ಲೈಫ್ ಸ್ಟೈಲ್
ಕರುಗಳಲ್ಲಿ ಜೋಲುಗಡಿಗೆ ಹೊಟ್ಟೆ : ಏನು ಕಾರಣ..?
- ಡಾ.ಎನ್.ಬಿ.ಶ್ರೀಧರ, ಶಿವಮೊಗ್ಗ
ಮಿಶ್ರ ತಳಿಯ ಗಂಡು ಕರುಗಳಿರಲಿ ಅಥವಾ ಹೆಣ್ಣು ಕರುಗಳಿರಲಿ ಹುಟ್ಟಿದಾಗ ಒಂದು ತಿಂಗಳವರೆಗೂ ಮೈಕೈ ತುಂಬಿಕೊಂಡು ದಷ್ಟ ಪುಷ್ಠ ವಾಗಿರುವ ಕರುಗಳು ನಂತರ ಕ್ರಮೇಣವಾಗಿ ಜೋಲು ಹೊಟ್ಟೆ (Pot belly) ಹೊತ್ತುಕೊಂಡು ಓಡಾಡುವ ಪರಿಸ್ಥಿತಿಯನ್ನು ತಲುಪುತ್ತವೆ. ಹಲವಾರು ಕೃಷಿಕರು ಇಂತಹ ಕರುಗಳಿಗೆ ಜಂತುನಾಶಕವನ್ನು ಮೇಲಿಂದ ಮೇಲೆ ನೀಡುವುದರಿಂದ ಗುಣಮುಖವಾಗುತ್ತವೆ ಎಂದು ಭಾವಿಸುತ್ತಾರೆ. ಇದು ಸರಿಯೇ? ಇದಕ್ಕೆ ಏನು ಕಾರಣ ಅಂತ ತಿಳಿಯೋಣ.
ಇಂದಿನ ಮಗುವೇ ನಾಳಿನ ನಾಗರೀಕ ಎನ್ನುವುದು ಗಾದೆ. ಇದನ್ನು ಜಾನುವಾರುಗಳಿಗೆ ಅನ್ವಯಿಸಿದರೆ ‘ಇಂದಿನ ಕರುವೇ ನಾಳಿನ ಹಸು’ ಎನ್ನಬಹುದು. ಸಾಮಾನ್ಯವಾಗಿ ಕರುಗಳಿಗೆ ಆಕಳಿನ ಹಾಲೇ ಸರ್ವಶ್ರೇಷ್ಠವಾದ ಅಹಾರ. ಹುಟ್ಟಿದ ದಿನದಿಂದಲೂ ಕನೀಷ್ಟ 3-4 ತಿಂಗಳುಗಳವರೆಗೆ ಕರುಗಳಿಗೆ ಅದರ ಶರೀರದ ತೂಕದ ಶೇ 10 ರಷ್ಟು ಹಾಲನ್ನು ನೀಡಬೇಕು. ಒಂದು ಮಿಶ್ರ ತಳಿಯ ಕರು ಹುಟ್ಟುವಾಗ ಸುಮಾರು 40 ಕೆಜಿ ತೂಕವನ್ನು ಹೊಂದಿದ್ದು ಅದಕ್ಕೆ 4 ಲೀಟರ್ನಷ್ಟು ಹಾಲನ್ನು ನೀಡಬೇಕು. ಪ್ರತಿ ದಿನ ಕರು ಸುಮಾರು 100-500 ಗ್ರಾಂನಷ್ಟು ತೂಕದಲ್ಲಿ ವರ್ಧನೆಯನ್ನು ಹೊಂದುತ್ತದೆ.
ಇದಕ್ಕೆ ತಕ್ಕಂತೆ ಹಾಲಿನ ಪ್ರಮಾಣವನ್ನು ಸಹ ಹೆಚ್ಚಿಸುವುದು ಸಹ ಬಹಳ ಮುಖ್ಯ. ಆದರೆ ಹಲವಾರು ಬಾರಿ ಹೆಚ್ಚಿನ ಹೈನುಗಾರರು ಕರುವಿಗೆ ನೀಡುವುದನ್ನು ಕಡಿಮೆ ಮಾಡಿ ಬಿಡುತ್ತಾರೆ. ಇಷ್ಟು ಹಾಲನ್ನು ನೀಡಿದರೆ ಕರುವಿಗೆ ಅಜೀರ್ಣವಾಗಿ ಬೇಧಿಯುಂಟಾಗುತ್ತದೆ ಎಂದು ಹೆದರುತ್ತಾರೆ. ಆದರೆ ಈ ರೀತಿಯ ಬೇದಿಯಾಗುವುದು ಕರುವಿಗೆ ವಿವಿಧ ಕಾರಣಗಳಿಂದ ಅಜೀರ್ಣವಾದಾಗ ಮತ್ತು ಸೂಕ್ಷ್ಮಾಣು ಜೀವಿಗಳಿಂದ ಮಲೀನವಾದ ಹಾಲನ್ನು ಕೊಟ್ಟಾಗ ಅದಕ್ಕೆ ಬಿಳಿ ಬೇದಿಯಾಗಬಹುದು.
ಅಲ್ಲದೇ ಹಾಲು ಉತ್ಪಾದಕರ ಸಂಘಕ್ಕೆ ಹಾಲನ್ನು ಮಾರಿ ಹೆಚ್ಚಿನ ಲಾಭ ಪಡೆಯುವ ಆಸೆಯೂ ಸಹ ಒಂದು ಕಾರಣ. ಆದರೆ ಇದು ತಾತ್ಕಾಲಿಕ ಲಾಭ ಮಾತ್ರ. ದೂರಗಾಮಿ ದೃಷ್ಠಿಯಲ್ಲಿ ನೋಡಿದಾಗ ಕರುವಿಗೆ ಅದರ ತಾಯಿಯ ಹಾಲನ್ನು ನಿಗದಿತ ಪ್ರಮಾಣದಲ್ಲಿ ನಿಗದಿತ ದಿನಗಳವರೆಗೆ ನೀಡಿದರೆ ಮಾತ್ರ ಉತ್ತಮ ಪಡ್ಡೆಯನ್ನು ಪಡೆಯಲು ಸಾಧ್ಯ.
ಕರುಗಳಿಗೆ ಜೋಲು ಹೊಟ್ಟೆ ಬರಲು ಮುಖ್ಯವಾದ ಕಾರಣ ಅದಕ್ಕೆ ಬೆಳವಣಿಗೆಯ ಹಂತದಲ್ಲಿ ಹಾಲನ್ನು ಮತ್ತು ಪೌಷ್ಠಿಕ ಅಹಾರವನ್ಮ್ನ ಸೂಕ್ತ ಪ್ರಮಾಣದಲ್ಲಿ ನೀಡದಿರುವುದು ಮುಖ್ಯ ಕಾರಣ.. ಮತ್ತೊಂದು ಕಾರಣವೆಂದರೆ ಎಳೆ ಕರುಗಳಿಗೆ ಜಾನುವಾರುಗಳಿಗೆ ನೀಡುವ ಕಡಿಮೆ ಪೌಷ್ಟಿಕಾಂಶಗಳನ್ನು ಹೊಂದಿದ ಪಶು ಅಹಾರವನ್ನು ನೀಡುವುದು. ಬಹಳಷ್ಟು ಕರುಗಳು ತುಂಬಾ ಆಸ್ಥೆಯಿಂದ ಅದರ ತಾಯಿಗೆ ನೀಡಿದ ಅಹಾರವನ್ನು ತಿನ್ನುತ್ತವೆ.
ಇದನ್ನು ಗಮನಿಸಿದ ರೈತರು ಅದಕ್ಕೆ ಹಾಲನ್ನು ಕಡಿಮೆ ಮಾಡಿ ಪಶು ಅಹಾರವನ್ನು ನೀಡಲು ಪ್ರಾರಂಭಿಸುತ್ತಾರೆ. ಇದೇ ಸಮಯದಲ್ಲಿ ಕರು ಹುಲ್ಲನ್ನು ತಿನ್ನಲು ಪ್ರಾರಂಭಿಸುತ್ತದೆ. ಈ ಅಹಾರವನ್ನು ಪಚನ ಮಾಡಲು ಅನುವಾಗುವಂತೆ ಕರುವಿನ ಹೊಟ್ಟೆ, ಕರುಳು ಮತ್ತು ಜೀರ್ಣಾಂಗದ ವಿವಿಧ ಭಾಗಗಳು ಜಾಸ್ತಿ ಬೆಳವಣಿಗೆ ಹೊಂದುತ್ತವೆ. ಆದರೆ ಹಾಲಿನಿಂದ ಲಭ್ಯವಾಗುವ ಕ್ಯಾಲ್ಸಿಯಂ ಮತ್ತು ರಂಜಕ ಸೂಕ್ತ ಪ್ರಮಾಣದಲ್ಲಿ ಲಭ್ಯವಾಗದೇ ಅಸ್ಥಿವ್ಯೂಹದ ಸರಿಯಾದ ಬೆಳವಣಿಗೆಯಾಗುವುದಿಲ್ಲ.
ಎಲುಬುಗಳು ಅದರಲ್ಲೂ ಹಿಂಬಾಗದ ಎಲುಬುಗಳು ಉತ್ತಮ ಬೆಳವಣಿಗೆ ಹೊಂದದೇ ಇರುವುದರಿಂದ ಕರುವನ್ನು ಹಿಂಬಾಗದಿಂದ ಗಮನಿಸಿದಾಗ ಜೋಲು ಹೊಟ್ಟೆ ಎದ್ದು ಕಾಣುತ್ತದೆ. ಇದನ್ನು ಹಳ್ಳಿಯ ಭಾಷೆಯಲ್ಲಿ ‘ಹೊಟ್ಟೆ ಡುಮ್ಮಣ್ಣ ; ಕೈಕಾಲು ಸಣ್ಣಣ್ಣ’ ಎಂದು ಕರೆಯುತ್ತಾರೆ. ಕರುಗಳಿಗೆ ಈ ಕೆಳಗಿನ ಕೋಷ್ಠಕದಲ್ಲಿ ವಿವರಿಸಿದಂತೆ ಹಾಲು ಮತ್ತು ಅಹಾರವನ್ನು ನೀಡಬೇಕು.
ಕೋಷ್ಠಕ 1 : ಕರುಗಳಿಗೆ ನೀಡಬಹುದಾದ ಹಾಲು, ಹಿಂಡಿ ಮತ್ತು ಹುಲ್ಲಿನ ಪ್ರಮಾಣ.ವಯಸ್ಸು ನೀಡಬೇಕಾದ ಹಾಲಿನ ಪ್ರಮಾಣ ನೀಡಬೇಕಾದ ಹಿಂಡಿಯ ಪ್ರಮಾಣ ಹುಲ್ಲಿನ ಪ್ರಮಾಣ.
- 1-14 ದಿನ ಗಿಣ್ಣದ ಹಾಲು ದೇಹ ತೂಕದ ಶೇ 10 ರಷ್ಟು ದಿನಕ್ಕೆ ಮೂರು ಸಲ
- 15-21 ದಿನ ಹಾಲು ದೇಹ ತೂಕದ ಶೇ 10 ರಷ್ಟು ದಿನಕ್ಕೆ ಎರಡು ಸಲ ಒಂದುಮುಷ್ಠಿ-ಒಂದು ಮುಷ್ಠಿ
- 22-60 ದಿನ ಹಾಲು ದೇಹ ತೂಕದ ಶೇ 5 ರಷ್ಟು ದಿನಕ್ಕೆ ಎರಡು ಸಲ 100-250 ಗ್ರಾ0 ಹೊಟ್ಟೆ
ತುಂಬುವಷ್ಠು - 2- 3 ತಿಂಗಳು ಕ್ರಮೇಣ ಕಡಿಮೆ ಮಾಡಿ ನಿಲ್ಲಿಸುವುದು 500 ಗ್ರಾ0 ಹೊಟ್ಟೆ ತುಂಬುವಷ್ಠು
- 3-6 ತಿ0ಗಳು —– 750-950 ಗ್ರಾ0 ಹೊಟ್ಟೆ ತುಂಬುವಷ್ಠು
- 6-12 ತಿ0ಗಳು —– 1-2.5 ಕಿಲೋ ಹೊಟ್ಟೆ ತುಂಬುವಷ್ಠು
ಮೇಲ್ಕಾಣಿಸಿದಂತೆ ಅಹಾರ ಮತ್ತು ಹಾಲನ್ನು ನೀಡಿದಲ್ಲಿ ಕರುಗಳು ಉತ್ತಮ ಬೆಳವಣಿಗೆಯನ್ನು ಹೊಂದಿ 1 ವರ್ಷ ಅವಧಿಯಲ್ಲಿ ಸುಮಾರು ಅವಧಿಯಲ್ಲಿ 180 ಕಿಲೊ ತೂಕವನ್ನು ಹೊಂದಿ ಒಂದುವರೆ ವರ್ಷದಲ್ಲಿ 250 ಕಿಲೋ ತೂಕವನ್ನು ತಲುಪಿದರೆ ನಿಗದಿತ ಅವಧಿಯಲ್ಲಿ ಬೆದೆಗೆ ಬಂದು ವರ್ಷಕ್ಕೊಂದು ಕರುವನ್ನು ನೀಡುತ್ತವೆ.
ಇದನ್ನೂ ಓದಿ : ರಿಹನ್ನಾ-ಗ್ರೇಟಾ-ಮೀನಾ ಗ್ರೇಟಾ ಮೋದಿ ಗ್ರೇಟಾ..?
ಇಲ್ಲದಿದ್ದಲ್ಲಿ ಕರುಗಳು ಒರಟಾದ ಮತ್ತು ಒಣಕಲು ಚರ್ಮವನ್ನು ಹೊಂದಿದ್ದು ಉದ್ದನೇ ಕೂದಲನ್ನು ಹೊಂದಿರುತ್ತವೆ. ಕಣ್ಣುಗಳು ನಿಸ್ತೇಜವಾಗಿದ್ದು, ರಕ್ತಹೀನತೆಯನ್ನು ಹೊಂದಿರುತ್ತವೆ. ತಿಂದ ಅಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಇಂತಹ ಕರುಗಳು ನಿಗದಿತ ಪ್ರಮಾಣದಲ್ಲಿ ಬೆಳವಣಿಗೆ ಹೊಂದಿ ಸೂಕ್ತ ಸಮಯದಲ್ಲಿ ಬೆದೆಗೆ ಬರುವುದಿಲ್ಲ. ಬೆದೆಗೆ ಬಂದರೂ ಸಹ ಗರ್ಭ ಕೋಶ ಸೂಕ್ತ ರೀತಿಯಲ್ಲಿ ಬೆಳವಣಿಗೆಯಾಗದೇ ಇರುವುದರಿಂದ ಫಲ ಕಟ್ಟುವುದಿಲ್ಲ.
ಇಂತಹ ಕರುಗಳಿಗೆ ಜಂತು ನಾಶಕ ಹಾಕುವುದರಿಂದ ಏನೂ ಪ್ರಯೋಜನವಾಗುವುದಿಲ್ಲ. ಬದಲಾಗಿ ಉತ್ತಮ ಪೌಷ್ಠಿಕಾಂಶವನ್ನು ಹೊಂದಿದ ಕರುಗಳಿಗೆಂದೇ ಲಭ್ಯವಿರುವ ಕನೀಷ್ಠ ಶೇ 22 ಪ್ರಮಾಣದಲ್ಲಿ ಸುಲಭವಾಗಿ ಜೀರ್ಣ ಹೊಂದುವ ಪ್ರೊಟೀನ್ಯುಕ್ತ ಅಹಾರವನ್ನು ದೇಹ ತೂಕಕ್ಕೆ ತಕ್ಕಂತೆ ತಜ್ಞ ಪಶು ವೈದ್ಯರ ಸಲಹೆಯಂತೆ ಬಳಸಬೇಕು.
ಉತ್ತಮ ಖನಿಜ ಮಿಶ್ರಣವನ್ನು ಸೂಕ್ತ ಪ್ರಮಾಣದಲ್ಲಿ ನೀಡಬೇಕು. ಇವೆಲ್ಲವುಗಳ ‘ಇಂದಿನ ಕರುವೇ ನಾಳಿನ ಹಸು’ ಎಂಬ ನಾಣ್ಣುಡಿಯನ್ನು ಜ್ಞಾಪಿಸಿಕೊಂಡು ಕರುವನ್ನು ಉತ್ತಮವಾಗಿ ಸಾಕಿ ಈ ಎಲ್ಲ ತೊಂದರೆಗಳನ್ನು ತಪ್ಪಿಸಿಕೊಳ್ಳುವುದು ಉತ್ತಮ.
ಇದರ ಕುರಿತು ಡಾ.ಎನ್.ಬಿ.ಶ್ರೀಧರ ಅವರ ಯು ಟ್ಯೂಬ್ ವಿಡಿಯೋ ವೀಕ್ಷಿಸಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ



