Connect with us

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending