ಲೈಫ್ ಸ್ಟೈಲ್
ರೌಡಿ ಎಮ್ಮೆ ಮತ್ತದರ ಮೂಗುದಾರ..!
- ಡಾ.ಎನ್.ಬಿ.ಶ್ರೀಧರ, ಶಿವಮೊಗ್ಗ
ದೂರವಾಣಿಯ ಆ ಕಡೆಯಿಂದ “ ಡಾಕ್ಟ್ರೇ.. ಈ ಕಡೆ ಬರುವಾಗ ನಮ್ಮನೆ ರೌಡಿ ಎಮ್ಮೆಗೆ ಮೂಗುದಾರ ತರಲು ಮರೀಬೇಡಿ” ಅಂದಾಗಲೇ ನನಗೆ ನೆನಪಾಗಿದ್ದು ಅವರ ಮನೆಯ ರೌಡಿ ಶೀಟರ್ ಮಹಿಷಿಯ ಅಪರಾವತಾರದ ಎಮ್ಮೆಗೆ ಮೂಗುದಾರ ಹಾಕಿ ನಿಯಂತ್ರಿಸಲು ನಾನೇ ಹೇಳಿದ್ದ ಸಲಹೆಯನ್ನು ಅನುಷ್ಠಾನಕ್ಕೆ ತರುವುದನ್ನು ಮರೆತಿದ್ದು. ಆಗಲೇ ಸಣ್ಣದಾಗಿ ಮಳೆಗಾಲ ಪ್ರಾರಂಭವಾಗಿದ್ದರಿಂದ ದನ ಎಮ್ಮೆಗಳಿಗೆ ಗಂಟಲು ಬೇನೆ ಲಸಿಕೆಯನ್ನು ಹಾಕುವ ಕಾರ್ಯದಲ್ಲಿ ಬ್ಯುಸಿಯಾಗಿದ್ದರಿಂದ ಇಂತಹದ್ದೊಂದು ಕಾರ್ಯವಿದೆ ಎಂಬುದೇ ನನ್ನ ಮಸ್ತಿಷ್ಕದಿಂದ ಆವಿಯಂತೆ ಮಾಯವಾಗಿತ್ತು.
ನನ್ನ ಶಿಷ್ಯನಿಗೆ “ ಒಂದ್ ಮೂಗುದಾರ ಸೆಟ್ ರೆಡಿ ಮಾಡೋ.. ಆ ದಿನದಿಂದ ಹೇಳ್ತಾ ಇದೀನಿ. ನೆನಪೇ ಮಾಡ್ಲಿಲ್ಲ ನೀನು” ಎಂದು ನಾನು ಮರೆತಿರುವ ಈ ವಿಷಯವನ್ನು ಆತನ ತಲೆಗೆ ಕಟ್ಟಿದೆ. ಆ ದಿನ ಶನಿವಾರವಾದ್ದರಿಂದ ಆತನಿಗೆ ಅನೇಕ “ಮಹತ್ವ”ದ ಕೆಲಸಗಳಿರುವುದರಿಂದ “ಸಾರ್. ಈವತ್ತು ನಾನು ಬರಕ್ಕಾಗಲ್ಲ. ತುಂಬಾ ಕೆಲ್ಸ ಇದೆ”.. ಎಂದು ನಾನು ಹೇಳುವ ಮೊದಲೇ ಪೂರ್ವನಿರೀಕ್ಷಿತ ಜಾಮಿನು ಅರ್ಜಿ ಹಾಕಿಕೊಂಡು ನಾನೊಬ್ಬನೇ ಈ ಕೆಲಸಕ್ಕೆ ಹೊರಡುವುದು ಎಂದು ತೀರ್ಮಾನಿಸಿಬಿಟ್ಟ.
ಸಂತೆಯ ದಿನ ಕುದುರುವ ಆತನ ಇಂತಹ ಅನೇಕ ವ್ಯವಹಾರಗಳ ಬಗ್ಗೆ ಸಕಲವನ್ನೂ ಅಮೂಲಾಗ್ರವಾಗಿ ತಿಳಿದಿದ್ದ ನಾನು ಅವನ ಬರುವಿಕೆಯ ಬಗ್ಗೆ ಅಷ್ಟೇನೂ ಆಸಕ್ತಿ ವಹಿಸಲಿಲ್ಲ. ನಿಜ. ಎತ್ತುಗಳಿಗೆ ಬಯಲು ಸೀಮೆಯ ಕಡೆ ಮೂಗುದಾರ ಇರದೇ ಇರುವುದನ್ನು ನೋಡಿದರೆ ಮದುವೆಯಾಗಿ ಮಂಗಳ ಸೂತ್ರವಿಲ್ಲದೇ ಓಡಾಡುವ ಬೆಂಗಳೂರಿನ ಕೆಲ ಹೆಣ್ಣುಮಕ್ಕಳು ನೆನಪಾಗಿ ಬಿಡುತ್ತಾರೆ. ಮಲೆನಾಡಿನಲ್ಲಿ ಗೋಪಾಲಕರು ಮೂಗುದಾರ ಹಾಕಿ ಜಾನುವಾರುಗಳನ್ನು ನಿಯಂತ್ರಿಸುವುದು ಕಡಿಮೆಯೇ ಸರಿ.
ಒಂದೋ ಜಾನುವಾರು ತೀರಾ ಹರಾಮಿಯಾಗಿ ಹಿಡಿತ ತಪ್ಪಿ ಹೋಗಿ ಬೆಂಗಳೂರು ಸೇರಿ ಹೊಟೇಲಿನಲ್ಲಿ ಕೆಲಸ ಮಾಡುವ ಹವ್ಯಕ ಮಾಣಿಯಂತೆ ಆಗಿರಬೇಕು ಇಲ್ಲವೇ ಸುಖಾ ಸುಮ್ಮನೇ ಬಿಲ್ಡಪ್ ಕೊಡುವ ಚಂದದ ಮಾಡರ್ನ್ ಹೆಣ್ ಹೈಕಳಂತೆ ಸ್ಟೈಲ್ ಮಾಡುವ ಬಿನ್ನಾಣಗಿತ್ತಿಯ ತರದ ದನಗಳನ್ನು ಹತೋಟಿಯಲ್ಲಿಡುವ ಬ್ರಹ್ಮಾಸ್ತ್ರ ಇದಾಗಿತ್ತು. ಬಯಲು ಸೀಮೆಯಲ್ಲೆಲ್ಲ ಈ “ಮೂಗುದಾರ” ಹಾಕುವ ಯಕಶ್ಚಿತ್ ಕಾರ್ಯಕ್ಕೆಲ್ಲ ಪಶುವೈದ್ಯರನ್ನು ಕರೆಯುತ್ತಲೇ ಇರಲಿಲ್ಲ.
ಹೋರಿಗಳ ಬೀಜ ತೆಗೆಯುವುದು, ದನದ ಕಾಲಲ್ಲಿರುವ ಹುಳವನ್ನು ಚಿಮ್ಮಟ ಹಾಕಿ ತೆಗೆಯುವುದು, ಮೂಗುದಾರ ಹಾಕುವುದು ಇದೆಲ್ಲಾ ಕಾರ್ಯ “ಕಂಪೌಂಡರ್” ಎಂದು ನಾಮಾಂಕಿತರಾದ ಜವಾನರೇ ಸದ್ದುಗದ್ದಲವಿಲ್ಲದೇ ಸಾಂಗೋಪಾಂಗವಾಗಿ ನೆರವೇರಿಸಿಬಿಡುತ್ತಿದ್ದರು.
ಗೋಕರ್ಣದ ದೊಡ್ದ ಭಟ್ಟರುಗಳು ದೊಡ್ಡ ದೊಡ್ಡ ಯಾಗ ಯಜ್ಞಗಳನ್ನು ನಡೆಸುವಾಗ ದರ್ಭೆ ಆಯುವುದು,ಹೋಮದ ಬೂದಿ ತೆಗೆಯುವುದು, ಚಿಲ್ಲರೆ ನಾಣ್ಯಗಳನ್ನು ಎಣಿಸುವುದು, ಬಾಳೆಕಂಬ ಹೊಂದಿಸುವುದು ಇತ್ಯಾದಿ ತಾಟಿ ಪಿಟಿ ಕೆಲಸಗಳಿಗೆ ಮರಿ ಭಟ್ಟರುಗಳನ್ನು ತೊಡಗಿಸಿ ತಾವು ಮಾತ್ರ ಗತ್ತಿನಿಂದ ಮಂತ್ರಗಳನ್ನು ಪಠಿಸುವಂತೆ ಈ ಮೂಗುದಾರ ಹಾಕುವ ಕೆಲಸವನ್ನು ಕೆಲ ಪಶುವೈದ್ಯರು ಅಸಡ್ಡೆಯಿಂದ ಗಮನಿಸಿ ದಿವ್ಯ ನಿರ್ಲಕ್ಷ್ಯದ ನೋಟ ಬೀರುತ್ತಿದ್ದರು.
ಬಯಲು ಸೀಮೆಯ ಆಸ್ಪತ್ರೆಗಳಲ್ಲಿ ಕಂಪೌಂಡರ್ ಅಲ್ಲಲ್ಲ.. ಜವಾನರು ತರಹೇವಾರಿ ಬಣ್ಣ ಬಣ್ಣದ ಕಾಟನ್, ನೈಲಾನ್, ಪ್ಲಾಸ್ಟಿಕ್ ಮೂಗುದಾರಗಳನ್ನು ಹುಬ್ಬಳ್ಳಿಯಿಂದ ತಂದು ಸ್ಟಾಕು ಮಾಡಿಕೊಂಡು ನಾನಾ ತರದ ರೇಟನ್ನು ಕುದುರಿಸಿ ರೈತರ ಎತ್ತುಗಳು ಹೋರಿಗಳಿಗೆ ಹಾಕುವುದು ಗೊತ್ತಿದ್ದರೂ ಸಹ ನಾವೆಲ್ಲಾ ಈ ವ್ಯವಹಾರಕ್ಕೂ ನಮಗೂ ಏನೂ ಸಂಬಂಧವಿಲ್ಲದಂತೆ ಸುಮ್ಮನಿರುತ್ತಿದ್ದೆವು. ಅದರಲ್ಲೂ ಹೋರಿಗಳ ಸಂತಾನ ಹರಣ ಕೇವಲ ಕಂಪೌಂಡರುಗಳ ಕಾರ್ಯವೆಂದೇ ಬಹುತೇಕರ ಭಾವನೆ.
ಹೋರಿಗಳನ್ನು ಕೆಡವಿಕೊಂಡು ಅವುಗಳ ವೃಷಣ ಚೀಲದ ಬುಡವನ್ನು ಬರ್ಡಿಜ಼ೋ ಕ್ಯಾಸ್ಟ್ರೇಟರ್ ಎಂಬ ಬಲೀಷ್ಠವಾದ ಇಕ್ಕಳದ ಮಧ್ಯೆ ಸಿಲುಕಿಸಿ ವೃಷಣಗಳಿಗೆ ಸರಬರಾಜಾಗುವ ರಕ್ತವನ್ನು ಒಮ್ಮೆಯೇ ಬಂದು ಮಾಡಿ ಅದು ಅನುತ್ಪಾದಕವಾಗಿ ಸೊರಗಿ ಹೋಗುವಂತೆ ಮಾಡುವುದಕ್ಕೆ ಗಿಡದ ಸಂತಾನವನ್ನು ಹೆಚ್ಚಿಸುವ ಕಲೆಯಾದ “ಕಸಿ” ಮಾಡುವುದು ಎಂದು ಅದ್ಯಾರು ಹೆಸರಿಟ್ಟರೋ?.
ಕಸಿಯಾದ ಮೇಲೆ ಹೋರಿಗಳು ಮಾಜಿಗಳಾಗಿ ಅವುಗಳ ಸಂತಾನದ ಬಗ್ಗೆ ಆಸಕ್ತಿಯನ್ನೇ ಕಳೆದುಕೊಂಡು ಎತ್ತಾಗಿ ರೈತನ ಹೇಳಿದಂತೆ ಕೇಳಿಕೊಂಡು ರೈತನ ಗಾಡಿ ಎತ್ತಾಗಿಯೋ ಅಥವಾ ಉಳುಮೆಯ ಎತ್ತಾಗಿಯೋ ಜೀವನವನ್ನು ಸವೆಸುತ್ತಿದ್ದವು.
ಪ್ರಾಣಿಪ್ರಿಯರ ಪ್ರಕಾರ ಇದೊಂದು ಪ್ರಾಣಿ ಹಿಂಸೆಯ ಪರಮಾವಧಿಯ ಪೈಶಾಚಿಕ ಕೃತ್ಯ. ಅವರ ಹೇಳುವ ಹಾಗೇ ಎತ್ತನ್ನು ಉಳುಮೆಗೆ, ಗಾಡಿ ಎಳೆಯಲು ಉಪಯೋಗಿಸುವುದೇ ಪ್ರಾಣಿ ಹಿಂಸೆ. ನಮ್ಮ ರೈತ ಬಾಂಧವರಿಗೆ ಇದೆಲ್ಲಾ ಅರ್ಥವಾಗುವುದು ಇನ್ನೊಂದು ಶತಮಾನವಾದರೂ ಸಾಧ್ಯವಿಲ್ಲ.
ಪಶುಗಳನ್ನು ತಲತಲಾಂತರದಿಂದ ಪ್ರೀತಿಯಿಂದ ಸಾಕುತ್ತಿರುವ ಉತ್ತರ ಕರ್ನಾಟಕದ ರೈತರ ಪ್ರಕಾರ ಪ್ರಾಣಿಹಿಂಸೆ, ಪ್ರಾಣಿಪ್ರೀತಿ ಬೆಂಗಳೂರಿನ ಶ್ರೀಮಂತರ ಮನೆಯ ಹೆಣ್ಮಕ್ಕಳು ಬೀದಿಯ ಕಂತ್ರಿ ನಾಯಿಗಳಿಗೆ ಬ್ರೆಡ್ಡು ಹಾಕುತ್ತಾ ಅದೇ ಪಶು ಪ್ರೀತಿ ಎಂದು ದೊಡ್ಡದಾಗಿ ಪೋಸು ಕೊಡುವ ಟೈಮ್ ಪಾಸ್ ಕೆಲಸ. ಅವರಿಗೆ ಪ್ರಾಣಿ ಪ್ರೀತಿಯ ಪಾಠ ಮಾಡ ಹೊರಟರೆ “ ಸಾಹೇಬ್ರೇ. ಸುಮ್ನಿರ್ರೀ. ಕುರಿಕೋಳಿ ಕಟದ್ ತಿನ್ನೋರು ಅದ್ಯಾಂಗ್ ಪ್ರಾಣಿ ಹಿಂಸೆ ಅಂತಾರ್ರೀ? ಅವು ಪ್ರಾಣಿ ಅಲ್ಲೇನ್ರಿ? ಜೀವ ಇಲ್ಲೇನ್ರಿ? ಎಂದು ಅವರು ಎತ್ತುಗಳನ್ನು ದುಡಿಸಿಕೊಳ್ಳುವದನ್ನು ವಿರೋಧಿಸುವವರ ಬಗ್ಗೆ ಅಭಿಪ್ರಾಯ ನೀಡುತ್ತಿದ್ದರು.
ನನ್ನ ಶಿಷ್ಯ ತಾಳಗುಪ್ಪದಲ್ಲಿರುವ ಸಕಲ ವಸ್ತುಗಳೂ ದೊರಕುವ ಹೈಟೆಕ್ ಅಂಗಡಿಯಾದ ಶೆಟ್ಟರ ಅಂಗಡಿಗೆ ಹೋಗಿ ಕಿರುಬೆರಳು ಗಾತ್ರದ ಉದ್ದನೆಯ ಕಾಟನ್ ದಾರವನ್ನು ತಂದು ಅದರ ತುದಿಯ ಹಲವು ಎಳೆಗಳನ್ನು ತೆಗೆದು ಕಲಾತ್ಮಕವಾಗಿ ಚೂಪಾಗಿ ಮಾಡಿ ಅದನ್ನು ಹುಡುಗಿಯರ ಜಡೆಯಂತೆ ನೇಯ್ದು, ಸೆಫ್ಟಿಕ್ ಆಗದಂತೆ ಇರಲು ಪೊವಿಡೋನ್ ಆಯೋಡಿನ್ ಎಂಬ ಸ್ಯಾನಿಟೈಸರ್ ತರದ ಕಂದು ಬಣ್ಣದ ದ್ರಾವಣದಲ್ಲಿ ಅದ್ದಿದರೆ ಅದು ಅರಿಷಿಣದಲ್ಲಿ ಮಿಂದ ಹೊಸ ಮಾಂಗಲ್ಯದಂತೆ ಮಿಂಚುತ್ತಿತ್ತು.
ಎಮ್ಮೆಗಳಿಗೆ ಎತ್ತುಗಳಿಗೆ ಹಾಕಿದಂತೇ ಮೂಗುದಾರ ಹಾಕುವುದೇನೂ ಅಷ್ಟೇನೂ ಸುಲಭವಲ್ಲ. ಮೂಗು ಮುಟ್ಟಲೂ ಸಹ ಎಮ್ಮೆಗಳಂತೂ ಬಿಡುವುದೇ ಇಲ್ಲ. ಅವುಗಳ ಕೋಡಿನ ಸುತ್ತ ಮಾರುದ್ಧ ಹಗ್ಗ ಹಾಕಿ ಹಣೆಯ ಮಧ್ಯದಲ್ಲಿ ಒಂದು ಗಂಟು ಹೊಡೆದು, ಅದರ ಮೂತಿಯ ಸುತ್ತ ಇನ್ನೊಂದು ಸುತ್ತಿನ ಸರಗುಣಿಕೆ ಹಾಕಿ ಗಟ್ಟಿಯಾದ ಕಂಬಕ್ಕೆ ಎಳೆದು ಹಿಡಿದರೆ ಮಾತ್ರ ಅವು ಬಗ್ಗುವುದು.
ಹಾವಿನಂತೆ ಬುಸ್ಸೆನ್ನುತ್ತಾ ಕೊಸರಾಡುವ ಅವುಗಳ ಮೂತಿಯನ್ನು ಕಟ್ಟಿದ ಪಕ್ಕದ ಕಂಬಕ್ಕೆ ಇಲ್ಲವೇ ಗೋಡೆಯೊಂದಕ್ಕೆ ಒತ್ತಿ ಹಿಡಿದು ಅದೇ ಸ್ಥಿತಿಯಲ್ಲಿಯೇ ಎಲ್ಲಾ ಕೆಲಸವನ್ನು ಪೂರೈಸಬೇಕಿತ್ತು. ಬಯಲು ಸೀಮೆಯಲ್ಲಿ ಇವನ್ನೆಲ್ಲಾ ಕೂಡಿಹಾಕಿ ಬಗ್ಗಿಸಿ ದಾರಿಗೆ ತರಲು ಟ್ರೆವಿಸ್ ಎಂಬ ಉಪಕರಣವಿರುವುದರಿಂದ ಮತ್ತು ಈ ಎಮ್ಮೆ, ಕೋಣ, ಕತ್ತೆ,ಹಂದಿ, ಎತ್ತುಗಳನ್ನೆಲ್ಲಾ ನಾಯಿಮರಿಯಂತೆ ಪಳಗಿಸಿ ಅನುಭವದ ಕೊಡಗಳಿಂತಿರುವ ಜವಾನ ಅಲ್ಲಲ್ಲ.. ಕಂಪೌಂಡರುಗಳು ಇರುವುದರಿಂದ ಈ ಕೆಲಸ ನಮಗೇನೂ ಕಷ್ಟ ತರುತ್ತಿರಲಿಲ್ಲ.
ಅಲ್ಲದೇ ಅವರೇ ನಿರ್ಧರಿಸಿದಂತೆ ಇಂತಹ ನಿಕೃಷ್ಠ ಕಾರ್ಯಗಳೆಲ್ಲಾ ತಜ್ಞ ಪಶುವೈದ್ಯರು ಮಾಡುವುದು ಅವರ ಕೆಲಸವೇ ಅಲ್ಲ ಎಂಬ ರೈತರ ಭಾವನೆ ಕೆಲ ಪಶುವೈದ್ಯರಲ್ಲಿ ಬಂದು ಬಹಳ ಕಾಲವೇ ಆಗಿ ಹೋಗಿತ್ತು. ಮೂಗಿಗೆ ಮೂಗುದಾರ ಹಾಕಿಸಿಕೊಂಡು, ಕಿವಿಗೊಂದು ಓಲೆ ಹಾಕಿಸಿಕೊಂಡು ಸಂತೆಯಲ್ಲಿ ಠಳಾಯಿಸುವ ಹೊಳೆಯುವ ಶರೀರದ ಸ್ಮಾರ್ಟಾದ ಎಮ್ಮೆಗಳನ್ನು ನೋಡುತ್ತಿದ್ದರೆ ನನಗೆ ನಮ್ಮ ಬಿವಿಎಸ್ಸಿ ವಿದ್ಯಾರ್ಥಿನಿಯೊಬ್ಬಳು ಅವಳ ಇರುವ ಎರಡು ಕಿವಿಗೆ ಹತ್ತಾರು ರಂಧ್ರಗಳನ್ನು ಮಾಡಿಸಿ ಅದಕ್ಕೆಲ್ಲಾ ತರಹೇವಾರಿ ಬಂಗಾರದ್ದೋ ಮತ್ತೆಂತದೋ ಜುಮುಕಿ ತರದ ನೇತಾಡುವ ಆಭರಣಗಳನ್ನು ಸಿಗಿಸಿಕೊಂಡು, ಮೂಗಿನ ಮಧ್ಯೆ ಅದೆಂತದೋ ನೇತಾಡುವ ರಿಂಗಿನಂತ ಆಭರಣ ಹಾಕಿರುವದನ್ನು ನೋಡಿದರೆ ಸಾನಿಯಾ ಮಿರ್ಜಾ ತರ ಮೂಗುತಿ ಸುಂದರಿಯಾಗಲು ಶತ ಪ್ರಯತ್ನ ಮಾಡುತ್ತಿರುವುದು ನೆನಪಾಗುತ್ತಿತ್ತು.
ಡಬ್ಬಣದಂತೆ ಚೂಪಾಗಿರುವ ಟ್ರೊಕಾರ್ ಎಂಬ ದಪ್ಪ ಸೂಜಿಯಂತಿರುವ ಉಪಕರಣಕ್ಕೆ ಮೂಗುದಾರದ ಚೂಪು ಮಾಡಿದ ತುದಿಯನ್ನು ಸಿಗಿಸಿ ಮೂಗಿನ ಹೊರಳೆಗಳ ಮಧ್ಯೆ ಇರುವ ಮೃದುವಾದ ಪಠಲವನ್ನು ಭೇಧಿಸಿ ತೂತು ಕೊರೆದು ಒಮ್ಮೆಯೇ ಬಲ ಬಿಟ್ಟು ಸರ್ರನೇ ದಾರ ಹಾಯಿಸಿ ಎರಡೂ ಕೈಗಳಿಂದ ಎಮ್ಮೆಯ ಎರಡೂ ಕೋಡುಗಳನ್ನು ಬಳಸಿ ತಾಳಿ ಕಟ್ಟುವಾಗ ಹೇಗೆ ಮೂರು ಗಂಟನ್ನು ಗಂಡಸರು ಹಾಕುತ್ತಾರೋ ಹಾಗೇ ಮೂರು ಗಂಟುಗಳನ್ನು ಭದ್ರವಾಗಿ ಹಾಕಿದರೆ ಮೂಗುದಾರ ಸರಿಯಾಗಿ ಬಿದ್ದ ಹಾಗೇ.
ಪುರೋಹಿತರುಗಳ “ಮಾಂಗಲ್ಯಂ ತಂತು ನಾನೇನ.. ಮಮ ಜೀವನ ಹೇತುನಾ.. ಎಂಬ ರಾಗವಾದ ಮಂತ್ರ ಘೋಷದ ಮಧ್ಯೆ ಮಾಂಗಲ್ಯ ಧಾರಣೆ ಸಮಯದಲ್ಲಿ ಹೆಣ್ಣು ಮಕ್ಕಳು ವಿನೀತರಾಗಿ ಸಹಸ್ರ ಜನರ ಮುಂದೆ ತಲೆ ಬಗ್ಗಿಸಿ ಗಂಟು ಹಾಕಿಸಿಕೊಂಡ ನಂತರ ಹೇಗೆ ಹುಲಿಯಾಗುತ್ತಾರೋ ಹಾಗೆ ನಮ್ಮಿಂದ ಮೂಗುದಾರ ಹಾಕಿಸಿಕೊಂಡ ಸ್ವಲ್ಪ ಹೊತ್ತಿಗೆ ಎಮ್ಮೆ ತಕ ಥೈ ಎಂದು ಡ್ಯಾನ್ಸ್ ಪ್ರಾರಂಭಿಸುತ್ತಿತ್ತು. ಆದರೆ ಮೂಗುದಾರವನ್ನು ಕೈ ಬೆರಳ ನಡುವೆ ಹಾಕಿ ಹಿಡಿದರೆ ಸಾಕು, ಮೂಗಿನ ಪಠಲದ ಮೆತ್ತನೇ ಭಾಗದ ಮೇಲೆ ಬೀಳುವ ಒತ್ತಡದ ನೋವಿನಿಂದದಲೋ ಏನೋ ಕುತ್ತಿಗೆಯ ಚರ್ಮ ಹಿಡಿದರೆ ಹರಾಮಿ ಹಲಾಲುಕೋರ ಹಾಲುಕಳ್ಳ ಕಳ್ಳ ಬೆಕ್ಕೂ ಸಹ ಮೆತ್ತಗಾಗುವಂತೆ ಎಮ್ಮೆಗಳೂ ಮೆತ್ತಗಾಗಿ ಬಿಡುತ್ತಿದ್ದವು.
ದನದ ಸಂತೆಗಳಲ್ಲೆಂತೂ ಕೆಲ ಮನೆಹಾಳ ದನದ ವ್ಯಾಪಾರಿಗಳು ಎತ್ತು, ಎಮ್ಮೆ, ಆಕಳುಗಳಿಗೆ ಬಣ್ಣ ಬಣ್ಣದ ಮೂಗುದಾರ ಹಾಕಿ ಅವುಗಳಿಗೊಂದಿಷ್ಟು ಬಣ್ಣಗಳ ಪ್ರೋಕ್ಷಣೆ ಮಾಡಿ ಗಿಡ್ಡ, ದಪ್ಪ, ಎತ್ತರ, ಡುಮ್ಮ, ಬಡಕಲು ಎಮ್ಮೆಗಳನ್ನು ಸುಂದರವಾಗಿ ಕಾಣುವಂತೆ ಮಾಡಿ ರೈತರನ್ನು ಬಕರಾ ಬಿದ್ದು ಖರೀದಿಸುವಂತೆ ಖೆಡ್ಡಾ ಕೆಡವುತ್ತಿದ್ದರು.
ಹೋರಿ ಎತ್ತುಗಳ ಕೊಂಬು ಕೆತ್ತಿ, ಇರುವ ಎರಡೇ ಬೆಳ್ಳಗಾದ ಕೂದಲುಗಳಿಗೆ ಬಣ್ಣ ಹಚ್ಚಿ ಯಂಗಾದೆವೆಂಬ ಬಿಂಕದಿಂದ ಬೀಗುವ ಪುರುಷರಂತೆ, ಅವುಗಳ ವಯಸ್ಸು ಮರೆಮಾಚುವ ಪ್ರಯತ್ನ ಮಾಡುತ್ತಿದ್ದರು. ಅದರಲ್ಲೂ ಎಮ್ಮೆಗಳ ಮೈಯ ರೋಮಗಳನ್ನೆಲ್ಲಾ ತರಿದು, ಕೊಂಬಿಗೆ ಹರಳೆಣ್ಣೆ ಸವರಿ, ಇಡೀ ಮೈಗೆ ಬೇವಿನ ಎಣ್ಣೆ ಹಚ್ಚಿ, ಕುತ್ತಿಗೆಗೆ ಆಗಾಗ ಟಣ್. ಟಣ್ ಎಂಬ ಚಂದದ ಶಬ್ದದಿಂದ ಮನಸೆಳೆಯುವ ಗಂಟೆ ಕಟ್ಟಿ ಆಕರ್ಷಣೆಯ ಮಾಡುತ್ತಿದ್ದರು.
ಇವೆಲ್ಲ ನೋಡಿದರೆ ಮದುವೆಯ ಸಮಯದಲ್ಲಿ ಮಿರ ಮಿರ ಮಿಂಚುವ ರೇಶ್ಮೆ ಸೀರೆ ಉಟ್ಟು, ಮೈಮೇಲೆಲ್ಲಾ ಬಂಗಾರದ ಪರ್ವತವನ್ನೇ ಹೇರಿಕೊಂಡಿರುವ, ಮದುವೆಗೆಂದೇ ಅಲಂಕಾರ ಮಾಡಲು ಬ್ಯೂಟಿಪಾರ್ಲರಿನಿಂದ ಕರೆಸಿದ ಬ್ಯುಟಿಶಿಯನ್ ಅಲಂಕಾರ ಮಾಡಿದ ಹಳ್ಳಿಯ ಮದುವಣಗಿತ್ತಿಯಂತೆ ಈ ಎಮ್ಮೆಗಳು ಕಾಣುತ್ತಿದ್ದವು.
ಸದಾ ಹಾವು ಕಪ್ಪೆಗಳನ್ನು ಅಟ್ಟಿಸಿಕೊಂಡು ಹೋಗುವ, ಸೊಪ್ಪು ಸೊದೆಗಳು ಕೊಳೆತು ನಾರುವ ಅರಲು ಕೆಸರು ಹೊಂಡದಲ್ಲಿ ಹೊರಳಾಡಿ ತಾಲಿ ಹೊಡೆದು ದುರ್ವಾಸನೆಯ ಸಗಣಿಯನ್ನು ಮೈಗೆಲ್ಲಾ ಹಚ್ಚಿಕೊಂಡು “ದಿಮ್ ರಂಗ” ಎಂದು ಸ್ವಚ್ಚಂದವಾಗಿ ಓಡಾಡಿಕೊಂಡಿರುವ ಈ ಎಮ್ಮೆಗಳಿಗೆ ಈ ರೀತಿ ಅಲಂಕಾರ ಮಾಡಿದರೆ ಒಂತರಾ ಸುಂದರವಾಗಿ ಕಾಣುತ್ತಿದ್ದವು.
ಎಂದೆಂದೂ ಚಂದದ ತುಟಿಗೆ ರಂಗನ್ನೇ ಹಚ್ಚದ ಹಳ್ಳಿ ಯುವತಿಯ ತುಟಿಗೆಲ್ಲಾ ಕಡುಗೆಂಪು ಬಣ್ಣದ ಲಿಪ್ ಸ್ಟಿಕ್ ಬಳಿದು, ಫ್ರೆಶ್ಶಾಗಿ ಆಗಷ್ಟೇ ಇಲಿ ಹೆಗ್ಗಣ ತಿಂದು ರಕ್ತ ಬಾಯಿಗೆ ಅಂಟಿಸಿಕೊಂಡ ಮಾರ್ಜಾಲಗಳಂತೆ ಮಾಡುವ ಪಟ್ಟಣದ ಬ್ಯುಟಿಶಿಯನ್ನುಗಳ ಸಾಲಿಗೆ ಈ ವ್ಯಾಪಾರಿಗಳು ಸೇರುತ್ತಿದ್ದರು.
ಈ ಎಮ್ಮೆಗಳನ್ನು ಒಂದೆರಡು ದಿನ ಹಾಲು ಕರೆಯದೇ ಕೆಚ್ಚಲೆಲ್ಲಾ ತುಂಬಿ ಕಾಮದೇನುವಿನಂತೆ ಕಾಣುವ ಚಂದಕ್ಕೆ ಮರುಳಾಗಿ ಒಂದಕ್ಕೆರಡು ರೇಟು ನೀಡಿ ಖರೀದಿಸಿ ಮನೆಗೆ ಹೋಗಿ ಹಾಲು ಹಿಂಡಿದರೆ ಮೊದಲನೇ ದಿನ ಭರಪೂರ ಹಾಲು ನೀಡುವ ಎಮ್ಮೆ ಮಾರನೇ ದಿನದಿಂದ ರಣಚಂಡಿಯಾಗಿ ಪಟಾರ್ ಎಂದು ಮುಖಕ್ಕೆ ಹಿಂಗಾಲಿನಿಂದ ಮುಲಾಜಿಲ್ಲದೇ ಭಾರಿಸುವ ಮಹಿಷಾಸುರನ ಧೂತನಾಗಿ ಪರಿವರ್ತಿತವಾಗುತ್ತಿತ್ತು.
ನಮ್ಮ ಯಜಮಾನರೂ ಹೀಗೇ ಮೋಸ ಹೋಗಿದ್ದು. ಭಾರಿ ಮೈಕಟ್ಟು ಹೊಂದಿ ಅಗಲ ಚೂಪಾದ ಕೋಡಿನ ಎತ್ತರದ ಈ ಎಮ್ಮೆ ರಾಗಿಣಿ, ಹರಿಪ್ರಿಯಾರಂತೆ ಎತ್ತರವಾಗಿದ್ದರಿಂದ ದೇವತೆಯ ಪಾತ್ರ ವಹಿಸಿದ ರಮ್ಯಾ ರಚಿತಾರಂತೆ ಚಂದ ಕಂಡಿದ್ದರಿಂದಲೋ ಏನೋ ದಲಾಲಿಯು ಮಿರಮಿರ ಮಿಂಚುವ ಅಲಂಕಾರಕ್ಕೆ ಬೆರಗು ಮಾತಿಗೆ ಮರುಳಾಗಿ ಎಮ್ಮೆ ತಂದ ಮೇಲೇಯೇ ಗೊತ್ತಾಗಿದ್ದು ಅದರ ರಮಾದೇವಿಯ ಗಯ್ಯಾಳಿ ಬುದ್ಧಿ. ನೋಡಲು ಭೀಕರವಾಗಿ ಕಂಡರೂ ಮನೆಯ ಯಜಮಾನಿಯನ್ನು ಮಾತ್ರ ಆ ಎಮ್ಮೆ ನಂಬುತ್ತಿದ್ದರಿಂದ ಆಯಮ್ಮನೇ ಅದರ ಸಕಲ ಉಸ್ತುವಾರಿಯನ್ನು ವಹಿಸಿದ್ದರು.
ಆದರೆ ಅವರು ಕಾರ್ಯನಿಮಿತ್ತ ಮಗಳ ಮನೆಗೋ, ತವರು ಮನೆಗೋ ಹೋದಾಗಲೋ ರಾಯರಿಗೆ ಭೂತಯ್ಯನ ಮಗ ಅಯ್ಯುವಿನ ದಿನೇಶ್ ಪಾತ್ರ ವಹಿಸಿ ಎಮ್ಮೆಯಿಂದ ಹಾಲೆಂಬ ಅಮೃತವನ್ನು ಪಡೆಯಲೇ ಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತಿತ್ತು. ಅವರೂ ಸಿನಿಮಾದಲ್ಲಿ ದಿನೇಶ್ ಸೀರೆ ಉಟ್ಟುಕೊಂಡು ಹೋಗಿ ಒದೆ ತಿನ್ನುವಂತೆ ಒದೆ ತಿಂದಾದ ಮೇಲೆ ಈ ಸಾಹಸ ಕೈಬಿಟ್ಟಿದ್ದರು. ಇನ್ನು ಹಿಂಡಿ ಇಟ್ಟು ಅದು ಹಿಂಡಿ ತಿನ್ನುವಲ್ಲಿ ಮಗ್ನನಾದರೆ ಈ ಕಡೆ ಕಳ್ಳನಂತೆ ಯಾಮಾರಿಸಿ ಹಾಲು ಕರೆಯುವ ಟೆಕ್ನಿಕ್ಕು ಎಲ್ಲಾ ಸಲ ಕೆಲಸ ಮಾಡುತ್ತಿರಲಿಲ್ಲ.
ಈ ಎಮ್ಮೆಗಳಿಗೆ ಅವುಗಳ ಕರುಗಳ ಮೇಲೆ ಅಪಾರ ಮಮತೆ. ಮನೆಯಲ್ಲೇ ಅವನ ತಮ್ಮ ತಂಗಿ ಇದ್ದರೂ ಅವರು “ಬೋಂಡಾ ಮಾಡಿ ಕೊಡಮ್ಮಾ” ಎಂದು ಗೋಗೆರೆದರೂ ಒಲೆ ಮೇಲೆ ಬಾಂಡ್ಲಿ ಇಡದ ಅಮ್ಮಂದಿರು, ದೂರದ ಅಮೇರಿಕಾದಲ್ಲಿ ಕುಳಿತು ಆಗಾಗ ಕರೆ ಮಾಡುವ ಟೆಕ್ಕಿ ಮಗ ಅಥವಾ ಮಗಳು ಮನೆ ಬಂದಾಗ ಅವರಿಗೆ ತರ ತರದ ತಿಂಡಿ ಮಾಡಿ ಹಾಕಿ “ತಿನ್ನು ಮಗಾ” ಎಂದು ಮಮಕಾರ ತೋರಿಸುವ ನಮ್ಮೆಲ್ಲಾ ಮಲೆನಾಡಿನ ಹಲವು ತಾಯಂದಿರಿಗೆ “ವಿಶೇಷ” ಮಮಕಾರ ಇರುವಂತೆ ಈ ಎಮ್ಮೆಯೂ ಸಹ ತನ್ನ ಕರುವಿಗೆ ಮಮಕಾರ ತೋರಿಸುತ್ತಿತ್ತು.
ಆ ಕರು ಜಂತು ನಾಶಕ ಹಾಕದಿರುವುದರಿಂದಲೋ ಅಥವಾ ಇ ಕೊಲೈ ಬಿಳಿ ಬೇಧಿಯಿಂದಲೋ ಬಳಲಿ ಹಳ್ಳಿ ಔಷಧಿ ನಾಟದೇ ಶಿವನ ಪಾದ ಸೇರಿದ ಮೇಲೆಯೇ ಎಮ್ಮೆಯ ನಿಜ ರೂಪದ ದರ್ಶನವಾಗಿದ್ದು. ಎಮ್ಮೆ ಕುಲದ ಸಕಲ ಗುಣಾವಗುಣಗಳೂ ಈ ಎಮ್ಮೆಯ ಮೈಸೇರಿದ್ದವು. ಈ ಎಮ್ಮೆಗಳಿಗೆ ಕರು ಯಾವಾಗಲೂ ಪಕ್ಕದಲ್ಲೇ ಇರಬೇಕು. ಹೊಸಬರು ಯಾರಾದರೂ ಬಂದು ಮುದ್ದಾದ ಎಮ್ಮೆ ಕರುವಿನ ತಲೆ ನೇವರಿಸಿ ಪ್ರೀತಿ ತೋರಿಸಲು ಹೋದಲ್ಲಿ ನಿಂತಲ್ಲೇ ರಣಚಂಡಿ ಅವತಾರ ತಾಳಿ ಬುಸ್ಸೆನ್ನುತ್ತಾ ಹಾಯಲು ಬರುತ್ತಿತ್ತು.
ಕರು ಸತ್ತ ಸುಮಾರು ದಿನಗಳ ವರೆಗೆ ಹತ್ತಿರವೂ ಸೇರಿಸದ ಬೃಹತ್ ಕೋಡಿನ ಎಮ್ಮೆ ಕ್ರಮೇಣ ಸತ್ತು ಹೋದ ಕರುವಿನ ನೆನಪು ಮಾಸಿದಂತೆ ಹಿಂಡಿ ತಿನ್ನುತ್ತಾ ಹಾಲು ಕೊಡಲು ಪ್ರಾರಂಭಿಸಿತಂತೆ. ಸ್ವಲ್ಪ ದಿನಗಳಲ್ಲಿ ಒಂದೆರಡು ಸಲ ಒದ್ದ ಮೇಲೆ ಬುದ್ಧಿ ಬಂದು ಅದರ ಮುಂದೆ ಕೋಲು ಹಿಡಿದು ನಿಂತು ಬೆದರಿಸುತ್ತಿದ್ದರೆ ಹಾಲಿನ ತೊರೆ ಇಳಿಸಿ ಹಾಲು ನೀಡುತ್ತಿತ್ತಂತೆ. ಇನ್ನೂ ಕೊಸರಾಟ ಪ್ರಾರಂಭಿಸಿದ ಮೇಲೇಯೇ ಈ ಮೂಗುದಾರ ಹಾಕುವ ಐಡಿಯಾ ಹೇಳಿದ್ದು.
ಹೌದು. ಇಷ್ಟೆಲ್ಲಾ ಹರಾಮಿ ಗುಣದ ಎಮ್ಮೆಯನ್ನು ಹುಟ್ಟಿದಷ್ಟು ಹಣಕ್ಕೆ ಮಾರಿಬಿಡಬಹುದಲ್ಲ?! ಇದು ನಿಮ್ಮ ಪ್ರಶ್ನೆ. ಇದರ ಕಲ್ಯಾಣ ಗುಣಗಳು ಬಾಯಿಂದ ಬಾಯಿಗೆ ಹಬ್ಬಿ ಆಗಲೇ ಕುಖ್ಯಾತಿ ಪಡೆದಿರುವುದರಿಂದ ಸ್ಥಳೀಯವಾಗಿ ಯಾವುದೇ ಗಿರಾಕಿಗಳು ಇಲ್ಲದಿರುವುದರಿಂದ ಈ ಎಮ್ಮೆಯನ್ನು ಸಾಠಿ ಮಾಡಿ ಅದೇ ಎಮ್ಮೆಯನ್ನು ಇವರಿಗೆ ಮಾರಿದ ದಲಾಲಿಗೆ ಮಾರುವುದೂ ಕಷ್ಠವಾಗಿತ್ತು. ಇನ್ನು ಉಳಿದಿದ್ದು ಒಂದೇ ದಾರಿ.
ಕಟುಕರ ಕತ್ತಿಗೆ ನೀಡುವುದು. ಅದು ಅದರ ದಪ್ಪನೇ ಸಿಕ್ಕಾಪಟ್ಟೆ ಎಸ್ ಎನ್ ಎಫ್ ಮತ್ತು ಫ್ಯಾಟ್ ಜಾಸ್ತಿ ಇರುವ ಹಾಲನ್ನು ಹಾಕಿ ಕಾಫಿ ಕಾಯಿಸಿ ಕುಡಿದ ಋಣ ಹೊತ್ತಿರುವ ಅವರ ಅಮ್ಮನಿಗೆ ಸುತರಾಂ ಇಷ್ಟವಿರಲಿಲ್ಲ. ಆದರೂ ಅವರಿಲ್ಲದಾಗ ಅದರ ವ್ಯಾಪಾರವಾಗಿ,ಶತಾಯು ಗತಾಯು ಪ್ರಯತ್ನಿಸಿದರೂ ಸಹ, ಅದನ್ನು ಲಾರಿ ಹತ್ತಿಸಲಾಗಿದೇ ಹೋದದ್ದರಿಂದ ಎಮ್ಮೆ ಖಾಯಂ ಇವರ ಮನೆಯಲ್ಲೇ ಲಟ್ಟ ಠೊಣಪನ ತರ ಠಿಕಾಣಿ ಹೂಡಿಯಾಗಿತ್ತು.
ಈ ಎಮ್ಮೆಗೆ ಮೂಗುದಾರ ಹಾಕುವ ಸಕಲ ಸಿದ್ಧತೆಗಳೊಂದಿಗೆ ಕಾರ್ಗಿಲ್ಲಿನತ್ತ ನುಗ್ಗುವ ಸೈನಿಕನಂತೆ ನಾನು ಅವರ ಮನೆಯ ಹತ್ತಿರ ಬೈಕು ನಿಲ್ಲಿಸುತ್ತಿದ್ದಂತೆ ನನ್ನ ಬೈಕಿನ ಶಬ್ಧದ ಶಬ್ಧ ಕೇಳಿಯೇ ಎಮ್ಮೆಗೆ ತಳ ಮಳ ಪ್ರಾರಂಭವಾಗಿತ್ತು ಅನಿಸುತ್ತದೆ. ಬುಸು .. ಬುಸು. ದರ.. ಬರ. ಶಬ್ಧ ಮಾಡುತ್ತಾ ಸೊಪ್ಪು ಹಾಕಿದ್ದ ಕೊಟ್ಟಿಗೆಯಲ್ಲಿ ಕಟ್ಟಿದ ಹಗ್ಗವನ್ನು ತುಂಡರಿಸುವಂತೆ ಎಳೆದಾಡುತ್ತಿತ್ತು. ಆಲದ ಮರದಂತೇ ವಿಶಾಲವಾಗಿ ದಶದಿಕ್ಕುಗಳಿಗೂ ಹರಡಿಕೊಂಡಂತಿದ್ದ ಅದರ ಕೋಡನ್ನು ಹತ್ತಿರವಿದ್ದ ಗೋಡೆಗೆ ಸದಾ ಉಜ್ಜುತ್ತಿದ್ದರಿಂದಲೋ ಏನೋ ಮಹಾಕಾಳಿಯ ಶೂಲದಷ್ಟು ಹರಿತವಾಗಿದ್ದವು.
ಕಣ್ಣುಗಳು ಗಾಬರಿಯಿಂದ ಹಿರಣ್ಯಕಶ್ಯಪುವಿನ ಕಣ್ಣಿನ ಹಾಗೇ ಗರ ಗರ ತಿರುಗುತ್ತಾ ಭಯ ಬೀಳಿಸುವ ಹಾಗಿದ್ದವು. ಬಲವಾದ ಪ್ಲಾಸ್ಟಿಕ್ ದಾಬಿನಲ್ಲಿ ಕಟ್ಟಿದ್ದರಿಂದ ಬಿಚ್ಚಿಕೊಂಡು ಹೋಗುವ ಸಾಧ್ಯತೆ ಕಡಿಮೆ ಇತ್ತು. ನಾನೂ ಸಹ ಧೈರ್ಯದಿಂದ ದಪ್ಪನೇ ಕಣ್ಣಿಯ ಹಗ್ಗ ತೆಗೆದುಕೊಂಡು ಅದರ ಎರಡೂ ಕೊಂಬಿನ ಸುತ್ತಲೂ ಹಾಕಲು ತೀವ್ರವಾಗಿ ಪ್ರಯತ್ನಿಸಿದೆ. ಆದರೆ ಅದರ ಅಗಲವಾದ ಕೊಂಬುಗಳು ನನ್ನ ಈ ಪ್ರಯತ್ನಕ್ಕೆ ತಣ್ಣೀರೆರಚುತ್ತಾ ಇದ್ದವು. ಈ ಎಮ್ಮೆಗಳೇ ಹೀಗೆ. ಹೆದರಿಕೆಯಿಂದಲೇ ಸಕಲ ಆಟ ಆಡಿ ಕೊನೆಗೆ ಸುಸ್ಥಾಗಿ ಬಾಯಿ ಅಗಲವಾಗಿ ತೆಗೆದುಕೊಂದು ನಾಲಿಗೆ ಹೊರಹಾಕಿ ನಿಂತು ಬಿಡುತ್ತವೆ.
ಎಷ್ಟೊತ್ತು ಆಟವಾಡೀತು ? ಎಂದು ನಾನೂ ಸಹ ಅದರ ಕೊಂಬಿನ ಮಧ್ಯೆ ಹಗ್ಗ ಹಾಕುವ ಪ್ರಯತ್ನ ಪ್ರಯತ್ನ ಬಿಡಲೇ ಇಲ್ಲ. ಜೊತೆ ಇದ್ದ ಆ ಮನೆಯ ಆಳೂ ಸಹ ಅದರ ಮುಂದಿನ ಎರಡೂ ಕಾಲುಗಳನ್ನು ಕಟ್ಟಿ ಹಾಕಿ ಆಟ ನಡೆಯದಂತೆ ಮಾಡಲು ಪ್ರಯತ್ನಿಸಿದ. ಆದರೆ ಹತ್ತಿರ ಹೋಗಲು ಬಿಟ್ಟೀತೇ ಎಮ್ಮೆ ? ನಮ್ಮೆಲ್ಲಾ ಪ್ರಯತ್ನಗಳೂ ಮುಗಿದು ನಮಗೂ ಸುಸ್ತಾಯಿತು. ಆದರೆ ಸೋಲೊಪ್ಪುವ ಪ್ರಶ್ನೆಯೇ ಇರಲಿಲ್ಲ. ಇಷ್ಟೆಲ್ಲಾ ಮಾಡಿದರೂ ಮನುಷ್ಯರನ್ನೇ ಕಾಣದೇ ಕಾಡು ಪ್ರಾಣಿಯಂತಿರುವ ಈ ಎಮ್ಮೆಗೆ ಮೂಗುದಾರ ಹಾಕಿ ಬಗ್ಗಿಸಲೇ ಬೇಕು ಎಂದು ನಾನು ಮತ್ತು ಅವರ ಮನೆಯ ಆಳು ಆಗಲೇ ತೀರ್ಮಾನಿಸಿ ಆಗಿತ್ತು.
ಈ ಸಲ ಎಮ್ಮೆಯ ಕಾಲ ಬುಡಕ್ಕೆ ಒಂದಿಷ್ಟು ಹುಲ್ಲು ಹಾಕಿಕೊಂಡು ಸಾಕಷ್ಟು ಚಾಕಚಕ್ಯತೆಯಿಂದ ಅದರ ಕೋಡುಗಳೆರಡಕ್ಕೆ ಹಗ್ಗ ಹಾಕಿಯೇ ಬಿಟ್ಟೆ. ಸರಕ್ಕನೇ ಅದರ ಮೂತಿಯ ಸುತ್ತಲೂ ಬಿಗಿದು ಸರಗುಣಿಕೆ ಸರ್ರನೇ ಎಳೆದು ಪಕ್ಕದ ಕಂಬಕ್ಕೆ ಕಟ್ಟಿಯೇ ಬಿಟ್ಟೆ. ಇದೇ ಸಂದರ್ಭವೆಂದು ಆಳು ಸಣ್ಣ ಹಗ್ಗದಿಂದ ಅದರ ಮುಂದಿನ ಕಾಲೆರಡನ್ನೂ ಹತ್ತಿರ ಬರುವಂತೆ ಬಿಗಿದು ಕಟ್ಟಿದ.
ಒಟ್ಟಿನಲ್ಲಿ ಎಮ್ಮೆ ನಮ್ಮ ತಿಲಕಾಷ್ಠವಲ್ಲದ ಮಹಿಷ ಬಂಧನದಲ್ಲಿ ಸೆರೆಯಾಯ್ತು. ಅದರ ಹಾರಾಟ ಜಿಗಿದಾಟದ ಈ ಸಮಯದಲ್ಲಿ ನಮ್ಮ ಮೈಗೆಲ್ಲಾ ಅದು ಚಿರಿ.. ಚಿರಿ ಎಂದು ಪದೇ ಪದೇ ಹಾರಿಸುವ ಮೂತ್ರದಿಂದ ಮತ್ತು ಹೆದರಿಕೆಯಿಂದ ಅದು ಹಾಕಿದ ತೆಳ್ಳಗಿನ ಸಗಣಿ, ಸಿರ್ಸಿ ಯೆಲ್ಲಾಪುರ ಬದಿಯ ಹವ್ಯಕ ಅತ್ಗೇರುಗಳು ಬೆಳಿಗ್ಗೆ ಮಾಡುವ ತೆಳ್ಳವ್ವು ದೋಸೆ ಹಿಟ್ಟಿನಷ್ಟು ನೀರಾಗಿದ್ದರಿಂದ ಇವೆರಡರಿಂದ ನಮ್ಮ ಮೈಯೆಲ್ಲಾ ಸಿಂಚನವಾಗಿ ನಾವಿಬ್ಬರು ದುರ್ವಾಸನೆಯ ಕೂಪವಾದೆವು. ನಾವಂದು ಕೊಂಡ ಮೂಗುದಾರ ಹಾಕುವ ಅಮೃತ ಘಳಿಗೆ ಸನಿಹವಾಗಿದ್ದರೆಂದಲೋ ಏನೋ ನನ್ನ ಉತ್ಸಾಹ ಇಮ್ಮಡಿಯಾಯಿತು. ಇದೇ ಮುಂದೆ ದೊಡ್ಡ ಅನಾಹುತಕ್ಕೆ ಎಡೆ ಮಾಡಿಕೊಡುತ್ತದೆಯೆಂಬುದು ಅನಾಹುತವಾದ ಮೇಲೆಯೇ ಗೊತ್ತಾಗಿದ್ದು.
ನಾನು ನನ್ನ ಸಕಲ ಪರಿಕರಗಳನ್ನು ಅತ್ತು ಅದಕ್ಕೆಂದೇ ನನ್ನ ಶಿಷ್ಯ ವಿಶೇಷವಾಗಿ ಸಿದ್ಧ ಪಡಿಸಿದ ಮೂಗುದಾರವನ್ನು ಅರ್ಜುನನು ರಣರಂಗದಲ್ಲಿ ಕರ್ಣನ ಮೇಲೆ ಸರ್ಪಾಸ್ತ್ರವನ್ನು ಬಿಡುವ ಮೊದಲು ಮಂತ್ರಿಸುವಂತೆ ತದೇಕಚಿತ್ತದಿಂದ ತುದಿಯನ್ನು ಹೊಸೆದು ಡಬ್ಬಣದಲ್ಲಿ ಪೋಣಿಸಿ ಎಮ್ಮೆಯ ಮೂತಿಯನ್ನು ಅದು ಅಕ್ಕಚ್ಚು ಕಲಗಚ್ಚು ಕುಡಿಯುವ ದೋಣಿಯಂತ ಕಾಲುವೆಯ ಅಂಚಿಗೊತ್ತಿ ಹಿಡಿದು ಅದರ ಮೂಗಿನ ಹೊರಳೆಗಳ ನಡುವೆ ಇರುವ ಮೆತ್ತನೇ ಸ್ಥಳವನ್ನು ಬೆರಳಿನಲ್ಲಿ ಗುರುತಿಸಿಕೊಂಡೆ.
ಮೂಗಿಗೆ ಕೈಹಾಕಿದ ಕೂಡಲೇ ಎಮ್ಮೆಗೆ ಗುಳು ಗುಳು ಅನಿಸಿತೋ ಏನೋ, ಸಕಲ ಶಕ್ತಿಯನ್ನೂ ಹಾಕಿ “ಡ್ರೀ….ಸ್” ಎಂದು ಬಲವಾಗಿ ಸೀನಿತು. ನನ್ನ ಮುಖ ಎಮ್ಮೆಯ ಮೂತಿಗೆ ಬಹಳ ಹತ್ತಿರವಿದ್ದುದರಿಂದ ಮೂಗಿನಲ್ಲಿರುವ ಲೋಳೆ ಮಿಶ್ರಿತವಾದ ಸ್ರಾವಗಳೆಲ್ಲಾ ನನ್ನ ಮುಖ, ಮೂಗು, ಬಾಯಿ ಎಲ್ಲಾ ಕಡೆ ಸ್ಪ್ರೇ ಆಯಿತು.
ಛಲ ಬಿಡದ ಮಲ್ಲನಾದ ನಾನು ಮತ್ತು ನನ್ನ ನಿರ್ಧಾರಕ್ಕೆ ದ್ವಿಗುಣ ಸಂಕಲ್ಪ ಹೊಂದಿದ ಆಳು, ಸಕಲ ಶಕ್ತಿಯನ್ನೂ ಹಾಕಿ ಮೂಗಿನ ಹೊರಳೆಯ ಮಧ್ಯದ ಜಾಗದಲ್ಲಿ ಡಬ್ಬಣದಂತ ಟ್ರೊಕಾರ್ ಒತ್ತಿ ತೂತು ಮಾಡಿ, ಮೂಗುದಾರದ ತುದಿಯನ್ನು ಹಿಡಿದು ಎಳೆದ ಹೊಡೆತಕ್ಕೆ ದಾರ ಪಾರಾಗಿ ಈ ಕಡೆ ಬಂದಿತು. ನಾನು ದಾರದ ಎರಡೂ ತುದಿಗಳನ್ನು ಎಮ್ಮೆಗೆ ಮಾಂಗಲ್ಯ ಕಟ್ಟುವಂತೆ ಕೊಂಬಿನ ಮಧ್ಯೆ ತಂದು ಎರಡು ಗಂಟು ಹಾಕಿ ಕೊನೆಯ ಮತ್ತು ಮೂರನೆಯ ಗಂಟು ಇನ್ನೇನು ಹಾಕಬೇಕು.., ಅಷ್ಟರಲ್ಲಿಯೇ ಆಗಿ ಹೋಯಿತು ಅನಾಹುತ !.
ಇಷ್ಟು ಹೊತ್ತೂ ಎಮ್ಮೆಯ ಮೂತಿಗೆ ಹಾಕಿದ ಹಗ್ಗವನ್ನು ಎಳೆದು ಹಿಡಿದ ಯಜಮಾನರು ಕೈಸೋತೋ ಅಥವಾ ನಮ್ಮ ಮೂಗುದಾರ ಹಾಕುವ ಕಾಯಕ ಮುಗಿಯಿತೆಂದೋ ಹಗ್ಗವನ್ನು ಸಡಿಲ ಬಿಟ್ಟರು ಅಂತ ಕಾಣಿಸುತ್ತದೆ. ಮೊದಲೇ ನೋವಿನಿಂದ ನಲುಗುತ್ತಿದ್ದ ಮತ್ತು ಮಹಾ ರೋಷದಿಂದಿರುವ ಅದರ ಸಮಯಕ್ಕಗಿ ಕಾಯುತ್ತಿದ್ದ ಎಮ್ಮೆ ನಭದೆಡೆ ಚೂಪಾದ ಕೋಡುಗಳನ್ನು ಹೊಂದಿರುವ ಬಂಡೆಯಂತೆ ಘಟ್ಟಿಯಾದ ತಲೆಯನ್ನು ಒಮ್ಮೆಯೇ ಸ್ಪ್ರಿಂಗಿನಂತೆ ಚಿಮ್ಮಿ ಬಿಟ್ಟಿತು.
ಇಂತಹ ತುರ್ತು ಪರಿಸ್ಥಿತಿಯನ್ನು ನಿರೀಕ್ಷಿಸದ ನಾನು ಮೂರನೇ ಗಂಟು ಹಾಕುವಲ್ಲಿ ಮಗ್ನನಾಗಿದ್ದೆ. ನನ್ನ ಕಾಲುಗಳ ಸಂದಿಯಲ್ಲಿ ಸಿಮೆಂಟಿನ ಗೋಡೆಗೆ ಪದೇ ಪದೇ ತಿಕ್ಕಿ ಚೂಪಾದ ಕೊಂಬುಗಳು “ಸಳ್” ಎಂದು ಹೊಕ್ಕಿರಬೇಕು. ನನ್ನ ಪ್ಯಾಂಟು ಅದರ ಮೇಲೆ ಹಾಕಿದ ಮಳೆಕೋಟು ಎರಡು ಒಂದೇ ಸಲಕ್ಕೆ ಸೀಳಿ ಹೋದವು. ಎಮ್ಮೆಯು ಚಿಮ್ಮಿದ ರಾಕೆಟ್ ವೇಗಕ್ಕೆ ಸಿಲುಕಿ ಎಮ್ಮೆಯಿಂದ ಮೂರು ಮಾರು ದೂರದಲ್ಲಿ ಸೊಪ್ಪಿನ ರಾಶಿಯಲ್ಲಿ ರಭಸದಿಂದ ಹಾರಿ ಬಿದ್ದೆ. ಸೊಪ್ಪಿನ ಕೊಟ್ಟಿಗೆಯಾಗಿದ್ದರಿಂದಲೋ ಏನೋ ಸೊಂಟ ಮುರಿದಿಲ್ಲ ಅನಿಸಿದ್ದು ಎದ್ದು ಕುಳಿತು ಕೊಳ್ಳಲು ಸಾಧ್ಯಾವಾಗಿದ್ದರಿಂದ.
ಗಾಬರಿಯಾದ ಯಜಮಾನರು ಮತ್ತು ಆಳು ನನ್ನನ್ನು ಬಂದೆತ್ತಿದರು. ಏನಾದರೂ ಆಯ್ತಾ ಡಾಕ್ಟ್ರೇ.. ಎಂದು ಅವರು ಕಕ್ಕುಲತೆಯಿಂದ ಕಾಳಜಿಯಿಂದ ಕೇಳುವ ಶಬ್ಧ ನನಗೆ ಎಲ್ಲೋ ಗುಹೆಯಿಂದ ಕ್ಷೀಣವಾಗಿ ಹೊರಬರುವ ಸನ್ಯಾಸಿಯು ಹೇಳುವ ’ಓಂ” ಮಂತ್ರದಂತೆ ಕೇಳಿಸಹತ್ತಿತು. ಎಲ್ಲೆಲ್ಲೋ ಅಸಾಧ್ಯ ನೋವು ಇದ್ದರೂ ಇದನ್ನು ವ್ಯಕ್ತಪಡಿಸಿದರೆ ನಾನು ಸೋತಂತೆ ಎಂದುಕೊಂಡು “ಹೆ… ಹೆ.. ಏನೂ ಆಗಿಲ್ಲ. ಸ್ವಲ್ಪ ಮೂಗ ಪೆಟ್ಟು ಅಷ್ಟೇ.. ಎಂದು ದೇಶಾವರಿ ನಗೆ ಬೀರುತ್ತಾ ತಡವರಿಸುತ್ತಾ ಎದ್ದೆ.
ಸಂಗೀತದವರು ಕಚೇರಿ ಮುಗಿದ ನಂತರ ಅವರ ತಬಲಾ ಹಾರ್ಮೋನಿಯಂ ಜೋಡಿಸಿದಂತೆ ನನ್ನ ಸಕಲ ಸರಂಜಾಮುಗಳನ್ನು ವಸ್ತುಗಳನ್ನೂ ಆಳು ಜೋಡಿಸಿ ನನ್ನ ಬ್ಯಾಗಿಗೆ ಹಾಕಿದ. ಎಮ್ಮೆಗೆ ನೋವು ಕಡಿಮೆ ಮಾಡುವ ಚುಚ್ಚುಮದ್ದು ಮತ್ತು ನಂಜುನಿವಾರಕ ನೀಡಬೇಕಿತ್ತು. ಆದರ ರಂಪಾಟದಿಂದ ಬೇಸರಗೊಂಡ ಯಜಮಾನರು “ನೋವಿನಿಂದ ನರಳಲಿ ಬಿಡ್ರೀ.. ದರೀದ್ರ ಎಮ್ಮೆ” ಎಂದು ಶಪಿಸಿದರು. ಬೈಕು ಸ್ಟಾರ್ಟ್ ಮಾಡಿದ ನಾನು ಯಜಮಾನರು “ಡಾಕ್ಟ್ರೇ ಆಸ್ರಿಗೆ ಏನ್ ಮಾಡ್ಸ್ಲಿ.. ಟೀನಾ ಕಾಫೀನಾ” ಎಂದರೂ ಕೇಳಿಸಿಕೊಳ್ಳದೇ ಬೈಕಿನ ಕ್ಲಚ್ ಬಿಟ್ಟು ಅಕ್ಸಲರೇಟರ್ ಒತ್ತಿದೆ.
ಸಣ್ಣ ಜಿಟಿ ಜಿಟಿ ಮಳೆ ಆಗಲೇ ಪ್ರಾರಂಭವಾಗಿತ್ತು. ಸುಮಾರು ಒಂದೆರಡು ಕಿಲೋ ಮೀಟರು ದೂರ ಬಂದಿರಬೇಕು. ಬಲಗಡೆಯ ಮೊಣಕಾಲಿನ ಹತ್ತಿರ ಒಂತರಾ ಬಿಸಿ..ಬಿಸಿ.. ಆದ ಹಾಗೇ ಅನಿಸಿತು. ಮಳೆಯಂಗಿಯ ತೂತಿನಿಂದ ನೀರು ಹೊಕ್ಕಿರಬೇಕು. ಶರೀರದ ತಾಪಕ್ಕೆ ಬಿಸಿಯಾಗಿರಬಹುದು ಎಂದುಕೊಂಡು ಇನ್ನೊಂದೆರಡು ಕಿಲೋಮೀಟರು ಬೈಕು ಓಡಿಸಿದೆ. ತಲೆ ಎಲ್ಲಾ ಸುತ್ತಿದ ಹಾಗೇ ಕಣ್ಣೆಲ್ಲಾ ಮಂಜಾದ ಹಾಗೇ ಆಯಿತು. ಮೈ ಕೈನ ಕಣಗಳೆಲ್ಲಾ ನೋವಿನಿಂದ ಕಥೆ ಹೇಳುತ್ತಿದ್ದವು.
ಬೈಕಿನ ಫುಟ್ ರೆಸ್ಟಿನ ಮೇಲಿದ್ದ ಕಾಲುಗಳನ್ನು ಗಮನಿಸಿಕೊಂಡೆ. ಏಕೋ ಮಳೆಯ ನೀರಿನ ಜೊತೆ ಕೆಂಪು ಮಿಶ್ರಣ ಹೊರಬರುತ್ತಿದ್ದ ಹಾಗನಿಸಿತು. ಸ್ವಲ್ಪ ದೂರ ಹೋಗಿ ರಸ್ತೆ ಬದಿಯಲ್ಲಿ ಬೈಕಿನ ಸ್ಟ್ಯಾಂಡ್ ಹಾಕಿ ನಿಲ್ಲಿಸಿದೆ. ಮಳೆಯ ಪ್ಯಾಂಟು ಮತ್ತು ಕಾಟನ್ ಪ್ಯಾಂಟುಗಳೆರಡು ರಕ್ತದಿಂದ ತೋಯ್ದು ಹೋಗಿದ್ದವು. ಮಲೆನಾಡಿನಲ್ಲಿ ಮಳೆಗಾಲದಲ್ಲಿ ರಕ್ತ ಹೀರುವ ಜಿಗಣೆ ಉಂಬಳ ಹೋಗಬಾರದ ಕೇಂದ್ರ ಸರ್ಕಾರದ ಬಳಿ ಹೋಗಿ ಕಚ್ಚಿರುವುದರಿಂದ ಹೀಗಾಗಿರಬಹುದು ಅಂದುಕೊಂಡೆ.
ಆದರೆ ಈ ಪ್ರಮಾಣದಲ್ಲಿ ರಕ್ತ ನಿಲ್ಲದೇ ಹೋಗುವುದು ಜಿಗಣೆ ಕಡಿತದಿಂದಲ್ಲ. ಇದು ಎಮ್ಮೆಯ ಚೂಪಾದ ಕೋಡಿನ ಪ್ರತಾಪ ಎಂದು ತಕ್ಷಣಕ್ಕೆ ಹೊಳೆಯಿತು. ಬವಳಿ ಬಂದ ಹಾಗಾದರೂ ನೇರವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದೆ. ವೈದ್ಯರ ಹತ್ತಿರ ಹೋಗಿ ಘಟನೆ ವಿವರಿಸಿ ನನ್ನ ಸಕಲ ಅಂಗಾಂಗಗಳನ್ನು ತೀವ್ರವಾದ ತಪಾಸಣೆಗೆ ಒಳಪಡಿಸುವಂತೆ ಬೇಡಿಕೆ ಇಟ್ಟೆ.
ನನ್ನ ಸ್ನೇಹಿತರಾದ ಅವರು ಡ್ರೆಸಿಂಗ್ ಮಾಡುತ್ತಾ “ಏನ್ ಡಾಕ್ಟ್ರೇ.. ಡಕಾಯಿತರು ಚೂರಿ ಹಾಕಿದ್ರಾ? ತಾಳಗುಪ್ಪದ ರೈಲಿಗೆ ಗುದ್ದಿದ್ರಾ? ಅಥ್ವಾ ಲಿಂಗಿನಮಕ್ಕಿಗೆ ಟರ್ಬೈನುಗಳನ್ನು ಸಾಗಿಸುವ ಯಮಗಾತ್ರದ ಲಾರಿಗೆ ಗುದ್ದಿದ್ರಾ? ಈ ಪರಿ ಗಾಯವಾಗಿದೆ?“ ಎಂದು ಕಕ್ಕುಲತೆ ಮೆರೆದರು. ನನ್ನ ತೊಡೆಯ ಮೇಲ್ಬಾಗದಲ್ಲಿ ಸುಮಾರು ಮೂರು ಇಂಚು ಚೂಪಾದ ಚಾಕುವಿನಿಂದ ತಿವಿದಂತೆ ಗಾಯವಾಗಿ ಅದರಿಂದ ಸಾಕಷ್ಟು ರಕ್ತ ಹರಿದಿತ್ತು.
ಅದಕ್ಕೆ ಡ್ರೆಸಿಂಗ್ ಮಾಡಿ ಆಳವಾದ ಗಾಯಕ್ಕೆ ಹೊಲಿಗೆ ಹಾಕಿ, ಪೌಡರು ಇಂತಹದ್ದೆಲ್ಲಾ ಮೆತ್ತಿ, ಟಿಟಿಯಂತ ಎಂತದೋ ಇಂಜೆಕ್ಷನ್ ಚುಚ್ಚಿ ಹದಿನೈದು ದಿನ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಹೇಳಿ ಕಳಿಸಿದರು. ಎಲ್ಲಿಯ ವಿಶ್ರಾಂತಿ?! ಮನೆಗೆ ಹೋಗಿ ಮಲಗಿ ಒಂದು ವಾರದವರೆಗೆ ಸ್ವಲ್ಪ ಸುಧಾರಿಸಿಕೊಂಡು ಗಾಯ ವಾಸಿಯಾಗಿದೆ ಎಂದು ಖಚಿತ ಮಾಡಿಕೊಂಡು ನನ್ನ ಚಟುವಟಿಕೆಗಳನ್ನು ಎಂದಿನಂತೆ ಮುಂದುವರೆಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



