ಬಹಿರಂಗ
CAA, NRC, NPR ಭಾರತದ ಎದೆ ಸೀಳುವ ತ್ರಿಶೂಲ : ಮೋದಿ-ಶಾ ಕಾರ್ಖಾನೆಯ ಹತ್ತು ಮಹಾ ಸುಳ್ಳುಗಳು
ಮೋದಿ ಸರಕಾರದ ಭಾರತದ ಎದೆ ಸೀಳುವ ಕ್ರಮಗಳಾದ CAA, NRC, NPR ಕುರಿತುಸಿಪಿಐ(ಎಂ) ಸದ್ಯದಲ್ಲೇ ಪ್ರಕಟಿಸಲಿರುವ ಪುಸ್ತಿಕೆಯ ಸಾರಾಂಶಇಲ್ಲಿದೆ. ಇವುಗಳ ವಿರುದ್ಧತೀವ್ರ ಪ್ರತಿಭಟನೆಯ ನಂತರ ಈ ಕುರಿತು ಮೋದಿ ಸರಕಾರ ಹರಿಯಬಿಟ್ಟಿರುವ ಹತ್ತು ಮಹಾ ಸುಳ್ಳುಗಳನ್ನು ಬಯಲು ಮಾಡಿ ಸತ್ಯ ಸಂಗತಿಯನ್ನುಈ ಪುಸ್ತಿಕೆಯಲ್ಲಿ ವಿವರಿಸಲಾಗಿದೆ. ಇಲ್ಲಿ ಹತ್ತು ಮಹಾ ಸುಳ್ಳುಗಳು ಮತ್ತುಚುಟುಕಾದ ಉತ್ತರವಿದೆ.
ಮೋದಿ ಸರಕಾರವು ಭಾರತದ ಎದೆಯನ್ನೇ ಸೀಳಲು ಇರಿದಿರುವ ತ್ರಿಶೂಲದ ಮೂರು ಅಲಗುಗಳೆಂದರೆ : ಪೌರತ್ವತಿದ್ದುಪಡಿ ಕಾಯಿದೆ(CAA), ನಾಗರಿಕರ ರಾಷ್ಟ್ರೀಯ ರಿಜಿಸ್ಟರ್(NRC) ಮತ್ತುರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್(NRC). ರಾಷ್ಟ್ರೀಯ ಜನ ಸಂಖ್ಯಾ ರಿಜಿಸ್ಟರ್ (ಎನ್.ಪಿ.ಆರ್) ನ್ನು ಸಮಕಾಲೀನಗೊಳಿಸಲು ತಕ್ಷಣತಯಾರಿ ನಡೆಸಲುಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಸಿಪಿಐ(ಎಂ) ಬಲವಾಗಿ ವಿರೋಧಿಸಿದ ಪೌರತ್ವ ತಿದ್ದುಪಡಿಕಾಯಿದೆ (ಸಿಎಎ) ಮಂಜೂರಾದ ನಂತರ, ಪೌರತ್ವ ಹಕ್ಕುಗಳಿಗೆ ಕೋಮುವಾದಿ ಬಣ್ಣಕೊಡುವ ಚೌಕಟ್ಟು ಸಾಧಿಸುವತ್ತ ಇದು ಎರಡನೇ ಅಪಾಯಕಾರಿ ಹೆಜ್ಜೆ.
ಆಸ್ಸಾಂಒಪ್ಪಂದದಚಾರಿತ್ರಿಕ ಸನ್ನಿವೇಶದಿಂದಾಗಿ ಸಿಎಎ ಮತ್ತುಅದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳಿಂದ ಈಶಾನ್ಯ ಭಾರತದ ಪ್ರದೇಶಗಳನ್ನು ಹೊರಗಿಡಬೇಕೆಂಬುದು ಸಿಪಿಐ(ಎಂ) ನಿಲುವು. ಪೌರತ್ವತಿದ್ದುಪಡಿ ಮಸೂದೆ (ಸಿಎಬಿ) ಗೆ ಇದನ್ನುತಿದ್ದುಪಡಿಯಾಗಿ ಸಿಪಿಐ(ಎಂ) ಸೂಚಿಸಿತ್ತು. ಆದರೆಅದನ್ನು ಸರಕಾರ ತಿರಸ್ಕರಿಸಿದೆ. ಆಸ್ಸಾಂಒಪ್ಪಂದದದಲ್ಲಿ ಪೌರತ್ವಕ್ಕೆ 1971ರ ಗಡುವನ್ನು ನಿಗದಿ ಪಡಿಸಲಾಗಿದೆ. ಅದರ ನಂತರ ಬಂದವರ ನಡುವೆ ಮತಧರ್ಮದಆಧಾರದ ಮೇಲೆ ಯಾವುದೇತಾರತಮ್ಯ ಮಾಡಲಾಗಿಲ್ಲಎಂಬುದು ಗಮನಿಸಬೇಕಾದಅರ್ಥಪೂರ್ಣ ಅಂಶ. ಸಿಎಎ ಆಸ್ಸಾಂಒಪ್ಪಂದದ ನೇರ ಹಲ್ಲೆ ನಡೆಸುತ್ತದೆ ಮತ್ತು “ವಿದೇಶೀಯರ” ಪ್ರಶ್ನೆಗೆ ಕೋಮುವಾದಿ ಆಯಾಮವನ್ನು ಸೇರಿಸುತ್ತದೆ.
ಈಗ ದೇಶದಾದ್ಯಂತ ಭಾರೀ ಪ್ರತಿಭಟನೆಗಳು ವ್ಯಕ್ತವಾಗಿರುವುದರಿಂದ ಮೊದಿ-ಶಾ ಜೋಡಿತಮ್ಮ ಸುಳ್ಳಿನ ಸಾಮೂಹಿಕ ಉತ್ಪಾದನೆಯ ಫ್ಯಾಕ್ಟರಿಗಳನ್ನು ಕೆಲಸಕ್ಕೆ ಹಚ್ಚಿದ್ದಾರೆ. ಹಿಟ್ಲರನಜರ್ಮನಿಯಲ್ಲಿ ನಾಜೀ ಪ್ರಚಾರದ ನೀತಿಯೊಂದನ್ನುಇಲ್ಲಿ ನೆನಪಿಸಿಕೊಳ್ಳಬಹುದು : “ಒಂದು ಸುಳ್ಳನ್ನು ಸಾವಿರ ಬಾರಿ ಹೇಳುತ್ತಾ ಹೋದರೆಅದು ಸತ್ಯವಾಗುತ್ತದೆ”. ಅದೇ ಮೋದಿ ಸರಕಾರದ ನೀತಿ ಸಹ ಆಗಿದೆ. ಆದ್ದರಿಂದ ಈ ಮೋದಿ ಸರಕಾರದ ಪ್ರತಿಯೊಂದು ಸುಳ್ಳನ್ನು ಬಯಲುಪಡಿಸಬೇಕಾಗಿದೆ.ಅವರ ಸುಳ್ಳಿನ ಪಟ್ಟಿ ದಿನೇ ಹೆಚ್ಚುತ್ತಲೇಇದೆ.
ಇಲ್ಲಿಯವರೆಗಿನ ಹತ್ತು ಮಹಾ ಸುಳ್ಳುಗಳು ಹೀಗಿವೆ
ಮಹಾಸುಳ್ಳು 1 : ಸಿಎಎ ಕಾಯಿದೆಯಲ್ಲಿ ತಾರತಮ್ಯವಿಲ್ಲ. ಕಿರುಕುಳಕ್ಕೊಳಗಾದವರ ನೆರವಿಗೆ ಧಾವಿಸುವುದು ಭಾರತದ ಸಂಸ್ಕøತಿ. ಯಾವ ಭಾರತೀಯ ನಾಗರಿಕನಿಗೂ ಇದರಿಂದ ತೊಂದರೆಯಾಗುವುದಿಲ್ಲ.
ಸತ್ಯ ಸಂಗತಿ : ಭಾರತೀಯ ಪೌರತ್ವಕಾಯಿದೆ 1955ರ ಪ್ರಕಾರ ಭಾರತೀಯ ನಾಗರಿಕನಾಗುವಐದು ವಿಧಾನಗಳಲ್ಲಿ (ಹುಟ್ಟಿನಿಂದ, ತಂದೆ-ತಾಯಿ ನಾಗರಿಕತ್ವದಿಂದ, ನೆಲೆಸುವಿಕೆಯಿಂದ, ರಿಜಿಸ್ಟರ್ ಮಾಡುವ ಮೂಲಕ, ಪ್ರದೇಶದ ಸೇರಿಸುವಿಕೆಯಿಂದ) ಮತಧರ್ಮದ ಅಥವಾ ಇನ್ಯಾವುದೇ ಆಧಾರದ ಮೇಲೆ ಯಾವುದೇತಾರತಮ್ಯವಿರಲಿಲ್ಲ. ಇದು ಪೌರತ್ವಕ್ಕೆ ಮತಧರ್ಮ ಸೇರಿದಂತೆಯಾವುದೇ ನೆಲೆಯಲ್ಲಿ ತಾರತಮ್ಯ ಮಾಡದಿರುವ ನಮ್ಮ ಸಂವಿಧಾನದ ಆಶಯಕ್ಕೆ ಅನುಗುಣವಾಗಿದೆ. ಸಿಎಎ ಮೂರು ವಿಧದ ತಾರತಮ್ಯವನ್ನು ಸೇರಿಸಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದೆ. ನೆರೆಯ ದೇಶಗಳಲ್ಲಿ ಮೂರು ದೇಶಗಳ – ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ– ವಲಸೆಗಾರರಿಗೆ ಬೇರೆ ನಿಯಮಗಳನ್ನು ರೂಪಿಸಿದೆ.
ಈ ಮೂರು ದೇಶಗಳ ವಲಸೆಗಾರರಲ್ಲೂ ಮುಸ್ಲಿಮರನ್ನು ಹೊರಗಿಡಲಾಗಿದೆ. ಈ ಮೂರು ದೇಶಗಳ ಮುಸ್ಲಿಮೇತರ ವಲಸೆಗಾರರಿಗೆ ಪೌರತ್ವಕ್ಕೆ ಅರ್ಹತೆಯ ಅವಧಿಯನ್ನು ಇತರರಿಗೆ ಇರುವ 11 ವರ್ಷಗಳಿಂದ 5 ವರ್ಷಕ್ಕೆ ಕಡಿತಗೊಳಿಸಲಾಗಿದೆ. ಕಿರುಕುಳಕ್ಕೊಳಗಾದವರ ಮತ್ತು ನಿರಾಶ್ರಿತರ ನೆರವಿಗೆಧಾವಿಸುವುದು ಸರಿಯಾದ್ದೇ. ಆದರೆಅಲ್ಲೂ ಮತಧರ್ಮ, ದೇಶ, ಭಾಷೆಗಳ ಆಧಾರದಲ್ಲಿ ತಾರತಮ್ಯ ತೋರಲಾಗಿದೆ.
ಶ್ರೀಲಂಕಾದಲ್ಲಿ ಧಾರ್ಮಿಕ, ಭಾಷೆಎರಡೂ ನೆಲೆಗಳಲ್ಲಿ ತಾರತಮ್ಯ ಕಿರುಕುಳ ತಾಳಲಾರದೆ ಭಾರತದಲ್ಲಿ ದಶಕಗಳಿಂದ ನೆಲೆಸಿರುವ ಹತ್ತಾರು ಲಕ್ಷ ತಮಿಳರನ್ನು ಹೊರಗಿಡಲಾಗಿದೆ. ಪಾಕಿಸ್ತಾನದಲ್ಲಿಧಾರ್ಮಿಕ ತಾರತಮ್ಯಕ್ಕೊಳಗಾಗಿರುವ ಶಿಯಾ, ಅಹಮದೀಯ ಮುಂತಾದ ಅಲ್ಪಸಂಖ್ಯಾತರನ್ನೂ, ಮ್ಯಾನ್ಮಾರಿನರೋಹಿಂಗ್ಯ ಮುಸ್ಲಿಮರ ನೆರವಿಗೆಧಾವಿಸದಿರುವುದು ಭಾರತೀಯ ಸಂಸೃತಿಯ ಘನತೆ ಮತ್ತು ಸಂವಿಧಾನದ ಆಶಯ ಎರಡಕ್ಕೂತಕ್ಕುದಲ್ಲ.
ಮಹಾಸುಳ್ಳು 2 : ವಲಸಿಗ ಸಮುದಾಯಗಳನ್ನು ಹಿಂದೆಬೆಂಬಲಿಸಿದ ಕಾಂಗ್ರೆಸ್ ಮತ್ತು ಸಿಪಿಐ(ಎಂ) (20ನೇ ಮಹಾಧಿವೇಶನದ ನಿರ್ಣಯ ಮತ್ತು ಆಗಿನ ಪ್ರಧಾನ ಕಾರ್ಯದರ್ಶಿಯ ಪತ್ರದಲ್ಲಿ ದಾಖಲಿಸಿದಂತೆ) ಪಕ್ಷಗಳು ಈಗ ಮತಬ್ಯಾಂಕ್ ರಾಜಕೀಯದಿಂದಾಗಿ ಈ ತಿದ್ದುಪಡಿಯನ್ನು ವಿರೋಧಿಸುತ್ತಿವೆ.
ಸತ್ಯ ಸಂಗತಿ : ಕಿರುಕುಳಕ್ಕೊಳಗಾದವರಿಗೆ ನಿರಾಶ್ರಿತರಾದವರಿಗೆ ಆಶ್ರಯಕೊಡಬೇಕೆಂಬುದು ಯಾವತ್ತೂ ಕಮ್ಯುನಿಸ್ಟ್, ಎಡ ಚಳುವಳಿಗಳ, ಸಿಪಿಐ(ಎಂ) ಪಕ್ಷದ ನಿಲುವಾಗಿತ್ತು.1947ರ ದೇಶ ವಿಭಜನೆ ಮತ್ತು 1971ರ ಪಾಕಿಸ್ತಾನಿ ಮಿಲಿಟರಿ ಸರಕಾರದ ದೌರ್ಜನ್ಯಗಳ ಬಲಿಪಶುಗಳಾದ ಈಗಿನ ಬಾಂಗಾದೇಶದ ನಿರಾಶ್ರಿತರಿಗೆ ನೆಲೆ ಒದಗಿಸಲು ಪೌರತ್ವ ಕೊಡಲು ಸಿಪಿಐ(ಎಂ)ಹೋರಾಡಿತ್ತು. ಮಾತ್ರವಲ್ಲ ನಿರಾಶ್ರಿತರಾಗಿ ಬಂದು ನೆಲೆಸಿದ ನಾಮಶೂದ್ರರಿಗೆದಲಿತ ಸ್ಥಾನಮಾನವನ್ನೂ ಪಶ್ಚಿಮ ಬಂಗಾಳದಲ್ಲಿ ಒದಗಿಸಿತ್ತು. ಅವರು ನೆಲೆಸಿದ ಇತರ ರಾಜ್ಯಗಳಲ್ಲೂ ಈ ಸ್ಥಾನಮಾನ ಸಿಗುವಂತೆ ಹೋರಾಟ ನಡೆಸಿತ್ತು.
ಆದರೆಯಾವತ್ತೂ ಮತಧರ್ಮದ ಅಥವಾ ಇನ್ಯಾವುದೇ ಆಧಾರದ ಮೇಲೆ ತಾರತಮ್ಯದ ನೀತಿಯನ್ನು ಬೆಂಬಲಿಸಿರಲಿಲ್ಲ. ಸಿಎಬಿ ಗೆ ಸಿಪಿಐ(ಎಂ) ಮಂಡಿಸಿದ ತಿದ್ದುಪಡಿಯಲ್ಲಿ ನಿರಾಶ್ರಿತರಿಗೆ ವಲಸಿಗರಿಗೆ ಆಶ್ರಯಕೊಡುವಲ್ಲಿ ತಾರತಮ್ಯವನ್ನು ತೆಗೆದು ಹಾಕುವ ತಿದ್ದುಪಡಿಗಳನ್ನು ಮಂಡಿಸಿತ್ತು. ಈಗ ಮೊಸಳೆ ಕಣ್ಣೀರು ಹಾಕುವ ಆರೆಸ್ಸೆಸ್ ಆಗ ಬಂಗಾಳದ ನಿರಾಶ್ತಿತರ ಬಗ್ಗೆ ಮೌನವಾಗಿತ್ತು.ಬಿಜೆಪಿ ಆಡಳಿತದ ಯು.ಪಿ, ಉತ್ತರಾಖಂಡ, ಮಧ್ಯಪ್ರದೇಶದ ಬಿಜೆಪಿ ಸರಕಾರಗಳು ನಾಮಶೂದ್ರರಿಗೆ ದಲಿತ ಸ್ಥಾನಮಾನಕೊಡುವುದಕ್ಕೆ ನಿರಾಕರಿಸಿದ್ದವು.
ಮಹಾಸುಳ್ಳು 3 :ಸಿಎಎ (ಪೌರತ್ವತಿದ್ದುಪಡಿಕಾಯಿದೆ) ಗೂ ಎನ್.ಆರ್.ಸಿ.(ನಾಗರಿಕರರಾಷ್ಟ್ರೀಯರಿಜಿಸ್ಟರ್)ಗೂ ಯಾವುದೇ ಸಂಬಂಧವಿಲ್ಲ. ಅವುಗಳು ಪ್ರತ್ಯೇಕವಾದುವುಗಳು. ವಿರೋಧ ಪಕ್ಷಗಳು ಇವೆರಡರ ನಡುವೆತಪ್ಪಾಗಿ ಸಂಬಂಧಕಲ್ಪಿಸುತ್ತಿವೆ.
ಸತ್ಯ ಸಂಗತಿ :ಸಿಎಎ ಗೂ ಎನ್.ಆರ್.ಸಿ. ಗೂ ಸಂಬಂಧ ಕಲ್ಪಿಸಿರುವುದು ಗೃಹಮಂತ್ರಿಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷಜೆ ಪಿ ನಡ್ಡಾಅವರು, ವಿರೋಧ ಪಕ್ಷಗಳಲ್ಲ. ಈ ವರ್ಷವೇಏಪ್ರಿಲ್ ನಲ್ಲಿ ಬಂಗಾಳದಲ್ಲಿ ಮತ್ತುಡಿಸೆಂಬರ್ 9 ರಂದು ಪಾರ್ಲಿಮೆಂಟಿನಲ್ಲಿ ಮಾಡಿದ ಹೇಳಿಕೆಗಳಲ್ಲಿ ಅಮಿತ್ ಶಾ ಮತ್ತುಡಿಸೆಂಬರ್ 19 ರಂದುಜೆ ಪಿ ನಡ್ಡಾ ಹೇಳಿಕೆಗಳಿಂದ ಬಿಜೆಪಿಯ ಈ ಹುನ್ನಾರ ಸ್ಪಷ್ಟ. ಸಿಎಎ ಮುಸ್ಲಿಮೇತರ ‘ನಿರಾಶ್ರಿತ’ರಿಗೆ ನಾಗರಿಕತ್ವಕೊಡುತ್ತದೆ. ಎನ್. ಆರ್.ಸಿ. “ನುಸುಳುಕೋರರ”ನ್ನು ಗುರುತಿಸುತ್ತದೆ. ಸಿಎಎ ನಲ್ಲಿ ಹೊರಗಿಟ್ಟ ಮುಸ್ಲಿಮರನ್ನು “ನುಸುಳುಕೋರರ”ನ್ನಾಗಿ ಮಾಡಿ ಹೊರಗಟ್ಟುವುದು ಬಿಜೆಪಿಯ ಹುನ್ನಾರ
ಮಹಾಸುಳ್ಳು 4 : ಡಿಸೆಂಬರ್ 22ರ ದೆಹಲಿ ರ್ಯಾಲಿಯಲ್ಲಿ “ತಮ್ಮ ಸರಕಾರ 2014ರಲ್ಲಿ ನನ್ನ ಸರಕಾರಕ್ಕೆಅಧಿಕಾರಕ್ಕೆ ಬಂದಾಗಿನಿಂದ ಎನ್.ಆರ್.ಸಿ ಬಗ್ಗೆ ಎಲ್ಲೂಯಾವುದೇಚರ್ಚೆ ನಡೆದಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಸತ್ಯ ಸಂಗತಿ : ಜೂನ್20, 2019 ರ ಸದನಗಳ ಜಂಟಿಅಧಿವೇಶನಕ್ಕೆಅಧ್ಯಕ್ಷರು ಮಾಡಿದ ಭಾಷಣದಲ್ಲಿ, ನವೆಂಬರ್ 21, 2019ರಂದು ಅಮಿತ್ ಶಾ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿಎನ್.ಆರ್.ಸಿ ಬಗ್ಗೆ ಸ್ಪಷ್ಟಉಲ್ಲೇಖವಿದೆ. ಮಾತ್ರವಲ್ಲ, ಎನ್.ಆರ್.ಸಿಜಾರಿಯ ಬಗ್ಗೆ ಕೇಂದ್ರ ಸರಕಾರದ ಮಂತ್ರಿಗಳ 9 ಅಧಿಕೃತ ಹೇಳಿಕೆಗಳಿವೆ. ಇವೆಲ್ಲ ಹೇಳಿಕೆಗಳನ್ನು ಕೇಂದ್ರ ಸಂಪುಟದಲ್ಲಿ ಯಾವುದೇ ಚರ್ಚೆಯಿಲ್ಲದೆ ಮಾಡಲಾಗಿದೆಯೇ?
ಮಹಾಸುಳ್ಳು 5 :ಎನ್.ಆರ್.ಸಿ. ಪ್ರಕ್ರಿಯೆ ಕಾನೂನು ಪ್ರಕಾರಈವರೆಗೆ ಸ್ಥಾಪಿತವಾಗಿಲ್ಲ ಮತ್ತು ವಿರೋಧ ಪಕ್ಷಗಳು ಸುಳ್ಳುಗಳನ್ನು ಹರಡುತ್ತಿವೆ ಎಂದು ಪ್ರಧಾನಿ ಮೋದಿ, ಅವರ ಸಂಪುಟ ಸಚಿವರುಗಳು, ಪಕ್ಷದವಕ್ತಾರರು ಹಾಗೂ ಬಾಲಡುಕ ಮಾಧ್ಯಮ ಮಿತ್ರರು ವಿರೋಧ ಪಕ್ಷಗಳನ್ನು ದೂರುತ್ತಿದ್ದಾರೆ. “ದೇಶದಾದ್ಯಂತ ಎನ್.ಆರ್.ಸಿ ಪ್ರಕ್ರಿಯೆಯನ್ನು ಈ ವರೆಗೆ ಅಧಿಸೂಚಿತಗೊಳಿಸಿಲ್ಲ ಮತ್ತುಯಾರೂ ಈ ಕುರಿತು ಹೆದರಬೇಕಾಗಿಲ್ಲ.” ಎಂದು ಗೃಹ ಖಾತೆಯರಾಜ್ಯ ಮಂತ್ರಿ ಜಿ. ಕಿಶನ್ರೆಡ್ಡಿ ಹೇಳಿಕೆ ನೀಡಿದ್ದಾರೆ.
ಸತ್ಯ ಸಂಗತಿ : ಎನ್.ಆರ್.ಸಿ. ಪ್ರಕ್ರಿಯೆಯನ್ನು ಕಾನೂನು ಪ್ರಕಾರ ಸ್ಥಾಪಿಸಲು ವಾಜಪೇಯಿ ಸರಕಾರದ ಅವಧಿಯಲ್ಲಿ ಗೃಹ ಮಂತ್ರಿ ಎಲ್.ಕೆ.ಅಡ್ವಾಣಿ ಅವರಿಂದ ಮಂಡಿತವಾಗಿ 2003ರಲ್ಲಿ ಅಂಗೀಕೃತವಾಯಿತು. ಇದಕ್ಕಾಗಿ ಪ್ರತ್ಯೇಕ ಕಾನೂನು ರಚನೆಯಾಗಿಲ್ಲ. ಬದಲಿಗೆ, ಭಾರತ ಪೌರತ್ವಕಾಯಿದೆ 1955ಗೆ ತಿದ್ದುಪಡಿಮಾಡಲಾಗಿದೆ. ಎನ್.ಆರ್.ಸಿ.ಜಾರಿಗೆ ನಿಯಮಾವಳಿಯನ್ನು ಸಹ ರಚಿಸಿ 2003ರಲ್ಲೇ ಅಂಗೀಕರಿಸಲಾಗಿದೆ.
ಮಹಾಸುಳ್ಳು 6 : ಎನ್.ಆರ್.ಸಿ. ಪ್ರಕ್ರಿಯೆ ಇ್ಲನ್ನೂ ಆರಂಭವಾಗಿಲ್ಲ ಮತ್ತು ಆ ಕುರಿತು ಯಾವುದೇ ಅಧಿಸೂಚನೆಯೂ ಇಲ್ಲ.
ಎನ್.ಆರ್.ಸಿ.ಜಾರಿಗೆ ನಿಯಮಾವಳಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ರಾಷ್ಟ್ರೀಯ ಜನಸಂಖ್ಯಾರಿಜಿಸ್ಟರ್ (ಎನ್.ಪಿಆರ್.) ಪ್ರಕ್ರಿಯೆಯೊಂದಿಗೆ ಆರಂಭವಾಗುತ್ತದೆಎಂದು ಸ್ಪಷ್ಟವಾಗಿ ಹೇಳಲಾಗಿದೆ. ಎನ್.ಪಿ.ಆರ್. ಪ್ರಕ್ರಿಯೆ ಮುಗಿದ ನಂತರ ಅದರ ಆಧಾರದ ಮೇಲೆ ಎನ್.ಆರ್.ಸಿ.ರಚಿಸಲಾಗುವುದು. ಎನ್.ಪಿ.ಆರ್. ಮತ್ತುಎನ್.ಆರ್.ಸಿ ನಡುವಿನ ಸಂಬಂಧದ ಬಗ್ಗೆ ಕೇಂದ್ರ ಗೃಹ ರಾಜ್ಯ ಮಂತ್ರಿಜುಲೈ 23, 2014ರಲ್ಲಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಎನ್.ಪಿ.ಆರ್. ಪ್ರಕ್ರಿಯೆ ಆರಂಭಿಸಲುಜುಲೈ 31, 2019ರಂದು ಅಧಿಸೂಚನೆ ಹೊರಡಿಸಲಾಗಿದೆ.
ಮಹಾಸುಳ್ಳು 7 : ಎನ್.ಆರ್.ಸಿ. (ಪೌರತ್ವರಿಜಿಸ್ಟರ್)ಗೂ ಎನ್.ಪಿ.ಆರ್. (ಜನಸಂಖ್ಯಾರಿಜಿಸ್ಟರ್)ಗೂ ಏನೂ ಸಂಬಂಧವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಎನ್.ಪಿ.ಆರ್ ಹೆಚ್ಚಿನ ಪ್ರಶ್ನೆಗಳೊಂದಿಗೆ ಸಮಕಾಲೀನಗೊಳಿಸುವ ಕೇಂದ್ರ ಸಂಪುಟದ ನಿರ್ಧಾರದ ಸಂದರ್ಭದಲ್ಲಿ ಈ ಹೇಳಿಕೆ ಕೊಟ್ಟಿದ್ದಾರೆ. ಎನ್.ಪಿ.ಆರ್. ಜನಗಣತಿಯ ಉದ್ದೇಶಕ್ಕೆ ಮಾತ್ರವಿದೆ. ಎನ್.ಆರ್.ಸಿ. ಅಥವಾ ಪೌರತ್ವಕ್ಕೂ ಅದಕ್ಕೂಯಾವುದೇ ಸಂಬಂಧವಿಲ್ಲ. ಆದ್ದರಿಂದ ಭಾರತೀಯ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂದು ವಿರೋಧ ಪಕ್ಷಗಳು ಯಾಕೆ ಹೇಳುತ್ತಿವೆ ಎಂದುಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ ಜಾವಡೇಕರ್ ಹೇಳಿದ್ದಾರೆ.
ಸತ್ಯ ಸಂಗತಿ :ಗೃಹ ಸಚಿವಾಲಯದ2018-19 ವಾರ್ಷಿಕ ವರದಿಯಅಧ್ಯಾಯ 15 ಪಾರಾ 15.40 ಎನ್.ಪಿ.ಆರ್ ಮತ್ತು ಎನ್.ಆರ್.ಸಿ. (ಅಂದರೆ ಪೌರತ್ವದ) ಗಳ ಸಂಬಂಧದ ಬಗೆಗ ಸ್ಪಷ್ಟವಿದೆ. ಎನ್.ಪಿ.ಆರ್ ಮತ್ತು ಜನಗಣತಿಯನ್ನು ಜನಗಣತಿ ಅಧಿಕಾರಿಗಳು ನಡೆಸುತ್ತಾರೆಎಂದು ಬಿಟ್ಟರೆ ಅವೆರಡಕ್ಕೆ ಸಂಬಂಧವಿಲ್ಲ. ಎನ್.ಪಿ.ಆರ್. ಪ್ರಶ್ನಾವಳಿಯಲ್ಲಿ ಹಿಂದಿನ 15 ಪ್ರಶ್ನೆಗಳಿಗೆ ಆರು ಹೊಸ ಪ್ರಶ್ನೆಗಳÀನ್ನು ಸೇರಿಸಲಾಗಿದೆ. ತಂದೆ, ತಾಯಿ ಹುಟ್ಟಿದತಾರೀಕು, ಸ್ಥಳಗಳ ಮತ್ತುಆಧಾರ್ ಬಗ್ಗೆ ಬಗ್ಗೆ ಕೇಳಲಾಗಿದ್ದು, ಇವನ್ನುಎನ್.ಆರ್.ಸಿ. ಮತ್ತು ಪೌರತ್ವಕ್ಕೆ ಸಂಬಂಧಿಸಿ ಕೇಳಲಾಗುತ್ತಿದೆ.
ಮಹಾಸುಳ್ಳು 8 :ಯಾವುದೇ ಭಾರತೀಯ ಭಯಪಡುವಂಥದ್ದೇನಿಲ್ಲ.
ಸತ್ಯ ಸಂಗತಿ :ಎಲ್ಲಾ ಸಮುದಾಯಗಳ ಬಡವರು ಮತ್ತು ಅಂಚಿಗೆ ತಳ್ಳಲ್ಲಪಟ್ಟವರು ಭಯ ಪಡುವಂಥದ್ದು ಖಂಡಿತ ಇದೆ. ತಂದೆ, ತಾಯಿ ಹುಟ್ಟಿದತಾರೀಕು, ಸ್ಥಳಗಳ ಮಾಹಿತಿ ಒದಗಿಸುವುದು ಹೆಚ್ಚಿನ ಶಾಶ್ವತ ಸೂರುಇಲ್ಲದ, ನೆರೆ ಬರ ಮುಂತಾದ ಪ್ರಾಕೃತಿಕ ವಿಕೋಪಗಳಿಗೆ ತುತ್ತಾಗುವ, ಆಗಾಗ ವಲಸೆ ಹೋಗುವ ಅನಕ್ಷರಸ್ಥ ಬಡವರಿಗೆ ಕಷ್ಟಕರ ವಿಷಯ. ಇದು ಆಸ್ಸಾಂನಲ್ಲಿ ನಡೆದಎನ್.ಆರ್.ಸಿ. ಪ್ರಕ್ರಿಯೆಯ ಅನುಭವ ಕೂಡಾ. ಸಾಲದ್ದಕ್ಕೆ ಬಯೋಮೆಟ್ರಿಕ್ ಕೊಡಬೇಕಾಗಿದೆ.
ಬಯೋಮೆಟ್ರಿಕ್ ಮತ್ತು ಆಧಾರ್ ಮ್ಯಾಚಿಂಗ್ ಹಲವು ಕಾರಣಗಳಿಗೆ ವಿಫಲವಾಗುವುದು ಸಹ ವ್ಯಾಪಕವಾದ ಬಡವರ ಅನುಭವ. ಇದರಿಂದಾಗಿ ರೇಶನ್, ರೇಗಾ ಕೂಲಿ ಕಳೆದುಕೊಂಡ ಲಕ್ಷಾಂತರ ಬಡವರ ದೃಷ್ಟಾಂತಗಳಿವೆ. ಮುಂದಿನ ಹಂತದಲ್ಲಿ ಅಧಿಕಾರಿಗಳು ಕೇಳಿದರೆ ತಂದೆ-ತಾಯಿಗಳ ಸೇರಿದಂತೆ ಹಲವು ದಾಖಲೆಗಳನ್ನು ಒದಗಿಸಬೇಕು.
ಆಸ್ಸಾಂ ಎನ್.ಆರ್.ಸಿ ಪ್ರಕ್ರಿಯೆ ಸ್ಪಷ್ಟ ಪಡಿಸಿದಂತೆ ಸಾಮಾನ್ಯಗುರುತಿನ ದಾಖಲೆ (ಜನ್ಮಪತ್ರ, ಆಧಾರ್, ವೋಟರ್ಐಡಿ, ಪಾನ್ಕಾರ್ಡ್, ಪಾಸ್ ಪೋರ್ಟ್) ಸಾಕಾಗುವುದಿಲ್ಲ. ತಂದೆತಾಯಿ ಇಬ್ಬರದಾಖಲೆ ಬೇಕಾಗುತ್ತದೆ. ಆದ್ದರಿಂದಲೇಎನ್.ಪಿ.ಆರ್-ಎನ್.ಆರ್.ಸಿ. ಪ್ರಕ್ರಿಯೆ ಬಗ್ಗೆ ವ್ಯಾಪಕ ಭಯ ಉಂಟಾಗಿದೆ. ಇದು ಬಿಜೆಪಿ ಸರಕಾರದ ನೋಟು ನಿಷೇಧ ಮುಂತಾದಕ್ರೂರ ಕ್ರಮಗಳ ಹಿಂದಿನ ರೆಕಾರ್ಡಿನಿಂದ ಬಂದಸಹಜ ವಾಸ್ತವಿಕ ಭಯ.
ಇನ್ನೊಂದು ಕಾರಣಕ್ಕಾಗಿ ಮೋದಿ ಸರಕಾರ ಝಳಪಿಸುತ್ತಿರುವ ಸಿಎಎ-ಎನ್.ಪಿ.ಆರ್-ಎನ್.ಸಿ.ಆರ್ ಎಂಬ ಮೂರು ಅಲಗುಗಳ ತ್ರಿಶೂಲದ ಬಗ್ಗೆ ಚರಿತ್ತೆಯಿಂದ ಪಾಠಕಲಿತಎಲ್ಲಾ ಪ್ರಜ್ಞಾವಂತ ನಾಗರಿಕರು ಭಯ ಪಡಬೇಕಾಗಿದೆ. ನಾಜಿವಾದಿ ಮಾದರಿಯನ್ನು ಹಂತ ಹಂತವಾಗಿ ಕಾಪಿ ಹೊಡೆದು ಸಾಗಿರುವ ಸಂಘ ಪರಿವಾರದ ‘ಹಿಂದೂರಾಷ್ಟ್ರ’ದ ಯೋಜನೆಯಲ್ಲಿ ಈ ಕಾನೂನುಗಳ ತ್ರಿಶೂಲ ವಹಿಸಬಹುದಾದ ಪಾತ್ರದ ಬಗ್ಗೆ ಭಯ ಪಡಬೇಕಾಗಿದೆ. 1935ರಲ್ಲಿ ನಾಜಿಗಳು ತಂದ ಕುಪ್ರಸಿದ್ಧ ‘ನ್ಯುರೆಂಬರ್ಗ್ ಕಾನೂನುಗಳು’ ಒಂದೇ ಏಟಿಗೆಯೆಹೂದಿಯರ ಪೌರತ್ವ ಕಸಿದುಕೊಂಡು ಅವರನ್ನು ಯಾವುದೇ ಹಕ್ಕುಗಳಿಲ್ಲದ ಎರಡನೇದರ್ಜೆಯ ನಾಗರಿಕರನ್ನಾಗಿ ಮಾಡಿದ್ದವು.
ಕೊನೆಗೆ ಇದು 60 ಲಕ್ಷಯೆಹೂದಿಯರ ಸಾಮೂಹಿಕ ಬಂಧನ, ಯಾತನಾ ಶಿಬಿರಗಳಲ್ಲಿ ದೌರ್ಜನ್ಯ ಮತ್ತುಅವರ ನರಮೇಧದಲ್ಲಿ ಕೊನೆಗೊಂಡಿತ್ತು. ಇದು ಇಡೀ ಜರ್ಮನ್ ದೇಶದಲ್ಲಿ ಫ್ಯಾಸಿಸ್ಟ್ ಆಡಳಿತ ಸ್ಥಾಪಿಸುವಲ್ಲಿ, ಜನತೆಯನ್ನು ಫ್ಯಾಸಿಸ್ಟ್ ಕ್ರೌರ್ಯದ ಮತ್ತು ಯುದ್ಧದ ಉನ್ಮಾದದಲ್ಲಿ ಮುಳುಗಿಸಿ, ಎರಡನೇ ಮಹಾಯುದ್ಧಕ್ಕೆ ಮತ್ತುಜರ್ಮನರು ಸೇರಿದಂತೆ ಜಗತ್ತಿನಾದ್ಯಂತ ವ್ಯಾಪಕ ವಿನಾಶ ನರಮೇಧಗಳಿಗೆ ಕಾರಣವಾಗುವುದರಲ್ಲಿ ತನ್ನದೇ ಪಾತ್ರ ವಹಿಸಿತ್ತು.
ನಾಜಿಗಳು ಒಂದೇ ಏಟಿಗೆ ತಂದ ಕುಪ್ರಸಿದ್ಧ ‘ನ್ಯುರೆಂಬರ್ಗ್ ಕಾನೂನುಗಳು’ ಮಾಡಿದ ಪರಿಣಾಮವನ್ನು ಮೋದಿ ಸರಕಾರ ಹಂತ ಹಂತವಾಗಿ ಈ ಕಾನೂನುಗಳ ತ್ರಿಶೂಲದಿಂದ ಸಾಧಿಸುವ ಹಠತೊಟ್ಟಿರುವಂತೆ ಕಾಣುತ್ತದೆ ಎನ್ನುವ ಭಯ ಸಹಜವಾಗಿಯೇ ಉಂಟಾಗುತ್ತಿದೆ.
ಮಹಾಸುಳ್ಳು 9 :ದೇಶದಎಲ್ಲೂ ಬಂಧನ ಕೇಂದ್ರಗಳು ಇಲ್ಲಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.
ಸತ್ಯ ಸಂಗತಿ : ಕಾನೂನುಬಾಹಿರ ವಲಸೆಗಾರರು ಮತ್ತು ವಿದೇಶಿ ಅಪರಾಧಿಗಳನ್ನು ಇಡಲು ಬಂಧನ ಕೇಂದ್ರಗಳನ್ನು ಕಟ್ಟುವಂತೆ
ಜನವರಿ 9, 2019ರಂದು ಕೇಂದ್ರ ಸರಕಾರ ಸರಕಾರ ನಿರ್ದೇಶನ ನೀಡಿದೆ(ಮಾಹಿತಿ ಮೂಲ : ಡಿಸೆಂಬರ್ 11, 2019 ರಾಜ್ಯ ಸಭೆಯಲ್ಲಿ ಗೃಹ ರಾಜ್ಯ ಸಚಿವರಉತ್ತರ). ಆಸ್ಸಾಂ ನಲ್ಲಿ 6 ಬಂದನ ಕೇಂದ್ರಗಳಿವೆ. ಅದರಲ್ಲಿ 988 “ವಿಧೇಶಿಯರು” ಇದ್ದು 28 ಬಂಧಿತರು ಸತ್ತಿದ್ದಾರೆ ಎಂದು ನವೆಂಬರ್ 2019ರಲ್ಲಿ ಪ್ರಶ್ನೋತ್ತರದಲ್ಲಿ ಗೃಹ ರಾಜ್ಯ ಸಚಿವರ ಹೇಳಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ ಮುಂತಾದ ರಾಜ್ಯಗಳಲ್ಲಿ ಬಂಧನಕೇಂದ್ರಕಟ್ಟುವ ಕೆಲಸ ಆರಂಭವಾಗಿದೆ.
ಮಹಾಸುಳ್ಳು 10 : ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡಲಾಗಿಲ್ಲ. ವ್ಯಾಪಕ ಪ್ರತಿಭಟನೆ ನಡೆದಿರುವದೆಹಲಿ, ಯುಪಿ ಮತ್ತುಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೋಲಿಸರು ಗೋಲಿಬಾರು ಮಾಡಿಲ್ಲ.
ಸತ್ಯ ಸಂಗತಿ :ಬಹುಪಾಲು ಭಾರೀ ಪ್ರತಿಭಟನಾ ಪ್ರದರ್ಶನಗಳು ಶಾಂತಿಯುತವಾಗಿ ನಡೆದಿವೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಾತ್ರ ಪೋಲಿಸರದಮನ ಕ್ರಮಗಳಿಂದ ಕೆಲವು ಹಿಂಸಾಕೃತ್ಯಗಳು ಜರುಗಿವೆ.ಜಾಮಿಯಾ ಮಿಲಿಯ, ಅಲಿಘರ್, ದೆಹಲಿ ವಿವಿ ಗಳಲ್ಲಿ ಪೋಲಿಸರ ದೌರ್ಜನ್ಯಗಳು ಮುಗಿಲು ಮುಟ್ಟಿವೆ. ಯು.ಪಿ. ಒಂದೇ 21 ಜನ ಗೋಲಿಬಾರಿನಲ್ಲಿ ಸತ್ತಿದ್ದಾರೆ. ದಿನೇ ಈ ಸಂಖ್ಯೆ ಹೆಚ್ಚುತ್ತಿದೆ. ಆದರೆ ಪೋಲಿಸ್ ಗೋಲಿಬಾರು ಮಾಡಿರುವುದನ್ನೇ ನಿರಾಕರಿಸಿದ್ದಾರೆ.
ಪೋಲಿಸರು ಪ್ರತಿಭನಾಕಾರರು ಮತ್ತು ಮಾಯಕ ನಾಗರಿಕರ ಮೇಲೆ ಗೋಲಿಬಾರು ಮಾಡಿರುವುದು, ಬೇಕಾಬಿಟ್ಟಿ ದೌರ್ಜನ್ಯಗಳನ್ನು ಎಸಗಿರುವುದು, ತಾವೇ ವಿಧ್ವಂಸಕ ಕೃತ್ಯಗಳಲಿ ತೊಡಗಿರುವುದು – ದಿನೇ ಈ ಬಗ್ಗೆ ವಿಡಿಯೋ ಪುರಾವೆಗಳು ಹೊರ ಬರುತ್ತಿವೆ. ಆಸ್ಸಾಂನಲ್ಲಿ 5, ಕರ್ನಾಟಕದಲ್ಲಿ ಇಬ್ಬರು ಗೋಲಿಬಾರಿನಲ್ಲಿ ಸತ್ತಿದ್ದಾರೆ. ಯುಪಿ, ಕರ್ನಾಟಕ ಮುಂತಾದ ರಾಜ್ಯಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ಕಲಮು 144 ಹೇರುವ ಮೂಲಕ ನಿಷೇಧಿಸಿದ್ದು ಮತ್ತು ಪ್ರತಿಭಟನಾಕಾರರನ್ನು ಉದ್ರೇಕಿಸಿದ್ದು ಈಗ ನಡೆದಿರುವ ಸೀಮಿತ ಹಿಂಸಾಚಾರಕ್ಕೆಕಾರಣ.
ಕೃಪೆ : ಜನಶಕ್ತಿ ಮೀಡಿಯ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ10 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ10 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ


