Connect with us

ದಿನದ ಸುದ್ದಿ

ಆಳುವ ಯೋಗ್ಯತೆ ಇಲ್ಲದಿದ್ದರೆ ಹೊರಟುಬಿಡಿ ಪ್ಲೀಸ್

Published

on

  • ನಾ ದಿವಾಕರ

ನಾವು ಎಂಥವರನ್ನು ಆಯ್ಕೆ ಮಾಡಿಬಿಟ್ಟಿದ್ದೇವೆ ? ಬಹುಶಃ ಈ ಪ್ರಶ್ನೆ ಪ್ರಜ್ಞೆ ಇರುವ ಪ್ರತಿಯೊಬ್ಬ ಪ್ರಜೆಯಲ್ಲೂ ಮೂಡಿರಲೇಬೇಕು. ಕಪ್ಪೆಚಿಪ್ಪುಗಳಲ್ಲಿ ನಿಷ್ಠೆ-ಭಕ್ತಿಯ ಮುಸುಕು ಧರಿಸಿ ಅವಿತಿಟ್ಟುಕೊಳ್ಳುವವರಲ್ಲಿ ಈ ಪ್ರಶ್ನೆ ಉದ್ಭವಿಸದಿರಬಹುದು. ಅಂಥವರು ತಮ್ಮ ಸ್ವ ಪ್ರಜ್ಞೆಯನ್ನು ಒತ್ತೆ ಇಟ್ಟ ನಂತರವೇ ಯಾವುದೋ ಒಂದು ಚಿಪ್ಪಿನಲ್ಲಿ ಅಡಗಿ ಕುಳಿತಿರುತ್ತಾರೆ.

ನಾವು ಸಾವಿನ ಸರದಾರರ ನಡುವೆ ಬದುಕಿದ್ದೇವೆ. ಸಾವಿನ ದಲ್ಲಾಳಿಗಳ ನಡುವೆ ಜೀವನ ಸಾಗಿಸಿದ್ದೇವೆ. ಈಗ ಸಾವುಗಳ ಮೇಳ ನಡೆಯುತ್ತಿದೆ. ಅಧಿಕಾರದ ಅಮಲಿನಲ್ಲಿರುವವರಿಗೆ ಈ ಮೇಳದಲ್ಲಿ ಹುಲ್ಲುಗಾವಲುಗಳು ಕಾಣಿಸುತ್ತಿವೆ. ಜೀವ, ಜೀವನ ಮತ್ತು ಜೀವನೋಪಾಯ ಈ ಮೂರರ ನಡುವೆ ಇರುವ ಸೂಕ್ಷ್ಮ ಸಂಬಂಧಗಳ ಪರಿವೆಯೇ ಇಲ್ಲದಂತಹ ಒಂದು ವಿಕೃತ ವ್ಯವಸ್ಥೆಯಲ್ಲಿ ಭಾರತ ಮತ್ತೊಮ್ಮೆ ಒಂದು ವೈರಾಣುವಿನೊಡನೆ ಬದುಕುತ್ತಿದೆ.

ಕಳೆದ ವರ್ಷದ ಕೆಲವು ಮಾತುಗಳನ್ನೊಮ್ಮೆ ಇಲ್ಲಿ ನೆನಪಿಸಿಕೊಳ್ಳೋಣ. “ ಕೊರೋನಾ ನಮ್ಮ ನಡುವೆ ಬಹಳ ವರ್ಷಗಳ ಕಾಲ ಇರುತ್ತದೆ. ನಾವು ಅದರೊಡನೆ ಬದುಕುವುದನ್ನು ಕಲಿಯಬೇಕು ” ಎಂದು ನಮ್ಮ ಅಧಿನಾಯಕರೇ ಆಜ್ಞಾಪಿಸಿದ್ದನ್ನು ಸ್ಮರಿಸೋಣ. ಕೊರೋನಾದೊಂದಿಗೆ ಬದುಕುವುದು ಎಂದರೇನು ? ನಿನಗೆ ಶಕ್ತಿ ಇದ್ದರೆ ಬದುಕು ಇಲ್ಲವಾದರೆ ನಿನ್ನ ದಾರಿ ನಿನಗೆ ಎಂದರ್ಥವೇ ? ಈ ವರ್ಷದ ಎರಡನೆಯ ಅಲೆಯ ಸಂದರ್ಭದಲ್ಲಿ ನೋಡಿದಾಗ ಹಾಗೆನಿಸುವುದು ಸಹಜ. ಏಕೆಂದರೆ ನಮ್ಮ ಸುತ್ತಲಿನ ಸರಣಿ ಸಾವುಗಳು ಪೀಠಾಧಿಪತಿಗಳನ್ನು ಅಲುಗಾಡಿಸುತ್ತಲೇ ಇಲ್ಲ.

ನಿತ್ಯ ಹೆಣ ಸುಡುವ ಕಾಯಕ ಮಾಡುವವನಲ್ಲಿ ಅತಿ ಹೆಚ್ಚು ಅಂತಃಕರಣ ಇರುತ್ತದೆ. ಆತನಿಗೆ ಸಾವು ತನ್ನ ನಿತ್ಯ ಬದುಕಿನ ಒಂದು ಭಾಗವಾಗಿರುತ್ತದೆ. ಪ್ರತಿಯೊಂದು ಸಾವಿಗೂ ಮಿಡಿಯುತ್ತಾ ಕುಳಿತರೆ ಅವನ ಬದುಕು ಬೇಗನೆ ಕೊನೆಗಾಣುತ್ತದೆ. ಇದು ಜೀವನ. ಸಾವಿನ ನಡುವೆ ಬದುಕುವುದು ಅವನ ಜೀವನೋಪಾಯ.

ಆದರೂ ಅವನಲ್ಲಿ ಮಡುಗಟ್ಟಿರುವ ಅಂತಃಕರಣ ಅವನಲ್ಲಿ ಜೀವ ಪ್ರೀತಿ ತುಂಬಿರುತ್ತದೆ. ಇದು ಜೀವ. ಜೀವನವಿಡೀ ಸಾವುಗಳ ನಡುವೆಯೇ ಬದುಕುವ ಈತನಿಗೆ ತನ್ನ ಕುಟುಂಬದಲ್ಲಿ ಒಬ್ಬರು ಮೃತಪಟ್ಟರೂ ಸಹಿಸಲಾಗದಷ್ಟು ದುಃಖ ಉಮ್ಮಳಿಸುತ್ತದೆ. ಎಷ್ಟೇ ಸಾವುಗಳನ್ನು ಕಂಡರೂ ಅಂತಃಕರಣ ಜೀವಂತವಾಗಿದ್ದರೆ ಮನುಜ ಪ್ರೀತಿ ಬತ್ತುವುದಿಲ್ಲ. ಇದು ಜೀವನ. ಈ ಮೂರರ ಸಮೀಕರಣವನ್ನು ಪರಿಪೂರ್ಣವಾಗಿ ಕಾಣಬಹುದಾದರೆ ಅದು ಮಸಣದಲ್ಲೇ.

ನಮ್ಮ ದೇಶದ ಸಾರಥ್ಯ ವಹಿಸಿರುವ ಅಧಿಕಾರದಾಹಿ ರಾಜಕೀಯ ನಾಯಕರಿಗಾಗಿ, ಈ ಶವಾಗಾರ ನಿರ್ವಹಿಸುವವರಿಂದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸುವ ಅನಿವಾರ್ಯತೆ ಈಗ ಕಾಣುತ್ತಿದೆ. ಏಕೆಂದರೆ ಇವರಿಗೆ ಜೀವದ ಬೆಲೆ ಗೊತ್ತಿಲ್ಲ. ಸಾವಿನ ಬೆಲೆಯೂ ಗೊತ್ತಿಲ್ಲ. ಜೀವಗಳನ್ನು ಹಿಸುಕಲು ಆಸ್ಪತ್ರೆಗಳಲ್ಲಿ ವ್ಯಾಪಾರ ಕುದುರಿಸಿ ಭ್ರೂಣ ಹತ್ಯೆ ಮಾಡುವ ದೇಶ ನಮ್ಮದು.

ಎಳೆಯ ಜೀವಗಳನ್ನು ಹೆಣ್ಣು ಎಂಬ ಕಾರಣಕ್ಕಾಗಿಯೇ ಹೊಸಕಿ ಹಾಕುವ ದೇಶ ನಮ್ಮದು. ಈಗ ಸಾವನ್ನೂ ಖರೀದಿಸಲಾಗುತ್ತಿದೆ. ಹಣ ಇದ್ದರೆ ಹೆಣಕ್ಕೂ ಜಾಗ ಎನ್ನುವಂತಹ ಪರಿಸ್ಥಿತಿ ಬಂದಿದೆ. ಈ ಪರಿಸ್ಥಿತಿಗೆ ಕೋವಿದ್ ಕಾರಣ ಅಲ್ಲ. ಕೋವಿದ್ ನಿಮಿತ್ತ. ಕಾರಣ ನಾವು ಪೋಷಿಸಿರುವ ವ್ಯವಸ್ಥೆ.

ಎಲ್ಲಿಂದ ಎಲ್ಲಿಯವರೆಗೆ ನೋಡಿದರೂ ಇವರಿಗೆ ಹಣ-ಅಧಿಕಾರ-ಲಾಭ ಇವಷ್ಟೇ ಕಾಣುತ್ತವೆ. ಅದು ಜೀವನಾಶಕ ಅಣುವಿದ್ಯುತ್ ಘಟಕವೋ, ಪರಿಸರ ನಾಶದ ಕಾರ್ಖಾನೆಯೋ ಇರಬಹುದು ಅಥವಾ ಜೀವ ರಕ್ಷಕ ಲಸಿಕೆ ಇರಬಹುದು. ಎರಡೂ ಮಾರುಕಟ್ಟೆಯ ಕೈಯ್ಯಲ್ಲಿದೆ. ನಾಶ ಮಾಡಲು ಬಂಡವಾಳ ಹೂಡುವ ವ್ಯವಸ್ಥೆಯಲ್ಲಿ ನಾವಿದ್ದೇವೆ.

ನಾಶವಾಗುತ್ತಿದ್ದರೂ, ಇರುವಷ್ಟು ದಿನದ ಹಿತವಲಯಕ್ಕಾಗಿ ಸಹಿಸಿಕೊಳ್ಳುವ ಮನಸ್ಥಿತಿಯನ್ನು ಈ ಮಾರುಕಟ್ಟೆಯೇ ಸೃಷ್ಟಿಸಿಬಿಟ್ಟಿದೆ. ಹಾಗಾಗಿ ಮುಳುಗಡೆಯ ಭೀತಿಯೂ ನಮ್ಮನ್ನು ಕಾಡುವುದಿಲ್ಲ. ವಿನಾಶದ ಆತಂಕವೂ ಕಾಡುವುದಿಲ್ಲ. ಇಂತಹ ಒಂದು ಬೃಹತ್ ಸಮಾಜವನ್ನೂ ಬಂಡವಾಳ ಮಾರುಕಟ್ಟೆ ಸೃಷ್ಟಿಸಿಬಿಟ್ಟಿದೆ.

ಈ ಮಾರುಕಟ್ಟೆಯ ನಡುವೆಯೇ ಕೊರೋನಾ ಜನಸಾಮಾನ್ಯರ ಜೀವದೊಡನೆ ಆಟವಾಡುತ್ತಿದೆ. ಇದರೊಂದಿಗೆ ಬದುಕುವುದನ್ನು ಕಲಿಯಿರಿ ಎಂದು ಹೇಳುವ ನಾಯಕರಿಗೆ ಬದುಕಿನ ಅರ್ಥವೇ ತಿಳಿದಿರುವುದಿಲ್ಲ. ಏಕೆಂದರೆ ಇವರಿಗೆ ಹಸಿವಿನ ಅರ್ಥ ತಿಳಿದಿರುವುದಿಲ್ಲ. ನೋವು, ವೇದನೆ ಇವೆಲ್ಲವೂ ಇವರಿಗೆ ಮತಪೆಟ್ಟಿಗೆಯ ಹಿಂದೆ ಅವಿತಿರುವ ಪಂಚವಾರ್ಷಿಕ ದರ್ಶನಗಳಂತೆ.

ಭಾರತ ವಿಶಾಲವಾದ ದೇಶವಲ್ಲವೇ, ಯಾವುದೋ ಒಂದು ಮೂಲೆಯಲ್ಲಿ ಹೆಣಸುಟ್ಟರೆ ಮತ್ತೊಂದು ಮೂಲೆಗೆ ತಿಳಿಯುವುದೇ ಇಲ್ಲ. ಹಾಗಾಗಿ ದಕ್ಷಿಣದಲ್ಲಿನ ಹೆಣದ ರಾಶಿ ದೆಹಲಿಯ ಸೆಂಟ್ರಲ್ ವಿಸ್ತಾ ಹಾದಿಗೆ ಅಡ್ಡಿಯಾಗುವುದಿಲ್ಲ. ದೆಹಲಿಯಲ್ಲೇ ಬೀಳುವ ಹೆಣದ ರಾಶಿಗಳು ಅಧಿಕಾರ ಪೀಠಗಳಿಗೆ ಗೋಚರಿಸುವುದೇ ಇಲ್ಲ.

ಮಸೂರಗಳನ್ನು ತೊಟ್ಟು ಬದುಕುತ್ತಿದ್ದೇವೆ. ಪ್ರಪಂಚ ನಮಗೆ ಬೇಕಾದಂತೆ ಕಾಣುತ್ತದೆ. ಅದು ಕಂಡಂತೆ ನಾವು ಅರ್ಥಮಾಡಿಕೊಳ್ಳುವ ಕಾಲ ಬಹುಶಃ ಮುಗಿದುಹೋಗಿದೆ. ಚಾಮರಾಜನಗರದಲ್ಲಿ 24 ಜೀವಗಳು ಬಲಿಯಾದವು. ಉಸಿರಾಡಲು ಸೌಲಭ್ಯ ಇಲ್ಲದೆ. ಇನ್ನೂ ರಾಜ್ಯದ ವಿವಿಧೆಡೆ ಆಮ್ಲಜನಕ ಇಲ್ಲದೆ ಸಾಯುತ್ತಲೇ ಇದ್ದಾರೆ.

ಈಗ ಆಮ್ಲಜನಕ ಮಾರುಕಟ್ಟೆಯ ಹಿಡಿತದಲ್ಲಿದೆ. ಉತ್ಪಾದಿಸುವವನೊಬ್ಬ, ಸಾಗಾಣಿಕೆ ಮಾಡುವವನೊಬ್ಬ, ವಿತರಿಸುವವ ಮತ್ತೊಬ್ಬ. ಮಾರುಕಟ್ಟೆ ಸರಕಿನಂತೆಯೇ ಈ ಕೃತಕ ಉಸಿರನ್ನೂ ಸರ್ಕಾರ ಪಡಿತರದಂತೆ ಸೀಮಿತವಾಗಿ ವಿತರಿಸುತ್ತದೆ. ತನಗೆ ಬೇಕಾದವರಿಗೆ ಹೆಚ್ಚು, ಬೇಡದವರಿಗೆ ಶೂನ್ಯ. ಹೀಗೆ , ಎಷ್ಟಾದರೂ ಪಳಗಿದ ಕೈಗಳಲ್ಲವೇ.

ದೆಹಲಿಯ ಪೀಠ, ಕರ್ನಾಟಕಕ್ಕೆ ಅಗತ್ಯಕ್ಕಿಂತಲೂ ಕಡಿಮೆ ಆಮ್ಲಜನಕ ನೀಡುತ್ತದೆ. ನ್ಯಾಯಾಂಗದ ಪ್ರವೇಶದಿಂದ ನಮಗೆ ಹಿಡಿದಿಟ್ಟ ಉಸಿರು ಲಭ್ಯವಾಗುತ್ತದೆ. ಪ್ರತಿನಿತ್ಯ ಸಾವಿರಾರು ಕೊರೋನಾ ಸೋಂಕಿತರು ಆಸ್ಪತ್ರೆಗಳ ಮುಂದೆ ಜೀವದಾನ ಬೇಡುತ್ತಿರುವಾಗ, ಇಂತಿಷ್ಟೇ ಆಮ್ಲಜನಕ ಬೇಕೆಂದು ಹೇಗೆ ನಿರೀಕ್ಷಿಸುವುದು ? ಹೆಚ್ಚಿಗೆ ನೀಡಿದರೆ ಏನಾಗುತ್ತದೆ ? ಇಲ್ಲಿ ಮಾರುಕಟ್ಟೆ ಪ್ರವೇಶಿಸುತ್ತದೆ.

ಅವಶ್ಯಕತೆಗಿಂತಲೂ ಕಡಿಮೆ ಸರಬರಾಜು ಇದ್ದರಷ್ಟೇ ಸರಕಿಗೆ ಬೆಲೆ, ಲಾಭ ಹೆಚ್ಚು. ಅಷ್ಟೇ. ಇದು #ಆತ್ಮನಿರ್ಭರ ಭಾರತದ ನಿಯಮ. ಮಾರುಕಟ್ಟೆ ಎಂದರೆ ಕ್ರೌರ್ಯದ ಪ್ರಾಪಂಚಿಕ ಸ್ವರೂಪವಷ್ಟೇ. ಅಲ್ಲಿ ಹಣ ಮತ್ತು ಹೆಣ ಎರಡೂ ವಿನಿಮಯದ ವಸ್ತುಗಳೇ ಆಗಿಬಿಡುತ್ತವೆ. ಹಾಗಾಗಿಯೇ ಹೆಣ ಸುಡಲೂ ಹಣ ನೀಡಬೇಕಾದ ಪರಿಸ್ಥಿತಿ.

ಜೀವರಕ್ಷಣೆಗಾಗಿ ಆಸ್ಪತ್ರೆಗೆ ಬರುವವರಿಗೆ ಹಾಸಿಗೆ ಒದಗಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಈ ಹಾಸಿಗೆಗಳೂ ಕಾಳಸಂತೆಯ ದಂಧೆಯ ಒಂದು ಭಾಗವಾಗುತ್ತದೆ. ಈ ದಂಧೆಯನ್ನು ಕೊನೆಗೊಳಿಸಲು ಒಂದು ಪುಟ್ಟ ಸೇನೆಯನ್ನೇ ಸಿದ್ಧಪಡಿಸುವ ಯುವ ಸಂಸದರಿಗೆ, ಜೀವರಕ್ಷಕ ತಾಣದಲ್ಲೂ ಅಸ್ಮಿತೆಗಳ ಹೊಸ ಲೋಕ ಕಂಡುಬಿಡುತ್ತದೆ.

ಹೆಣಗಳಲ್ಲಿ ಅಸ್ಮಿತೆಗಳನ್ನು ಹೆಕ್ಕಿ ತೆಗೆಯುವುದರಲ್ಲಿ ತರಬೇತಿ ಪಡೆದಿರುವವರಿದ್ದಾರೆ ನಮ್ಮ ನಡುವೆ. ಹಾಗಾಗಿ ಇಲ್ಲಿ ಹದಿನೇಳು ಮಂದಿಯನ್ನು ಹೆಕ್ಕಿ ತೆಗೆದಿದ್ದರಲ್ಲಿ ಅಚ್ಚರಿಯೇನಿಲ್ಲ. ಇಷ್ಟಕ್ಕೂ ದಂಧೆಕೋರರ ವಿಳಾಸ ತಿಳಿದಿದ್ದರೂ ತಲುಪಲಾಗದ ಸ್ಥಿತಿಯನ್ನು ಅಧಿಕಾರ ರಾಜಕಾರಣ ಸೃಷ್ಟಿಸಿರುತ್ತದೆ. ಹಾಗಾಗಿ ಕಾಡು ಹಂದಿಗಳಿಗೆ ಮುಕ್ತಿ. ಮುಗ್ಧ್ದ ಜಿಂಕೆಗಳ ಬಲಿ.

ಸರ್ಕಾರಗಳು ತಾವು ಕೊಟ್ಟ ಮಾತಿಗೆ ತಪ್ಪಲಿಲ್ಲ. ಕೊರೋನಾದೊಂದಿಗೆ ಬದುಕಲು ಕಲಿಯಿರಿ ಎಂಬ ಮನದ ಮಾತು ಇನ್ನೂ ಅಪ್ರಸ್ತುತವಾಗಿಲ್ಲ. ಹಾಗಾಗಿ ಕೊರೋನಾ ನಡುವೆಯೇ ಚುನಾವಣೆಗಳು, ನಡೆದಿವೆ, ಸಮಾವೇಶಗಳು ನಡೆದಿವೆ, ಕುಂಭಮೇಳಗಳೂ ನಡೆದಿವೆ.

ಇವುಗಳ ನಡುವೆಯೇ ಅವರು ಬದುಕು ಕಂಡುಕೊಂಡಿದ್ದಾರೆ. ಅವರ ಬದುಕಿಗೆ ಇವೆಲ್ಲವೂ ಅನಿವಾರ್ಯ. ಆದರೆ ನಮ್ಮ ಬದುಕಿಗೆ ಇವು ಮಾರಕ. ಅವರು ಬದುಕುತ್ತಿಲ್ಲವೇ ? ಅದೂ ಒಂದು ಬದುಕೇ ಎಂದು ಕೇಳುವುದು ಬೇಡ. ಉತ್ತರ ಶೋಧಿಸಲು ಬಹಳ ಶ್ರಮಪಡಬೇಕಾಗುತ್ತದೆ. ಆದರೂ ಅವರು ನಿರ್ಲಿಪ್ತವಾಗಿ ಬದುಕುತ್ತಾರೆ.

ಕೊರೋನಾ ಹರಡಬಾರದು ಎಂದರೆ ನಾವು ಲಾಕ್‍ಡೌನ್ ಮಾಡುತ್ತೇವೆ ಎನ್ನುತ್ತಾರೆ. ಲಾಕ್‍ಡೌನ್ ಜನರನ್ನು ನಿಯಂತ್ರಿಸುತ್ತದೆ. ಕೊರೋನಾ ಓಡಾಡುತ್ತಲೇ ಇರುತ್ತದೆ. ಸರಕಾರಗಳು ನೀಡುವ ನಿಗದಿತ ಅವಧಿಯ ವಿನಾಯತಿಗಳು ನಮಗೆ ಅನ್ವಯ. ವೈರಾಣು ಸದಾ ಜೀವಂತವಾಗಿಯೇ ಇರುತ್ತದೆ.

ಆಶ್ರಯ ತಾಣಗಳನ್ನು ಅರಸುತ್ತಲೇ ಇರುತ್ತದೆ. ಹಾಗಾಗಿ ನಿಮ್ಮನ್ನು ನೀವು ಲಾಕ್ ಡೌನ್ ಮಾಡಿಕೊಂಡರೆ ಅದು ಅನಾಥವಾಗಿಬಿಡುತ್ತದೆ. ಇದು ನಮ್ಮ ಸರ್ಕಾರಗಳ ವಾದ. ಹಾಗಾಗಿಯೇ ಲಾಕ್ ಡೌನ್ ಘೋಷಿಸುವಾಗ ಸರ್ಕಾರಗಳು ಏನು ಸಿಗುತ್ತದೆ ಏನು ಸಿಗುವುದಿಲ್ಲ ಎಂದಷ್ಟೇ ಹೇಳುತ್ತವೆ. ನಿಮಗೇನು ಬೇಕು ಎಂದು ಯಾರನ್ನಾದರೂ ಕೇಳಿದೆಯೇ ?

ಒಮ್ಮೆ ಕೇಳಿಬಿಟ್ಟರೆ ಅವರ ಅಧಿಕಾರ ಪೀಠಗಳು ಅಲುಗಾಡಿಬಿಡುತ್ತವೆ. ಏಕೆಂದರೆ ನಿಮ್ಮ ಜೀವನೋಪಾಯದ ಅವಶ್ಯಕತೆಗಳನ್ನು ಒದಗಿಸುವ ಕೀಲಿ ಕೈ ಮಾರುಕಟ್ಟೆಯ ಬಳಿ ಇರುತ್ತದೆ. ಕೃತಕ ಉಸಿರು, ಆಮ್ಲಜನಕವೇ ಕಂಪನಿಯ ಮುದ್ರೆಯನ್ನು ಹೊತ್ತು ಬರುತ್ತದೆ. ಜೀವ ರಕ್ಷಕ ಲಸಿಕೆಗೆ ಜಿಎಸ್‍ಟಿ ನೀಡಿ ಖರೀದಿಸಬೇಕಾಗುತ್ತದೆ.

ಗಾಳಿಯನ್ನು ಹಿಡಿದಿಡಲು ಆಗುವುದಿಲ್ಲ. ಆದರೆ ಉಸಿರನ್ನು ಹಿಡಿದಿಡಬಹುದು. ಈಗ ಉಸಿರು ಮಾರಾಟಕ್ಕಿದೆ. ಈ ಉಸಿರು ಒಂದು ಸಮಾಜದ ಉಸಿರುಗಟ್ಟಿಸುತ್ತಿದೆ. ಆದರೂ ಆಮ್ಲಜನಕದ ಸರಬರಾಜು, ಪೂರೈಕೆ, ಉತ್ಪಾದನೆ, ವಿತರಣೆ ಇವೆಲ್ಲವೂ ಮುಂಬರುವ ಚುನಾವಣೆಗಳಿಗೆ ನೆರವಾಗುವಂತಹ ಪ್ರಚಾರ ಸಾಮಗ್ರಿಗಳ ಕಚ್ಚಾವಸ್ತುಗಳಾಗಿಬಿಟ್ಟಿವೆ.

ಆದರೆ ನಮ್ಮ ಸರ್ಕಾರಗಳ ಉಸಿರಾಟಕ್ಕೇನೂ ತೊಂದರೆಯಾಗಿಲ್ಲ. ಹೊಸ ಹವೆ, ಹೊಸ ವಾತಾವರಣ, ಹೊಸ ಪರಿಸರ, ಸ್ವಚ್ಚಂದ ಆಹ್ಲಾದಕರ ಬದುಕಿಗಾಗಿಯೇ, #ಆತ್ಮನಿರ್ಭರ ಭಾರತದ ಜನಪ್ರತಿನಿಧಿಗಳಿಗಾಗಿ ಒಂದು ಭವ್ಯ ಸೌಧದ ನಿರ್ಮಾಣ ಸುಡುವ ಹೆಣಗಳ ರಾಶಿಯ ನಡುವೆಯೇ ಆರಂಭವಾಗಿದೆ.

ನಾವೇ ನೀಡುವ ತೆರಿಗೆಯ ಹಣದಲ್ಲಿ ಈ ಐಷಾರಾಮಿ ಹಿತವಲಯದ ಸೃಷ್ಟಿಯಾಗುತ್ತಿದೆ. ದೇಶದೆಲ್ಲೆಡೆ ಆಮ್ಲಜನಕಕ್ಕಾಗಿ ಹಾಹಾಕಾರ ಕೇಳಿಬರುತ್ತಿದೆ. ಈ ಭವ್ಯ ಸೌಧದ ನಿರ್ಮಾಣಕ್ಕಾಗಿಯೇ ನೂರಾರು ಹಸಿರೊಡಲುಗಳು ಅವಸಾನ ಕಾಣುತ್ತಿವೆ. ನೆಲಕ್ಕುರುಳಿದ ಮರದ ತುಂಡುಗಳು ಹೆಣ ಸುಡಲು ನೆರವಾಗಬಹುದು.

ಇದನ್ನೂ ಓದಿ | ದುಡಿಯುವ ಮಹಿಳೆಯರ ಹೋರಾಟಕ್ಕೆ ಶಕ್ತಿ ತುಂಬಿದ್ದ ಕಾಂII ಹೆಚ್‌ಕೆಆರ್

ಇಂತಹ ಒಂದು ಮಾರುಕಟ್ಟೆ ಕ್ರೌರ್ಯದ ನಡುವೆ ನಾವು ದಿನನಿತ್ಯ ನಮ್ಮ ಆಪ್ತರನ್ನು ಕಳೆದುಕೊಳ್ಳುತ್ತಿದ್ದೇವೆ. ನಾವೇ ಪ್ರಜ್ಞಾಪೂರ್ವಕವಾಗಿ ಆಯ್ಕೆ ಮಾಡಿದ ನಮ್ಮ ಪ್ರತಿನಿಧಿಗಳು ತಮ್ಮ ಕುದಿಯುತ್ತಿರುವ ರಕ್ತವನ್ನು ಸಹಿಸಿಕೊಂಡು (ಇಂದಿನ ಪತ್ರಿಕೆಗಳನ್ನು ನೋಡಿ ಮೈಸೂರು ಸುತ್ತಲಿನ ಶಾಸಕರ ರಕ್ತ ಕುದಿಯುತ್ತಿರುವ ವರದಿಯಾಗಿದೆ) ತಮ್ಮ ಮತದಾರ ಪ್ರಭುಗಳ ರಕ್ಷಣೆಗೆ ಮುಂದಾಗುತ್ತಿದ್ದಾರೆ. ಆಮ್ಲಜನಕದ ಕೊರತೆಯಿಂದ ಪ್ರಾಣಕಳೆದುಕೊಳ್ಳುತ್ತಿರುವ ಅಮಾಯಕ ಜೀವಗಳಿಗಿಂತಲೂ ಈ ಪ್ರತಿನಿಧಿಗಳ ಪ್ರತಿಷ್ಟೆ, ಸಮ್ಮಾನ ಮತ್ತು ರಾಜಕೀಯ ಹಿತಾಸಕ್ತಿಗಳು ಮೇಲುಗೈ ಸಾಧಿಸುತ್ತಿರುವುದು ಈ ದೇಶದ ದುರಂತ.

ಪ್ರಜಾಪ್ರಭುತ್ವದ ಕನಿಷ್ಠ ಪ್ರಜ್ಞೆ ಇರುವ ಒಬ್ಬ ವ್ಯಕ್ತಿ ಇಂದು ದೇಶದ ಮುಂದಾಳತ್ವ ವಹಿಸಿದ್ದರೂ ಒಂದು ರಾಷ್ಟ್ರೀಯ ಸರ್ಕಾರದ ರಚನೆಯಾಗುತ್ತಿತ್ತು. ಸರ್ವಪಕ್ಷಗಳನ್ನೊಳಗೊಂಡ ಚಿಂತನಾ ವೇದಿಕೆ ಇರುತ್ತಿತ್ತು. ವೈರಾಣು ತಜ್ಞರು, ವಿಜ್ಞಾನಿಗಳು, ವೈದ್ಯಕೀಯ ತಜ್ಞರು ಮತ್ತು ಅನುಭವಿ ಸಾರ್ವಜನಿಕ ವ್ಯಕ್ತಿಗಳನ್ನೊಳಗೊಂಡ ರಾಷ್ಟ್ರಮಟ್ಟದ ವೇದಿಕೆ ರೂಪುಗೊಳ್ಳುತ್ತಿತ್ತು.

ಪ್ರತಿರಾಜ್ಯದಲ್ಲೂ , ಜಿಲ್ಲೆಯಲ್ಲೂ ಇದರ ಶಾಖೆಗಳಿರುತ್ತಿದ್ದವು. ಜನಸಾಮಾನ್ಯರ ಜೀವನ ಮತ್ತು ಬದುಕು ಇವೆರಡನ್ನೂ ಅರ್ಥಮಾಡಿಕೊಳ್ಳುವ ನಾಯಕರು ಇದ್ದಿದ್ದರೆ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿತ್ತು. ಕೊರೋನಾ ಪೀಡಿತರಿಗೆ ಉಚಿತ ವೈದ್ಯಕೀಯ ನೆರವು ದೊರೆಯುತ್ತಿತ್ತು.

ಆದರೆ ಈ ಕಾಲ್ಪನಿಕ ರಾಜ್ಯದಿಂದ ಹೊರಬಂದೇ ನಾವು ಯೋಚಿಸಬೇಕಿದೆ. ಏಕೆಂದರೆ ಜೀವನೋಪಾಯ ವ್ಯಕ್ತಿನಿಷ್ಟ ವಿಚಾರ. ಜೀವನ ವಸ್ತುನಿಷ್ಟ ವಿಚಾರ. ನಾವು ಬದುಕುತ್ತಿರುವುದು ಒಂದು ಪ್ರಜಾಪ್ರಭುತ್ವದಲ್ಲೇ ಆದರೂ ಇಲ್ಲಿ ಪ್ರಜೆಗಳಿಗೂ ಪ್ರಭುತ್ವಕ್ಕೂ ಇರುವ ಅಂತರ ಅಪಾರ ಎನ್ನುವುದನ್ನು ಕೋವಿದ್ 19 ಸಾಬೀತುಪಡಿಸಿದೆ.

ಇಲ್ಲಿ ನಾವೇ ಆಯ್ಕೆ ಮಾಡುವ ಸರ್ಕಾರಗಳು ಜೀವನ ನಡೆಸಲು ಹಾದಿ ಸುಗಮಗೊಳಿಸುತ್ತವೆ. ಜೀವನ ಕಲ್ಪಿಸಿಕೊಳ್ಳುವುದು ಪ್ರಜೆಗಳ ಆಯ್ಕೆ. ಜೀವನೋಪಾಯ ಮಾರುಕಟ್ಟೆಗೆ ಸಂಬಂಧಿಸಿದ ವಿಚಾರ. ಬದುಕು ಕಟ್ಟಿಕೊಳ್ಳಲು ಈ ಮಾರುಕಟ್ಟೆಯ ಯಾವುದೋ ಒಂದು ಜಗುಲಿಯನ್ನು ಆಶ್ರಯಿಸಬೇಕು.

ಇದನ್ನೇ ರಥಸಾರಥ್ಯ ವಹಿಸಿದವರೂ ಕಳೆದ ವರ್ಷ ಹೇಳಿರುವುದು. ಬದುಕುವುದನ್ನು ಕಲಿಯಿರಿ, ಕೊರೋನಾದೊಂದಿಗೆ ಬದುಕುವುದನ್ನು ಕಲಿಯಿರಿ. ಅಂದರೆ ಕೊರೋನಾ ಕೊಲ್ಲುತ್ತದೆ ಹಾಗಾಗಿ ಸಾವುಗಳೊಂದಿಗೆ ಬದುಕುವುದನ್ನೂ ಕಲಿಯಿರಿ. ಕೊರೋನಾ ಉಸಿರುಗಟ್ಟಿಸುತ್ತದೆ ಹಾಗಾಗಿ ಆಮ್ಲಜನಕ ಇಲ್ಲದೆ ಸಾಯುತ್ತಾರೆ ಈ ಸಾವುಗಳೊಡನೆ ಬದುಕುವುದನ್ನೂ ಕಲಿಯಿರಿ.

ಕೊರೋನಾ ನಿಮ್ಮ ಜೀವನೋಪಾಯಗಳನ್ನು ಕಸಿದುಕೊಳ್ಳುತ್ತದೆ ಹೇಗೋ ಇದ್ದುದರಲ್ಲಿ ಬದುಕುವುದನ್ನು ಕಲಿಯಿರಿ. ಹಸಿದವರಿಗೆ ಉಪನ್ಯಾಸ ಹೇಳುವುದು ಎಂದರೆ ಇದನ್ನೇ. ಭಾರತಕ್ಕೆ ಇದೇನೂ ಹೊಸತಲ್ಲ. ಶತಮಾನಗಳಿಂದ ಇದನ್ನೇ ಮಾಡುತ್ತಾ ಬಂದಿದ್ದೇವೆ. ಈಗ ನಮಗೆ ನಾವೇ ಹೇಳಿಕೊಳ್ಳುತ್ತಿದ್ದೇವೆ ಏಕೆಂದರೆ ಇಂದು ನಮಗೆ ನಾವೇ ಅರ್ಪಿಸಿಕೊಂಡ ಸಂವಿಧಾನದಡಿ ನಮಗೆ ನಾವೇ ಆಯ್ಕೆ ಮಾಡಿಕೊಂಡವರ ಆಡಳಿತದಲ್ಲಿ ನಾವು ನಮ್ಮ ಬದುಕು ಕಂಡುಕೊಳ್ಳುತ್ತಿದ್ದೇವೆ. ಸಾಧ್ಯವಾದರೆ ಹೇಳೋಣ, ಸ್ವಾಮಿ ನಿಮ್ಮಿಂದ ಆಗದಿದ್ದರೆ ಹೊರಟುಬಿಡಿ,,,,,,,,

ಕೃಪೆ : ಬೆವರಹನಿ ಪತ್ರಿಕೆ ತುಮಕೂರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ

Published

on

  • ರುದ್ರಪ್ಪ ಹನಗವಾಡಿ

ಅಪ್ಪ ಮೊದಲಿನಿಂದಲೂ ಎಲೆ ತೋಟ ಮಾಡಿಕೊಂಡು ಬರುತ್ತಿದ್ದ ಬಗ್ಗೆ ಆಗಲೇ ಬರೆದಿದ್ದೇನೆ. ಅದರಿಂದಲೇ ನಮ್ಮೆಲ್ಲರ ಜೀವನ ಕೊರತೆ ಕಾಣದಂತೆ ನಡೆಯುತ್ತಿತ್ತು. ನಮಗೆ ಸ್ವಂತ ತೋಟದ ಜಮೀನು ಇಲ್ಲದ್ದರಿಂದ ಕಪ್ಪಲಿ ಮಾಡಿ ಬೇರೆಯವರ ಜಮೀನನ್ನು ಕೋರಿಗೆ ಮಾಡುತ್ತಿದ್ದರು.

ಕರ್ನಾಟಕದಲ್ಲಿ ಈ ಪದ್ಧತಿ ಬೇರೆ ಬೇರೆ ಪ್ರದೇಶಗಳಲ್ಲಿ ವಿವಿಧ ರೀತಿಯಲ್ಲಿ ಜಾರಿಯಲ್ಲಿರುವುದನ್ನು ನೋಡುತ್ತೇವೆ. ಭೂಮಾಲೀಕನು ಮತ್ತು ಅದರಲ್ಲಿ ದುಡಿಯುವವ, ಬರುವ ಒಟ್ಟು ಆದಾಯದಲ್ಲಿ ಸಮನಾಗಿ ಹಂಚಿಕೊಳ್ಳುವ ವ್ಯವಸ್ಥೆ ಇರುತ್ತಿತ್ತು. ಹೀಗೆ ಕೋರಿಗೆ ಮಾಡಿಕೊಳ್ಳುತ್ತಿದ್ದ ಮಾಲೀಕ ಮತ್ತು ಶ್ರಮಿಕರಿಬ್ಬರಲ್ಲಿ ನನ್ನ ಬಾಲ್ಯದ ದಿನಗಳಲ್ಲಿ ಅನ್ಯೋನ್ಯ ಸಂಬಂಧಗಳಿರುತ್ತಿದ್ದವು. ಹಬ್ಬ ಹರಿದಿನ, ಮದುವೆ ಮುಂಜಿಗಳಲ್ಲಿ, ಸಾವು ನೋವುಗಳಲ್ಲಿ ಬಂಧುಗಳಂತೆ ಒಬ್ಬರಿಗೊಬ್ಬರು ನೆರವಾಗುತ್ತಿದ್ದರು.

ಹೀಗೆ ಹೆಚ್ಚಿನ ಜಮೀನುಗಳು ಇದ್ದ ಮನೆತನದವರು ಕೋರಿಗೆ ನೀಡಿದ ಜನರೊಡನೆ ಅನೇಕ ತಲೆಮಾರುಗಳಿಂದ ಕೋರಿನ ವ್ಯವಸ್ಥೆಯಲ್ಲಿ ತೋಟ, ಹೊಲಗಳನ್ನು ಮಾಡಿಕೊಂಡು ಬರುತ್ತಿದ್ದರು. ಕೆಲವು ಭೂಮಾಲೀಕರು, ತೋಟದಲ್ಲಿ ದುಡಿಯುತ್ತಿದ್ದ ಕೋರಿನವರಿಗೆ ಬರುವ ಆದಾಯದಲ್ಲಿ ಸರಿಯಾಗಿ ಹಂಚಿಕೊಡದೆ ಮೋಸ ಕೂಡ ಮಾಡುತ್ತಿರುವ ವಿಚಾರಗಳನ್ನು ಕೂಡ ಊರಲ್ಲಿ ಜನರು ಅಲ್ಲಲ್ಲಿ ಮಾತಾಡಿಕೊಳ್ಳುತ್ತಿದ್ದರು. ಏಕೆಂದರೆ ಬೆಳೆದ ಎಲೆ ಪೆಂಡಿಗಳನ್ನು ಹುಬ್ಬಳ್ಳಿ, ಧಾರವಾಡ, ಹೊಸಪೇಟೆ, ಕಂಪ್ಲಿಗಳಿಗೆ ಭೂಮಾಲೀಕರುಗಳೇ ಮಾರಾಟ ಮಾಡಲು ಹೋಗುತ್ತಿದ್ದರು.

ಅಲ್ಲಿನ ದಲಾಲರು ಹರಾಜು ಹಾಕಿ ನೀಡಿದ ಪಟ್ಟಿಯನ್ನು ಕೋರಿನವರಿಗೆ ಸರಿಯಾಗಿ ತೋರಿಸದೆ ಮತ್ತು ಓದಲು ಬಾರದೆ ಇರುವ ಕೋರಿನವರಿಗೆ ಮೋಸ ಮಾಡುತ್ತಿದ್ದರು. ಆದರೆ ಅಪ್ಪ ಮಾಡಿಕೊಂಡು ಬರುತ್ತಿದ್ದ ಕೋರಿನ ತೋಟದ ಯಜಮಾನರುಗಳು ನಾನು ಚಿಕ್ಕಂದಿನಿಂದಲೂ ನೋಡಿದ ದೊಡ್ಡಮನಿ ಬಸಣ್ಣ, ಸಣ್ಣಮನಿ ರುದ್ರಜ್ಜ, ಬಣಕಾರ್ ನಾಗಪ್ಪ ಎಂಬ ಭೂಮಾಲೀಕರುಗಳು ಎಂದೂ ಆ ರೀತಿ ಮಾಡಿದವರಲ್ಲ.

ದೊಡ್ಡಮನಿ ಬಸಣ್ಣನದು ವರ್ಣರಂಜಿತ ವ್ಯಕ್ತಿತ್ವ. ಇವರ ಹಿಂದಿನ ವಂಶಕ್ಕೆ ಹೋದರೆ ಶಿವಪ್ಪಜ್ಜ ಎಂಬ ಹಿರಿಯ, ಅಪ್ಪನನ್ನು `ಹನುಮಂತು’ ಎಂದು ಪ್ರೀತಿಯಿಂದ ಕರೆಯುತ್ತಿದ್ದರು. ನಾನು 13-14ನೇ ವಯಸ್ಸಿನಲ್ಲಿ ಇದ್ದಾಗ ಅಪ್ಪನನ್ನು ಹಾಗೆ ಕರೆಯುತ್ತಿದ್ದವರನ್ನು ನಾನು ಎಲ್ಲೂ ಕೇಳಿರಲಿಲ್ಲ. ಶಿವಪ್ಪಜ್ಜನ ತಂಗಿಯಾಗಿದ್ದ ಸಿದ್ದಜ್ಜಿ ತನ್ನ ಗಂಡನ ಕಾಲಾನಂತರ ತವರು ಮನೆಗೆ ಬಂದು ಅಣ್ಣ ಶಿವಪ್ಪಜ್ಜನ ಮನೆಯಲ್ಲೇ ಇದ್ದು ತೋಟ ಮನೆಗಳಲ್ಲಿ ಎರಡಾಳಿನ ಕೆಲಸ ಮಾಡುತ್ತಿದ್ದರು. ಶಿವಪ್ಪಜ್ಜನ ಅಣ್ಣ ತಮ್ಮಂದಿರು ದೊಡ್ಡ ಮನೆತನ ಮತ್ತು ದೊಡ್ಡ ನಡವಳಿಕೆ ಕೂಡ.

ಊರಲ್ಲಿನ ದೇವರ ಕೆಲಸವಾಗಲೀ, ಮದುವೆ ಮುಂಜಿಗಳಲ್ಲಿ ಅವರಿಲ್ಲದೆ ನಡೆಯುತ್ತಿರಲಿಲ್ಲ. ಅದೇನೋ ಮಕ್ಕಳಾಗಲಿಲ್ಲ ಎಂದು ಒಂದೆರಡು ಮದುವೆಯಾಗಿ ಕೊನೆಯಲ್ಲಿ ಚಿಕ್ಕ ಹೆಂಡತಿಗೆ ಗಂಡು ಮಕ್ಕಳಾಗದೇ ಒಂದು ಹೆಣ್ಣು ಮಗಳಿದ್ದು, ಅವರು ನಮ್ಮ ದೊಡ್ಡಕ್ಕ ಕೊಟ್ರಕ್ಕನ ಸಹಪಾಠಿಯಾಗಿ ಶಾಲೆಗೆ ಹೋಗುತ್ತಿದ್ದುದನ್ನು ಅಕ್ಕ ಈಗಲೂ ನೆನಸಿಕೊಳ್ಳುತ್ತಾಳೆ. ಅಪ್ಪ ಇವರ ತೋಟ ಮಾಡುತ್ತಿದ್ದ ಸಮಯದಲ್ಲಿ ನಾನು ತೋಟಕ್ಕೆ ಬುತ್ತಿ ತೆಗೆದುಕೊಂಡು ಹೋಗುತ್ತಿದ್ದೆ. ಎಲ್ಲಾ ಒಟ್ಟಿಗೆ ಕೂತು ಉಣ್ಣುವಾಗ, ಶಿವಪ್ಪಜ್ಜ, ಸಿದ್ದಜ್ಜಿ ಅಪ್ಪನೊಡನೆ ಆತ್ಮೀಯರಾಗಿ ಮಾತಾಡುತ್ತಿದ್ದು ಅವರ ಮನೆತನದಲ್ಲಿನ ಬಂಗಾರದ ಹಂಚಿಕೆಯಲ್ಲಿ ಆಗಿರುವ ತಾರತಮ್ಯಗಳನ್ನು ಮಾತಾಡುತ್ತಿದ್ದರೆ ನಾನೂ ಕೇಳಿಸಿಕೊಳ್ಳುತ್ತಿದ್ದೆ. ಅಪ್ಪನ ಜೊತೆ ಶಿವಪ್ಪಜ್ಜ, ಸಿದ್ದಜ್ಜಿ ಅವರ ಸಂಬಂಧಗಳು ತುಂಬಾ ಆತ್ಮೀಯವಾಗಿರುತ್ತಿದ್ದವು. ಇಂತಹ ಮನೆತನದ ಕುಡಿಯಾಗಿದ್ದ ಬಸಣ್ಣ ಚಿಕ್ಕ ವಯಸ್ಸಿನವರಾಗಿದ್ದು ಅವರ ಪಾಲಿನ ತೋಟದಲ್ಲಿ ಅಪ್ಪ ಕೋರಿಗೆ ಮಾಡುತ್ತಿದ್ದ.

ಅಪ್ಪನನ್ನು ಆತ ಅಣ್ಣಾ ಎಂದು ಯಾವಾಗಲೂ ಕೂಗಿ ಕರೆಯುತ್ತಿದ್ದ. ಎಂದೂ ಏಕವಚನದಲ್ಲಿ ಮಾತಾಡಿದ್ದು ನಾನು ಕೇಳಿರಲಿಲ್ಲ. ಮತ್ತು ಬೆಳೆದ ಬೆಲೆಯಲ್ಲಿ ಸಮಾನ ಹಂಚಿಕೆಯಲ್ಲೂ ಏನೂ ಮೋಸ ಇರುತ್ತಿರಲಿಲ್ಲ. ಆದರೆ ಆತ ಹೊಸ ತಲೆಮಾರಿನ ಶೋಕಿಗೆ ಮಾರುಹೋಗಿದ್ದ. ಊರಿನಲ್ಲಿ ಮೊದಲು ರ‍್ಯಾಲಿ ಬೈಸಿಕಲ್ ನಂತರ ಸೈಕಲ್ ಮೋಟಾರ್ ತಂದು ಓಡಾಡಿಸಿದ! ಲಿಂಗಾಯತರಲ್ಲಿ ನಿಷಿದ್ಧವಾದ ಕುಡಿತ ಮತ್ತು ಮಾಂಸಾಹಾರವನ್ನು ಯಥೇಚ್ಛವಾಗಿ ಸೇವಿಸುತ್ತಿದ್ದ. ಅದಕ್ಕಾಗಿ ಯಾರಿಗೂ ಕೇರ್ ಮಾಡುತ್ತಿರಲಿಲ್ಲ. ಆದರೂ ಅವರಿವರು ಅವನ ಹಿಂದು ಮುಂದೆ ಮಾತಾಡಿಕೊಳ್ಳುವುದನ್ನು ಬಾಲಕನಾಗಿದ್ದ ನಾನು ಕೇಳಿಸಿಕೊಳ್ಳುತ್ತಿದ್ದೆ. ಯಾವಾಗಲಾದರೂ ನಮ್ಮ ಮನೆ ಕಡೆಗೆ ಬಂದಾಗ ಹೊರಕಟ್ಟೆಯಲ್ಲಿ ಕೂತು ಅವನ ಮೂಗಿಗೆ ಮಾಂಸದ ಸಾರಿನದೋ, ಕೋಳಿ ಸಾರಿನದೋ ಘಂ ವಾಸನೆ ಬಡಿದರೆ, ಎದ್ದು ಹೋಗದೆ ತಡರಾತ್ರಿವರೆಗೆ ಕೂತು ಅಪ್ಪನೊಟ್ಟಿಗೆ ಪಾರ್ಟಿ ಮಾಡಿಕೊಂಡು ಹೋಗುತ್ತಿದ್ದ.

ಹೀಗಿದ್ದ ಬಸಣ್ಣನಿಗೆ ಊರಲ್ಲಿದ್ದ ಸುಂದರಿಯೊಬ್ಬಳ ಸಹವಾಸವಾಗಿ ಆಕೆ ನಾವು ಮಾಡುತ್ತಿದ್ದ ಕೋರಿನ ತೋಟಕ್ಕೆ ಬರುತ್ತಿದ್ದಳು. ಅದ್ಯಾವ ವಿಷಯದಲ್ಲಿ ವಿವಾದವಾಯಿತೋ ಅಪ್ಪ ಬೆಳೆದು ನಿಂತಿದ್ದ ತೋಟವನ್ನು ನಿಂತ ಕಾಲಲ್ಲಿ ಬಿಟ್ಟು ಹೊರ ಬಂದು, ಬಣಕಾರ ನಾಗಪ್ಪ ಎನ್ನುವವರ ಬೇರೊಂದು ಕೋರಿನ ತೋಟವನ್ನು ಹಿಡಿದಿದ್ದ. ಇಲ್ಲಿ ಕಪ್ಪಲಿಯನ್ನು ಹೂಡಿ ನೀರು ಹಾಯಿಸುವುದು, ಅದರಿಂದ ಶ್ರಮ ಜಾಸ್ತಿಯಾಗಿರುತ್ತಿತ್ತೇ ಹೊರತು ಆದಾಯದಲ್ಲಿ ಅಂತಹದೇನೂ ಹೆಚ್ಚುವರಿ ಕಾಣುತ್ತಿರಲಿಲ್ಲ. ಆಗ ನಾನು ನೀರು ಹಾಯಿಸುವ, ಎಲೆ ಕೊಯ್ಯುವ, ಬಳ್ಳಿಯನ್ನು ಬೆಳೆದ ಮುಂಡಗಳಿಗೆ ಕಟ್ಟುವ ಕೆಲಸವನ್ನು ಅಪ್ಪ, ಅಣ್ಣನ ಜೊತೆ ಸೇರಿ ಮಾಡುತ್ತಿದ್ದೆ. ಆಗ ಏಳನೆ ತರಗತಿ ಪಾಸುಮಾಡಿ ಸಾಗರದಲ್ಲಿ ಹೈಸ್ಕೂಲಿಗೆ ಸೇರಿದ್ದೆ. ಕೋರಿನ ತೋಟದ ಮಾಲೀಕರಾಗಿದ್ದ ಬಣಕಾರ್ ನಾಗಪ್ಪ ಅವರ ಮಗ ಜಯಣ್ಣ ನನ್ನ ಕಿರಿಯ ಸಹಪಾಠಿಯಾಗಿ ಪ್ರೈಮರಿ ಶಾಲೆಯಲ್ಲಿ ಓದುತ್ತಿದ್ದ.

ನಾಗಪ್ಪಜ್ಜನೂ ದೊಡ್ಡ ಮನುಷ್ಯ. ಆಸೆಯವನಾಗಿರಲಿಲ್ಲ. ಬಂದ ಹಣವನ್ನು ಸರಿಯಾಗಿ ಹಂಚಿ ಕೊಡುತ್ತಿದ್ದ. ಅವರ ಮನೆಯವರೆಲ್ಲ ಇಂದಿಗೂ ಅದೇ ಆತ್ಮೀಯತೆಯನ್ನು ತೋರುವ ಬಂಧುಗಳಾಗಿದ್ದಾರೆ. ನಾಗಜ್ಜನ ಹೆಂಡತಿ ಗಿರಿಜಕ್ಕ, ತಾಯಿ ಹೃದಯದವರು. ನಾನು ಯಾವುದೇ ಕೆಲಸಕ್ಕೆ ಅವರ ಮನೆಗೆ ಹೋದಾಗ ರೊಟ್ಟಿ ಉಣ್ಣೆಂದು ಜುಲುಮೆ ಮಾಡಿ ಉಣಿಸುತ್ತಿದ್ದರು. ಅದೇಕೋ ಕಪ್ಪಲಿಯಿಂದ ದುಡಿಮೆ ಉಚಾಯಿಸದ ಕಾರಣ ಅಪ್ಪ ಬೇರೊಬ್ಬ ಭೂಮಾಲೀಕರಾದ ಸಣ್ಣಮನಿ ರುದ್ರಜ್ಜ, ಹಾಲಸಿದ್ದಪ್ಪ ಎಂಬುವರು ಹರಾಜಿನಲ್ಲಿ ಎಂಟು ವರ್ಷಗಳಿಗೆ ಹಣ ಗುತ್ತಿಗೆ ಪಡೆದ ಊರ ದೇವರ ಜಮೀನನ್ನು, ಕೋರಿಗೆ ಮಾಡಲು ಅಪ್ಪ ತೀರ್ಮಾನಿಸಿದ್ದರು.

ಅದೇನು ಅದೃಷ್ಟವೋ ಎಂಬಂತೆ ತೋಟವೊಂದು ನಂದನವನದಂತೆ ಬೆಳೆದು ಸಾಕಷ್ಟು ಆದಾಯ ಬರುತ್ತಿತ್ತು. ಈ ಸಂದರ್ಭದಲ್ಲಿಯೇ ಅಪ್ಪ ಇಡೀ ಉತ್ಪನ್ನವನ್ನು ನಾಲ್ಕು ಸಾವಿರ ರೂಪಾಯಿಗಳಿಗೆ ಗುತ್ತಿಗೆಗೆ ಒಪ್ಪಿಕೊಂಡು 100 ರೂಗಳಿಗೆ ಏಳೂವರೆ ಪೆಂಡಿಯಂತೆ ಎಲೆ ಪೆಂಡಿ ನೀಡಬೇಕಾಗಿದ್ದ ಕರಾರಿಗೆ ಒಪ್ಪಿ ಕೊಟ್ಟಿದ್ದರು.

ಈ ರೀತಿ ಎಲೆ ಕೊಯ್ದುಕೊಂಡು ಹೋಗುತ್ತಿದ್ದ ಕೇಣಿದಾರರು ಉಳಿಯುತ್ತಿದ್ದ ಅರ್ಧ ಅಥವಾ ಕಾಲು ಪೆಂಡಿಯ ಎಲೆಯನ್ನು ತೆಗೆದುಕೊಳ್ಳದೆ ತೋಟದವರಿಗೆ ಬಿಟ್ಟುಬಿಡುತ್ತಿದ್ದರು. ಅದನ್ನು ಸಾಮಾನ್ಯವಾಗಿ ಕೋರಿಗೆ ಮಾಡಿದವರೇ ಕೊಯ್ದುಕೊಂಡು ಮಾರಿ ಕೊಳ್ಳುತ್ತಿದ್ದರು. ಅದು ತೋಟದ ಮಾಲೀಕನಿಗೆ ಗೊತ್ತಿದ್ದರೂ ಸಾಮಾನ್ಯವಾಗಿ ಕೇಳುತ್ತಿರಲಿಲ್ಲ.ಇಂತಹದೊಂದು ಎಲೆ ಕೊಯ್ಯುವ ಸಮಯದಲ್ಲಿ ಕರಾರುದಾರನಿಗೆ ಕೊಟ್ಟು ಉಳಿದ ಸುಮಾರು ಕಾಲು ಪೆಂಡಿಯಷ್ಟು ಎಲೆ ಉಳಿದಿತ್ತು. ನಾನೇ ಕೊಯ್ದೆನೋ ನಮ್ಮ ಅಣ್ಣ ಹೇಳಿದನೋ ಅಪ್ಪನಿಗೆ ಗೊತ್ತಿಲ್ಲದಂತೆ ನಾನು ಬಂದು ಬೆಳಿಗ್ಗೇನೆ ಎಲೆ ಕೊಯ್ಯುತ್ತಿದ್ದೆ. ಆಗ ಒಳ್ಳೆಯ ರೇಟು ಬೇರೆ ಇದ್ದುದರಿಂದ ಮಾರಿದ ನಂತರ ಖರ್ಚಿಗೆ ದುಡ್ಡು ಸಿಗುವುದೆಂಬ ಯೋಚನೆಯಲ್ಲಿದ್ದೆ. ಆಗ ಬಹುಶಃ ನಾನು ಆಗಷ್ಟೇ ಹೈಸ್ಕೂಲಿಗೆ ಸೇರಿ ರಜೆಯಲ್ಲಿ ಊರಿಗೆ ಬಂದಿದ್ದೆ.

ನನ್ನ ಪಾಡಿಗೆ ನಾನು ಎಲೆ ಕೊಯ್ಯುವ ಸಮಯಕ್ಕೆ ಮಾಲೀಕ ರುದ್ರಪ್ಪಜ್ಜನ ತಮ್ಮ ಹಾಲಸಿದ್ದಪ್ಪ ಬಂದವನೇ ನಾನು ಎಲೆ ಕೊಯ್ಯುತ್ತಿರುವುದನ್ನ ನೋಡಿ, ಇದೇನು ಕಳ್ಳತನದಿಂದ ಎಲೆ ಕೊಯ್ಯುತ್ತಿಯಲ್ಲ ಎಂದು ಪ್ರಾರಂಭಿಸಿದವ ನಾನೊಂದು ಮಹಾಪರಾಧ ಮಾಡಿರುವುದಾಗಿ ಬೈಯುತ್ತಾ ನನ್ನ ಮೇಲೆ ಕಳ್ಳತನದ ಆರೋಪ ಹೊರಿಸಿ ಎಲೆ ಕೊಯ್ಯು ವುದನ್ನ ನಿಲ್ಲಿಸಿದ. ಆಗ ಅದೇನೇನೊ ಮಾತಾಡಿದವನೋ ನನಗಂತೂ ಸಹಿಸಿಕೊಳ್ಳಲಾಗದೆ ಅವಮಾನದಲ್ಲಿ ಕುಸಿದು ಹೋಗಿದ್ದೆ. ಬಡತನದ ಕ್ರೌರ್ಯವೆಂದರೆ ಏನೆಂಬುದನ್ನ ಅವನ ಬೈಗುಳಗಳಲ್ಲಿ ದಾಖಲಿಸುತ್ತಾ, ಕೊಯ್ದಿದ್ದ ಎಲೆ ಬುಟ್ಟಿಯನ್ನು ನನ್ನ ಮೇಲೆ ಹೊರಿಸಿಕೊಂಡು ಊರಲ್ಲಿ ಪಂಚಾಯ್ತಿ ಮಾಡಬೇಕೆಂದು ಉದ್ದಕ್ಕೂ ಬೈಯುತ್ತಾ ಊರ ವೀರಭದ್ರ ದೇವರ ಗುಡಿಗೆ ತಂದಿರಿಸಿದ್ದ.

ನಾನು ಅವಮಾನದಲ್ಲಿ ಕುಸಿದು ಹೋಗಿದ್ದೆ. ಅದ್ಯರ‍್ಯಾರು ಪಂಚಾಯ್ತಿ ಸೇರಿದ್ದಾರೋ ವಿವರ ಮರೆತು ಹೋಗಿದೆ. ನನ್ನ ಹೆಸರಿನವರೇ ಆಗಿದ್ದ ಬಣಕಾರ್ ರುದ್ರಜ್ಜ `ಇದೇನು ದೊಡ್ಡ ವಿಷ್ಯಾ ಅಂತ ಇಲ್ಲಿಗೆ ತಂದಿದಿಯಾ’ ಕೋರಿನ ತೋಟ ಮಾಡೋ ಹುಡುಗ, ಉಳಿದ ಎಲೆ ಕೊಯ್ಯತಾನ, ಅದೇನು ಅಪರಾಧನಾ ಎಂದು ಅವನಿಗೆ ಗದರಿಸಿದರು. ಕಡೆಗೆ `ಉಳಿದ ಎಲೆಯಲ್ಲೂ ಪಾಲು ಬೇಕಂತೆ ಕೊಡಪ್ಪ’ ಅವನಿಗೆ ಎಂದು ತೀರ್ಮಾನ ಹೇಳಿ ಮುಗಿಸಿದ್ದರು. ಅಲ್ಲಿ ಅಪ್ಪ ಮತ್ತು ಅಣ್ಣ ಇದ್ದರೋ ಇಲ್ಲವೋ ಗೊತ್ತಿಲ್ಲ. ಕೋರಿನ ತೋಟದಲ್ಲಿ ಬೆಳೆದ ಎಲ್ಲದರಲ್ಲೂ ನಮ್ಮ ದುಡಿಮೆಯ ಅರ್ಧ ಭಾಗ ಇರುತ್ತದೆ. ಇನ್ನರ್ಧಕ್ಕೆ ಯಾಕೆ ನಾವು ಬೇಡುವ ಕೆಲಸ ಮಾಡಬೇಕು.

ಇನ್ನು ಮೇಲೆ ಏನೇ ಉಳಿದರೂ ನಮ್ಮದೆಂದು ಆಸೆ ಪಡಬಾರದೆಂದು ಅಪ್ಪ ಹೇಳಿದ ಮಾತು ಇಂದಿಗೂ ಮರೆತಿಲ್ಲ. ತೋಟದಿಂದ ಗುಡಿವರೆಗೆ ಎಲೆಪುಟ್ಟಿಯ ಹೊತ್ತು ತಂದು ಪಂಚಾಯ್ತಿ ನಡೆಸಿದ ದಿನವನ್ನು ನನಗೆ ಈಗಲೂ ಮರೆಯಲಾಗುತ್ತಿಲ್ಲ. ಸದ್ಯ ಪಂಚಾಯಿತಿಯವರ ದೃಷ್ಟಿಯಲ್ಲಾದರೂ ಅದೊಂದು ದೊಡ್ಡ ಅಪರಾಧವಲ್ಲವೆಂಬಂತೆ ಮಾತಾಡಿದ್ದು ನನಗೆ ಸಮಾಧಾನ ತಂದಿತ್ತು. ನಂತರ ರಜೆ ಮುಗಿದ ಮೇಲೆ ಸಾಗರಕ್ಕೆ ಹೋಗಿ, ನನ್ನ ಅಭ್ಯಾಸ ಮುಂದುವರಿಸಿದೆ.

ಅಕ್ಕ ಭಾವ ನನ್ನ ಓದು ಬರಹಕ್ಕೆ ಸಹಕಾರಿಯಾಗಿದ್ದರು. ಸರಿಯಾದ ಕುಟುಂಬ ಯೋಜನೆಯ ಅರಿವು ಇರದೆ, ನಾನು ಸಾಗರಕ್ಕೆ ಬಂದಾಗ ಇದ್ದ ಒಬ್ಬಳೇ ಮಗಳ ಜೊತೆ ಮತ್ತೆ ಮೂರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಜನಿಸಿ ಅವರ ಕುಟುಂಬ ಹಿಗ್ಗುತ್ತಾ ಹೋಯಿತು. ನಾನು ಮನೆಯವನಾಗಿ ಸಾಮಾನ್ಯ ಕೆಲಸಗಳಾದ ನೀರು ತರುವುದು, ಕಸ ಗುಡಿಸುವುದು, ನೆಲ ಒರೆಸುವುದು, ಬಟ್ಟೆ ಒಗೆಯುವುದು, ಅಂಗಡಿಯಿAದ ಮನೆಗೆ ಬೇಕಾದ ದಿನಸಿ ತರುವುದು ಎಲ್ಲ ಕೆಲಸ ಮಾಡುತ್ತಿದ್ದೆ. ಅದಕ್ಕಾಗಿ ಒಮ್ಮೊಮ್ಮೆ ಅಕ್ಕ ನನಗೆ ಬಕ್ಷೀಸು ಸಹ ನೀಡುತ್ತಿದ್ದಳು.

ಹೈಸ್ಕೂಲು ಅಭ್ಯಾಸ ಮಾಡುತ್ತಾ ಎಸ್.ಎಸ್.ಎಲ್.ಸಿ.ಗೆ ಬಂದಾಗ ಮನೆಯಲ್ಲಿ ಮಕ್ಕಳ ಗಲಾಟೆಯಿಂದ ಓದಲು ಕಷ್ಟ ಎನ್ನೋ ಕಾರಣದಿಂದ ಸಾಗರದಲ್ಲಿನ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುತ್ತಿದ್ದ ಹಾಸ್ಟೆಲ್‌ಗೆ ಸೇರಿಕೊಂಡೆ. ಆಗಿನ ಮುನಿಸಿಪಲ್ ಹೈಸ್ಕೂಲಿನಲ್ಲಿ ಹಾಸ್ಟೆಲ್‌ನಿಂದ ರ‍್ಮ ಶೇಖರ್ ಮತ್ತು ಅವರ ಅಣ್ಣ ಹನುಮಂತಪ್ಪ ಹಾಗೂ ಯಶವಂತಪ್ಪ ಒಟ್ಟು ನಾಲ್ಕು ಜನ ಎಸ್‌ಎಸ್‌ಎಲ್‌ಸಿ ತರಗತಿಗೆ ಹೋಗುತ್ತಿದ್ದೆವು. ಪರೀಕ್ಷೆ ಮುಗಿದು ರಿಸಲ್ಟ್ ಬಂದಾಗ ಸಾರ್ವಜನಿಕ ಹಾಸ್ಟೆಲ್‌ನಿಂದ ಪರೀಕ್ಷೆ ಬರೆದವರಲ್ಲಿ ನಾನೊಬ್ಬ ಮಾತ್ರ ಪಾಸಾಗಿದ್ದೆ. ಉಳಿದವರು ಒಂದೊಂದು ವಿಷಯದಲ್ಲಿ ಫೇಲಾಗಿದ್ದರು. ಮುನಿಸಿಪಲ್ ಹೈಸ್ಕೂಲಿನಲ್ಲಿ ಹಾಸ್ಟೆಲ್‌ನಿಂದ ಬರುತ್ತಿದ್ದ ಹುಡುಗರಲ್ಲಿ ನಾನೊಬ್ಬ ಪಾಸಾಗಿರುವ ಬಗ್ಗೆ ತಿಳಿದು ಸಂಸ್ಕೃತ ಅಧ್ಯಾಪಕರು ನನಗೆ ಕರೆದು ಪ್ರೋತ್ಸಾಹದ ಮಾತಾಡಿದ್ದನ್ನು ನಾನಿನ್ನೂ ಕೂಡ ಮರೆತಿಲ್ಲ.

ನಾನು ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಬಂದಾಗ ಊರಿನಲ್ಲಿದ್ದೆ. ನನ್ನ ರಿಜಿಸ್ಟ್ರೇಷನ್ ನಂ. 64960. ಆಗ ಫಲಿತಾಂಶಗಳು ದಿನಪತ್ರಿಕೆಗಳಲ್ಲಿ ಬರುತ್ತಿದ್ದವು. ಅಣ್ಣ ತಿಪ್ಪಣ್ಣ ಬೆಳಗಿನ ಜಾವ ಹೊಸಪೇಟೆಗೆ ವೀಳ್ಯದೆಲೆ ಮಾರಾಟ ಮಾಡಲು ಹೋಗುತ್ತಿದ್ದವನು ಹರಿಹರದಲ್ಲಿ ಪ್ರಜಾವಾಣಿ ಪೇಪರ್‌ನಲ್ಲಿ ನನ್ನ ಫಲಿತಾಂಶವನ್ನು ನೋಡಿ, ನನ್ನ ನಂಬರನ್ನು ಗುರ್ತು ಮಾಡಿ ನನ್ನೂರಿಗೆ ದಿನವೂ ಬರುತ್ತಿದ್ದ ಕ್ಷೌರಿಕ ನರಸಿಂಹಣ್ಣನ ಮುಖಾಂತರ ಪೇಪರ್ ಕಳಿಸಿದ್ದ. ನಾನು ಪೇಪರ್ ನೋಡಲು ಹರಿಹರಕ್ಕೆ ಹೋಗೋ ದಾರಿಯಲ್ಲಿ ನರಸಿಂಹಣ್ಣ ಸಿಕ್ಕು ನಾನು ಪಾಸಾಗಿರುವ ಬಗ್ಗೆ ನನ್ನ ಅಣ್ಣ ತಿಪ್ಪಣ್ಣ ನಂಬರ್ ಗುರ್ತು ಮಾಡಿ ಕೊಟ್ಟದ್ದನ್ನು ನನಗೆ ತೋರಿಸಿ ಸಂತೋಷಪಟ್ಟಿದ್ದ.

ಹನಗವಾಡಿಯಲ್ಲೇ ಹಲವು ವರ್ಷಗಳಿಂದ ಎಸ್.ಎಸ್.ಎಲ್.ಸಿಯಲ್ಲಿ ಸಂಶೋಧನೆ ಮಾಡುತ್ತಾ ಉಳಿದಿದ್ದ ಸ್ನೇಹಿತರೊಡನೆ ನಾನು ಎಸ್.ಎಸ್.ಎಲ್.ಸಿ. ಪರೀಕ್ಷೆ ಪಾಸಾದ ವಿಷಯ ಹೇಳಿದೆ. ಅರ‍್ಯಾರಿಗೂ ನಾನು ಪಾಸಾದ ಬಗ್ಗೆ ನಂಬಿಕೆ ಬರಲಿಲ್ಲ. ಅದರಲ್ಲಿ ಈಗಾಗಲೇ ನಾಲ್ಕು ವರ್ಷಗಳಿಂದ ಎಸ್.ಎಸ್.ಎಲ್.ಸಿ.ಯಲ್ಲೇ ಉಳಿದಿದ್ದ ಹಿರಿಯ ಮಿತ್ರರಲ್ಲೊಬ್ಬ `ಇಲ್ಲಪ್ಪಾ, ಪೇರ‍್ನಲ್ಲಿ ಬಂದಿರೋದು ನಂಬಕ್ಕಾಗಲ್ಲ, ಫಲಿತಾಂಶ ಸ್ಕೂಲಿಗೆ ಬರೋ ತನಕ ಏನು ಹೇಳುವುದಕ್ಕಾಗಲ್ಲ’ ಎಂದು ಬಾಣ ಬಿಟ್ಟು – ಪಾಸಾಗಿದ್ದೇನೆ ಎಂಬ ಅಸಾಧ್ಯ ಸಂತೋಷದ ಮೂಡಿನಲ್ಲಿದ್ದ ನನಗೆ ಅನುಮಾನದ ಕಿಚ್ಚು ಹಚ್ಚಿದ್ದ. ಆದರೂ ಇದ್ದ ಐದು ಮನೆಯ ಚಲುವಾದಿಗರ ಜೊತೆ ಊರ ಅನೇಕ ಜನರಿಗೆ ನಾನು ಎಸ್.ಎಸ್.ಎಲ್.ಸಿ. ಪಾಸಾದ ಸುದ್ದಿ ಸಂತೋಷ ನೀಡಿತ್ತು.

ನಮ್ಮೂರ ಹಿರಿಯ ರಾಜಕಾರಣಿ ಹೆಚ್. ಸಿದ್ದವೀರಪ್ಪ ನವರ ನಂತರ ಎಸ್.ಎಸ್.ಎಲ್.ಸಿ.ಯಲ್ಲಿ ಮೊದಲನೇ ಅಟೆಂಪ್ಟ್ನಲ್ಲಿ ಪಾಸಾದವನು ನಾನೇ ಎಂದು ಮಾತಾಡಿ ಕೊಳ್ಳುತ್ತಿದ್ದರು. ನಮ್ಮ ಚಿಕ್ಕಪ್ಪ ಮಹದೇವಪ್ಪನಂತೂ ತಮ್ಮ ಎರಡೂ ಕೈಮುಗಿದುಕೊಂಡು ‘ವಾಲಗದ ಸಮೇತ ವೀರಭದ್ರ ದೇವರಿಗೆ ಹಣ್ಣುಕಾಯಿ ಮಾಡಿಸೋಣ’ ಎಂದು ಸಂತೋಷದಲ್ಲಿ ಹೇಳಿದನಾದರೂ ಹಾಗೇನು ನಾನು ಮಾಡಲಿಲ್ಲ. ನನ್ನ ಎಸ್.ಎಸ್.ಎಲ್.ಸಿ. ವರೆಗಿನ ಓದಿನ ಜೊತೆ ಊರಲ್ಲಿ ರಜಾ ದಿನಗಳಲ್ಲಿ ಹಲವು ಕೆಲಸ ಮಾಡುತ್ತಿದ್ದೆ. ಚಲುವಾದಿಗಳಿಗೆ ವಿಶೇಷವಾದ ಬ್ಯಾಂಡ್‌ಸೆಟ್‌ವೊಂದನ್ನು ರೂಪಿಸಿಕೊಂಡಿದ್ದರು. ಊರ ದೇವರ ಚಾಕರಿಗೆಂದು ಅಪ್ಪ ಚಿಕ್ಕಪ್ಪಂದಿರು ಹಳೆಯ ಮೇಳ ಹೊಂದಿದ್ದರು. ಮೇಳದಲ್ಲಿ ಸುತಿ, (ಶ್ರುತಿ) ಸೊನಾಯಿ, (ಶಹನಾಯಿ) ಸಮಾಳ ಹಾಗೂ ಚೌಗಡ (ಚರ್ಮದ ವಾದ್ಯ) ಊರ ದೇವರ ಚಾಕರಿ ಜೊತೆಗೆ ಊರಲ್ಲಿನ ಮದುವೆ ಮತ್ತು ಸಾವುಗಳ ಸಮಯದಲ್ಲಿ ವಾದ್ಯಮಾಡಿ ಹಣ ಸಂಪಾದಿಸುತ್ತಿದ್ದರು. ಈ ಮ್ಯಾಳದಲ್ಲಿ ಹೋಗುವ ಸಂದರ್ಭದಲ್ಲಿ ಸಾಮೂಹಿಕವಾಗಿ ಎಲ್ಲರೂ ಶುಭ್ರವಾದ ಅಂಗಿ ಪಂಚೆ ಮತ್ತೊಂದು ಟವಲ್ ಜೊತೆಗೆ ತಮ್ಮ ಮ್ಯಾಳದ ಸಾಮಾನು ಮುಚ್ಚಲು ಬೇಕಾದ ಚೀಲಗಳನ್ನು ಅಚ್ಚುಕಟ್ಟಾಗಿ ಶುಚಿಗೊಳಿಸಿಕೊಂಡು ಹೋಗುತ್ತಿದ್ದರು. ಮದುವೆ ಸಮಯಗಳಲ್ಲಿ ಸಂಪಾದನೆ ಜೊತೆಗೆ ಖುಷಿಗಾಗಿ ಕೆಲವರು ನೀಡುವ ಹಣದ ರೂಪದ ಶಭಾಷ್‌ಗಿರಿಯಿಂದಾಗಿ ಸಾಮಾನ್ಯವಾಗಿ ಬಿರುಸಿನ ಹೊಲಮನಿ ಕೆಲಸಗಳು ರುಚಿಸುತ್ತಿರಲಿಲ್ಲ. ಆದರೆ ನಮ್ಮ ಊರಿನವರು ಇದಕ್ಕೆ ಅಪವಾದವೆಂಬಂತೆ ಹೊಲ ಮತ್ತು ತೋಟಗಳಲ್ಲಿ ಮುತುವರ್ಜಿಯಿಂದ ದುಡಿಯುತ್ತಿದ್ದರು. ಆದರೂ ನಮ್ಮ ಅಪ್ಪ ಅಗಾಗ `ಅರಿಶಿಣ ಕೂಳಿಗೋಗಿ ವರ್ಷದ ಕೂಳು ಕಳೆದು ಕೊಳ್ಳಬೇಡಿರೆಂದು’ ಎಚ್ಚರಿಸುತ್ತಿದ್ದರು.

ಊರಿನಲ್ಲಿ ಅಪ್ಪ ಚಿಕ್ಕಪ್ಪಂದಿರ ಮ್ಯಾಳ ಹಳೆಯದಾಯಿತೆಂದು ನಮ್ಮಣ್ಣನೂ ಸೇರಿದಂತೆ ಹೊಸಬರನ್ನು ಸೇರಿಸಿಕೊಂಡು ಹೊಸ ಬ್ಯಾಂಡ್ ಸೆಟ್ ತರಿಸಿ, ಅದಕ್ಕೊಬ್ಬ ಬ್ಯಾಂಡ್ ಮಾಸ್ತರರನ್ನು ನೇಮಿಸಿಕೊಂಡಿದ್ದರು. ಬರಿ ಐದಾರು ಜನರಿದ್ದ ಮ್ಯಾಳವು ಹೊಸ ಹುಡುಗರನ್ನೆಲ್ಲಾ ಸೇರಿಸಿ ಹತ್ತು ಜನರ ಗುಂಪೇ ಆಯಿತು. ನಾನು ಕೂಡ ತರಬೇತಿ ನೀಡುವ ಸಮಯದಲ್ಲಿ ಡೋಲು ಬಾರಿಸಲು ಪ್ರಯತ್ನಪಟ್ಟೆ. ಆದರೆ ಅದು ಯಾಕೋ ನನಗೆ ಕರಗತವಾಗಲಿಲ್ಲ. ಅದೇ ಸಮಯದಲ್ಲಿ ಅಪ್ಪ `ಏನು ಕಲಿತು ಏನು ಬಾರಿಸಿದರೂ ಕೆರ ಬಿಡುವಲ್ಲಿ ಕೂಳು ತಿನ್ನೋ ವಿದ್ಯೆ ಇದು. ನಿನಗೆ ಯಾಕೆ ಬೇಕು ಮಗನೇ’ ಎಂದು ನನ್ನ ಉತ್ಸಾಹಕ್ಕೆ ನೀರೆರಚಿದ್ದರು.

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಕಣ್ಣಪ್ಪ’ ಚಿತ್ರದ ವಿಶೇಷ ಪಾತ್ರದಲ್ಲಿ ಪ್ರಭಾಸ್‌ ನಟನೆ

Published

on

ಸುದ್ದಿದಿನ ಡೆಸ್ಕ್ : ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ‘ಕಣ್ಣಪ್ಪ’ ಚಿತ್ರಕ್ಕೆ ಇನ್ನೊಬ್ಬ ಸ್ಟಾರ್‌ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ರಭಾಸ್.

ಈಗಾಗಲೇ ಅಕ್ಷಯ್‌ ಕುಮಾರ್‌, ಮೋಹನ್‌ ಬಾಬು, ಮೋಹನ್‌ ಲಾಲ್‌, ಶರತ್‌ಕುಮಾರ್‌ ಮುಂತಾದವರು ‘ಕಣ್ಣಪ್ಪ’ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್‌ ತಾರಾಬಳಗಕ್ಕೆ ಪ್ರಭಾಸ್‌ ಅವರ ಎಂಟ್ರಿಯೂ ಆಗಿದೆ.

ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಖೇಶ‍್‍ ಕುಮಾರ್‌ ಸಿಂಗ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಕಣ್ಣಪ್ಪ’ ಚಿತ್ರದಲ್ಲಿ ಶಿವನ ಪರಮ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಲಿದ್ದಾರೆ. ಹಾಲಿವುಡ್‌ನ ಶೆಲ್ಡೋನ್‌ ಚಾವ್‌ ಅವರ ಛಾಯಾಗ್ರಹಣ, ಕೇಚ ಖಂಫಕದೀ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇದೇ 12 ರಂದು ದಾವಣಗೆರೆಯಲ್ಲಿ ಪಾರಂಪರಿಕ ಬೀಜೋತ್ಸವ; ಒಂದು ಸಾವಿರಕ್ಕೂ ಹೆಚ್ಚು ದೇಸಿ ಧಾನ್ಯಗಳ ಪ್ರದರ್ಶನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ : ದೇಸಿಯ ಬಿತ್ತನೆ ಬೀಜಗಳ ವೈವಿಧ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ 12ರಂದು ದಾವಣಗೆರೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ‘ಪಾರಂಪರಿಕ ಬೀಜೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ದೇವರಾಜ್ ಹೇಳಿದ್ದಾರೆ.

ಒಂದು ದಿನದ ಈ ಉತ್ಸವದಲ್ಲಿ ದೇಶದ ವಿವಿಧ ಭಾಗಗಳಿಂದ 30ಕ್ಕೂ ಹೆಚ್ಚಿನ ಬೀಜ ಸಂರಕ್ಷಕರ ತಂಡಗಳು ಪಾಲ್ಗೊಳ್ಳಲಿವೆ. ವಿವಿಧ ದೇಸಿ ತಳಿಗಳನ್ನು ಪ್ರದರ್ಶಿಸಲಾಗುತ್ತಿದ್ದು, ಒಂದು ಸಾವಿರಕ್ಕೂ ಹೆಚ್ಚಿನ ದೇಸಿ ಧಾನ್ಯ, ತರಕಾರಿ, ಕಾಳು, ಗೆಡ್ಡೆ ಗೆಣಸು, ಸೊಪ್ಪು ಮತ್ತು ಹಣ್ಣಿನ ತಳಿಗಳು ಪ್ರದರ್ಶನಗೊಳ್ಳಲಿವೆ.

ಗುಣಮಟ್ಟದ ಭತ್ತ, ಸಿರಿಧಾನ್ಯ ಮತ್ತು ತರಕಾರಿ ಬೀಜಗಳು ಮಾರಾಟಕ್ಕೆ ಸಿಗಲಿವೆ. ಕೆಂಪು ಬಣ್ಣದ ’ಸಿದ್ಧ ಹಲಸು’ ಮತ್ತು ಇತರೆ ಹಣ್ಣಿನ ಗಿಡಗಳು ಮಾರಾಟಕ್ಕೆ ಲಭ್ಯವಿರುತ್ತವೆ. ರೈತ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಭತ್ತದ ತಳಿಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯುವ ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಕೋಲಾರದ ಬೀಜಮಾತೆ ಪಾಪಮ್ಮ ಮತ್ತು ಮೈಸೂರಿನ ಬೀಜಮಾತೆ ಪದ್ಮಾವತಮ್ಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending