ದಿನದ ಸುದ್ದಿ
ಚಂಪಾ: ‘ಒಂದಾನೊಂದು ಕಾಲಕ್ಕ’
- ರಹಮತ್ ತರೀಕೆರೆ
ನನ್ನ ಬರೆಹದ ಬದುಕಿನ ಮೊದಲ ಘಟ್ಟದಲ್ಲಿ, ಗಾಢ ಪ್ರಭಾವ ಬೀರಿದವರಲ್ಲಿ ಚಂಪಾ ವ್ಯಕ್ತಿತ್ವ, ಬರೆಹ, ಸಂಕ್ರಮಣ ಪತ್ರಿಕೆ ಮತ್ತು ಅವರಿದ್ದ ಬಂಡಾಯ ಸಾಹಿತ್ಯ ಚಳುವಳಿಗಳೂ ಸೇರಿವೆ. ನನ್ನನ್ನು ಸದಾ ಕಾಡುವ, ಅಷ್ಟೇನೂ ದಿಟ್ಟತನವಿಲ್ಲದ ನನ್ನ ವ್ಯಕ್ತಿತ್ವದ ಮಿತಿಯನ್ನೂ ಕಾಣಿಸುವ ಅವರ ಕವನಗಳಲ್ಲಿ ‘ಒಂದಾನೊಂದು ಕಾಲಕ್ಕ’ ಕೂಡ ಒಂದು.
ಕಾವ್ಯದ ಪ್ರೇರಣೆಯನ್ನು ಕವಿಗಳ ಪ್ರತಿಭೆಯಲ್ಲಿ, ಅವರಿಗೆ ಇಂಬಾಗಿ ನಿಂತ ಪರಂಪರೆಯ ಕಸುವಿನಲ್ಲಿ, ಕವಿಯ ವಿಶಿಷ್ಟಾನುಭವದಲ್ಲಿ, ಅವರ ಕೈವಶವಾಗಿರುವ ಕಸುಬುದಾರಿಕೆಯಲ್ಲಿ ಹುಡುಕುವ ಪದ್ಧತಿಯಿದೆ. ಆದರೆ ಕವಿತೆ ಹುಟ್ಟುವ ಈ ಪ್ರೇರಣಾ ಮೂಲಗಳಲ್ಲಿ ಚಾರಿತ್ರಿಕ ಒತ್ತಡವೂ ಒಂದು.
ಸಾಮಾನ್ಯವಾಗಿ ಉಸಿರುಗಟ್ಟುವ ಒತ್ತಡಗಳಲ್ಲಿ ಹುಟ್ಟುವ ಎಲ್ಲ ನಮೂನೆಯ ಬರೆಹಗಳು, ತಮ್ಮ ಸಂವೇದನೆಯ ಪ್ರಾಮಾಣಿಕತೆಯಿಂದ ಸಹಜತೆಯಿಂದ ಓದುಗರ ಎದೆಗೆ ತಾಕಿ ಸಂವಾದ ಮಾಡುವ ಸ್ಪಂದನಶೀಲತೆಯನ್ನು ಪಡೆಯುತ್ತವೆ. ಸಾಧಾರಣ ಕವಿಗಳೂ ಮೃತ್ಯುವಿನ ಅಂಚಿನಲ್ಲಿ ಕುರಿತು ಭಾವದಿಂದ ಧಗಧಗಿಸುವ ಕವಿತೆ ಬರೆದಿರುವ ಅನೇಕ ನಿದರ್ಶನಗಳಿವೆ. ಕಾಫ್ಕಾನ `ರೂಪಾಂತರ’ ಕಾಮುನ `ಪ್ಲೇಗ್’ ಸಿದ್ಧಲಿಂಗಯ್ಯನವರ `ಹೊಲೆಮಾದಿಗರ ಹಾಡು’ ಟಿಪ್ಪು ಕುರಿತ ಜನಪದರ ಲಾವಣಿಗಳು ಹುಟ್ಟಿದ್ದು ಇಂತಹ ಚಾರಿತ್ರಿಕ ಒತ್ತಡಗಳಲ್ಲೇ.
ಬ್ರಿಟಿಶರ ಆಳ್ವಿಕೆಯಲ್ಲಿದ್ದಾಗ ಬೇಂದ್ರೆಯವರ `ನರಬಲಿ’ ಕವಿತೆ ಹುಟ್ಟಿದ್ದೂ ಹೀಗೇ. `ಬಡವರು ಸತ್ತರೆ ಸುಡಲಿಕ್ಕೆ ಸೌದಿಲ್ಲೊ’ ಎಂಬ ಚೀತ್ಕಾರ ಕೇಳಿಸುವಂತಿರುವ ಜನಪದ ತ್ರಿಪದಿಯೂ ಸನ್ನಿವೇಶದ ಕೂಸೇ ಆಗಿದೆ. ದರ್ವಿಶ್ ಮುಂತಾದ ಪ್ಯಾಲಸ್ತೈನೀ ಕವಿಗಳ ಕವಿತೆಗಳಲ್ಲಿ ತಮ್ಮ ನೆಲವನ್ನು ಉಳಿಸಿಕೊಳ್ಳುವುದು ಜೀವನ್ಮರಣದ ಪ್ರಶ್ನೆಯನ್ನಾಗಿಸಿಕೊಂಡು ನಡೆಸುತ್ತಿರುವ ಸೆಣಸಾಟವಿರುತ್ತದೆ. ಇದಕ್ಕಾಗಿ ತುಂಬಿದ ಅಣೆಕಟ್ಟಿಯಿಂದ ರಭಸವಾಗಿ ಧುಮಿಕ್ಕುವ ಜಲದಂತೆ ಅಲ್ಲಿ ಭಾವದ ಆವೇಗವಿರುತ್ತದೆ.
ಕುಮಾರವ್ಯಾಸನಲ್ಲಿ ಬರುವ `ಅರಸುರಾಕ್ಷಸ ಮಂತ್ರಿ ಮೊರೆವ ಹುಲಿ ಪರಿವಾರ ಹದ್ದಿನ ನೆರವಿ, ಬಡವರ ಬಿನ್ನಪವನಿನ್ನಾರು ಕೇಳುವರು’ ಎಂಬ ಸಾಲುಗಳು, ರಾಜಧರ್ಮದ ನಿರ್ಲಿಪ್ತ ಬೋಧೆಯ ಭಾಗವಾಗಿ ಅಳವಡಿಕೆಯಾಗಿವೆ, ನಿಜ. ಆದರೆ ಕವಿ ಅವನ್ನು ರಚಿಸುವಾಗ ತಾನು ಪಟ್ಟಿರುವ ಯಾವುದೊ ಆಳವಾದ ಸಂವೇದನೆಯನ್ನು ತುಂಬಿರಬಹುದು ಎಂಬಂತೆ ಅಲ್ಲಿ ವಿಷಾದವು ಮಡುಗಟ್ಟಿದೆ. ಎಂತಲೇ ಈ ಸಾಲುಗಳು ಬಿಕ್ಕಟ್ಟಿನಲ್ಲಿ ನಾಡು ಹಾಯುವಾಗೆಲ್ಲ ಬಳಕೆಗೊಳ್ಳುತ್ತ, ನಮಗಾಗೇ ಈಗ ರಚಿತವಾದವು ಎಂಬಂತೆ ಆವರ್ತನೆಗೊಳ್ಳುತ್ತಿವೆ. ತುರ್ತುಪರಿಸ್ಥಿತಿ ವಿರುದ್ಧ ಬಂದ ಕವಿತೆಗಳ ಸಂಕಲನದ (`ಆಪತ್ಕಾಲೀನ ಕವಿತೆಗಳು’ ಸಂ. ಕಿ.ರಂ.ನಾಗರಾಜ), ಈ ಸಾಲುಗಳನ್ನು ಮೊದಲಿಗೇ ಉದ್ಧರಿಸಲಾಗಿದೆ.
ಇದೇ ಹೊತ್ತಲ್ಲಿ ಚಂಪಾ ಎಮರ್ಜನ್ಸಿಯ ಹೊತ್ತಲ್ಲಿ ಬರೆದ ಪದ್ಯವೊಂದು ನೆನಪಾಗುತ್ತಿದೆ. ಅದರ ಹೆಸರು `ಒಂದಾನೊಂದು ಕಾಲಕ್ಕೆ’. ಇದು ಕನ್ನಡದ ಶ್ರೇಷ್ಠ ಕವಿತೆಗಳ ಪಟ್ಟಿಯಲ್ಲಿ ಒಂದೆಂದೇನೂ ಪರಿಗಣಿತವಾಗಿಲ್ಲ. ಆದರೆ ಸರಳವಾದ ಸಾದಾಸೀದಾ ಪದ್ಯವಾಗಿರುವ ಇದರೊಳಗೆ ತುಂಬಿಕೊಂಡಿರುವ ದುಗುಡ ಮತ್ತು ಉತ್ಕಟತೆಗಳು, ಸ್ವಾತಂತ್ರ್ಯದ ಬೇಡಿಕೆಯ ಭಾವವನ್ನು ನಮ್ಮ ಹೃದಯದೊಳಗೆ ಹುಗಿಸಿ ಕಂಪನ ಹುಟ್ಟಿಸುವಷ್ಟು ತೀವ್ರವಾಗಿವೆ. `ಓ ಎನ್ನ ದೇಶಬಾಂಧವರೇ’ (1977) ಸಂಕಲನದಲ್ಲಿರುವ ಆ ಕವಿತೆ ಹೀಗಿದೆ:
ಒಂದಾನೊಂದು ಕಾಲಕ್ಕೆ, ಗೆಳೆಯರೆ
ಈ ಬಾನಿಗೆ ಅಂಚೆಂಬುದು ಇರಲಿಲ್ಲ.
ಈ ನೆಲಕ್ಕೆ ಗಡಿಯೆಂಬುದು ಇರಲಿಲ್ಲ.
ನೀವು ಕೂಗಿದ್ದೇ ಆಗ ಕಾವ್ಯವಾಗಿತ್ತು.
ಕೇಳುವವರಿರಲಿಲ್ಲ
ನೀವು ಹಿಡಿದದ್ದೇ ಆಗ ಹಾದಿಯಾಗಿತ್ತು
ತುಳಿಯುವವರಿರಲಿಲ್ಲ
ನಿಮ್ಮ ಬಾಯಿಗೆ ಈಗ ಬಟ್ಟೆ ತುರುಕಿದ್ದಾರೆ.
ನಿಮ್ಮ ಕಾಲಿಗೆ ಈಗ ಬೇಡಿ ಬಿಗಿದಿದ್ದಾರೆ
ನೀವೀಗ ಸ್ವಲ್ಪ ಝಾಡಿಸಿದರೆ ಕಾಲು,
ಬೇಡಿ ಹರಿಯಲಿಕ್ಕಿಲ್ಲ; ಆದರೆ
ಬಾನಲ್ಲಿ ಹಾಲುಹಾದಿ ಮೂಡುತ್ತದೆ.
ಮೌನ ಮುರಿಯಲು ಸ್ವಲ್ಪ ಹೆಣಗಿದರೆ ನೀವು
ಶಬ್ದ ಹೊರಡಲಿಕ್ಕಿಲ್ಲ; ಆದರೆ
ನೆಲವೇ ಎದೆ ಬಿರಿತು ಹಾಡುತ್ತದೆ.
ಕವನವು `ಒಂದಾನೊಂದು ಕಾಲಕ್ಕೆ’ ಎಂಬ ಪದದ ಮೂಲಕ ಚರಿತ್ರೆಯಲ್ಲಿದ್ದ ಸ್ವತಂತ್ರ ಅವಸ್ಥೆಯನ್ನು ಸೂಚಿಸುವ ಮೂಲಕ ಆರಂಭವಾಗುತ್ತದೆ. ಆಗ ಇದ್ದ ಸ್ವಾತಂತ್ರ್ಯವನ್ನು ಗಡಿಯಿಲ್ಲದ ನೆಲ, ಅಂಚಿಲ್ಲದ ಬಾನು, ಕೂಗಿದರೂ ಕಾವ್ಯವಾಗುವ ಮತ್ತು ಹಿಡಿದಿದ್ದೇ ಹಾದಿಯಾಗುವ ಮುಕ್ತತೆಯ ಚಿತ್ರಗಳ ಮೂಲಕ ಮುಂದಿಡಲಾಗುತ್ತದೆ. ಚರಿತ್ರೆ ಬಲ್ಲವರಿಗೆ ತಿಳಿದಿದೆ, ಎಲ್ಲ ಕಾಲಕ್ಕೂ ಸ್ವಾತಂತ್ರ್ಯ ಕಸಿದುಕೊಳ್ಳುವ ಶಕ್ತಿಗಳಿದ್ದವು.
ಅವುಗಳ ವಿರುದ್ಧ ದನಿಯೆತ್ತಿ ಸತ್ತವರೂ ಗೆದ್ದವರೂ ಕೂಡ ಇದ್ದರು. ಸ್ವಾತಂತ್ರö್ಯ ಹರಣ ಮತ್ತು ಪಡೆಯುವುದಕ್ಕೆ ಮಾಡುವ ಸಂಘರ್ಷ, ಅದಕ್ಕಾಗಿ ಪಡೆಯುವ ಮರಣ, ಗೆಲುವುಗಳು ನಿರಂತರವಾಗಿರುತ್ತವೆ. ಆದರೆ ಗತದಲ್ಲಿ ಸ್ವಾತಂತ್ರö್ಯವಿತ್ತು ಎಂದು ಕವಿತೆ ಪ್ರಕೃತಿಯ ಚಿತ್ರಗಳ ಮೂಲಕ ತುಸು ಉತ್ಪ್ರೇಕ್ಷೆಯಲ್ಲಿ ಹೇಳುತ್ತಿರುವುದು ವರ್ತಮಾನದಲ್ಲಿ ಅದಿಲ್ಲ ಎಂದು ವಾಸ್ತವವನ್ನು ಸೂಚಿಸಲು; ಚರಿತ್ರೆಯ ನೆನಪು ವರ್ತಮಾನದಲ್ಲಿ ಕ್ರಿಯಾಶೀಲತೆ ಹುಟ್ಟಿಸಲಿ ಎಂದು ಪ್ರೇರಿಸಲು. ಇಲ್ಲಿ ಕವಿಯು ಜನತೆಯ ನಾಯಕನಾಗಿದ್ದಾನೆ. ಜನರ ಸ್ವಾತಂತ್ರ್ಯ ಮತ್ತು ಅವನ ಸ್ವಾತಂತ್ರö್ಯಗಳೆರಡೂ ಇಲ್ಲಿ ಏಕೀಭವಿಸಿವೆ.
ಎರಡನೇ ಖಂಡವು ವರ್ತಮಾನದಲ್ಲಿ ಈ ಸ್ವಾತಂತ್ರ್ಯಗಳು ಕಸಿಯಲ್ಪಟ್ಟ ದಾರುಣ ಸನ್ನಿವೇಶದ ಚಿತ್ರವನ್ನು ಮುಂದಿಡುತ್ತದೆ. ಆದರೆ ಈ ಬಂಧನದ ದಾರುಣತೆ ಖಾಯಮ್ಮಲ್ಲ. ಅದನ್ನು ನಿವಾರಿಸಬಹುದು. ಇದಕ್ಕಾಗಿ ದಂಗೆ ಚಳುವಳಿ ಹೋರಾಟ ಮುಂತಾದ ಮಹತ್ವಾಕಾಂಕ್ಷಿ ಪ್ರಯತ್ನಗಳನ್ನು ಕವಿತೆ ಮುಂದಿಡುತ್ತಿಲ್ಲ. ಬದಲಾಗಿ `ಸ್ವಲ್ಪ ಕಾಲು ಝಾಡಿಸಲು’ `ಮೌನ ಮುರಿಯಲು’ `ಸ್ವಲ್ಪ ಹೆಣಗಲು’ ಸೂಚಿಸುತ್ತದೆ.
ವ್ಯಕ್ತಿಗಳು ತಮ್ಮ ಪರಿಮಿತಿಯಲ್ಲೇ ಮಾಡುವ ಇಂತಹ ಸಣ್ಣಪುಟ್ಟ ಮಿಸುಗಾಟದಿಂದ ಇಡೀ ವ್ಯವಸ್ಥೆಯನ್ನು ಪಲ್ಲಟಿಸುವ ಮಹಾಕ್ರಾಂತಿ ಸಂಭವಿಸಿದೆ ಹೋಗಬಹುದು. ಆದರೆ ಅಂತಹ ಅದಕ್ಕೆ ಬೇಕಾದ ನಡಿಗೆ ಶುರುವಾಗುತ್ತದೆ. ಸಂಪೂರ್ಣ ಸ್ವಾತಂತ್ರ್ಯವು ನಾಡಿನ ಸಮುದಾಯವು ಪ್ರಜ್ಞೆ ಮತ್ತು ಪ್ರತಿರೋಧ ಗುಣವನ್ನು ಪಡೆದುಕೊಂಡು ಕೆಟ್ಟ ವ್ಯವಸ್ಥೆಯ ವಿರುದ್ಧ ಸಂಘಟಿತ ದನಿಯೆತ್ತಿದಾಗ ಮಾತ್ರ ಸಾಧ್ಯ. ಅದು ತಕ್ಷಣ ಸಾಧ್ಯವಾಗುವ ಸನ್ನಿವೇಶವಿಲ್ಲ. ಅದು ನಿಷ್ಕ್ರಿಯತೆಗೆ ಕಾರಣವಾಬೇಕಿಲ್ಲ. ಬದಲಾವಣೆ ಎಂಬ ದೀರ್ಘ ಯಾನವು ಸಣ್ಣಹೆಜ್ಜೆಗಳ ಮೂಲಕವೇ ಆರಂಭವಾಗುತ್ತದೆ. ಅಂತಹ ಮಿಸುಕಾಟ ಮಾಡಿದರೆ ಪರಿಣಾಮ ಹಾಲ ಹಾದಿ ಮೂಡುತ್ತದೆ; ನೆಲವೇ ಎದೆಬಿರಿತು ಹಾಡುತ್ತದೆ.
ನಿರ್ದಿಷ್ಟ ಹಾಡಿನ ಭಾವವು ಮನುಕುಲವು ಮತ್ತೆಮತ್ತೆ ಎದುರಿಸುವ ಸಮಸ್ಯೆಯನ್ನು ಕುರಿತು ಇದ್ದಾಗ, ಅದು ನಾನಾ ವಿನ್ಯಾಸದಲ್ಲಿ ಬೇರೆಬೇರೆ ಭಾಷೆಯಲ್ಲಿ ಎಲ್ಲ ಕಾಲಘಟ್ಟದಲ್ಲೂ ಪುನರಾವರ್ತನೆ ಆಗುತ್ತಲೇ ಇರುತ್ತದೆ. ದುಷ್ಟ ಸರ್ವಾಧಿಕಾರಗಳ ಅಡಿಯಲ್ಲಿ ಉಸಿರುಗಟ್ಟುವ ಸನ್ನಿವೇಶದಲ್ಲಿ ಬದುಕುವ ಎಲ್ಲ ಸಮಾಜಗಳು ತಮ್ಮ ಎದೆಯ ದನಿಯೆಂದೇ ಹಾಡಿಕೊಳ್ಳುವಷ್ಟು ಇದು ಸಾಧಾರಣೀಕರಣ ಪಡೆದಿದೆ.
ಹೀಗಾಗಿಯೇ ಇದರ ಭಾವವು ಗಂಡಾಳಿಕೆ ಸಮಾಜದಲ್ಲಿರುವ ವಿವಾಹ ಮತ್ತು ಕುಟುಂಬ ಮುಂತಾದ ವ್ಯವಸ್ಥೆಗಳಲ್ಲಿ ನಲುಗುತ್ತಿರುವ ಸ್ತ್ರೀಯರ ದನಿಯಾಗುವಂತಿದೆ. ಕನ್ನಡದ ಮಹಿಳಾ ಸಂವೇದನೆಯ ಕಾವ್ಯದಲ್ಲಿ ಇದರ ಪ್ರತಿಬಿಂಬಗಳನ್ನು ಕಾಣಬಹುದು. ಜೆಎನ್ಯು ವಿದ್ಯಾರ್ಥಿಗಳು ಕನ್ಹಯ್ಯಕುಮಾರ್ ಅವರ ನೇತೃತ್ವದಲ್ಲಿ ಕೂಗಿದ ಆಜಾದಿ ಘೋಷಣೆಯಲ್ಲಿ ಇದು ಅನುರಣನಗೊಂಡಿತು.
ಈಗಲೂ ಟರ್ಕಿಯ ಕುರ್ದಿಶರ, ಇಸ್ರೇಲಿ ಹುಕೂಮತ್ತಿನಲ್ಲಿರುವ ಪ್ಯಾಲಸ್ತೇನಿಯರ, ಚೀನಾದ ಪಾದದಡಿ ಅಪ್ಪಚ್ಚಿಯಾಗಿರುವ ವುಗೈರ್ ಮುಸ್ಲಿಮರ ಹಾಗೂ ಟಿಬೆಟಿಯನ್ ಬೌದ್ಧರ, ಬರ್ಮಾದ ರೋಹಿಂಗ್ಯಾಗಳ ಎದೆಯೊಳಗೆ ಈ ಕವನ ಹಲವಾರು ವಿನ್ಯಾಸಗಳಲ್ಲಿ ರೂಪುಗೊಳ್ಳುತ್ತಿರಬಹುದು.
ಬಾಬಾ ಸಾಹೇಬರು ಬೌದ್ಧಧರ್ಮವನ್ನು ಸ್ವೀಕಾರ ಮಾಡುವ ಮುನ್ನ ಇದೇ ಭಾವವುಳ್ಳ ಮಾತುಗಳನ್ನು ಆಡಿರುವರು ಮತ್ತು ಲೇಖನ ಬರೆದಿರುವರು.
ಸಾರಾ ಅಬೂಬಕರ್ ಅವರ ಕಥನದ ನಾಯಕಿಯರಲ್ಲಿ ಈ ಪದ್ಯವು ಬೇರೆ ಧಾಟಿಲಯದಲ್ಲಿ ಕಟ್ಟಲ್ಪಟ್ಟಿದೆ. ಸಿದ್ಧಲಿಂಗಯ್ಯನವರ `ಎಲ್ಲಿಗೆ ಬಂತು ಯಾರಿಗೆ ಬಂತು ಸ್ವಾತಂತ್ರ್ಯ’ ಕವನದಲ್ಲಿ ಈ ಹಾಡಿನ ಭಾವವು ಹೋರಾಟದ ಮೊದಲು ಹುಟುವ ಸವಾಲಿನಂತೆ ಕೇಳಲ್ಪಟ್ಟಿದೆ. ಶತಮಾನದ ಹಿಂದೆ ರವೀಂದ್ರನಾಥ ಟಾಗೂರರು ಗೀತಾಂಜಲಿ ಸಂಕಲನದಲ್ಲಿ ಸೇರಿಸಿದ `ವೇರ್ ದಿ ಮೈಂಡ್ ಈಸ್’ ಎಂಬ ಗೀತೆಯಲ್ಲಿ ಈ ಪದ್ಯದ ಭಾವವು ದೇಶಕಟ್ಟುವ ತತ್ವವಾಗಿ ಈಗಾಗಲೇ ಹೇಳಲ್ಪಟ್ಟಿದೆ. `ಆನುಒಲಿದಂತೆ ಹಾಡುವ’ ಎಂಬ ಬಸವಣ್ಣನವರ ವಚನ, ಕುವೆಂಪು ಅವರ `ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಲೇಖನ ಈ ಪದ್ಯದ ಮೂಲಮಾತೃಕೆಗಳಾಗಿದ್ದರೆ ಆಶ್ಚರ್ಯವಿಲ್ಲ.
ಎಲ್ಲ ದಮನಿತ ಸಮಾಜ ಕುಟುಂಬ ಧರ್ಮ ದೇಶಗಳಲ್ಲಿ ಇರುವ ಪ್ರಜ್ಞಾವಂತರಿಗೆ, ಸಂವೇದನಶೀಲರಿಗೆ ಸ್ವಾತಂತ್ರ್ಯ ಬಯಸುವವರಿಗೆ ಇದು ತಮ್ಮದೇ ಸ್ವಾತಂತ್ರ್ಯದ ಹಾಡೆನಿಸುತ್ತದೆ. ಈಗ ತಾಲಿಬಾನಿಗಳ ಕೋವಿಗೈಯಲ್ಲಿ ಸಿಲುಕಿರುವ ಆಫಘಾನಿಸ್ಥಾನದ ಮಹಿಳೆಯರು ಕಲಾವಿದರು ಈ ಹಾಡನ್ನು ಹಾಡುತ್ತಿರಬಹುದು. ಈಗ ಇಂಡಿಯಾದ ಬೀದಿಹಾದಿಗಳಲ್ಲಿ ನಿರ್ದಿಷ್ಟ ಲಿಂಗ, ಜಾತಿ, ಧರ್ಮಗಳಲ್ಲಿ ಹುಟ್ಟಿದ ಕಾರಣಕ್ಕೇ ಬಡಿಸಿಕೊಂಡು ಸಾಯುತ್ತಿರುವ ಮಹಿಳೆಯರೂ ದಲಿತರೂ ಮುಸ್ಲಿಮರೂ ಕ್ರೈಸ್ತರೂ ಹಾಡಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ1 day agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ2 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

