ಲೈಫ್ ಸ್ಟೈಲ್
ನಾಡಿಗೆ ಬಂದ ಕಾಡುಕೋಣ..!
- ಪಶುವೈದ್ಯರುಗಳ ಪೇಷಂಟುಗಳು ಬರೀ ದನ, ಎಮ್ಮೆ, ಕೋಳಿ,ಕುರಿ, ಆಡು, ನಾಯಿ, ಬೆಕ್ಕು, ಕೋಳಿ, ಹಂದಿ ಇತ್ಯಾದಿಗಳಿಗೆ ಸೀಮಿತವಾಗಿರದೆ ಮೊಲ, ಇಲಿ, ಕೋತಿ, ಆಮೆ, ಹುಲಿ, ಸಿಂಹ, ಒಂಟೆ, ಆನೆ, ಚಿರತೆ, ಹಾವು , ನರಿ, ಜಿಂಕೆ, ಕಡಿವೆ ಇತ್ಯಾದಿ ತರಹೇವಾರಿ ವನ್ಯಜೀವಿಗಳ ಚಿಕಿತ್ಸೆ ಮತ್ತು ಜೀವನ ಕ್ರಮದ ಬಗ್ಗೆಯೂ ತಿಳಿದುಕೋಂಡಿರಬೇಕಾಗುತ್ತದೆ. ಕೆಲವೊಮ್ಮೆ ಈ ಪ್ರಾಣಿಗಳನ್ನು ಚಿಕಿತ್ಸೆ ಮಾಡುವಾಗ ಸಾಕಷ್ಟು ಅಪಾಯವೂ ಕಾದಿರುತ್ತದೆ. ಗಾಯಗೊಂಡ ಕಾಡುಕೋಣವೊಂದರ ಚಿಕಿತ್ಸೆಯ ರೋಚಕ ಅನುಭವ.
–ಡಾ. ಎನ್.ಬಿ.ಶ್ರೀಧರ
ಶನಿವಾರವೊಂದರ ಮಧ್ಯಾಹ್ನ 11 ಘಂಟೆಯಿರಬಹುದು. ಆ ದಿನ ತಾಳಗುಪ್ಪದಲ್ಲಿ ಸಂತೆ. ಆಸ್ಪತ್ರೆಯಲ್ಲಿ ಗಿಜಿಗುಟ್ಟುವಷ್ಟು ಜನ ಮತ್ತು ತರಹೆವಾರಿ ಕೇಸುಗಳು. ಹುಳವಾಗಿ ಗಬ್ಬು ನಾರುವ ಗಾಯದಿಂದ ಹಿಡಿದು ಸಂತಾನಹರಣ ಚಿಕಿತ್ಸೆಗೆಂದು ಕಾಯುತ್ತಿರುವ ಪಕ್ಕದ ತಾಲೂಕು ಸೊರಬದ ಶ್ವಾನಗಳ ಸವಾರಿ ಕ್ಯೂನಲ್ಲಿತ್ತು. ಒಳರೋಗಿಗಳಾಗಿ ಮಾಡಿಕೊಂಡ ಕೆಲವು “ಪೇಷಂಟು”ಗಳ ಚಿಕಿತ್ಸೆಯೂ ಕಾದಿತ್ತು. ನಾನೇ ಪ್ರಯೋಗಕ್ಕೆಂದು ತಂದು ಸಂಶಯಿತ ವಿಷಗಿಡಗಳನ್ನು ತಿನ್ನಿಸುಸುತ್ತಿರುವ ಕರುಗಳ ಗುಂಪಿತ್ತು. ಮನೆಗೆ ಚಿಕಿತ್ಸೆಗೆ ಕರೆದಿರುವ “ಟೂರಿಂಗ್ ಪೇಷಂಟು”ಗಳ ಪಟ್ಟಿಯೂ ಸಹ ಬೆಳೆಯುತ್ತಿತ್ತು.
ಅಷ್ಟರಲ್ಲೇ ನನ್ನ ಶಿಷ್ಯ “ಸಾರ್..ಡಿ ಎಪ್ ಓ ಅವರು ಲೈನಿನಲ್ಲಿದ್ದಾರೆ. ಗರಂ ಆಗಿದಾರೆ.. ನಿಮ್ಮ ಜೊತೆ ಮಾತಾಡಬೇಕಂತೆ “ ಎಂದ. ಯಾವುದೋ ಕಾಡು ಕೋಣವೋ ಅಥವಾ ಹುಲಿ ಸಿಂಹ, ಜಿಂಕೆ ಇತ್ಯಾದಿ ವನ್ಯೃಗಗಳು ಕಾಡಿನಲ್ಲಿ ಸತ್ತಿರಬೇಕು. ಮರಣೋತ್ತರ ಪರೀಕ್ಷೆ ಮಾಡಲು ಕರೆಯುತ್ತಿದ್ದಾರೆ. ಈ ದಿನ ಹಳ್ಳ ಹಿಡಿಯಿತು. ದೇಶದ ಆರ್ಥಿಕತೆಗೆ ನಮ್ಮ ಹಸು ಎಮ್ಮೆಗಳಂತೆ ಒಂದಿನಿತೂ ಕೊಡುಗೆ ನೀಡದ, ಕರದಾತರು ಕಷ್ಟಪಟ್ಟು ನೀಡಿದ ಹಣವನ್ನು ಜೀವವೈವಿಧ್ಯದ ಸಂರಕ್ಷಣೆಯ ಹೆಸರಿನಲ್ಲಿ ನುಂಗಿ ನೀರು ಕುಡಿಯುತ್ತಿರುವ ಅಧಿಕಾರಿಗಳ ಗುಂಪೊಂದರ ಪುನರ್ವಸತಿಯಾಗಿ ಕೇಂದ್ರವಾಗಿ ಮಾರ್ಪಟ್ಟ ಇಲಾಖೆಯೆಂದು ನನ್ನ ಮಿತ್ರ ಹೇಳುವ ಅರಣ್ಯ ಇಲಾಖೆಯ ಯಾವುದೋ ಕಾಡು ಪ್ರಾಣಿ ಸತ್ತರೆ ಎಲ್ಲ ಕೆಲಸ ಬದಿಗೊತ್ತಿ ಅದರ ಕೊಳೆತು ಹೋದ ಶವಪರೀಕ್ಷೆಗೆ ಇಲ್ಲಿಂದ ಹೋಗಬೇಕಾದ ಅನಿವಾರ್ಯತೆಯನ್ನು ಶಪಿಸುತ್ತಾ ಫೋನು ಎತ್ತಿದೆ. ಆಕಡೆಯಿಂದ “ ಡಾಕ್ಟ್ರೇನ್ರಿ.. ಎಷ್ಟೊತ್ರಿ ಬರೋದು? ನಾನು ಸಾಗರ ಡಿಎಪ್ಪೋ ಕಣ್ರೀ… ತುಮರಿ ಹತ್ರ ಕಾಡುಕೋಣ ಅಡಿಕೆ ತೋಟದಲ್ಲಿ ಮನೆ ಮಾಡಿ ಬಿಟ್ಟಿದೆ.. ಅದ್ಕೆ ಒಂದಿಷ್ಟು ಚಿಕಿತ್ಸೆ ಆಗ್ಬೇಕಿತ್ತು.. ತುಮರಿಗೆ ಬೇಗ ಬಂದ್ಬಿಡಿ.. ಈ ಪೇಪರ್ರಿನವರು ತಲೆ ತಿಂತಾ ಇದ್ದಾರೆ” ಎಂದು ಅವರ ಅಧಿಕಾರಿ ಗತ್ತಿನಲ್ಲೇ ಗಾರ್ಡು ಫಾರೆಸ್ಟರುಗಳಿಗೆ ನೀಡುವಂತೆ ಆದೇಶ ನೀಡಿದರು.
ಇದೊಳ್ಳೆ ಕಥೆಯಾಯ್ತಲ್ಲ !! ದನದ ಚಿಕಿತ್ಸೆ ಬಿಟ್ಟು ಈ ಕಾಡುಕೋಣದ ಚಿಕಿತ್ಸೆಗೆ ಹೋಗ್ಬೇಕಲ್ಲ ? ಎಲ್ಲೋದ್ರು ಈ ಕಾಡುಪ್ರಾಣಿ ಡಾಕ್ಟರುಗಳು? ಎಂದು ಪರಿಚಿತರಾದ ಅರಣ್ಯ ಇಲಾಖೆಯ ಸ್ನೇಹಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಫೋನಾಯಿಸಿದೆ. ಅದರ ಪ್ರವರ ತಿಳಿಯಿತು.
“ಅಡಿಕೆ ತೋಟದಲ್ಲಿ ಮನೆ ಮಾಡಿದ ಕಾಡುಕೋಣ” “ಕಾಡಿನಿಂದ ನಾಡು ಸೇರಿದ ಕಾಡುಕೋಣ” ಇತ್ಯಾದಿ ಶಿರ್ಷಿಕೆಯ ಸುದ್ಧಿಗಳು ದಿನಪತ್ರಿಕೆಗಳಲ್ಲಿ ಬರತೊಡಗಿದ ಮೇಲೆಯೇ ನಮಗೆ ಗೊತ್ತಾಗಿದ್ದು ಕಾಡುಕೋಣವೊಂದು ತುಮರಿ ಭಾಗದ ಹೆಗಡೆಯೊಬ್ಬರ ತೋಟ ಸೇರಿ ಅಲ್ಲಿಯೇ ಠಿಕಾಣಿ ಹೂಡಿದೆ ಎಂದು. ಸಾಮಾನ್ಯವಾಗಿ ನಮ್ಮ ಜಾನುವಾರುಗಳ ಜಂಜಾಟದಲ್ಲಿಯೇ ಮುಳುಗಿಹೋಗುವ ನಾವು ಆಗೆಲ್ಲ ಕಾಡುಪ್ರಾಣಿಗಳ ಚಿಕಿತ್ಸೆಗೆ ಹೋಗುವುದು ಕಡಿಮೆಯಾಗಿತ್ತು. ಅದಕ್ಕೆಂದೇ ಶಿವಮೊಗ್ಗದಲ್ಲಿ ಅರಣ್ಯ ಇಲಾಖೆಯಲ್ಲಿರುವ ಇರುವ “ಆನೆ ಡಾಕ್ಟರು” ಹುಲಿ ಸಿಂಹ” ಡಾಕ್ಟರುಗಳಾದ ವನ್ಯಜೀವಿ ಪಶುವೈದ್ಯರು ಬಂದು ಏನೇನು ಬೇಕೋ ಅದೆಲ್ಲಾ ಕ್ರಮ ತೆಗೆದುಕೊಳ್ಳುತ್ತಿದ್ದರು.
ಅದರೆ ಆಗ ವನ್ಯಜೀವಿ ತಜ್ಞ ಪಶುವೈದ್ಯರು ದೂರದೂರಿನಲ್ಲಿ ಪುಂಡ ಕಾಡಾನೆಗಳು ಊರು ನುಗ್ಗಿ ದಾಂಧಲೆ ಎಬ್ಬಿಸಿದ್ದರಿಂದ ಅವುಗಳ ತರಲೆ ನಿಲ್ಲಿಸಿ ಖೆಡ್ಡಾಕ್ಕೆ ಕೆಡವಲು ನಾಡಾನೆಗಳನ್ನು ತೆಗೆದುಕೊಂಡು ಹೋಗಿ ಕೊಡಗಿನ ಹತ್ತಿರ ಯಾವುದೇ ಹಳ್ಳಿಯಲ್ಲಿ ಕಳೆದು ೧೫ ದಿನಗಳಿಂದ ಬೀಡು ಬಿಟ್ಟಿದ್ದು ಅವರು ಬಂದು ಈ ಕಾಡು ಪ್ರಾಣಿಯ ಚಿಕಿತ್ಸೆ ಮಾಡುವವರೆಗೆ ದಿನನಿತ್ಯ ಕಾಟಕೊಡುವ ದಿನಪತ್ರಿಕೆಗಳಿಂದ ಬಚಾವಾಗಲು ಡಿಎಪ್ಪೋ ನನಗೆ ಫೋನಾಯಿಸಿದ್ದಾರೆಂದೂ, ಸಾಗರ ಪಶುವೈದ್ಯ ಆಸ್ಪತ್ರೆಯ ಪಶುವೈದ್ಯರೆಲ್ಲ ತುಮರಿ ಏರಿಯಾವು ನನ್ನ ವ್ಯಾಪ್ತಿಯಲ್ಲಿ ಬರುವುದರಿಂದ ನನಗೆ ತಿಳಿಸಲು ಸೂಚಿಸಿದ್ದಾರೆಂದೂ ತಿಳಿಯಿತು.
ಸರಿ ನಮ್ಮಾಸ್ಪತ್ರೆಯಿಂದ ಯಾವ ರೂಟಿನಲ್ಲೇ ಹೋದರು 60-70 ಕಿಲೋಮೀಟರು ಇರುವ ತುಮರಿಗೆ ಹೋಗಲು ಎಲ್ಲಾ ಚಿಕಿತ್ಸಾ ಪರಿಕರಗಳನ್ನು ಸಿದ್ಧ ಮಾಡಿಕೊಳ್ಳಲು ನನ್ನ ಶಿಷ್ಯನಿಗೆ ತಿಳಿಸಿದೆ. ಕಾಡು ಪ್ರಾಣಿಗಳಿಗೆ ಅರಿವಳಿಕೆ ನೀಡುವ ಡಾರ್ಟ್ ಗನ್ನು ಇಲ್ಲವೆಂದೂ, ಕಾಡೆಮ್ಮೆ (ಕಾಡು ಕೋಣ?), ಮೈಮೇಲೆ ಬಂದರೆ ಕಷ್ಟವಿದೆಯೆಂದೂ ಯಾವುದಕ್ಕೂ ಮನೆಗೆ ಹೋಗಿ ತಿಳಿಸಿ ಬರುವೆನೆಂದೂ ನನ್ನ ಶಿಷ್ಯ ಮನೆಗೆ ಹೊರಟ.
ತುಮರಿ, ಬ್ಯಾಕೋಡು, ಕಾರ್ಗಲ್ಲು, ಶಿರವಂತೆ, ಅರಳಗೋಡು, ಕೊಂಜವಳ್ಳಿ, ಸೈದೂರು ಇತ್ಯಾದಿ ಈಗ ಆಸ್ಪತ್ರೆಯಾಗಿರುವ ಸುಮಾರು 90ಕಿಲೋಮೀಟರ್ ವ್ಯಾಪ್ತಿಯ ವಿಸ್ತಾರ ಪ್ರದೇಶಗಳಿಗೆ ಏಕೈಕ ತಜ್ಞ ಪಶುವೈದ್ಯನಾದ ನಾನು ಈ ಭಾಗದಲ್ಲಿ ಯಾವುದೇ ನಾಡು ಅಥವಾ ಕಾಡು ಪ್ರಾಣಿಗಳಿಗೆ ತೊಂದರೆಯಾದರೂ ಮರಣೋತ್ತರ ಪರೀಕ್ಷೆ ಅಥವಾ ಚಿಕಿತ್ಸೆ ನೀಡುವ ಮಹತ್ತರ ಜವಾಬ್ದಾರಿ ಹೊತ್ತು ಕೊಂಡಿದ್ದೆ.
ಎಂದಿನಂತೆ ನನ್ನ ಸುಜ಼ುಕಿ ಸವಾರಿ ನನ್ನ ಶಿಷ್ಯನ ಜೊತೆ ತುಮರಿ ಕಡೆ ಹೊರಟಿತು. ಸಾಗರ ಸೇರಿ ಸಾಗರದಿಂದ ಹೊಳೆಬಾಗಿಲಿನ ಬಾರ್ಜು ದಾಟಿ ಇನ್ನೂ 25 ಕಿಮಿ ಅಂಕು ಡೊಂಕಾದ ರಸ್ತೆಗಳಲ್ಲಿ ಸಾಗಿ ಕಾಡುಕೋಣದ ವಿಷಯ ಕೇಳುತ್ತಾ ಸಾಗಿದೆವು. ಗಮನದ ಹಳ್ಳಿ ತಲುಪಿ ಅಲ್ಲಿ ಹೆಗ್ಡೇರ ತೋಟದಲ್ಲಿ ಗಮಯದ ಜಾಡು ಹಿಡಿದು ಸಾಗಿದೆವು. ಬೈಕಿನಲ್ಲಿ ಸಾಗಿ ಸಾಗಿ ಬೇಸರ ಎಷ್ಟೊತ್ತಿಗಪ್ಪಾ ಈ ಊರು ಬರುತ್ತೆ ಎನ್ನುವಷ್ಟರಲ್ಲಿ ಗಮಯದ ಉಗಮ ಸ್ಥಾನ ಬಂತು.
ಗಮಯದ ಸುತ್ತ ಜನವೋ ಜನ. ಕೆಲವು ಅರಣ್ಯ ಇಲಾಖೆ ಸಿಬ್ಬಂದಿ ಜಮೆಯಾಗಿ ಅವರ ಅಮೂಲ್ಯ ವಸ್ತುವಿನ ರಕ್ಷಣೆ ಮಾಡುತ್ತಿದ್ದರು. ಒಂದೆರಡು ಪೋಲೀಸ್ ಸಿಬ್ಬಂದಿಯೂ ಸಹ ಜನರ ಬೀಡು ಕಡಿಮೆ ಮಾಡಲು ಹರ ಸಾಹಸ ಪಡುತ್ತಿದ್ದರು. ಹೋಯ್.. ಹೋಯ್… ಡಾಕ್ಟ್ರು ಬಂದ್ರು .. ದಾರಿ ಬಿಡಿ” ಎನ್ನುವ ಆಜ್ಞೆ ಪೋಲೀಸರಿಂದ ಬಂದು ಎಲ್ಲಾ ಜನರಿಂದ ನಾನೇ ಫ಼ೋಕಸ್ಸಾದೆ. ಕಾಡು ಕೋಣವನ್ನು ಸುಮಾರು ೧೫ ಅಡಿ ದೂರದಿಂದ ನೋಡಿದೆ. ಬಿಳಿಯ ಪಟ್ಟಿಯ ಕುತ್ತಿಗೆ, ಕಟ್ಟು ಮಸ್ತಾದ ದೇಹ, ರಾಜಗಾಂಭೀರ್ಯದಲ್ಲಿ ಇರಬೇಕಾದ ಕಾಡುಕೋಣ ಲಾಚಾರ್ ಎದ್ದು ಬಡ್ಕಾಟೆ ಹೆಣದಂತೆ ಹಿಂಡಿ ನೀಡದೇ ಇರುವ ಏಳಲು ಸಾಧ್ಯವಾಗದ ಮುದಿ ಎಮ್ಮೆಯಾಗಿ ಹೋಗಿತ್ತು. ಆದರೂ ಅದರ ಸ್ಥಿತಿ ಗಮನಿಸಲು ಸ್ವಲ್ಪ ಹತ್ತಿರ ಹೋದರೆ ಬುಸ್ ಎಂದು ಶಬ್ಧ ಮಾಡುತ್ತಾ ಏರಿ ಬಂತು.
ಸರಿಯಾಗಿ ಗಮನಿಸಿದಾಗ ಮುಂದಿನ ಬಲಗಾಲಿನ ಮೇಲ್ಬಾಗ ಉಬ್ಬಿದಂತೆ ಕಂಡು ಬಂತು. ಇದರ ಚಿಕಿತ್ಸೆ ಮಾಡದೇ ಇದ್ದರೆ ಸತ್ತು ಹೋಗುವುದು ಗ್ಯಾರಂಟಿ ಅನ್ನಿಸಿತು. ಅರಣ್ಯ ಇಲಾಖೆಯವರಿಗೆ “ ಈ ಕೋಣನ್ನ ಹೇಗಾದ್ರೂ ಹಿಡಿದು ಕೊಟ್ರೆ, ಅದಕ್ಕೆ ಅರಿವಳಿಕೆ ಚುಚ್ಚುಮದ್ದು ನೀಡಿ ಏನಾದರೂ ಮಾಡಬಹುದು. ನಮ್ಮ ಹತ್ತಿರ ಅರಿವಳಿಕೆಯನ್ನು ದೂರದಿಂದಲೇ ನೀಡುವ “ಡಾರ್ಟ್ ಗನ್” ಇರದೇ ಇರುವುದರಿಂದ ಯಾವುದೇ ಕ್ಷಣದಲ್ಲಿ ಕಾಡು ಕೋಣ ನುಗ್ಗಿದರೆನಾಮಾವಶೇಷವಾಗುವ ಸಾಧ್ಯತೆ ಇತ್ತು. ಅದು ಕೃಷವಾಗಿರುವುದನ್ನು ಗಮನಿಸಿದರೆ ಅದಕ್ಕೆ ಗಂಭೀರವಾದ ಕಾಯಿಲೆ ಇರುವುದು ಗ್ಯಾರಂಟಿಯಾಗಿತ್ತು. ಚಿಕಿತ್ಸೆ ಮಾಡದೇ ಇದ್ದರೆ ಸತ್ತು ಯಮಪುರಿ ಸೇರಿ ಖಾಯಂ ಆಗಿ ಯಮನ ವಾಹನ ಆಗುವ ಸಾಧ್ಯತೆ ಇತ್ತು.
ನನ್ನ ಶಿಷ್ಯ ಖಾಯಂ ಎಮ್ಮೆಗಳನ್ನು ಕೆಡಗಿ ಅಭ್ಯಾಸ ಇದ್ದಾತ. ಆತ “ ಸಾರ್.. ಒಂದು ಕೈ ನೋಡಿಯೇ ಬಿಡ್ಲಾ ಸಾರ್.. ಕಾಡುಕೋಣ ಹ್ಯಾಂಗಿದ್ರೂ ಬಡಕಲಾಗಿದೆ. ನಮ್ಮ ಎಮ್ಮೆಗಳಷ್ಟೇ ತಾಕತ್ತು ಇರ್ಬಹುದು, ಹಗ್ಗ ಹಾಕಿ ಕೆಡವಿ ಬಿಡ್ತೀನಿ “ ಎಂದು ಹುಂಬ ಧೈರ್ಯ ತೋರಿದ. ನಾನು ಮಾತ್ರ ಈ ರಿಸ್ಕ್ ತೆಗೆದುಕೊಳ್ಳಲು ಸುತರಾಂ ಸಿದ್ದವಿರಲಿಲ್ಲ. ಎಲ್ಲಾದರೂ ನಮ್ಮ ಅಂದಾಜು ತಪ್ಪಿ ಈ ಕಾಡುಕೋಣ ನುಗ್ಗಿ ಯಾರನ್ನಾದರೂ ಕೆಡಗಿ ಕೊಂದರೆ ಯಾರು ಜವಾಬ್ದಾರರರು? ಎಂದು “ ಈ ಕಾಡು ಪ್ರಾಣಿ ಸಹವಾಸ ಸಾಕಪ್ಪಾ.. ಅದರ ಡಾಕ್ಟರುಗಳು ಬಂದು ಏನಾದರೂ ಮಾಡ್ಲಿ. ನಮ್ಮಿಂದ ದನ ಆರಾಮವಾದ್ರೆ ಸಾಕು” ಎಂದು ರಾಗ ಎಳೆದೆ. ಆದರೂ ವೃತ್ತಿಯ ತುಡಿತ ಇದೆಯಲ್ಲ.. ಏನಾದರೂ ಮಾಡಲೇ ಬೇಕು. ಸುತ್ತ ಮುತ್ತ ಸೇರಿದ ಜನ ಎಲ್ಲಾ ತರಹೇವಾರಿ ಕಾಮೆಂಟು ಪಾಸು ಮಾಡಲಿಕ್ಕೆ ಪ್ರಾರಂಭಿಸಿದರು.
ಅವರೊಲ್ಲಬ್ಬ “ಇವರು ದನಕ್ಕೆ ಮಾತ್ರ ಡಾಕ್ಟರು. ಎಮ್ಮೆ ಮುಕಳಿ ಒಳಗೆ ಕೈ ಹಾಕಿ ಇನ್ಸೆಮಿನೇಷನ್ ಮಾಡೋದು ಮಾತ್ರ ಇವರಿಗೆ ಕಲ್ಸಿರ್ತಾರೆ. ಈ ಕಾಡುಕೋಣದ ಟ್ರೀಟ್ಮೆಂಟಿಗೆಲ್ಲಾ ಮೈಸೂರಿನಿಂದ ಎಕ್ಸ್ಪರ್ಟ್ಸ್ ಬರ್ಬೇಕು. ಸುಮ್ನೇ ಟೈಮ್ ಪಾಸಿಗೆ ಬಂದಿದ್ದಾರೆ. ಅದ್ರ ಜೊತೆ ಈ ಫ಼ಾರೆಸ್ಟ್ ಖಾತೆ ಜನಾ ಬೇರೆ ದಂಡ” ಎಂದು ನನ್ನ ವೃತ್ತಿಯ ಘನತೆಯನ್ನು ಮೂರುಕಾಸಿಗಿಳಿಸಿ ನಿವಾಳಿಸಿ ಬಿಸಾಡಿದ ಹಾಗೂ ಫ಼ಾರೆಸ್ಟು ಇಲಾಖೆಯವರು ಕಳ್ಳ ನಾಟಾ ಮಾಡುತ್ತಿದ್ದ ಕೆಲ ಹಳ್ಳಿಯ ಜನರನ್ನು ಕುಂಡೆಯ ಮೇಲೆ ಹಾಕಿ ಕಟಕಟೆ ಒಳಗೆ ಹಾಕಿದ ಹಳೆ ಸೇಡು ತೀರಿಸಿಕೊಂಡ. ಹಳ್ಳಿಯಲ್ಲಿ ರಾತ್ರಿ ,10 ಘಂಟೆಗೆ ಕರು ಅಡ್ಡ ಸಿಕ್ಕಿಹಾಕಿಕೊಂಡಾಗ ಎಣ್ಣೆಯ ಮತ್ತನ್ನು ಏರಿಸಿಕೊಂಡವರಿಂದ ಈ ತರಹದ ಮಾತು ಕೇಳಿ ಅಭ್ಯಾಸವಾಗಿ ಹೋದ ನಾನು ಇದನ್ನು ಸೀರಿಯಸ್ ಆಗಿ ತೆಗೆದುಕೊಳ್ಳಲೇ ಇಲ್ಲ. ಆದರೆ ನನ್ನ ಶಿಷ್ಯನಿಗೆ ಮಾತ್ರ ನಖಶಿಖಾಂತ ಕೋಪ ಬಂದಿತ್ತು.
ಆತ “ಸಾರ್. ಏನೂ ತೊಂದರೆ ಇಲ್ಲದಂತೆ ಅದನ್ನು ಕೆಡಗಿ ಕೊಡ್ತೀನಿ ಸಾರ್. ಇಂಜೆಕ್ಷನ್ ಹಾಕಿ ಅನೇಸ್ಠೇಸಿಯಾ ಕೊಟ್ಟು ಕೆಲಸ ಮಾಡಿ.. ಫ಼ಾರೆಸ್ಟ್ ಡಿಪಾರ್ಟ್ಮೇಂಟಿನವರೂ ಸಹಾಯ ಮಾಡ್ತಾರೆ” ಅಂದ. ಅಷ್ಟು ಹೊತ್ತು ನಮ್ಮ ಪರಿಪಾಟಲು ನೋಡಿ ಮಜಾ ತಗಳ್ತಿದ್ದ ಅರಣ್ಯ ಇಲಾಖೆಯ ಗಾರ್ಡು ಫ಼ಾರೆಸ್ಟರುಗಳೂ ಜನರ ಮಾತಿನಿಂದ ರೇಗಿ ಏನಾದರೂ ಮಾಡಲೇಬೇಕೆಂಬ ತೀರ್ಮಾನಕ್ಕೆ ಬಂದಾಗಿತ್ತು, ಅವರು ನಾಟಾ ಸಾಗಿಸಲು ಕಳ್ಳ ಸಾಗಣೆಗೆ ಉಪಯೋಗಿಸುತ್ತಿದ್ದ ಸೀಜ಼್ ಮಾಡಿದ ದಪ್ಪನೇ ಹಗ್ಗ ತಂದರು.
ಅದನ್ನು ಎಂಟತ್ತು ಅಡಿಕೆ ಮರದ ಸುತ್ತ ಕಟ್ಟಿ ಕಾಡು ಕೋಣ ಹಗ್ಗದ ಕೋಟೆ ಒಳಗೆ ಭದ್ರವಾಗುವಂತೆ ದಿಗ್ಭಂಧನ ಹಾಕಿದರು. ಕಾಡುಕೋಣ ಇರುವ ಜಾಗದ ಸುತ್ತ ಗೂಟದ ಬೇಲಿ ರೆಡಿಯಾಗಿ ಅಕ್ಷರಷ: ಕೊರೋನಾ ಪೀಡಿತರನ್ನು ಕ್ವಾರಂಟೈನಿನೊಳಗೆ ಹಾಕಿದ ಹಾಗೇ ಲಾಕ್ ಮಾಡಿದರು. ಆದರೆ ಕೋಣಕ್ಕೆ ಅನೇಶ್ಥೆಸಿಯಾ ಇಂಜೆಕ್ಷನ್ ಚುಚ್ಚಬೇಕಲ್ಲ. “ಯಾರಾದ್ರೂ ಬಂದು ಇದನ್ನು ಮಾಂಸದಲ್ಲಿ ತೂರಿಸ್ರೋ” ಎಂದು ಸಿರಿಂಜಿನಲ್ಲಿ ತಕ್ಕ ಪ್ರಮಾಣದ ಅನೇಸ್ಥೆಸಿಯಾ ಚುಚ್ಚುಮದ್ದು ಲೋಡ್ ಮಾಡಿ ನೀಡಲು ಹೋದೆ. ಯಾರೂ ಮುಂದೆ ಬರಲಿಲ್ಲ.
ಒಂದು ಉಪಾಯ ಹೊಳೆಯಿತು. ನಾವು ನಿರ್ಮಿಸಿದ ಕೋಟೆಯೊಳಗೆ ಒಂದಿಷ್ಟು ಮುರುಗಲು ಮತ್ತು ಕೋಕೋ ಗಿಡಗಳಿದ್ದವು. ಅವುಗಳ ಮೇಲೆ ಹತ್ತಿ ಕುಳಿತರೆ ಮತ್ತು ಕಾಡುಕೋಣವನ್ನು ಅಲ್ಲಿಗೆ ನಿಧಾನವಾಗಿ ಚಲನೆಯಾಗುವಂತೆ ನೋಡಿಕೊಂಡರೆ ಅದಕ್ಕೆ ಕಚಕ್ ಎಂದು ಇಂಜೆಕ್ಷನ್ ಚುಚ್ಚಿಬಿಡುವ ಎಂದುಕೊಂಡೆ. ಆದರೆ ಇಲ್ಲಿ ತುಂಬಾ ರಿಸ್ಕ್ ಇತ್ತು. ಆದರೆ ಮೊದಲೇ ಗಾಯಾಳು ಕೋಣ, ಖಂಡಿತಾ ರೋಷ ಭರಿತವಾಗಿರುತ್ತದೆ. ಏನಾದರೂ ಹೆಚ್ಚುಕಮ್ಮಿ ಆಗಿ ಆಯ ತಪ್ಪಿದರೆ ಅದರ ಮೇಲೆಯೇ ಬೀಳುವ ಸಾಧ್ಯತೆ ಇತ್ತು. ಬಿದ್ದರೆ ತುಳಿದು ಖಂಡಿತಾ ತುಳಿದು ಯಮಪುರಿಗೆ ಕಳಿಸುತ್ತಿತ್ತು.
ಯಾರಿಗಾದರೂ ಮರ ಹತ್ತಿ ಅದು ಕೆಳಗೆ ಬಂದೊಡೆ ಇಂಜೆಕ್ಷನ್ ಚುಚ್ಚಿ ಎಮ್ದರೆ ಎಲ್ಲರೂ ಹೆದರು ಪುಕ್ಕಲರೆ. ಮತ್ತೆ ಕೆಲವರು ಹೊಟ್ಟೆ ಹೊತ್ತ ದಡೂತಿಗಳು. ಅಲ್ಲಿ ಇರುವವರಲ್ಲಿ ನಾನೇ ತೆಳ್ಳಗಿರುವವ. ಏನಾದರಾಗಲಿ ಎಂದು ಅನಸ್ಥೆಸಿಯಾವನ್ನು ತುಂಬಿಸಿದ ಸಿರಿಂಜ್ ಕೈಲಿ ಹಿಡಿದು ಅದು ನೇರವಾಗಿ ಕೆಳಗೆ ಬರಬಹುದಾದ ಕೋಕೋ ಗಿಡದ ಮೇಲೆ ಏರಿದೆ. ಕಾಡುಕೋಣವನ್ನು ಮರದ ಕೆಳಗೆ ಬಂದು ನಿಲ್ಲುವಂತೆ ಬೆದರಿಸಲು ಸೂಚಿಸಿದೆ.
ಹಲವು ರೌಂಡ್ ಕಾರ್ಯಾಚರಣೆಯ ನಂತರ ಯಾವುದೋ ಗಳಿಗೆಯಲ್ಲಿ ಕಾಡು ಕೋಣ ನಾನು ಮೇಲೆ ಇದ್ದ ಕೊಂಬೆಯ ಕೆಳಗೆ ಬಂದು ನಿಂತಿತು. ಇದೇ ಅವಕಾಶವೆಂದು ಅದರ ಹಿಂಬಾಗದ ಪ್ರಷ್ಠದ ಮೇಲೆ ಸೂಜಿಯ ಸಮೇತ ಸಿರಿಂಜ್ ಚುಚ್ಚಿ ಸರಕ್ಕನೇ ಔಷಧಿ ಸೇರಿಸಿದೆ. ಆಯ ತಪ್ಪಿ ಕೆಳಗೆ ಬಿದ್ದ ಹೊಡೆತಕ್ಕೆ ಕಾಡುಕೋಣದ ಎದುರು ಅಂಗಾತ ಬಿದ್ದೆ. ಇನ್ನೇನು ಕಾಡುಕೋಣ ನನ್ನನ್ನು ತಿವಿಯಬೇಕು.. ನೋಡ್ತೀನಿ .. ಏನೂ ಶಬ್ಧ ಇಲ್ಲ.
ನಾನು ಕೊಟ್ಟ ಅರಿವಳಿಕೆಯ ಪ್ರಭಾವದಿಂದ ಕಾಡುಕೋಣ ಧರಾಶಾಯಿಯಾಗಿತ್ತು.
ಕೂಡಲೇ ನನ್ನ ಶಿಷ್ಯ ಮತ್ತು ಅರಣ್ಯ ಇಲಾಖೆಯವರು ಕಾಡುಕೋಣವನ್ನು ನಾಡುಕೋಣ ಕಟ್ಟಿದಂತೆ ಹಗ್ಗದಿಂದ ಏಳದಂತೆ ಕ್ಷಣಮಾತ್ರದಲ್ಲಿ ಬಂಧಿಸಿದರು. ಕಾಡುಕೋಣದ ಮುಂಗಾಲಿನ ಮೇಲ್ಬಾಗದಲ್ಲಿ ಕೀವಿನಿಂದ ಕೂಡಿದ ಗಡ್ಡೆಯಿತ್ತು. ಸಾವಧಾನವಾಗಿ ಅದನ್ನು ಓಪನ್ ಮಾಡಿದಾಗ ಟಕ್ ಎಂದು ಅದರೊಳಗಿದ್ದ ಬುಲೆಟ್ ಹೊರಬಂತು. ಯಾರೋ ದುರುಳರು ಮಾಂಸದಾಸೆಗೆ ಕಾಡುಕೋಣಕ್ಕೆ ಗುಂಡು ಹೊಡೆದಾಗ ಅದು ಮಾಂಸದಲ್ಲಿ ಕಚ್ಚಿಕೊಂಡು ಅಲ್ಲಿ ಕೀವುಂಟುಮಾಡಿದೆ ಎಂದು ತಿಳಿಯಿತು.
ಕೀವು ಬಸಿದು ಹೋಗುವ ಹಾಗೇ ಮಾಡಿ ಅದರೊಳಗೆ ಟಿಂಚರ್ ಆಯೋಡಿನ್ ಯುಕ್ತ ಭಟ್ಟೆಯನ್ನಿರಿಸಿ ಸುತ್ತಲೂ ಮುಲಾಮು ಹಚ್ಚಿದೆ. ಅವಶ್ಯಕ ನಂಜುನಿವಾರಕಗಳು, ನೋವು ನಿವಾರಕಗಳು ಹಾಗೂ ಜೀವನಿರೋಧಕದ ಚುಚ್ಚುಮದ್ದು ನೀಡಿದೆ. ಕಾಡುಕೋಣ ಬಹಳ ಬಡಕಲುಗೊಂಡಿತ್ತು. ಬಹುಶ: ಕೀವಿನ ನೋವಿನ ಬಾಧೆಯಿಂದ ಇರಬಹುದೇನೋ? ಕಾಡು ಕೋಣ ನಾಡಿಗೆ ಆಶ್ರಯಕ್ಕೆ ಬಂದಿದೆ.ತೋಟದಲ್ಲಿ ಸುಲಭವಾಗಿ ಸಿಗುವ ಹಲಸಿನ ಹಣ್ಣು ಇತ್ಯಾದಿ ತಿಂದು ಸೆಟ್ಲ್ ಆಗಿದೆ ಎಂದು ಗೊತ್ತಾಯ್ತು. ಎಲ್ಲ ಕೆಲಸ ಮುಗಿಸಿ, ಅದರ ತಿಲಕಾಷ್ಠ ಮಹಿಷ ಬಂಧನ ಬಿಡಿಸಿ ದೂರ ಬಂದೆವು. ಕೋಟೆಯಂತೆ ಮಾಡಿದ ಹಗ್ಗದ ಬಿಗಿತವನ್ನೂ ಸಡಿಲ ಗೊಳಿಸಿದೆವು. ಸುಮಾರು ಮುಕ್ಕಾಲು ಘಂಟೆಗೆ ಕಾಡುಕೋಣಕ್ಕೆ ಪ್ರಜ್ಞೆ ಬಂತು. ಓಲಾಡುತ್ತಾ ಏಳಲು ಪ್ರಯತ್ನಿಸಿತು. ಸ್ವಲ್ಪ ಹೊತ್ತಿಗೆ ಎದ್ದು ನಿಂಟು ಮೈಕೊಡವಿಕೊಂಡಿತು. ದುಡುಕ್ಕನೆ ಪಕ್ಕಳದ ಹಳ್ಳದ ಮೇಲೆ ಏರಿ ನಿಂತಿತು. ನಮ್ಮೆಡೆ ಒಂತರಾ ಕೃತಜ್ಞತೆಯ ನೋಟ ಬೀರಿ ಕಾಡಿನಲ್ಲಿ ಜಿಗಿದು ಮಾಯವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ7 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


