ಲೈಫ್ ಸ್ಟೈಲ್
ನಾಡಿಗೆ ಬಂದ ಕಾಡುಕೋಣ..!
- ಪಶುವೈದ್ಯರುಗಳ ಪೇಷಂಟುಗಳು ಬರೀ ದನ, ಎಮ್ಮೆ, ಕೋಳಿ,ಕುರಿ, ಆಡು, ನಾಯಿ, ಬೆಕ್ಕು, ಕೋಳಿ, ಹಂದಿ ಇತ್ಯಾದಿಗಳಿಗೆ ಸೀಮಿತವಾಗಿರದೆ ಮೊಲ, ಇಲಿ, ಕೋತಿ, ಆಮೆ, ಹುಲಿ, ಸಿಂಹ, ಒಂಟೆ, ಆನೆ, ಚಿರತೆ, ಹಾವು , ನರಿ, ಜಿಂಕೆ, ಕಡಿವೆ ಇತ್ಯಾದಿ ತರಹೇವಾರಿ ವನ್ಯಜೀವಿಗಳ ಚಿಕಿತ್ಸೆ ಮತ್ತು ಜೀವನ ಕ್ರಮದ ಬಗ್ಗೆಯೂ ತಿಳಿದುಕೋಂಡಿರಬೇಕಾಗುತ್ತದೆ. ಕೆಲವೊಮ್ಮೆ ಈ ಪ್ರಾಣಿಗಳನ್ನು ಚಿಕಿತ್ಸೆ ಮಾಡುವಾಗ ಸಾಕಷ್ಟು ಅಪಾಯವೂ ಕಾದಿರುತ್ತದೆ. ಗಾಯಗೊಂಡ ಕಾಡುಕೋಣವೊಂದರ ಚಿಕಿತ್ಸೆಯ ರೋಚಕ ಅನುಭವ.
–ಡಾ. ಎನ್.ಬಿ.ಶ್ರೀಧರ
ಶನಿವಾರವೊಂದರ ಮಧ್ಯಾಹ್ನ 11 ಘಂಟೆಯಿರಬಹುದು. ಆ ದಿನ ತಾಳಗುಪ್ಪದಲ್ಲಿ ಸಂತೆ. ಆಸ್ಪತ್ರೆಯಲ್ಲಿ ಗಿಜಿಗುಟ್ಟುವಷ್ಟು ಜನ ಮತ್ತು ತರಹೆವಾರಿ ಕೇಸುಗಳು. ಹುಳವಾಗಿ ಗಬ್ಬು ನಾರುವ ಗಾಯದಿಂದ ಹಿಡಿದು ಸಂತಾನಹರಣ ಚಿಕಿತ್ಸೆಗೆಂದು ಕಾಯುತ್ತಿರುವ ಪಕ್ಕದ ತಾಲೂಕು ಸೊರಬದ ಶ್ವಾನಗಳ ಸವಾರಿ ಕ್ಯೂನಲ್ಲಿತ್ತು. ಒಳರೋಗಿಗಳಾಗಿ ಮಾಡಿಕೊಂಡ ಕೆಲವು “ಪೇಷಂಟು”ಗಳ ಚಿಕಿತ್ಸೆಯೂ ಕಾದಿತ್ತು. ನಾನೇ ಪ್ರಯೋಗಕ್ಕೆಂದು ತಂದು ಸಂಶಯಿತ ವಿಷಗಿಡಗಳನ್ನು ತಿನ್ನಿಸುಸುತ್ತಿರುವ ಕರುಗಳ ಗುಂಪಿತ್ತು. ಮನೆಗೆ ಚಿಕಿತ್ಸೆಗೆ ಕರೆದಿರುವ “ಟೂರಿಂಗ್ ಪೇಷಂಟು”ಗಳ ಪಟ್ಟಿಯೂ ಸಹ ಬೆಳೆಯುತ್ತಿತ್ತು.
ಅಷ್ಟರಲ್ಲೇ ನನ್ನ ಶಿಷ್ಯ “ಸಾರ್..ಡಿ ಎಪ್ ಓ ಅವರು ಲೈನಿನಲ್ಲಿದ್ದಾರೆ. ಗರಂ ಆಗಿದಾರೆ.. ನಿಮ್ಮ ಜೊತೆ ಮಾತಾಡಬೇಕಂತೆ “ ಎಂದ. ಯಾವುದೋ ಕಾಡು ಕೋಣವೋ ಅಥವಾ ಹುಲಿ ಸಿಂಹ, ಜಿಂಕೆ ಇತ್ಯಾದಿ ವನ್ಯೃಗಗಳು ಕಾಡಿನಲ್ಲಿ ಸತ್ತಿರಬೇಕು. ಮರಣೋತ್ತರ ಪರೀಕ್ಷೆ ಮಾಡಲು ಕರೆಯುತ್ತಿದ್ದಾರೆ. ಈ ದಿನ ಹಳ್ಳ ಹಿಡಿಯಿತು. ದೇಶದ ಆರ್ಥಿಕತೆಗೆ ನಮ್ಮ ಹಸು ಎಮ್ಮೆಗಳಂತೆ ಒಂದಿನಿತೂ ಕೊಡುಗೆ ನೀಡದ, ಕರದಾತರು ಕಷ್ಟಪಟ್ಟು ನೀಡಿದ ಹಣವನ್ನು ಜೀವವೈವಿಧ್ಯದ ಸಂರಕ್ಷಣೆಯ ಹೆಸರಿನಲ್ಲಿ ನುಂಗಿ ನೀರು ಕುಡಿಯುತ್ತಿರುವ ಅಧಿಕಾರಿಗಳ ಗುಂಪೊಂದರ ಪುನರ್ವಸತಿಯಾಗಿ ಕೇಂದ್ರವಾಗಿ ಮಾರ್ಪಟ್ಟ ಇಲಾಖೆಯೆಂದು ನನ್ನ ಮಿತ್ರ ಹೇಳುವ ಅರಣ್ಯ ಇಲಾಖೆಯ ಯಾವುದೋ ಕಾಡು ಪ್ರಾಣಿ ಸತ್ತರೆ ಎಲ್ಲ ಕೆಲಸ ಬದಿಗೊತ್ತಿ ಅದರ ಕೊಳೆತು ಹೋದ ಶವಪರೀಕ್ಷೆಗೆ ಇಲ್ಲಿಂದ ಹೋಗಬೇಕಾದ ಅನಿವಾರ್ಯತೆಯನ್ನು ಶಪಿಸುತ್ತಾ ಫೋನು ಎತ್ತಿದೆ. ಆಕಡೆಯಿಂದ “ ಡಾಕ್ಟ್ರೇನ್ರಿ.. ಎಷ್ಟೊತ್ರಿ ಬರೋದು? ನಾನು ಸಾಗರ ಡಿಎಪ್ಪೋ ಕಣ್ರೀ… ತುಮರಿ ಹತ್ರ ಕಾಡುಕೋಣ ಅಡಿಕೆ ತೋಟದಲ್ಲಿ ಮನೆ ಮಾಡಿ ಬಿಟ್ಟಿದೆ.. ಅದ್ಕೆ ಒಂದಿಷ್ಟು ಚಿಕಿತ್ಸೆ ಆಗ್ಬೇಕಿತ್ತು.. ತುಮರಿಗೆ ಬೇಗ ಬಂದ್ಬಿಡಿ.. ಈ ಪೇಪರ್ರಿನವರು ತಲೆ ತಿಂತಾ ಇದ್ದಾರೆ” ಎಂದು ಅವರ ಅಧಿಕಾರಿ ಗತ್ತಿನಲ್ಲೇ ಗಾರ್ಡು ಫಾರೆಸ್ಟರುಗಳಿಗೆ ನೀಡುವಂತೆ ಆದೇಶ ನೀಡಿದರು.
ಇದೊಳ್ಳೆ ಕಥೆಯಾಯ್ತಲ್ಲ !! ದನದ ಚಿಕಿತ್ಸೆ ಬಿಟ್ಟು ಈ ಕಾಡುಕೋಣದ ಚಿಕಿತ್ಸೆಗೆ ಹೋಗ್ಬೇಕಲ್ಲ ? ಎಲ್ಲೋದ್ರು ಈ ಕಾಡುಪ್ರಾಣಿ ಡಾಕ್ಟರುಗಳು? ಎಂದು ಪರಿಚಿತರಾದ ಅರಣ್ಯ ಇಲಾಖೆಯ ಸ್ನೇಹಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಫೋನಾಯಿಸಿದೆ. ಅದರ ಪ್ರವರ ತಿಳಿಯಿತು.
“ಅಡಿಕೆ ತೋಟದಲ್ಲಿ ಮನೆ ಮಾಡಿದ ಕಾಡುಕೋಣ” “ಕಾಡಿನಿಂದ ನಾಡು ಸೇರಿದ ಕಾಡುಕೋಣ” ಇತ್ಯಾದಿ ಶಿರ್ಷಿಕೆಯ ಸುದ್ಧಿಗಳು ದಿನಪತ್ರಿಕೆಗಳಲ್ಲಿ ಬರತೊಡಗಿದ ಮೇಲೆಯೇ ನಮಗೆ ಗೊತ್ತಾಗಿದ್ದು ಕಾಡುಕೋಣವೊಂದು ತುಮರಿ ಭಾಗದ ಹೆಗಡೆಯೊಬ್ಬರ ತೋಟ ಸೇರಿ ಅಲ್ಲಿಯೇ ಠಿಕಾಣಿ ಹೂಡಿದೆ ಎಂದು. ಸಾಮಾನ್ಯವಾಗಿ ನಮ್ಮ ಜಾನುವಾರುಗಳ ಜಂಜಾಟದಲ್ಲಿಯೇ ಮುಳುಗಿಹೋಗುವ ನಾವು ಆಗೆಲ್ಲ ಕಾಡುಪ್ರಾಣಿಗಳ ಚಿಕಿತ್ಸೆಗೆ ಹೋಗುವುದು ಕಡಿಮೆಯಾಗಿತ್ತು. ಅದಕ್ಕೆಂದೇ ಶಿವಮೊಗ್ಗದಲ್ಲಿ ಅರಣ್ಯ ಇಲಾಖೆಯಲ್ಲಿರುವ ಇರುವ “ಆನೆ ಡಾಕ್ಟರು” ಹುಲಿ ಸಿಂಹ” ಡಾಕ್ಟರುಗಳಾದ ವನ್ಯಜೀವಿ ಪಶುವೈದ್ಯರು ಬಂದು ಏನೇನು ಬೇಕೋ ಅದೆಲ್ಲಾ ಕ್ರಮ ತೆಗೆದುಕೊಳ್ಳುತ್ತಿದ್ದರು.
ಅದರೆ ಆಗ ವನ್ಯಜೀವಿ ತಜ್ಞ ಪಶುವೈದ್ಯರು ದೂರದೂರಿನಲ್ಲಿ ಪುಂಡ ಕಾಡಾನೆಗಳು ಊರು ನುಗ್ಗಿ ದಾಂಧಲೆ ಎಬ್ಬಿಸಿದ್ದರಿಂದ ಅವುಗಳ ತರಲೆ ನಿಲ್ಲಿಸಿ ಖೆಡ್ಡಾಕ್ಕೆ ಕೆಡವಲು ನಾಡಾನೆಗಳನ್ನು ತೆಗೆದುಕೊಂಡು ಹೋಗಿ ಕೊಡಗಿನ ಹತ್ತಿರ ಯಾವುದೇ ಹಳ್ಳಿಯಲ್ಲಿ ಕಳೆದು ೧೫ ದಿನಗಳಿಂದ ಬೀಡು ಬಿಟ್ಟಿದ್ದು ಅವರು ಬಂದು ಈ ಕಾಡು ಪ್ರಾಣಿಯ ಚಿಕಿತ್ಸೆ ಮಾಡುವವರೆಗೆ ದಿನನಿತ್ಯ ಕಾಟಕೊಡುವ ದಿನಪತ್ರಿಕೆಗಳಿಂದ ಬಚಾವಾಗಲು ಡಿಎಪ್ಪೋ ನನಗೆ ಫೋನಾಯಿಸಿದ್ದಾರೆಂದೂ, ಸಾಗರ ಪಶುವೈದ್ಯ ಆಸ್ಪತ್ರೆಯ ಪಶುವೈದ್ಯರೆಲ್ಲ ತುಮರಿ ಏರಿಯಾವು ನನ್ನ ವ್ಯಾಪ್ತಿಯಲ್ಲಿ ಬರುವುದರಿಂದ ನನಗೆ ತಿಳಿಸಲು ಸೂಚಿಸಿದ್ದಾರೆಂದೂ ತಿಳಿಯಿತು.
ಸರಿ ನಮ್ಮಾಸ್ಪತ್ರೆಯಿಂದ ಯಾವ ರೂಟಿನಲ್ಲೇ ಹೋದರು 60-70 ಕಿಲೋಮೀಟರು ಇರುವ ತುಮರಿಗೆ ಹೋಗಲು ಎಲ್ಲಾ ಚಿಕಿತ್ಸಾ ಪರಿಕರಗಳನ್ನು ಸಿದ್ಧ ಮಾಡಿಕೊಳ್ಳಲು ನನ್ನ ಶಿಷ್ಯನಿಗೆ ತಿಳಿಸಿದೆ. ಕಾಡು ಪ್ರಾಣಿಗಳಿಗೆ ಅರಿವಳಿಕೆ ನೀಡುವ ಡಾರ್ಟ್ ಗನ್ನು ಇಲ್ಲವೆಂದೂ, ಕಾಡೆಮ್ಮೆ (ಕಾಡು ಕೋಣ?), ಮೈಮೇಲೆ ಬಂದರೆ ಕಷ್ಟವಿದೆಯೆಂದೂ ಯಾವುದಕ್ಕೂ ಮನೆಗೆ ಹೋಗಿ ತಿಳಿಸಿ ಬರುವೆನೆಂದೂ ನನ್ನ ಶಿಷ್ಯ ಮನೆಗೆ ಹೊರಟ.
ತುಮರಿ, ಬ್ಯಾಕೋಡು, ಕಾರ್ಗಲ್ಲು, ಶಿರವಂತೆ, ಅರಳಗೋಡು, ಕೊಂಜವಳ್ಳಿ, ಸೈದೂರು ಇತ್ಯಾದಿ ಈಗ ಆಸ್ಪತ್ರೆಯಾಗಿರುವ ಸುಮಾರು 90ಕಿಲೋಮೀಟರ್ ವ್ಯಾಪ್ತಿಯ ವಿಸ್ತಾರ ಪ್ರದೇಶಗಳಿಗೆ ಏಕೈಕ ತಜ್ಞ ಪಶುವೈದ್ಯನಾದ ನಾನು ಈ ಭಾಗದಲ್ಲಿ ಯಾವುದೇ ನಾಡು ಅಥವಾ ಕಾಡು ಪ್ರಾಣಿಗಳಿಗೆ ತೊಂದರೆಯಾದರೂ ಮರಣೋತ್ತರ ಪರೀಕ್ಷೆ ಅಥವಾ ಚಿಕಿತ್ಸೆ ನೀಡುವ ಮಹತ್ತರ ಜವಾಬ್ದಾರಿ ಹೊತ್ತು ಕೊಂಡಿದ್ದೆ.
ಎಂದಿನಂತೆ ನನ್ನ ಸುಜ಼ುಕಿ ಸವಾರಿ ನನ್ನ ಶಿಷ್ಯನ ಜೊತೆ ತುಮರಿ ಕಡೆ ಹೊರಟಿತು. ಸಾಗರ ಸೇರಿ ಸಾಗರದಿಂದ ಹೊಳೆಬಾಗಿಲಿನ ಬಾರ್ಜು ದಾಟಿ ಇನ್ನೂ 25 ಕಿಮಿ ಅಂಕು ಡೊಂಕಾದ ರಸ್ತೆಗಳಲ್ಲಿ ಸಾಗಿ ಕಾಡುಕೋಣದ ವಿಷಯ ಕೇಳುತ್ತಾ ಸಾಗಿದೆವು. ಗಮನದ ಹಳ್ಳಿ ತಲುಪಿ ಅಲ್ಲಿ ಹೆಗ್ಡೇರ ತೋಟದಲ್ಲಿ ಗಮಯದ ಜಾಡು ಹಿಡಿದು ಸಾಗಿದೆವು. ಬೈಕಿನಲ್ಲಿ ಸಾಗಿ ಸಾಗಿ ಬೇಸರ ಎಷ್ಟೊತ್ತಿಗಪ್ಪಾ ಈ ಊರು ಬರುತ್ತೆ ಎನ್ನುವಷ್ಟರಲ್ಲಿ ಗಮಯದ ಉಗಮ ಸ್ಥಾನ ಬಂತು.
ಗಮಯದ ಸುತ್ತ ಜನವೋ ಜನ. ಕೆಲವು ಅರಣ್ಯ ಇಲಾಖೆ ಸಿಬ್ಬಂದಿ ಜಮೆಯಾಗಿ ಅವರ ಅಮೂಲ್ಯ ವಸ್ತುವಿನ ರಕ್ಷಣೆ ಮಾಡುತ್ತಿದ್ದರು. ಒಂದೆರಡು ಪೋಲೀಸ್ ಸಿಬ್ಬಂದಿಯೂ ಸಹ ಜನರ ಬೀಡು ಕಡಿಮೆ ಮಾಡಲು ಹರ ಸಾಹಸ ಪಡುತ್ತಿದ್ದರು. ಹೋಯ್.. ಹೋಯ್… ಡಾಕ್ಟ್ರು ಬಂದ್ರು .. ದಾರಿ ಬಿಡಿ” ಎನ್ನುವ ಆಜ್ಞೆ ಪೋಲೀಸರಿಂದ ಬಂದು ಎಲ್ಲಾ ಜನರಿಂದ ನಾನೇ ಫ಼ೋಕಸ್ಸಾದೆ. ಕಾಡು ಕೋಣವನ್ನು ಸುಮಾರು ೧೫ ಅಡಿ ದೂರದಿಂದ ನೋಡಿದೆ. ಬಿಳಿಯ ಪಟ್ಟಿಯ ಕುತ್ತಿಗೆ, ಕಟ್ಟು ಮಸ್ತಾದ ದೇಹ, ರಾಜಗಾಂಭೀರ್ಯದಲ್ಲಿ ಇರಬೇಕಾದ ಕಾಡುಕೋಣ ಲಾಚಾರ್ ಎದ್ದು ಬಡ್ಕಾಟೆ ಹೆಣದಂತೆ ಹಿಂಡಿ ನೀಡದೇ ಇರುವ ಏಳಲು ಸಾಧ್ಯವಾಗದ ಮುದಿ ಎಮ್ಮೆಯಾಗಿ ಹೋಗಿತ್ತು. ಆದರೂ ಅದರ ಸ್ಥಿತಿ ಗಮನಿಸಲು ಸ್ವಲ್ಪ ಹತ್ತಿರ ಹೋದರೆ ಬುಸ್ ಎಂದು ಶಬ್ಧ ಮಾಡುತ್ತಾ ಏರಿ ಬಂತು.
ಸರಿಯಾಗಿ ಗಮನಿಸಿದಾಗ ಮುಂದಿನ ಬಲಗಾಲಿನ ಮೇಲ್ಬಾಗ ಉಬ್ಬಿದಂತೆ ಕಂಡು ಬಂತು. ಇದರ ಚಿಕಿತ್ಸೆ ಮಾಡದೇ ಇದ್ದರೆ ಸತ್ತು ಹೋಗುವುದು ಗ್ಯಾರಂಟಿ ಅನ್ನಿಸಿತು. ಅರಣ್ಯ ಇಲಾಖೆಯವರಿಗೆ “ ಈ ಕೋಣನ್ನ ಹೇಗಾದ್ರೂ ಹಿಡಿದು ಕೊಟ್ರೆ, ಅದಕ್ಕೆ ಅರಿವಳಿಕೆ ಚುಚ್ಚುಮದ್ದು ನೀಡಿ ಏನಾದರೂ ಮಾಡಬಹುದು. ನಮ್ಮ ಹತ್ತಿರ ಅರಿವಳಿಕೆಯನ್ನು ದೂರದಿಂದಲೇ ನೀಡುವ “ಡಾರ್ಟ್ ಗನ್” ಇರದೇ ಇರುವುದರಿಂದ ಯಾವುದೇ ಕ್ಷಣದಲ್ಲಿ ಕಾಡು ಕೋಣ ನುಗ್ಗಿದರೆನಾಮಾವಶೇಷವಾಗುವ ಸಾಧ್ಯತೆ ಇತ್ತು. ಅದು ಕೃಷವಾಗಿರುವುದನ್ನು ಗಮನಿಸಿದರೆ ಅದಕ್ಕೆ ಗಂಭೀರವಾದ ಕಾಯಿಲೆ ಇರುವುದು ಗ್ಯಾರಂಟಿಯಾಗಿತ್ತು. ಚಿಕಿತ್ಸೆ ಮಾಡದೇ ಇದ್ದರೆ ಸತ್ತು ಯಮಪುರಿ ಸೇರಿ ಖಾಯಂ ಆಗಿ ಯಮನ ವಾಹನ ಆಗುವ ಸಾಧ್ಯತೆ ಇತ್ತು.
ನನ್ನ ಶಿಷ್ಯ ಖಾಯಂ ಎಮ್ಮೆಗಳನ್ನು ಕೆಡಗಿ ಅಭ್ಯಾಸ ಇದ್ದಾತ. ಆತ “ ಸಾರ್.. ಒಂದು ಕೈ ನೋಡಿಯೇ ಬಿಡ್ಲಾ ಸಾರ್.. ಕಾಡುಕೋಣ ಹ್ಯಾಂಗಿದ್ರೂ ಬಡಕಲಾಗಿದೆ. ನಮ್ಮ ಎಮ್ಮೆಗಳಷ್ಟೇ ತಾಕತ್ತು ಇರ್ಬಹುದು, ಹಗ್ಗ ಹಾಕಿ ಕೆಡವಿ ಬಿಡ್ತೀನಿ “ ಎಂದು ಹುಂಬ ಧೈರ್ಯ ತೋರಿದ. ನಾನು ಮಾತ್ರ ಈ ರಿಸ್ಕ್ ತೆಗೆದುಕೊಳ್ಳಲು ಸುತರಾಂ ಸಿದ್ದವಿರಲಿಲ್ಲ. ಎಲ್ಲಾದರೂ ನಮ್ಮ ಅಂದಾಜು ತಪ್ಪಿ ಈ ಕಾಡುಕೋಣ ನುಗ್ಗಿ ಯಾರನ್ನಾದರೂ ಕೆಡಗಿ ಕೊಂದರೆ ಯಾರು ಜವಾಬ್ದಾರರರು? ಎಂದು “ ಈ ಕಾಡು ಪ್ರಾಣಿ ಸಹವಾಸ ಸಾಕಪ್ಪಾ.. ಅದರ ಡಾಕ್ಟರುಗಳು ಬಂದು ಏನಾದರೂ ಮಾಡ್ಲಿ. ನಮ್ಮಿಂದ ದನ ಆರಾಮವಾದ್ರೆ ಸಾಕು” ಎಂದು ರಾಗ ಎಳೆದೆ. ಆದರೂ ವೃತ್ತಿಯ ತುಡಿತ ಇದೆಯಲ್ಲ.. ಏನಾದರೂ ಮಾಡಲೇ ಬೇಕು. ಸುತ್ತ ಮುತ್ತ ಸೇರಿದ ಜನ ಎಲ್ಲಾ ತರಹೇವಾರಿ ಕಾಮೆಂಟು ಪಾಸು ಮಾಡಲಿಕ್ಕೆ ಪ್ರಾರಂಭಿಸಿದರು.
ಅವರೊಲ್ಲಬ್ಬ “ಇವರು ದನಕ್ಕೆ ಮಾತ್ರ ಡಾಕ್ಟರು. ಎಮ್ಮೆ ಮುಕಳಿ ಒಳಗೆ ಕೈ ಹಾಕಿ ಇನ್ಸೆಮಿನೇಷನ್ ಮಾಡೋದು ಮಾತ್ರ ಇವರಿಗೆ ಕಲ್ಸಿರ್ತಾರೆ. ಈ ಕಾಡುಕೋಣದ ಟ್ರೀಟ್ಮೆಂಟಿಗೆಲ್ಲಾ ಮೈಸೂರಿನಿಂದ ಎಕ್ಸ್ಪರ್ಟ್ಸ್ ಬರ್ಬೇಕು. ಸುಮ್ನೇ ಟೈಮ್ ಪಾಸಿಗೆ ಬಂದಿದ್ದಾರೆ. ಅದ್ರ ಜೊತೆ ಈ ಫ಼ಾರೆಸ್ಟ್ ಖಾತೆ ಜನಾ ಬೇರೆ ದಂಡ” ಎಂದು ನನ್ನ ವೃತ್ತಿಯ ಘನತೆಯನ್ನು ಮೂರುಕಾಸಿಗಿಳಿಸಿ ನಿವಾಳಿಸಿ ಬಿಸಾಡಿದ ಹಾಗೂ ಫ಼ಾರೆಸ್ಟು ಇಲಾಖೆಯವರು ಕಳ್ಳ ನಾಟಾ ಮಾಡುತ್ತಿದ್ದ ಕೆಲ ಹಳ್ಳಿಯ ಜನರನ್ನು ಕುಂಡೆಯ ಮೇಲೆ ಹಾಕಿ ಕಟಕಟೆ ಒಳಗೆ ಹಾಕಿದ ಹಳೆ ಸೇಡು ತೀರಿಸಿಕೊಂಡ. ಹಳ್ಳಿಯಲ್ಲಿ ರಾತ್ರಿ ,10 ಘಂಟೆಗೆ ಕರು ಅಡ್ಡ ಸಿಕ್ಕಿಹಾಕಿಕೊಂಡಾಗ ಎಣ್ಣೆಯ ಮತ್ತನ್ನು ಏರಿಸಿಕೊಂಡವರಿಂದ ಈ ತರಹದ ಮಾತು ಕೇಳಿ ಅಭ್ಯಾಸವಾಗಿ ಹೋದ ನಾನು ಇದನ್ನು ಸೀರಿಯಸ್ ಆಗಿ ತೆಗೆದುಕೊಳ್ಳಲೇ ಇಲ್ಲ. ಆದರೆ ನನ್ನ ಶಿಷ್ಯನಿಗೆ ಮಾತ್ರ ನಖಶಿಖಾಂತ ಕೋಪ ಬಂದಿತ್ತು.
ಆತ “ಸಾರ್. ಏನೂ ತೊಂದರೆ ಇಲ್ಲದಂತೆ ಅದನ್ನು ಕೆಡಗಿ ಕೊಡ್ತೀನಿ ಸಾರ್. ಇಂಜೆಕ್ಷನ್ ಹಾಕಿ ಅನೇಸ್ಠೇಸಿಯಾ ಕೊಟ್ಟು ಕೆಲಸ ಮಾಡಿ.. ಫ಼ಾರೆಸ್ಟ್ ಡಿಪಾರ್ಟ್ಮೇಂಟಿನವರೂ ಸಹಾಯ ಮಾಡ್ತಾರೆ” ಅಂದ. ಅಷ್ಟು ಹೊತ್ತು ನಮ್ಮ ಪರಿಪಾಟಲು ನೋಡಿ ಮಜಾ ತಗಳ್ತಿದ್ದ ಅರಣ್ಯ ಇಲಾಖೆಯ ಗಾರ್ಡು ಫ಼ಾರೆಸ್ಟರುಗಳೂ ಜನರ ಮಾತಿನಿಂದ ರೇಗಿ ಏನಾದರೂ ಮಾಡಲೇಬೇಕೆಂಬ ತೀರ್ಮಾನಕ್ಕೆ ಬಂದಾಗಿತ್ತು, ಅವರು ನಾಟಾ ಸಾಗಿಸಲು ಕಳ್ಳ ಸಾಗಣೆಗೆ ಉಪಯೋಗಿಸುತ್ತಿದ್ದ ಸೀಜ಼್ ಮಾಡಿದ ದಪ್ಪನೇ ಹಗ್ಗ ತಂದರು.
ಅದನ್ನು ಎಂಟತ್ತು ಅಡಿಕೆ ಮರದ ಸುತ್ತ ಕಟ್ಟಿ ಕಾಡು ಕೋಣ ಹಗ್ಗದ ಕೋಟೆ ಒಳಗೆ ಭದ್ರವಾಗುವಂತೆ ದಿಗ್ಭಂಧನ ಹಾಕಿದರು. ಕಾಡುಕೋಣ ಇರುವ ಜಾಗದ ಸುತ್ತ ಗೂಟದ ಬೇಲಿ ರೆಡಿಯಾಗಿ ಅಕ್ಷರಷ: ಕೊರೋನಾ ಪೀಡಿತರನ್ನು ಕ್ವಾರಂಟೈನಿನೊಳಗೆ ಹಾಕಿದ ಹಾಗೇ ಲಾಕ್ ಮಾಡಿದರು. ಆದರೆ ಕೋಣಕ್ಕೆ ಅನೇಶ್ಥೆಸಿಯಾ ಇಂಜೆಕ್ಷನ್ ಚುಚ್ಚಬೇಕಲ್ಲ. “ಯಾರಾದ್ರೂ ಬಂದು ಇದನ್ನು ಮಾಂಸದಲ್ಲಿ ತೂರಿಸ್ರೋ” ಎಂದು ಸಿರಿಂಜಿನಲ್ಲಿ ತಕ್ಕ ಪ್ರಮಾಣದ ಅನೇಸ್ಥೆಸಿಯಾ ಚುಚ್ಚುಮದ್ದು ಲೋಡ್ ಮಾಡಿ ನೀಡಲು ಹೋದೆ. ಯಾರೂ ಮುಂದೆ ಬರಲಿಲ್ಲ.
ಒಂದು ಉಪಾಯ ಹೊಳೆಯಿತು. ನಾವು ನಿರ್ಮಿಸಿದ ಕೋಟೆಯೊಳಗೆ ಒಂದಿಷ್ಟು ಮುರುಗಲು ಮತ್ತು ಕೋಕೋ ಗಿಡಗಳಿದ್ದವು. ಅವುಗಳ ಮೇಲೆ ಹತ್ತಿ ಕುಳಿತರೆ ಮತ್ತು ಕಾಡುಕೋಣವನ್ನು ಅಲ್ಲಿಗೆ ನಿಧಾನವಾಗಿ ಚಲನೆಯಾಗುವಂತೆ ನೋಡಿಕೊಂಡರೆ ಅದಕ್ಕೆ ಕಚಕ್ ಎಂದು ಇಂಜೆಕ್ಷನ್ ಚುಚ್ಚಿಬಿಡುವ ಎಂದುಕೊಂಡೆ. ಆದರೆ ಇಲ್ಲಿ ತುಂಬಾ ರಿಸ್ಕ್ ಇತ್ತು. ಆದರೆ ಮೊದಲೇ ಗಾಯಾಳು ಕೋಣ, ಖಂಡಿತಾ ರೋಷ ಭರಿತವಾಗಿರುತ್ತದೆ. ಏನಾದರೂ ಹೆಚ್ಚುಕಮ್ಮಿ ಆಗಿ ಆಯ ತಪ್ಪಿದರೆ ಅದರ ಮೇಲೆಯೇ ಬೀಳುವ ಸಾಧ್ಯತೆ ಇತ್ತು. ಬಿದ್ದರೆ ತುಳಿದು ಖಂಡಿತಾ ತುಳಿದು ಯಮಪುರಿಗೆ ಕಳಿಸುತ್ತಿತ್ತು.
ಯಾರಿಗಾದರೂ ಮರ ಹತ್ತಿ ಅದು ಕೆಳಗೆ ಬಂದೊಡೆ ಇಂಜೆಕ್ಷನ್ ಚುಚ್ಚಿ ಎಮ್ದರೆ ಎಲ್ಲರೂ ಹೆದರು ಪುಕ್ಕಲರೆ. ಮತ್ತೆ ಕೆಲವರು ಹೊಟ್ಟೆ ಹೊತ್ತ ದಡೂತಿಗಳು. ಅಲ್ಲಿ ಇರುವವರಲ್ಲಿ ನಾನೇ ತೆಳ್ಳಗಿರುವವ. ಏನಾದರಾಗಲಿ ಎಂದು ಅನಸ್ಥೆಸಿಯಾವನ್ನು ತುಂಬಿಸಿದ ಸಿರಿಂಜ್ ಕೈಲಿ ಹಿಡಿದು ಅದು ನೇರವಾಗಿ ಕೆಳಗೆ ಬರಬಹುದಾದ ಕೋಕೋ ಗಿಡದ ಮೇಲೆ ಏರಿದೆ. ಕಾಡುಕೋಣವನ್ನು ಮರದ ಕೆಳಗೆ ಬಂದು ನಿಲ್ಲುವಂತೆ ಬೆದರಿಸಲು ಸೂಚಿಸಿದೆ.
ಹಲವು ರೌಂಡ್ ಕಾರ್ಯಾಚರಣೆಯ ನಂತರ ಯಾವುದೋ ಗಳಿಗೆಯಲ್ಲಿ ಕಾಡು ಕೋಣ ನಾನು ಮೇಲೆ ಇದ್ದ ಕೊಂಬೆಯ ಕೆಳಗೆ ಬಂದು ನಿಂತಿತು. ಇದೇ ಅವಕಾಶವೆಂದು ಅದರ ಹಿಂಬಾಗದ ಪ್ರಷ್ಠದ ಮೇಲೆ ಸೂಜಿಯ ಸಮೇತ ಸಿರಿಂಜ್ ಚುಚ್ಚಿ ಸರಕ್ಕನೇ ಔಷಧಿ ಸೇರಿಸಿದೆ. ಆಯ ತಪ್ಪಿ ಕೆಳಗೆ ಬಿದ್ದ ಹೊಡೆತಕ್ಕೆ ಕಾಡುಕೋಣದ ಎದುರು ಅಂಗಾತ ಬಿದ್ದೆ. ಇನ್ನೇನು ಕಾಡುಕೋಣ ನನ್ನನ್ನು ತಿವಿಯಬೇಕು.. ನೋಡ್ತೀನಿ .. ಏನೂ ಶಬ್ಧ ಇಲ್ಲ.
ನಾನು ಕೊಟ್ಟ ಅರಿವಳಿಕೆಯ ಪ್ರಭಾವದಿಂದ ಕಾಡುಕೋಣ ಧರಾಶಾಯಿಯಾಗಿತ್ತು.
ಕೂಡಲೇ ನನ್ನ ಶಿಷ್ಯ ಮತ್ತು ಅರಣ್ಯ ಇಲಾಖೆಯವರು ಕಾಡುಕೋಣವನ್ನು ನಾಡುಕೋಣ ಕಟ್ಟಿದಂತೆ ಹಗ್ಗದಿಂದ ಏಳದಂತೆ ಕ್ಷಣಮಾತ್ರದಲ್ಲಿ ಬಂಧಿಸಿದರು. ಕಾಡುಕೋಣದ ಮುಂಗಾಲಿನ ಮೇಲ್ಬಾಗದಲ್ಲಿ ಕೀವಿನಿಂದ ಕೂಡಿದ ಗಡ್ಡೆಯಿತ್ತು. ಸಾವಧಾನವಾಗಿ ಅದನ್ನು ಓಪನ್ ಮಾಡಿದಾಗ ಟಕ್ ಎಂದು ಅದರೊಳಗಿದ್ದ ಬುಲೆಟ್ ಹೊರಬಂತು. ಯಾರೋ ದುರುಳರು ಮಾಂಸದಾಸೆಗೆ ಕಾಡುಕೋಣಕ್ಕೆ ಗುಂಡು ಹೊಡೆದಾಗ ಅದು ಮಾಂಸದಲ್ಲಿ ಕಚ್ಚಿಕೊಂಡು ಅಲ್ಲಿ ಕೀವುಂಟುಮಾಡಿದೆ ಎಂದು ತಿಳಿಯಿತು.
ಕೀವು ಬಸಿದು ಹೋಗುವ ಹಾಗೇ ಮಾಡಿ ಅದರೊಳಗೆ ಟಿಂಚರ್ ಆಯೋಡಿನ್ ಯುಕ್ತ ಭಟ್ಟೆಯನ್ನಿರಿಸಿ ಸುತ್ತಲೂ ಮುಲಾಮು ಹಚ್ಚಿದೆ. ಅವಶ್ಯಕ ನಂಜುನಿವಾರಕಗಳು, ನೋವು ನಿವಾರಕಗಳು ಹಾಗೂ ಜೀವನಿರೋಧಕದ ಚುಚ್ಚುಮದ್ದು ನೀಡಿದೆ. ಕಾಡುಕೋಣ ಬಹಳ ಬಡಕಲುಗೊಂಡಿತ್ತು. ಬಹುಶ: ಕೀವಿನ ನೋವಿನ ಬಾಧೆಯಿಂದ ಇರಬಹುದೇನೋ? ಕಾಡು ಕೋಣ ನಾಡಿಗೆ ಆಶ್ರಯಕ್ಕೆ ಬಂದಿದೆ.ತೋಟದಲ್ಲಿ ಸುಲಭವಾಗಿ ಸಿಗುವ ಹಲಸಿನ ಹಣ್ಣು ಇತ್ಯಾದಿ ತಿಂದು ಸೆಟ್ಲ್ ಆಗಿದೆ ಎಂದು ಗೊತ್ತಾಯ್ತು. ಎಲ್ಲ ಕೆಲಸ ಮುಗಿಸಿ, ಅದರ ತಿಲಕಾಷ್ಠ ಮಹಿಷ ಬಂಧನ ಬಿಡಿಸಿ ದೂರ ಬಂದೆವು. ಕೋಟೆಯಂತೆ ಮಾಡಿದ ಹಗ್ಗದ ಬಿಗಿತವನ್ನೂ ಸಡಿಲ ಗೊಳಿಸಿದೆವು. ಸುಮಾರು ಮುಕ್ಕಾಲು ಘಂಟೆಗೆ ಕಾಡುಕೋಣಕ್ಕೆ ಪ್ರಜ್ಞೆ ಬಂತು. ಓಲಾಡುತ್ತಾ ಏಳಲು ಪ್ರಯತ್ನಿಸಿತು. ಸ್ವಲ್ಪ ಹೊತ್ತಿಗೆ ಎದ್ದು ನಿಂಟು ಮೈಕೊಡವಿಕೊಂಡಿತು. ದುಡುಕ್ಕನೆ ಪಕ್ಕಳದ ಹಳ್ಳದ ಮೇಲೆ ಏರಿ ನಿಂತಿತು. ನಮ್ಮೆಡೆ ಒಂತರಾ ಕೃತಜ್ಞತೆಯ ನೋಟ ಬೀರಿ ಕಾಡಿನಲ್ಲಿ ಜಿಗಿದು ಮಾಯವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
-
ದಿನದ ಸುದ್ದಿ4 days agoತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್
-
ದಿನದ ಸುದ್ದಿ3 days agoಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
-
ದಿನದ ಸುದ್ದಿ2 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

