Connect with us

ದಿನದ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಯ ವರ್ಗಾವಣೆ ಪತ್ರ ಕೊಡುವ ಹಿನ್ನೆಲೆ; ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್‌ಮೂರ್ತಿ ಬೇಜವಾಬ್ದಾರಿ ನಡೆ , ಸೂಕ್ತ ಕ್ರಮಕ್ಕೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಆಗ್ರಹ

Published

on

ಸುದ್ದಿದಿನ,ದಾವಣಗೆರೆ: ವಿದ್ಯಾರ್ಥಿನಿಯ ವರ್ಗಾವಣೆ ಪತ್ರ ಕೊಡುವ ಹಿನ್ನೆಲೆ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್‌ಮೂರ್ತಿ ಅವರ ಬೇಜಾಬ್ದಾರಿ ನಡೆಯ ಕುರಿತುರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎ. ಓಬಳೇಶ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ತಾಲ್ಲೂಕು ಗೋಣಿವಾಡ ಕ್ಯಾಂಪ್ ನಿವಾಸಿಗಳಾದ ಪಟ್ಟಾಬಿ ಎನ್. ಇವರು ತಮ್ಮ ಮಗಳಾದ ಕುಶಿ.ಎನ್. ಇವರನ್ನು ದಾವಣಗೆರೆ ನಗರದ ಡಿ.ಸಿ.ಎಂ. ಟೌನ್‌ಶಿಪ್‌ನಲ್ಲಿರುವ ಗೋಲ್ಡನ್ ಪಬ್ಲಿಕ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಎಲ್.ಕೆ.ಜಿ ಯಿಂದ ೨ನೇ ತರಗತಿಯವರೆಗೆ ವ್ಯಾಸಾಂಗ ಮಾಡಿಸಿರುತ್ತಾರೆ.

ಕರೋನಾ ಬಿಕ್ಕಟ್ಟಿನ ಕಾರಣದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಸದರಿ ಪೋಷಕರು 202-22ನೇ ಸಾಲಿನ ಶಾಲಾ ಶುಲ್ಕವನ್ನು ತುಂಬಿ, ತಮ್ಮ ಮಗಳನ್ನು ತಮ್ಮ ಸ್ವಗ್ರಾಮವಾದ ಗೋಣಿವಾಡ ಕ್ಯಾಂಪಿನಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿಗೆ ದಾಖಲು ಮಾಡಿರುತ್ತಾರೆ. ಆದರೆ ಹಿಂದಿನ ಶಾಲೆಯ ಆಡಳಿತ ಮಂಡಳಿಯು ಕುಶಿ.ಎನ್ ಎಂಬ ಮಗುವಿನ ವರ್ಗಾವಣೆ ಪ್ರಮಾಣಪತ್ರವನ್ನು ಕೊಡಲು ಪೋಷಕರಿಗೆ ನಿರಾಕರಿಸಿರುತ್ತಾರೆ ಎಂದು ತಿಳಿಸಿದರು.

ಇದಕ್ಕೆ ಕಾರಣ 2021-22ನೇ ಸಾಲಿನಲ್ಲಿ ಈ ಮಗುವಿಗೆ ವರ್ಗಾವಣೆ ಪ್ರಮಾಣಪತ್ರವನ್ನು ಕೊಡಬೇಕಾದರೆ ಸದರಿ ವರ್ಷದ ಶೇ 70ರಷ್ಟು ಶುಲ್ಕವನ್ನು ತುಂಬಿದರೆ ಮಾತ್ರ ವರ್ಗಾವಣೆ ಪ್ರಮಾಣಪತ್ರವನ್ನು ನೀಡುತ್ತೇವೆ ಎಂದು ತಾಕೀತು ಮಾಡಿರುತ್ತಾರೆ. ಹಾಗೆಯೇ ಸದರಿ ವರ್ಷದಲ್ಲಿ ಮಗು ದಾಖಲಾಗಿರುವ ಸರ್ಕಾರಿ ಶಾಲೆಯ ಮುಖ್ಯೋಪಧ್ಯಾಯರು ಕೂಡ ವರ್ಗಾವಣೆ ಪತ್ರವನ್ನು ನೀಡುವಂತೆ ಪತ್ರದ ಮುಖಾಂತರ ಮನವಿ ಮಾಡಿಕೊಂಡಿರುತ್ತಾರೆ.

ಇದಕ್ಕೂ ಖಾಸಗಿ ಶಾಲೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಇದರಿಂದ ಆತಂಕಗೊಂಡ ಪೋಷಕರು ತಮ್ಮ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಾದ ಎನ್.ಎಂ.ಮಂಜುನಾಥ್ ಅವರ ಬಳಿ ತಮ್ಮ ಅಳಲನ್ನು ಹಂಚಿಕೊಂಡಾಗ, ಮತ್ತಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಮಂಜುನಾಥ್ ಇವರು ಇದಕ್ಕೆ ಸಂಬಂಧಿಸಿದ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ನಿರಂಜನ್‌ಮೂರ್ತಿಯವರಿಗೆ ಕರೆ ಮಾಡಿ, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದೂರು ಹೇಳಿದಾಗ, ಹಿಂದಿನ ವರ್ಷದ ಶಾಲಾ ಶುಲ್ಕವನ್ನು ಸಂದಾಯ ಮಾಡಿದರೆ ಮಾತ್ರ ವರ್ಗಾವಣೆ ಪತ್ರವನ್ನು ನೀಡುತ್ತಾರೆ.

ಇಲ್ಲದೆ ಹೋದರೆ ವರ್ಗಾವಣೆ ಪತ್ರ ನೀಡಲು ಸಾಧ್ಯವಿಲ್ಲ ಎಂದು ತಿಳಿಸುತ್ತಾರೆ. ಇದಕ್ಕೆ ಪ್ರತಿಯಾಗಿ ಶ್ರೀ ಎನ್.ಎಂ.ಮಂಜುನಾಥ್ ಅವರು ಮಗುವಿನ ಪೋಷಕರು ಹಿಂದಿನ ವರ್ಷದ ಎಲ್ಲ ಶುಲ್ಕವನ್ನು ಪಾವತಿಸಿದರೂ ಶಾಲಾ ಆಡಳಿತ ಮಂಡಳಿಯು ವರ್ಗಾವಣೆ ಪತ್ರ ನೀಡಲು ನಿರಾಕರಿಸಿದೆ. ಅಲ್ಲದೆ ಸದರಿ ವರ್ಷದ ಶೇ 70 ರಷ್ಟು ಶುಲ್ಕ ನೀಡಿದರೆ ಮಾತ್ರ ವರ್ಗಾವಣೆ ಪತ್ರ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ.

ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ‘ಇನ್ನೂ ಮುಂದೆ ಖಾಸಗಿ ಶಾಲೆಗಳು ಮಕ್ಕಳಿಗೆ ವರ್ಗಾವಣೆ ಪತ್ರ ನೀಡಲು ನಿರಾಕರಿಸಿದರೆ ಪೋಷಕರು ಆತಂಕ ಪಡುವ ಅವಶ್ಯಕತೆಯಿಲ್ಲ. ಆಯಾ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ನೇರವಾಗಿ ವರ್ಗಾವಣೆ ಪತ್ರ ಪಡೆಯುವ ಅವಕಾಶ ನೀಡಲಾಗಿದೆ’ ಎಂದು ಪತ್ರಿಕೆ ಹೇಳಿಕೆಯನ್ನು ನೀಡಿದ್ದಾರೆ.

ಅದರಂತೆ ತಾವೇ ಈ ಮಗುವಿಗೆ ವರ್ಗಾವಣೆ ಪತ್ರ ನೀಡಿ ಎಂದು ಕೇಳಿಕೊಂಡಾಗ, ಹೀಗೆ ಕೊಡುವುದಕ್ಕೆ ಸಾಧ್ಯವಿಲ್ಲ. ‘ನಮಗೆ ಇಂತಹ ಯಾವುದೇ ಆದೇಶ ಬಂದಿಲ್ಲ. ಖಾಸಗಿ ಶಾಲೆಗಳನ್ನು ನಾವು ಕಾಪಾಡಬೇಕು. ಆದ್ದರಿಂದ ನೀವು ಹೇಳಿದಂತೆ ಕೇಳಲು ಸಾಧ್ಯವಿಲ್ಲ. ಇದಕ್ಕೆ ಸಂಬAಧಿಸಿದ ಪೋಷಕರಿಗೆ ಕರೆ ಮಾಡಲು ಹೇಳಿ, ನಾನು ಸದರಿ ವಿಷಯದ ಬಗ್ಗೆ ಅವರಿಗೆ ಅರಿವು ಮೂಡಿಸುತ್ತೇನೆ’ ಎಂಬುದಾಗಿ ಹೇಳಿರುತ್ತಾರೆ.

ಮಾನ್ಯರಾದ ತಮ್ಮಲ್ಲಿ ಈ ಮೂಲಕ ವಿನಂತಿಸಿಕೊಳ್ಳುವುದೇನೆಂದರೆ, ಕರೋನಾ ಸಂಕಷ್ಟದಿಂದಾಗಿ ಸಾಮಾನ್ಯ ಜನರ ಬದುಕು ಬೀದಿಗೆ ಬಂದಿರುವ ಸ್ಥಿತಿ ತಮಗೆಲ್ಲ ತಿಳಿದಿದೆ. ಹೀಗಾಗಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲಾಗದೆ ಪೋಷಕರು ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರಿಂದಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಿದೆ.

ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಪೋಷಕರಿಗೆ ಆರ್ಥಿಕ ಹೊರೆಯನ್ನು ತಪ್ಪಿಸುವ ನಿಟ್ಟಿನಲ್ಲಿ, ಪ್ರತಿಯೊಂದು ಮಗುವಿಗೂ ಶಿಕ್ಷಣವು ಸುಲಭವಾಗಿ ತಲುಪುವಂತೆ ಮಾಡುವುದಕ್ಕಾಗಿ, ಪೋಷಕರು ಖಾಸಗಿ ಶಾಲೆಗೆ ಅಲೆಯುವುದನ್ನು ತಪ್ಪಿಸಲು ವರ್ಗಾವಣೆ ಪತ್ರ ಕೊಡದ ಶಾಲೆಗಳ ವರ್ಗಾವಣೆ ಪತ್ರವನ್ನು ಆಯಾ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡುವ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಎಂಬ ವಿಷಯ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಉಮಾಶಂಕರ್ ಅವರು ಪತ್ರಿಕಾ ಹೇಳಿಕೆಯನ್ನು ನೀಡಿರುತ್ತಾರೆ. ಇಂತಹ ಸಂದರ್ಭದಲ್ಲಿ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್‌ಮೂರ್ತಿಯವರು ಅನ್ಯಾಯಕ್ಕೆ ಒಳಗಾದ ಪೋಷಕರ ಪರವಾಗಿ ನಿಲ್ಲದೆ, ಖಾಸಗಿ ಶಾಲೆಗಳ ಹಿತಕಾಯುವಂತಹ ಬೇಜವಬ್ದಾರಿ ಮಾತುಗಳನ್ನಾಡಿರುವುದು ನಿಜಕ್ಕೂ ಶೋಚನೀಯವಾದ ಸಂಗತಿಯಾಗಿದೆ.

ಆದ್ದರಿಂದ ಸದರಿ ಅರ್ಜಿಯೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎನ್.ಎಂ.ಮಂಜುನಾಥ್ ಅವರೊಂದಿಗೆ ನಡೆಸಿದ ಸಂಭಾಷಣೆಯ ತುಣುಕನ್ನು ಸಿ.ಡಿಯಲ್ಲಿ ಲಗತ್ತಿಸಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಮಾನ್ಯ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ದಾವಣಗೆರೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ ಇವರಿಗೆ ಬೇಜವಬ್ದಾರಿ ಹೇಳಿಕೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಾಗೆಯೇ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಸಂಕಷ್ಟಕ್ಕೆ ಒಳಗಾಗಿರುವ ಪೋಷಕರ ಆರ್ಥಿಕ ಒತ್ತಡವನ್ನು ತಪ್ಪಿಸಿ, ಸರ್ಕಾರಿ ಶಾಲೆಯತ್ತ ಮುಂದಾಗಿರುವ ಮಕ್ಕಳ ಹಿತಕಾಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕದ ವತಿಯಿಂದ ಲಿಖಿತ ದೂರು ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗೋವರ್ಧನ್, ಗ್ರಾಮ ಪಂಚಾಯತಿ ಸದಸ್ಯ ಎಂ,ಎನ್ ಮಂಜುನಾಥ, ಹೂವಿನ ಮಡು ರವಿ, ನಾಗೇಶ್ವರರಾವ್ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending