ದಿನದ ಸುದ್ದಿ
ಆತ್ಮಕತೆ | ಹಾಸ್ಟೆಲ್ನಲ್ಲಿ ಜಾತಿ ಜಗಳ
- ರುದ್ರಪ್ಪ ಹನಗವಾಡಿ
ನಾನು ಮೈಸೂರಿಗೆ ಬಂದು ಮಹಾರಾಜ ಕಾಲೇಜ್ ಹಾಸ್ಟೆಲ್ ಸೇರಿಕೊಂಡಾಗ ತಡವಾಗಿ ಸೇರಿಕೊಂಡವರಿಗೆ ಎರಡು ಮೂರು ಜನರಿರುವ ರೂಂಗಳನ್ನು ಅಲಾಟ್ ಮಾಡುತ್ತಿದ್ದರು. ನಮಗೆ ರೂಂ ನಂ. ಎ4 ಎಂಬಲ್ಲಿ ನಾಲ್ಕು ಜನರಿಗೆ ನಾನು ಮತ್ತು ಎಲ್. ರವೀಂದ್ರ, ಎರಡನೇ ಬಿ.ಎ.ಯವರಾಗಿದ್ದವರು.
ವೈ. ಮಹೇಶ ಮೊದಲ ಬಿ.ಎ. ಮತ್ತು ಪಿಯುಸಿಗೆ ಸೇರಿದ್ದ ಮುರಳೀಧರ ಇದ್ದೆವು. ರವೀಂದ್ರ ಸದಾ ಹಿಂದಿ ಹಾಡಿನ ಭಕ್ತನಾಗಿದ್ದು ರಾಜೇಶ್ ಖನ್ನಾನ ಹೇರ್ ಸ್ಟೈಲ್ನಲ್ಲಿ ಟಾಕುಟೀಕಾಗಿ ತರಗತಿಗೆ ಬರುತ್ತಿದ್ದ. ಮುರಳಿ ಹತ್ತಿರದ ಇಲವಾಲ ಊರಿನವನಾಗಿದ್ದರಿಂದ ದಿನವೂ ಅವರ ಊರಿನಿಂದ ಪರಿಚಯಸ್ಥರು ಬಂದು ಸಂಜೆ ವೇಳೆಯಲ್ಲಿ ಹೊರಗೆ ಹೋಗುತ್ತಿದ್ದ. ನಾನು ಮತ್ತು ಮಹೇಶ ಇಬ್ಬರೇ ಒಬ್ಬರಿಗೊಬ್ಬರು ಹತ್ತಿರವಾಗಿದ್ದೆವು. ಸಭೆ ಸಮಾರಂಭಗಳಿಗೆ ಮತ್ತು ಸಮಾಜವಾದಿ ಯುವ ಜನ ಸಭಾ ಕೆಲಸಗಳಿಗೆ ಜೊತೆಯಲ್ಲಿಯೇ ಹೋಗುತ್ತಿದ್ದೆವು.
ಮಹಾರಾಜ ಕಾಲೇಜ್ ಹಾಸ್ಟೆಲ್ವೊಂದು ಸಾರ್ವಜನಿಕ ಹಾಸ್ಟೆಲ್ ಆಗಿದ್ದು ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಅವಕಾಶವಿತ್ತಾದರೂ, ಸ್ಥಳೀಯ ಒಕ್ಕಲಿಗ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಇರುತ್ತಿತ್ತು. ಪರಿಶಿಷ್ಟ ಜಾತಿ / ಪಂಗಡಗಳಿಗೆ ಸಾಕಷ್ಟು ವಿದ್ಯಾರ್ಥಿಗಳಿದ್ದರೂ ಯಾರೂ ತಮ್ಮ ಜಾತಿ ಗುಂಪುಗಳಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ನಾನು ವಿಶೇಷವಾಗಿ 300 ಕಿ.ಮೀ. ದೂರದಿಂದ ಬಂದವನಾಗಿ ನನಗೆ ಪರಿಚಿತರು, ಜಾತಿಗರು ಯಾರೂ ಗೊತ್ತಿರಲಿಲ್ಲ.
ನನ್ನ ರೂಮ್ಮೇಟ್ಗಳಲ್ಲಿ ಮಹೇಶ ಮತ್ತು ಮುರಳಿ ಒಕ್ಕಲಿಗರಾಗಿದ್ದರು. ರವೀಂದ್ರ ಕೂಡ ಪರಿಶಿಷ್ಟ ಜಾತಿಯವನಾಗಿದ್ದರೂ ಅವರ ತಂದೆ ಆಗಿನ ಕಾಲದ ಅರಣ್ಯ ಇಲಾಖೆಯಲ್ಲಿ ಆರ್.ಎಫ್.ಓ. ಆಗಿದ್ದರಿಂದ ಅವನ ಸಾಮಾಜಿಕ ಹಿನ್ನೆಲೆ ಗೊತ್ತಾಗುತ್ತಿರಲಿಲ್ಲ. ನಾನು ದಾವಣಗೆರೆ ಕಡೆಯವ ಮತ್ತು ಹೆಸರು ರುದ್ರಪ್ಪ ಎಂಬೀ ಕಾರಣದಿಂದ ಯಾರೋ ಲಿಂಗಾಯತರವನಿರಬೇಕೆಂದು ನನ್ನ ಬಗ್ಗೆ ಏನೂ ತಿಳಿಯದವರು ಭಾವಿಸಿದ್ದರು.
ಮಹಾರಾಜಾ ಕಾಲೇಜ್ ಹಾಸ್ಟೆಲ್ನಲ್ಲಿನ ಊಟ ಬಹಳ ಅದ್ದೂರಿಯಾಗಿಯೇ ಇರುತ್ತಿತ್ತು. ಬೆಳಿಗ್ಗೆ ಕಾಫಿ, ಟೀ ನಂತರ 9 ರಿಂದ 11 ಗಂಟೆಯವರೆಗೆ ಊಟ, ಮಧ್ಯಾಹ್ನ 1 ರಿಂದ 2ಕ್ಕೆ ತಿಂಡಿ, ರಾತ್ರಿಗೆ 8 ರಿಂದ ಊಟವಿರುತ್ತಿತ್ತು. ಮಾಂಸಹಾರಕ್ಕೆ ಪ್ರತ್ಯೇಕವಾದ ಮೆಸ್ ಇದ್ದು, ಅಲ್ಲಿ ವಾರದಲ್ಲಿ 5 ದಿನಗಳು ಮಾಂಸಾಹಾರ ಇರುತ್ತಿತ್ತು. ಸಸ್ಯಾಹಾರಿ ಮೆಸ್ನಲ್ಲಿ ಮಜ್ಜಿಗೆ ಹುಳಿ, ತೊವೆ, ತುಪ್ಪ, ಮೊಸರು, ಬಾಳೆಹಣ್ಣುಗಳಿರುತ್ತಿದ್ದವು. ವಾರದ ಮತ್ತು ತಿಂಗಳ ಕೊನೆಯಲ್ಲಿ ವಿಶೇಷವಾದ ಊಟಗಳು ಇರುತ್ತಿದ್ದವು. ಅದಕ್ಕಾಗಿ ಹೊರಗಿನ ಸ್ನೇಹಿತರನ್ನು ಆಹ್ವಾನಿಸಬಹುದಿತ್ತು.
ಇಂತಹ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿಗಳು ಮೈಸೂರಿನ ಅಶೋಕಪುರಂ ಗೆಳೆಯರನ್ನು ಆಹ್ವಾನಿಸಿದ್ದರು. ಒಕ್ಕಲಿಗ ವಿದ್ಯಾರ್ಥಿಗಳೂ ಕೂಡ ಕೆ.ಜಿ. ಕೊಪ್ಪಲ ವಿದ್ಯಾರ್ಥಿಸ್ನೇಹಿತರನ್ನು ಆಹ್ವಾನಿಸಿದ್ದರು. ಊಟದ ಹಾಲ್ನಲ್ಲಿ ಮೊದಲ ಬ್ಯಾಚ್ನಲ್ಲಿಯೇ ಊಟ ಮಾಡುವ ಧಾವಂತದಲ್ಲಿ ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗ ವಿದ್ಯಾರ್ಥಿಗಳಲ್ಲಿ ಊಟಕ್ಕೆ ಕೂರುವ ಸೀಟಿನ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿತ್ತು. ಊಟದ ಸೀಟಿಗಾಗಿ ಆದ ಗಲಾಟೆ ಅಲ್ಲಿಗೆ ಮುಗಿಯದೆ ಹೊರಗಿನ ರೌಡಿಗಳನ್ನು ಕರೆತಂದು ಎಸ್.ಸಿ. ವಿದ್ಯಾರ್ಥಿಗಳಲ್ಲಿ ಒಬ್ಬೊಬ್ಬರನ್ನೂ ಗುರುತಿಸುತ್ತಾ ಥಳಿಸಿದರು.
ಎಸ್.ಸಿ. ಹುಡುಗರನ್ನು ಕಂಡರೆ ಜಾತಿವಾದಿ ಕೆಲವು ಒಕ್ಕಲಿಗ ವಿದ್ಯಾರ್ಥಿಗಳು ತಾವು ಪ್ರತಿ ತಿಂಗಳೂ ಹಣ ಪಾವತಿಸುತ್ತಿದ್ದು, ಎಸ್.ಸಿ. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಂದ ಹಣದಲ್ಲಿ ಬಿಟ್ಟಿ ಕೂಳು ತಿಂದು ಕೊಬ್ಬಿದ್ದಾರೆ ಎನ್ನುವ ಧೋರಣೆ ಅವರಲ್ಲಿತ್ತು. ಬಳೆ ಶ್ರೀನಿವಾಸ, ನಂಜಪ್ಪ ಮತ್ತು ಗೋವಿಂದ ಎಂಬ ಮೂವರು ಕಾಲೇಜಿನ ವಿದ್ಯಾರ್ಥಿಗಳಾಗಿದ್ದರೂ, ರೌಡಿಗಳಂತೆ ವರ್ತಿಸುತ್ತಿದ್ದರು. ಮೈಸೂರು ಜಿಲ್ಲೆಯ ಹತ್ತಿರದ ಹಳ್ಳಿಗರಾಗಿದ್ದರಿಂದ ಸದಾ ವಿದ್ಯಾರ್ಥಿಗಳಲ್ಲದವರ ಜೊತೆ ಹಾಸ್ಟೆಲ್ ಒಳಗೆ ಇದ್ದ ಸೋಮಾರಿ ಕಟ್ಟೆಯಲ್ಲಿ ಕೂತು ಹರಟುತ್ತಿದ್ದರು.
ಈ ರೀತಿ ಕರೆತಂದ ರೌಡಿಗಳಲ್ಲಿ ಒಬ್ಬ ನನ್ನನ್ನು ಹೊಡೆಯಲು ಬಂದು ಇನ್ನೇನು ಏಟು ಕೊಡುವುದರಲ್ಲಿದ್ದ. ಅಷ್ಟರಲ್ಲೇ ಅಲ್ಲಿದ್ದ ಗೋವಿಂದ `ಲೇ ಅವನು ಎಸ್.ಸಿ. ಅಲ್ಲ, ಲಿಂಗಾಯತ ಬಿಡ್ರೊ’ ಎಂದು ಕೂಗಿದ. ಹಾಗಾಗಿ ನಾನು ಏಟು ಬೀಳುವುದನ್ನು ತಪ್ಪಿಸಿಕೊಂಡು ರೂಮ್ಗೆ ಹೋಗಿ ಬಚಾವಾಗಿದ್ದೆ. ನಂತರದ ದಿನಗಳಲ್ಲಿ ನನ್ನ ಜಾತಿ ಅವನಿಗೆ ತಿಳಿದು ತನ್ನ ಅಂದಿನ ದಿನದ ತಪ್ಪಿನ ಅರಿವಾಗಿತ್ತು.
ಇದೆಲ್ಲ ಆಗಿ ಕೆಲವು ದಿನಗಳಲ್ಲಿ ಮಳವಳ್ಳಿ ತಾಲ್ಲೂಕಿನ ದಲಿತರಾಗಿದ್ದ ರಾಜಕಾರಣಿ ಮಾಜಿ ಮಂತ್ರಿ ಮಲ್ಲಿಕಾರ್ಜುನ ಸ್ವಾಮಿ ಆಗ ಸಿಂಡಿಕೇಟ್ ಸದಸ್ಯರಾಗಿದ್ದು, ಕಾಲೇಜ್ ಹಾಸ್ಟೆಲ್ನಲ್ಲಿದ್ದ ವಿಶೇಷವಾಗಿ ಏಟು ತಿಂದಿದ್ದ ಹುಡುಗರನ್ನು ನೋಡಲು ವಾರ್ಡನ್ ಶಿವಲಿಂಗಯ್ಯನವರ ಜೊತೆ ಬಂದಿದ್ದರು. ಆಗ ನನ್ನನ್ನು ಸಹ ಕರೆಸಿ ವಿಚಾರಿಸಿ ಚೆನ್ನಾಗಿ ಓದುವ ಬಗ್ಗೆ ಬುದ್ಧಿ ಮಾತು ಹೇಳಿದ್ದರು. ಆದರೆ ನಮ್ಮ ರೂಮ್ನಲ್ಲಿ ಮಹೇಶನಾಗಲೀ ಮುರಳಿಯಾಗಲೀ ಜಾತಿಕೂಪದ ಜಗಳಗಳಿಂದ ದೂರ ಇದ್ದರು. ಮತ್ತೆ ನಾನು ಎಂ.ಎ.ನಲ್ಲಿ ಗಂಗೋತ್ರಿಯ ಪಿ.ಜಿ. ಹಾಸ್ಟೆಲ್ ಸೇರಿದಾಗ ಅಲ್ಲಿಯೂ ಒಕ್ಕಲಿಗ ವಿದ್ಯಾರ್ಥಿಗಳಲ್ಲಿನ ಕೆಲವರು ದಲಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಬ್ರಾಹ್ಮಣರೆಂದು ಹಂಗಿಸುತ್ತಿದ್ದರು.
ನಾನೊಮ್ಮೆ ಬೀರು ಬಾಟಲಿಯಲ್ಲಿ ಕುಡಿಯಲು ನೀರು ತುಂಬಿಕೊಳ್ಳಲು ಹೋಗುವಾಗ `ಇವರಿಗೆ ಬಿಟ್ಟಿ ಊಟದ ಜೊತೆ ಸರ್ಕಾರ ಬೀರು ಕೂಡ ಕೊಡುತ್ತದೆ ನೋಡ್ರೋ ಎಂದು ವ್ಯಂಗ್ಯವಾಗಿ ಮಾತಾಡುತ್ತಿದ್ದನ್ನು ನಾನು ಮಹದೇವನಿಗೆ ಹೇಳಿದ್ದೆ. ಅವನು ಮುಂದೊAದು ದಿನ ಪೂರ್ಣಚಂದ್ರ ತೇಜಸ್ವಿ ಅವರಿಗೆ ತಿಳಿಸಿದ ಕಾರಣ ಅವರು ಹಾಸ್ಟೆಲ್ನಲ್ಲಿದ್ದ ಕೆಲವು ಒಕ್ಕಲಿಗ ಹುಡುಗರನ್ನು ಕರೆಸಿ ಚೆನ್ನಾಗಿ ಬೈದು ಕಳಿಸಿದ್ದರಂತೆ. ಆ ನಂತರದ ದಿನಗಳಲ್ಲಿ ಅವರೆಲ್ಲ ನಮ್ಮನ್ನು ಕಂಡರೆ ಕೃತಕ ಗೌರವ ತೋರುತ್ತಿದ್ದರು. ನಂತರ ಎಂ.ಎ. ಮುಗಿಯುವವರೆಗೆ ಮತ್ತಾವ ಜಾತಿ ಜಗಳದ ಸೋಂಕು ಹಾಸ್ಟೆಲ್ನಲ್ಲಿ ಮರುಕಳಿಸಲಿಲ್ಲ.
ಮೈಸೂರಿನಲ್ಲಿ ಓದಲು ಮಹಾರಾಜಾ ಕಾಲೇಜು ನಂತರ ಗಂಗೋತ್ರಿಯಲ್ಲಿ ಎಂ.ಎ. ಮಾಡಲು ಸಿಕ್ಕ ಅವಕಾಶದ ಜೊತೆಗೆ ಸಿಕ್ಕ ಹಾಸ್ಟೆಲ್ ಸೌಲಭ್ಯಗಳು, ಜೊತೆಗೆ ಅನೇಕ ಹಿನ್ನೆಲೆಯ ಸ್ನೇಹಿತರ ಬಳಗ ದೊರಕಲು ಅವಕಾಶವಾಯಿತು. ಶೈಕ್ಷಣಿಕ ಶಿಕ್ಷಣದ ಜೊತೆಗೆ ಹಲವು ಹಿನ್ನೆಲೆಯ ವಿದ್ಯಾರ್ಥಿಗಳ ಪರಿಚಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಬಹುದೊಡ್ಡ ಬುನಾದಿಯಾಯಿತು. ಅದಕ್ಕೆಲ್ಲ ಕಾರಣರಾದವರನ್ನು ಸದಾ ನೆನೆಯದಿರಲಾರೆ.
ಮುಂದುವರಿಯುವುದು…
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ ಚಿಕಿತ್ಸೆಗಳು ನೋವು ಕಡಿಮೆ ಮಾಡುವುದರ ಜೊತೆಗೆ, ರೋಗಿಗಳು ಮತ್ತೆ ಸ್ವತಂತ್ರವಾಗಿ ನಡೆಯಲು, ದಿನನಿತ್ಯದ ಚಟುವಟಿಕೆಗಳಿಗೆ ಮರಳಲು ಮತ್ತು ಆತ್ಮವಿಶ್ವಾಸದಿಂದ ಬದುಕಲು ನೆರವಾಗುತ್ತಿವೆ ಎಂದು ಮಣಿಪಾಲ್ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಲೋಕೇಶ್ ಎ. ವೀರಪ್ಪ ತಿಳಿಸಿದರು.
ಬುಧವಾರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು
‘ಆರೋಗ್ಯಕರ ವಯೋವೃದ್ಧತೆ: ಅಸ್ತಿ ಸಮಸ್ಯೆಗಳ ನಿರ್ವಹಣೆ ಮತ್ತು ಪರಿಣಾಮಕಾರಿ ಚಿಕಿತ್ಸಾ ವಿಧಾನಗಳು ಕುರಿತು ಮೂಳೆ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು.
ಇಂದಿನ ದಿನಗಳಲ್ಲಿ ಮೊಣಕಾಲು, ಸೊಂಟ ಮತ್ತು ಭುಜ ಸಂಧಿ ಸಮಸ್ಯೆಗಳು, ವಿಶೇಷವಾಗಿ ವಯೋವೃದ್ಧರಲ್ಲಿ ಹೆಚ್ಚುತ್ತಿವೆ. ‘ಇಂದು ಜನರು ಕೇವಲ ನೋವು ನಿವಾರಣೆಯನ್ನು ಮಾತ್ರ ಬಯಸುವುದಿಲ್ಲ. ಅವರು ಸುಲಭವಾಗಿ ನಡೆಯಲು, ಮೆಟ್ಟಿಲೇರಲು, ಮತ್ತೆ ಕೆಲಸಕ್ಕೆ ಹೋಗಲು, ಪ್ರವಾಸ ಮಾಡಲು ಮತ್ತು ಚುರುಕಿನ ಜೀವನವನ್ನು ಮುಂದುವರಿಸಲು ಬಯಸುತ್ತಾರೆ,” ಎಂದು ಹೇಳಿದರು.
“ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರಚಿಕಿತ್ಸೆ ಅಸ್ತಿ ಚಿಕಿತ್ಸೆಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರೋಗಿಯ ದೇಹರಚನೆಗೆ ಅನುಗುಣವಾಗಿ ಶಸ್ತ್ರಚಿಕಿತ್ಸೆಯನ್ನು ಹೆಚ್ಚು ನಿಖರವಾಗಿ ಯೋಜಿಸಲು ಈ ತಂತ್ರಜ್ಞಾನ ಸಹಕಾರಿಯಾಗಿದೆ. ಇದರಿಂದ ಇಂಪ್ಲಾಂಟ್ಗಳ ಸರಿಯಾದ ಅಳವಡಿಕೆ, ಉತ್ತಮ ಜಾಯಿಂಟ್ ಅಲೈನ್ಮೆಂಟ್ ಮತ್ತು ಸಹಜ ಚಲನೆಯ ಸಾಧ್ಯತೆ ಹೆಚ್ಚುತ್ತದೆ. ರೋಗಿಗಳಿಗೆ ಕಡಿಮೆ ರಕ್ತಸ್ರಾವ, ಕಡಿಮೆ ಶಸ್ತ್ರಚಿಕಿತ್ಸೆತರ ನೋವು, ವೇಗವಾದ ಚೇತರಿಕೆ ಹಾಗೂ ಬೇಗನೆ ಸಾಮಾನ್ಯ ಜೀವನಕ್ಕೆ ಮರಳುವ ಅವಕಾಶ ದೊರೆಯುತ್ತದೆ. ಮೊಣಕಾಲು ಮತ್ತು ಸೊಂಟದ ಸಂಪೂರ್ಣ ಅಥವಾ ಭಾಗಶಃ ಜಾಯಿಂಟ್ ಬದಲಾವಣೆ (TKR/PKR) ಶಸ್ತ್ರ ಚಿಕಿತ್ಸೆಗಳಲ್ಲಿ ಈ ತಂತ್ರಜ್ಞಾನ ಉತ್ತಮ ಫಲಿತಾಂಶ ನೀಡುತ್ತಿದೆ,” ಎಂದರು.
“ಇದರ ಜೊತೆಗೆ ಭುಜದ ಆರ್ಥೋಸ್ಕೋಪಿ ಅಥವಾ ‘ಕೀಹೋಲ್ ಸರ್ಜರಿ’ಯಂತಹ ಅತ್ಯಾಧುನಿಕ ಚಿಕಿತ್ಸೆಗಳಲ್ಲಿಯೂ ಉತ್ತಮ ಫಲಿತಾಂಶಗಳನ್ನು ಕಾಣುತ್ತಿದ್ದೇವೆ. ಭುಜದ ಡಿಪ್ಲೊಕೇಶನ್ (ಭುಜದ ಕೀಲಿನ ಸರಿತ) ರೋಟೇಟರ್ ಕಫ್ (ಹರಿದ ಭುಜದ ಮಾಂಸ ಖಂಡ) ಗಾಯಗಳು, ಫೋಜನ್ ಶೋಲ್ಡರ್ (ಭುಜದ ಬಿಗಿತ) ಮೊದಲಾದ ಸಮಸ್ಯೆಗಳು ಬಹಳ ಸಾಮಾನ್ಯವಾಗಿದ್ದು, ಸಮಯಕ್ಕೆ ಚಿಕಿತ್ಸೆ ಪಡೆಯದೇ ಇದ್ದರೆ ದೈನಂದಿನ ಚಟುವಟಿಕೆಗಳ ಮೇಲೆಯೇ ಪರಿಣಾಮ ಬೀರುತ್ತವೆ. ಈಗ ಮಿನಿಮಲ್ಲಿ ಇನ್ನೇಸಿವ್ ಸರ್ಜರಿಸ್ ಅಂದರೆ ಅತಿ ಸಣ್ಣ ಕಟ್ ಮೂಲಕ ಮಾಡುವ ಈ ಶಸ್ತ್ರಚಿಕಿತ್ಸೆಗಳು ರೋಗಿಗಳಿಗೆ ಕಡಿಮೆ ನೋವು ಹಾಗೂ ವೇಗವಾದ ಚೇತರಿಕೆಯನ್ನು ನೀಡುತ್ತಿವೆ, ಎಂದು ತಿಳಿಸಿದರು.
ಇದೇ ವೇಳೆ, ಸಂಕೀರ್ಣ ಪೆಲ್ವಿಕ್ ಟ್ರಾಮಾ ಶಸ್ತ್ರಚಿಕಿತ್ಸೆಗಳು, ‘ಕಪ್ ಅಂಡ್ ಬಾಲ್’ ಜಾಯಿಂಟ್ ಸಂಬಂಧಿತ ಪ್ರೊಸೀಜರ್ಗಳು, ಹಾಗು ಮೊಣಕಾಲು, ಅಂಕಲ್ ಮತ್ತು ಮೊಣಕೈಗೆ ಸಂಬಂಧಿಸಿದ ಮಿನಿಮಲಿ ಇನ್ನೇಸಿವ್ ಕೀಹೋಲ್ ಶಸ್ತ್ರಚಿಕಿತ್ಸೆಗಳ ಕುರಿತು ಕೂಡ ಅವರು ಮಾಹಿತಿ ಹಂಚಿಕೊಂಡರು.
ಇವುಗಳ ಪ್ರಮುಖ ಉದ್ದೇಶ ರೋಗಿಗಳ ಚಲನವಲನವನ್ನು ಪುನಃಸ್ಥಾಪಿಸಿ, ಅವರನ್ನು ಆತ್ಮವಿಶ್ವಾಸದಿಂದ ದಿನನಿತ್ಯದ ಬದುಕಿಗೆ ಮರಳಿಸುವುದಾಗಿದೆ ಎಂದು ಹೇಳಿದರು.
ಸಂವಾದದ ವೇಳೆ ವೈದ್ಯರು, ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಅನೇಕ ರೋಗಿಗಳು ಸಂಕೀರ್ಣ ಅಸ್ಥಿ ಚಿಕಿತ್ಸೆಗಳು ಹಾಗೂ ಅತ್ಯಾಧುನಿಕ ಜಾಯಿಂಟ್ ಕೇರ್ಗಾಗಿ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ನಿರಂತರವಾಗಿ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.
ಈ ದೀರ್ಘಕಾಲದ ವಿಶ್ವಾಸವನ್ನು ಗುರುತಿಸಿಕೊಂಡಿರುವ ಆಸ್ಪತ್ರೆ, ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ವಿಶೇಷ ಅಸ್ಥಿ ತಜ್ಞರ ಸೇವೆಗಳು ಮತ್ತು ಪುನಶ್ವೇತನ ಚಿಕಿತ್ಸೆಯನ್ನು ಮಧ್ಯ ಕರ್ನಾಟಕದ ಜನರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಬದ್ಧತೆಯನ್ನು ಪುನರುಚ್ಛರಿಸಿತು. “ನಮ್ಮ ಉದ್ದೇಶ ಕೇವಲ ಶಸ್ತ್ರಚಿಕಿತ್ಸೆ ನಡೆಸುವುದಲ್ಲ; ಜನರು ಮತ್ತೆ ಸ್ವತಂತ್ರವಾಗಿ ನಡೆಯಲು, ತಮ್ಮ ಜೀವನಶೈಲಿಗೆ ಮರಳಲು ಮತ್ತು ಸುಖಕರ ವಯೋವೃದ್ಧತೆಯನ್ನು ಅನುಭವಿಸಲು ಸಹಾಯ ಮಾಡುವುದಾಗಿದೆ,” ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ “ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026″ ಎಂಬ ವಿಶಿಷ್ಟ ಮತ್ತು ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ಕೊಟ್ರೇಶ್ ಅವರು ತಿಳಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಮತ್ತು ಕಾನೂನುಬದ್ದ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಕಡ್ಡಾಯ ಭೂ-ಪರಿವರ್ತನೆ, ಕಟ್ಟಡ ಮತ್ತು ಅಗ್ನಿ ಸುರಕ್ಷತಾ ನಿಯಮಗಳು, RTE ಸಂಬಂಧಿತ ವಿಷಯಗಳು, ಶಾಲಾ ಕಟ್ಟಡಗಳಿಗೆ ಆಸ್ತಿ ತೆರಿಗೆ, ESI, PF, GRATUITY, LWF ಹಾಗೂ ಕಾರ್ಮಿಕ ಕಾನೂನುಗಳನ್ನು ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ ಎಂದರು.
ಇದಲ್ಲದೆ, ರಾಜ್ಯದಲ್ಲಿ ಯಶಸ್ವಿಯಾಗಿ 10 ವರ್ಷ ಹಾಗೂ 25 ವರ್ಷ ಪೂರೈಸಿರುವ ಖಾಸಗಿ ಶಾಲೆಗಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.
ಶಿಕ್ಷಣ ಕ್ಷೇತ್ರದ ಹೊಸ ತಂತ್ರಜ್ಞಾನಗಳು, ಆಡಳಿತಾತ್ಮಕ ಪರಿಹಾರಗಳು, ಕಾನೂನು ಸಲಹೆಗಳು ಹಾಗೂ ಶಿಕ್ಷಣ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ತಿಳಿದುಕೊಳ್ಳಲು ಇದು ಅತ್ಯುತ್ತಮ ವೇದಿಕೆಯಾಗಿದ್ದು, ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಣಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ Ours ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
-
ದಿನದ ಸುದ್ದಿ3 days agoತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್
-
ದಿನದ ಸುದ್ದಿ3 days agoಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್


