Connect with us

ದಿನದ ಸುದ್ದಿ

ಆಳುವ ಯೋಗ್ಯತೆ ಇಲ್ಲದಿದ್ದರೆ ಹೊರಟುಬಿಡಿ ಪ್ಲೀಸ್

Published

on

  • ನಾ ದಿವಾಕರ

ನಾವು ಎಂಥವರನ್ನು ಆಯ್ಕೆ ಮಾಡಿಬಿಟ್ಟಿದ್ದೇವೆ ? ಬಹುಶಃ ಈ ಪ್ರಶ್ನೆ ಪ್ರಜ್ಞೆ ಇರುವ ಪ್ರತಿಯೊಬ್ಬ ಪ್ರಜೆಯಲ್ಲೂ ಮೂಡಿರಲೇಬೇಕು. ಕಪ್ಪೆಚಿಪ್ಪುಗಳಲ್ಲಿ ನಿಷ್ಠೆ-ಭಕ್ತಿಯ ಮುಸುಕು ಧರಿಸಿ ಅವಿತಿಟ್ಟುಕೊಳ್ಳುವವರಲ್ಲಿ ಈ ಪ್ರಶ್ನೆ ಉದ್ಭವಿಸದಿರಬಹುದು. ಅಂಥವರು ತಮ್ಮ ಸ್ವ ಪ್ರಜ್ಞೆಯನ್ನು ಒತ್ತೆ ಇಟ್ಟ ನಂತರವೇ ಯಾವುದೋ ಒಂದು ಚಿಪ್ಪಿನಲ್ಲಿ ಅಡಗಿ ಕುಳಿತಿರುತ್ತಾರೆ.

ನಾವು ಸಾವಿನ ಸರದಾರರ ನಡುವೆ ಬದುಕಿದ್ದೇವೆ. ಸಾವಿನ ದಲ್ಲಾಳಿಗಳ ನಡುವೆ ಜೀವನ ಸಾಗಿಸಿದ್ದೇವೆ. ಈಗ ಸಾವುಗಳ ಮೇಳ ನಡೆಯುತ್ತಿದೆ. ಅಧಿಕಾರದ ಅಮಲಿನಲ್ಲಿರುವವರಿಗೆ ಈ ಮೇಳದಲ್ಲಿ ಹುಲ್ಲುಗಾವಲುಗಳು ಕಾಣಿಸುತ್ತಿವೆ. ಜೀವ, ಜೀವನ ಮತ್ತು ಜೀವನೋಪಾಯ ಈ ಮೂರರ ನಡುವೆ ಇರುವ ಸೂಕ್ಷ್ಮ ಸಂಬಂಧಗಳ ಪರಿವೆಯೇ ಇಲ್ಲದಂತಹ ಒಂದು ವಿಕೃತ ವ್ಯವಸ್ಥೆಯಲ್ಲಿ ಭಾರತ ಮತ್ತೊಮ್ಮೆ ಒಂದು ವೈರಾಣುವಿನೊಡನೆ ಬದುಕುತ್ತಿದೆ.

ಕಳೆದ ವರ್ಷದ ಕೆಲವು ಮಾತುಗಳನ್ನೊಮ್ಮೆ ಇಲ್ಲಿ ನೆನಪಿಸಿಕೊಳ್ಳೋಣ. “ ಕೊರೋನಾ ನಮ್ಮ ನಡುವೆ ಬಹಳ ವರ್ಷಗಳ ಕಾಲ ಇರುತ್ತದೆ. ನಾವು ಅದರೊಡನೆ ಬದುಕುವುದನ್ನು ಕಲಿಯಬೇಕು ” ಎಂದು ನಮ್ಮ ಅಧಿನಾಯಕರೇ ಆಜ್ಞಾಪಿಸಿದ್ದನ್ನು ಸ್ಮರಿಸೋಣ. ಕೊರೋನಾದೊಂದಿಗೆ ಬದುಕುವುದು ಎಂದರೇನು ? ನಿನಗೆ ಶಕ್ತಿ ಇದ್ದರೆ ಬದುಕು ಇಲ್ಲವಾದರೆ ನಿನ್ನ ದಾರಿ ನಿನಗೆ ಎಂದರ್ಥವೇ ? ಈ ವರ್ಷದ ಎರಡನೆಯ ಅಲೆಯ ಸಂದರ್ಭದಲ್ಲಿ ನೋಡಿದಾಗ ಹಾಗೆನಿಸುವುದು ಸಹಜ. ಏಕೆಂದರೆ ನಮ್ಮ ಸುತ್ತಲಿನ ಸರಣಿ ಸಾವುಗಳು ಪೀಠಾಧಿಪತಿಗಳನ್ನು ಅಲುಗಾಡಿಸುತ್ತಲೇ ಇಲ್ಲ.

ನಿತ್ಯ ಹೆಣ ಸುಡುವ ಕಾಯಕ ಮಾಡುವವನಲ್ಲಿ ಅತಿ ಹೆಚ್ಚು ಅಂತಃಕರಣ ಇರುತ್ತದೆ. ಆತನಿಗೆ ಸಾವು ತನ್ನ ನಿತ್ಯ ಬದುಕಿನ ಒಂದು ಭಾಗವಾಗಿರುತ್ತದೆ. ಪ್ರತಿಯೊಂದು ಸಾವಿಗೂ ಮಿಡಿಯುತ್ತಾ ಕುಳಿತರೆ ಅವನ ಬದುಕು ಬೇಗನೆ ಕೊನೆಗಾಣುತ್ತದೆ. ಇದು ಜೀವನ. ಸಾವಿನ ನಡುವೆ ಬದುಕುವುದು ಅವನ ಜೀವನೋಪಾಯ.

ಆದರೂ ಅವನಲ್ಲಿ ಮಡುಗಟ್ಟಿರುವ ಅಂತಃಕರಣ ಅವನಲ್ಲಿ ಜೀವ ಪ್ರೀತಿ ತುಂಬಿರುತ್ತದೆ. ಇದು ಜೀವ. ಜೀವನವಿಡೀ ಸಾವುಗಳ ನಡುವೆಯೇ ಬದುಕುವ ಈತನಿಗೆ ತನ್ನ ಕುಟುಂಬದಲ್ಲಿ ಒಬ್ಬರು ಮೃತಪಟ್ಟರೂ ಸಹಿಸಲಾಗದಷ್ಟು ದುಃಖ ಉಮ್ಮಳಿಸುತ್ತದೆ. ಎಷ್ಟೇ ಸಾವುಗಳನ್ನು ಕಂಡರೂ ಅಂತಃಕರಣ ಜೀವಂತವಾಗಿದ್ದರೆ ಮನುಜ ಪ್ರೀತಿ ಬತ್ತುವುದಿಲ್ಲ. ಇದು ಜೀವನ. ಈ ಮೂರರ ಸಮೀಕರಣವನ್ನು ಪರಿಪೂರ್ಣವಾಗಿ ಕಾಣಬಹುದಾದರೆ ಅದು ಮಸಣದಲ್ಲೇ.

ನಮ್ಮ ದೇಶದ ಸಾರಥ್ಯ ವಹಿಸಿರುವ ಅಧಿಕಾರದಾಹಿ ರಾಜಕೀಯ ನಾಯಕರಿಗಾಗಿ, ಈ ಶವಾಗಾರ ನಿರ್ವಹಿಸುವವರಿಂದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸುವ ಅನಿವಾರ್ಯತೆ ಈಗ ಕಾಣುತ್ತಿದೆ. ಏಕೆಂದರೆ ಇವರಿಗೆ ಜೀವದ ಬೆಲೆ ಗೊತ್ತಿಲ್ಲ. ಸಾವಿನ ಬೆಲೆಯೂ ಗೊತ್ತಿಲ್ಲ. ಜೀವಗಳನ್ನು ಹಿಸುಕಲು ಆಸ್ಪತ್ರೆಗಳಲ್ಲಿ ವ್ಯಾಪಾರ ಕುದುರಿಸಿ ಭ್ರೂಣ ಹತ್ಯೆ ಮಾಡುವ ದೇಶ ನಮ್ಮದು.

ಎಳೆಯ ಜೀವಗಳನ್ನು ಹೆಣ್ಣು ಎಂಬ ಕಾರಣಕ್ಕಾಗಿಯೇ ಹೊಸಕಿ ಹಾಕುವ ದೇಶ ನಮ್ಮದು. ಈಗ ಸಾವನ್ನೂ ಖರೀದಿಸಲಾಗುತ್ತಿದೆ. ಹಣ ಇದ್ದರೆ ಹೆಣಕ್ಕೂ ಜಾಗ ಎನ್ನುವಂತಹ ಪರಿಸ್ಥಿತಿ ಬಂದಿದೆ. ಈ ಪರಿಸ್ಥಿತಿಗೆ ಕೋವಿದ್ ಕಾರಣ ಅಲ್ಲ. ಕೋವಿದ್ ನಿಮಿತ್ತ. ಕಾರಣ ನಾವು ಪೋಷಿಸಿರುವ ವ್ಯವಸ್ಥೆ.

ಎಲ್ಲಿಂದ ಎಲ್ಲಿಯವರೆಗೆ ನೋಡಿದರೂ ಇವರಿಗೆ ಹಣ-ಅಧಿಕಾರ-ಲಾಭ ಇವಷ್ಟೇ ಕಾಣುತ್ತವೆ. ಅದು ಜೀವನಾಶಕ ಅಣುವಿದ್ಯುತ್ ಘಟಕವೋ, ಪರಿಸರ ನಾಶದ ಕಾರ್ಖಾನೆಯೋ ಇರಬಹುದು ಅಥವಾ ಜೀವ ರಕ್ಷಕ ಲಸಿಕೆ ಇರಬಹುದು. ಎರಡೂ ಮಾರುಕಟ್ಟೆಯ ಕೈಯ್ಯಲ್ಲಿದೆ. ನಾಶ ಮಾಡಲು ಬಂಡವಾಳ ಹೂಡುವ ವ್ಯವಸ್ಥೆಯಲ್ಲಿ ನಾವಿದ್ದೇವೆ.

ನಾಶವಾಗುತ್ತಿದ್ದರೂ, ಇರುವಷ್ಟು ದಿನದ ಹಿತವಲಯಕ್ಕಾಗಿ ಸಹಿಸಿಕೊಳ್ಳುವ ಮನಸ್ಥಿತಿಯನ್ನು ಈ ಮಾರುಕಟ್ಟೆಯೇ ಸೃಷ್ಟಿಸಿಬಿಟ್ಟಿದೆ. ಹಾಗಾಗಿ ಮುಳುಗಡೆಯ ಭೀತಿಯೂ ನಮ್ಮನ್ನು ಕಾಡುವುದಿಲ್ಲ. ವಿನಾಶದ ಆತಂಕವೂ ಕಾಡುವುದಿಲ್ಲ. ಇಂತಹ ಒಂದು ಬೃಹತ್ ಸಮಾಜವನ್ನೂ ಬಂಡವಾಳ ಮಾರುಕಟ್ಟೆ ಸೃಷ್ಟಿಸಿಬಿಟ್ಟಿದೆ.

ಈ ಮಾರುಕಟ್ಟೆಯ ನಡುವೆಯೇ ಕೊರೋನಾ ಜನಸಾಮಾನ್ಯರ ಜೀವದೊಡನೆ ಆಟವಾಡುತ್ತಿದೆ. ಇದರೊಂದಿಗೆ ಬದುಕುವುದನ್ನು ಕಲಿಯಿರಿ ಎಂದು ಹೇಳುವ ನಾಯಕರಿಗೆ ಬದುಕಿನ ಅರ್ಥವೇ ತಿಳಿದಿರುವುದಿಲ್ಲ. ಏಕೆಂದರೆ ಇವರಿಗೆ ಹಸಿವಿನ ಅರ್ಥ ತಿಳಿದಿರುವುದಿಲ್ಲ. ನೋವು, ವೇದನೆ ಇವೆಲ್ಲವೂ ಇವರಿಗೆ ಮತಪೆಟ್ಟಿಗೆಯ ಹಿಂದೆ ಅವಿತಿರುವ ಪಂಚವಾರ್ಷಿಕ ದರ್ಶನಗಳಂತೆ.

ಭಾರತ ವಿಶಾಲವಾದ ದೇಶವಲ್ಲವೇ, ಯಾವುದೋ ಒಂದು ಮೂಲೆಯಲ್ಲಿ ಹೆಣಸುಟ್ಟರೆ ಮತ್ತೊಂದು ಮೂಲೆಗೆ ತಿಳಿಯುವುದೇ ಇಲ್ಲ. ಹಾಗಾಗಿ ದಕ್ಷಿಣದಲ್ಲಿನ ಹೆಣದ ರಾಶಿ ದೆಹಲಿಯ ಸೆಂಟ್ರಲ್ ವಿಸ್ತಾ ಹಾದಿಗೆ ಅಡ್ಡಿಯಾಗುವುದಿಲ್ಲ. ದೆಹಲಿಯಲ್ಲೇ ಬೀಳುವ ಹೆಣದ ರಾಶಿಗಳು ಅಧಿಕಾರ ಪೀಠಗಳಿಗೆ ಗೋಚರಿಸುವುದೇ ಇಲ್ಲ.

ಮಸೂರಗಳನ್ನು ತೊಟ್ಟು ಬದುಕುತ್ತಿದ್ದೇವೆ. ಪ್ರಪಂಚ ನಮಗೆ ಬೇಕಾದಂತೆ ಕಾಣುತ್ತದೆ. ಅದು ಕಂಡಂತೆ ನಾವು ಅರ್ಥಮಾಡಿಕೊಳ್ಳುವ ಕಾಲ ಬಹುಶಃ ಮುಗಿದುಹೋಗಿದೆ. ಚಾಮರಾಜನಗರದಲ್ಲಿ 24 ಜೀವಗಳು ಬಲಿಯಾದವು. ಉಸಿರಾಡಲು ಸೌಲಭ್ಯ ಇಲ್ಲದೆ. ಇನ್ನೂ ರಾಜ್ಯದ ವಿವಿಧೆಡೆ ಆಮ್ಲಜನಕ ಇಲ್ಲದೆ ಸಾಯುತ್ತಲೇ ಇದ್ದಾರೆ.

ಈಗ ಆಮ್ಲಜನಕ ಮಾರುಕಟ್ಟೆಯ ಹಿಡಿತದಲ್ಲಿದೆ. ಉತ್ಪಾದಿಸುವವನೊಬ್ಬ, ಸಾಗಾಣಿಕೆ ಮಾಡುವವನೊಬ್ಬ, ವಿತರಿಸುವವ ಮತ್ತೊಬ್ಬ. ಮಾರುಕಟ್ಟೆ ಸರಕಿನಂತೆಯೇ ಈ ಕೃತಕ ಉಸಿರನ್ನೂ ಸರ್ಕಾರ ಪಡಿತರದಂತೆ ಸೀಮಿತವಾಗಿ ವಿತರಿಸುತ್ತದೆ. ತನಗೆ ಬೇಕಾದವರಿಗೆ ಹೆಚ್ಚು, ಬೇಡದವರಿಗೆ ಶೂನ್ಯ. ಹೀಗೆ , ಎಷ್ಟಾದರೂ ಪಳಗಿದ ಕೈಗಳಲ್ಲವೇ.

ದೆಹಲಿಯ ಪೀಠ, ಕರ್ನಾಟಕಕ್ಕೆ ಅಗತ್ಯಕ್ಕಿಂತಲೂ ಕಡಿಮೆ ಆಮ್ಲಜನಕ ನೀಡುತ್ತದೆ. ನ್ಯಾಯಾಂಗದ ಪ್ರವೇಶದಿಂದ ನಮಗೆ ಹಿಡಿದಿಟ್ಟ ಉಸಿರು ಲಭ್ಯವಾಗುತ್ತದೆ. ಪ್ರತಿನಿತ್ಯ ಸಾವಿರಾರು ಕೊರೋನಾ ಸೋಂಕಿತರು ಆಸ್ಪತ್ರೆಗಳ ಮುಂದೆ ಜೀವದಾನ ಬೇಡುತ್ತಿರುವಾಗ, ಇಂತಿಷ್ಟೇ ಆಮ್ಲಜನಕ ಬೇಕೆಂದು ಹೇಗೆ ನಿರೀಕ್ಷಿಸುವುದು ? ಹೆಚ್ಚಿಗೆ ನೀಡಿದರೆ ಏನಾಗುತ್ತದೆ ? ಇಲ್ಲಿ ಮಾರುಕಟ್ಟೆ ಪ್ರವೇಶಿಸುತ್ತದೆ.

ಅವಶ್ಯಕತೆಗಿಂತಲೂ ಕಡಿಮೆ ಸರಬರಾಜು ಇದ್ದರಷ್ಟೇ ಸರಕಿಗೆ ಬೆಲೆ, ಲಾಭ ಹೆಚ್ಚು. ಅಷ್ಟೇ. ಇದು #ಆತ್ಮನಿರ್ಭರ ಭಾರತದ ನಿಯಮ. ಮಾರುಕಟ್ಟೆ ಎಂದರೆ ಕ್ರೌರ್ಯದ ಪ್ರಾಪಂಚಿಕ ಸ್ವರೂಪವಷ್ಟೇ. ಅಲ್ಲಿ ಹಣ ಮತ್ತು ಹೆಣ ಎರಡೂ ವಿನಿಮಯದ ವಸ್ತುಗಳೇ ಆಗಿಬಿಡುತ್ತವೆ. ಹಾಗಾಗಿಯೇ ಹೆಣ ಸುಡಲೂ ಹಣ ನೀಡಬೇಕಾದ ಪರಿಸ್ಥಿತಿ.

ಜೀವರಕ್ಷಣೆಗಾಗಿ ಆಸ್ಪತ್ರೆಗೆ ಬರುವವರಿಗೆ ಹಾಸಿಗೆ ಒದಗಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಈ ಹಾಸಿಗೆಗಳೂ ಕಾಳಸಂತೆಯ ದಂಧೆಯ ಒಂದು ಭಾಗವಾಗುತ್ತದೆ. ಈ ದಂಧೆಯನ್ನು ಕೊನೆಗೊಳಿಸಲು ಒಂದು ಪುಟ್ಟ ಸೇನೆಯನ್ನೇ ಸಿದ್ಧಪಡಿಸುವ ಯುವ ಸಂಸದರಿಗೆ, ಜೀವರಕ್ಷಕ ತಾಣದಲ್ಲೂ ಅಸ್ಮಿತೆಗಳ ಹೊಸ ಲೋಕ ಕಂಡುಬಿಡುತ್ತದೆ.

ಹೆಣಗಳಲ್ಲಿ ಅಸ್ಮಿತೆಗಳನ್ನು ಹೆಕ್ಕಿ ತೆಗೆಯುವುದರಲ್ಲಿ ತರಬೇತಿ ಪಡೆದಿರುವವರಿದ್ದಾರೆ ನಮ್ಮ ನಡುವೆ. ಹಾಗಾಗಿ ಇಲ್ಲಿ ಹದಿನೇಳು ಮಂದಿಯನ್ನು ಹೆಕ್ಕಿ ತೆಗೆದಿದ್ದರಲ್ಲಿ ಅಚ್ಚರಿಯೇನಿಲ್ಲ. ಇಷ್ಟಕ್ಕೂ ದಂಧೆಕೋರರ ವಿಳಾಸ ತಿಳಿದಿದ್ದರೂ ತಲುಪಲಾಗದ ಸ್ಥಿತಿಯನ್ನು ಅಧಿಕಾರ ರಾಜಕಾರಣ ಸೃಷ್ಟಿಸಿರುತ್ತದೆ. ಹಾಗಾಗಿ ಕಾಡು ಹಂದಿಗಳಿಗೆ ಮುಕ್ತಿ. ಮುಗ್ಧ್ದ ಜಿಂಕೆಗಳ ಬಲಿ.

ಸರ್ಕಾರಗಳು ತಾವು ಕೊಟ್ಟ ಮಾತಿಗೆ ತಪ್ಪಲಿಲ್ಲ. ಕೊರೋನಾದೊಂದಿಗೆ ಬದುಕಲು ಕಲಿಯಿರಿ ಎಂಬ ಮನದ ಮಾತು ಇನ್ನೂ ಅಪ್ರಸ್ತುತವಾಗಿಲ್ಲ. ಹಾಗಾಗಿ ಕೊರೋನಾ ನಡುವೆಯೇ ಚುನಾವಣೆಗಳು, ನಡೆದಿವೆ, ಸಮಾವೇಶಗಳು ನಡೆದಿವೆ, ಕುಂಭಮೇಳಗಳೂ ನಡೆದಿವೆ.

ಇವುಗಳ ನಡುವೆಯೇ ಅವರು ಬದುಕು ಕಂಡುಕೊಂಡಿದ್ದಾರೆ. ಅವರ ಬದುಕಿಗೆ ಇವೆಲ್ಲವೂ ಅನಿವಾರ್ಯ. ಆದರೆ ನಮ್ಮ ಬದುಕಿಗೆ ಇವು ಮಾರಕ. ಅವರು ಬದುಕುತ್ತಿಲ್ಲವೇ ? ಅದೂ ಒಂದು ಬದುಕೇ ಎಂದು ಕೇಳುವುದು ಬೇಡ. ಉತ್ತರ ಶೋಧಿಸಲು ಬಹಳ ಶ್ರಮಪಡಬೇಕಾಗುತ್ತದೆ. ಆದರೂ ಅವರು ನಿರ್ಲಿಪ್ತವಾಗಿ ಬದುಕುತ್ತಾರೆ.

ಕೊರೋನಾ ಹರಡಬಾರದು ಎಂದರೆ ನಾವು ಲಾಕ್‍ಡೌನ್ ಮಾಡುತ್ತೇವೆ ಎನ್ನುತ್ತಾರೆ. ಲಾಕ್‍ಡೌನ್ ಜನರನ್ನು ನಿಯಂತ್ರಿಸುತ್ತದೆ. ಕೊರೋನಾ ಓಡಾಡುತ್ತಲೇ ಇರುತ್ತದೆ. ಸರಕಾರಗಳು ನೀಡುವ ನಿಗದಿತ ಅವಧಿಯ ವಿನಾಯತಿಗಳು ನಮಗೆ ಅನ್ವಯ. ವೈರಾಣು ಸದಾ ಜೀವಂತವಾಗಿಯೇ ಇರುತ್ತದೆ.

ಆಶ್ರಯ ತಾಣಗಳನ್ನು ಅರಸುತ್ತಲೇ ಇರುತ್ತದೆ. ಹಾಗಾಗಿ ನಿಮ್ಮನ್ನು ನೀವು ಲಾಕ್ ಡೌನ್ ಮಾಡಿಕೊಂಡರೆ ಅದು ಅನಾಥವಾಗಿಬಿಡುತ್ತದೆ. ಇದು ನಮ್ಮ ಸರ್ಕಾರಗಳ ವಾದ. ಹಾಗಾಗಿಯೇ ಲಾಕ್ ಡೌನ್ ಘೋಷಿಸುವಾಗ ಸರ್ಕಾರಗಳು ಏನು ಸಿಗುತ್ತದೆ ಏನು ಸಿಗುವುದಿಲ್ಲ ಎಂದಷ್ಟೇ ಹೇಳುತ್ತವೆ. ನಿಮಗೇನು ಬೇಕು ಎಂದು ಯಾರನ್ನಾದರೂ ಕೇಳಿದೆಯೇ ?

ಒಮ್ಮೆ ಕೇಳಿಬಿಟ್ಟರೆ ಅವರ ಅಧಿಕಾರ ಪೀಠಗಳು ಅಲುಗಾಡಿಬಿಡುತ್ತವೆ. ಏಕೆಂದರೆ ನಿಮ್ಮ ಜೀವನೋಪಾಯದ ಅವಶ್ಯಕತೆಗಳನ್ನು ಒದಗಿಸುವ ಕೀಲಿ ಕೈ ಮಾರುಕಟ್ಟೆಯ ಬಳಿ ಇರುತ್ತದೆ. ಕೃತಕ ಉಸಿರು, ಆಮ್ಲಜನಕವೇ ಕಂಪನಿಯ ಮುದ್ರೆಯನ್ನು ಹೊತ್ತು ಬರುತ್ತದೆ. ಜೀವ ರಕ್ಷಕ ಲಸಿಕೆಗೆ ಜಿಎಸ್‍ಟಿ ನೀಡಿ ಖರೀದಿಸಬೇಕಾಗುತ್ತದೆ.

ಗಾಳಿಯನ್ನು ಹಿಡಿದಿಡಲು ಆಗುವುದಿಲ್ಲ. ಆದರೆ ಉಸಿರನ್ನು ಹಿಡಿದಿಡಬಹುದು. ಈಗ ಉಸಿರು ಮಾರಾಟಕ್ಕಿದೆ. ಈ ಉಸಿರು ಒಂದು ಸಮಾಜದ ಉಸಿರುಗಟ್ಟಿಸುತ್ತಿದೆ. ಆದರೂ ಆಮ್ಲಜನಕದ ಸರಬರಾಜು, ಪೂರೈಕೆ, ಉತ್ಪಾದನೆ, ವಿತರಣೆ ಇವೆಲ್ಲವೂ ಮುಂಬರುವ ಚುನಾವಣೆಗಳಿಗೆ ನೆರವಾಗುವಂತಹ ಪ್ರಚಾರ ಸಾಮಗ್ರಿಗಳ ಕಚ್ಚಾವಸ್ತುಗಳಾಗಿಬಿಟ್ಟಿವೆ.

ಆದರೆ ನಮ್ಮ ಸರ್ಕಾರಗಳ ಉಸಿರಾಟಕ್ಕೇನೂ ತೊಂದರೆಯಾಗಿಲ್ಲ. ಹೊಸ ಹವೆ, ಹೊಸ ವಾತಾವರಣ, ಹೊಸ ಪರಿಸರ, ಸ್ವಚ್ಚಂದ ಆಹ್ಲಾದಕರ ಬದುಕಿಗಾಗಿಯೇ, #ಆತ್ಮನಿರ್ಭರ ಭಾರತದ ಜನಪ್ರತಿನಿಧಿಗಳಿಗಾಗಿ ಒಂದು ಭವ್ಯ ಸೌಧದ ನಿರ್ಮಾಣ ಸುಡುವ ಹೆಣಗಳ ರಾಶಿಯ ನಡುವೆಯೇ ಆರಂಭವಾಗಿದೆ.

ನಾವೇ ನೀಡುವ ತೆರಿಗೆಯ ಹಣದಲ್ಲಿ ಈ ಐಷಾರಾಮಿ ಹಿತವಲಯದ ಸೃಷ್ಟಿಯಾಗುತ್ತಿದೆ. ದೇಶದೆಲ್ಲೆಡೆ ಆಮ್ಲಜನಕಕ್ಕಾಗಿ ಹಾಹಾಕಾರ ಕೇಳಿಬರುತ್ತಿದೆ. ಈ ಭವ್ಯ ಸೌಧದ ನಿರ್ಮಾಣಕ್ಕಾಗಿಯೇ ನೂರಾರು ಹಸಿರೊಡಲುಗಳು ಅವಸಾನ ಕಾಣುತ್ತಿವೆ. ನೆಲಕ್ಕುರುಳಿದ ಮರದ ತುಂಡುಗಳು ಹೆಣ ಸುಡಲು ನೆರವಾಗಬಹುದು.

ಇದನ್ನೂ ಓದಿ | ದುಡಿಯುವ ಮಹಿಳೆಯರ ಹೋರಾಟಕ್ಕೆ ಶಕ್ತಿ ತುಂಬಿದ್ದ ಕಾಂII ಹೆಚ್‌ಕೆಆರ್

ಇಂತಹ ಒಂದು ಮಾರುಕಟ್ಟೆ ಕ್ರೌರ್ಯದ ನಡುವೆ ನಾವು ದಿನನಿತ್ಯ ನಮ್ಮ ಆಪ್ತರನ್ನು ಕಳೆದುಕೊಳ್ಳುತ್ತಿದ್ದೇವೆ. ನಾವೇ ಪ್ರಜ್ಞಾಪೂರ್ವಕವಾಗಿ ಆಯ್ಕೆ ಮಾಡಿದ ನಮ್ಮ ಪ್ರತಿನಿಧಿಗಳು ತಮ್ಮ ಕುದಿಯುತ್ತಿರುವ ರಕ್ತವನ್ನು ಸಹಿಸಿಕೊಂಡು (ಇಂದಿನ ಪತ್ರಿಕೆಗಳನ್ನು ನೋಡಿ ಮೈಸೂರು ಸುತ್ತಲಿನ ಶಾಸಕರ ರಕ್ತ ಕುದಿಯುತ್ತಿರುವ ವರದಿಯಾಗಿದೆ) ತಮ್ಮ ಮತದಾರ ಪ್ರಭುಗಳ ರಕ್ಷಣೆಗೆ ಮುಂದಾಗುತ್ತಿದ್ದಾರೆ. ಆಮ್ಲಜನಕದ ಕೊರತೆಯಿಂದ ಪ್ರಾಣಕಳೆದುಕೊಳ್ಳುತ್ತಿರುವ ಅಮಾಯಕ ಜೀವಗಳಿಗಿಂತಲೂ ಈ ಪ್ರತಿನಿಧಿಗಳ ಪ್ರತಿಷ್ಟೆ, ಸಮ್ಮಾನ ಮತ್ತು ರಾಜಕೀಯ ಹಿತಾಸಕ್ತಿಗಳು ಮೇಲುಗೈ ಸಾಧಿಸುತ್ತಿರುವುದು ಈ ದೇಶದ ದುರಂತ.

ಪ್ರಜಾಪ್ರಭುತ್ವದ ಕನಿಷ್ಠ ಪ್ರಜ್ಞೆ ಇರುವ ಒಬ್ಬ ವ್ಯಕ್ತಿ ಇಂದು ದೇಶದ ಮುಂದಾಳತ್ವ ವಹಿಸಿದ್ದರೂ ಒಂದು ರಾಷ್ಟ್ರೀಯ ಸರ್ಕಾರದ ರಚನೆಯಾಗುತ್ತಿತ್ತು. ಸರ್ವಪಕ್ಷಗಳನ್ನೊಳಗೊಂಡ ಚಿಂತನಾ ವೇದಿಕೆ ಇರುತ್ತಿತ್ತು. ವೈರಾಣು ತಜ್ಞರು, ವಿಜ್ಞಾನಿಗಳು, ವೈದ್ಯಕೀಯ ತಜ್ಞರು ಮತ್ತು ಅನುಭವಿ ಸಾರ್ವಜನಿಕ ವ್ಯಕ್ತಿಗಳನ್ನೊಳಗೊಂಡ ರಾಷ್ಟ್ರಮಟ್ಟದ ವೇದಿಕೆ ರೂಪುಗೊಳ್ಳುತ್ತಿತ್ತು.

ಪ್ರತಿರಾಜ್ಯದಲ್ಲೂ , ಜಿಲ್ಲೆಯಲ್ಲೂ ಇದರ ಶಾಖೆಗಳಿರುತ್ತಿದ್ದವು. ಜನಸಾಮಾನ್ಯರ ಜೀವನ ಮತ್ತು ಬದುಕು ಇವೆರಡನ್ನೂ ಅರ್ಥಮಾಡಿಕೊಳ್ಳುವ ನಾಯಕರು ಇದ್ದಿದ್ದರೆ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುತ್ತಿತ್ತು. ಕೊರೋನಾ ಪೀಡಿತರಿಗೆ ಉಚಿತ ವೈದ್ಯಕೀಯ ನೆರವು ದೊರೆಯುತ್ತಿತ್ತು.

ಆದರೆ ಈ ಕಾಲ್ಪನಿಕ ರಾಜ್ಯದಿಂದ ಹೊರಬಂದೇ ನಾವು ಯೋಚಿಸಬೇಕಿದೆ. ಏಕೆಂದರೆ ಜೀವನೋಪಾಯ ವ್ಯಕ್ತಿನಿಷ್ಟ ವಿಚಾರ. ಜೀವನ ವಸ್ತುನಿಷ್ಟ ವಿಚಾರ. ನಾವು ಬದುಕುತ್ತಿರುವುದು ಒಂದು ಪ್ರಜಾಪ್ರಭುತ್ವದಲ್ಲೇ ಆದರೂ ಇಲ್ಲಿ ಪ್ರಜೆಗಳಿಗೂ ಪ್ರಭುತ್ವಕ್ಕೂ ಇರುವ ಅಂತರ ಅಪಾರ ಎನ್ನುವುದನ್ನು ಕೋವಿದ್ 19 ಸಾಬೀತುಪಡಿಸಿದೆ.

ಇಲ್ಲಿ ನಾವೇ ಆಯ್ಕೆ ಮಾಡುವ ಸರ್ಕಾರಗಳು ಜೀವನ ನಡೆಸಲು ಹಾದಿ ಸುಗಮಗೊಳಿಸುತ್ತವೆ. ಜೀವನ ಕಲ್ಪಿಸಿಕೊಳ್ಳುವುದು ಪ್ರಜೆಗಳ ಆಯ್ಕೆ. ಜೀವನೋಪಾಯ ಮಾರುಕಟ್ಟೆಗೆ ಸಂಬಂಧಿಸಿದ ವಿಚಾರ. ಬದುಕು ಕಟ್ಟಿಕೊಳ್ಳಲು ಈ ಮಾರುಕಟ್ಟೆಯ ಯಾವುದೋ ಒಂದು ಜಗುಲಿಯನ್ನು ಆಶ್ರಯಿಸಬೇಕು.

ಇದನ್ನೇ ರಥಸಾರಥ್ಯ ವಹಿಸಿದವರೂ ಕಳೆದ ವರ್ಷ ಹೇಳಿರುವುದು. ಬದುಕುವುದನ್ನು ಕಲಿಯಿರಿ, ಕೊರೋನಾದೊಂದಿಗೆ ಬದುಕುವುದನ್ನು ಕಲಿಯಿರಿ. ಅಂದರೆ ಕೊರೋನಾ ಕೊಲ್ಲುತ್ತದೆ ಹಾಗಾಗಿ ಸಾವುಗಳೊಂದಿಗೆ ಬದುಕುವುದನ್ನೂ ಕಲಿಯಿರಿ. ಕೊರೋನಾ ಉಸಿರುಗಟ್ಟಿಸುತ್ತದೆ ಹಾಗಾಗಿ ಆಮ್ಲಜನಕ ಇಲ್ಲದೆ ಸಾಯುತ್ತಾರೆ ಈ ಸಾವುಗಳೊಡನೆ ಬದುಕುವುದನ್ನೂ ಕಲಿಯಿರಿ.

ಕೊರೋನಾ ನಿಮ್ಮ ಜೀವನೋಪಾಯಗಳನ್ನು ಕಸಿದುಕೊಳ್ಳುತ್ತದೆ ಹೇಗೋ ಇದ್ದುದರಲ್ಲಿ ಬದುಕುವುದನ್ನು ಕಲಿಯಿರಿ. ಹಸಿದವರಿಗೆ ಉಪನ್ಯಾಸ ಹೇಳುವುದು ಎಂದರೆ ಇದನ್ನೇ. ಭಾರತಕ್ಕೆ ಇದೇನೂ ಹೊಸತಲ್ಲ. ಶತಮಾನಗಳಿಂದ ಇದನ್ನೇ ಮಾಡುತ್ತಾ ಬಂದಿದ್ದೇವೆ. ಈಗ ನಮಗೆ ನಾವೇ ಹೇಳಿಕೊಳ್ಳುತ್ತಿದ್ದೇವೆ ಏಕೆಂದರೆ ಇಂದು ನಮಗೆ ನಾವೇ ಅರ್ಪಿಸಿಕೊಂಡ ಸಂವಿಧಾನದಡಿ ನಮಗೆ ನಾವೇ ಆಯ್ಕೆ ಮಾಡಿಕೊಂಡವರ ಆಡಳಿತದಲ್ಲಿ ನಾವು ನಮ್ಮ ಬದುಕು ಕಂಡುಕೊಳ್ಳುತ್ತಿದ್ದೇವೆ. ಸಾಧ್ಯವಾದರೆ ಹೇಳೋಣ, ಸ್ವಾಮಿ ನಿಮ್ಮಿಂದ ಆಗದಿದ್ದರೆ ಹೊರಟುಬಿಡಿ,,,,,,,,

ಕೃಪೆ : ಬೆವರಹನಿ ಪತ್ರಿಕೆ ತುಮಕೂರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending