Connect with us

ಬಹಿರಂಗ

CAA, NRC, NPR ಭಾರತದ ಎದೆ ಸೀಳುವ ತ್ರಿಶೂಲ : ಮೋದಿ-ಶಾ ಕಾರ್ಖಾನೆಯ ಹತ್ತು ಮಹಾ ಸುಳ್ಳುಗಳು

Published

on

ಮೋದಿ ಸರಕಾರದ ಭಾರತದ ಎದೆ ಸೀಳುವ ಕ್ರಮಗಳಾದ CAA, NRC, NPR ಕುರಿತುಸಿಪಿಐ(ಎಂ) ಸದ್ಯದಲ್ಲೇ ಪ್ರಕಟಿಸಲಿರುವ ಪುಸ್ತಿಕೆಯ ಸಾರಾಂಶಇಲ್ಲಿದೆ. ಇವುಗಳ ವಿರುದ್ಧತೀವ್ರ ಪ್ರತಿಭಟನೆಯ ನಂತರ ಈ ಕುರಿತು ಮೋದಿ ಸರಕಾರ ಹರಿಯಬಿಟ್ಟಿರುವ ಹತ್ತು ಮಹಾ ಸುಳ್ಳುಗಳನ್ನು ಬಯಲು ಮಾಡಿ ಸತ್ಯ ಸಂಗತಿಯನ್ನುಈ ಪುಸ್ತಿಕೆಯಲ್ಲಿ ವಿವರಿಸಲಾಗಿದೆ. ಇಲ್ಲಿ ಹತ್ತು ಮಹಾ ಸುಳ್ಳುಗಳು ಮತ್ತುಚುಟುಕಾದ ಉತ್ತರವಿದೆ.

ಮೋದಿ ಸರಕಾರವು ಭಾರತದ ಎದೆಯನ್ನೇ ಸೀಳಲು ಇರಿದಿರುವ ತ್ರಿಶೂಲದ ಮೂರು ಅಲಗುಗಳೆಂದರೆ : ಪೌರತ್ವತಿದ್ದುಪಡಿ ಕಾಯಿದೆ(CAA), ನಾಗರಿಕರ ರಾಷ್ಟ್ರೀಯ ರಿಜಿಸ್ಟರ್(NRC) ಮತ್ತುರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್(NRC). ರಾಷ್ಟ್ರೀಯ ಜನ ಸಂಖ್ಯಾ ರಿಜಿಸ್ಟರ್ (ಎನ್.ಪಿ.ಆರ್) ನ್ನು ಸಮಕಾಲೀನಗೊಳಿಸಲು ತಕ್ಷಣತಯಾರಿ ನಡೆಸಲುಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಸಿಪಿಐ(ಎಂ) ಬಲವಾಗಿ ವಿರೋಧಿಸಿದ ಪೌರತ್ವ ತಿದ್ದುಪಡಿಕಾಯಿದೆ (ಸಿಎಎ) ಮಂಜೂರಾದ ನಂತರ, ಪೌರತ್ವ ಹಕ್ಕುಗಳಿಗೆ ಕೋಮುವಾದಿ ಬಣ್ಣಕೊಡುವ ಚೌಕಟ್ಟು ಸಾಧಿಸುವತ್ತ ಇದು ಎರಡನೇ ಅಪಾಯಕಾರಿ ಹೆಜ್ಜೆ.

ಆಸ್ಸಾಂಒಪ್ಪಂದದಚಾರಿತ್ರಿಕ ಸನ್ನಿವೇಶದಿಂದಾಗಿ ಸಿಎಎ ಮತ್ತುಅದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳಿಂದ ಈಶಾನ್ಯ ಭಾರತದ ಪ್ರದೇಶಗಳನ್ನು ಹೊರಗಿಡಬೇಕೆಂಬುದು ಸಿಪಿಐ(ಎಂ) ನಿಲುವು. ಪೌರತ್ವತಿದ್ದುಪಡಿ ಮಸೂದೆ (ಸಿಎಬಿ) ಗೆ ಇದನ್ನುತಿದ್ದುಪಡಿಯಾಗಿ ಸಿಪಿಐ(ಎಂ) ಸೂಚಿಸಿತ್ತು. ಆದರೆಅದನ್ನು ಸರಕಾರ ತಿರಸ್ಕರಿಸಿದೆ. ಆಸ್ಸಾಂಒಪ್ಪಂದದದಲ್ಲಿ ಪೌರತ್ವಕ್ಕೆ 1971ರ ಗಡುವನ್ನು ನಿಗದಿ ಪಡಿಸಲಾಗಿದೆ. ಅದರ ನಂತರ ಬಂದವರ ನಡುವೆ ಮತಧರ್ಮದಆಧಾರದ ಮೇಲೆ ಯಾವುದೇತಾರತಮ್ಯ ಮಾಡಲಾಗಿಲ್ಲಎಂಬುದು ಗಮನಿಸಬೇಕಾದಅರ್ಥಪೂರ್ಣ ಅಂಶ. ಸಿಎಎ ಆಸ್ಸಾಂಒಪ್ಪಂದದ ನೇರ ಹಲ್ಲೆ ನಡೆಸುತ್ತದೆ ಮತ್ತು “ವಿದೇಶೀಯರ” ಪ್ರಶ್ನೆಗೆ ಕೋಮುವಾದಿ ಆಯಾಮವನ್ನು ಸೇರಿಸುತ್ತದೆ.

ಈಗ ದೇಶದಾದ್ಯಂತ ಭಾರೀ ಪ್ರತಿಭಟನೆಗಳು ವ್ಯಕ್ತವಾಗಿರುವುದರಿಂದ ಮೊದಿ-ಶಾ ಜೋಡಿತಮ್ಮ ಸುಳ್ಳಿನ ಸಾಮೂಹಿಕ ಉತ್ಪಾದನೆಯ ಫ್ಯಾಕ್ಟರಿಗಳನ್ನು ಕೆಲಸಕ್ಕೆ ಹಚ್ಚಿದ್ದಾರೆ. ಹಿಟ್ಲರನಜರ್ಮನಿಯಲ್ಲಿ ನಾಜೀ ಪ್ರಚಾರದ ನೀತಿಯೊಂದನ್ನುಇಲ್ಲಿ ನೆನಪಿಸಿಕೊಳ್ಳಬಹುದು : “ಒಂದು ಸುಳ್ಳನ್ನು ಸಾವಿರ ಬಾರಿ ಹೇಳುತ್ತಾ ಹೋದರೆಅದು ಸತ್ಯವಾಗುತ್ತದೆ”. ಅದೇ ಮೋದಿ ಸರಕಾರದ ನೀತಿ ಸಹ ಆಗಿದೆ. ಆದ್ದರಿಂದ ಈ ಮೋದಿ ಸರಕಾರದ ಪ್ರತಿಯೊಂದು ಸುಳ್ಳನ್ನು ಬಯಲುಪಡಿಸಬೇಕಾಗಿದೆ.ಅವರ ಸುಳ್ಳಿನ ಪಟ್ಟಿ ದಿನೇ ಹೆಚ್ಚುತ್ತಲೇಇದೆ.

ಇಲ್ಲಿಯವರೆಗಿನ ಹತ್ತು ಮಹಾ ಸುಳ್ಳುಗಳು ಹೀಗಿವೆ 

ಮಹಾಸುಳ್ಳು 1 : ಸಿಎಎ ಕಾಯಿದೆಯಲ್ಲಿ ತಾರತಮ್ಯವಿಲ್ಲ. ಕಿರುಕುಳಕ್ಕೊಳಗಾದವರ ನೆರವಿಗೆ ಧಾವಿಸುವುದು ಭಾರತದ ಸಂಸ್ಕøತಿ. ಯಾವ ಭಾರತೀಯ ನಾಗರಿಕನಿಗೂ ಇದರಿಂದ ತೊಂದರೆಯಾಗುವುದಿಲ್ಲ.

ಸತ್ಯ ಸಂಗತಿ : ಭಾರತೀಯ ಪೌರತ್ವಕಾಯಿದೆ 1955ರ ಪ್ರಕಾರ ಭಾರತೀಯ ನಾಗರಿಕನಾಗುವಐದು ವಿಧಾನಗಳಲ್ಲಿ (ಹುಟ್ಟಿನಿಂದ, ತಂದೆ-ತಾಯಿ ನಾಗರಿಕತ್ವದಿಂದ, ನೆಲೆಸುವಿಕೆಯಿಂದ, ರಿಜಿಸ್ಟರ್ ಮಾಡುವ ಮೂಲಕ, ಪ್ರದೇಶದ ಸೇರಿಸುವಿಕೆಯಿಂದ) ಮತಧರ್ಮದ ಅಥವಾ ಇನ್ಯಾವುದೇ ಆಧಾರದ ಮೇಲೆ ಯಾವುದೇತಾರತಮ್ಯವಿರಲಿಲ್ಲ. ಇದು ಪೌರತ್ವಕ್ಕೆ ಮತಧರ್ಮ ಸೇರಿದಂತೆಯಾವುದೇ ನೆಲೆಯಲ್ಲಿ ತಾರತಮ್ಯ ಮಾಡದಿರುವ ನಮ್ಮ ಸಂವಿಧಾನದ ಆಶಯಕ್ಕೆ ಅನುಗುಣವಾಗಿದೆ. ಸಿಎಎ ಮೂರು ವಿಧದ ತಾರತಮ್ಯವನ್ನು ಸೇರಿಸಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದೆ. ನೆರೆಯ ದೇಶಗಳಲ್ಲಿ ಮೂರು ದೇಶಗಳ – ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ– ವಲಸೆಗಾರರಿಗೆ ಬೇರೆ ನಿಯಮಗಳನ್ನು ರೂಪಿಸಿದೆ.

ಈ ಮೂರು ದೇಶಗಳ ವಲಸೆಗಾರರಲ್ಲೂ ಮುಸ್ಲಿಮರನ್ನು ಹೊರಗಿಡಲಾಗಿದೆ. ಈ ಮೂರು ದೇಶಗಳ ಮುಸ್ಲಿಮೇತರ ವಲಸೆಗಾರರಿಗೆ ಪೌರತ್ವಕ್ಕೆ ಅರ್ಹತೆಯ ಅವಧಿಯನ್ನು ಇತರರಿಗೆ ಇರುವ 11 ವರ್ಷಗಳಿಂದ 5 ವರ್ಷಕ್ಕೆ ಕಡಿತಗೊಳಿಸಲಾಗಿದೆ. ಕಿರುಕುಳಕ್ಕೊಳಗಾದವರ ಮತ್ತು ನಿರಾಶ್ರಿತರ ನೆರವಿಗೆಧಾವಿಸುವುದು ಸರಿಯಾದ್ದೇ. ಆದರೆಅಲ್ಲೂ ಮತಧರ್ಮ, ದೇಶ, ಭಾಷೆಗಳ ಆಧಾರದಲ್ಲಿ ತಾರತಮ್ಯ ತೋರಲಾಗಿದೆ.

ಶ್ರೀಲಂಕಾದಲ್ಲಿ ಧಾರ್ಮಿಕ, ಭಾಷೆಎರಡೂ ನೆಲೆಗಳಲ್ಲಿ ತಾರತಮ್ಯ ಕಿರುಕುಳ ತಾಳಲಾರದೆ ಭಾರತದಲ್ಲಿ ದಶಕಗಳಿಂದ ನೆಲೆಸಿರುವ ಹತ್ತಾರು ಲಕ್ಷ ತಮಿಳರನ್ನು ಹೊರಗಿಡಲಾಗಿದೆ. ಪಾಕಿಸ್ತಾನದಲ್ಲಿಧಾರ್ಮಿಕ ತಾರತಮ್ಯಕ್ಕೊಳಗಾಗಿರುವ ಶಿಯಾ, ಅಹಮದೀಯ ಮುಂತಾದ ಅಲ್ಪಸಂಖ್ಯಾತರನ್ನೂ, ಮ್ಯಾನ್ಮಾರಿನರೋಹಿಂಗ್ಯ ಮುಸ್ಲಿಮರ ನೆರವಿಗೆಧಾವಿಸದಿರುವುದು ಭಾರತೀಯ ಸಂಸೃತಿಯ ಘನತೆ ಮತ್ತು ಸಂವಿಧಾನದ ಆಶಯ ಎರಡಕ್ಕೂತಕ್ಕುದಲ್ಲ.

ಮಹಾಸುಳ್ಳು 2 : ವಲಸಿಗ ಸಮುದಾಯಗಳನ್ನು ಹಿಂದೆಬೆಂಬಲಿಸಿದ ಕಾಂಗ್ರೆಸ್ ಮತ್ತು ಸಿಪಿಐ(ಎಂ) (20ನೇ ಮಹಾಧಿವೇಶನದ ನಿರ್ಣಯ ಮತ್ತು ಆಗಿನ ಪ್ರಧಾನ ಕಾರ್ಯದರ್ಶಿಯ ಪತ್ರದಲ್ಲಿ ದಾಖಲಿಸಿದಂತೆ) ಪಕ್ಷಗಳು ಈಗ ಮತಬ್ಯಾಂಕ್ ರಾಜಕೀಯದಿಂದಾಗಿ ಈ ತಿದ್ದುಪಡಿಯನ್ನು ವಿರೋಧಿಸುತ್ತಿವೆ.

ಸತ್ಯ ಸಂಗತಿ : ಕಿರುಕುಳಕ್ಕೊಳಗಾದವರಿಗೆ ನಿರಾಶ್ರಿತರಾದವರಿಗೆ ಆಶ್ರಯಕೊಡಬೇಕೆಂಬುದು ಯಾವತ್ತೂ ಕಮ್ಯುನಿಸ್ಟ್, ಎಡ ಚಳುವಳಿಗಳ, ಸಿಪಿಐ(ಎಂ) ಪಕ್ಷದ ನಿಲುವಾಗಿತ್ತು.1947ರ ದೇಶ ವಿಭಜನೆ ಮತ್ತು 1971ರ ಪಾಕಿಸ್ತಾನಿ ಮಿಲಿಟರಿ ಸರಕಾರದ ದೌರ್ಜನ್ಯಗಳ ಬಲಿಪಶುಗಳಾದ ಈಗಿನ ಬಾಂಗಾದೇಶದ ನಿರಾಶ್ರಿತರಿಗೆ ನೆಲೆ ಒದಗಿಸಲು ಪೌರತ್ವ ಕೊಡಲು ಸಿಪಿಐ(ಎಂ)ಹೋರಾಡಿತ್ತು. ಮಾತ್ರವಲ್ಲ ನಿರಾಶ್ರಿತರಾಗಿ ಬಂದು ನೆಲೆಸಿದ ನಾಮಶೂದ್ರರಿಗೆದಲಿತ ಸ್ಥಾನಮಾನವನ್ನೂ ಪಶ್ಚಿಮ ಬಂಗಾಳದಲ್ಲಿ ಒದಗಿಸಿತ್ತು. ಅವರು ನೆಲೆಸಿದ ಇತರ ರಾಜ್ಯಗಳಲ್ಲೂ ಈ ಸ್ಥಾನಮಾನ ಸಿಗುವಂತೆ ಹೋರಾಟ ನಡೆಸಿತ್ತು.

ಆದರೆಯಾವತ್ತೂ ಮತಧರ್ಮದ ಅಥವಾ ಇನ್ಯಾವುದೇ ಆಧಾರದ ಮೇಲೆ ತಾರತಮ್ಯದ ನೀತಿಯನ್ನು ಬೆಂಬಲಿಸಿರಲಿಲ್ಲ. ಸಿಎಬಿ ಗೆ ಸಿಪಿಐ(ಎಂ) ಮಂಡಿಸಿದ ತಿದ್ದುಪಡಿಯಲ್ಲಿ ನಿರಾಶ್ರಿತರಿಗೆ ವಲಸಿಗರಿಗೆ ಆಶ್ರಯಕೊಡುವಲ್ಲಿ ತಾರತಮ್ಯವನ್ನು ತೆಗೆದು ಹಾಕುವ ತಿದ್ದುಪಡಿಗಳನ್ನು ಮಂಡಿಸಿತ್ತು. ಈಗ ಮೊಸಳೆ ಕಣ್ಣೀರು ಹಾಕುವ ಆರೆಸ್ಸೆಸ್ ಆಗ ಬಂಗಾಳದ ನಿರಾಶ್ತಿತರ ಬಗ್ಗೆ ಮೌನವಾಗಿತ್ತು.ಬಿಜೆಪಿ ಆಡಳಿತದ ಯು.ಪಿ, ಉತ್ತರಾಖಂಡ, ಮಧ್ಯಪ್ರದೇಶದ ಬಿಜೆಪಿ ಸರಕಾರಗಳು ನಾಮಶೂದ್ರರಿಗೆ ದಲಿತ ಸ್ಥಾನಮಾನಕೊಡುವುದಕ್ಕೆ ನಿರಾಕರಿಸಿದ್ದವು.

ಮಹಾಸುಳ್ಳು 3 :ಸಿಎಎ (ಪೌರತ್ವತಿದ್ದುಪಡಿಕಾಯಿದೆ) ಗೂ ಎನ್.ಆರ್.ಸಿ.(ನಾಗರಿಕರರಾಷ್ಟ್ರೀಯರಿಜಿಸ್ಟರ್)ಗೂ ಯಾವುದೇ ಸಂಬಂಧವಿಲ್ಲ. ಅವುಗಳು ಪ್ರತ್ಯೇಕವಾದುವುಗಳು. ವಿರೋಧ ಪಕ್ಷಗಳು ಇವೆರಡರ ನಡುವೆತಪ್ಪಾಗಿ ಸಂಬಂಧಕಲ್ಪಿಸುತ್ತಿವೆ.

ಸತ್ಯ ಸಂಗತಿ :ಸಿಎಎ ಗೂ ಎನ್.ಆರ್.ಸಿ. ಗೂ ಸಂಬಂಧ ಕಲ್ಪಿಸಿರುವುದು ಗೃಹಮಂತ್ರಿಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷಜೆ ಪಿ ನಡ್ಡಾಅವರು, ವಿರೋಧ ಪಕ್ಷಗಳಲ್ಲ. ಈ ವರ್ಷವೇಏಪ್ರಿಲ್ ನಲ್ಲಿ ಬಂಗಾಳದಲ್ಲಿ ಮತ್ತುಡಿಸೆಂಬರ್ 9 ರಂದು ಪಾರ್ಲಿಮೆಂಟಿನಲ್ಲಿ ಮಾಡಿದ ಹೇಳಿಕೆಗಳಲ್ಲಿ ಅಮಿತ್ ಶಾ ಮತ್ತುಡಿಸೆಂಬರ್ 19 ರಂದುಜೆ ಪಿ ನಡ್ಡಾ ಹೇಳಿಕೆಗಳಿಂದ ಬಿಜೆಪಿಯ ಈ ಹುನ್ನಾರ ಸ್ಪಷ್ಟ. ಸಿಎಎ ಮುಸ್ಲಿಮೇತರ ‘ನಿರಾಶ್ರಿತ’ರಿಗೆ ನಾಗರಿಕತ್ವಕೊಡುತ್ತದೆ. ಎನ್. ಆರ್.ಸಿ. “ನುಸುಳುಕೋರರ”ನ್ನು ಗುರುತಿಸುತ್ತದೆ. ಸಿಎಎ ನಲ್ಲಿ ಹೊರಗಿಟ್ಟ ಮುಸ್ಲಿಮರನ್ನು “ನುಸುಳುಕೋರರ”ನ್ನಾಗಿ ಮಾಡಿ ಹೊರಗಟ್ಟುವುದು ಬಿಜೆಪಿಯ ಹುನ್ನಾರ

ಮಹಾಸುಳ್ಳು 4 : ಡಿಸೆಂಬರ್ 22ರ ದೆಹಲಿ ರ್ಯಾಲಿಯಲ್ಲಿ “ತಮ್ಮ ಸರಕಾರ 2014ರಲ್ಲಿ ನನ್ನ ಸರಕಾರಕ್ಕೆಅಧಿಕಾರಕ್ಕೆ ಬಂದಾಗಿನಿಂದ ಎನ್.ಆರ್.ಸಿ ಬಗ್ಗೆ ಎಲ್ಲೂಯಾವುದೇಚರ್ಚೆ ನಡೆದಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸತ್ಯ ಸಂಗತಿ : ಜೂನ್20, 2019 ರ ಸದನಗಳ ಜಂಟಿಅಧಿವೇಶನಕ್ಕೆಅಧ್ಯಕ್ಷರು ಮಾಡಿದ ಭಾಷಣದಲ್ಲಿ, ನವೆಂಬರ್ 21, 2019ರಂದು ಅಮಿತ್ ಶಾ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿಎನ್.ಆರ್.ಸಿ ಬಗ್ಗೆ ಸ್ಪಷ್ಟಉಲ್ಲೇಖವಿದೆ. ಮಾತ್ರವಲ್ಲ, ಎನ್.ಆರ್.ಸಿಜಾರಿಯ ಬಗ್ಗೆ ಕೇಂದ್ರ ಸರಕಾರದ ಮಂತ್ರಿಗಳ 9 ಅಧಿಕೃತ ಹೇಳಿಕೆಗಳಿವೆ. ಇವೆಲ್ಲ ಹೇಳಿಕೆಗಳನ್ನು ಕೇಂದ್ರ ಸಂಪುಟದಲ್ಲಿ ಯಾವುದೇ ಚರ್ಚೆಯಿಲ್ಲದೆ ಮಾಡಲಾಗಿದೆಯೇ?

ಮಹಾಸುಳ್ಳು 5 :ಎನ್.ಆರ್.ಸಿ. ಪ್ರಕ್ರಿಯೆ ಕಾನೂನು ಪ್ರಕಾರಈವರೆಗೆ ಸ್ಥಾಪಿತವಾಗಿಲ್ಲ ಮತ್ತು ವಿರೋಧ ಪಕ್ಷಗಳು ಸುಳ್ಳುಗಳನ್ನು ಹರಡುತ್ತಿವೆ ಎಂದು ಪ್ರಧಾನಿ ಮೋದಿ, ಅವರ ಸಂಪುಟ ಸಚಿವರುಗಳು, ಪಕ್ಷದವಕ್ತಾರರು ಹಾಗೂ ಬಾಲಡುಕ ಮಾಧ್ಯಮ ಮಿತ್ರರು ವಿರೋಧ ಪಕ್ಷಗಳನ್ನು ದೂರುತ್ತಿದ್ದಾರೆ. “ದೇಶದಾದ್ಯಂತ ಎನ್.ಆರ್.ಸಿ ಪ್ರಕ್ರಿಯೆಯನ್ನು ಈ ವರೆಗೆ ಅಧಿಸೂಚಿತಗೊಳಿಸಿಲ್ಲ ಮತ್ತುಯಾರೂ ಈ ಕುರಿತು ಹೆದರಬೇಕಾಗಿಲ್ಲ.” ಎಂದು ಗೃಹ ಖಾತೆಯರಾಜ್ಯ ಮಂತ್ರಿ ಜಿ. ಕಿಶನ್ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸತ್ಯ ಸಂಗತಿ : ಎನ್.ಆರ್.ಸಿ. ಪ್ರಕ್ರಿಯೆಯನ್ನು ಕಾನೂನು ಪ್ರಕಾರ ಸ್ಥಾಪಿಸಲು ವಾಜಪೇಯಿ ಸರಕಾರದ ಅವಧಿಯಲ್ಲಿ ಗೃಹ ಮಂತ್ರಿ ಎಲ್.ಕೆ.ಅಡ್ವಾಣಿ ಅವರಿಂದ ಮಂಡಿತವಾಗಿ 2003ರಲ್ಲಿ ಅಂಗೀಕೃತವಾಯಿತು. ಇದಕ್ಕಾಗಿ ಪ್ರತ್ಯೇಕ ಕಾನೂನು ರಚನೆಯಾಗಿಲ್ಲ. ಬದಲಿಗೆ, ಭಾರತ ಪೌರತ್ವಕಾಯಿದೆ 1955ಗೆ ತಿದ್ದುಪಡಿಮಾಡಲಾಗಿದೆ. ಎನ್.ಆರ್.ಸಿ.ಜಾರಿಗೆ ನಿಯಮಾವಳಿಯನ್ನು ಸಹ ರಚಿಸಿ 2003ರಲ್ಲೇ ಅಂಗೀಕರಿಸಲಾಗಿದೆ.

ಮಹಾಸುಳ್ಳು 6 : ಎನ್.ಆರ್.ಸಿ. ಪ್ರಕ್ರಿಯೆ ಇ್ಲನ್ನೂ ಆರಂಭವಾಗಿಲ್ಲ ಮತ್ತು ಆ ಕುರಿತು ಯಾವುದೇ ಅಧಿಸೂಚನೆಯೂ ಇಲ್ಲ.

ಎನ್.ಆರ್.ಸಿ.ಜಾರಿಗೆ ನಿಯಮಾವಳಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ರಾಷ್ಟ್ರೀಯ ಜನಸಂಖ್ಯಾರಿಜಿಸ್ಟರ್ (ಎನ್.ಪಿಆರ್.) ಪ್ರಕ್ರಿಯೆಯೊಂದಿಗೆ ಆರಂಭವಾಗುತ್ತದೆಎಂದು ಸ್ಪಷ್ಟವಾಗಿ ಹೇಳಲಾಗಿದೆ. ಎನ್.ಪಿ.ಆರ್. ಪ್ರಕ್ರಿಯೆ ಮುಗಿದ ನಂತರ ಅದರ ಆಧಾರದ ಮೇಲೆ ಎನ್.ಆರ್.ಸಿ.ರಚಿಸಲಾಗುವುದು. ಎನ್.ಪಿ.ಆರ್. ಮತ್ತುಎನ್.ಆರ್.ಸಿ ನಡುವಿನ ಸಂಬಂಧದ ಬಗ್ಗೆ ಕೇಂದ್ರ ಗೃಹ ರಾಜ್ಯ ಮಂತ್ರಿಜುಲೈ 23, 2014ರಲ್ಲಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಎನ್.ಪಿ.ಆರ್. ಪ್ರಕ್ರಿಯೆ ಆರಂಭಿಸಲುಜುಲೈ 31, 2019ರಂದು ಅಧಿಸೂಚನೆ ಹೊರಡಿಸಲಾಗಿದೆ.

ಮಹಾಸುಳ್ಳು 7 : ಎನ್.ಆರ್.ಸಿ. (ಪೌರತ್ವರಿಜಿಸ್ಟರ್)ಗೂ ಎನ್.ಪಿ.ಆರ್. (ಜನಸಂಖ್ಯಾರಿಜಿಸ್ಟರ್)ಗೂ ಏನೂ ಸಂಬಂಧವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಎನ್.ಪಿ.ಆರ್ ಹೆಚ್ಚಿನ ಪ್ರಶ್ನೆಗಳೊಂದಿಗೆ ಸಮಕಾಲೀನಗೊಳಿಸುವ ಕೇಂದ್ರ ಸಂಪುಟದ ನಿರ್ಧಾರದ ಸಂದರ್ಭದಲ್ಲಿ ಈ ಹೇಳಿಕೆ ಕೊಟ್ಟಿದ್ದಾರೆ. ಎನ್.ಪಿ.ಆರ್. ಜನಗಣತಿಯ ಉದ್ದೇಶಕ್ಕೆ ಮಾತ್ರವಿದೆ. ಎನ್.ಆರ್.ಸಿ. ಅಥವಾ ಪೌರತ್ವಕ್ಕೂ ಅದಕ್ಕೂಯಾವುದೇ ಸಂಬಂಧವಿಲ್ಲ. ಆದ್ದರಿಂದ ಭಾರತೀಯ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂದು ವಿರೋಧ ಪಕ್ಷಗಳು ಯಾಕೆ ಹೇಳುತ್ತಿವೆ ಎಂದುಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ ಜಾವಡೇಕರ್ ಹೇಳಿದ್ದಾರೆ.

ಸತ್ಯ ಸಂಗತಿ :ಗೃಹ ಸಚಿವಾಲಯದ2018-19 ವಾರ್ಷಿಕ ವರದಿಯಅಧ್ಯಾಯ 15 ಪಾರಾ 15.40 ಎನ್.ಪಿ.ಆರ್ ಮತ್ತು ಎನ್.ಆರ್.ಸಿ. (ಅಂದರೆ ಪೌರತ್ವದ) ಗಳ ಸಂಬಂಧದ ಬಗೆಗ ಸ್ಪಷ್ಟವಿದೆ. ಎನ್.ಪಿ.ಆರ್ ಮತ್ತು ಜನಗಣತಿಯನ್ನು ಜನಗಣತಿ ಅಧಿಕಾರಿಗಳು ನಡೆಸುತ್ತಾರೆಎಂದು ಬಿಟ್ಟರೆ ಅವೆರಡಕ್ಕೆ ಸಂಬಂಧವಿಲ್ಲ. ಎನ್.ಪಿ.ಆರ್. ಪ್ರಶ್ನಾವಳಿಯಲ್ಲಿ ಹಿಂದಿನ 15 ಪ್ರಶ್ನೆಗಳಿಗೆ ಆರು ಹೊಸ ಪ್ರಶ್ನೆಗಳÀನ್ನು ಸೇರಿಸಲಾಗಿದೆ. ತಂದೆ, ತಾಯಿ ಹುಟ್ಟಿದತಾರೀಕು, ಸ್ಥಳಗಳ ಮತ್ತುಆಧಾರ್ ಬಗ್ಗೆ ಬಗ್ಗೆ ಕೇಳಲಾಗಿದ್ದು, ಇವನ್ನುಎನ್.ಆರ್.ಸಿ. ಮತ್ತು ಪೌರತ್ವಕ್ಕೆ ಸಂಬಂಧಿಸಿ ಕೇಳಲಾಗುತ್ತಿದೆ.

ಮಹಾಸುಳ್ಳು 8 :ಯಾವುದೇ ಭಾರತೀಯ ಭಯಪಡುವಂಥದ್ದೇನಿಲ್ಲ.

ಸತ್ಯ ಸಂಗತಿ :ಎಲ್ಲಾ ಸಮುದಾಯಗಳ ಬಡವರು ಮತ್ತು ಅಂಚಿಗೆ ತಳ್ಳಲ್ಲಪಟ್ಟವರು ಭಯ ಪಡುವಂಥದ್ದು ಖಂಡಿತ ಇದೆ. ತಂದೆ, ತಾಯಿ ಹುಟ್ಟಿದತಾರೀಕು, ಸ್ಥಳಗಳ ಮಾಹಿತಿ ಒದಗಿಸುವುದು ಹೆಚ್ಚಿನ ಶಾಶ್ವತ ಸೂರುಇಲ್ಲದ, ನೆರೆ ಬರ ಮುಂತಾದ ಪ್ರಾಕೃತಿಕ ವಿಕೋಪಗಳಿಗೆ ತುತ್ತಾಗುವ, ಆಗಾಗ ವಲಸೆ ಹೋಗುವ ಅನಕ್ಷರಸ್ಥ ಬಡವರಿಗೆ ಕಷ್ಟಕರ ವಿಷಯ. ಇದು ಆಸ್ಸಾಂನಲ್ಲಿ ನಡೆದಎನ್.ಆರ್.ಸಿ. ಪ್ರಕ್ರಿಯೆಯ ಅನುಭವ ಕೂಡಾ. ಸಾಲದ್ದಕ್ಕೆ ಬಯೋಮೆಟ್ರಿಕ್ ಕೊಡಬೇಕಾಗಿದೆ.

ಬಯೋಮೆಟ್ರಿಕ್ ಮತ್ತು ಆಧಾರ್ ಮ್ಯಾಚಿಂಗ್ ಹಲವು ಕಾರಣಗಳಿಗೆ ವಿಫಲವಾಗುವುದು ಸಹ ವ್ಯಾಪಕವಾದ ಬಡವರ ಅನುಭವ. ಇದರಿಂದಾಗಿ ರೇಶನ್, ರೇಗಾ ಕೂಲಿ ಕಳೆದುಕೊಂಡ ಲಕ್ಷಾಂತರ ಬಡವರ ದೃಷ್ಟಾಂತಗಳಿವೆ. ಮುಂದಿನ ಹಂತದಲ್ಲಿ ಅಧಿಕಾರಿಗಳು ಕೇಳಿದರೆ ತಂದೆ-ತಾಯಿಗಳ ಸೇರಿದಂತೆ ಹಲವು ದಾಖಲೆಗಳನ್ನು ಒದಗಿಸಬೇಕು.

ಆಸ್ಸಾಂ ಎನ್.ಆರ್.ಸಿ ಪ್ರಕ್ರಿಯೆ ಸ್ಪಷ್ಟ ಪಡಿಸಿದಂತೆ ಸಾಮಾನ್ಯಗುರುತಿನ ದಾಖಲೆ (ಜನ್ಮಪತ್ರ, ಆಧಾರ್, ವೋಟರ್ಐಡಿ, ಪಾನ್ಕಾರ್ಡ್, ಪಾಸ್ ಪೋರ್ಟ್) ಸಾಕಾಗುವುದಿಲ್ಲ. ತಂದೆತಾಯಿ ಇಬ್ಬರದಾಖಲೆ ಬೇಕಾಗುತ್ತದೆ. ಆದ್ದರಿಂದಲೇಎನ್.ಪಿ.ಆರ್-ಎನ್.ಆರ್.ಸಿ. ಪ್ರಕ್ರಿಯೆ ಬಗ್ಗೆ ವ್ಯಾಪಕ ಭಯ ಉಂಟಾಗಿದೆ. ಇದು ಬಿಜೆಪಿ ಸರಕಾರದ ನೋಟು ನಿಷೇಧ ಮುಂತಾದಕ್ರೂರ ಕ್ರಮಗಳ ಹಿಂದಿನ ರೆಕಾರ್ಡಿನಿಂದ ಬಂದಸಹಜ ವಾಸ್ತವಿಕ ಭಯ.

ಇನ್ನೊಂದು ಕಾರಣಕ್ಕಾಗಿ ಮೋದಿ ಸರಕಾರ ಝಳಪಿಸುತ್ತಿರುವ ಸಿಎಎ-ಎನ್.ಪಿ.ಆರ್-ಎನ್.ಸಿ.ಆರ್ ಎಂಬ ಮೂರು ಅಲಗುಗಳ ತ್ರಿಶೂಲದ ಬಗ್ಗೆ ಚರಿತ್ತೆಯಿಂದ ಪಾಠಕಲಿತಎಲ್ಲಾ ಪ್ರಜ್ಞಾವಂತ ನಾಗರಿಕರು ಭಯ ಪಡಬೇಕಾಗಿದೆ. ನಾಜಿವಾದಿ ಮಾದರಿಯನ್ನು ಹಂತ ಹಂತವಾಗಿ ಕಾಪಿ ಹೊಡೆದು ಸಾಗಿರುವ ಸಂಘ ಪರಿವಾರದ ‘ಹಿಂದೂರಾಷ್ಟ್ರ’ದ ಯೋಜನೆಯಲ್ಲಿ ಈ ಕಾನೂನುಗಳ ತ್ರಿಶೂಲ ವಹಿಸಬಹುದಾದ ಪಾತ್ರದ ಬಗ್ಗೆ ಭಯ ಪಡಬೇಕಾಗಿದೆ. 1935ರಲ್ಲಿ ನಾಜಿಗಳು ತಂದ ಕುಪ್ರಸಿದ್ಧ ‘ನ್ಯುರೆಂಬರ್ಗ್ ಕಾನೂನುಗಳು’ ಒಂದೇ ಏಟಿಗೆಯೆಹೂದಿಯರ ಪೌರತ್ವ ಕಸಿದುಕೊಂಡು ಅವರನ್ನು ಯಾವುದೇ ಹಕ್ಕುಗಳಿಲ್ಲದ ಎರಡನೇದರ್ಜೆಯ ನಾಗರಿಕರನ್ನಾಗಿ ಮಾಡಿದ್ದವು.

ಕೊನೆಗೆ ಇದು 60 ಲಕ್ಷಯೆಹೂದಿಯರ ಸಾಮೂಹಿಕ ಬಂಧನ, ಯಾತನಾ ಶಿಬಿರಗಳಲ್ಲಿ ದೌರ್ಜನ್ಯ ಮತ್ತುಅವರ ನರಮೇಧದಲ್ಲಿ ಕೊನೆಗೊಂಡಿತ್ತು. ಇದು ಇಡೀ ಜರ್ಮನ್ ದೇಶದಲ್ಲಿ ಫ್ಯಾಸಿಸ್ಟ್ ಆಡಳಿತ ಸ್ಥಾಪಿಸುವಲ್ಲಿ, ಜನತೆಯನ್ನು ಫ್ಯಾಸಿಸ್ಟ್ ಕ್ರೌರ್ಯದ ಮತ್ತು ಯುದ್ಧದ ಉನ್ಮಾದದಲ್ಲಿ ಮುಳುಗಿಸಿ, ಎರಡನೇ ಮಹಾಯುದ್ಧಕ್ಕೆ ಮತ್ತುಜರ್ಮನರು ಸೇರಿದಂತೆ ಜಗತ್ತಿನಾದ್ಯಂತ ವ್ಯಾಪಕ ವಿನಾಶ ನರಮೇಧಗಳಿಗೆ ಕಾರಣವಾಗುವುದರಲ್ಲಿ ತನ್ನದೇ ಪಾತ್ರ ವಹಿಸಿತ್ತು.

ನಾಜಿಗಳು ಒಂದೇ ಏಟಿಗೆ ತಂದ ಕುಪ್ರಸಿದ್ಧ ‘ನ್ಯುರೆಂಬರ್ಗ್ ಕಾನೂನುಗಳು’ ಮಾಡಿದ ಪರಿಣಾಮವನ್ನು ಮೋದಿ ಸರಕಾರ ಹಂತ ಹಂತವಾಗಿ ಈ ಕಾನೂನುಗಳ ತ್ರಿಶೂಲದಿಂದ ಸಾಧಿಸುವ ಹಠತೊಟ್ಟಿರುವಂತೆ ಕಾಣುತ್ತದೆ ಎನ್ನುವ ಭಯ ಸಹಜವಾಗಿಯೇ ಉಂಟಾಗುತ್ತಿದೆ.

ಮಹಾಸುಳ್ಳು 9 :ದೇಶದಎಲ್ಲೂ ಬಂಧನ ಕೇಂದ್ರಗಳು ಇಲ್ಲಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

ಸತ್ಯ ಸಂಗತಿ : ಕಾನೂನುಬಾಹಿರ ವಲಸೆಗಾರರು ಮತ್ತು ವಿದೇಶಿ ಅಪರಾಧಿಗಳನ್ನು ಇಡಲು ಬಂಧನ ಕೇಂದ್ರಗಳನ್ನು ಕಟ್ಟುವಂತೆ
ಜನವರಿ 9, 2019ರಂದು ಕೇಂದ್ರ ಸರಕಾರ ಸರಕಾರ ನಿರ್ದೇಶನ ನೀಡಿದೆ(ಮಾಹಿತಿ ಮೂಲ : ಡಿಸೆಂಬರ್ 11, 2019 ರಾಜ್ಯ ಸಭೆಯಲ್ಲಿ ಗೃಹ ರಾಜ್ಯ ಸಚಿವರಉತ್ತರ). ಆಸ್ಸಾಂ ನಲ್ಲಿ 6 ಬಂದನ ಕೇಂದ್ರಗಳಿವೆ. ಅದರಲ್ಲಿ 988 “ವಿಧೇಶಿಯರು” ಇದ್ದು 28 ಬಂಧಿತರು ಸತ್ತಿದ್ದಾರೆ ಎಂದು ನವೆಂಬರ್ 2019ರಲ್ಲಿ ಪ್ರಶ್ನೋತ್ತರದಲ್ಲಿ ಗೃಹ ರಾಜ್ಯ ಸಚಿವರ ಹೇಳಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ ಮುಂತಾದ ರಾಜ್ಯಗಳಲ್ಲಿ ಬಂಧನಕೇಂದ್ರಕಟ್ಟುವ ಕೆಲಸ ಆರಂಭವಾಗಿದೆ.

ಮಹಾಸುಳ್ಳು 10 : ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡಲಾಗಿಲ್ಲ. ವ್ಯಾಪಕ ಪ್ರತಿಭಟನೆ ನಡೆದಿರುವದೆಹಲಿ, ಯುಪಿ ಮತ್ತುಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೋಲಿಸರು ಗೋಲಿಬಾರು ಮಾಡಿಲ್ಲ.

ಸತ್ಯ ಸಂಗತಿ :ಬಹುಪಾಲು ಭಾರೀ ಪ್ರತಿಭಟನಾ ಪ್ರದರ್ಶನಗಳು ಶಾಂತಿಯುತವಾಗಿ ನಡೆದಿವೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಾತ್ರ ಪೋಲಿಸರದಮನ ಕ್ರಮಗಳಿಂದ ಕೆಲವು ಹಿಂಸಾಕೃತ್ಯಗಳು ಜರುಗಿವೆ.ಜಾಮಿಯಾ ಮಿಲಿಯ, ಅಲಿಘರ್, ದೆಹಲಿ ವಿವಿ ಗಳಲ್ಲಿ ಪೋಲಿಸರ ದೌರ್ಜನ್ಯಗಳು ಮುಗಿಲು ಮುಟ್ಟಿವೆ. ಯು.ಪಿ. ಒಂದೇ 21 ಜನ ಗೋಲಿಬಾರಿನಲ್ಲಿ ಸತ್ತಿದ್ದಾರೆ. ದಿನೇ ಈ ಸಂಖ್ಯೆ ಹೆಚ್ಚುತ್ತಿದೆ. ಆದರೆ ಪೋಲಿಸ್ ಗೋಲಿಬಾರು ಮಾಡಿರುವುದನ್ನೇ ನಿರಾಕರಿಸಿದ್ದಾರೆ.

ಪೋಲಿಸರು ಪ್ರತಿಭನಾಕಾರರು ಮತ್ತು ಮಾಯಕ ನಾಗರಿಕರ ಮೇಲೆ ಗೋಲಿಬಾರು ಮಾಡಿರುವುದು, ಬೇಕಾಬಿಟ್ಟಿ ದೌರ್ಜನ್ಯಗಳನ್ನು ಎಸಗಿರುವುದು, ತಾವೇ ವಿಧ್ವಂಸಕ ಕೃತ್ಯಗಳಲಿ ತೊಡಗಿರುವುದು – ದಿನೇ ಈ ಬಗ್ಗೆ ವಿಡಿಯೋ ಪುರಾವೆಗಳು ಹೊರ ಬರುತ್ತಿವೆ. ಆಸ್ಸಾಂನಲ್ಲಿ 5, ಕರ್ನಾಟಕದಲ್ಲಿ ಇಬ್ಬರು ಗೋಲಿಬಾರಿನಲ್ಲಿ ಸತ್ತಿದ್ದಾರೆ. ಯುಪಿ, ಕರ್ನಾಟಕ ಮುಂತಾದ ರಾಜ್ಯಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ಕಲಮು 144 ಹೇರುವ ಮೂಲಕ ನಿಷೇಧಿಸಿದ್ದು ಮತ್ತು ಪ್ರತಿಭಟನಾಕಾರರನ್ನು ಉದ್ರೇಕಿಸಿದ್ದು ಈಗ ನಡೆದಿರುವ ಸೀಮಿತ ಹಿಂಸಾಚಾರಕ್ಕೆಕಾರಣ.

ಕೃಪೆ : ಜನಶಕ್ತಿ ಮೀಡಿಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

Published

on

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.

1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)

ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್‌ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.

2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ

ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.

3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)

ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.

4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ

ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.

5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)

ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.

6. ಸಮನ್ವಯದ ದಾರಿ….

ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು

Published

on

~ಗೋವರ್ಧನ ನವಿಲೇಹಾಳು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್‌ಗೆ ಸಂತೋಷದ ಸುದ್ದಿಯಾದರೂ, ಎಸ್‌ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.

ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್‌ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್‌ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.

ಸಮರ್ಥ್ ಶಾಮನೂರು ಅವರ ಮುಂದಿನ ನಡೆ

ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.

ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.

ಬಿಜೆಪಿಯ ಮುಂದಿನ ಸವಾಲುಗಳು

ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.

ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್‌ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.

ಎಸ್‌ಡಿಪಿಐ ಮುಂದಿನ ಸವಾಲು

ಎಸ್‌ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್‌ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್‌ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.

ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.

ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್‌ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.

ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending