Connect with us

ದಿನದ ಸುದ್ದಿ

ಆಳುವ ಯೋಗ್ಯತೆ ಇಲ್ಲದಿದ್ದರೆ ಹೊರಟುಬಿಡಿ ಪ್ಲೀಸ್

Published

on

  • ನಾ ದಿವಾಕರ

ನಾವು ಎಂಥವರನ್ನು ಆಯ್ಕೆ ಮಾಡಿಬಿಟ್ಟಿದ್ದೇವೆ ? ಬಹುಶಃ ಈ ಪ್ರಶ್ನೆ ಪ್ರಜ್ಞೆ ಇರುವ ಪ್ರತಿಯೊಬ್ಬ ಪ್ರಜೆಯಲ್ಲೂ ಮೂಡಿರಲೇಬೇಕು. ಕಪ್ಪೆಚಿಪ್ಪುಗಳಲ್ಲಿ ನಿಷ್ಠೆ-ಭಕ್ತಿಯ ಮುಸುಕು ಧರಿಸಿ ಅವಿತಿಟ್ಟುಕೊಳ್ಳುವವರಲ್ಲಿ ಈ ಪ್ರಶ್ನೆ ಉದ್ಭವಿಸದಿರಬಹುದು. ಅಂಥವರು ತಮ್ಮ ಸ್ವ ಪ್ರಜ್ಞೆಯನ್ನು ಒತ್ತೆ ಇಟ್ಟ ನಂತರವೇ ಯಾವುದೋ ಒಂದು ಚಿಪ್ಪಿನಲ್ಲಿ ಅಡಗಿ ಕುಳಿತಿರುತ್ತಾರೆ.

ನಾವು ಸಾವಿನ ಸರದಾರರ ನಡುವೆ ಬದುಕಿದ್ದೇವೆ. ಸಾವಿನ ದಲ್ಲಾಳಿಗಳ ನಡುವೆ ಜೀವನ ಸಾಗಿಸಿದ್ದೇವೆ. ಈಗ ಸಾವುಗಳ ಮೇಳ ನಡೆಯುತ್ತಿದೆ. ಅಧಿಕಾರದ ಅಮಲಿನಲ್ಲಿರುವವರಿಗೆ ಈ ಮೇಳದಲ್ಲಿ ಹುಲ್ಲುಗಾವಲುಗಳು ಕಾಣಿಸುತ್ತಿವೆ. ಜೀವ, ಜೀವನ ಮತ್ತು ಜೀವನೋಪಾಯ ಈ ಮೂರರ ನಡುವೆ ಇರುವ ಸೂಕ್ಷ್ಮ ಸಂಬಂಧಗಳ ಪರಿವೆಯೇ ಇಲ್ಲದಂತಹ ಒಂದು ವಿಕೃತ ವ್ಯವಸ್ಥೆಯಲ್ಲಿ ಭಾರತ ಮತ್ತೊಮ್ಮೆ ಒಂದು ವೈರಾಣುವಿನೊಡನೆ ಬದುಕುತ್ತಿದೆ.

ಕಳೆದ ವರ್ಷದ ಕೆಲವು ಮಾತುಗಳನ್ನೊಮ್ಮೆ ಇಲ್ಲಿ ನೆನಪಿಸಿಕೊಳ್ಳೋಣ. “ ಕೊರೋನಾ ನಮ್ಮ ನಡುವೆ ಬಹಳ ವರ್ಷಗಳ ಕಾಲ ಇರುತ್ತದೆ. ನಾವು ಅದರೊಡನೆ ಬದುಕುವುದನ್ನು ಕಲಿಯಬೇಕು ” ಎಂದು ನಮ್ಮ ಅಧಿನಾಯಕರೇ ಆಜ್ಞಾಪಿಸಿದ್ದನ್ನು ಸ್ಮರಿಸೋಣ. ಕೊರೋನಾದೊಂದಿಗೆ ಬದುಕುವುದು ಎಂದರೇನು ? ನಿನಗೆ ಶಕ್ತಿ ಇದ್ದರೆ ಬದುಕು ಇಲ್ಲವಾದರೆ ನಿನ್ನ ದಾರಿ ನಿನಗೆ ಎಂದರ್ಥವೇ ? ಈ ವರ್ಷದ ಎರಡನೆಯ ಅಲೆಯ ಸಂದರ್ಭದಲ್ಲಿ ನೋಡಿದಾಗ ಹಾಗೆನಿಸುವುದು ಸಹಜ. ಏಕೆಂದರೆ ನಮ್ಮ ಸುತ್ತಲಿನ ಸರಣಿ ಸಾವುಗಳು ಪೀಠಾಧಿಪತಿಗಳನ್ನು ಅಲುಗಾಡಿಸುತ್ತಲೇ ಇಲ್ಲ.

ನಿತ್ಯ ಹೆಣ ಸುಡುವ ಕಾಯಕ ಮಾಡುವವನಲ್ಲಿ ಅತಿ ಹೆಚ್ಚು ಅಂತಃಕರಣ ಇರುತ್ತದೆ. ಆತನಿಗೆ ಸಾವು ತನ್ನ ನಿತ್ಯ ಬದುಕಿನ ಒಂದು ಭಾಗವಾಗಿರುತ್ತದೆ. ಪ್ರತಿಯೊಂದು ಸಾವಿಗೂ ಮಿಡಿಯುತ್ತಾ ಕುಳಿತರೆ ಅವನ ಬದುಕು ಬೇಗನೆ ಕೊನೆಗಾಣುತ್ತದೆ. ಇದು ಜೀವನ. ಸಾವಿನ ನಡುವೆ ಬದುಕುವುದು ಅವನ ಜೀವನೋಪಾಯ.

ಆದರೂ ಅವನಲ್ಲಿ ಮಡುಗಟ್ಟಿರುವ ಅಂತಃಕರಣ ಅವನಲ್ಲಿ ಜೀವ ಪ್ರೀತಿ ತುಂಬಿರುತ್ತದೆ. ಇದು ಜೀವ. ಜೀವನವಿಡೀ ಸಾವುಗಳ ನಡುವೆಯೇ ಬದುಕುವ ಈತನಿಗೆ ತನ್ನ ಕುಟುಂಬದಲ್ಲಿ ಒಬ್ಬರು ಮೃತಪಟ್ಟರೂ ಸಹಿಸಲಾಗದಷ್ಟು ದುಃಖ ಉಮ್ಮಳಿಸುತ್ತದೆ. ಎಷ್ಟೇ ಸಾವುಗಳನ್ನು ಕಂಡರೂ ಅಂತಃಕರಣ ಜೀವಂತವಾಗಿದ್ದರೆ ಮನುಜ ಪ್ರೀತಿ ಬತ್ತುವುದಿಲ್ಲ. ಇದು ಜೀವನ. ಈ ಮೂರರ ಸಮೀಕರಣವನ್ನು ಪರಿಪೂರ್ಣವಾಗಿ ಕಾಣಬಹುದಾದರೆ ಅದು ಮಸಣದಲ್ಲೇ.

ನಮ್ಮ ದೇಶದ ಸಾರಥ್ಯ ವಹಿಸಿರುವ ಅಧಿಕಾರದಾಹಿ ರಾಜಕೀಯ ನಾಯಕರಿಗಾಗಿ, ಈ ಶವಾಗಾರ ನಿರ್ವಹಿಸುವವರಿಂದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸುವ ಅನಿವಾರ್ಯತೆ ಈಗ ಕಾಣುತ್ತಿದೆ. ಏಕೆಂದರೆ ಇವರಿಗೆ ಜೀವದ ಬೆಲೆ ಗೊತ್ತಿಲ್ಲ. ಸಾವಿನ ಬೆಲೆಯೂ ಗೊತ್ತಿಲ್ಲ. ಜೀವಗಳನ್ನು ಹಿಸುಕಲು ಆಸ್ಪತ್ರೆಗಳಲ್ಲಿ ವ್ಯಾಪಾರ ಕುದುರಿಸಿ ಭ್ರೂಣ ಹತ್ಯೆ ಮಾಡುವ ದೇಶ ನಮ್ಮದು.

ಎಳೆಯ ಜೀವಗಳನ್ನು ಹೆಣ್ಣು ಎಂಬ ಕಾರಣಕ್ಕಾಗಿಯೇ ಹೊಸಕಿ ಹಾಕುವ ದೇಶ ನಮ್ಮದು. ಈಗ ಸಾವನ್ನೂ ಖರೀದಿಸಲಾಗುತ್ತಿದೆ. ಹಣ ಇದ್ದರೆ ಹೆಣಕ್ಕೂ ಜಾಗ ಎನ್ನುವಂತಹ ಪರಿಸ್ಥಿತಿ ಬಂದಿದೆ. ಈ ಪರಿಸ್ಥಿತಿಗೆ ಕೋವಿದ್ ಕಾರಣ ಅಲ್ಲ. ಕೋವಿದ್ ನಿಮಿತ್ತ. ಕಾರಣ ನಾವು ಪೋಷಿಸಿರುವ ವ್ಯವಸ್ಥೆ.

ಎಲ್ಲಿಂದ ಎಲ್ಲಿಯವರೆಗೆ ನೋಡಿದರೂ ಇವರಿಗೆ ಹಣ-ಅಧಿಕಾರ-ಲಾಭ ಇವಷ್ಟೇ ಕಾಣುತ್ತವೆ. ಅದು ಜೀವನಾಶಕ ಅಣುವಿದ್ಯುತ್ ಘಟಕವೋ, ಪರಿಸರ ನಾಶದ ಕಾರ್ಖಾನೆಯೋ ಇರಬಹುದು ಅಥವಾ ಜೀವ ರಕ್ಷಕ ಲಸಿಕೆ ಇರಬಹುದು. ಎರಡೂ ಮಾರುಕಟ್ಟೆಯ ಕೈಯ್ಯಲ್ಲಿದೆ. ನಾಶ ಮಾಡಲು ಬಂಡವಾಳ ಹೂಡುವ ವ್ಯವಸ್ಥೆಯಲ್ಲಿ ನಾವಿದ್ದೇವೆ.

ನಾಶವಾಗುತ್ತಿದ್ದರೂ, ಇರುವಷ್ಟು ದಿನದ ಹಿತವಲಯಕ್ಕಾಗಿ ಸಹಿಸಿಕೊಳ್ಳುವ ಮನಸ್ಥಿತಿಯನ್ನು ಈ ಮಾರುಕಟ್ಟೆಯೇ ಸೃಷ್ಟಿಸಿಬಿಟ್ಟಿದೆ. ಹಾಗಾಗಿ ಮುಳುಗಡೆಯ ಭೀತಿಯೂ ನಮ್ಮನ್ನು ಕಾಡುವುದಿಲ್ಲ. ವಿನಾಶದ ಆತಂಕವೂ ಕಾಡುವುದಿಲ್ಲ. ಇಂತಹ ಒಂದು ಬೃಹತ್ ಸಮಾಜವನ್ನೂ ಬಂಡವಾಳ ಮಾರುಕಟ್ಟೆ ಸೃಷ್ಟಿಸಿಬಿಟ್ಟಿದೆ.

ಈ ಮಾರುಕಟ್ಟೆಯ ನಡುವೆಯೇ ಕೊರೋನಾ ಜನಸಾಮಾನ್ಯರ ಜೀವದೊಡನೆ ಆಟವಾಡುತ್ತಿದೆ. ಇದರೊಂದಿಗೆ ಬದುಕುವುದನ್ನು ಕಲಿಯಿರಿ ಎಂದು ಹೇಳುವ ನಾಯಕರಿಗೆ ಬದುಕಿನ ಅರ್ಥವೇ ತಿಳಿದಿರುವುದಿಲ್ಲ. ಏಕೆಂದರೆ ಇವರಿಗೆ ಹಸಿವಿನ ಅರ್ಥ ತಿಳಿದಿರುವುದಿಲ್ಲ. ನೋವು, ವೇದನೆ ಇವೆಲ್ಲವೂ ಇವರಿಗೆ ಮತಪೆಟ್ಟಿಗೆಯ ಹಿಂದೆ ಅವಿತಿರುವ ಪಂಚವಾರ್ಷಿಕ ದರ್ಶನಗಳಂತೆ.

ಭಾರತ ವಿಶಾಲವಾದ ದೇಶವಲ್ಲವೇ, ಯಾವುದೋ ಒಂದು ಮೂಲೆಯಲ್ಲಿ ಹೆಣಸುಟ್ಟರೆ ಮತ್ತೊಂದು ಮೂಲೆಗೆ ತಿಳಿಯುವುದೇ ಇಲ್ಲ. ಹಾಗಾಗಿ ದಕ್ಷಿಣದಲ್ಲಿನ ಹೆಣದ ರಾಶಿ ದೆಹಲಿಯ ಸೆಂಟ್ರಲ್ ವಿಸ್ತಾ ಹಾದಿಗೆ ಅಡ್ಡಿಯಾಗುವುದಿಲ್ಲ. ದೆಹಲಿಯಲ್ಲೇ ಬೀಳುವ ಹೆಣದ ರಾಶಿಗಳು ಅಧಿಕಾರ ಪೀಠಗಳಿಗೆ ಗೋಚರಿಸುವುದೇ ಇಲ್ಲ.

ಮಸೂರಗಳನ್ನು ತೊಟ್ಟು ಬದುಕುತ್ತಿದ್ದೇವೆ. ಪ್ರಪಂಚ ನಮಗೆ ಬೇಕಾದಂತೆ ಕಾಣುತ್ತದೆ. ಅದು ಕಂಡಂತೆ ನಾವು ಅರ್ಥಮಾಡಿಕೊಳ್ಳುವ ಕಾಲ ಬಹುಶಃ ಮುಗಿದುಹೋಗಿದೆ. ಚಾಮರಾಜನಗರದಲ್ಲಿ 24 ಜೀವಗಳು ಬಲಿಯಾದವು. ಉಸಿರಾಡಲು ಸೌಲಭ್ಯ ಇಲ್ಲದೆ. ಇನ್ನೂ ರಾಜ್ಯದ ವಿವಿಧೆಡೆ ಆಮ್ಲಜನಕ ಇಲ್ಲದೆ ಸಾಯುತ್ತಲೇ ಇದ್ದಾರೆ.

ಈಗ ಆಮ್ಲಜನಕ ಮಾರುಕಟ್ಟೆಯ ಹಿಡಿತದಲ್ಲಿದೆ. ಉತ್ಪಾದಿಸುವವನೊಬ್ಬ, ಸಾಗಾಣಿಕೆ ಮಾಡುವವನೊಬ್ಬ, ವಿತರಿಸುವವ ಮತ್ತೊಬ್ಬ. ಮಾರುಕಟ್ಟೆ ಸರಕಿನಂತೆಯೇ ಈ ಕೃತಕ ಉಸಿರನ್ನೂ ಸರ್ಕಾರ ಪಡಿತರದಂತೆ ಸೀಮಿತವಾಗಿ ವಿತರಿಸುತ್ತದೆ. ತನಗೆ ಬೇಕಾದವರಿಗೆ ಹೆಚ್ಚು, ಬೇಡದವರಿಗೆ ಶೂನ್ಯ. ಹೀಗೆ , ಎಷ್ಟಾದರೂ ಪಳಗಿದ ಕೈಗಳಲ್ಲವೇ.

ದೆಹಲಿಯ ಪೀಠ, ಕರ್ನಾಟಕಕ್ಕೆ ಅಗತ್ಯಕ್ಕಿಂತಲೂ ಕಡಿಮೆ ಆಮ್ಲಜನಕ ನೀಡುತ್ತದೆ. ನ್ಯಾಯಾಂಗದ ಪ್ರವೇಶದಿಂದ ನಮಗೆ ಹಿಡಿದಿಟ್ಟ ಉಸಿರು ಲಭ್ಯವಾಗುತ್ತದೆ. ಪ್ರತಿನಿತ್ಯ ಸಾವಿರಾರು ಕೊರೋನಾ ಸೋಂಕಿತರು ಆಸ್ಪತ್ರೆಗಳ ಮುಂದೆ ಜೀವದಾನ ಬೇಡುತ್ತಿರುವಾಗ, ಇಂತಿಷ್ಟೇ ಆಮ್ಲಜನಕ ಬೇಕೆಂದು ಹೇಗೆ ನಿರೀಕ್ಷಿಸುವುದು ? ಹೆಚ್ಚಿಗೆ ನೀಡಿದರೆ ಏನಾಗುತ್ತದೆ ? ಇಲ್ಲಿ ಮಾರುಕಟ್ಟೆ ಪ್ರವೇಶಿಸುತ್ತದೆ.

ಅವಶ್ಯಕತೆಗಿಂತಲೂ ಕಡಿಮೆ ಸರಬರಾಜು ಇದ್ದರಷ್ಟೇ ಸರಕಿಗೆ ಬೆಲೆ, ಲಾಭ ಹೆಚ್ಚು. ಅಷ್ಟೇ. ಇದು #ಆತ್ಮನಿರ್ಭರ ಭಾರತದ ನಿಯಮ. ಮಾರುಕಟ್ಟೆ ಎಂದರೆ ಕ್ರೌರ್ಯದ ಪ್ರಾಪಂಚಿಕ ಸ್ವರೂಪವಷ್ಟೇ. ಅಲ್ಲಿ ಹಣ ಮತ್ತು ಹೆಣ ಎರಡೂ ವಿನಿಮಯದ ವಸ್ತುಗಳೇ ಆಗಿಬಿಡುತ್ತವೆ. ಹಾಗಾಗಿಯೇ ಹೆಣ ಸುಡಲೂ ಹಣ ನೀಡಬೇಕಾದ ಪರಿಸ್ಥಿತಿ.

ಜೀವರಕ್ಷಣೆಗಾಗಿ ಆಸ್ಪತ್ರೆಗೆ ಬರುವವರಿಗೆ ಹಾಸಿಗೆ ಒದಗಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಈ ಹಾಸಿಗೆಗಳೂ ಕಾಳಸಂತೆಯ ದಂಧೆಯ ಒಂದು ಭಾಗವಾಗುತ್ತದೆ. ಈ ದಂಧೆಯನ್ನು ಕೊನೆಗೊಳಿಸಲು ಒಂದು ಪುಟ್ಟ ಸೇನೆಯನ್ನೇ ಸಿದ್ಧಪಡಿಸುವ ಯುವ ಸಂಸದರಿಗೆ, ಜೀವರಕ್ಷಕ ತಾಣದಲ್ಲೂ ಅಸ್ಮಿತೆಗಳ ಹೊಸ ಲೋಕ ಕಂಡುಬಿಡುತ್ತದೆ.

ಹೆಣಗಳಲ್ಲಿ ಅಸ್ಮಿತೆಗಳನ್ನು ಹೆಕ್ಕಿ ತೆಗೆಯುವುದರಲ್ಲಿ ತರಬೇತಿ ಪಡೆದಿರುವವರಿದ್ದಾರೆ ನಮ್ಮ ನಡುವೆ. ಹಾಗಾಗಿ ಇಲ್ಲಿ ಹದಿನೇಳು ಮಂದಿಯನ್ನು ಹೆಕ್ಕಿ ತೆಗೆದಿದ್ದರಲ್ಲಿ ಅಚ್ಚರಿಯೇನಿಲ್ಲ. ಇಷ್ಟಕ್ಕೂ ದಂಧೆಕೋರರ ವಿಳಾಸ ತಿಳಿದಿದ್ದರೂ ತಲುಪಲಾಗದ ಸ್ಥಿತಿಯನ್ನು ಅಧಿಕಾರ ರಾಜಕಾರಣ ಸೃಷ್ಟಿಸಿರುತ್ತದೆ. ಹಾಗಾಗಿ ಕಾಡು ಹಂದಿಗಳಿಗೆ ಮುಕ್ತಿ. ಮುಗ್ಧ್ದ ಜಿಂಕೆಗಳ ಬಲಿ.

ಸರ್ಕಾರಗಳು ತಾವು ಕೊಟ್ಟ ಮಾತಿಗೆ ತಪ್ಪಲಿಲ್ಲ. ಕೊರೋನಾದೊಂದಿಗೆ ಬದುಕಲು ಕಲಿಯಿರಿ ಎಂಬ ಮನದ ಮಾತು ಇನ್ನೂ ಅಪ್ರಸ್ತುತವಾಗಿಲ್ಲ. ಹಾಗಾಗಿ ಕೊರೋನಾ ನಡುವೆಯೇ ಚುನಾವಣೆಗಳು, ನಡೆದಿವೆ, ಸಮಾವೇಶಗಳು ನಡೆದಿವೆ, ಕುಂಭಮೇಳಗಳೂ ನಡೆದಿವೆ.

ಇವುಗಳ ನಡುವೆಯೇ ಅವರು ಬದುಕು ಕಂಡುಕೊಂಡಿದ್ದಾರೆ. ಅವರ ಬದುಕಿಗೆ ಇವೆಲ್ಲವೂ ಅನಿವಾರ್ಯ. ಆದರೆ ನಮ್ಮ ಬದುಕಿಗೆ ಇವು ಮಾರಕ. ಅವರು ಬದುಕುತ್ತಿಲ್ಲವೇ ? ಅದೂ ಒಂದು ಬದುಕೇ ಎಂದು ಕೇಳುವುದು ಬೇಡ. ಉತ್ತರ ಶೋಧಿಸಲು ಬಹಳ ಶ್ರಮಪಡಬೇಕಾಗುತ್ತದೆ. ಆದರೂ ಅವರು ನಿರ್ಲಿಪ್ತವಾಗಿ ಬದುಕುತ್ತಾರೆ.

ಕೊರೋನಾ ಹರಡಬಾರದು ಎಂದರೆ ನಾವು ಲಾಕ್‍ಡೌನ್ ಮಾಡುತ್ತೇವೆ ಎನ್ನುತ್ತಾರೆ. ಲಾಕ್‍ಡೌನ್ ಜನರನ್ನು ನಿಯಂತ್ರಿಸುತ್ತದೆ. ಕೊರೋನಾ ಓಡಾಡುತ್ತಲೇ ಇರುತ್ತದೆ. ಸರಕಾರಗಳು ನೀಡುವ ನಿಗದಿತ ಅವಧಿಯ ವಿನಾಯತಿಗಳು ನಮಗೆ ಅನ್ವಯ. ವೈರಾಣು ಸದಾ ಜೀವಂತವಾಗಿಯೇ ಇರುತ್ತದೆ.

ಆಶ್ರಯ ತಾಣಗಳನ್ನು ಅರಸುತ್ತಲೇ ಇರುತ್ತದೆ. ಹಾಗಾಗಿ ನಿಮ್ಮನ್ನು ನೀವು ಲಾಕ್ ಡೌನ್ ಮಾಡಿಕೊಂಡರೆ ಅದು ಅನಾಥವಾಗಿಬಿಡುತ್ತದೆ. ಇದು ನಮ್ಮ ಸರ್ಕಾರಗಳ ವಾದ. ಹಾಗಾಗಿಯೇ ಲಾಕ್ ಡೌನ್ ಘೋಷಿಸುವಾಗ ಸರ್ಕಾರಗಳು ಏನು ಸಿಗುತ್ತದೆ ಏನು ಸಿಗುವುದಿಲ್ಲ ಎಂದಷ್ಟೇ ಹೇಳುತ್ತವೆ. ನಿಮಗೇನು ಬೇಕು ಎಂದು ಯಾರನ್ನಾದರೂ ಕೇಳಿದೆಯೇ ?

ಒಮ್ಮೆ ಕೇಳಿಬಿಟ್ಟರೆ ಅವರ ಅಧಿಕಾರ ಪೀಠಗಳು ಅಲುಗಾಡಿಬಿಡುತ್ತವೆ. ಏಕೆಂದರೆ ನಿಮ್ಮ ಜೀವನೋಪಾಯದ ಅವಶ್ಯಕತೆಗಳನ್ನು ಒದಗಿಸುವ ಕೀಲಿ ಕೈ ಮಾರುಕಟ್ಟೆಯ ಬಳಿ ಇರುತ್ತದೆ. ಕೃತಕ ಉಸಿರು, ಆಮ್ಲಜನಕವೇ ಕಂಪನಿಯ ಮುದ್ರೆಯನ್ನು ಹೊತ್ತು ಬರುತ್ತದೆ. ಜೀವ ರಕ್ಷಕ ಲಸಿಕೆಗೆ ಜಿಎಸ್‍ಟಿ ನೀಡಿ ಖರೀದಿಸಬೇಕಾಗುತ್ತದೆ.

ಗಾಳಿಯನ್ನು ಹಿಡಿದಿಡಲು ಆಗುವುದಿಲ್ಲ. ಆದರೆ ಉಸಿರನ್ನು ಹಿಡಿದಿಡಬಹುದು. ಈಗ ಉಸಿರು ಮಾರಾಟಕ್ಕಿದೆ. ಈ ಉಸಿರು ಒಂದು ಸಮಾಜದ ಉಸಿರುಗಟ್ಟಿಸುತ್ತಿದೆ. ಆದರೂ ಆಮ್ಲಜನಕದ ಸರಬರಾಜು, ಪೂರೈಕೆ, ಉತ್ಪಾದನೆ, ವಿತರಣೆ ಇವೆಲ್ಲವೂ ಮುಂಬರುವ ಚುನಾವಣೆಗಳಿಗೆ ನೆರವಾಗುವಂತಹ ಪ್ರಚಾರ ಸಾಮಗ್ರಿಗಳ ಕಚ್ಚಾವಸ್ತುಗಳಾಗಿಬಿಟ್ಟಿವೆ.

ಆದರೆ ನಮ್ಮ ಸರ್ಕಾರಗಳ ಉಸಿರಾಟಕ್ಕೇನೂ ತೊಂದರೆಯಾಗಿಲ್ಲ. ಹೊಸ ಹವೆ, ಹೊಸ ವಾತಾವರಣ, ಹೊಸ ಪರಿಸರ, ಸ್ವಚ್ಚಂದ ಆಹ್ಲಾದಕರ ಬದುಕಿಗಾಗಿಯೇ, #ಆತ್ಮನಿರ್ಭರ ಭಾರತದ ಜನಪ್ರತಿನಿಧಿಗಳಿಗಾಗಿ ಒಂದು ಭವ್ಯ ಸೌಧದ ನಿರ್ಮಾಣ ಸುಡುವ ಹೆಣಗಳ ರಾಶಿಯ ನಡುವೆಯೇ ಆರಂಭವಾಗಿದೆ.

ನಾವೇ ನೀಡುವ ತೆರಿಗೆಯ ಹಣದಲ್ಲಿ ಈ ಐಷಾರಾಮಿ ಹಿತವಲಯದ ಸೃಷ್ಟಿಯಾಗುತ್ತಿದೆ. ದೇಶದೆಲ್ಲೆಡೆ ಆಮ್ಲಜನಕಕ್ಕಾಗಿ ಹಾಹಾಕಾರ ಕೇಳಿಬರುತ್ತಿದೆ. ಈ ಭವ್ಯ ಸೌಧದ ನಿರ್ಮಾಣಕ್ಕಾಗಿಯೇ ನೂರಾರು ಹಸಿರೊಡಲುಗಳು ಅವಸಾನ ಕಾಣುತ್ತಿವೆ. ನೆಲಕ್ಕುರುಳಿದ ಮರದ ತುಂಡುಗಳು ಹೆಣ ಸುಡಲು ನೆರವಾಗಬಹುದು.

ಇದನ್ನೂ ಓದಿ | ದುಡಿಯುವ ಮಹಿಳೆಯರ ಹೋರಾಟಕ್ಕೆ ಶಕ್ತಿ ತುಂಬಿದ್ದ ಕಾಂII ಹೆಚ್‌ಕೆಆರ್

ಇಂತಹ ಒಂದು ಮಾರುಕಟ್ಟೆ ಕ್ರೌರ್ಯದ ನಡುವೆ ನಾವು ದಿನನಿತ್ಯ ನಮ್ಮ ಆಪ್ತರನ್ನು ಕಳೆದುಕೊಳ್ಳುತ್ತಿದ್ದೇವೆ. ನಾವೇ ಪ್ರಜ್ಞಾಪೂರ್ವಕವಾಗಿ ಆಯ್ಕೆ ಮಾಡಿದ ನಮ್ಮ ಪ್ರತಿನಿಧಿಗಳು ತಮ್ಮ ಕುದಿಯುತ್ತಿರುವ ರಕ್ತವನ್ನು ಸಹಿಸಿಕೊಂಡು (ಇಂದಿನ ಪತ್ರಿಕೆಗಳನ್ನು ನೋಡಿ ಮೈಸೂರು ಸುತ್ತಲಿನ ಶಾಸಕರ ರಕ್ತ ಕುದಿಯುತ್ತಿರುವ ವರದಿಯಾಗಿದೆ) ತಮ್ಮ ಮತದಾರ ಪ್ರಭುಗಳ ರಕ್ಷಣೆಗೆ ಮುಂದಾಗುತ್ತಿದ್ದಾರೆ. ಆಮ್ಲಜನಕದ ಕೊರತೆಯಿಂದ ಪ್ರಾಣಕಳೆದುಕೊಳ್ಳುತ್ತಿರುವ ಅಮಾಯಕ ಜೀವಗಳಿಗಿಂತಲೂ ಈ ಪ್ರತಿನಿಧಿಗಳ ಪ್ರತಿಷ್ಟೆ, ಸಮ್ಮಾನ ಮತ್ತು ರಾಜಕೀಯ ಹಿತಾಸಕ್ತಿಗಳು ಮೇಲುಗೈ ಸಾಧಿಸುತ್ತಿರುವುದು ಈ ದೇಶದ ದುರಂತ.

ಪ್ರಜಾಪ್ರಭುತ್ವದ ಕನಿಷ್ಠ ಪ್ರಜ್ಞೆ ಇರುವ ಒಬ್ಬ ವ್ಯಕ್ತಿ ಇಂದು ದೇಶದ ಮುಂದಾಳತ್ವ ವಹಿಸಿದ್ದರೂ ಒಂದು ರಾಷ್ಟ್ರೀಯ ಸರ್ಕಾರದ ರಚನೆಯಾಗುತ್ತಿತ್ತು. ಸರ್ವಪಕ್ಷಗಳನ್ನೊಳಗೊಂಡ ಚಿಂತನಾ ವೇದಿಕೆ ಇರುತ್ತಿತ್ತು. ವೈರಾಣು ತಜ್ಞರು, ವಿಜ್ಞಾನಿಗಳು, ವೈದ್ಯಕೀಯ ತಜ್ಞರು ಮತ್ತು ಅನುಭವಿ ಸಾರ್ವಜನಿಕ ವ್ಯಕ್ತಿಗಳನ್ನೊಳಗೊಂಡ ರಾಷ್ಟ್ರಮಟ್ಟದ ವೇದಿಕೆ ರೂಪುಗೊಳ್ಳುತ್ತಿತ್ತು.

ಪ್ರತಿರಾಜ್ಯದಲ್ಲೂ , ಜಿಲ್ಲೆಯಲ್ಲೂ ಇದರ ಶಾಖೆಗಳಿರುತ್ತಿದ್ದವು. ಜನಸಾಮಾನ್ಯರ ಜೀವನ ಮತ್ತು ಬದುಕು ಇವೆರಡನ್ನೂ ಅರ್ಥಮಾಡಿಕೊಳ್ಳುವ ನಾಯಕರು ಇದ್ದಿದ್ದರೆ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿತ್ತು. ಕೊರೋನಾ ಪೀಡಿತರಿಗೆ ಉಚಿತ ವೈದ್ಯಕೀಯ ನೆರವು ದೊರೆಯುತ್ತಿತ್ತು.

ಆದರೆ ಈ ಕಾಲ್ಪನಿಕ ರಾಜ್ಯದಿಂದ ಹೊರಬಂದೇ ನಾವು ಯೋಚಿಸಬೇಕಿದೆ. ಏಕೆಂದರೆ ಜೀವನೋಪಾಯ ವ್ಯಕ್ತಿನಿಷ್ಟ ವಿಚಾರ. ಜೀವನ ವಸ್ತುನಿಷ್ಟ ವಿಚಾರ. ನಾವು ಬದುಕುತ್ತಿರುವುದು ಒಂದು ಪ್ರಜಾಪ್ರಭುತ್ವದಲ್ಲೇ ಆದರೂ ಇಲ್ಲಿ ಪ್ರಜೆಗಳಿಗೂ ಪ್ರಭುತ್ವಕ್ಕೂ ಇರುವ ಅಂತರ ಅಪಾರ ಎನ್ನುವುದನ್ನು ಕೋವಿದ್ 19 ಸಾಬೀತುಪಡಿಸಿದೆ.

ಇಲ್ಲಿ ನಾವೇ ಆಯ್ಕೆ ಮಾಡುವ ಸರ್ಕಾರಗಳು ಜೀವನ ನಡೆಸಲು ಹಾದಿ ಸುಗಮಗೊಳಿಸುತ್ತವೆ. ಜೀವನ ಕಲ್ಪಿಸಿಕೊಳ್ಳುವುದು ಪ್ರಜೆಗಳ ಆಯ್ಕೆ. ಜೀವನೋಪಾಯ ಮಾರುಕಟ್ಟೆಗೆ ಸಂಬಂಧಿಸಿದ ವಿಚಾರ. ಬದುಕು ಕಟ್ಟಿಕೊಳ್ಳಲು ಈ ಮಾರುಕಟ್ಟೆಯ ಯಾವುದೋ ಒಂದು ಜಗುಲಿಯನ್ನು ಆಶ್ರಯಿಸಬೇಕು.

ಇದನ್ನೇ ರಥಸಾರಥ್ಯ ವಹಿಸಿದವರೂ ಕಳೆದ ವರ್ಷ ಹೇಳಿರುವುದು. ಬದುಕುವುದನ್ನು ಕಲಿಯಿರಿ, ಕೊರೋನಾದೊಂದಿಗೆ ಬದುಕುವುದನ್ನು ಕಲಿಯಿರಿ. ಅಂದರೆ ಕೊರೋನಾ ಕೊಲ್ಲುತ್ತದೆ ಹಾಗಾಗಿ ಸಾವುಗಳೊಂದಿಗೆ ಬದುಕುವುದನ್ನೂ ಕಲಿಯಿರಿ. ಕೊರೋನಾ ಉಸಿರುಗಟ್ಟಿಸುತ್ತದೆ ಹಾಗಾಗಿ ಆಮ್ಲಜನಕ ಇಲ್ಲದೆ ಸಾಯುತ್ತಾರೆ ಈ ಸಾವುಗಳೊಡನೆ ಬದುಕುವುದನ್ನೂ ಕಲಿಯಿರಿ.

ಕೊರೋನಾ ನಿಮ್ಮ ಜೀವನೋಪಾಯಗಳನ್ನು ಕಸಿದುಕೊಳ್ಳುತ್ತದೆ ಹೇಗೋ ಇದ್ದುದರಲ್ಲಿ ಬದುಕುವುದನ್ನು ಕಲಿಯಿರಿ. ಹಸಿದವರಿಗೆ ಉಪನ್ಯಾಸ ಹೇಳುವುದು ಎಂದರೆ ಇದನ್ನೇ. ಭಾರತಕ್ಕೆ ಇದೇನೂ ಹೊಸತಲ್ಲ. ಶತಮಾನಗಳಿಂದ ಇದನ್ನೇ ಮಾಡುತ್ತಾ ಬಂದಿದ್ದೇವೆ. ಈಗ ನಮಗೆ ನಾವೇ ಹೇಳಿಕೊಳ್ಳುತ್ತಿದ್ದೇವೆ ಏಕೆಂದರೆ ಇಂದು ನಮಗೆ ನಾವೇ ಅರ್ಪಿಸಿಕೊಂಡ ಸಂವಿಧಾನದಡಿ ನಮಗೆ ನಾವೇ ಆಯ್ಕೆ ಮಾಡಿಕೊಂಡವರ ಆಡಳಿತದಲ್ಲಿ ನಾವು ನಮ್ಮ ಬದುಕು ಕಂಡುಕೊಳ್ಳುತ್ತಿದ್ದೇವೆ. ಸಾಧ್ಯವಾದರೆ ಹೇಳೋಣ, ಸ್ವಾಮಿ ನಿಮ್ಮಿಂದ ಆಗದಿದ್ದರೆ ಹೊರಟುಬಿಡಿ,,,,,,,,

ಕೃಪೆ : ಬೆವರಹನಿ ಪತ್ರಿಕೆ ತುಮಕೂರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಒಂದು ಉದಾತ್ತ ಜೀವನಕ್ರಮ. ಸೈದ್ಧಾಂತಿಕವಾಗಿ ಪ್ರಜಾಪ್ರಭುತ್ವವು ‘ನಿಷ್ಪಕ್ಷಪಾತ’ ಮನೋಭಾವವನ್ನು ಪ್ರತಿಪಾದಿಸುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವವು ಕೇವಲ ಕಾಗದದ ಮೇಲಿನ ವಾಕ್ಯವಾಗದೆ, ಹುಟ್ಟಿನಿಂದ ಹೇರಲ್ಪಟ್ಟ ಶ್ರೇಣೀಕೃತ ವ್ಯವಸ್ಥೆಯ ಗೋಡೆಗಳನ್ನು ಕೆಡವುವ ಶಕ್ತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ದೇಶದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಾನಕ್ಕೇರಲು ಸಾಧ್ಯವಿರುವುದು ಈ ವ್ಯವಸ್ಥೆಯ ಅತಿದೊಡ್ಡ ಯಶಸ್ಸು.

ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಬಲ

ಸಾಮಾಜಿಕ ನ್ಯಾಯವು ಪ್ರಜಾಪ್ರಭುತ್ವದ ಅಂತರಾತ್ಮವಿದ್ದಂತೆ. ಐತಿಹಾಸಿಕವಾಗಿ ಶೋಷಣೆಗೆ ಒಳಗಾದ ಸಮುದಾಯಗಳಿಂದ ಬಂದ ವ್ಯಕ್ತಿಗಳು ನಾಯಕತ್ವದ ಸ್ಥಾನಕ್ಕೇರುವುದು ಹೊರನೋಟಕ್ಕೆ ಒಂದು ಪವಾಡದಂತೆ ಭಾಸವಾಗಬಹುದು. ಆದರೆ, ವಾಸ್ತವದಲ್ಲಿ ಇದು ಸಂವಿಧಾನ ನೀಡಿರುವ ‘ಮತದಾನದ ಹಕ್ಕು’ ಮತ್ತು ‘ಪ್ರಾತಿನಿಧ್ಯದ ಅವಕಾಶ’ಗಳ ಫಲಶೃತಿಯಾಗಿದೆ. ಪ್ರಜಾಪ್ರಭುತ್ವವು ಕೇವಲ ಬಹುಮತದ ಆಡಳಿತವಲ್ಲ, ಬದಲಿಗೆ ಅಲ್ಪಸಂಖ್ಯಾತ ಮತ್ತು ದಮನಿತ ಧ್ವನಿಗಳಿಗೂ ನೀತಿ ನಿರೂಪಣೆಯಲ್ಲಿ ಸಮಾನ ವೇದಿಕೆ ಕಲ್ಪಿಸುವ ಒಳಗೊಳ್ಳುವಿಕೆಯ (Inclusion) ಪ್ರಕ್ರಿಯೆಯಾಗಿದೆ. ಅಧಿಕಾರವು ಕೆಲವೇ ಜನರ ಕೈಯಲ್ಲಿ ಕೇಂದ್ರಿಕೃತವಾಗದೆ, ವಿಕೇಂದ್ರೀಕರಣದ ಮೂಲಕ ಸಾಮಾನ್ಯ ಜನರಿಗೂ ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳುತ್ತದೆ.

ನಾಯಕತ್ವದ ನೈತಿಕತೆ ಮತ್ತು ಸಾಂವಿಧಾನಿಕ ಬದ್ಧತೆ

ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಅಂಶವೆಂದರೆ ಅಧಿಕಾರವನ್ನು ಪಡೆದವರ ನೈತಿಕ ನಡೆ. ಪ್ರಜಾಪ್ರಭುತ್ವದ ಒತ್ತಾಸೆಯಿಂದ ಅವಕಾಶ ಮತ್ತು ಅಧಿಕಾರವನ್ನು ಪಡೆಯುವ ಪ್ರತಿಯೊಬ್ಬರೂ ಪ್ರಜಾಸತ್ತಾತ್ಮಕ ನಿಲುವುಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ನೈತಿಕತೆಯನ್ನು ಹೊಂದಿರಬೇಕಾಗುತ್ತದೆ. ಅಧಿಕಾರವು ಒಂದು ಸೌಲಭ್ಯವಲ್ಲ, ಅದೊಂದು ಜವಾಬ್ದಾರಿ. ಯಾವ ವ್ಯವಸ್ಥೆಯು ಒಬ್ಬ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಯಿಂದ ನಾಯಕತ್ವದ ಸ್ಥಾನಕ್ಕೆ ಏರಿಸುತ್ತದೆಯೋ, ಅದೇ ವ್ಯವಸ್ಥೆಯ ಮೌಲ್ಯಗಳನ್ನು ಎತ್ತಿಹಿಡಿಯುವುದು ಆ ನಾಯಕನ ಪರಮ ಧರ್ಮ. ಸಾಂವಿಧಾನಿಕ ಆಶಯಗಳಿಗೆ ದ್ರೋಹ ಬಗೆಯದೆ, ವೈಯಕ್ತಿಕ ಹಿತಾಸಕ್ತಿಗಿಂತ ಜನಹಿತವೇ ದೊಡ್ಡದು ಎಂಬ ನಿಲುವು ತಳೆದಾಗ ಮಾತ್ರ ಅಧಿಕಾರಕ್ಕೆ ಸಾರ್ಥಕತೆ ದೊರೆಯುತ್ತದೆ.

ಐತಿಹಾಸಿಕ ಪ್ರೇರಣೆ: ಅಬ್ರಹಾಂ ಲಿಂಕನ್ ಎಂಬ ಮಾದರಿ

ಪ್ರಜಾಪ್ರಭುತ್ವದ ಇತಿಹಾಸವನ್ನು ಚರ್ಚಿಸುವಾಗ ಅಬ್ರಹಾಂ ಲಿಂಕನ್ ಅವರ ಹೆಸರು ಅನಿವಾರ್ಯ. “ಜನರಿಗಾಗಿ, ಜನರಿಂದ, ಜನರಿಗೋಸ್ಕರ” ಎಂಬ ಅವರ ಸರಳ ವ್ಯಾಖ್ಯಾನವು ಜಗತ್ತಿನಾದ್ಯಂತ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಭದ್ರ ಬುನಾದಿ ಹಾಕಿತು. ಒಬ್ಬ ಸಾಮಾನ್ಯ ಹಿನ್ನೆಲೆಯ ವ್ಯಕ್ತಿ ಅಮೆರಿಕದ ಅಧ್ಯಕ್ಷನಾಗಿ ಗುಲಾಮಗಿರಿಯ ವಿರುದ್ಧ ಹೋರಾಡಿದ್ದು, ಪ್ರಜಾಪ್ರಭುತ್ವದ ಗುಣಕ್ಕೆ (Flexibility) ಸಾಕ್ಷಿಯಾಗಿದೆ. ಲಿಂಕನ್ ಅವರ ಹೋರಾಟವು ಮಾನವೀಯತೆ ಮತ್ತು ಸಮಾನತೆಯನ್ನು ಪ್ರಜಾಪ್ರಭುತ್ವದ ಅನಿವಾರ್ಯ ಅಂಗವನ್ನಾಗಿಸಿತು, ಇದು ಇಂದಿಗೂ ಜಾಗತಿಕ ರಾಜಕೀಯಕ್ಕೆ ದಾರಿದೀಪವಾಗಿದೆ.

ಸಿನಿಮಾ, ಸಮಾಜ ಮತ್ತು ರಾಜಕೀಯ ನಾಯಕತ್ವದ ಮನ್ವಂತರ

ತಮಿಳುನಾಡಿನಂತಹ ರಾಜ್ಯಗಳಲ್ಲಿ ರಾಜಕೀಯವು ಯಾವಾಗಲೂ ಸಾಮಾಜಿಕ ನ್ಯಾಯದ ಪ್ರಯೋಗಶಾಲೆಯಾಗಿ ಕಾರ್ಯನಿರ್ವಹಿಸಿದೆ. ದ್ರಾವಿಡ ಚಳವಳಿಯ ಹಿನ್ನೆಲೆಯಲ್ಲಿ ಬೆಳೆದು ಬಂದ ಇಲ್ಲಿನ ರಾಜಕೀಯ ಸಂಸ್ಕೃತಿಯಲ್ಲಿ, ಸಿನಿಮಾ ರಂಗದ ವ್ಯಕ್ತಿಗಳನ್ನು ಕೇವಲ ನಟರನ್ನಾಗಿ ನೋಡದೆ, ತಮ್ಮ ಸಾಮಾಜಿಕ ಆಶೋತ್ತರಗಳನ್ನು ಈಡೇರಿಸುವ ‘ಪ್ರತಿನಿಧಿ’ಗಳಾಗಿ ಜನರು ಸ್ವೀಕರಿಸುತ್ತಾ ಬಂದಿದ್ದಾರೆ. ಇತ್ತೀಚಿನ ವಿದ್ಯಮಾನಗಳಲ್ಲಿ ಸಿ. ಜೋಸೆಫ್ ವಿಜಯ್ (ನಟ ವಿಜಯ್) ಅವರಂತಹ ವ್ಯಕ್ತಿಗಳು ರಾಜಕೀಯ ಪ್ರವೇಶದ ಹಾದಿಯಲ್ಲಿರುವುದು ಈ ಪರಂಪರೆಯ ಮುಂದುವರಿಕೆಯಾಗಿದೆ. ಜನರು ಇಂತಹ ನಾಯಕರಲ್ಲಿ ಒಬ್ಬ ‘ಸ್ಟಾರ್’ಗಿಂತ ಹೆಚ್ಚಾಗಿ, ಶೋಷಿತರ ಪರವಾಗಿ ಧ್ವನಿ ಎತ್ತುವ ಮತ್ತು ಅಧಿಕಾರದ ವಿಕೇಂದ್ರೀಕರಣಕ್ಕೆ ಶ್ರಮಿಸುವ ನಾಯಕತ್ವವನ್ನು ನಿರೀಕ್ಷಿಸುತ್ತಾರೆ.

ಭವಿಷ್ಯದ ಆಶಯ

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಜಾಪ್ರಭುತ್ವವು ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ರೂಪಿಸಿಕೊಳ್ಳುತ್ತಿದೆ. ಅಧಿಕಾರವು ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಸಾಧನವಾಗಬೇಕೇ ಹೊರತು, ಅದು ಕೇವಲ ಆಡಳಿತ ನಡೆಸುವ ಅಧಿಕಾರವಲ್ಲ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಧಿಕಾರಸ್ಥರ ನೈತಿಕ ಬದ್ಧತೆಯ ಮೂಲಕ ಮಾತ್ರ ಒಂದು ಸಮಾಜವು ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವದ ಯಶಸ್ಸನ್ನು ಸಂಭ್ರಮಿಸಲು ಸಾಧ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending