Connect with us

ಲೈಫ್ ಸ್ಟೈಲ್

ರೌಡಿ ಎಮ್ಮೆ ಮತ್ತದರ ಮೂಗುದಾರ..!

Published

on

  • ಡಾ.ಎನ್.ಬಿ.ಶ್ರೀಧರ, ಶಿವಮೊಗ್ಗ

ದೂರವಾಣಿಯ ಆ ಕಡೆಯಿಂದ “ ಡಾಕ್ಟ್ರೇ.. ಈ ಕಡೆ ಬರುವಾಗ ನಮ್ಮನೆ ರೌಡಿ ಎಮ್ಮೆಗೆ ಮೂಗುದಾರ ತರಲು ಮರೀಬೇಡಿ” ಅಂದಾಗಲೇ ನನಗೆ ನೆನಪಾಗಿದ್ದು ಅವರ ಮನೆಯ ರೌಡಿ ಶೀಟರ್ ಮಹಿಷಿಯ ಅಪರಾವತಾರದ ಎಮ್ಮೆಗೆ ಮೂಗುದಾರ ಹಾಕಿ ನಿಯಂತ್ರಿಸಲು ನಾನೇ ಹೇಳಿದ್ದ ಸಲಹೆಯನ್ನು ಅನುಷ್ಠಾನಕ್ಕೆ ತರುವುದನ್ನು ಮರೆತಿದ್ದು. ಆಗಲೇ ಸಣ್ಣದಾಗಿ ಮಳೆಗಾಲ ಪ್ರಾರಂಭವಾಗಿದ್ದರಿಂದ ದನ ಎಮ್ಮೆಗಳಿಗೆ ಗಂಟಲು ಬೇನೆ ಲಸಿಕೆಯನ್ನು ಹಾಕುವ ಕಾರ್ಯದಲ್ಲಿ ಬ್ಯುಸಿಯಾಗಿದ್ದರಿಂದ ಇಂತಹದ್ದೊಂದು ಕಾರ್ಯವಿದೆ ಎಂಬುದೇ ನನ್ನ ಮಸ್ತಿಷ್ಕದಿಂದ ಆವಿಯಂತೆ ಮಾಯವಾಗಿತ್ತು.

ನನ್ನ ಶಿಷ್ಯನಿಗೆ “ ಒಂದ್ ಮೂಗುದಾರ ಸೆಟ್ ರೆಡಿ ಮಾಡೋ.. ಆ ದಿನದಿಂದ ಹೇಳ್ತಾ ಇದೀನಿ. ನೆನಪೇ ಮಾಡ್ಲಿಲ್ಲ ನೀನು” ಎಂದು ನಾನು ಮರೆತಿರುವ ಈ ವಿಷಯವನ್ನು ಆತನ ತಲೆಗೆ ಕಟ್ಟಿದೆ. ಆ ದಿನ ಶನಿವಾರವಾದ್ದರಿಂದ ಆತನಿಗೆ ಅನೇಕ “ಮಹತ್ವ”ದ ಕೆಲಸಗಳಿರುವುದರಿಂದ “ಸಾರ್. ಈವತ್ತು ನಾನು ಬರಕ್ಕಾಗಲ್ಲ. ತುಂಬಾ ಕೆಲ್ಸ ಇದೆ”.. ಎಂದು ನಾನು ಹೇಳುವ ಮೊದಲೇ ಪೂರ್ವನಿರೀಕ್ಷಿತ ಜಾಮಿನು ಅರ್ಜಿ ಹಾಕಿಕೊಂಡು ನಾನೊಬ್ಬನೇ ಈ ಕೆಲಸಕ್ಕೆ ಹೊರಡುವುದು ಎಂದು ತೀರ್ಮಾನಿಸಿಬಿಟ್ಟ.

ಸಂತೆಯ ದಿನ ಕುದುರುವ ಆತನ ಇಂತಹ ಅನೇಕ ವ್ಯವಹಾರಗಳ ಬಗ್ಗೆ ಸಕಲವನ್ನೂ ಅಮೂಲಾಗ್ರವಾಗಿ ತಿಳಿದಿದ್ದ ನಾನು ಅವನ ಬರುವಿಕೆಯ ಬಗ್ಗೆ ಅಷ್ಟೇನೂ ಆಸಕ್ತಿ ವಹಿಸಲಿಲ್ಲ. ನಿಜ. ಎತ್ತುಗಳಿಗೆ ಬಯಲು ಸೀಮೆಯ ಕಡೆ ಮೂಗುದಾರ ಇರದೇ ಇರುವುದನ್ನು ನೋಡಿದರೆ ಮದುವೆಯಾಗಿ ಮಂಗಳ ಸೂತ್ರವಿಲ್ಲದೇ ಓಡಾಡುವ ಬೆಂಗಳೂರಿನ ಕೆಲ ಹೆಣ್ಣುಮಕ್ಕಳು ನೆನಪಾಗಿ ಬಿಡುತ್ತಾರೆ. ಮಲೆನಾಡಿನಲ್ಲಿ ಗೋಪಾಲಕರು ಮೂಗುದಾರ ಹಾಕಿ ಜಾನುವಾರುಗಳನ್ನು ನಿಯಂತ್ರಿಸುವುದು ಕಡಿಮೆಯೇ ಸರಿ.

ಒಂದೋ ಜಾನುವಾರು ತೀರಾ ಹರಾಮಿಯಾಗಿ ಹಿಡಿತ ತಪ್ಪಿ ಹೋಗಿ ಬೆಂಗಳೂರು ಸೇರಿ ಹೊಟೇಲಿನಲ್ಲಿ ಕೆಲಸ ಮಾಡುವ ಹವ್ಯಕ ಮಾಣಿಯಂತೆ ಆಗಿರಬೇಕು ಇಲ್ಲವೇ ಸುಖಾ ಸುಮ್ಮನೇ ಬಿಲ್ಡಪ್ ಕೊಡುವ ಚಂದದ ಮಾಡರ್ನ್ ಹೆಣ್ ಹೈಕಳಂತೆ ಸ್ಟೈಲ್ ಮಾಡುವ ಬಿನ್ನಾಣಗಿತ್ತಿಯ ತರದ ದನಗಳನ್ನು ಹತೋಟಿಯಲ್ಲಿಡುವ ಬ್ರಹ್ಮಾಸ್ತ್ರ ಇದಾಗಿತ್ತು. ಬಯಲು ಸೀಮೆಯಲ್ಲೆಲ್ಲ ಈ “ಮೂಗುದಾರ” ಹಾಕುವ ಯಕಶ್ಚಿತ್ ಕಾರ್ಯಕ್ಕೆಲ್ಲ ಪಶುವೈದ್ಯರನ್ನು ಕರೆಯುತ್ತಲೇ ಇರಲಿಲ್ಲ.

ಹೋರಿಗಳ ಬೀಜ ತೆಗೆಯುವುದು, ದನದ ಕಾಲಲ್ಲಿರುವ ಹುಳವನ್ನು ಚಿಮ್ಮಟ ಹಾಕಿ ತೆಗೆಯುವುದು, ಮೂಗುದಾರ ಹಾಕುವುದು ಇದೆಲ್ಲಾ ಕಾರ್ಯ “ಕಂಪೌಂಡರ್” ಎಂದು ನಾಮಾಂಕಿತರಾದ ಜವಾನರೇ ಸದ್ದುಗದ್ದಲವಿಲ್ಲದೇ ಸಾಂಗೋಪಾಂಗವಾಗಿ ನೆರವೇರಿಸಿಬಿಡುತ್ತಿದ್ದರು.

ಗೋಕರ್ಣದ ದೊಡ್ದ ಭಟ್ಟರುಗಳು ದೊಡ್ಡ ದೊಡ್ಡ ಯಾಗ ಯಜ್ಞಗಳನ್ನು ನಡೆಸುವಾಗ ದರ್ಭೆ ಆಯುವುದು,ಹೋಮದ ಬೂದಿ ತೆಗೆಯುವುದು, ಚಿಲ್ಲರೆ ನಾಣ್ಯಗಳನ್ನು ಎಣಿಸುವುದು, ಬಾಳೆಕಂಬ ಹೊಂದಿಸುವುದು ಇತ್ಯಾದಿ ತಾಟಿ ಪಿಟಿ ಕೆಲಸಗಳಿಗೆ ಮರಿ ಭಟ್ಟರುಗಳನ್ನು ತೊಡಗಿಸಿ ತಾವು ಮಾತ್ರ ಗತ್ತಿನಿಂದ ಮಂತ್ರಗಳನ್ನು ಪಠಿಸುವಂತೆ ಈ ಮೂಗುದಾರ ಹಾಕುವ ಕೆಲಸವನ್ನು ಕೆಲ ಪಶುವೈದ್ಯರು ಅಸಡ್ಡೆಯಿಂದ ಗಮನಿಸಿ ದಿವ್ಯ ನಿರ್ಲಕ್ಷ್ಯದ ನೋಟ ಬೀರುತ್ತಿದ್ದರು.

ಬಯಲು ಸೀಮೆಯ ಆಸ್ಪತ್ರೆಗಳಲ್ಲಿ ಕಂಪೌಂಡರ್ ಅಲ್ಲಲ್ಲ.. ಜವಾನರು ತರಹೇವಾರಿ ಬಣ್ಣ ಬಣ್ಣದ ಕಾಟನ್, ನೈಲಾನ್, ಪ್ಲಾಸ್ಟಿಕ್ ಮೂಗುದಾರಗಳನ್ನು ಹುಬ್ಬಳ್ಳಿಯಿಂದ ತಂದು ಸ್ಟಾಕು ಮಾಡಿಕೊಂಡು ನಾನಾ ತರದ ರೇಟನ್ನು ಕುದುರಿಸಿ ರೈತರ ಎತ್ತುಗಳು ಹೋರಿಗಳಿಗೆ ಹಾಕುವುದು ಗೊತ್ತಿದ್ದರೂ ಸಹ ನಾವೆಲ್ಲಾ ಈ ವ್ಯವಹಾರಕ್ಕೂ ನಮಗೂ ಏನೂ ಸಂಬಂಧವಿಲ್ಲದಂತೆ ಸುಮ್ಮನಿರುತ್ತಿದ್ದೆವು. ಅದರಲ್ಲೂ ಹೋರಿಗಳ ಸಂತಾನ ಹರಣ ಕೇವಲ ಕಂಪೌಂಡರುಗಳ ಕಾರ್ಯವೆಂದೇ ಬಹುತೇಕರ ಭಾವನೆ.

ಹೋರಿಗಳನ್ನು ಕೆಡವಿಕೊಂಡು ಅವುಗಳ ವೃಷಣ ಚೀಲದ ಬುಡವನ್ನು ಬರ್ಡಿಜ಼ೋ ಕ್ಯಾಸ್ಟ್ರೇಟರ್ ಎಂಬ ಬಲೀಷ್ಠವಾದ ಇಕ್ಕಳದ ಮಧ್ಯೆ ಸಿಲುಕಿಸಿ ವೃಷಣಗಳಿಗೆ ಸರಬರಾಜಾಗುವ ರಕ್ತವನ್ನು ಒಮ್ಮೆಯೇ ಬಂದು ಮಾಡಿ ಅದು ಅನುತ್ಪಾದಕವಾಗಿ ಸೊರಗಿ ಹೋಗುವಂತೆ ಮಾಡುವುದಕ್ಕೆ ಗಿಡದ ಸಂತಾನವನ್ನು ಹೆಚ್ಚಿಸುವ ಕಲೆಯಾದ “ಕಸಿ” ಮಾಡುವುದು ಎಂದು ಅದ್ಯಾರು ಹೆಸರಿಟ್ಟರೋ?.

ಕಸಿಯಾದ ಮೇಲೆ ಹೋರಿಗಳು ಮಾಜಿಗಳಾಗಿ ಅವುಗಳ ಸಂತಾನದ ಬಗ್ಗೆ ಆಸಕ್ತಿಯನ್ನೇ ಕಳೆದುಕೊಂಡು ಎತ್ತಾಗಿ ರೈತನ ಹೇಳಿದಂತೆ ಕೇಳಿಕೊಂಡು ರೈತನ ಗಾಡಿ ಎತ್ತಾಗಿಯೋ ಅಥವಾ ಉಳುಮೆಯ ಎತ್ತಾಗಿಯೋ ಜೀವನವನ್ನು ಸವೆಸುತ್ತಿದ್ದವು.

ಪ್ರಾಣಿಪ್ರಿಯರ ಪ್ರಕಾರ ಇದೊಂದು ಪ್ರಾಣಿ ಹಿಂಸೆಯ ಪರಮಾವಧಿಯ ಪೈಶಾಚಿಕ ಕೃತ್ಯ. ಅವರ ಹೇಳುವ ಹಾಗೇ ಎತ್ತನ್ನು ಉಳುಮೆಗೆ, ಗಾಡಿ ಎಳೆಯಲು ಉಪಯೋಗಿಸುವುದೇ ಪ್ರಾಣಿ ಹಿಂಸೆ. ನಮ್ಮ ರೈತ ಬಾಂಧವರಿಗೆ ಇದೆಲ್ಲಾ ಅರ್ಥವಾಗುವುದು ಇನ್ನೊಂದು ಶತಮಾನವಾದರೂ ಸಾಧ್ಯವಿಲ್ಲ.

ಪಶುಗಳನ್ನು ತಲತಲಾಂತರದಿಂದ ಪ್ರೀತಿಯಿಂದ ಸಾಕುತ್ತಿರುವ ಉತ್ತರ ಕರ್ನಾಟಕದ ರೈತರ ಪ್ರಕಾರ ಪ್ರಾಣಿಹಿಂಸೆ, ಪ್ರಾಣಿಪ್ರೀತಿ ಬೆಂಗಳೂರಿನ ಶ್ರೀಮಂತರ ಮನೆಯ ಹೆಣ್ಮಕ್ಕಳು ಬೀದಿಯ ಕಂತ್ರಿ ನಾಯಿಗಳಿಗೆ ಬ್ರೆಡ್ಡು ಹಾಕುತ್ತಾ ಅದೇ ಪಶು ಪ್ರೀತಿ ಎಂದು ದೊಡ್ಡದಾಗಿ ಪೋಸು ಕೊಡುವ ಟೈಮ್ ಪಾಸ್ ಕೆಲಸ. ಅವರಿಗೆ ಪ್ರಾಣಿ ಪ್ರೀತಿಯ ಪಾಠ ಮಾಡ ಹೊರಟರೆ “ ಸಾಹೇಬ್ರೇ. ಸುಮ್ನಿರ್ರೀ. ಕುರಿಕೋಳಿ ಕಟದ್ ತಿನ್ನೋರು ಅದ್ಯಾಂಗ್ ಪ್ರಾಣಿ ಹಿಂಸೆ ಅಂತಾರ್ರೀ? ಅವು ಪ್ರಾಣಿ ಅಲ್ಲೇನ್ರಿ? ಜೀವ ಇಲ್ಲೇನ್ರಿ? ಎಂದು ಅವರು ಎತ್ತುಗಳನ್ನು ದುಡಿಸಿಕೊಳ್ಳುವದನ್ನು ವಿರೋಧಿಸುವವರ ಬಗ್ಗೆ ಅಭಿಪ್ರಾಯ ನೀಡುತ್ತಿದ್ದರು.

ನನ್ನ ಶಿಷ್ಯ ತಾಳಗುಪ್ಪದಲ್ಲಿರುವ ಸಕಲ ವಸ್ತುಗಳೂ ದೊರಕುವ ಹೈಟೆಕ್ ಅಂಗಡಿಯಾದ ಶೆಟ್ಟರ ಅಂಗಡಿಗೆ ಹೋಗಿ ಕಿರುಬೆರಳು ಗಾತ್ರದ ಉದ್ದನೆಯ ಕಾಟನ್ ದಾರವನ್ನು ತಂದು ಅದರ ತುದಿಯ ಹಲವು ಎಳೆಗಳನ್ನು ತೆಗೆದು ಕಲಾತ್ಮಕವಾಗಿ ಚೂಪಾಗಿ ಮಾಡಿ ಅದನ್ನು ಹುಡುಗಿಯರ ಜಡೆಯಂತೆ ನೇಯ್ದು, ಸೆಫ್ಟಿಕ್ ಆಗದಂತೆ ಇರಲು ಪೊವಿಡೋನ್ ಆಯೋಡಿನ್ ಎಂಬ ಸ್ಯಾನಿಟೈಸರ್ ತರದ ಕಂದು ಬಣ್ಣದ ದ್ರಾವಣದಲ್ಲಿ ಅದ್ದಿದರೆ ಅದು ಅರಿಷಿಣದಲ್ಲಿ ಮಿಂದ ಹೊಸ ಮಾಂಗಲ್ಯದಂತೆ ಮಿಂಚುತ್ತಿತ್ತು.

ಎಮ್ಮೆಗಳಿಗೆ ಎತ್ತುಗಳಿಗೆ ಹಾಕಿದಂತೇ ಮೂಗುದಾರ ಹಾಕುವುದೇನೂ ಅಷ್ಟೇನೂ ಸುಲಭವಲ್ಲ. ಮೂಗು ಮುಟ್ಟಲೂ ಸಹ ಎಮ್ಮೆಗಳಂತೂ ಬಿಡುವುದೇ ಇಲ್ಲ. ಅವುಗಳ ಕೋಡಿನ ಸುತ್ತ ಮಾರುದ್ಧ ಹಗ್ಗ ಹಾಕಿ ಹಣೆಯ ಮಧ್ಯದಲ್ಲಿ ಒಂದು ಗಂಟು ಹೊಡೆದು, ಅದರ ಮೂತಿಯ ಸುತ್ತ ಇನ್ನೊಂದು ಸುತ್ತಿನ ಸರಗುಣಿಕೆ ಹಾಕಿ ಗಟ್ಟಿಯಾದ ಕಂಬಕ್ಕೆ ಎಳೆದು ಹಿಡಿದರೆ ಮಾತ್ರ ಅವು ಬಗ್ಗುವುದು.

ಹಾವಿನಂತೆ ಬುಸ್ಸೆನ್ನುತ್ತಾ ಕೊಸರಾಡುವ ಅವುಗಳ ಮೂತಿಯನ್ನು ಕಟ್ಟಿದ ಪಕ್ಕದ ಕಂಬಕ್ಕೆ ಇಲ್ಲವೇ ಗೋಡೆಯೊಂದಕ್ಕೆ ಒತ್ತಿ ಹಿಡಿದು ಅದೇ ಸ್ಥಿತಿಯಲ್ಲಿಯೇ ಎಲ್ಲಾ ಕೆಲಸವನ್ನು ಪೂರೈಸಬೇಕಿತ್ತು. ಬಯಲು ಸೀಮೆಯಲ್ಲಿ ಇವನ್ನೆಲ್ಲಾ ಕೂಡಿಹಾಕಿ ಬಗ್ಗಿಸಿ ದಾರಿಗೆ ತರಲು ಟ್ರೆವಿಸ್ ಎಂಬ ಉಪಕರಣವಿರುವುದರಿಂದ ಮತ್ತು ಈ ಎಮ್ಮೆ, ಕೋಣ, ಕತ್ತೆ,ಹಂದಿ, ಎತ್ತುಗಳನ್ನೆಲ್ಲಾ ನಾಯಿಮರಿಯಂತೆ ಪಳಗಿಸಿ ಅನುಭವದ ಕೊಡಗಳಿಂತಿರುವ ಜವಾನ ಅಲ್ಲಲ್ಲ.. ಕಂಪೌಂಡರುಗಳು ಇರುವುದರಿಂದ ಈ ಕೆಲಸ ನಮಗೇನೂ ಕಷ್ಟ ತರುತ್ತಿರಲಿಲ್ಲ.

ಅಲ್ಲದೇ ಅವರೇ ನಿರ್ಧರಿಸಿದಂತೆ ಇಂತಹ ನಿಕೃಷ್ಠ ಕಾರ್ಯಗಳೆಲ್ಲಾ ತಜ್ಞ ಪಶುವೈದ್ಯರು ಮಾಡುವುದು ಅವರ ಕೆಲಸವೇ ಅಲ್ಲ ಎಂಬ ರೈತರ ಭಾವನೆ ಕೆಲ ಪಶುವೈದ್ಯರಲ್ಲಿ ಬಂದು ಬಹಳ ಕಾಲವೇ ಆಗಿ ಹೋಗಿತ್ತು. ಮೂಗಿಗೆ ಮೂಗುದಾರ ಹಾಕಿಸಿಕೊಂಡು, ಕಿವಿಗೊಂದು ಓಲೆ ಹಾಕಿಸಿಕೊಂಡು ಸಂತೆಯಲ್ಲಿ ಠಳಾಯಿಸುವ ಹೊಳೆಯುವ ಶರೀರದ ಸ್ಮಾರ್ಟಾದ ಎಮ್ಮೆಗಳನ್ನು ನೋಡುತ್ತಿದ್ದರೆ ನನಗೆ ನಮ್ಮ ಬಿವಿಎಸ್ಸಿ ವಿದ್ಯಾರ್ಥಿನಿಯೊಬ್ಬಳು ಅವಳ ಇರುವ ಎರಡು ಕಿವಿಗೆ ಹತ್ತಾರು ರಂಧ್ರಗಳನ್ನು ಮಾಡಿಸಿ ಅದಕ್ಕೆಲ್ಲಾ ತರಹೇವಾರಿ ಬಂಗಾರದ್ದೋ ಮತ್ತೆಂತದೋ ಜುಮುಕಿ ತರದ ನೇತಾಡುವ ಆಭರಣಗಳನ್ನು ಸಿಗಿಸಿಕೊಂಡು, ಮೂಗಿನ ಮಧ್ಯೆ ಅದೆಂತದೋ ನೇತಾಡುವ ರಿಂಗಿನಂತ ಆಭರಣ ಹಾಕಿರುವದನ್ನು ನೋಡಿದರೆ ಸಾನಿಯಾ ಮಿರ್ಜಾ ತರ ಮೂಗುತಿ ಸುಂದರಿಯಾಗಲು ಶತ ಪ್ರಯತ್ನ ಮಾಡುತ್ತಿರುವುದು ನೆನಪಾಗುತ್ತಿತ್ತು.

ಡಬ್ಬಣದಂತೆ ಚೂಪಾಗಿರುವ ಟ್ರೊಕಾರ್ ಎಂಬ ದಪ್ಪ ಸೂಜಿಯಂತಿರುವ ಉಪಕರಣಕ್ಕೆ ಮೂಗುದಾರದ ಚೂಪು ಮಾಡಿದ ತುದಿಯನ್ನು ಸಿಗಿಸಿ ಮೂಗಿನ ಹೊರಳೆಗಳ ಮಧ್ಯೆ ಇರುವ ಮೃದುವಾದ ಪಠಲವನ್ನು ಭೇಧಿಸಿ ತೂತು ಕೊರೆದು ಒಮ್ಮೆಯೇ ಬಲ ಬಿಟ್ಟು ಸರ್ರನೇ ದಾರ ಹಾಯಿಸಿ ಎರಡೂ ಕೈಗಳಿಂದ ಎಮ್ಮೆಯ ಎರಡೂ ಕೋಡುಗಳನ್ನು ಬಳಸಿ ತಾಳಿ ಕಟ್ಟುವಾಗ ಹೇಗೆ ಮೂರು ಗಂಟನ್ನು ಗಂಡಸರು ಹಾಕುತ್ತಾರೋ ಹಾಗೇ ಮೂರು ಗಂಟುಗಳನ್ನು ಭದ್ರವಾಗಿ ಹಾಕಿದರೆ ಮೂಗುದಾರ ಸರಿಯಾಗಿ ಬಿದ್ದ ಹಾಗೇ.

ಪುರೋಹಿತರುಗಳ “ಮಾಂಗಲ್ಯಂ ತಂತು ನಾನೇನ.. ಮಮ ಜೀವನ ಹೇತುನಾ.. ಎಂಬ ರಾಗವಾದ ಮಂತ್ರ ಘೋಷದ ಮಧ್ಯೆ ಮಾಂಗಲ್ಯ ಧಾರಣೆ ಸಮಯದಲ್ಲಿ ಹೆಣ್ಣು ಮಕ್ಕಳು ವಿನೀತರಾಗಿ ಸಹಸ್ರ ಜನರ ಮುಂದೆ ತಲೆ ಬಗ್ಗಿಸಿ ಗಂಟು ಹಾಕಿಸಿಕೊಂಡ ನಂತರ ಹೇಗೆ ಹುಲಿಯಾಗುತ್ತಾರೋ ಹಾಗೆ ನಮ್ಮಿಂದ ಮೂಗುದಾರ ಹಾಕಿಸಿಕೊಂಡ ಸ್ವಲ್ಪ ಹೊತ್ತಿಗೆ ಎಮ್ಮೆ ತಕ ಥೈ ಎಂದು ಡ್ಯಾನ್ಸ್ ಪ್ರಾರಂಭಿಸುತ್ತಿತ್ತು. ಆದರೆ ಮೂಗುದಾರವನ್ನು ಕೈ ಬೆರಳ ನಡುವೆ ಹಾಕಿ ಹಿಡಿದರೆ ಸಾಕು, ಮೂಗಿನ ಪಠಲದ ಮೆತ್ತನೇ ಭಾಗದ ಮೇಲೆ ಬೀಳುವ ಒತ್ತಡದ ನೋವಿನಿಂದದಲೋ ಏನೋ ಕುತ್ತಿಗೆಯ ಚರ್ಮ ಹಿಡಿದರೆ ಹರಾಮಿ ಹಲಾಲುಕೋರ ಹಾಲುಕಳ್ಳ ಕಳ್ಳ ಬೆಕ್ಕೂ ಸಹ ಮೆತ್ತಗಾಗುವಂತೆ ಎಮ್ಮೆಗಳೂ ಮೆತ್ತಗಾಗಿ ಬಿಡುತ್ತಿದ್ದವು.

ದನದ ಸಂತೆಗಳಲ್ಲೆಂತೂ ಕೆಲ ಮನೆಹಾಳ ದನದ ವ್ಯಾಪಾರಿಗಳು ಎತ್ತು, ಎಮ್ಮೆ, ಆಕಳುಗಳಿಗೆ ಬಣ್ಣ ಬಣ್ಣದ ಮೂಗುದಾರ ಹಾಕಿ ಅವುಗಳಿಗೊಂದಿಷ್ಟು ಬಣ್ಣಗಳ ಪ್ರೋಕ್ಷಣೆ ಮಾಡಿ ಗಿಡ್ಡ, ದಪ್ಪ, ಎತ್ತರ, ಡುಮ್ಮ, ಬಡಕಲು ಎಮ್ಮೆಗಳನ್ನು ಸುಂದರವಾಗಿ ಕಾಣುವಂತೆ ಮಾಡಿ ರೈತರನ್ನು ಬಕರಾ ಬಿದ್ದು ಖರೀದಿಸುವಂತೆ ಖೆಡ್ಡಾ ಕೆಡವುತ್ತಿದ್ದರು.

ಹೋರಿ ಎತ್ತುಗಳ ಕೊಂಬು ಕೆತ್ತಿ, ಇರುವ ಎರಡೇ ಬೆಳ್ಳಗಾದ ಕೂದಲುಗಳಿಗೆ ಬಣ್ಣ ಹಚ್ಚಿ ಯಂಗಾದೆವೆಂಬ ಬಿಂಕದಿಂದ ಬೀಗುವ ಪುರುಷರಂತೆ, ಅವುಗಳ ವಯಸ್ಸು ಮರೆಮಾಚುವ ಪ್ರಯತ್ನ ಮಾಡುತ್ತಿದ್ದರು. ಅದರಲ್ಲೂ ಎಮ್ಮೆಗಳ ಮೈಯ ರೋಮಗಳನ್ನೆಲ್ಲಾ ತರಿದು, ಕೊಂಬಿಗೆ ಹರಳೆಣ್ಣೆ ಸವರಿ, ಇಡೀ ಮೈಗೆ ಬೇವಿನ ಎಣ್ಣೆ ಹಚ್ಚಿ, ಕುತ್ತಿಗೆಗೆ ಆಗಾಗ ಟಣ್. ಟಣ್ ಎಂಬ ಚಂದದ ಶಬ್ದದಿಂದ ಮನಸೆಳೆಯುವ ಗಂಟೆ ಕಟ್ಟಿ ಆಕರ್ಷಣೆಯ ಮಾಡುತ್ತಿದ್ದರು.

ಇವೆಲ್ಲ ನೋಡಿದರೆ ಮದುವೆಯ ಸಮಯದಲ್ಲಿ ಮಿರ ಮಿರ ಮಿಂಚುವ ರೇಶ್ಮೆ ಸೀರೆ ಉಟ್ಟು, ಮೈಮೇಲೆಲ್ಲಾ ಬಂಗಾರದ ಪರ್ವತವನ್ನೇ ಹೇರಿಕೊಂಡಿರುವ, ಮದುವೆಗೆಂದೇ ಅಲಂಕಾರ ಮಾಡಲು ಬ್ಯೂಟಿಪಾರ್ಲರಿನಿಂದ ಕರೆಸಿದ ಬ್ಯುಟಿಶಿಯನ್ ಅಲಂಕಾರ ಮಾಡಿದ ಹಳ್ಳಿಯ ಮದುವಣಗಿತ್ತಿಯಂತೆ ಈ ಎಮ್ಮೆಗಳು ಕಾಣುತ್ತಿದ್ದವು.

ಸದಾ ಹಾವು ಕಪ್ಪೆಗಳನ್ನು ಅಟ್ಟಿಸಿಕೊಂಡು ಹೋಗುವ, ಸೊಪ್ಪು ಸೊದೆಗಳು ಕೊಳೆತು ನಾರುವ ಅರಲು ಕೆಸರು ಹೊಂಡದಲ್ಲಿ ಹೊರಳಾಡಿ ತಾಲಿ ಹೊಡೆದು ದುರ್ವಾಸನೆಯ ಸಗಣಿಯನ್ನು ಮೈಗೆಲ್ಲಾ ಹಚ್ಚಿಕೊಂಡು “ದಿಮ್ ರಂಗ” ಎಂದು ಸ್ವಚ್ಚಂದವಾಗಿ ಓಡಾಡಿಕೊಂಡಿರುವ ಈ ಎಮ್ಮೆಗಳಿಗೆ ಈ ರೀತಿ ಅಲಂಕಾರ ಮಾಡಿದರೆ ಒಂತರಾ ಸುಂದರವಾಗಿ ಕಾಣುತ್ತಿದ್ದವು.

ಎಂದೆಂದೂ ಚಂದದ ತುಟಿಗೆ ರಂಗನ್ನೇ ಹಚ್ಚದ ಹಳ್ಳಿ ಯುವತಿಯ ತುಟಿಗೆಲ್ಲಾ ಕಡುಗೆಂಪು ಬಣ್ಣದ ಲಿಪ್ ಸ್ಟಿಕ್ ಬಳಿದು, ಫ್ರೆಶ್ಶಾಗಿ ಆಗಷ್ಟೇ ಇಲಿ ಹೆಗ್ಗಣ ತಿಂದು ರಕ್ತ ಬಾಯಿಗೆ ಅಂಟಿಸಿಕೊಂಡ ಮಾರ್ಜಾಲಗಳಂತೆ ಮಾಡುವ ಪಟ್ಟಣದ ಬ್ಯುಟಿಶಿಯನ್ನುಗಳ ಸಾಲಿಗೆ ಈ ವ್ಯಾಪಾರಿಗಳು ಸೇರುತ್ತಿದ್ದರು.

ಈ ಎಮ್ಮೆಗಳನ್ನು ಒಂದೆರಡು ದಿನ ಹಾಲು ಕರೆಯದೇ ಕೆಚ್ಚಲೆಲ್ಲಾ ತುಂಬಿ ಕಾಮದೇನುವಿನಂತೆ ಕಾಣುವ ಚಂದಕ್ಕೆ ಮರುಳಾಗಿ ಒಂದಕ್ಕೆರಡು ರೇಟು ನೀಡಿ ಖರೀದಿಸಿ ಮನೆಗೆ ಹೋಗಿ ಹಾಲು ಹಿಂಡಿದರೆ ಮೊದಲನೇ ದಿನ ಭರಪೂರ ಹಾಲು ನೀಡುವ ಎಮ್ಮೆ ಮಾರನೇ ದಿನದಿಂದ ರಣಚಂಡಿಯಾಗಿ ಪಟಾರ್ ಎಂದು ಮುಖಕ್ಕೆ ಹಿಂಗಾಲಿನಿಂದ ಮುಲಾಜಿಲ್ಲದೇ ಭಾರಿಸುವ ಮಹಿಷಾಸುರನ ಧೂತನಾಗಿ ಪರಿವರ್ತಿತವಾಗುತ್ತಿತ್ತು.

ನಮ್ಮ ಯಜಮಾನರೂ ಹೀಗೇ ಮೋಸ ಹೋಗಿದ್ದು. ಭಾರಿ ಮೈಕಟ್ಟು ಹೊಂದಿ ಅಗಲ ಚೂಪಾದ ಕೋಡಿನ ಎತ್ತರದ ಈ ಎಮ್ಮೆ ರಾಗಿಣಿ, ಹರಿಪ್ರಿಯಾರಂತೆ ಎತ್ತರವಾಗಿದ್ದರಿಂದ ದೇವತೆಯ ಪಾತ್ರ ವಹಿಸಿದ ರಮ್ಯಾ ರಚಿತಾರಂತೆ ಚಂದ ಕಂಡಿದ್ದರಿಂದಲೋ ಏನೋ ದಲಾಲಿಯು ಮಿರಮಿರ ಮಿಂಚುವ ಅಲಂಕಾರಕ್ಕೆ ಬೆರಗು ಮಾತಿಗೆ ಮರುಳಾಗಿ ಎಮ್ಮೆ ತಂದ ಮೇಲೇಯೇ ಗೊತ್ತಾಗಿದ್ದು ಅದರ ರಮಾದೇವಿಯ ಗಯ್ಯಾಳಿ ಬುದ್ಧಿ. ನೋಡಲು ಭೀಕರವಾಗಿ ಕಂಡರೂ ಮನೆಯ ಯಜಮಾನಿಯನ್ನು ಮಾತ್ರ ಆ ಎಮ್ಮೆ ನಂಬುತ್ತಿದ್ದರಿಂದ ಆಯಮ್ಮನೇ ಅದರ ಸಕಲ ಉಸ್ತುವಾರಿಯನ್ನು ವಹಿಸಿದ್ದರು.

ಆದರೆ ಅವರು ಕಾರ್ಯನಿಮಿತ್ತ ಮಗಳ ಮನೆಗೋ, ತವರು ಮನೆಗೋ ಹೋದಾಗಲೋ ರಾಯರಿಗೆ ಭೂತಯ್ಯನ ಮಗ ಅಯ್ಯುವಿನ ದಿನೇಶ್ ಪಾತ್ರ ವಹಿಸಿ ಎಮ್ಮೆಯಿಂದ ಹಾಲೆಂಬ ಅಮೃತವನ್ನು ಪಡೆಯಲೇ ಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತಿತ್ತು. ಅವರೂ ಸಿನಿಮಾದಲ್ಲಿ ದಿನೇಶ್ ಸೀರೆ ಉಟ್ಟುಕೊಂಡು ಹೋಗಿ ಒದೆ ತಿನ್ನುವಂತೆ ಒದೆ ತಿಂದಾದ ಮೇಲೆ ಈ ಸಾಹಸ ಕೈಬಿಟ್ಟಿದ್ದರು. ಇನ್ನು ಹಿಂಡಿ ಇಟ್ಟು ಅದು ಹಿಂಡಿ ತಿನ್ನುವಲ್ಲಿ ಮಗ್ನನಾದರೆ ಈ ಕಡೆ ಕಳ್ಳನಂತೆ ಯಾಮಾರಿಸಿ ಹಾಲು ಕರೆಯುವ ಟೆಕ್ನಿಕ್ಕು ಎಲ್ಲಾ ಸಲ ಕೆಲಸ ಮಾಡುತ್ತಿರಲಿಲ್ಲ.

ಈ ಎಮ್ಮೆಗಳಿಗೆ ಅವುಗಳ ಕರುಗಳ ಮೇಲೆ ಅಪಾರ ಮಮತೆ. ಮನೆಯಲ್ಲೇ ಅವನ ತಮ್ಮ ತಂಗಿ ಇದ್ದರೂ ಅವರು “ಬೋಂಡಾ ಮಾಡಿ ಕೊಡಮ್ಮಾ” ಎಂದು ಗೋಗೆರೆದರೂ ಒಲೆ ಮೇಲೆ ಬಾಂಡ್ಲಿ ಇಡದ ಅಮ್ಮಂದಿರು, ದೂರದ ಅಮೇರಿಕಾದಲ್ಲಿ ಕುಳಿತು ಆಗಾಗ ಕರೆ ಮಾಡುವ ಟೆಕ್ಕಿ ಮಗ ಅಥವಾ ಮಗಳು ಮನೆ ಬಂದಾಗ ಅವರಿಗೆ ತರ ತರದ ತಿಂಡಿ ಮಾಡಿ ಹಾಕಿ “ತಿನ್ನು ಮಗಾ” ಎಂದು ಮಮಕಾರ ತೋರಿಸುವ ನಮ್ಮೆಲ್ಲಾ ಮಲೆನಾಡಿನ ಹಲವು ತಾಯಂದಿರಿಗೆ “ವಿಶೇಷ” ಮಮಕಾರ ಇರುವಂತೆ ಈ ಎಮ್ಮೆಯೂ ಸಹ ತನ್ನ ಕರುವಿಗೆ ಮಮಕಾರ ತೋರಿಸುತ್ತಿತ್ತು.

ಆ ಕರು ಜಂತು ನಾಶಕ ಹಾಕದಿರುವುದರಿಂದಲೋ ಅಥವಾ ಇ ಕೊಲೈ ಬಿಳಿ ಬೇಧಿಯಿಂದಲೋ ಬಳಲಿ ಹಳ್ಳಿ ಔಷಧಿ ನಾಟದೇ ಶಿವನ ಪಾದ ಸೇರಿದ ಮೇಲೆಯೇ ಎಮ್ಮೆಯ ನಿಜ ರೂಪದ ದರ್ಶನವಾಗಿದ್ದು. ಎಮ್ಮೆ ಕುಲದ ಸಕಲ ಗುಣಾವಗುಣಗಳೂ ಈ ಎಮ್ಮೆಯ ಮೈಸೇರಿದ್ದವು. ಈ ಎಮ್ಮೆಗಳಿಗೆ ಕರು ಯಾವಾಗಲೂ ಪಕ್ಕದಲ್ಲೇ ಇರಬೇಕು. ಹೊಸಬರು ಯಾರಾದರೂ ಬಂದು ಮುದ್ದಾದ ಎಮ್ಮೆ ಕರುವಿನ ತಲೆ ನೇವರಿಸಿ ಪ್ರೀತಿ ತೋರಿಸಲು ಹೋದಲ್ಲಿ ನಿಂತಲ್ಲೇ ರಣಚಂಡಿ ಅವತಾರ ತಾಳಿ ಬುಸ್ಸೆನ್ನುತ್ತಾ ಹಾಯಲು ಬರುತ್ತಿತ್ತು.

ಕರು ಸತ್ತ ಸುಮಾರು ದಿನಗಳ ವರೆಗೆ ಹತ್ತಿರವೂ ಸೇರಿಸದ ಬೃಹತ್ ಕೋಡಿನ ಎಮ್ಮೆ ಕ್ರಮೇಣ ಸತ್ತು ಹೋದ ಕರುವಿನ ನೆನಪು ಮಾಸಿದಂತೆ ಹಿಂಡಿ ತಿನ್ನುತ್ತಾ ಹಾಲು ಕೊಡಲು ಪ್ರಾರಂಭಿಸಿತಂತೆ. ಸ್ವಲ್ಪ ದಿನಗಳಲ್ಲಿ ಒಂದೆರಡು ಸಲ ಒದ್ದ ಮೇಲೆ ಬುದ್ಧಿ ಬಂದು ಅದರ ಮುಂದೆ ಕೋಲು ಹಿಡಿದು ನಿಂತು ಬೆದರಿಸುತ್ತಿದ್ದರೆ ಹಾಲಿನ ತೊರೆ ಇಳಿಸಿ ಹಾಲು ನೀಡುತ್ತಿತ್ತಂತೆ. ಇನ್ನೂ ಕೊಸರಾಟ ಪ್ರಾರಂಭಿಸಿದ ಮೇಲೇಯೇ ಈ ಮೂಗುದಾರ ಹಾಕುವ ಐಡಿಯಾ ಹೇಳಿದ್ದು.

ಹೌದು. ಇಷ್ಟೆಲ್ಲಾ ಹರಾಮಿ ಗುಣದ ಎಮ್ಮೆಯನ್ನು ಹುಟ್ಟಿದಷ್ಟು ಹಣಕ್ಕೆ ಮಾರಿಬಿಡಬಹುದಲ್ಲ?! ಇದು ನಿಮ್ಮ ಪ್ರಶ್ನೆ. ಇದರ ಕಲ್ಯಾಣ ಗುಣಗಳು ಬಾಯಿಂದ ಬಾಯಿಗೆ ಹಬ್ಬಿ ಆಗಲೇ ಕುಖ್ಯಾತಿ ಪಡೆದಿರುವುದರಿಂದ ಸ್ಥಳೀಯವಾಗಿ ಯಾವುದೇ ಗಿರಾಕಿಗಳು ಇಲ್ಲದಿರುವುದರಿಂದ ಈ ಎಮ್ಮೆಯನ್ನು ಸಾಠಿ ಮಾಡಿ ಅದೇ ಎಮ್ಮೆಯನ್ನು ಇವರಿಗೆ ಮಾರಿದ ದಲಾಲಿಗೆ ಮಾರುವುದೂ ಕಷ್ಠವಾಗಿತ್ತು. ಇನ್ನು ಉಳಿದಿದ್ದು ಒಂದೇ ದಾರಿ.

ಕಟುಕರ ಕತ್ತಿಗೆ ನೀಡುವುದು. ಅದು ಅದರ ದಪ್ಪನೇ ಸಿಕ್ಕಾಪಟ್ಟೆ ಎಸ್ ಎನ್ ಎಫ್ ಮತ್ತು ಫ್ಯಾಟ್ ಜಾಸ್ತಿ ಇರುವ ಹಾಲನ್ನು ಹಾಕಿ ಕಾಫಿ ಕಾಯಿಸಿ ಕುಡಿದ ಋಣ ಹೊತ್ತಿರುವ ಅವರ ಅಮ್ಮನಿಗೆ ಸುತರಾಂ ಇಷ್ಟವಿರಲಿಲ್ಲ. ಆದರೂ ಅವರಿಲ್ಲದಾಗ ಅದರ ವ್ಯಾಪಾರವಾಗಿ,ಶತಾಯು ಗತಾಯು ಪ್ರಯತ್ನಿಸಿದರೂ ಸಹ, ಅದನ್ನು ಲಾರಿ ಹತ್ತಿಸಲಾಗಿದೇ ಹೋದದ್ದರಿಂದ ಎಮ್ಮೆ ಖಾಯಂ ಇವರ ಮನೆಯಲ್ಲೇ ಲಟ್ಟ ಠೊಣಪನ ತರ ಠಿಕಾಣಿ ಹೂಡಿಯಾಗಿತ್ತು.

ಈ ಎಮ್ಮೆಗೆ ಮೂಗುದಾರ ಹಾಕುವ ಸಕಲ ಸಿದ್ಧತೆಗಳೊಂದಿಗೆ ಕಾರ್ಗಿಲ್ಲಿನತ್ತ ನುಗ್ಗುವ ಸೈನಿಕನಂತೆ ನಾನು ಅವರ ಮನೆಯ ಹತ್ತಿರ ಬೈಕು ನಿಲ್ಲಿಸುತ್ತಿದ್ದಂತೆ ನನ್ನ ಬೈಕಿನ ಶಬ್ಧದ ಶಬ್ಧ ಕೇಳಿಯೇ ಎಮ್ಮೆಗೆ ತಳ ಮಳ ಪ್ರಾರಂಭವಾಗಿತ್ತು ಅನಿಸುತ್ತದೆ. ಬುಸು .. ಬುಸು. ದರ.. ಬರ. ಶಬ್ಧ ಮಾಡುತ್ತಾ ಸೊಪ್ಪು ಹಾಕಿದ್ದ ಕೊಟ್ಟಿಗೆಯಲ್ಲಿ ಕಟ್ಟಿದ ಹಗ್ಗವನ್ನು ತುಂಡರಿಸುವಂತೆ ಎಳೆದಾಡುತ್ತಿತ್ತು. ಆಲದ ಮರದಂತೇ ವಿಶಾಲವಾಗಿ ದಶದಿಕ್ಕುಗಳಿಗೂ ಹರಡಿಕೊಂಡಂತಿದ್ದ ಅದರ ಕೋಡನ್ನು ಹತ್ತಿರವಿದ್ದ ಗೋಡೆಗೆ ಸದಾ ಉಜ್ಜುತ್ತಿದ್ದರಿಂದಲೋ ಏನೋ ಮಹಾಕಾಳಿಯ ಶೂಲದಷ್ಟು ಹರಿತವಾಗಿದ್ದವು.

ಕಣ್ಣುಗಳು ಗಾಬರಿಯಿಂದ ಹಿರಣ್ಯಕಶ್ಯಪುವಿನ ಕಣ್ಣಿನ ಹಾಗೇ ಗರ ಗರ ತಿರುಗುತ್ತಾ ಭಯ ಬೀಳಿಸುವ ಹಾಗಿದ್ದವು. ಬಲವಾದ ಪ್ಲಾಸ್ಟಿಕ್ ದಾಬಿನಲ್ಲಿ ಕಟ್ಟಿದ್ದರಿಂದ ಬಿಚ್ಚಿಕೊಂಡು ಹೋಗುವ ಸಾಧ್ಯತೆ ಕಡಿಮೆ ಇತ್ತು. ನಾನೂ ಸಹ ಧೈರ್ಯದಿಂದ ದಪ್ಪನೇ ಕಣ್ಣಿಯ ಹಗ್ಗ ತೆಗೆದುಕೊಂಡು ಅದರ ಎರಡೂ ಕೊಂಬಿನ ಸುತ್ತಲೂ ಹಾಕಲು ತೀವ್ರವಾಗಿ ಪ್ರಯತ್ನಿಸಿದೆ. ಆದರೆ ಅದರ ಅಗಲವಾದ ಕೊಂಬುಗಳು ನನ್ನ ಈ ಪ್ರಯತ್ನಕ್ಕೆ ತಣ್ಣೀರೆರಚುತ್ತಾ ಇದ್ದವು. ಈ ಎಮ್ಮೆಗಳೇ ಹೀಗೆ. ಹೆದರಿಕೆಯಿಂದಲೇ ಸಕಲ ಆಟ ಆಡಿ ಕೊನೆಗೆ ಸುಸ್ಥಾಗಿ ಬಾಯಿ ಅಗಲವಾಗಿ ತೆಗೆದುಕೊಂದು ನಾಲಿಗೆ ಹೊರಹಾಕಿ ನಿಂತು ಬಿಡುತ್ತವೆ.

ಎಷ್ಟೊತ್ತು ಆಟವಾಡೀತು ? ಎಂದು ನಾನೂ ಸಹ ಅದರ ಕೊಂಬಿನ ಮಧ್ಯೆ ಹಗ್ಗ ಹಾಕುವ ಪ್ರಯತ್ನ ಪ್ರಯತ್ನ ಬಿಡಲೇ ಇಲ್ಲ. ಜೊತೆ ಇದ್ದ ಆ ಮನೆಯ ಆಳೂ ಸಹ ಅದರ ಮುಂದಿನ ಎರಡೂ ಕಾಲುಗಳನ್ನು ಕಟ್ಟಿ ಹಾಕಿ ಆಟ ನಡೆಯದಂತೆ ಮಾಡಲು ಪ್ರಯತ್ನಿಸಿದ. ಆದರೆ ಹತ್ತಿರ ಹೋಗಲು ಬಿಟ್ಟೀತೇ ಎಮ್ಮೆ ? ನಮ್ಮೆಲ್ಲಾ ಪ್ರಯತ್ನಗಳೂ ಮುಗಿದು ನಮಗೂ ಸುಸ್ತಾಯಿತು. ಆದರೆ ಸೋಲೊಪ್ಪುವ ಪ್ರಶ್ನೆಯೇ ಇರಲಿಲ್ಲ. ಇಷ್ಟೆಲ್ಲಾ ಮಾಡಿದರೂ ಮನುಷ್ಯರನ್ನೇ ಕಾಣದೇ ಕಾಡು ಪ್ರಾಣಿಯಂತಿರುವ ಈ ಎಮ್ಮೆಗೆ ಮೂಗುದಾರ ಹಾಕಿ ಬಗ್ಗಿಸಲೇ ಬೇಕು ಎಂದು ನಾನು ಮತ್ತು ಅವರ ಮನೆಯ ಆಳು ಆಗಲೇ ತೀರ್ಮಾನಿಸಿ ಆಗಿತ್ತು.

ಈ ಸಲ ಎಮ್ಮೆಯ ಕಾಲ ಬುಡಕ್ಕೆ ಒಂದಿಷ್ಟು ಹುಲ್ಲು ಹಾಕಿಕೊಂಡು ಸಾಕಷ್ಟು ಚಾಕಚಕ್ಯತೆಯಿಂದ ಅದರ ಕೋಡುಗಳೆರಡಕ್ಕೆ ಹಗ್ಗ ಹಾಕಿಯೇ ಬಿಟ್ಟೆ. ಸರಕ್ಕನೇ ಅದರ ಮೂತಿಯ ಸುತ್ತಲೂ ಬಿಗಿದು ಸರಗುಣಿಕೆ ಸರ್ರನೇ ಎಳೆದು ಪಕ್ಕದ ಕಂಬಕ್ಕೆ ಕಟ್ಟಿಯೇ ಬಿಟ್ಟೆ. ಇದೇ ಸಂದರ್ಭವೆಂದು ಆಳು ಸಣ್ಣ ಹಗ್ಗದಿಂದ ಅದರ ಮುಂದಿನ ಕಾಲೆರಡನ್ನೂ ಹತ್ತಿರ ಬರುವಂತೆ ಬಿಗಿದು ಕಟ್ಟಿದ.

ಒಟ್ಟಿನಲ್ಲಿ ಎಮ್ಮೆ ನಮ್ಮ ತಿಲಕಾಷ್ಠವಲ್ಲದ ಮಹಿಷ ಬಂಧನದಲ್ಲಿ ಸೆರೆಯಾಯ್ತು. ಅದರ ಹಾರಾಟ ಜಿಗಿದಾಟದ ಈ ಸಮಯದಲ್ಲಿ ನಮ್ಮ ಮೈಗೆಲ್ಲಾ ಅದು ಚಿರಿ.. ಚಿರಿ ಎಂದು ಪದೇ ಪದೇ ಹಾರಿಸುವ ಮೂತ್ರದಿಂದ ಮತ್ತು ಹೆದರಿಕೆಯಿಂದ ಅದು ಹಾಕಿದ ತೆಳ್ಳಗಿನ ಸಗಣಿ, ಸಿರ್ಸಿ ಯೆಲ್ಲಾಪುರ ಬದಿಯ ಹವ್ಯಕ ಅತ್ಗೇರುಗಳು ಬೆಳಿಗ್ಗೆ ಮಾಡುವ ತೆಳ್ಳವ್ವು ದೋಸೆ ಹಿಟ್ಟಿನಷ್ಟು ನೀರಾಗಿದ್ದರಿಂದ ಇವೆರಡರಿಂದ ನಮ್ಮ ಮೈಯೆಲ್ಲಾ ಸಿಂಚನವಾಗಿ ನಾವಿಬ್ಬರು ದುರ್ವಾಸನೆಯ ಕೂಪವಾದೆವು. ನಾವಂದು ಕೊಂಡ ಮೂಗುದಾರ ಹಾಕುವ ಅಮೃತ ಘಳಿಗೆ ಸನಿಹವಾಗಿದ್ದರೆಂದಲೋ ಏನೋ ನನ್ನ ಉತ್ಸಾಹ ಇಮ್ಮಡಿಯಾಯಿತು. ಇದೇ ಮುಂದೆ ದೊಡ್ಡ ಅನಾಹುತಕ್ಕೆ ಎಡೆ ಮಾಡಿಕೊಡುತ್ತದೆಯೆಂಬುದು ಅನಾಹುತವಾದ ಮೇಲೆಯೇ ಗೊತ್ತಾಗಿದ್ದು.

ನಾನು ನನ್ನ ಸಕಲ ಪರಿಕರಗಳನ್ನು ಅತ್ತು ಅದಕ್ಕೆಂದೇ ನನ್ನ ಶಿಷ್ಯ ವಿಶೇಷವಾಗಿ ಸಿದ್ಧ ಪಡಿಸಿದ ಮೂಗುದಾರವನ್ನು ಅರ್ಜುನನು ರಣರಂಗದಲ್ಲಿ ಕರ್ಣನ ಮೇಲೆ ಸರ್ಪಾಸ್ತ್ರವನ್ನು ಬಿಡುವ ಮೊದಲು ಮಂತ್ರಿಸುವಂತೆ ತದೇಕಚಿತ್ತದಿಂದ ತುದಿಯನ್ನು ಹೊಸೆದು ಡಬ್ಬಣದಲ್ಲಿ ಪೋಣಿಸಿ ಎಮ್ಮೆಯ ಮೂತಿಯನ್ನು ಅದು ಅಕ್ಕಚ್ಚು ಕಲಗಚ್ಚು ಕುಡಿಯುವ ದೋಣಿಯಂತ ಕಾಲುವೆಯ ಅಂಚಿಗೊತ್ತಿ ಹಿಡಿದು ಅದರ ಮೂಗಿನ ಹೊರಳೆಗಳ ನಡುವೆ ಇರುವ ಮೆತ್ತನೇ ಸ್ಥಳವನ್ನು ಬೆರಳಿನಲ್ಲಿ ಗುರುತಿಸಿಕೊಂಡೆ.

ಮೂಗಿಗೆ ಕೈಹಾಕಿದ ಕೂಡಲೇ ಎಮ್ಮೆಗೆ ಗುಳು ಗುಳು ಅನಿಸಿತೋ ಏನೋ, ಸಕಲ ಶಕ್ತಿಯನ್ನೂ ಹಾಕಿ “ಡ್ರೀ….ಸ್” ಎಂದು ಬಲವಾಗಿ ಸೀನಿತು. ನನ್ನ ಮುಖ ಎಮ್ಮೆಯ ಮೂತಿಗೆ ಬಹಳ ಹತ್ತಿರವಿದ್ದುದರಿಂದ ಮೂಗಿನಲ್ಲಿರುವ ಲೋಳೆ ಮಿಶ್ರಿತವಾದ ಸ್ರಾವಗಳೆಲ್ಲಾ ನನ್ನ ಮುಖ, ಮೂಗು, ಬಾಯಿ ಎಲ್ಲಾ ಕಡೆ ಸ್ಪ್ರೇ ಆಯಿತು.

ಛಲ ಬಿಡದ ಮಲ್ಲನಾದ ನಾನು ಮತ್ತು ನನ್ನ ನಿರ್ಧಾರಕ್ಕೆ ದ್ವಿಗುಣ ಸಂಕಲ್ಪ ಹೊಂದಿದ ಆಳು, ಸಕಲ ಶಕ್ತಿಯನ್ನೂ ಹಾಕಿ ಮೂಗಿನ ಹೊರಳೆಯ ಮಧ್ಯದ ಜಾಗದಲ್ಲಿ ಡಬ್ಬಣದಂತ ಟ್ರೊಕಾರ್ ಒತ್ತಿ ತೂತು ಮಾಡಿ, ಮೂಗುದಾರದ ತುದಿಯನ್ನು ಹಿಡಿದು ಎಳೆದ ಹೊಡೆತಕ್ಕೆ ದಾರ ಪಾರಾಗಿ ಈ ಕಡೆ ಬಂದಿತು. ನಾನು ದಾರದ ಎರಡೂ ತುದಿಗಳನ್ನು ಎಮ್ಮೆಗೆ ಮಾಂಗಲ್ಯ ಕಟ್ಟುವಂತೆ ಕೊಂಬಿನ ಮಧ್ಯೆ ತಂದು ಎರಡು ಗಂಟು ಹಾಕಿ ಕೊನೆಯ ಮತ್ತು ಮೂರನೆಯ ಗಂಟು ಇನ್ನೇನು ಹಾಕಬೇಕು.., ಅಷ್ಟರಲ್ಲಿಯೇ ಆಗಿ ಹೋಯಿತು ಅನಾಹುತ !.

ಇಷ್ಟು ಹೊತ್ತೂ ಎಮ್ಮೆಯ ಮೂತಿಗೆ ಹಾಕಿದ ಹಗ್ಗವನ್ನು ಎಳೆದು ಹಿಡಿದ ಯಜಮಾನರು ಕೈಸೋತೋ ಅಥವಾ ನಮ್ಮ ಮೂಗುದಾರ ಹಾಕುವ ಕಾಯಕ ಮುಗಿಯಿತೆಂದೋ ಹಗ್ಗವನ್ನು ಸಡಿಲ ಬಿಟ್ಟರು ಅಂತ ಕಾಣಿಸುತ್ತದೆ. ಮೊದಲೇ ನೋವಿನಿಂದ ನಲುಗುತ್ತಿದ್ದ ಮತ್ತು ಮಹಾ ರೋಷದಿಂದಿರುವ ಅದರ ಸಮಯಕ್ಕಗಿ ಕಾಯುತ್ತಿದ್ದ ಎಮ್ಮೆ ನಭದೆಡೆ ಚೂಪಾದ ಕೋಡುಗಳನ್ನು ಹೊಂದಿರುವ ಬಂಡೆಯಂತೆ ಘಟ್ಟಿಯಾದ ತಲೆಯನ್ನು ಒಮ್ಮೆಯೇ ಸ್ಪ್ರಿಂಗಿನಂತೆ ಚಿಮ್ಮಿ ಬಿಟ್ಟಿತು.

ಇಂತಹ ತುರ್ತು ಪರಿಸ್ಥಿತಿಯನ್ನು ನಿರೀಕ್ಷಿಸದ ನಾನು ಮೂರನೇ ಗಂಟು ಹಾಕುವಲ್ಲಿ ಮಗ್ನನಾಗಿದ್ದೆ. ನನ್ನ ಕಾಲುಗಳ ಸಂದಿಯಲ್ಲಿ ಸಿಮೆಂಟಿನ ಗೋಡೆಗೆ ಪದೇ ಪದೇ ತಿಕ್ಕಿ ಚೂಪಾದ ಕೊಂಬುಗಳು “ಸಳ್” ಎಂದು ಹೊಕ್ಕಿರಬೇಕು. ನನ್ನ ಪ್ಯಾಂಟು ಅದರ ಮೇಲೆ ಹಾಕಿದ ಮಳೆಕೋಟು ಎರಡು ಒಂದೇ ಸಲಕ್ಕೆ ಸೀಳಿ ಹೋದವು. ಎಮ್ಮೆಯು ಚಿಮ್ಮಿದ ರಾಕೆಟ್ ವೇಗಕ್ಕೆ ಸಿಲುಕಿ ಎಮ್ಮೆಯಿಂದ ಮೂರು ಮಾರು ದೂರದಲ್ಲಿ ಸೊಪ್ಪಿನ ರಾಶಿಯಲ್ಲಿ ರಭಸದಿಂದ ಹಾರಿ ಬಿದ್ದೆ. ಸೊಪ್ಪಿನ ಕೊಟ್ಟಿಗೆಯಾಗಿದ್ದರಿಂದಲೋ ಏನೋ ಸೊಂಟ ಮುರಿದಿಲ್ಲ ಅನಿಸಿದ್ದು ಎದ್ದು ಕುಳಿತು ಕೊಳ್ಳಲು ಸಾಧ್ಯಾವಾಗಿದ್ದರಿಂದ.

ಗಾಬರಿಯಾದ ಯಜಮಾನರು ಮತ್ತು ಆಳು ನನ್ನನ್ನು ಬಂದೆತ್ತಿದರು. ಏನಾದರೂ ಆಯ್ತಾ ಡಾಕ್ಟ್ರೇ.. ಎಂದು ಅವರು ಕಕ್ಕುಲತೆಯಿಂದ ಕಾಳಜಿಯಿಂದ ಕೇಳುವ ಶಬ್ಧ ನನಗೆ ಎಲ್ಲೋ ಗುಹೆಯಿಂದ ಕ್ಷೀಣವಾಗಿ ಹೊರಬರುವ ಸನ್ಯಾಸಿಯು ಹೇಳುವ ’ಓಂ” ಮಂತ್ರದಂತೆ ಕೇಳಿಸಹತ್ತಿತು. ಎಲ್ಲೆಲ್ಲೋ ಅಸಾಧ್ಯ ನೋವು ಇದ್ದರೂ ಇದನ್ನು ವ್ಯಕ್ತಪಡಿಸಿದರೆ ನಾನು ಸೋತಂತೆ ಎಂದುಕೊಂಡು “ಹೆ… ಹೆ.. ಏನೂ ಆಗಿಲ್ಲ. ಸ್ವಲ್ಪ ಮೂಗ ಪೆಟ್ಟು ಅಷ್ಟೇ.. ಎಂದು ದೇಶಾವರಿ ನಗೆ ಬೀರುತ್ತಾ ತಡವರಿಸುತ್ತಾ ಎದ್ದೆ.

ಸಂಗೀತದವರು ಕಚೇರಿ ಮುಗಿದ ನಂತರ ಅವರ ತಬಲಾ ಹಾರ್ಮೋನಿಯಂ ಜೋಡಿಸಿದಂತೆ ನನ್ನ ಸಕಲ ಸರಂಜಾಮುಗಳನ್ನು ವಸ್ತುಗಳನ್ನೂ ಆಳು ಜೋಡಿಸಿ ನನ್ನ ಬ್ಯಾಗಿಗೆ ಹಾಕಿದ. ಎಮ್ಮೆಗೆ ನೋವು ಕಡಿಮೆ ಮಾಡುವ ಚುಚ್ಚುಮದ್ದು ಮತ್ತು ನಂಜುನಿವಾರಕ ನೀಡಬೇಕಿತ್ತು. ಆದರ ರಂಪಾಟದಿಂದ ಬೇಸರಗೊಂಡ ಯಜಮಾನರು “ನೋವಿನಿಂದ ನರಳಲಿ ಬಿಡ್ರೀ.. ದರೀದ್ರ ಎಮ್ಮೆ” ಎಂದು ಶಪಿಸಿದರು. ಬೈಕು ಸ್ಟಾರ್ಟ್ ಮಾಡಿದ ನಾನು ಯಜಮಾನರು “ಡಾಕ್ಟ್ರೇ ಆಸ್ರಿಗೆ ಏನ್ ಮಾಡ್ಸ್ಲಿ.. ಟೀನಾ ಕಾಫೀನಾ” ಎಂದರೂ ಕೇಳಿಸಿಕೊಳ್ಳದೇ ಬೈಕಿನ ಕ್ಲಚ್ ಬಿಟ್ಟು ಅಕ್ಸಲರೇಟರ್ ಒತ್ತಿದೆ.

ಸಣ್ಣ ಜಿಟಿ ಜಿಟಿ ಮಳೆ ಆಗಲೇ ಪ್ರಾರಂಭವಾಗಿತ್ತು. ಸುಮಾರು ಒಂದೆರಡು ಕಿಲೋ ಮೀಟರು ದೂರ ಬಂದಿರಬೇಕು. ಬಲಗಡೆಯ ಮೊಣಕಾಲಿನ ಹತ್ತಿರ ಒಂತರಾ ಬಿಸಿ..ಬಿಸಿ.. ಆದ ಹಾಗೇ ಅನಿಸಿತು. ಮಳೆಯಂಗಿಯ ತೂತಿನಿಂದ ನೀರು ಹೊಕ್ಕಿರಬೇಕು. ಶರೀರದ ತಾಪಕ್ಕೆ ಬಿಸಿಯಾಗಿರಬಹುದು ಎಂದುಕೊಂಡು ಇನ್ನೊಂದೆರಡು ಕಿಲೋಮೀಟರು ಬೈಕು ಓಡಿಸಿದೆ. ತಲೆ ಎಲ್ಲಾ ಸುತ್ತಿದ ಹಾಗೇ ಕಣ್ಣೆಲ್ಲಾ ಮಂಜಾದ ಹಾಗೇ ಆಯಿತು. ಮೈ ಕೈನ ಕಣಗಳೆಲ್ಲಾ ನೋವಿನಿಂದ ಕಥೆ ಹೇಳುತ್ತಿದ್ದವು.

ಬೈಕಿನ ಫುಟ್ ರೆಸ್ಟಿನ ಮೇಲಿದ್ದ ಕಾಲುಗಳನ್ನು ಗಮನಿಸಿಕೊಂಡೆ. ಏಕೋ ಮಳೆಯ ನೀರಿನ ಜೊತೆ ಕೆಂಪು ಮಿಶ್ರಣ ಹೊರಬರುತ್ತಿದ್ದ ಹಾಗನಿಸಿತು. ಸ್ವಲ್ಪ ದೂರ ಹೋಗಿ ರಸ್ತೆ ಬದಿಯಲ್ಲಿ ಬೈಕಿನ ಸ್ಟ್ಯಾಂಡ್ ಹಾಕಿ ನಿಲ್ಲಿಸಿದೆ. ಮಳೆಯ ಪ್ಯಾಂಟು ಮತ್ತು ಕಾಟನ್ ಪ್ಯಾಂಟುಗಳೆರಡು ರಕ್ತದಿಂದ ತೋಯ್ದು ಹೋಗಿದ್ದವು. ಮಲೆನಾಡಿನಲ್ಲಿ ಮಳೆಗಾಲದಲ್ಲಿ ರಕ್ತ ಹೀರುವ ಜಿಗಣೆ ಉಂಬಳ ಹೋಗಬಾರದ ಕೇಂದ್ರ ಸರ್ಕಾರದ ಬಳಿ ಹೋಗಿ ಕಚ್ಚಿರುವುದರಿಂದ ಹೀಗಾಗಿರಬಹುದು ಅಂದುಕೊಂಡೆ.

ಆದರೆ ಈ ಪ್ರಮಾಣದಲ್ಲಿ ರಕ್ತ ನಿಲ್ಲದೇ ಹೋಗುವುದು ಜಿಗಣೆ ಕಡಿತದಿಂದಲ್ಲ. ಇದು ಎಮ್ಮೆಯ ಚೂಪಾದ ಕೋಡಿನ ಪ್ರತಾಪ ಎಂದು ತಕ್ಷಣಕ್ಕೆ ಹೊಳೆಯಿತು. ಬವಳಿ ಬಂದ ಹಾಗಾದರೂ ನೇರವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದೆ. ವೈದ್ಯರ ಹತ್ತಿರ ಹೋಗಿ ಘಟನೆ ವಿವರಿಸಿ ನನ್ನ ಸಕಲ ಅಂಗಾಂಗಗಳನ್ನು ತೀವ್ರವಾದ ತಪಾಸಣೆಗೆ ಒಳಪಡಿಸುವಂತೆ ಬೇಡಿಕೆ ಇಟ್ಟೆ.

ನನ್ನ ಸ್ನೇಹಿತರಾದ ಅವರು ಡ್ರೆಸಿಂಗ್ ಮಾಡುತ್ತಾ “ಏನ್ ಡಾಕ್ಟ್ರೇ.. ಡಕಾಯಿತರು ಚೂರಿ ಹಾಕಿದ್ರಾ? ತಾಳಗುಪ್ಪದ ರೈಲಿಗೆ ಗುದ್ದಿದ್ರಾ? ಅಥ್ವಾ ಲಿಂಗಿನಮಕ್ಕಿಗೆ ಟರ್ಬೈನುಗಳನ್ನು ಸಾಗಿಸುವ ಯಮಗಾತ್ರದ ಲಾರಿಗೆ ಗುದ್ದಿದ್ರಾ? ಈ ಪರಿ ಗಾಯವಾಗಿದೆ?“ ಎಂದು ಕಕ್ಕುಲತೆ ಮೆರೆದರು. ನನ್ನ ತೊಡೆಯ ಮೇಲ್ಬಾಗದಲ್ಲಿ ಸುಮಾರು ಮೂರು ಇಂಚು ಚೂಪಾದ ಚಾಕುವಿನಿಂದ ತಿವಿದಂತೆ ಗಾಯವಾಗಿ ಅದರಿಂದ ಸಾಕಷ್ಟು ರಕ್ತ ಹರಿದಿತ್ತು.

ಅದಕ್ಕೆ ಡ್ರೆಸಿಂಗ್ ಮಾಡಿ ಆಳವಾದ ಗಾಯಕ್ಕೆ ಹೊಲಿಗೆ ಹಾಕಿ, ಪೌಡರು ಇಂತಹದ್ದೆಲ್ಲಾ ಮೆತ್ತಿ, ಟಿಟಿಯಂತ ಎಂತದೋ ಇಂಜೆಕ್ಷನ್ ಚುಚ್ಚಿ ಹದಿನೈದು ದಿನ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಹೇಳಿ ಕಳಿಸಿದರು. ಎಲ್ಲಿಯ ವಿಶ್ರಾಂತಿ?! ಮನೆಗೆ ಹೋಗಿ ಮಲಗಿ ಒಂದು ವಾರದವರೆಗೆ ಸ್ವಲ್ಪ ಸುಧಾರಿಸಿಕೊಂಡು ಗಾಯ ವಾಸಿಯಾಗಿದೆ ಎಂದು ಖಚಿತ ಮಾಡಿಕೊಂಡು ನನ್ನ ಚಟುವಟಿಕೆಗಳನ್ನು ಎಂದಿನಂತೆ ಮುಂದುವರೆಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

Published

on

~ಗೋವರ್ಧನ ನವಿಲೇಹಾಳು

ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.

ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು  ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ  ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ;  ಎಚ್ಚರಿಕೆಯೂ ಹೌದು.

ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಎಲೆಕ್ಟ್ರಾಲ್ ಬಾಂಡ್‌ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್‌ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.

ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.

ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್‌ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.

ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್‌ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್‌ಗಳಾಗಿ ಪರಿವರ್ತಿಸುತ್ತದೆ.

ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.

ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ

ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.

ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.

ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.

ಸುದ್ದಿದಿನ | ವಾಟ್ಸಾಪ್ | 9980346243

Continue Reading

Trending