ದಿನದ ಸುದ್ದಿ
ಆಳುವ ಯೋಗ್ಯತೆ ಇಲ್ಲದಿದ್ದರೆ ಹೊರಟುಬಿಡಿ ಪ್ಲೀಸ್
- ನಾ ದಿವಾಕರ
ನಾವು ಎಂಥವರನ್ನು ಆಯ್ಕೆ ಮಾಡಿಬಿಟ್ಟಿದ್ದೇವೆ ? ಬಹುಶಃ ಈ ಪ್ರಶ್ನೆ ಪ್ರಜ್ಞೆ ಇರುವ ಪ್ರತಿಯೊಬ್ಬ ಪ್ರಜೆಯಲ್ಲೂ ಮೂಡಿರಲೇಬೇಕು. ಕಪ್ಪೆಚಿಪ್ಪುಗಳಲ್ಲಿ ನಿಷ್ಠೆ-ಭಕ್ತಿಯ ಮುಸುಕು ಧರಿಸಿ ಅವಿತಿಟ್ಟುಕೊಳ್ಳುವವರಲ್ಲಿ ಈ ಪ್ರಶ್ನೆ ಉದ್ಭವಿಸದಿರಬಹುದು. ಅಂಥವರು ತಮ್ಮ ಸ್ವ ಪ್ರಜ್ಞೆಯನ್ನು ಒತ್ತೆ ಇಟ್ಟ ನಂತರವೇ ಯಾವುದೋ ಒಂದು ಚಿಪ್ಪಿನಲ್ಲಿ ಅಡಗಿ ಕುಳಿತಿರುತ್ತಾರೆ.
ನಾವು ಸಾವಿನ ಸರದಾರರ ನಡುವೆ ಬದುಕಿದ್ದೇವೆ. ಸಾವಿನ ದಲ್ಲಾಳಿಗಳ ನಡುವೆ ಜೀವನ ಸಾಗಿಸಿದ್ದೇವೆ. ಈಗ ಸಾವುಗಳ ಮೇಳ ನಡೆಯುತ್ತಿದೆ. ಅಧಿಕಾರದ ಅಮಲಿನಲ್ಲಿರುವವರಿಗೆ ಈ ಮೇಳದಲ್ಲಿ ಹುಲ್ಲುಗಾವಲುಗಳು ಕಾಣಿಸುತ್ತಿವೆ. ಜೀವ, ಜೀವನ ಮತ್ತು ಜೀವನೋಪಾಯ ಈ ಮೂರರ ನಡುವೆ ಇರುವ ಸೂಕ್ಷ್ಮ ಸಂಬಂಧಗಳ ಪರಿವೆಯೇ ಇಲ್ಲದಂತಹ ಒಂದು ವಿಕೃತ ವ್ಯವಸ್ಥೆಯಲ್ಲಿ ಭಾರತ ಮತ್ತೊಮ್ಮೆ ಒಂದು ವೈರಾಣುವಿನೊಡನೆ ಬದುಕುತ್ತಿದೆ.
ಕಳೆದ ವರ್ಷದ ಕೆಲವು ಮಾತುಗಳನ್ನೊಮ್ಮೆ ಇಲ್ಲಿ ನೆನಪಿಸಿಕೊಳ್ಳೋಣ. “ ಕೊರೋನಾ ನಮ್ಮ ನಡುವೆ ಬಹಳ ವರ್ಷಗಳ ಕಾಲ ಇರುತ್ತದೆ. ನಾವು ಅದರೊಡನೆ ಬದುಕುವುದನ್ನು ಕಲಿಯಬೇಕು ” ಎಂದು ನಮ್ಮ ಅಧಿನಾಯಕರೇ ಆಜ್ಞಾಪಿಸಿದ್ದನ್ನು ಸ್ಮರಿಸೋಣ. ಕೊರೋನಾದೊಂದಿಗೆ ಬದುಕುವುದು ಎಂದರೇನು ? ನಿನಗೆ ಶಕ್ತಿ ಇದ್ದರೆ ಬದುಕು ಇಲ್ಲವಾದರೆ ನಿನ್ನ ದಾರಿ ನಿನಗೆ ಎಂದರ್ಥವೇ ? ಈ ವರ್ಷದ ಎರಡನೆಯ ಅಲೆಯ ಸಂದರ್ಭದಲ್ಲಿ ನೋಡಿದಾಗ ಹಾಗೆನಿಸುವುದು ಸಹಜ. ಏಕೆಂದರೆ ನಮ್ಮ ಸುತ್ತಲಿನ ಸರಣಿ ಸಾವುಗಳು ಪೀಠಾಧಿಪತಿಗಳನ್ನು ಅಲುಗಾಡಿಸುತ್ತಲೇ ಇಲ್ಲ.
ನಿತ್ಯ ಹೆಣ ಸುಡುವ ಕಾಯಕ ಮಾಡುವವನಲ್ಲಿ ಅತಿ ಹೆಚ್ಚು ಅಂತಃಕರಣ ಇರುತ್ತದೆ. ಆತನಿಗೆ ಸಾವು ತನ್ನ ನಿತ್ಯ ಬದುಕಿನ ಒಂದು ಭಾಗವಾಗಿರುತ್ತದೆ. ಪ್ರತಿಯೊಂದು ಸಾವಿಗೂ ಮಿಡಿಯುತ್ತಾ ಕುಳಿತರೆ ಅವನ ಬದುಕು ಬೇಗನೆ ಕೊನೆಗಾಣುತ್ತದೆ. ಇದು ಜೀವನ. ಸಾವಿನ ನಡುವೆ ಬದುಕುವುದು ಅವನ ಜೀವನೋಪಾಯ.
ಆದರೂ ಅವನಲ್ಲಿ ಮಡುಗಟ್ಟಿರುವ ಅಂತಃಕರಣ ಅವನಲ್ಲಿ ಜೀವ ಪ್ರೀತಿ ತುಂಬಿರುತ್ತದೆ. ಇದು ಜೀವ. ಜೀವನವಿಡೀ ಸಾವುಗಳ ನಡುವೆಯೇ ಬದುಕುವ ಈತನಿಗೆ ತನ್ನ ಕುಟುಂಬದಲ್ಲಿ ಒಬ್ಬರು ಮೃತಪಟ್ಟರೂ ಸಹಿಸಲಾಗದಷ್ಟು ದುಃಖ ಉಮ್ಮಳಿಸುತ್ತದೆ. ಎಷ್ಟೇ ಸಾವುಗಳನ್ನು ಕಂಡರೂ ಅಂತಃಕರಣ ಜೀವಂತವಾಗಿದ್ದರೆ ಮನುಜ ಪ್ರೀತಿ ಬತ್ತುವುದಿಲ್ಲ. ಇದು ಜೀವನ. ಈ ಮೂರರ ಸಮೀಕರಣವನ್ನು ಪರಿಪೂರ್ಣವಾಗಿ ಕಾಣಬಹುದಾದರೆ ಅದು ಮಸಣದಲ್ಲೇ.
ನಮ್ಮ ದೇಶದ ಸಾರಥ್ಯ ವಹಿಸಿರುವ ಅಧಿಕಾರದಾಹಿ ರಾಜಕೀಯ ನಾಯಕರಿಗಾಗಿ, ಈ ಶವಾಗಾರ ನಿರ್ವಹಿಸುವವರಿಂದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸುವ ಅನಿವಾರ್ಯತೆ ಈಗ ಕಾಣುತ್ತಿದೆ. ಏಕೆಂದರೆ ಇವರಿಗೆ ಜೀವದ ಬೆಲೆ ಗೊತ್ತಿಲ್ಲ. ಸಾವಿನ ಬೆಲೆಯೂ ಗೊತ್ತಿಲ್ಲ. ಜೀವಗಳನ್ನು ಹಿಸುಕಲು ಆಸ್ಪತ್ರೆಗಳಲ್ಲಿ ವ್ಯಾಪಾರ ಕುದುರಿಸಿ ಭ್ರೂಣ ಹತ್ಯೆ ಮಾಡುವ ದೇಶ ನಮ್ಮದು.
ಎಳೆಯ ಜೀವಗಳನ್ನು ಹೆಣ್ಣು ಎಂಬ ಕಾರಣಕ್ಕಾಗಿಯೇ ಹೊಸಕಿ ಹಾಕುವ ದೇಶ ನಮ್ಮದು. ಈಗ ಸಾವನ್ನೂ ಖರೀದಿಸಲಾಗುತ್ತಿದೆ. ಹಣ ಇದ್ದರೆ ಹೆಣಕ್ಕೂ ಜಾಗ ಎನ್ನುವಂತಹ ಪರಿಸ್ಥಿತಿ ಬಂದಿದೆ. ಈ ಪರಿಸ್ಥಿತಿಗೆ ಕೋವಿದ್ ಕಾರಣ ಅಲ್ಲ. ಕೋವಿದ್ ನಿಮಿತ್ತ. ಕಾರಣ ನಾವು ಪೋಷಿಸಿರುವ ವ್ಯವಸ್ಥೆ.
ಎಲ್ಲಿಂದ ಎಲ್ಲಿಯವರೆಗೆ ನೋಡಿದರೂ ಇವರಿಗೆ ಹಣ-ಅಧಿಕಾರ-ಲಾಭ ಇವಷ್ಟೇ ಕಾಣುತ್ತವೆ. ಅದು ಜೀವನಾಶಕ ಅಣುವಿದ್ಯುತ್ ಘಟಕವೋ, ಪರಿಸರ ನಾಶದ ಕಾರ್ಖಾನೆಯೋ ಇರಬಹುದು ಅಥವಾ ಜೀವ ರಕ್ಷಕ ಲಸಿಕೆ ಇರಬಹುದು. ಎರಡೂ ಮಾರುಕಟ್ಟೆಯ ಕೈಯ್ಯಲ್ಲಿದೆ. ನಾಶ ಮಾಡಲು ಬಂಡವಾಳ ಹೂಡುವ ವ್ಯವಸ್ಥೆಯಲ್ಲಿ ನಾವಿದ್ದೇವೆ.
ನಾಶವಾಗುತ್ತಿದ್ದರೂ, ಇರುವಷ್ಟು ದಿನದ ಹಿತವಲಯಕ್ಕಾಗಿ ಸಹಿಸಿಕೊಳ್ಳುವ ಮನಸ್ಥಿತಿಯನ್ನು ಈ ಮಾರುಕಟ್ಟೆಯೇ ಸೃಷ್ಟಿಸಿಬಿಟ್ಟಿದೆ. ಹಾಗಾಗಿ ಮುಳುಗಡೆಯ ಭೀತಿಯೂ ನಮ್ಮನ್ನು ಕಾಡುವುದಿಲ್ಲ. ವಿನಾಶದ ಆತಂಕವೂ ಕಾಡುವುದಿಲ್ಲ. ಇಂತಹ ಒಂದು ಬೃಹತ್ ಸಮಾಜವನ್ನೂ ಬಂಡವಾಳ ಮಾರುಕಟ್ಟೆ ಸೃಷ್ಟಿಸಿಬಿಟ್ಟಿದೆ.
ಈ ಮಾರುಕಟ್ಟೆಯ ನಡುವೆಯೇ ಕೊರೋನಾ ಜನಸಾಮಾನ್ಯರ ಜೀವದೊಡನೆ ಆಟವಾಡುತ್ತಿದೆ. ಇದರೊಂದಿಗೆ ಬದುಕುವುದನ್ನು ಕಲಿಯಿರಿ ಎಂದು ಹೇಳುವ ನಾಯಕರಿಗೆ ಬದುಕಿನ ಅರ್ಥವೇ ತಿಳಿದಿರುವುದಿಲ್ಲ. ಏಕೆಂದರೆ ಇವರಿಗೆ ಹಸಿವಿನ ಅರ್ಥ ತಿಳಿದಿರುವುದಿಲ್ಲ. ನೋವು, ವೇದನೆ ಇವೆಲ್ಲವೂ ಇವರಿಗೆ ಮತಪೆಟ್ಟಿಗೆಯ ಹಿಂದೆ ಅವಿತಿರುವ ಪಂಚವಾರ್ಷಿಕ ದರ್ಶನಗಳಂತೆ.
ಭಾರತ ವಿಶಾಲವಾದ ದೇಶವಲ್ಲವೇ, ಯಾವುದೋ ಒಂದು ಮೂಲೆಯಲ್ಲಿ ಹೆಣಸುಟ್ಟರೆ ಮತ್ತೊಂದು ಮೂಲೆಗೆ ತಿಳಿಯುವುದೇ ಇಲ್ಲ. ಹಾಗಾಗಿ ದಕ್ಷಿಣದಲ್ಲಿನ ಹೆಣದ ರಾಶಿ ದೆಹಲಿಯ ಸೆಂಟ್ರಲ್ ವಿಸ್ತಾ ಹಾದಿಗೆ ಅಡ್ಡಿಯಾಗುವುದಿಲ್ಲ. ದೆಹಲಿಯಲ್ಲೇ ಬೀಳುವ ಹೆಣದ ರಾಶಿಗಳು ಅಧಿಕಾರ ಪೀಠಗಳಿಗೆ ಗೋಚರಿಸುವುದೇ ಇಲ್ಲ.
ಮಸೂರಗಳನ್ನು ತೊಟ್ಟು ಬದುಕುತ್ತಿದ್ದೇವೆ. ಪ್ರಪಂಚ ನಮಗೆ ಬೇಕಾದಂತೆ ಕಾಣುತ್ತದೆ. ಅದು ಕಂಡಂತೆ ನಾವು ಅರ್ಥಮಾಡಿಕೊಳ್ಳುವ ಕಾಲ ಬಹುಶಃ ಮುಗಿದುಹೋಗಿದೆ. ಚಾಮರಾಜನಗರದಲ್ಲಿ 24 ಜೀವಗಳು ಬಲಿಯಾದವು. ಉಸಿರಾಡಲು ಸೌಲಭ್ಯ ಇಲ್ಲದೆ. ಇನ್ನೂ ರಾಜ್ಯದ ವಿವಿಧೆಡೆ ಆಮ್ಲಜನಕ ಇಲ್ಲದೆ ಸಾಯುತ್ತಲೇ ಇದ್ದಾರೆ.
ಈಗ ಆಮ್ಲಜನಕ ಮಾರುಕಟ್ಟೆಯ ಹಿಡಿತದಲ್ಲಿದೆ. ಉತ್ಪಾದಿಸುವವನೊಬ್ಬ, ಸಾಗಾಣಿಕೆ ಮಾಡುವವನೊಬ್ಬ, ವಿತರಿಸುವವ ಮತ್ತೊಬ್ಬ. ಮಾರುಕಟ್ಟೆ ಸರಕಿನಂತೆಯೇ ಈ ಕೃತಕ ಉಸಿರನ್ನೂ ಸರ್ಕಾರ ಪಡಿತರದಂತೆ ಸೀಮಿತವಾಗಿ ವಿತರಿಸುತ್ತದೆ. ತನಗೆ ಬೇಕಾದವರಿಗೆ ಹೆಚ್ಚು, ಬೇಡದವರಿಗೆ ಶೂನ್ಯ. ಹೀಗೆ , ಎಷ್ಟಾದರೂ ಪಳಗಿದ ಕೈಗಳಲ್ಲವೇ.
ದೆಹಲಿಯ ಪೀಠ, ಕರ್ನಾಟಕಕ್ಕೆ ಅಗತ್ಯಕ್ಕಿಂತಲೂ ಕಡಿಮೆ ಆಮ್ಲಜನಕ ನೀಡುತ್ತದೆ. ನ್ಯಾಯಾಂಗದ ಪ್ರವೇಶದಿಂದ ನಮಗೆ ಹಿಡಿದಿಟ್ಟ ಉಸಿರು ಲಭ್ಯವಾಗುತ್ತದೆ. ಪ್ರತಿನಿತ್ಯ ಸಾವಿರಾರು ಕೊರೋನಾ ಸೋಂಕಿತರು ಆಸ್ಪತ್ರೆಗಳ ಮುಂದೆ ಜೀವದಾನ ಬೇಡುತ್ತಿರುವಾಗ, ಇಂತಿಷ್ಟೇ ಆಮ್ಲಜನಕ ಬೇಕೆಂದು ಹೇಗೆ ನಿರೀಕ್ಷಿಸುವುದು ? ಹೆಚ್ಚಿಗೆ ನೀಡಿದರೆ ಏನಾಗುತ್ತದೆ ? ಇಲ್ಲಿ ಮಾರುಕಟ್ಟೆ ಪ್ರವೇಶಿಸುತ್ತದೆ.
ಅವಶ್ಯಕತೆಗಿಂತಲೂ ಕಡಿಮೆ ಸರಬರಾಜು ಇದ್ದರಷ್ಟೇ ಸರಕಿಗೆ ಬೆಲೆ, ಲಾಭ ಹೆಚ್ಚು. ಅಷ್ಟೇ. ಇದು #ಆತ್ಮನಿರ್ಭರ ಭಾರತದ ನಿಯಮ. ಮಾರುಕಟ್ಟೆ ಎಂದರೆ ಕ್ರೌರ್ಯದ ಪ್ರಾಪಂಚಿಕ ಸ್ವರೂಪವಷ್ಟೇ. ಅಲ್ಲಿ ಹಣ ಮತ್ತು ಹೆಣ ಎರಡೂ ವಿನಿಮಯದ ವಸ್ತುಗಳೇ ಆಗಿಬಿಡುತ್ತವೆ. ಹಾಗಾಗಿಯೇ ಹೆಣ ಸುಡಲೂ ಹಣ ನೀಡಬೇಕಾದ ಪರಿಸ್ಥಿತಿ.
ಜೀವರಕ್ಷಣೆಗಾಗಿ ಆಸ್ಪತ್ರೆಗೆ ಬರುವವರಿಗೆ ಹಾಸಿಗೆ ಒದಗಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಈ ಹಾಸಿಗೆಗಳೂ ಕಾಳಸಂತೆಯ ದಂಧೆಯ ಒಂದು ಭಾಗವಾಗುತ್ತದೆ. ಈ ದಂಧೆಯನ್ನು ಕೊನೆಗೊಳಿಸಲು ಒಂದು ಪುಟ್ಟ ಸೇನೆಯನ್ನೇ ಸಿದ್ಧಪಡಿಸುವ ಯುವ ಸಂಸದರಿಗೆ, ಜೀವರಕ್ಷಕ ತಾಣದಲ್ಲೂ ಅಸ್ಮಿತೆಗಳ ಹೊಸ ಲೋಕ ಕಂಡುಬಿಡುತ್ತದೆ.
ಹೆಣಗಳಲ್ಲಿ ಅಸ್ಮಿತೆಗಳನ್ನು ಹೆಕ್ಕಿ ತೆಗೆಯುವುದರಲ್ಲಿ ತರಬೇತಿ ಪಡೆದಿರುವವರಿದ್ದಾರೆ ನಮ್ಮ ನಡುವೆ. ಹಾಗಾಗಿ ಇಲ್ಲಿ ಹದಿನೇಳು ಮಂದಿಯನ್ನು ಹೆಕ್ಕಿ ತೆಗೆದಿದ್ದರಲ್ಲಿ ಅಚ್ಚರಿಯೇನಿಲ್ಲ. ಇಷ್ಟಕ್ಕೂ ದಂಧೆಕೋರರ ವಿಳಾಸ ತಿಳಿದಿದ್ದರೂ ತಲುಪಲಾಗದ ಸ್ಥಿತಿಯನ್ನು ಅಧಿಕಾರ ರಾಜಕಾರಣ ಸೃಷ್ಟಿಸಿರುತ್ತದೆ. ಹಾಗಾಗಿ ಕಾಡು ಹಂದಿಗಳಿಗೆ ಮುಕ್ತಿ. ಮುಗ್ಧ್ದ ಜಿಂಕೆಗಳ ಬಲಿ.
ಸರ್ಕಾರಗಳು ತಾವು ಕೊಟ್ಟ ಮಾತಿಗೆ ತಪ್ಪಲಿಲ್ಲ. ಕೊರೋನಾದೊಂದಿಗೆ ಬದುಕಲು ಕಲಿಯಿರಿ ಎಂಬ ಮನದ ಮಾತು ಇನ್ನೂ ಅಪ್ರಸ್ತುತವಾಗಿಲ್ಲ. ಹಾಗಾಗಿ ಕೊರೋನಾ ನಡುವೆಯೇ ಚುನಾವಣೆಗಳು, ನಡೆದಿವೆ, ಸಮಾವೇಶಗಳು ನಡೆದಿವೆ, ಕುಂಭಮೇಳಗಳೂ ನಡೆದಿವೆ.
ಇವುಗಳ ನಡುವೆಯೇ ಅವರು ಬದುಕು ಕಂಡುಕೊಂಡಿದ್ದಾರೆ. ಅವರ ಬದುಕಿಗೆ ಇವೆಲ್ಲವೂ ಅನಿವಾರ್ಯ. ಆದರೆ ನಮ್ಮ ಬದುಕಿಗೆ ಇವು ಮಾರಕ. ಅವರು ಬದುಕುತ್ತಿಲ್ಲವೇ ? ಅದೂ ಒಂದು ಬದುಕೇ ಎಂದು ಕೇಳುವುದು ಬೇಡ. ಉತ್ತರ ಶೋಧಿಸಲು ಬಹಳ ಶ್ರಮಪಡಬೇಕಾಗುತ್ತದೆ. ಆದರೂ ಅವರು ನಿರ್ಲಿಪ್ತವಾಗಿ ಬದುಕುತ್ತಾರೆ.
ಕೊರೋನಾ ಹರಡಬಾರದು ಎಂದರೆ ನಾವು ಲಾಕ್ಡೌನ್ ಮಾಡುತ್ತೇವೆ ಎನ್ನುತ್ತಾರೆ. ಲಾಕ್ಡೌನ್ ಜನರನ್ನು ನಿಯಂತ್ರಿಸುತ್ತದೆ. ಕೊರೋನಾ ಓಡಾಡುತ್ತಲೇ ಇರುತ್ತದೆ. ಸರಕಾರಗಳು ನೀಡುವ ನಿಗದಿತ ಅವಧಿಯ ವಿನಾಯತಿಗಳು ನಮಗೆ ಅನ್ವಯ. ವೈರಾಣು ಸದಾ ಜೀವಂತವಾಗಿಯೇ ಇರುತ್ತದೆ.
ಆಶ್ರಯ ತಾಣಗಳನ್ನು ಅರಸುತ್ತಲೇ ಇರುತ್ತದೆ. ಹಾಗಾಗಿ ನಿಮ್ಮನ್ನು ನೀವು ಲಾಕ್ ಡೌನ್ ಮಾಡಿಕೊಂಡರೆ ಅದು ಅನಾಥವಾಗಿಬಿಡುತ್ತದೆ. ಇದು ನಮ್ಮ ಸರ್ಕಾರಗಳ ವಾದ. ಹಾಗಾಗಿಯೇ ಲಾಕ್ ಡೌನ್ ಘೋಷಿಸುವಾಗ ಸರ್ಕಾರಗಳು ಏನು ಸಿಗುತ್ತದೆ ಏನು ಸಿಗುವುದಿಲ್ಲ ಎಂದಷ್ಟೇ ಹೇಳುತ್ತವೆ. ನಿಮಗೇನು ಬೇಕು ಎಂದು ಯಾರನ್ನಾದರೂ ಕೇಳಿದೆಯೇ ?
ಒಮ್ಮೆ ಕೇಳಿಬಿಟ್ಟರೆ ಅವರ ಅಧಿಕಾರ ಪೀಠಗಳು ಅಲುಗಾಡಿಬಿಡುತ್ತವೆ. ಏಕೆಂದರೆ ನಿಮ್ಮ ಜೀವನೋಪಾಯದ ಅವಶ್ಯಕತೆಗಳನ್ನು ಒದಗಿಸುವ ಕೀಲಿ ಕೈ ಮಾರುಕಟ್ಟೆಯ ಬಳಿ ಇರುತ್ತದೆ. ಕೃತಕ ಉಸಿರು, ಆಮ್ಲಜನಕವೇ ಕಂಪನಿಯ ಮುದ್ರೆಯನ್ನು ಹೊತ್ತು ಬರುತ್ತದೆ. ಜೀವ ರಕ್ಷಕ ಲಸಿಕೆಗೆ ಜಿಎಸ್ಟಿ ನೀಡಿ ಖರೀದಿಸಬೇಕಾಗುತ್ತದೆ.
ಗಾಳಿಯನ್ನು ಹಿಡಿದಿಡಲು ಆಗುವುದಿಲ್ಲ. ಆದರೆ ಉಸಿರನ್ನು ಹಿಡಿದಿಡಬಹುದು. ಈಗ ಉಸಿರು ಮಾರಾಟಕ್ಕಿದೆ. ಈ ಉಸಿರು ಒಂದು ಸಮಾಜದ ಉಸಿರುಗಟ್ಟಿಸುತ್ತಿದೆ. ಆದರೂ ಆಮ್ಲಜನಕದ ಸರಬರಾಜು, ಪೂರೈಕೆ, ಉತ್ಪಾದನೆ, ವಿತರಣೆ ಇವೆಲ್ಲವೂ ಮುಂಬರುವ ಚುನಾವಣೆಗಳಿಗೆ ನೆರವಾಗುವಂತಹ ಪ್ರಚಾರ ಸಾಮಗ್ರಿಗಳ ಕಚ್ಚಾವಸ್ತುಗಳಾಗಿಬಿಟ್ಟಿವೆ.
ಆದರೆ ನಮ್ಮ ಸರ್ಕಾರಗಳ ಉಸಿರಾಟಕ್ಕೇನೂ ತೊಂದರೆಯಾಗಿಲ್ಲ. ಹೊಸ ಹವೆ, ಹೊಸ ವಾತಾವರಣ, ಹೊಸ ಪರಿಸರ, ಸ್ವಚ್ಚಂದ ಆಹ್ಲಾದಕರ ಬದುಕಿಗಾಗಿಯೇ, #ಆತ್ಮನಿರ್ಭರ ಭಾರತದ ಜನಪ್ರತಿನಿಧಿಗಳಿಗಾಗಿ ಒಂದು ಭವ್ಯ ಸೌಧದ ನಿರ್ಮಾಣ ಸುಡುವ ಹೆಣಗಳ ರಾಶಿಯ ನಡುವೆಯೇ ಆರಂಭವಾಗಿದೆ.
ನಾವೇ ನೀಡುವ ತೆರಿಗೆಯ ಹಣದಲ್ಲಿ ಈ ಐಷಾರಾಮಿ ಹಿತವಲಯದ ಸೃಷ್ಟಿಯಾಗುತ್ತಿದೆ. ದೇಶದೆಲ್ಲೆಡೆ ಆಮ್ಲಜನಕಕ್ಕಾಗಿ ಹಾಹಾಕಾರ ಕೇಳಿಬರುತ್ತಿದೆ. ಈ ಭವ್ಯ ಸೌಧದ ನಿರ್ಮಾಣಕ್ಕಾಗಿಯೇ ನೂರಾರು ಹಸಿರೊಡಲುಗಳು ಅವಸಾನ ಕಾಣುತ್ತಿವೆ. ನೆಲಕ್ಕುರುಳಿದ ಮರದ ತುಂಡುಗಳು ಹೆಣ ಸುಡಲು ನೆರವಾಗಬಹುದು.
ಇದನ್ನೂ ಓದಿ | ದುಡಿಯುವ ಮಹಿಳೆಯರ ಹೋರಾಟಕ್ಕೆ ಶಕ್ತಿ ತುಂಬಿದ್ದ ಕಾಂII ಹೆಚ್ಕೆಆರ್
ಇಂತಹ ಒಂದು ಮಾರುಕಟ್ಟೆ ಕ್ರೌರ್ಯದ ನಡುವೆ ನಾವು ದಿನನಿತ್ಯ ನಮ್ಮ ಆಪ್ತರನ್ನು ಕಳೆದುಕೊಳ್ಳುತ್ತಿದ್ದೇವೆ. ನಾವೇ ಪ್ರಜ್ಞಾಪೂರ್ವಕವಾಗಿ ಆಯ್ಕೆ ಮಾಡಿದ ನಮ್ಮ ಪ್ರತಿನಿಧಿಗಳು ತಮ್ಮ ಕುದಿಯುತ್ತಿರುವ ರಕ್ತವನ್ನು ಸಹಿಸಿಕೊಂಡು (ಇಂದಿನ ಪತ್ರಿಕೆಗಳನ್ನು ನೋಡಿ ಮೈಸೂರು ಸುತ್ತಲಿನ ಶಾಸಕರ ರಕ್ತ ಕುದಿಯುತ್ತಿರುವ ವರದಿಯಾಗಿದೆ) ತಮ್ಮ ಮತದಾರ ಪ್ರಭುಗಳ ರಕ್ಷಣೆಗೆ ಮುಂದಾಗುತ್ತಿದ್ದಾರೆ. ಆಮ್ಲಜನಕದ ಕೊರತೆಯಿಂದ ಪ್ರಾಣಕಳೆದುಕೊಳ್ಳುತ್ತಿರುವ ಅಮಾಯಕ ಜೀವಗಳಿಗಿಂತಲೂ ಈ ಪ್ರತಿನಿಧಿಗಳ ಪ್ರತಿಷ್ಟೆ, ಸಮ್ಮಾನ ಮತ್ತು ರಾಜಕೀಯ ಹಿತಾಸಕ್ತಿಗಳು ಮೇಲುಗೈ ಸಾಧಿಸುತ್ತಿರುವುದು ಈ ದೇಶದ ದುರಂತ.
ಪ್ರಜಾಪ್ರಭುತ್ವದ ಕನಿಷ್ಠ ಪ್ರಜ್ಞೆ ಇರುವ ಒಬ್ಬ ವ್ಯಕ್ತಿ ಇಂದು ದೇಶದ ಮುಂದಾಳತ್ವ ವಹಿಸಿದ್ದರೂ ಒಂದು ರಾಷ್ಟ್ರೀಯ ಸರ್ಕಾರದ ರಚನೆಯಾಗುತ್ತಿತ್ತು. ಸರ್ವಪಕ್ಷಗಳನ್ನೊಳಗೊಂಡ ಚಿಂತನಾ ವೇದಿಕೆ ಇರುತ್ತಿತ್ತು. ವೈರಾಣು ತಜ್ಞರು, ವಿಜ್ಞಾನಿಗಳು, ವೈದ್ಯಕೀಯ ತಜ್ಞರು ಮತ್ತು ಅನುಭವಿ ಸಾರ್ವಜನಿಕ ವ್ಯಕ್ತಿಗಳನ್ನೊಳಗೊಂಡ ರಾಷ್ಟ್ರಮಟ್ಟದ ವೇದಿಕೆ ರೂಪುಗೊಳ್ಳುತ್ತಿತ್ತು.
ಪ್ರತಿರಾಜ್ಯದಲ್ಲೂ , ಜಿಲ್ಲೆಯಲ್ಲೂ ಇದರ ಶಾಖೆಗಳಿರುತ್ತಿದ್ದವು. ಜನಸಾಮಾನ್ಯರ ಜೀವನ ಮತ್ತು ಬದುಕು ಇವೆರಡನ್ನೂ ಅರ್ಥಮಾಡಿಕೊಳ್ಳುವ ನಾಯಕರು ಇದ್ದಿದ್ದರೆ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿತ್ತು. ಕೊರೋನಾ ಪೀಡಿತರಿಗೆ ಉಚಿತ ವೈದ್ಯಕೀಯ ನೆರವು ದೊರೆಯುತ್ತಿತ್ತು.
ಆದರೆ ಈ ಕಾಲ್ಪನಿಕ ರಾಜ್ಯದಿಂದ ಹೊರಬಂದೇ ನಾವು ಯೋಚಿಸಬೇಕಿದೆ. ಏಕೆಂದರೆ ಜೀವನೋಪಾಯ ವ್ಯಕ್ತಿನಿಷ್ಟ ವಿಚಾರ. ಜೀವನ ವಸ್ತುನಿಷ್ಟ ವಿಚಾರ. ನಾವು ಬದುಕುತ್ತಿರುವುದು ಒಂದು ಪ್ರಜಾಪ್ರಭುತ್ವದಲ್ಲೇ ಆದರೂ ಇಲ್ಲಿ ಪ್ರಜೆಗಳಿಗೂ ಪ್ರಭುತ್ವಕ್ಕೂ ಇರುವ ಅಂತರ ಅಪಾರ ಎನ್ನುವುದನ್ನು ಕೋವಿದ್ 19 ಸಾಬೀತುಪಡಿಸಿದೆ.
ಇಲ್ಲಿ ನಾವೇ ಆಯ್ಕೆ ಮಾಡುವ ಸರ್ಕಾರಗಳು ಜೀವನ ನಡೆಸಲು ಹಾದಿ ಸುಗಮಗೊಳಿಸುತ್ತವೆ. ಜೀವನ ಕಲ್ಪಿಸಿಕೊಳ್ಳುವುದು ಪ್ರಜೆಗಳ ಆಯ್ಕೆ. ಜೀವನೋಪಾಯ ಮಾರುಕಟ್ಟೆಗೆ ಸಂಬಂಧಿಸಿದ ವಿಚಾರ. ಬದುಕು ಕಟ್ಟಿಕೊಳ್ಳಲು ಈ ಮಾರುಕಟ್ಟೆಯ ಯಾವುದೋ ಒಂದು ಜಗುಲಿಯನ್ನು ಆಶ್ರಯಿಸಬೇಕು.
ಇದನ್ನೇ ರಥಸಾರಥ್ಯ ವಹಿಸಿದವರೂ ಕಳೆದ ವರ್ಷ ಹೇಳಿರುವುದು. ಬದುಕುವುದನ್ನು ಕಲಿಯಿರಿ, ಕೊರೋನಾದೊಂದಿಗೆ ಬದುಕುವುದನ್ನು ಕಲಿಯಿರಿ. ಅಂದರೆ ಕೊರೋನಾ ಕೊಲ್ಲುತ್ತದೆ ಹಾಗಾಗಿ ಸಾವುಗಳೊಂದಿಗೆ ಬದುಕುವುದನ್ನೂ ಕಲಿಯಿರಿ. ಕೊರೋನಾ ಉಸಿರುಗಟ್ಟಿಸುತ್ತದೆ ಹಾಗಾಗಿ ಆಮ್ಲಜನಕ ಇಲ್ಲದೆ ಸಾಯುತ್ತಾರೆ ಈ ಸಾವುಗಳೊಡನೆ ಬದುಕುವುದನ್ನೂ ಕಲಿಯಿರಿ.
ಕೊರೋನಾ ನಿಮ್ಮ ಜೀವನೋಪಾಯಗಳನ್ನು ಕಸಿದುಕೊಳ್ಳುತ್ತದೆ ಹೇಗೋ ಇದ್ದುದರಲ್ಲಿ ಬದುಕುವುದನ್ನು ಕಲಿಯಿರಿ. ಹಸಿದವರಿಗೆ ಉಪನ್ಯಾಸ ಹೇಳುವುದು ಎಂದರೆ ಇದನ್ನೇ. ಭಾರತಕ್ಕೆ ಇದೇನೂ ಹೊಸತಲ್ಲ. ಶತಮಾನಗಳಿಂದ ಇದನ್ನೇ ಮಾಡುತ್ತಾ ಬಂದಿದ್ದೇವೆ. ಈಗ ನಮಗೆ ನಾವೇ ಹೇಳಿಕೊಳ್ಳುತ್ತಿದ್ದೇವೆ ಏಕೆಂದರೆ ಇಂದು ನಮಗೆ ನಾವೇ ಅರ್ಪಿಸಿಕೊಂಡ ಸಂವಿಧಾನದಡಿ ನಮಗೆ ನಾವೇ ಆಯ್ಕೆ ಮಾಡಿಕೊಂಡವರ ಆಡಳಿತದಲ್ಲಿ ನಾವು ನಮ್ಮ ಬದುಕು ಕಂಡುಕೊಳ್ಳುತ್ತಿದ್ದೇವೆ. ಸಾಧ್ಯವಾದರೆ ಹೇಳೋಣ, ಸ್ವಾಮಿ ನಿಮ್ಮಿಂದ ಆಗದಿದ್ದರೆ ಹೊರಟುಬಿಡಿ,,,,,,,,
ಕೃಪೆ : ಬೆವರಹನಿ ಪತ್ರಿಕೆ ತುಮಕೂರು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


