ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಮುಷ್ಕರವನ್ನು ಸಂಘಟಿಸಲು ಸಾಧ್ಯವಾಗುತ್ತಿಲ್ಲ. ಈ ಹೋರಾಟದ ಹಿಂದಿರುವ ಕಾಳಜಿಯನ್ನು ಅರ್ಥೈಸಿಕೊಂಡು ಪ್ರತಿಯೊಬ್ಬ ದೇಶವಾಸಿಗಳು ಬೆಂಬಲಿಸಬೇಕಾಗಿದೆ. ಇದು ನಮ್ಮ ದೇಶದ ಹಿತಾಸಕ್ತಿಗಾಗಿ ನಡೆಸುತ್ತಿರುವ ದೇಶಪ್ರೇಮಿ ಹೋರಾಟವಾಗಿದೆ.
-ಲೇಖಕರು: ಕೆ.ರಾಘವೇಂದ್ರ ನಾಯರಿ
ಮೊ:9844314543
ಮಾಹಿತಿ ಕೃಪೆ: ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಪೆಡರೇಷನ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Bigg Boss Kannada 13: ಹೊಸ ಥೀಮ್, ಹೊಸ ಸ್ಪರ್ಧಿಗಳು, 24×7 ಲೈವ್; ಕಿಚ್ಚ ಸುದೀಪ್ ಸಾರಥ್ಯದ ಬಿಗ್ಬಾಸ್ ಕನ್ನಡ 13ರ ವಿಶೇಷತೆಗಳೇನು?
ಸುದ್ದಿದಿನ,ಬೆಂಗಳೂರು: ಅಂತೂ ಇಂತೂ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ **‘ಬಿಗ್ಬಾಸ್ ಕನ್ನಡ ಸೀಸನ್ 13’**ಗೆ ಅಧಿಕೃತ ಚಾಲನೆ ಸಿಗುವ ಸಮಯ ಬಂದಿದೆ. ಈಗಾಗಲೇ ‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಕುತೂಹಲ ಹೆಚ್ಚಿಸಿರುವ ಕಾರ್ಯಕ್ರಮದ ಟಿವಿ ಸೀಸನ್ ಸೆಪ್ಟೆಂಬರ್ 6ರಿಂದ ಆರಂಭವಾಗಲಿದೆ. ಹೊಸ ಸೀಸನ್ನಲ್ಲಿ ಮನೆ, ಥೀಮ್, ಸ್ಪರ್ಧಿಗಳ ಆಯ್ಕೆ ಹಾಗೂ ವೀಕ್ಷಣಾ ಅನುಭವದಲ್ಲೂ ಹಲವು ವಿಶೇಷತೆಗಳನ್ನು ಪರಿಚಯಿಸಲಾಗುತ್ತಿದೆ.
ಕಳೆದ 12 ಸೀಸನ್ಗಳಂತೆ ಈ ಬಾರಿಯೂ ಕಿಚ್ಚ ಸುದೀಪ್ ಕಾರ್ಯಕ್ರಮದ ನಿರೂಪಕರಾಗಿ ಮುಂದುವರಿಯಲಿದ್ದಾರೆ. ಸತತ 13 ಸೀಸನ್ಗಳನ್ನು ನಿರೂಪಣೆ ಮಾಡುತ್ತಿರುವುದು ಬಿಗ್ಬಾಸ್ ಇತಿಹಾಸದಲ್ಲೇ ಗಮನಾರ್ಹ ದಾಖಲೆಯಾಗಿದೆ.
ಹೈಲೈಟ್ಸ್: ಸೆಪ್ಟೆಂಬರ್ 6ರಿಂದ ಬಿಗ್ಬಾಸ್ ಹವಾ |
|
http://Visit : www.suddidina.com
ಈ ಬಾರಿ ‘Flight’ ಥೀಮ್ ಏಕೆ ವಿಶೇಷ?
ಕಳೆದ ಸೀಸನ್ನಲ್ಲಿ ವೀಕ್ಷಕರು ಅರಮನೆ ಮಾದರಿಯ ಬಿಗ್ಬಾಸ್ ಮನೆಯನ್ನು ಕಂಡಿದ್ದರು. ಆದರೆ ಈ ಬಾರಿ ಇಡೀ ಕಾರ್ಯಕ್ರಮದ ಕಲ್ಪನೆಯೇ ಬದಲಾಗಿದೆ. ‘Flight’ ಥೀಮ್ ಆಧಾರಿತವಾಗಿ ಸೀಸನ್ 13 ರೂಪಿಸಲಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋದಲ್ಲೂ ಇದರ ಝಲಕ್ ಕಾಣಿಸಿಕೊಂಡಿದೆ.
ವಿಶೇಷವೆಂದರೆ ಫ್ಲೈಟ್ ಥೀಮ್ ಕೇವಲ ಪ್ರೋಮೋಗೆ ಸೀಮಿತವಾಗಿಲ್ಲ. ಬಿಗ್ಬಾಸ್ ಮನೆಯ ವಿನ್ಯಾಸದಲ್ಲೂ ಇದೇ ಪರಿಕಲ್ಪನೆಯನ್ನು ಬಳಸಲಾಗಿದೆ. ಹೀಗಾಗಿ ಈ ಬಾರಿ ಮನೆ ಹೇಗೆ ಕಾಣಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಸೆಲೆಬ್ರಿಟಿಗಳ ಜತೆಗೆ ಕಾಮನ್ ಮ್ಯಾನ್ ಎಂಟ್ರಿ
ಬಿಗ್ಬಾಸ್ ಕನ್ನಡದ ಪ್ರತಿ ಸೀಸನ್ನಲ್ಲೂ ಸ್ಪರ್ಧಿಗಳ ಆಯ್ಕೆ ಪ್ರಮುಖ ಆಕರ್ಷಣೆಯಾಗಿರುತ್ತದೆ. ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಜನರಿಗೂ ಅವಕಾಶ ಕಲ್ಪಿಸಲಾಗುತ್ತಿದೆ.
‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಆಯ್ಕೆಯಾಗುವ ಮೂವರು ಸಾಮಾನ್ಯ ಸ್ಪರ್ಧಿಗಳು ಸೀಸನ್ 13ರ ಮನೆಗೆ ಪ್ರವೇಶಿಸಲಿದ್ದಾರೆ. ಇದರಿಂದ ಮನೆಯಲ್ಲಿ ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳ ನಡುವಿನ ಸಂವಹನ, ಅಭಿಪ್ರಾಯ ಭೇದ ಹಾಗೂ ಹೊಸ ರೀತಿಯ ಸ್ಪರ್ಧೆ ಮೂಡುವ ನಿರೀಕ್ಷೆಯಿದೆ.
ಮನೆಯ ಪ್ರತಿಕ್ಷಣವೂ 24×7 ಲೈವ್
ಈ ಬಾರಿ ವೀಕ್ಷಕರಿಗೆ ಮತ್ತೊಂದು ದೊಡ್ಡ ಸೌಲಭ್ಯ ಸಿಗಲಿದೆ. ಟಿವಿ ಎಪಿಸೋಡ್ಗಳಿಗೆ ಮಾತ್ರ ಸೀಮಿತವಾಗದೆ, ಜಿಯೋಹಾಟ್ಸ್ಟಾರ್ನಲ್ಲಿ ಬಿಗ್ಬಾಸ್ ಮನೆಯ 24×7 ಲೈವ್ ವೀಕ್ಷಣೆ ಲಭ್ಯವಿರಲಿದೆ.
ಅಂದರೆ ದಿನದ ಎಪಿಸೋಡ್ನಲ್ಲಿ ಪ್ರಸಾರವಾಗದ ಮನೆಯೊಳಗಿನ ಹಲವು ಬೆಳವಣಿಗೆಗಳನ್ನೂ ವೀಕ್ಷಕರು ಗಮನಿಸಬಹುದು. ಸ್ಪರ್ಧಿಗಳ ನಡುವಿನ ಮಾತುಕತೆ, ಚಟುವಟಿಕೆಗಳು ಹಾಗೂ ಅನಿರೀಕ್ಷಿತ ಘಟನೆಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶ ಸಿಗಲಿದೆ.
ಪ್ರಸಾರದ ಸಮಯವೂ ಫಿಕ್ಸ್
ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಪ್ರಸಾರವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಹೊಸ ಸಂಚಿಕೆಗಳು ಪ್ರಸಾರವಾಗಲಿವೆ.
ಇನ್ನು ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ನಡೆಸಿಕೊಡುವ ಶನಿವಾರ ಮತ್ತು ಭಾನುವಾರದ ವಿಶೇಷ ಸಂಚಿಕೆಗಳು ರಾತ್ರಿ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿವೆ.
ಬಿಗ್ಬಾಸ್ ಪ್ರಯಾಣ ಯಾವ ದಿಕ್ಕಿಗೆ?
ಫ್ಲೈಟ್ ಥೀಮ್, ಹೊಸ ಮುಖಗಳು, ಸಾಮಾನ್ಯ ಸ್ಪರ್ಧಿಗಳ ಪ್ರವೇಶ ಮತ್ತು 24×7 ಲೈವ್ ವೀಕ್ಷಣೆಯೊಂದಿಗೆ ಸೀಸನ್ 13 ಕುತೂಹಲ ಮೂಡಿಸಿದೆ. ಈ ‘ಫ್ಲೈಟ್’ನಲ್ಲಿ ಯಾರು ಟೇಕಾಫ್ ಆಗುತ್ತಾರೆ, ಯಾರು ಮಧ್ಯದಲ್ಲೇ ಎಲಿಮಿನೇಟ್ ಆಗುತ್ತಾರೆ ಮತ್ತು ಕೊನೆಯವರೆಗೂ ಯಾರು ಪ್ರಯಾಣ ಮುಂದುವರಿಸುತ್ತಾರೆ ಎಂಬುದೇ ಮುಂದಿನ ದಿನಗಳ ಪ್ರಮುಖ ಪ್ರಶ್ನೆ.

ದಿನದ ಸುದ್ದಿ
ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ
ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.
ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.
ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ |
|
http://Visit : www.suddidina.com
ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ
ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.
ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.
ಗ್ರಾಮ ಒನ್ನಲ್ಲೇ ಅರ್ಜಿ ಸಲ್ಲಿಕೆ
ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.
ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.
ಬುಧವಾರ ಮೂರು ಹಂತದ ಪರಿಶೀಲನೆ
ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.
ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.
ಸ್ಥಳದಲ್ಲೇ ಮಂಜೂರಾತಿ, ಆನ್ಲೈನ್ನಲ್ಲಿ ಸ್ಥಿತಿ
ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.
ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.
ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ
ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

ದಿನದ ಸುದ್ದಿ
Fake Doctors in Karnataka: ಜೀವದ ಜೊತೆ ಚೆಲ್ಲಾಟವಾಡುವ ನಕಲಿ ವೈದ್ಯರು; ದಾಳಿ, ದಂಡ, ಕೇಸ್ಗಳ ನಡುವೆಯೂ ಮುಂದುವರಿದ ಜಾಲ
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಕಳಪೆ ಔಷಧ ಪ್ರಕರಣಗಳು ಚರ್ಚೆಯಲ್ಲಿರುವ ನಡುವೆಯೇ, ವೈದ್ಯಕೀಯ ಕ್ಷೇತ್ರದ ಮತ್ತೊಂದು ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಕರ್ನಾಟಕದಲ್ಲಿ ಅನಧಿಕೃತವಾಗಿ ವೈದ್ಯಕೀಯ ಸೇವೆ ನೀಡುತ್ತಿರುವ ನಕಲಿ ವೈದ್ಯರ ಹಾವಳಿ ಮುಂದುವರಿದಿದ್ದು, ಕಳೆದ ಮೂರು ವರ್ಷಗಳಲ್ಲಿ ಆರೋಗ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 582 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿವೆ. ಇವರಿಗೆ ಸೇರಿದ ಅನಧಿಕೃತ ಕ್ಲಿನಿಕ್ಗಳನ್ನು ಮುಚ್ಚಿಸಲಾಗಿದ್ದು, ಹಲವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇತ್ತೀಚೆಗೆ ಕೋನಸಾಗರದಲ್ಲಿ ನಕಲಿ ವೈದ್ಯೆಯೊಬ್ಬರು ನೀಡಿದ ಚುಚ್ಚುಮದ್ದಿನ ಬಳಿಕ ರೈತರೊಬ್ಬರು ಮೃತಪಟ್ಟಿರುವ ಆರೋಪದ ಪ್ರಕರಣ ನಕಲಿ ವೈದ್ಯರ ಜಾಲದ ಅಪಾಯಕಾರಿ ಮುಖವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. ಅನಧಿಕೃತವಾಗಿ ಚಿಕಿತ್ಸೆ ನೀಡುವುದು ಮಾತ್ರವಲ್ಲದೆ, ಕೆಲವರು ಮನೆಯಲ್ಲೇ ಕ್ಲಿನಿಕ್ಗಳನ್ನು ನಡೆಸುತ್ತಿರುವುದು ಹಾಗೂ ಪ್ರಯೋಗಾಲಯಗಳನ್ನೂ ನಿರ್ವಹಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.
ಹೈಲೈಟ್ಸ್: ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ತೀವ್ರ |
|
http://Visit : www.suddidina.com
582 ಪ್ರಕರಣ, 87 ಮಂದಿಗೆ ದಂಡ
ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಮೂರು ವರ್ಷಗಳ ಅವಧಿಯಲ್ಲಿ 582 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿವೆ. ಇವರ ಕ್ಲಿನಿಕ್ಗಳನ್ನು ಮುಚ್ಚುವ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 87 ನಕಲಿ ವೈದ್ಯರಿಗೆ ದಂಡ ವಿಧಿಸಲಾಗಿದ್ದು, 128 ಮಂದಿ ಇನ್ನೂ ದಂಡ ಪಾವತಿಸಿಲ್ಲ. ಇದೇ ಅವಧಿಯಲ್ಲಿ 29 ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಯ ಹಂತದಲ್ಲಿವೆ.
ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯ ವ್ಯಾಪ್ತಿಯಲ್ಲಿಯೂ ನೋಂದಣಿ ಅಥವಾ ಅಗತ್ಯ ಪರವಾನಗಿ ಇಲ್ಲದೆ ವೈದ್ಯಕೀಯ ವೃತ್ತಿ ನಡೆಸುತ್ತಿರುವವರ ವಿರುದ್ಧ ದಾಳಿ ನಡೆಸಲಾಗಿದೆ.
ಜಿಲ್ಲೆಗಳಲ್ಲಿ ಸಕ್ರಿಯವಾಗಿರುವ ಜಾಲ
ನಕಲಿ ವೈದ್ಯರನ್ನು ಪತ್ತೆಹಚ್ಚಲು ರಾಜ್ಯ ಸರಕಾರ 2017ರಲ್ಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ವಿಶೇಷ ಪಡೆ ರಚಿಸಿತ್ತು. ಇದರಲ್ಲಿ ಪೊಲೀಸ್ ಇಲಾಖೆ, ಆಯುಷ್ ಅಧಿಕಾರಿಗಳು ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದಾರೆ.
ನಿರಂತರ ದಾಳಿಗಳ ನಡುವೆಯೂ ನಕಲಿ ವೈದ್ಯರ ಜಾಲ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ವಿಶೇಷವಾಗಿ ಸಣ್ಣಪುಟ್ಟ ಗಲ್ಲಿ, ಕೊಳೆಗೇರಿ ಪ್ರದೇಶಗಳಲ್ಲಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಹೆಸರಿನಲ್ಲಿ ಇಂತಹವರು ಕಾರ್ಯನಿರ್ವಹಿಸುತ್ತಿರುವ ಆರೋಪಗಳಿವೆ. ನಗರ ಪ್ರದೇಶಗಳಲ್ಲೂ ಇಂತಹ ಅನಧಿಕೃತ ಕ್ಲಿನಿಕ್ಗಳು ಪತ್ತೆಯಾಗುತ್ತಿವೆ.
ಉತ್ತರ ಕರ್ನಾಟಕದಲ್ಲಿ ಹೆಚ್ಚು ಪ್ರಕರಣ
ಕಾರ್ಯಾಚರಣೆಯಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಕಲಿ ವೈದ್ಯರು ಪತ್ತೆಯಾಗುತ್ತಿದ್ದಾರೆ. ಕಲಬುರಗಿ, ರಾಯಚೂರು, ಧಾರವಾಡ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಡಿಮೆ ಹಣದಲ್ಲಿ ಚಿಕಿತ್ಸೆ ಸಿಗುತ್ತದೆ ಎಂಬ ಕಾರಣಕ್ಕೆ ಸಾರ್ವಜನಿಕರು ಅರ್ಹತೆ ಮತ್ತು ನೋಂದಣಿ ಪರಿಶೀಲಿಸದೆ ಇಂತಹವರನ್ನು ಸಂಪರ್ಕಿಸುವುದು ಸಮಸ್ಯೆಗೆ ಕಾರಣವಾಗುತ್ತಿದೆ.
ಕಾನೂನು ಉಲ್ಲಂಘಿಸಿದರೆ ಜೈಲು, ದಂಡ
ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವುದು ಪತ್ತೆಯಾದರೆ ಕೆಪಿಎಂಇ ತಿದ್ದುಪಡಿ ಅಧಿನಿಯಮ 2017ರ ಸೆಕ್ಷನ್ 19ರ ಅಡಿಯಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹1 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ನೋಂದಣಿ ಇಲ್ಲದೆ ಖಾಸಗಿ ವೈದ್ಯಕೀಯ ಸಂಸ್ಥೆ ನಡೆಸಿದರೆ ಅದನ್ನು ಮುಚ್ಚಿಸುವ ಕ್ರಮ ಕೈಗೊಳ್ಳಲಾಗುತ್ತದೆ. ನಿಯಮಗಳನ್ನು ಉಲ್ಲಂಘಿಸಿದ ಸಂಸ್ಥೆಗಳ ವಿರುದ್ಧ ದಂಡ ಹಾಗೂ ನೋಂದಣಿ ರದ್ದತಿಯಂತಹ ಕ್ರಮಗಳಿಗೂ ಅವಕಾಶವಿದೆ.
ನಕಲಿ ವೈದ್ಯರ ವಿರುದ್ಧದ ಕಾನೂನು ಕ್ರಮದ ಜತೆಗೆ ಸಾರ್ವಜನಿಕರ ಜಾಗೃತಿಯೂ ಅತ್ಯಂತ ಮುಖ್ಯ. ವೈದ್ಯರನ್ನು ಸಂಪರ್ಕಿಸುವ ಮುನ್ನ ಅವರ ವೈದ್ಯಕೀಯ ನೋಂದಣಿ, ಅರ್ಹತೆ ಮತ್ತು ಕ್ಲಿನಿಕ್ನ ಕಾನೂನುಬದ್ಧ ನೋಂದಣಿ ಪರಿಶೀಲಿಸುವುದು ಜೀವ ರಕ್ಷಣೆಯ ಮೊದಲ ಹೆಜ್ಜೆಯಾಗಬಹುದು.
ಸಿಕ್ಕಿಬಿದ್ದ ನಕಲಿ ವೈದ್ಯರು ಅಂಕಿ-ಅಂಶ (2024-2026) |
|
“ನಕಲಿ ಔಷಧಿ ಜಾಲದಂತೆ ನಕಲಿ ವೈದ್ಯರಿಗೂ ಕಡಿವಾಣ ಹಾಕಲಾಗುವುದು. ಅಂಥವರ ಪತ್ತೆಗೆ ಯೋಜನೆ ರೂಪಿಸುತ್ತೇವೆ. ಸಿಕ್ಕಿಬಿದ್ದಲ್ಲಿ ವಿಳಂಬವಿಲ್ಲದೆ ಕಟ್ಟುನಿಟ್ಟಿನ ಕ್ರಮ ವಹಿಸುತ್ತೇವೆ. ಜನರು ಮಾಹಿತಿ ಕೊಟ್ಟರೂ ಕ್ರಮ ವಹಿಸುತ್ತೇವೆ.”
– ಯು.ಟಿ.ಖಾದರ್ ಆರೋಗ್ಯ ಸಚಿವ

-
ದಿನದ ಸುದ್ದಿ5 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ6 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ5 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ6 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ6 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ5 days agoಡಾಲಿಯ ಕನಸು ಒಂದೇ ಹೀರೋ ಆಗೋದು
-
ದಿನದ ಸುದ್ದಿ6 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ




