ನೆಲದನಿ
ಮೋಕ್ಷ ಹುಡುಕುತ್ತ ಪ್ರೀತಿಯ ಬಂಧನದಲ್ಲಿ..!
- ಪಿ. ಲಂಕೇಶ್
ಈತ ನನ್ನನ್ನು ಚಕಿತಗೊಳಿಸುತ್ತಾನೆ. ಮತ್ತೆ ಮತ್ತೆ ನನ್ನ ಮನಸ್ಸಿಗೆ ಬಂದು ಹೊಸ ಹೊಸ ತಿಳಿವಳಿಕೆಗೆ ಕಾರಣವಾಗುವ ಈತನನ್ನು ನಿಮ್ಮೊಂದಿಗೆ ನೆನೆಯಲು ಯತ್ನಿಸುತ್ತೇನೆ. ಈತ ಪ್ರಖ್ಯಾತ ಗುರುವಾಗಿದ್ದ; ಸಾವಿರಾರು ಮೈಲುಗಳಿಂದ ದೊರೆಗಳು, ಸೇನಾನಿಗಳು ಬಂದು ಈತನನ್ನು ನೋಡಿ ಗೌರವಿಸುತ್ತಿದ್ದರು. ಈತ ಜನಕ್ಕೆ ಉಪದೇಶ ನೀಡುತ್ತಿದ್ದ.
ಹಾಗೆ ನೋಡಿದರೆ ಈತನಿಗೆ ದಿನದ ವೇಳೆಯೇ ಸಾಕಾಗುತ್ತಿರಲಿಲ್ಲ. ಆದರೆ ಎಂದೋ ನೋಡಿದ ಸಾಮಾನ್ಯನೊಬ್ಬನಿಗೆ ಕಾಯಿಲೆಯಾದರೆ, ಯಾವುದೇ ತೊಂದರೆಯಾದರೆ ಈತ ಹತ್ತಾರು ಮೈಲಿ ನಡೆದುಹೋಗಿ ಆತನನ್ನು ಕಂಡು ಆರೈಕೆ ಮಾಡುತ್ತಿದ್ದ; ಅವನ ತೊಂದರೆಗಳಿಗೆ ಪರಿಹಾರ ಹುಡುಕುತ್ತಿದ್ದ. ಒಮ್ಮೆ ಈತನ ಆಶ್ರಮದ ಮುದಿ ರೋಗಿಯೊಬ್ಬನನ್ನು ಯಾರೂ ಸರಿಯಾಗಿ ನೋಡಿಕೊಳ್ಳಲಿಲ್ಲ. ತನ್ನ ಕೆಲಸಗಳ ನಡುವೆ ಆ ಕಡೆ ಗಮನ ಹರಿಸದಿದ್ದಕ್ಕೆ ಗುರುವಿಗೆ ತನ್ನ ಬಗ್ಗೆ ಬೇಸರವಾಯಿತು. ಆ ಮುದಿ ರೋಗಿಯನ್ನು ತಾನೇ ಉಪಚರಿಸಿ ನೋಡಿಕೊಂಡ. ಅದು ತನ್ನೆಲ್ಲಾ ಉಪದೇಶಕ್ಕಿಂತ ಮುಖ್ಯವಾದದ್ದೆಂದು ಈ ಮನುಷ್ಯ ತಿಳಿದಿದ್ದ.
ನೀವು ಊಹಿಸಿರಬಹುದಾದಂತೆ ಈತ ಗೌತಮ. ಈತನ ಬಗ್ಗೆ ಕತೆಗಳನ್ನು ಕೇಳುತ್ತಾ ಈತನ ಉಪದೇಶಗಳನ್ನು ಓದುತ್ತಾ ನಾವೆಲ್ಲ ಈ ಗೌತಮ ಅಥವಾ ಸಿದ್ಧಾರ್ಥ ಎಂಬ ಮನುಷ್ಯನ ಬಗ್ಗೆ ದಡ್ಡುಗಟ್ಟಿದ್ದೇವೆ; ಈತ ಇನ್ನೊಬ್ಬ ಮಹಾತ್ಮ ಎಂದು ತಿಳಿದು ನಿರ್ಲಕ್ಷಿಸಲು ಬೇಕಾದ ಗೌರವವನ್ನು ಮಾತ್ರ ಇಟ್ಟುಕೊಂಡು ಸುಮ್ಮನಾಗುತ್ತೇವೆ. ಆದರೆ ಕೇವಲ ಮನುಷ್ಯನಾಗಿ ಈತನ ನಡವಳಿಕೆ ಅಚ್ಚರಿ ಹುಟ್ಟಿಸುತ್ತದೆ; ನನ್ನ ಅಚ್ಚರಿಯನ್ನು ಮಾತ್ರ ಇಲ್ಲಿ ವಿವರಿಸುತ್ತೇನೆ.
ವೈಶಾಖ ಶುದ್ಧ ಪೂರ್ಣಿಮೆಯಂದು ಚೆನ್ನನೊಂದಿಗೆ ಈತ ಅರಮನೆಯನ್ನು ಬಿಟ್ಟಿದ್ದು ಓದಿದ್ದೇವೆ. ಹೀಗೆ ಅರಮನೆ, ಅದರ ಸಂಪತ್ತು ಸುಖವನ್ನೆಲ್ಲ ಬಿಟ್ಟು ಹೊರಟಿದ್ದು ಈತನ ಉನ್ನತ ಗುಣ ತೋರುತ್ತದೆ ಎಂದು ಹೇಳುತ್ತಾರೆ. ಆದರೆ ನನಗೆ ಈ ಗೌತಮನ ಸಾಮಾನ್ಯತೆಯೇ ಇಲ್ಲಿ ಕಂಡುಬರುತ್ತದೆ. ಯಾಕೆಂದರೆ ಈತ ಹುಟ್ಟಿದಾಗಲೇ ಈತನ ತಂದೆ ಶುದ್ಧೋದನನ ಪುರೋಹಿತರು ಗೌತಮನೊಬ್ಬ ಮಹಾತ್ಮನಾಗುವ ಬಗ್ಗೆ, ಮಹಾನ್ ಗುರುವಾಗುವ ಬಗ್ಗೆ ಹೇಳಿದ್ದರಂತೆ; ಒಳಗೊಳಗೇ ಗೌತಮನ ಬಗ್ಗೆ ಭಕ್ತಿಯನ್ನಿಟ್ಟುಕೊಂಡಿದ್ದ ದೊರೆ ಗೌತಮ ಸಂನ್ಯಾಸಿಯಾದಾನೆಂದು ಹೆದರಿ ಆತನನ್ನು ರಾಜಭೋಗದಲ್ಲಿ ಇಟ್ಟಿದ್ದನಂತೆ.
ಇದು ನಿಜವಾದರೆ ಗೌತಮ ಅರಮನೆ ಬಿಡುವ ಅಗತ್ಯವಿರಲಿಲ್ಲ; ಆತನು ಮಹಾನ್ ಗುರುವಾಗುವುದು ಮೊದಲೇ ನಿಶ್ಚಿತವಾಗಿದ್ದರೆ ಅದಕ್ಕಾಗಿ ಗೌತಮ ಪ್ರಯತ್ನಿಸಬೇಕಾದ ಅಗತ್ಯವಿರಲಿಲ್ಲ. ಇಲ್ಲಿ ಗೌತಮನ ಸಹಜ ಕುತೂಹಲ, ಮನುಕುಲದ ದುರಂತದ ಬಗ್ಗೆ ಕಾಳಜಿ ಕಂಡುಬರುತ್ತದೆ. ಅರಮನೆ ಏನೂ ಗೊತ್ತಿಲ್ಲದ, ಏನೂ ಗೊತ್ತಾಗದಂತೆ ಇರುವ ಜಾಗವಾಗುತ್ತದೆ. ಆತ ಅರಿವು ಹುಡುಕಿ ಹೊರಡುತ್ತಾನೆ. ಇಲ್ಲಿ ಕೂಡ ಒಂದು ಪ್ರಶ್ನೆ ಏಳುತ್ತದೆ, ಗೌತಮ ದೊರೆಯಾಗಿ ಮನುಷ್ಯರಿಗೆ ನೆರವಾಗಲು ಆಗುತ್ತಿರಲಿಲ್ಲವೇ? ಆದರೆ ದೊರೆ ಮನುಷ್ಯರ ಯಾವುದೇ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಲು ಆಗುವುದಿಲ್ಲ ಎಂಬುದು ಗೌತಮನಿಗೆ ಗೊತ್ತಾಗಿದೆ. ರೋಗ, ಮುಪ್ಪು , ಸಾವುಗಳಿಗೆ ಉತ್ತರ ಹುಡುಕಿ ಹೊರಟ ಗೌತಮನ ದಾರಿ ಮತ್ತು ಮುಟ್ಟಿದ ಗುರಿ ವಿಚಿತ್ರವಾದ ಅರ್ಥಗಳಿಂದ ಕೂಡಿದೆ.
ಗೌತಮ ಅರಮನೆಯನ್ನು ಬಿಟ್ಟವನು ಕಾಡಿಗೆ ಹೋಗಲಿಲ್ಲ; ಮನುಷ್ಯರಲ್ಲಿಗೆ ಹೋದ. ಅನೇಕ ವಿದ್ವಾಂಸರನ್ನು, ವಿದ್ಯಾಲಯಗಳನ್ನು ಎಡತಾಕಿದ. ಅವರೊಂದಿಗೆ ಚರ್ಚಿಸಿ ಕಲಿಯಲು ಯತ್ನಿಸಿದ. ಅಲ್ಲಿಂದ ಅಧ್ಯಾತ್ಮದ ಗುರುಗಳನ್ನು ಕಂಡು ವಿನಯಪೂರ್ವಕವಾಗಿ ಕಲಿಯಲು ಯತ್ನಿಸಿದ. ಅವರಲ್ಲಿ ಕಲಿತಾಗ ಅವರನ್ನು “ಮುಂದೇನು?” ಎಂದು ಕೇಳಿದ.
ಆ ಅಧ್ಯಾತ್ಮದ ಗುರುಗಳು ತಮ್ಮ ಸಾಧನೆ ಅಷ್ಟಕ್ಕೇ ಮುಗಿಯಿತು, ಗೌತಮ ಈಗ ಅವರ ಸಮಾನ ಎಂದು ಹೇಳಿದರು. ಗೌತಮನಿಗೆ ತೃಪ್ತಿಯಾಗಲಿಲ್ಲ. ಮತ್ತೆ ಹುಡುಕಿ ಹೊರಟ. ಯಾರೋ ಅವನಿಗೆ ಸತ್ಯವನ್ನು ಕಾಣಲು ದೇಹದಂಡನೆಯ ಅಗತ್ಯದ ಬಗ್ಗೆ ಹೇಳಿದರು. ಊಟ, ನಿದ್ರೆಗಳನ್ನು ತ್ಯಜಿಸಿ ಹಠವಾದಿಯಂತೆ ಧ್ಯಾನಿಸತೊಡಗಿದ. ಅನೇಕ ವರ್ಷಗಳ ಬಳಿಕ ಗೌತಮ ತನ್ನ ಈ ಹಂತದ ಬಗ್ಗೆ ತಣ್ಣಗೆ, ನಸು ಹಾಸ್ಯದಿಂದ, ವಿಷಾದದಿಂದ ಹೇಳುತ್ತಿದ್ದ:
“ಆ ದಿನಗಳಲ್ಲಿ ನನ್ನ ಕೈಕಾಲುಗಳೆಲ್ಲ ಒಣಗಿದ ಬಳ್ಳಿಯಂತೆ, ಗಂಟುಗಂಟಾದ ಪುರಲೆಗಳಂತೆ ಆಗಿದ್ದವು; ನನ್ನ ಪುಷ್ಠ ಎಮ್ಮೆಯ ಗೊರಸಿನಂತೆ ಆಗಿತ್ತು; ನನ್ನ ಬೆನ್ನುಹುರಿ ಬಾಗಿದ ಚೆಂಡಿನ ಸರದಂತಾಗಿತ್ತು; ನನ್ನ ಎದೆಯ ಮೂಳೆಗಳು ಪಾಳುಬಿದ್ದ ಗುಡಿಸಲಿನಂತಾಗಿದ್ದವು; ನನ್ನ ಕಣ್ಣುಗಳು ತಮ್ಮ ಗುಳಿಯಲ್ಲಿ ಆಳವಾದ ಬಾವಿಯ ನೀರಿನಂತೆ ಕಾಣುತ್ತಿದ್ದವು; ನನ್ನ ತಲೆ ಬಿಸಿಲುಗಾಳಿಗೆ ಒಣಗಿದ ಸೋರೆಕಾಯಿಯಂತೆ ಆಗಿತ್ತು… ನನ್ನ ಹೊಟ್ಟೆಯ ಚರ್ಮ ಬೆನ್ನಿಗೆ ಅಂಟಿಕೊಂಡಿತ್ತು; ಬಹಿರ್ದೆಸೆಗೆ ಹೋಗಿ ಕೂತರೆ ಮುಖದ ಮೇಲೆ ನೆಲಕ್ಕೆ ಬಿದ್ದುಬಿಡುತ್ತಿದ್ದೆ; ನನ್ನ ಕೈಕಾಲುಗಳನ್ನು ತುರಿಸಿಕೊಂಡರೆ ಕೂದಲು ತಮ್ಮ ಬೇರು ಸಮೇತ ಕಿತ್ತುಕೊಂಡು ಬರುತ್ತಿದ್ದವು…”
ಈ ಸ್ಥಿತಿಯಿಂದ ಗೌತಮನಿಗೆ ಜ್ಞಾನೋದಯವಾಗಲಿಲ್ಲ. ಈ ಬಗೆಯ ದೇಹದಂಡನೆಯನ್ನು ಬಿಟ್ಟ, ಸುಜಾತ ಎಂಬ ಹೆಣ್ಣುಮಗಳು ಆತನಿಗೆ ಊಟ ನೀಡಿದಳು. ಅವನು ಸಹಜ ಮನುಷ್ಯನಂತೆ ಬದುಕುತ್ತ ಧ್ಯಾನಿಸಲು ಆರಂಭಿಸಿದಾಗ ಅವನ ಜೊತೆಗಾರರು ಕೆಲವರು ಆಕ್ಷೇಪಿಸಿ ಹೊರಟುಹೋದರು; ಗೌತಮ ಏಕಾಂಗಿಯಾಗಿ ಸತ್ಯ ಹುಡುಕತೊಡಗಿದ. ಮನುಷ್ಯ ತನ್ನ ಬಡತನ, ರೋಗ, ಸಾವು, ನೋವು, ಅನ್ಯಾಯಗಳನ್ನು ಗೆಲ್ಲುವ ಸಾಧ್ಯತೆಗಳನ್ನು ಹುಡುಕತೊಡಗಿದ. ನಿರ್ವಾಣ, ಮೋಕ್ಷ ಸಾಧ್ಯವೇ ಎಂದು ನೋಡಿದ. ದೇವರ ಅಸ್ತಿತ್ವಕ್ಕಾಗಿ ತಡಕಾಡಿದ.
ಹುಟ್ಟಿದಂತೆಯೇ ವೈಶಾಖ ಶುದ್ಧ ಪೂರ್ಣಿಮೆಯಂದು ಗೌತಮನಿಗೆ ಉತ್ತರ ದೊರಕಿತು. ಅದನ್ನು ಜ್ಞಾನೋದಯ ಎಂದು ಅನೇಕರು ಕರೆದರು. ಹಾಗೆ ಗೌತಮ ಎಂದೂ ಹೇಳಿಕೊಳ್ಳಲಿಲ್ಲ. ನಾನು ಕೂಡ ಅದನ್ನು ಜ್ಞಾನೋದಯ ಎಂದು ಕರೆಯದೆ ಮನುಷ್ಯನ ದುಃಖಕ್ಕೆ ಇರಬಹುದಾದ ಉತ್ತರ ಎಂದು ಕರೆಯಲು ಆಶಿಸುತ್ತೇನೆ.
ಯಾಕೆಂದರೆ ಗೌತಮನಲ್ಲಿ ಜ್ಞಾನೋದಯವಾದ ಒಂದೇ ಒಂದು ಸೂಚನೆ ಇದ್ದದ್ದು ಆತನ ಪ್ರಶಾಂತತೆಯಲ್ಲಿ; ಮನುಷ್ಯನ ಬಗ್ಗೆ ತಿಳಿವಳಿಕೆಯಲ್ಲಿ. “ದೇವರು ಇದ್ದಾನೆಯೆ?” ಎಂಬ ಪ್ರಶ್ನೆಗೆ ಗೌತಮನಲ್ಲಿ ಉತ್ತರವಿರಲಿಲ್ಲ. “ಆತ್ಮ ಎಂಬುದು ಇದೆಯೇ?” ಎಂಬುದಕ್ಕೆ ಆತನಲ್ಲಿ ಉತ್ತರವಿರಲಿಲ್ಲ. ತನಗೆ ಗೊತ್ತಿಲ್ಲದ್ದನ್ನು ಹೇಳಲು ನಿರಾಕರಿಸುವ ಗೌತಮನ ಜ್ಞಾನೋದಯ ಮನುಷ್ಯನ ಬದುಕಿನ ವಿವರಗಳನ್ನು ಒಳಗೊಂಡಿತ್ತು.
ಸಂನ್ಯಾಸ, ಧ್ಯಾನ, ತಪಸ್ಸುಗಳು ಸಾಮಾನ್ಯ ಮನುಷ್ಯನಲ್ಲಿ ಗೌರವದ ಜೊತೆಗೆ ಅಂಜಿಕ ಹುಟ್ಟಿಸುತ್ತವೆ. ಅವೆಲ್ಲ ತನ್ನಿಂದ ಸಾಧ್ಯವಾಗುವುದಿಲ್ಲ, ತನ್ನ ಸಣ್ಣಪುಟ್ಟ ಸಂತೋಷಗಳೊಂದಿಗೆ ಹೊಂದಿಕೊಳ್ಳುವುದಿಲ್ಲ ಎಂದುಕೊಳ್ಳುವ ಗೌತಮ ನಂತರ ಅವನ್ನೆಲ್ಲ ಹೊಕ್ಕು ಪರೀಕ್ಷಿಸಿ ಹೊರಬಂದ ಮೇಲೆ ಒಂದು ಘಟನೆ ನಡೆಯುತ್ತದೆ.
ಗೌತಮ ಉಪವಾಸ, ದೇಹದಂಡನೆ ಇತ್ಯಾದಿಗಳನ್ನು ಬಿಟ್ಟೊಡನೆ ಅವನನ್ನು ಬಿಟ್ಟು ಹೊರಟುಹೋದ ಗೆಳೆಯರನ್ನು ಕಾಣುತ್ತಾನೆ, ತನಗೆ ಮನುಷ್ಯನ ದುರಂತಕ್ಕೆ ಉತ್ತರ ದೊರಕಿದೆ ಎಂದು ಹೇಳುತ್ತಾನೆ. ಆ ಗೆಳೆಯರು ನಂಬುವುದಿಲ್ಲ, “ಎಲ್ಲರಂತೆ ಬದುಕಿದ ನಿನಗೆ ಜ್ಞಾನೋದಯವಾಗಿರುವುದು ಸಾಧ್ಯವಿಲ್ಲ” ಎಂದು ಹೇಳುತ್ತಾರೆ.
ಗೌತಮ ಏನು ಹೇಳಿದರೂ ನಂಬುವುದಿಲ್ಲ, ಆಗ ಗೌತಮ ಅನ್ಯೋನ್ಯತೆಯಿಂದ, “ನನ್ನ ಧ್ವನಿ ಮುಂಚಿನಂತಿದೆಯೇ? ನನ್ನ ಮಾತು ಬೇರೆ ಥರ ಎನಿಸುವುದಿಲ್ಲವೆ?” ಎಂದು ಕೇಳುತ್ತಾನೆ. ಆಗ ಅವರಿಗೆ ಗೌತಮನಲ್ಲಿ ಏನೋ ಹೊಸತು ಗೋಚರವಾಗುತ್ತದೆ. ಗೌತಮನ ಜೊತೆಗಾರಿಕೆಯಲ್ಲಿ ಆತನ ತಿಳಿವಳಿಕೆಯ ಅರಿವಾಗುತ್ತದೆ.
ದೇಶದ ಉದ್ದಗಲಕ್ಕೆ ಓಡಾಡಿದ ಸಿದ್ಧಾರ್ಥ ಜನಕ್ಕೆ ಬೋಧಿಸುತ್ತಿದ್ದುದು ಸರಳವಾಗಿತ್ತು. ‘ಆಶೆಯೇ ದುಃಖಕ್ಕೆ ಮೂಲ’ ಎಂದು ಹೇಳುತ್ತಿದ್ದ. ನೀತಿ, ವಿನಯ, ಪ್ರಾಮಾಣಿಕತೆಯನ್ನು ಬೋಧಿಸುತ್ತಿದ್ದ. ಒಮ್ಮೆ “ತಪ್ಪಿತಸ್ಥರನ್ನು ಶಿಕ್ಷಿಸುವುದರಿಂದ ಅಪರಾಧ ಕಮ್ಮಿಯಾಗುವುದಿಲ್ಲ” ಎಂದು ಹೇಳಿದ. ಅದರ ಬಗ್ಗೆ ವಿವರಣೆ ಕೇಳಿದಾಗ ಸಿದ್ಧಾರ್ಥ ಯಾವುದೇ ಪವಾಡದ ಬಗ್ಗೆ, ದೇವರನ್ನು ಕುರಿತ ಭಯದ ಬಗ್ಗೆ ಹೇಳಲಿಲ್ಲ. “ಬಡತನದ ನಿವಾರಣೆಯಾದರೆ ಮಾತ್ರ ಅಪರಾಧ, ಕ್ರೌರ್ಯ, ಅನ್ಯಾಯಗಳು ಹೋಗುತ್ತವೆ” ಎಂದು ಹೇಳಿದ. “ಶ್ರೀಮಂತರಾದರೆ?” ಎಂದು ಕೇಳಿದರೂ ಸಿದ್ಧಾರ್ಥ ಶ್ರೀಮಂತರ ದಾಹ, ಸ್ವಾರ್ಥ, ಶೋಷಣೆಯ ಬಗ್ಗೆ ಹೇಳುತ್ತಿದ್ದ. ಈತನ ಬೋಧನೆ ಎಲ್ಲರಿಗೆ ಗೊತ್ತಿರುವುದರಿಂದ ಇಲ್ಲಿ ಮತ್ತೆ ಹೇಳಬೇಕಿಲ್ಲ.
ಆದರೆ ಸರಿಯಾಗಿ ಎರಡೂವರೆ ಸಾವಿರ ವರ್ಷದ ಹಿಂದೆ ಬದುಕಿದ್ದ ಈ ಮನುಷ್ಯನ ವ್ಯಕ್ತಿತ್ವ ನೋಡಿ. ಅರಮನೆ, ದೇವಾಲಯಗಳನ್ನು ಬಿಟ್ಟು ನಿರ್ವಾಣವನ್ನು ಕಂಡುಕೊಳ್ಳಲು ಹೊರಟ ಈತ ದೇವರನ್ನು ತಲುಪಲಿಲ್ಲ. ಮನುಷ್ಯರನ್ನು ತಲುಪಿದ. ಅದು ಪ್ರೀತಿಯ ಮೂಲಕ, ನಿರ್ಮೋಹದ ನೋಟದ ಮೂಲಕ. ಸಿದ್ಧಾರ್ಥನಿಗೆ ವಯಸ್ಸಾದಂತೆಲ್ಲ ಆತನ ಸಹಜತೆ ಕೂಡ ಬೆಳೆಯುತ್ತಿತ್ತು.
ಗಾಢ ವ್ಯಾಮೋಹ, ದುಃಖ, ಸಾವುನೋವು, ವಿರಹಗಳ ಬಲೆಯಲ್ಲಿ ಬಿದ್ದ ಮನುಷ್ಯನ ಅಸಹಾಯಕ ಸ್ಥಿತಿಗೆ ಪರಿಹಾರವಾಗಿ ಈತನಲ್ಲಿ ಅಪಾರ ಪ್ರೀತಿ ಮಾತ್ರ ಇತ್ತು. ಲಕ್ಷಾಂತರ ಶಿಷ್ಯರು, ಅಭಿಮಾನಿಗಳನ್ನು ಪಡೆದಿದ್ದ ಬುದ್ಧ ಶಿಸ್ತಿಗೆ, ದಕ್ಷತೆಗೆ ಪ್ರಖ್ಯಾತನಾಗಿದ್ದ. ಈತನ ಆಶ್ರಮಗಳು ನಡೆಯುತ್ತಿದ್ದ ಬಗೆಯನ್ನು, ಈತನ ಅನುಯಾಯಿಗಳ ಜೀವನ ಕ್ರಮವನ್ನು ಗಮನಿಸಿದ ರಾಜನೊಬ್ಬ, “ನನ್ನೆಲ್ಲ ಸೈನ್ಯ, ಶಕ್ತಿ ಬಳಸಿದರೂ ಪ್ರಜೆಗಳಲ್ಲಿ ಈ ಶಿಸ್ತು ತರಲಾಗುತ್ತಿಲ್ಲ” ಅಂದ. ಅದಕ್ಕೆ ಸಿದ್ಧಾರ್ಥ, “ವಿಶ್ವಾಸ, ಪ್ರೀತಿ ಇದ್ದಲ್ಲಿ ಮಾತ್ರ ಶಿಸ್ತು ಸಾಧ್ಯ” ಎಂದು ಹೇಳಿದ.
ಸಿದ್ಧಾರ್ಥ ಜ್ಞಾನಿಯಾಗಿದ್ದ, ವಿದ್ವಾಂಸನಾಗಿರಲಿಲ್ಲ. ಗೊಡ್ಡು ಪಾಂಡಿತ್ಯ ಕಂಡು ವಿಸ್ಮಿತನಾಗುತ್ತಿದ್ದ. ಪ್ರಖಾಂಡ ಪಂಡಿತನೊಬ್ಬ ತನ್ನ ಪಾಂಡಿತ್ಯದಿಂದ ಎಲ್ಲರಿಗೂ ಮುಖಭಂಗ ಮಾಡುವುದರಲ್ಲಿ ನಿಷ್ಣಾತನಾಗಿದ್ದ. ಆತ ಸಿದ್ಧಾರ್ಥನನ್ನು ವಾದದಲ್ಲಿ ಸೋಲಿಸುವ ಸಲುವಾಗಿ ಬಂದು “ಬ್ರಾಹ್ಮಣನ ಮುಖ್ಯ ಲಕ್ಷಣಗಳೇನು?” ಎಂದು ಕೇಳಿದ. ಆಗ ಬುದ್ಧ ಗಂಭೀರವಾಗಿ, “ನೀಚತನದಿಂದ ಮುಕ್ತನಾದವನು, ಪರಿಶುದ್ಧ ಹೃದಯವುಳ್ಳವನು ಮತ್ತು ಇತರರ ಮುಖಭಂಗ ಮಾಡದಿರುವವನು” ಅಂದು ನಸುನಕ್ಕ.
ಗೌತಮನ ಮನುಷ್ಯತ್ವ, ಹಾಸ್ಯ, ರಸಿಕತೆ, ಭೂತದಯೆ, ಜೀವನ ಪ್ರೇಮವನ್ನು ಒಳಗೊಂಡಿತ್ತು. ಆತ ತಾನು ಕಂಡ ನದಿ, ಬೆಟ್ಟ, ಕಾಡುಗಳನ್ನು, ತನ್ನ ಪ್ರೀತಿಯ ಸ್ಥಳಗಳನ್ನು ಕುರಿತು ಭಾವುಕನಾಗಿ ಮಾತನಾಡುತ್ತಿದ್ದ. ಅನೇಕ ಸಲ ನೀನು ಈ ಭೂಮಿಯಲ್ಲಿ ಸ್ವರ್ಗ ಕಾಣಬೇಕೆಂದಿದ್ದರೆ ಈ ಜಿಲ್ಲೆಯ ಗಿರಿಜನರ ಹೆಣ್ಣುಮಕ್ಕಳನ್ನು ನೋಡು- ಎಂದು ಹೇಳಬಲ್ಲವನಾಗಿದ್ದ.
ಮುಖ್ಯವಾಗಿ ಈ ಸತ್ಯಶೋಧಕ ಸಿದ್ಧಾರ್ಥನ ಎದುರು ಜನ ಯಕ್ಷಿಣಿಗಾಗಿ, ಪವಾಡಕ್ಕಾಗಿ ಸೇರುತ್ತಿರಲಿಲ್ಲ. ಆತನ ಪ್ರೀತಿಯ ಸಂಗಕ್ಕಾಗಿ, ಆತನ ತಾಯ್ತನಕ್ಕಾಗಿ ಸೇರುತ್ತಿದ್ದರು. ನೊಂದ, ಅನ್ಯಾಯಕ್ಕೊಳಗಾದ, ಕ್ರೌರ್ಯದಲ್ಲಿ ಬೆಂದವರೆಲ್ಲ ಅಲ್ಲಿ ಪ್ರೀತಿ ಎಂಬ ಜ್ಞಾನದಲ್ಲಿ ಸ್ವಸ್ಥರಾಗುತ್ತಿದ್ದರು.
ಈಗ ಕೇಳಿಕೊಳ್ಳಿ. ಆತ ಇದಕ್ಕಾಗಿ ತನ್ನ ರಾಜ್ಯ ಬಿಟ್ಟಿದ್ದು ಸರಿಯೆ? ಆಡಳಿತಗಾರನಾಗಿ ಏನನ್ನಾದರೂ ಸಾಧಿಸಲು ಆಗುತ್ತಿರಲಿಲ್ಲವೆ? ಇದಕ್ಕೆ ನನ್ನಲ್ಲಿ ಒಂದು ಸಣ್ಣ ಉತ್ತರವಿದೆ. ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ, ನೆಹರೂ, ಪಟೇಲರೆಲ್ಲ ಸಂಭ್ರಮದಿಂದ ಕೂಗಾಡುತ್ತಿದ್ದ ದಿನ ಗಾಂಧೀಜಿ ಕಲ್ಕತ್ತಾದಲ್ಲಿ ಒಬ್ಬೊಂಟಿಯಾಗಿ ಓಡಾಡುತ್ತಿದ್ದರು.
ಎರಡೂವರೆ ಸಾವಿರ ವರ್ಷಗಳ ಬಳಿಕ ಬುದ್ಧನ ಅಂಶಗಳನ್ನು ಪಡೆದು ಬಂದ ಗಾಂಧಿ ಪ್ರಧಾನಿಯಾಗಿ ಆಗಲಿ, ರಾಷ್ಟ್ರಾಧ್ಯಕ್ಷರಾಗಿ ಆಗಲೀ ಅಧಿಕಾರ ಸ್ವೀಕರಿಸುವ ಸ್ಥಿತಿಯಲ್ಲಿ ಇರಲಿಲ್ಲ. ಆ ಬಾಪುವಿನದು ಕೂಡ ಬುದ್ಧನ ದಾರಿಯಾಗಿತ್ತು.
ಈತ ಕೂಡ ಸತ್ಯವನ್ನು, ದೇವರನ್ನು ಹುಡುಕುತ್ತಾ ಹೋಗಿ, ಬದುಕಿನ ವಿರೋಧಾಭಾಸಗಳನ್ನು, ಜೀವಸೆಲೆಗಳನ್ನು ಹುಡುಕುತ್ತಾ ಹೋಗಿ ಸರಳ ಕಾಣ್ಕೆಯನ್ನು ಕಂಡುಕೊಂಡಿದ್ದರು. ಈಶ್ವರನಿಗಾಗಿ ಹುಡುಕಾಟದಿಂದಾಗಿಯೇ ನಿರೀಶ್ವರವಾದಿಯ ನಿಷ್ಠುರತೆಯನ್ನೂ, ದುರಂತ ಪ್ರಜ್ಞೆಯನ್ನೂ ಪಡೆದುಕೊಂಡಿದ್ದರು. ಸಿದ್ಧಾರ್ಥನಂತೆಯೇ ಕನಿಷ್ಠ ಜೀವಿಯಲ್ಲೂ ಗಾಢ ಪ್ರೀತಯನ್ನು ಇಟ್ಟಿದ್ದ ಗಾಂಧಿ ಮನುಷ್ಯ ತನಗಾಗಿ ಸೃಷ್ಟಿಸಿಕೊಂಡಿರುವ ಜಾತಿ, ಮೂಢನಂಬಿಕೆ, ಕ್ರೌರ್ಯ, ಅಸಹಾಯಕತೆಯನ್ನು ಕಂಡು ತಮ್ಮ ಸರಳ ಸಿದ್ಧಾಂತಗಳನ್ನು ರೂಪಿಸಿಕೊಂಡಿದ್ದರು.
ಸಿದ್ಧಾರ್ಥನನ್ನು ಆತನ ಕಾಣ್ಕೆಯೊಂದಿಗೇ ಹೊರಗಟ್ಟಿದ್ದ ಭಾರತೀಯ ಗಾಂಧಿಯನ್ನೂ ಇಟ್ಟುಕೊಳ್ಳಲಿಕ್ಕಿಲ್ಲ. ಅಂದರೆ ಅವರ ಪ್ರೇಮವನ್ನು, ತಾಯ್ತನವನ್ನು, ಸರಳ ನೆಮ್ಮದಿಯನ್ನು. ಯಾವ ಅಧಿಕಾರದ ಗದ್ದುಗೆಯೂ, ಸೈನ್ಯದ ಆರ್ಭಟವೂ ಮನುಕುಲಕ್ಕೆ ನೀಡಲಾರದ ಕಾಣಿಕೆ ಇದು.
(ಡಿಸೆಂಬರ್ 28, 1986)-ಟೀಕೆ-ಟಿಪ್ಪಣಿ ಪುಸ್ತಕದಿಂದ (ಸಂಪುಟ-01, 1991)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ3 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ1 day agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

